Print Page Options
Previous Prev Day Next DayNext

Revised Common Lectionary (Complementary)

Daily Bible readings that follow the church liturgical year, with thematically matched Old and New Testament readings.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 146

146 ಯೆಹೋವನಿಗೆ ಸ್ತೋತ್ರವಾಗಲಿ!
    ನನ್ನ ಮನವೇ, ಯೆಹೋವನನ್ನು ಸ್ತುತಿಸು!
ನನ್ನ ಜೀವಮಾನವೆಲ್ಲಾ ಯೆಹೋವನನ್ನು ಸ್ತುತಿಸುವೆನು;
    ಆತನನ್ನು ಸಂಕೀರ್ತಿಸುವೆನು.
ಸಹಾಯಕ್ಕಾಗಿ ನಿಮ್ಮ ನಾಯಕರುಗಳನ್ನು ಅವಲಂಬಿಸಿಕೊಳ್ಳಬೇಡಿ.
    ಮನುಷ್ಯರಲ್ಲಿ ಭರವಸವಿಡಬೇಡಿ, ಅವರು ನಿಮ್ಮನ್ನು ರಕ್ಷಿಸಲಾರರು.
ಮನುಷ್ಯರು ಸತ್ತು ಸಮಾಧಿಗೆ ಸೇರುವರು;
    ಆಗ ನಿಮಗೆ ಸಹಾಯಮಾಡಬೇಕೆಂಬ ಅವರ ಆಲೋಚನೆಗಳೆಲ್ಲಾ ಅಳಿದುಹೋಗುತ್ತವೆ.
ಯಾರಿಗೆ ದೇವರು ಸಹಾಯಕನೋ,
    ಯಾರು ತಮ್ಮ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದಾರೋ, ಅವರೇ ಭಾಗ್ಯವಂತರು.
ಯೆಹೋವನು ಆಕಾಶವನ್ನೂ ಭೂಮಿಯನ್ನೂ
    ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದನು.
ಆತನು ಅವುಗಳನ್ನು ಶಾಶ್ವತವಾಗಿ ಸಂರಕ್ಷಿಸುವನು.
ಹಿಂಸೆಗೆ ಗುರಿಯಾಗಿರುವವರಿಗೆ ನ್ಯಾಯವನ್ನೂ;
    ಹಸಿದವರಿಗೆ ಆಹಾರವನ್ನೂ ಕೊಡುವವನು ಆತನೇ.
ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುವನು.
    ಯೆಹೋವನು ಕುರುಡರಿಗೆ ದೃಷ್ಟಿಕೊಡುವನು.
ಯೆಹೋವನು ಕುಗ್ಗಿಹೋದವರನ್ನು ಉದ್ಧರಿಸುವನು.
    ಯೆಹೋವನು ನೀತಿವಂತರನ್ನು ಪ್ರೀತಿಸುವನು.
ಯೆಹೋವನು ನಮ್ಮ ದೇಶದಲ್ಲಿ ವಾಸವಾಗಿರುವ ವಿದೇಶಿಯರನ್ನು ಕಾಪಾಡುತ್ತಾನೆ.
    ಆತನು ವಿಧವೆಯರನ್ನೂ ಅನಾಥರನ್ನೂ ಪರಿಪಾಲಿಸುತ್ತಾನೆ.
    ಆದರೆ ಆತನು ದುಷ್ಟರ ಆಲೋಚನೆಗಳನ್ನು ನಾಶಮಾಡುವನು.
10 ಯೆಹೋವನು ಸದಾಕಾಲ ಆಳುವನು!
    ಚೀಯೋನೇ, ನಿನ್ನ ದೇವರು ಶಾಶ್ವತವಾಗಿ ಆಳುವನು!

ಯೆಹೋವನಿಗೆ ಸ್ತೋತ್ರವಾಗಲಿ!

ಯೆಶಾಯ 32:1-8

ಅಧಿಪತಿಗಳು ನ್ಯಾಯನೀತಿಯುಳ್ಳವರಾಗಿರಬೇಕು

32 ನನ್ನ ಮಾತುಗಳನ್ನು ಕೇಳಿರಿ. ರಾಜ್ಯದಲ್ಲಿ ಧರ್ಮವು ನೆಲೆಗೊಳ್ಳುವಂತೆ ರಾಜನು ರಾಜ್ಯವಾಳಬೇಕು. ಅಧಿಕಾರಿಗಳು ನ್ಯಾಯದಿಂದ ಜನರನ್ನು ನಡೆಸಿಕೊಂಡು ಹೋಗಬೇಕು. ಹೀಗಿದ್ದಲ್ಲಿ ರಾಜನು ಮಳೆಯಲ್ಲಿ ಆಶ್ರಯ ಸ್ಥಳವಾಗಿಯೂ ಗಾಳಿಯಲ್ಲಿ ಮರೆಯಂತೆಯೂ ಮರುಭೂಮಿಯಲ್ಲಿ ಒರತೆಯಂತೆಯೂ ಬೆಂಗಾಡಿನಲ್ಲಿ ಬಂಡೆಯ ನೆರಳಿನಂತೆಯೂ ಇರುವನು. ಜನರು ಸಹಾಯಕ್ಕಾಗಿ ರಾಜನ ಕಡೆಗೆ ನೋಡುವರು. ಅವನು ಹೇಳಿದ್ದನ್ನು ಅವರು ಕೇಳುವರು. ಈಗ ಗಲಿಬಿಲಿಯಲ್ಲಿರುವವರು ವಿಷಯವನ್ನು ಸ್ಪಷ್ಟವಾಗಿ ಮತ್ತು ಕೂಡಲೇ ತಿಳಿದುಕೊಳ್ಳುವರು. ಈಗ ಸ್ಪಷ್ಟವಾಗಿ ಮಾತಾಡಲಾರದ ಜನರು ಸ್ಪಷ್ಟವಾಗಿಯೂ, ಸರಾಗವಾಗಿಯೂ ಮಾತಾಡಶಕ್ತರಾಗುವರು. ದುಷ್ಟರನ್ನು ಮಹಾವ್ಯಕ್ತಿಗಳೆಂದು ಕರೆಯುವದಿಲ್ಲ. ನೀಚನನ್ನು ಘನವಂತನೆಂದು ಕರೆಯುವದಿಲ್ಲ.

ದುಷ್ಟನು ದುಷ್ಟತೆಯ ಬಗ್ಗೆ ಮಾತನಾಡುವನು. ದುಷ್ಕೃತ್ಯಗಳನ್ನು ಮಾಡಲು ತನ್ನ ಹೃದಯದಲ್ಲಿ ಆಲೋಚಿಸುವನು. ದುಷ್ಟನು ಯೆಹೋವನ ಬಗ್ಗೆ ಕೆಟ್ಟವುಗಳನ್ನು ಹೇಳುತ್ತಾನೆ. ಹಸಿದವರಿಗೆ ಆಹಾರವನ್ನು ತಿನ್ನುವದಕ್ಕಾಗಲಿ ಬಾಯಾರಿದವರಿಗೆ ನೀರನ್ನು ಕುಡಿಯುವದಕ್ಕಾಗಲಿ ಅವನು ಬಿಡುವದಿಲ್ಲ. ದುಷ್ಟನು ದುಷ್ಟತನವನ್ನು ಉಪಕರಣವನ್ನಾಗಿ ಬಳಸಿಕೊಳ್ಳುವನು. ಬಡಜನರಿಂದ ಪ್ರತಿಯೊಂದನ್ನು ತೆಗೆದುಕೊಳ್ಳಲು ಅವನು ಆಲೋಚಿಸುವನು, ಸುಳ್ಳುಗಳನ್ನು ಹೇಳುವನು. ಅವನ ಸುಳ್ಳುಗಳು ಬಡವನಿಗೆ ನ್ಯಾಯದೊರಕದಂತೆ ಮಾಡುತ್ತವೆ.

ಆದರೆ ಒಬ್ಬ ಒಳ್ಳೆಯ ನಾಯಕನು ಒಳ್ಳೆಯ ಕಾರ್ಯಗಳನ್ನು ಮಾಡಲು ಆಲೋಚಿಸುವನು. ಅಂಥವನು ಒಳ್ಳೆಯ ನಾಯಕನಾಗಿರುವನು.

ರೋಮ್ನಗರದವರಿಗೆ 2:12-16

12 ಧರ್ಮಶಾಸ್ತ್ರವನ್ನು ಹೊಂದಿರುವ ಜನರು ಮತ್ತು ಧರ್ಮಶಾಸ್ತ್ರದ ಬಗ್ಗೆ ಕೇಳಿಯೂ ಇಲ್ಲದ ಜನರು ಪಾಪ ಮಾಡುವಾಗ ಅವರಿಬ್ಬರಿಗೂ ಯಾವ ವ್ಯತ್ಯಾಸವಿರುವುದಿಲ್ಲ. ಧರ್ಮಶಾಸ್ತ್ರವಿಲ್ಲದವರಾಗಿ ಪಾಪ ಮಾಡುವವರು ನಾಶವಾಗುವರು. ಅದೇ ರೀತಿಯಲ್ಲಿ, ಧರ್ಮಶಾಸ್ತ್ರವನ್ನು ಹೊಂದಿದವರಾಗಿ ಪಾಪ ಮಾಡುವವರು ಧರ್ಮಶಾಸ್ತ್ರಕ್ಕನುಸಾರವಾಗಿ ತೀರ್ಪನ್ನು ಹೊಂದುವರು. 13 ಧರ್ಮಶಾಸ್ತ್ರವನ್ನು ಕೇಳಿದ ಮಾತ್ರಕ್ಕೆ ಜನರು ನೀತಿವಂತರಾಗುವುದಿಲ್ಲ. ಧರ್ಮಶಾಸ್ತ್ರ ಹೇಳುವ ಪ್ರತಿಯೊಂದಕ್ಕೂ ವಿಧೇಯರಾಗುವ ಜನರನ್ನು ಧರ್ಮಶಾಸ್ತ್ರವು ನೀತಿವಂತರನ್ನಾಗಿ ಮಾಡುತ್ತದೆ.

14 ಯೆಹೂದ್ಯರಲ್ಲದವರು ಧರ್ಮಶಾಸ್ತ್ರವನ್ನು ಹೊಂದಿಲ್ಲ. ಆದರೆ ಅವರು ಧರ್ಮಶಾಸ್ತ್ರವನ್ನು ಸ್ವಾಭಾವಿಕವಾಗಿ ಅನುಸರಿಸಿದ್ದೇಯಾದರೆ, ಅವರಿಗೆ ಧರ್ಮಶಾಸ್ತ್ರವಿಲ್ಲದಿದ್ದರೂ ಅವರ ಅಂತರಂಗವೇ ಅವರಿಗೆ ಧರ್ಮಶಾಸ್ತ್ರವಾಗುತ್ತದೆ. 15 ಧರ್ಮಶಾಸ್ತ್ರದ ಆಜ್ಞಾವಿಧಿಗಳಿಗನುಸಾರವಾಗಿ ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ತಮ್ಮ ಹೃದಯಗಳು ಬಲ್ಲವೆಂದು ಅವರು ತಮ್ಮ ನಡತೆಯಿಂದಲೇ ತೋರ್ಪಡಿಸುತ್ತಾರೆ. ಇದು ಸತ್ಯವೆಂಬುದನ್ನು ಅವರ ಮನಸ್ಸಾಕ್ಷಿಯು ಖಚಿತಪಡಿಸುತ್ತದೆ. ಅವರ ಅಂತಃಪ್ರಜ್ಞೆಯೇ ಅವರನ್ನು ದೋಷಿಗಳೆಂದೋ ಇಲ್ಲವೆ ನಿರ್ದೋಷಿಗಳೆಂದೋ ತೀರ್ಮಾನಿಸುತ್ತದೆ.

16 ಮನುಷ್ಯರ ಅಂತರಂಗದಲ್ಲಿರುವ ರಹಸ್ಯ ಸಂಗತಿಗಳಿಗೆ ದೇವರು ತೀರ್ಪುಮಾಡುವ ದಿನದಂದು ಇವುಗಳೆಲ್ಲಾ ನೆರವೇರುವವು. ದೇವರು ಯೇಸು ಕ್ರಿಸ್ತನ ಮೂಲಕ ಜನರಿಗೆ ತೀರ್ಪು ಮಾಡುತ್ತಾನೆ ಎಂಬುದಾಗಿ ಸುವಾರ್ತೆಯು ತಿಳಿಸುತ್ತದೆ. ನಾನು ಜನರಿಗೆ ತಿಳಿಸುವುದು ಆ ಸುವಾರ್ತೆಯನ್ನೇ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International