Revised Common Lectionary (Complementary)
ರಚನೆಗಾರ: ದಾವೀದ.
16 ದೇವರೇ, ನನ್ನನ್ನು ಕಾಪಾಡು. ಯಾಕೆಂದರೆ ನಾನು ನಿನ್ನನ್ನೇ ಆಶ್ರಯಿಸಿಕೊಂಡಿರುವೆ.
2 ನಾನು ಯೆಹೋವನಿಗೆ, “ನೀನೇ ನನ್ನ ಒಡೆಯನು.
ನನ್ನಲ್ಲಿರುವ ಒಳ್ಳೆಯದನ್ನೆಲ್ಲ ದಯಪಾಲಿಸಿದಾತನು ನೀನೇ” ಎಂದು ಹೇಳಿದೆನು.
3 ಯೆಹೋವನು ಭೂಲೋಕದಲ್ಲಿರುವ ತನ್ನ ಭಕ್ತರಿಗೆ ಅತಿಶಯವಾದವುಗಳನ್ನು ಮಾಡುವನು;
ಅವರ ಮೇಲೆ ತನಗಿರುವ ನಿಜವಾದ ಪ್ರೀತಿಯನ್ನು ತೋರ್ಪಡಿಸುವನು.
4 ಆದರೆ ಅನ್ಯದೇವರುಗಳನ್ನು ಆಶ್ರಯಿಸಿಕೊಂಡವರಿಗೆ ಕೇಡುಗಳು ಹೆಚ್ಚಾಗುತ್ತವೆ.
ಅವರು ಆ ವಿಗ್ರಹಗಳಿಗೆ ಅರ್ಪಿಸುವ ರಕ್ತದ ಕಾಣಿಕೆಗಳಲ್ಲಿ ನಾನು ಪಾಲುಗಾರನಾಗುವುದಿಲ್ಲ,
ಆ ವಿಗ್ರಹಗಳ ಹೆಸರುಗಳನ್ನೂ ನಾನು ಉಚ್ಚರಿಸುವುದಿಲ್ಲ.
5 ನನ್ನ ಪಾಲೂ ನನ್ನ ಪಾತ್ರೆಯೂ ಯೆಹೋವನಿಂದಲೇ ಬರುತ್ತವೆ.
ನನಗೆ ಆಧಾರವಾಗಿದ್ದು ನನ್ನ ಪಾಲನ್ನು ದಯಪಾಲಿಸುವಾತನು ನೀನೇ.
6 ನನ್ನ ಪಾಲು[a] ರಮಣೀಯವಾಗಿದೆ.
ನನ್ನ ಸ್ವಾಸ್ತ್ಯವು[b] ಬಹು ಸುಂದರವಾಗಿದೆ.
7 ನನ್ನ ಆಲೋಚನಾಕರ್ತನಾದ ಯೆಹೋವನನ್ನು ಕೊಂಡಾಡುವೆನು;
ರಾತ್ರಿಯಲ್ಲಿಯೂ, ಆತನು ತನ್ನ ಆಲೋಚನೆಗಳನ್ನು ನನ್ನ ಅಂತರಾತ್ಮದಲ್ಲಿ ಬೇರೂರಿಸುವನು.
8 ನಾನು ಯೆಹೋವನನ್ನು ಯಾವಾಗಲೂ ನನ್ನ ಎದುರಿನಲ್ಲೇ ಇಟ್ಟುಕೊಂಡಿದ್ದೇನೆ;
ಆತನು ನನ್ನ ಬಲಗಡೆಯಲ್ಲಿರುವುದರಿಂದ ನಾನೆಂದಿಗೂ ಕದಲುವುದಿಲ್ಲ.
9 ಆದ್ದರಿಂದ ನನ್ನ ಹೃದಯವೂ ಆತ್ಮವೂ ಉಲ್ಲಾಸಪಡುತ್ತವೆ.
ನನ್ನ ದೇಹವೂ ಸುರಕ್ಷಿತವಾಗಿರುವುದು.
10 ಯಾಕೆಂದರೆ, ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ.
ನಿನ್ನ ಪವಿತ್ರನನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ.
11 ನೀನು ನನಗೆ ಜೀವಮಾರ್ಗವನ್ನು ಉಪದೇಶಿಸುವೆ.
ನಿನ್ನ ಸನ್ನಿಧಿಯಲ್ಲಿದ್ದರೆ ಪರಿಪೂರ್ಣ ಸಂತೋಷವಿರುವುದು;
ನಿನ್ನ ಬಲಗಡೆಯಲ್ಲಿದ್ದರೆ ಶಾಶ್ವತವಾದ ಆನಂದವಿರುವುದು.
19 ಆಗ ದಾನಿಯೇಲನು (ಬೇಲ್ತೆಶಚ್ಚರನು) ಸುಮಾರು ಒಂದು ಗಂಟೆಯವರೆಗೆ ಮೌನವಾಗಿದ್ದನು. ಅವನ ಬುದ್ಧಿಗೆ ತೋರಿದ ವಿಷಯಗಳು ಅವನನ್ನು ಗಾಬರಿಪಡಿಸಿದವು. ಆಗ ರಾಜನು, “ಬೇಲ್ತೆಶಚ್ಚರನೇ, ಕನಸು ಅಥವಾ ಕನಸಿನ ಅರ್ಥವು ನಿನ್ನನ್ನು ಭಯಗೊಳಿಸದಿರಲಿ” ಎಂದು ಧೈರ್ಯ ಹೇಳಿದನು.
ಆಗ ಬೇಲ್ತೆಶಚ್ಚರನು ಅರಸನಿಗೆ, “ನನ್ನ ಒಡೆಯನೇ, ಈ ಕನಸು ನಿನ್ನ ವಿರೋಧಿಗಳಿಗೆ ಫಲಿಸಲಿ. ಇದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ ಎಂದು ನಾನು ಹಾರೈಸುತ್ತೇನೆ. 20-21 ನೀನು ನಿನ್ನ ಕನಸಿನಲ್ಲಿ ಒಂದು ಮರವನ್ನು ಕಂಡೆ. ಆ ಮರವು ದೊಡ್ಡದಾಗಿ ಮತ್ತು ಬಲಯುತವಾಗಿ ಬೆಳೆಯಿತು. ಅದರ ತುದಿ ಆಕಾಶವನ್ನು ಮುಟ್ಟಿತ್ತು. ಅದು ಭೂಲೋಕದ ಎಲ್ಲೆಡೆಯಿಂದಲೂ ಕಾಣಿಸುತ್ತಿತ್ತು. ಅದರ ಎಲೆಗಳು ಸುಂದರವಾಗಿದ್ದವು: ಅದು ಸಾಕಷ್ಟು ಹಣ್ಣುಗಳನ್ನು ಫಲಿಸಿತ್ತು. ಆ ಹಣ್ಣುಗಳು ಎಲ್ಲರಿಗೂ ಸಾಕಾಗುವಷ್ಟು ಆಹಾರವನ್ನು ಕೊಟ್ಟವು. ಅದು ಕಾಡುಪ್ರಾಣಿಗಳಿಗೆ ವಾಸಸ್ಥಾನವಾಗಿತ್ತು; ಅದರ ಕೊಂಬೆಗಳು ಪಕ್ಷಿಗಳಿಗೆ ಗೂಡುಕಟ್ಟುವ ಸ್ಥಳಗಳಾಗಿದ್ದವು. ಆ ಮರವನ್ನು ನೀನು ನೋಡಿದೆ. 22 ಅರಸನೇ, ನೀನೇ ಆ ಮರ. ನೀನು ಪ್ರಖ್ಯಾತನೂ ಮತ್ತು ಪ್ರಬಲನೂ ಆಗಿರುವೆ. ನೀನು ಗಗನಚುಂಬಿಯಾದ ಆ ಮರದಂತೆ ಬೆಳೆದಿರುವೆ. ನಿನ್ನ ಪ್ರಾಬಲ್ಯವು ಈ ಭೂಮಿಯಲ್ಲಿ ದೂರದೂರದವರೆಗೆ ಹಬ್ಬಿದೆ.
23 “ಅರಸನೇ, ನೀನು ಆಕಾಶದಿಂದ ಇಳಿದುಬರುತ್ತಿದ್ದ ಒಬ್ಬ ಪರಿಶುದ್ಧ ದೇವದೂತನನ್ನು ಕಂಡೆ. ಅವನು, ‘ಮರವನ್ನು ಕಡಿದು ನಾಶಮಾಡಿರಿ. ಅದರ ಬುಡದ ಮೋಟಿನ ಸುತ್ತಲೂ ಕಬ್ಬಿಣದ ಮತ್ತು ಕಂಚಿನ ಒಂದು ಪಟ್ಟಿಯನ್ನು ಹಾಕಿರಿ. ಆ ಬುಡದ ಮೋಟನ್ನು ಮತ್ತು ಬೇರುಗಳನ್ನು ಭೂಮಿಯಲ್ಲಿ ಬಿಟ್ಟುಬಿಡಿ. ಅದರ ಸುತ್ತಲೂ ಕಾಡಿನ ಹುಲ್ಲು ಬೆಳೆಯಲಿ. ಅದು ಇಬ್ಬನಿಯಿಂದ ತೋಯ್ದು ಹೋಗಲಿ. ಅದು ಕಾಡುಪ್ರಾಣಿಯಂತೆ ಇರುವುದು. ಅದು ಏಳು ವರ್ಷ ಕಳೆಯುವವರೆಗೆ ಹಾಗೆಯೇ ಇರುವುದು’ ಎಂದು ಹೇಳಿದನು.
24 “ಕನಸಿನ ಅರ್ಥವು ಹೀಗಿದೆ: ಅರಸನೇ, ಮಹೋನ್ನತನಾದ ದೇವರು ನನ್ನ ಒಡೆಯನಾದ ಅರಸನಿಗೆ ಹೀಗಾಗಬೇಕೆಂದು ಆಜ್ಞಾಪಿಸಿದ್ದಾನೆ. 25 ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.
26 “ಮರದ ಬುಡದ ಮೋಟನ್ನು ಮತ್ತು ಅದರ ಬೇರುಗಳನ್ನು ಭೂಮಿಯಲ್ಲಿಯೇ ಬಿಟ್ಟುಬಿಡಿ ಎಂಬುದರ ಅರ್ಥವೇನೆಂದರೆ, ನಿನ್ನ ರಾಜ್ಯವನ್ನು ನಿನಗೆ ಹಿಂತಿರುಗಿಸಲಾಗುವುದು. ಮಹೋನ್ನತನಾದ ದೇವರು ನಿನ್ನ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಎಂಬುದನ್ನು ನೀನು ತಿಳಿದುಕೊಂಡ ಬಳಿಕ ಹೀಗಾಗುವುದು. 27 ಆದ್ದರಿಂದ ರಾಜನೇ, ನನ್ನ ಬುದ್ಧಿವಾದವನ್ನು ದಯವಿಟ್ಟು ಒಪ್ಪಿಕೊ. ನೀನು ಪಾಪಕೃತ್ಯಗಳನ್ನು ಮಾಡಬೇಡ. ನೀತಿಯನ್ನು ಅನುಸರಿಸು; ಕೆಟ್ಟದ್ದನ್ನು ಮಾಡಬೇಡ. ಬಡಜನರಿಗೆ ಕರುಣೆಯನ್ನು ತೋರು. ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾಗುವುದು. ಇದೇ ನನ್ನ ಬುದ್ಧಿವಾದ” ಎಂದು ಅರಿಕೆ ಮಾಡಿದನು.
ಕ್ರಿಸ್ತನಲ್ಲಿ ನೆಲೆಗೊಂಡಿರಿ
6 ಪ್ರಭುವಾದ ಕ್ರಿಸ್ತ ಯೇಸುವನ್ನು ನೀವು ಸ್ವೀಕರಿಸಿಕೊಂಡಿರುವುದರಿಂದ ಆತನಲ್ಲಿ ನೆಲೆಗೊಂಡಿದ್ದು ಜೀವಿಸಿರಿ. 7 ಕ್ರಿಸ್ತನನ್ನು ಮಾತ್ರ ನೀವು ಅವಲಂಬಿಸಬೇಕು. ಜೀವವೂ ಶಕ್ತಿಯೂ ಆತನಿಂದಲೇ ಬರುತ್ತವೆ. ನಿಮಗೆ ಸತ್ಯವನ್ನು ಉಪದೇಶಿಸಲಾಗಿದೆ. ನೀವು ಆ ಸತ್ಯ ಬೋಧನೆಯಲ್ಲಿ ದೃಢವಾಗಿ ನೆಲೆಗೊಂಡಿರಬೇಕು ಮತ್ತು ದೇವರಿಗೆ ಸಲ್ಲತಕ್ಕ ಕೃತಜ್ಞತಾಸ್ತುತಿಯಿಂದ ತುಂಬಿದವರಾಗಿರಬೇಕು.
8 ಯಾರೂ ನಿಮ್ಮನ್ನು ಮೋಸಕರವಾದ ಮತ್ತು ನಿರರ್ಥಕವಾದ ತತ್ವಜ್ಞಾನ ಬೋಧನೆಯಿಂದ ತಪ್ಪು ದಾರಿಗೆ ನಡೆಸದಂತೆ ಜಾಗ್ರತೆಯಿಂದಿರಿ. ಆ ತತ್ವಜ್ಞಾನಗಳು ಜನರಿಂದ ಬಂದುವೇ ಹೊರತು ಕ್ರಿಸ್ತನಿಂದಲ್ಲ. ಅವು ಈ ಲೋಕದ ಜನರ ನಿರರ್ಥಕ ತತ್ವಗಳು. 9 ದೇವರ ಸರ್ವಸಂಪೂರ್ಣತೆಯು ಕ್ರಿಸ್ತನಲ್ಲಿ ನೆಲೆಗೊಂಡಿದೆ. (ಕ್ರಿಸ್ತನು ಈ ಲೋಕದಲ್ಲಿದ್ದಾಗಲೂ ಸಹ ನೆಲೆಗೊಂಡಿತ್ತು.) 10 ನೀವೆಲ್ಲರೂ ಕ್ರಿಸ್ತನಲ್ಲಿ ಸಂಪೂರ್ಣರಾಗಿದ್ದೀರಿ. ನಿಮಗೆ ಬೇರೇನೂ ಬೇಕಿಲ್ಲ. ಕ್ರಿಸ್ತನು ಎಲ್ಲ ದೊರೆತನಗಳನ್ನು ಮತ್ತು ಅಧಿಕಾರಗಳನ್ನು ಆಳುತ್ತಾನೆ.
11 ಕ್ರಿಸ್ತನಲ್ಲಿ ನೀವು ಬೇರೊಂದು ಸುನ್ನತಿಯನ್ನು ಪಡೆದಿರುವಿರಿ. ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ. ಅಂದರೆ ನಿಮ್ಮ ಪಾಪಾಧೀನಸ್ವಭಾವದಿಂದ ನಿಮಗೆ ಬಿಡುಗಡೆಯಾಯಿತು. ಇದುವೇ ಕ್ರಿಸ್ತನು ಮಾಡುವ ಸುನ್ನತಿ. 12 ನೀವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಕ್ರಿಸ್ತನೊಂದಿಗೆ ಹೂಳಲ್ಪಟ್ಟಿರಿ. ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸುವುದರ ಮೂಲಕ ತೋರಿದ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ನೀವು ಆ ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಮೇಲಕ್ಕೆ ಎದ್ದುಬಂದಿರಿ.
13 ನೀವು ನಿಮ್ಮ ಪಾಪಗಳ ದೆಸೆಯಿಂದ ಮತ್ತು ನಿಮ್ಮ ಪಾಪ ಸ್ವಭಾವದ ಹಿಡಿತದಿಂದ ಇನ್ನೂ ಮುಕ್ತರಾಗದೆ ಇದ್ದುದರಿಂದ ಆತ್ಮಿಕವಾಗಿ ಸತ್ತವರಾಗಿದ್ದಿರಿ. ಆದರೆ ದೇವರು ನಿಮಗೆ ಕ್ರಿಸ್ತನೊಂದಿಗೆ ಜೀವವನ್ನು ದಯಪಾಲಿಸಿದನು. ಆತನು ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದನು. 14 ದೇವರ ನಿಯಮಗಳನ್ನು ಉಲ್ಲಂಘಿಸಿದ್ದರಿಂದ ನಾವು ಅಪರಾಧಿಗಳಾಗಿದ್ದೆವು. ನಮ್ಮ ಮೇಲೆ ಹೊರಿಸಲಾದ ದೋಷಾರೋಪಣೆಯ ಪಟ್ಟಿಯಲ್ಲಿ ನಾವು ಉಲ್ಲಂಘಿಸಿದ ಆಜ್ಞೆಗಳನ್ನೆಲ್ಲ ಲಿಖಿತಗೊಳಿಸಲಾಗಿತ್ತು. ಆದರೆ ದೇವರು ನಮ್ಮ ಅಪರಾಧಗಳನ್ನೆಲ್ಲ ಕ್ಷಮಿಸಿ ಅವುಗಳನ್ನು ಶಿಲುಬೆಗೆ ಜಡಿದನು. 15 ದೇವರು ತನಗೆ ವಿರೋಧವಾಗಿದ್ದ ದೊರೆತನಗಳನ್ನೂ ಅಧಿಕಾರಗಳನ್ನೂ ಸೋಲಿಸಿ, ಅವುಗಳನ್ನು ನಿರಾಯುಧರನ್ನಾಗಿ ಮಾಡಿ ಶಿಲುಬೆಯ ವಿಜಯೋತ್ಸವದಲ್ಲಿ ಅವುಗಳನ್ನು ಇಡೀ ಲೋಕದ ಎದುರಿನಲ್ಲಿ ಸೆರೆಯಾಳುಗಳನ್ನಾಗಿ ಮೆರವಣಿಗೆ ಮಾಡಿದನು.
Kannada Holy Bible: Easy-to-Read Version. All rights reserved. © 1997 Bible League International