Revised Common Lectionary (Complementary)
146 ಯೆಹೋವನಿಗೆ ಸ್ತೋತ್ರವಾಗಲಿ!
ನನ್ನ ಮನವೇ, ಯೆಹೋವನನ್ನು ಸ್ತುತಿಸು!
2 ನನ್ನ ಜೀವಮಾನವೆಲ್ಲಾ ಯೆಹೋವನನ್ನು ಸ್ತುತಿಸುವೆನು;
ಆತನನ್ನು ಸಂಕೀರ್ತಿಸುವೆನು.
3 ಸಹಾಯಕ್ಕಾಗಿ ನಿಮ್ಮ ನಾಯಕರುಗಳನ್ನು ಅವಲಂಬಿಸಿಕೊಳ್ಳಬೇಡಿ.
ಮನುಷ್ಯರಲ್ಲಿ ಭರವಸವಿಡಬೇಡಿ, ಅವರು ನಿಮ್ಮನ್ನು ರಕ್ಷಿಸಲಾರರು.
4 ಮನುಷ್ಯರು ಸತ್ತು ಸಮಾಧಿಗೆ ಸೇರುವರು;
ಆಗ ನಿಮಗೆ ಸಹಾಯಮಾಡಬೇಕೆಂಬ ಅವರ ಆಲೋಚನೆಗಳೆಲ್ಲಾ ಅಳಿದುಹೋಗುತ್ತವೆ.
5 ಯಾರಿಗೆ ದೇವರು ಸಹಾಯಕನೋ,
ಯಾರು ತಮ್ಮ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದಾರೋ, ಅವರೇ ಭಾಗ್ಯವಂತರು.
6 ಯೆಹೋವನು ಆಕಾಶವನ್ನೂ ಭೂಮಿಯನ್ನೂ
ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದನು.
ಆತನು ಅವುಗಳನ್ನು ಶಾಶ್ವತವಾಗಿ ಸಂರಕ್ಷಿಸುವನು.
7 ಹಿಂಸೆಗೆ ಗುರಿಯಾಗಿರುವವರಿಗೆ ನ್ಯಾಯವನ್ನೂ;
ಹಸಿದವರಿಗೆ ಆಹಾರವನ್ನೂ ಕೊಡುವವನು ಆತನೇ.
ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುವನು.
8 ಯೆಹೋವನು ಕುರುಡರಿಗೆ ದೃಷ್ಟಿಕೊಡುವನು.
ಯೆಹೋವನು ಕುಗ್ಗಿಹೋದವರನ್ನು ಉದ್ಧರಿಸುವನು.
ಯೆಹೋವನು ನೀತಿವಂತರನ್ನು ಪ್ರೀತಿಸುವನು.
9 ಯೆಹೋವನು ನಮ್ಮ ದೇಶದಲ್ಲಿ ವಾಸವಾಗಿರುವ ವಿದೇಶಿಯರನ್ನು ಕಾಪಾಡುತ್ತಾನೆ.
ಆತನು ವಿಧವೆಯರನ್ನೂ ಅನಾಥರನ್ನೂ ಪರಿಪಾಲಿಸುತ್ತಾನೆ.
ಆದರೆ ಆತನು ದುಷ್ಟರ ಆಲೋಚನೆಗಳನ್ನು ನಾಶಮಾಡುವನು.
10 ಯೆಹೋವನು ಸದಾಕಾಲ ಆಳುವನು!
ಚೀಯೋನೇ, ನಿನ್ನ ದೇವರು ಶಾಶ್ವತವಾಗಿ ಆಳುವನು!
ಯೆಹೋವನಿಗೆ ಸ್ತೋತ್ರವಾಗಲಿ!
17 “ಪರದೇಶಸ್ಥರನ್ನು ಮತ್ತು ಅನಾಥರನ್ನು ಯೋಗ್ಯವಾದ ರೀತಿಯಲ್ಲಿ ನೋಡಿಕೊಳ್ಳಬೇಕು. ವಿಧವೆಯರ ಬಟ್ಟೆಗಳನ್ನು ಒತ್ತೆಯಿಟ್ಟುಕೊಳ್ಳಕೂಡದು. 18 ನೀವು ಈಜಿಪ್ಟಿನಲ್ಲಿ ಬಡ ಗುಲಾಮರಾಗಿದ್ದುದನ್ನು ಸ್ಮರಿಸಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದ ನೀವು ಬಡವರಿಗೆ ದಯೆ ತೋರಿಸಬೇಕು.
19 “ನೀವು ಹೊಲದಲ್ಲಿ ಬೆಳೆದ ಬೆಳೆಯನ್ನು ಕೊಯ್ದು ಮನೆಗೆ ತರುವಾಗ ಕೆಲವು ಸಿವುಡುಗಳನ್ನು ನೀವು ಹೊಲದಲ್ಲಿಯೇ ಬಿಟ್ಟು ಬಂದಿದ್ದರೆ ಅದನ್ನು ತರಲು ಹಿಂದಕ್ಕೆ ಹೋಗಬೇಡಿ. ಅದನ್ನು ನಿಮ್ಮ ಊರಿನಲ್ಲಿರುವ ಅನಾಥರಿಗೂ ವಿಧವೆಯರಿಗೂ ಪರದೇಶಸ್ಥರಿಗೂ ಬಿಡಿರಿ. ನೀವು ಹಾಗೆ ಮಾಡಿದರೆ ದೇವರಾದ ಯೆಹೋವನು ನಿಮಗೆ ಶುಭವನ್ನು ಉಂಟುಮಾಡುವನು. 20 ನೀವು ನಿಮ್ಮ ಎಣ್ಣೆಮರಗಳ ಕಾಯಿಗಳನ್ನು ಉದುರಿಸುವಾಗ ಮತ್ತೆ ಹೋಗಿ ಕೊಂಬೆಗಳಲ್ಲಿ ಕಾಯಿ ಹುಡುಕಬಾರದು. ಬಿಟ್ಟ ಕಾಯಿಗಳು ಪರದೇಶಸ್ಥರಿಗೂ ಊರಿನ ಅನಾಥ ಮತ್ತು ವಿಧವೆಯವರಿಗೂ ಆಗುವುದು. 21 ನಿಮ್ಮ ತೋಟದಿಂದ ಹಣ್ಣುಗಳನ್ನು ಕೂಡಿಸುವಾಗ ಉಳಿದ ಹಣ್ಣುಗಳನ್ನು ಶೇಖರಿಸಲು ಹಿಂತಿರುಗಬೇಡಿ; ಆ ಉಳಿದ ದ್ರಾಕ್ಷಿಹಣ್ಣುಗಳು ಊರಲ್ಲಿರುವ ಅನಾಥರಿಗೂ ವಿಧವೆಯರಿಗೂ ಮತ್ತು ಪರದೇಶಸ್ಥರಿಗೂ ಬಿಡಿರಿ. 22 ನೀವು ಈಜಿಪ್ಟ್ ದೇಶದಲ್ಲಿ ಬಡ ಗುಲಾಮರಾಗಿದ್ದುದನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಆದ್ದರಿಂದಲೇ ಬಡವರಿಗೆ ನೀವು ಹೀಗೆ ಮಾಡಬೇಕೆಂದು ನಿಮಗೆ ತಿಳಿಸುತ್ತಿದ್ದೇನೆ.
ಒಣಗಿಹೋದ ಅಂಜೂರ ಮರ
(ಮತ್ತಾಯ 21:18-19)
12 ಮರುದಿನ, ಯೇಸು ಬೆಥಾನಿಯದಿಂದ ಹೋಗುತ್ತಿರಲು ಆತನಿಗೆ ಹಸಿವಾಗಿತ್ತು. 13 ಆತನು ಎಲೆಗಳಿದ್ದ ಒಂದು ಅಂಜೂರದ ಮರವನ್ನು ನೋಡಿದನು. ಆದ್ದರಿಂದ ಆ ಮರದಲ್ಲಿ ಅಂಜೂರದ ಹಣ್ಣೇನಾದರೂ ಸಿಕ್ಕಬಹುದೆಂದು ಅದರ ಬಳಿಗೆ ಹೋದನು. ಆದರೆ ಆತನು ಆ ಮರದಲ್ಲಿ ಅಂಜೂರದ ಹಣ್ಣುಗಳನ್ನು ಕಾಣಲಿಲ್ಲ. ಅಲ್ಲಿ ಎಲೆಗಳು ಮಾತ್ರ ಇದ್ದವು. ಏಕೆಂದರೆ ಅದು ಅಂಜೂರ ಹಣ್ಣಿನ ಕಾಲವಾಗಿರಲಿಲ್ಲ. 14 ಆದ್ದರಿಂದ ಯೇಸು ಆ ಮರಕ್ಕೆ, “ಇನ್ನು ಮೇಲೆ ನಿನ್ನ ಹಣ್ಣನ್ನು ಯಾರೂ ತಿನ್ನದಂತಾಗಲಿ” ಎಂದನು. ಯೇಸುವಿನ ಶಿಷ್ಯರಿಗೂ ಈ ಮಾತು ಕೇಳಿಸಿತು.
ನಂಬಿಕೆಯ ಶಕ್ತಿ
(ಮತ್ತಾಯ 21:20-22)
20 ಮರುದಿನ ಬೆಳಿಗ್ಗೆ, ಯೇಸು ತನ್ನ ಶಿಷ್ಯರೊಂದಿಗೆ ಹೋಗುತ್ತಿದ್ದನು. ಹಿಂದಿನ ದಿನ ಯೇಸು ಶಪಿಸಿದ ಅಂಜೂರದ ಮರವನ್ನು ಶಿಷ್ಯರು ನೋಡಿದರು. ಅಂಜೂರದ ಮರವು ಬೇರುಸಹಿತ ಒಣಗಿಹೋಗಿತ್ತು. 21 ಪೇತ್ರನು ಆ ಮರವನ್ನು ಜ್ಞಾಪಿಸಿಕೊಂಡು, ಯೇಸುವಿಗೆ, “ಗುರುವೇ, ನೋಡು! ನಿನ್ನೆ ನೀನು ಶಪಿಸಿದ ಅಂಜೂರದ ಮರ ಒಣಗಿಹೋಗಿದೆ!” ಎಂದನು.
22 ಯೇಸು, “ದೇವರಲ್ಲಿ ನಂಬಿಕೆ ಇಡಿರಿ. 23 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಈ ಬೆಟ್ಟಕ್ಕೆ, ‘ನೀನು ಹೋಗಿ ಸಮುದ್ರದೊಳಗೆ ಬೀಳು’ ಎಂದು ಹೇಳಿ, ಸಂಶಯವನ್ನೇಪಡದೆ, ನೀವು ಹೇಳಿದ್ದು ಖಂಡಿತವಾಗಿ ನೆರವೇರುತ್ತದೆ ಎಂದು ನಂಬಿದರೆ, ದೇವರು ಅದನ್ನು ನಿಮಗಾಗಿ ಮಾಡುತ್ತಾನೆ. 24 ಆದ್ದರಿಂದ ನೀವು ಪ್ರಾರ್ಥನೆಯಲ್ಲಿ ಬೇಡಿಕೊಂಡು, ಅದನ್ನೆಲ್ಲಾ ಹೊಂದಿಕೊಂಡಾಯಿತೆಂದು ನಂಬಿದರೆ, ಅದೆಲ್ಲಾ ನಿಮ್ಮದಾಗುತ್ತವೆ ಎಂದು ನಾನು ನಿಮಗೆ ಹೇಳುತ್ತೇನೆ.
Kannada Holy Bible: Easy-to-Read Version. All rights reserved. © 1997 Bible League International