Revised Common Lectionary (Complementary)
14 “ಆದ್ದರಿಂದ ನಾನು (ಯೆಹೋವನು) ಆಕೆಯೊಂದಿಗೆ ಸರಸ ಸಲ್ಲಾಪವಾಡುವೆನು. ಆಕೆಯನ್ನು ಮರುಭೂಮಿಗೆ ನಡೆಸಿ ಆಕೆಯೊಂದಿಗೆ ನಯನುಡಿಗಳಿಂದ ಮಾತಾಡುವೆನು. 15 ಅಲ್ಲಿ ಆಕೆಗೆ ನಾನು ದ್ರಾಕ್ಷಿತೋಟಗಳನ್ನು ಕೊಡುವೆನು. ಆಕೆಗೆ ಆಕೋರ್ ತಗ್ಗುಪ್ರದೇಶವನ್ನು ನಿರೀಕ್ಷೆಯ ಬಾಗಿಲಾಗಿ ಕೊಡುವೆನು. ಆಗ ಅವಳು ತಾನು ಈಜಿಪ್ಟಿನಿಂದ ಹೊರಬಂದ ತನ್ನ ಯೌವನದ ದಿನಗಳಲ್ಲಿ ಹೇಗೆ ನನ್ನ ಸಂಗಡ ಮಾತನಾಡಿದಳೋ ಹಾಗೆಯೇ ನನ್ನೊಂದಿಗೆ ಮಾತನಾಡುವಳು.” 16 ಇವು ಯೆಹೋವನ ಮಾತುಗಳು.
“ಆಗ ನನ್ನನ್ನು ನೀನು ‘ನನ್ನ ಗಂಡ’ ಎಂದು ಕರೆಯುವೆ. ‘ನನ್ನ ಬಾಳನು’ ಎಂದು ಕರೆಯುವದಿಲ್ಲ. 17 ನಾನು ಆಕೆಯ ಬಾಯಿಯಿಂದ ಬಾಳ್ ದೇವರುಗಳ ಹೆಸರನ್ನು ತೆಗೆದುಬಿಡುವೆನು. ಆಮೇಲೆ ಜನರು ಎಂದಿಗೂ ಬಾಳನ ಹೆಸರೆನ್ನೆತ್ತುವದಿಲ್ಲ.
18 “ಆ ಸಮಯದಲ್ಲಿ ನಾನು ಇಸ್ರೇಲರಿಗೋಸ್ಕರವಾಗಿ ಅಡವಿಯ ಮೃಗಗಳೊಂದಿಗೂ ಆಕಾಶದ ಪಕ್ಷಿಗಳೊಂದಿಗೂ ನೆಲದ ಮೇಲೆ ಹರಿದಾಡುವ ಜಂತುಗಳೊಂದಿಗೂ ಒಡಂಬಡಿಕೆ ಮಾಡುವೆನು. ನಾನು ಯುದ್ಧದ ಆಯುಧ, ಬಿಲ್ಲು, ಖಡ್ಗಗಳನ್ನು ತುಂಡು ಮಾಡುವೆನು. ಆ ದೇಶದೊಳಗೆ ಯಾವ ಆಯುಧವೂ ಇರದು. ಆಗ ಇಸ್ರೇಲಿನ ಜನರು ನಿಶ್ಟಿಂತೆಯಿಂದ ಮಲಗುವರು. 19 ಆಗ ನಾನು (ಯೆಹೋವನು) ನಿನ್ನನ್ನು ಒಳ್ಳೆಯತನದಿಂದಲೂ ನ್ಯಾಯದಿಂದಲೂ ಪ್ರೀತಿಯಿಂದಲೂ ಕರುಣೆಯಿಂದಲೂ ಕೂಡಿರುವ ನಿರಂತರವಾದ ವಧುವನ್ನಾಗಿ ಮಾಡುವೆನು. 20 ನಿನ್ನನ್ನು ನಾನು ನನ್ನ ನಂಬಿಗಸ್ತಳಾದ ವಧುವನ್ನಾಗಿ ಮಾಡುವೆನು. ಆಗ ನೀನು ನನ್ನನ್ನು ನಿಜವಾಗಿಯೂ ಅರಿತುಕೊಳ್ಳುವೆ.
ರಚನೆಗಾರ: ದಾವೀದ.
103 ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು!
ನನ್ನ ಸರ್ವಾಂಗಗಳೇ, ಆತನ ಪವಿತ್ರ ಹೆಸರನ್ನು ಕೊಂಡಾಡಿರಿ!
2 ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು!
ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ.
3 ಆತನು ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸುವನು;
ನಮ್ಮ ಕಾಯಿಲೆಗಳನ್ನೆಲ್ಲಾ ವಾಸಿಮಾಡುವನು.
4 ಆತನು ನಮ್ಮ ಜೀವವನ್ನು ನಾಶನದಿಂದ ರಕ್ಷಿಸಿ
ನಮಗೆ ಪ್ರೀತಿಯನ್ನೂ ಕನಿಕರವನ್ನೂ ತೋರುವನು.
5 ಆತನು ನಮಗೆ ಸುವರಗಳನ್ನು ಹೇರಳವಾಗಿ ದಯಪಾಲಿಸುವನು.
ಹದ್ದಿಗೆ ಬರುವಂತೆಯೇ ನಮಗೆ ಯೌವನವನ್ನು ಬರಮಾಡುತ್ತಾನೆ.
6 ಯೆಹೋವನು ನೀತಿವಂತನಾಗಿದ್ದಾನೆ.
ಕುಗ್ಗಿಹೋದವರಿಗೆ ಆತನು ನ್ಯಾಯ ದೊರಕಿಸುವನು.
7 ಆತನು ತನ್ನ ಕಟ್ಟಳೆಗಳನ್ನು ಮೋಶೆಗೆ ಉಪದೇಶಿಸಿದನು;
ತನ್ನ ಮಹತ್ಕಾರ್ಯಗಳನ್ನು ಇಸ್ರೇಲರಿಗೆ ತೋರಿಸಿದನು.
8 ಯೆಹೋವನು ಕನಿಕರವುಳ್ಳವನೂ ಕೃಪಾಪೂರ್ಣನೂ
ತಾಳ್ಮೆಯುಳ್ಳವನೂ ಪ್ರೀತಿಪೂರ್ಣನೂ ಆಗಿದ್ದಾನೆ.
9 ಆತನು ಯಾವಾಗಲೂ ಟೀಕಿಸುವವನಲ್ಲ.
ಆತನು ನಮ್ಮ ಮೇಲೆ ನಿತ್ಯವೂ ಕೋಪವಾಗಿರುವವನಲ್ಲ.
10 ನಾವು ದೇವರಿಗೆ ವಿರೋಧವಾಗಿ ಪಾಪಮಾಡಿದೆವು.
ಆದರೂ ತಕ್ಕ ದಂಡನೆಯನ್ನು ಆತನು ನಮಗೆ ಕೊಡಲಿಲ್ಲ.
11 ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವಾಗಿದೆಯೋ
ಆತನ ಮಹಾಪ್ರೀತಿಯು ಆತನ ಭಕ್ತರ ಮೇಲೆ ಅಷ್ಟೇ ಅಪಾರವಾಗಿದೆ.
12 ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟೋ ದೂರವಿರುವಂತೆ
ನಮ್ಮ ಪಾಪಗಳನ್ನು ನಮ್ಮಿಂದ ತೆಗೆದು ದೂರ ಮಾಡಿದ್ದಾನೆ.
13 ತಂದೆಯು ಮಕ್ಕಳನ್ನು ಕನಿಕರಿಸುವಂತೆ
ಯೆಹೋವನು ತನ್ನ ಭಕ್ತರನ್ನು ಕನಿಕರಿಸುವನು.
22 ಸರ್ವಸ್ಥಳಗಲ್ಲಿರುವ ಸಮಸ್ತವನ್ನು ಸೃಷ್ಟಿಸಿದಾತನು ಯೆಹೋವನೇ ಸರ್ವಸ್ಥಳಗಳಲ್ಲಿರುವ ಸಮಸ್ತಕ್ಕೂ ದೇವರೇ ಅಧಿಪತಿ.
ಅವುಗಳೆಲ್ಲಾ ಆತನನ್ನು ಕೊಂಡಾಡಲಿ!
ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು!
ದೇವರ ಸೇವಕರ ಹೊಸ ಒಪ್ಪಂದ
3 ನಾವು ನಮ್ಮ ವಿಷಯವಾಗಿ ಮತ್ತೆ ಹೊಗಳಿಕೊಳ್ಳಲು ಆರಂಭಿಸಿದ್ದೇವೆಯೇ? ಇತರ ಕೆಲವು ಜನರಿಗೆ ಬೇಕಾಗುವಂತೆ ನಿಮ್ಮ ಬಳಿಗೆ ಬರಲು ನನಗೆ ಯೋಗ್ಯತಾಪತ್ರಗಳನ್ನು ತೆಗೆದು ಕೊಳ್ಳಬೇಕಾಗಿದೆಯೋ? ಅಥವಾ ಬೇರೆಡೆಗೆ ಹೋಗುವಾಗ ನಿಮ್ಮಿಂದ ಯೋಗ್ಯತಾ ಪತ್ರಗಳನ್ನು ತೆಗೆದುಕೊಳ್ಳಬೇಕಾಗಿದೆಯೋ? 2 ಸ್ವತಃ ನೀವೇ ನಮಗೆ ಯೋಗ್ಯತಾಪತ್ರವಾಗಿದ್ದೀರಿ. ಆ ಪತ್ರಗಳು ನಮ್ಮ ಹೃದಯಗಳಲ್ಲಿ ಬರೆಯಲ್ಪಟ್ಟಿವೆ. ಆ ಪತ್ರವನ್ನು ಎಲ್ಲರೂ ಬಲ್ಲರು, ಎಲ್ಲರೂ ಓದುತ್ತಾರೆ. 3 ಕ್ರಿಸ್ತನು ನಮ್ಮ ಮೂಲಕವಾಗಿ ಕಳುಹಿಸಿದ ಕ್ರಿಸ್ತನ ಪತ್ರ ನೀವಾಗಿದ್ದೀರಿ. ಆ ಪತ್ರವನ್ನು ಬರೆದಿರುವುದು ಶಾಯಿಯಿಂದಲ್ಲ, ಜೀವಸ್ವರೂಪನಾದ ದೇವರ ಆತ್ಮನಿಂದ. ಇದನ್ನು ಕಲ್ಲುಹಲಿಗೆಗಳ ಮೇಲೆ ಬರೆದಿಲ್ಲ. ಇದನ್ನು ಮಾನವ ಹೃದಯಗಳ ಮೇಲೆ ಬರೆಯಲಾಗಿದೆ.
4 ನಾವು ಈ ಸಂಗತಿಗಳನ್ನು ಹೇಳಬಲ್ಲೆವು; ಏಕೆಂದರೆ ನಾವು ಕ್ರಿಸ್ತನ ಮೂಲಕ ದೇವರ ಸನ್ನಿಧಿಯಲ್ಲಿ ಭರವಸದಿಂದಿದ್ದೇವೆ. 5 ನಮ್ಮ ಸ್ವಂತ ಶಕ್ತಿಯಿಂದಲೇ ನಾವು ಯಾವ ಒಳ್ಳೆಯದನ್ನಾದರೂ ಮಾಡಬಲ್ಲೆವೆಂದು ನಾನು ಹೇಳುತ್ತಿಲ್ಲ. ನಾವು ಮಾಡುವ ಕಾರ್ಯಗಳನ್ನು ದೇವರು ಒದಗಿಸಿದ ಸಾಮರ್ಥ್ಯದಿಂದಲೇ ಮಾಡುತ್ತೇವೆ. 6 ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ದೇವರೇ ನಮಗೆ ಕೊಟ್ಟನು. ಈ ಹೊಸ ಒಡಂಬಡಿಕೆಯು ಲಿಖಿತ ರೂಪವಾದ ಧರ್ಮಶಾಸ್ತ್ರವಲ್ಲ. ಇದು ಪವಿತ್ರಾತ್ಮನದು. ಲಿಖಿತ ರೂಪವಾದ ಧರ್ಮಶಾಸ್ತ್ರವು ಮರಣವನ್ನು ತರುತ್ತದೆ, ಆದರೆ ಪವಿತ್ರಾತ್ಮನು ಜೀವವನ್ನು ಕೊಡುತ್ತಾನೆ.
ಯೇಸುವನ್ನು ಹಿಂಬಾಲಿಸಿದ ಲೇವಿ
(ಮತ್ತಾಯ 9:9-13; ಲೂಕ 5:27-32)
13 ಯೇಸು ಮತ್ತೆ ಸರೋವರಕ್ಕೆ ಹೋದನು. ಅನೇಕ ಜನರು ಆತನನ್ನು ಹಿಂಬಾಲಿಸಿ ಅಲ್ಲಿಗೆ ಹೋದದ್ದರಿಂದ ಆತನು ಅವರಿಗೆ ಉಪದೇಶಿಸಿದನು. 14 ಯೇಸು ಸರೋವರದ ತೀರದಲ್ಲಿ ನಡೆದು ಹೋಗುತ್ತಿದ್ದಾಗ ಸುಂಕವಸೂಲಿ ಮಾಡುತ್ತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡನು. ಲೇವಿಯು ಸುಂಕದಕಟ್ಟೆಯಲ್ಲಿ ಕುಳಿತಿದ್ದನು. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಆಗ ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.
15 ಅಂದು ಸ್ವಲ್ಪ ಹೊತ್ತಾದ ಬಳಿಕ ಯೇಸು ಲೇವಿಯ ಮನೆಯಲ್ಲಿ ಊಟಮಾಡುತ್ತಿದ್ದನು. ಅಲ್ಲಿ ಅನೇಕ ಸುಂಕದ ಅಧಿಕಾರಿಗಳು ಮತ್ತು ಇತರ ಕೆಟ್ಟ ಜನರು ಸಹ ಯೇಸು ಮತ್ತು ಆತನ ಶಿಷ್ಯರ ಸಂಗಡ ಊಟಮಾಡುತ್ತಿದ್ದರು. ಈ ಜನರಲ್ಲಿ ಅನೇಕರು ಯೇಸುವಿನ ಹಿಂಬಾಲಕರಾಗಿದ್ದರು. 16 ಈ ಸುಂಕದ ಅಧಿಕಾರಿಗಳೊಂದಿಗೆ ಮತ್ತು ಇತರ ಕೆಟ್ಟ ಜನರೊಂದಿಗೆ ಯೇಸು ಊಟಮಾಡುತ್ತಿರುವುದನ್ನು ಧರ್ಮೋಪದೇಶಕರು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ, “ಯೇಸು ಪಾಪಿಗಳೊಂದಿಗೆ ಮತ್ತು ಸುಂಕದ ಅಧಿಕಾರಿಗಳೊಂದಿಗೆ ಏಕೆ ಊಟ ಮಾಡುತ್ತಾನೆ?” ಎಂದು ಕೇಳಿದರು.
17 ಬಳಿಕ ಯೇಸು ಅವರಿಗೆ, “ಆರೋಗ್ಯವಂತರಿಗೆ ವೈದ್ಯನ ಅಗತ್ಯವಿಲ್ಲ, ಆರೋಗ್ಯವಿಲ್ಲದವರಿಗೆ ವೈದ್ಯನ ಅಗತ್ಯವಿದೆ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.
ಯೇಸು ಇತರ ಧಾರ್ಮಿಕ ನಾಯಕರಂತಲ್ಲ
(ಮತ್ತಾಯ 9:14-17; ಲೂಕ 5:33-39)
18 ಯೋಹಾನನ ಶಿಷ್ಯರು ಮತ್ತು ಫರಿಸಾಯರು ಉಪವಾಸ ಮಾಡುತ್ತಿದ್ದರು. ಕೆಲವು ಜನರು ಯೇಸುವಿನ ಬಳಿಗೆ ಬಂದು, “ಯೋಹಾನನ ಶಿಷ್ಯರು ಮತ್ತು ಫರಿಸಾಯರ ಹಿಂಬಾಲಕರು ಉಪವಾಸ ಮಾಡುತ್ತಾರೆ. ಆದರೆ ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ?” ಎಂದು ಕೇಳಿದರು.
19 ಯೇಸು, “ಮದುವೆಯಲ್ಲಿ ಮದುಮಗನು ತಮ್ಮ ಜೊತೆಯಲ್ಲಿ ಇರುವಾಗ ಅವನ ಗೆಳೆಯರು ವ್ಯಸನಪಡುವುದಿಲ್ಲ. ಉಪವಾಸ ಮಾಡುವುದಿಲ್ಲ. 20 ಆದರೆ ಮದುಮಗನು ಅವರನ್ನು ಬಿಟ್ಟುಹೋಗುವ ಕಾಲ ಬರುತ್ತದೆ. ಆಗ ಅವನ ಗೆಳೆಯರು ವ್ಯಸನಪಡುತ್ತಾರೆ, ಉಪವಾಸ ಮಾಡುತ್ತಾರೆ.
21 “ಒಬ್ಬ ವ್ಯಕ್ತಿಯು ತನ್ನ ಹಳೆಯ ಮೇಲಂಗಿಯ ಹರಕಿಗೆ ಹೊಸ ಬಟ್ಟೆಯನ್ನು ತೇಪೆ ಹಚ್ಚುವುದಿಲ್ಲ. ಒಂದುವೇಳೆ ಹಚ್ಚಿದರೆ, ಆ ತೇಪೆಯು ಹಿಂಜಿಕೊಂಡು ಆ ಹರಕನ್ನು ಮತ್ತಷ್ಟು ದೊಡ್ಡದನ್ನಾಗಿ ಮಾಡುತ್ತದೆ. 22 ಹಾಗೆಯೇ, ಜನರು ಹೊಸ ದ್ರಾಕ್ಷಾರಸವನ್ನು ಹಳೆಯ ಬುದ್ದಲಿಗಳಲ್ಲಿ ಹಾಕಿಡುವುದಿಲ್ಲ. ಏಕೆಂದರೆ ಅದು ಬುದ್ದಲಿಗಳನ್ನು ಒಡೆದುಹಾಕುವುದರಿಂದ ದ್ರಾಕ್ಷಾರಸವೂ ಹಾಳಾಗುತ್ತದೆ. ಆದ್ದರಿಂದ ಜನರು ಯಾವಾಗಲೂ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ” ಎಂದು ಉತ್ತರಕೊಟ್ಟನು.
Kannada Holy Bible: Easy-to-Read Version. All rights reserved. © 1997 Bible League International