Revised Common Lectionary (Complementary)
5 ಸೊಲೊಮೋನನು ಗಿಬ್ಯೋನಿನಲ್ಲಿದ್ದಾಗ, ಯೆಹೋವನು ರಾತ್ರಿ ಕನಸಿನಲ್ಲಿ ಅವನಿಗೆ ದರ್ಶನವನ್ನು ನೀಡಿ, “ನೀನು ಏನುಬೇಕಾದರೂ ಕೇಳು. ನಾನು ಅದನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.
6 ಸೊಲೊಮೋನನು, “ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ನೀನು ಬಹಳ ದಯಾಪರನಾಗಿದ್ದೆ. ಅವನು ನಿನ್ನನ್ನು ಅನುಸರಿಸಿದನು. ಅವನು ಒಳ್ಳೆಯವನಾಗಿದ್ದು ನೀತಿವಂತನಾಗಿ ಬದುಕಿದನು. ಅವನ ನಂತರ ಅವನ ಮಗನನ್ನು ಅವನ ಸಿಂಹಾಸನದಲ್ಲಿ ಕುಳ್ಳಿರಿಸಿ ಆಳಲು ನೇಮಿಸಿ ನೀನು ಮಹಾಕೃಪೆಯನ್ನು ತೋರಿಸಿದೆ. 7 ನನ್ನ ದೇವರಾದ ಯೆಹೋವನೇ, ನನ್ನ ತಂದೆಯ ಸ್ಥಾನದಲ್ಲಿ ನನ್ನನ್ನು ನೀನು ರಾಜನನ್ನಾಗಿ ಮಾಡಿದೆ. ಆದರೆ ನಾನೊಬ್ಬ ಚಿಕ್ಕ ಮಗುವಿನಂತಿದ್ದೇನೆ. ನಾನು ಮಾಡಬೇಕಾದ ಕಾರ್ಯಗಳನ್ನು ಮಾಡಲು ಇರಬೇಕಾದ ಬುದ್ದಿವಂತಿಕೆಯು ನನ್ನಲ್ಲಿಲ್ಲ. 8 ನಿನ್ನ ಸೇವಕನಾದ ನಾನು, ನೀನೇ ಆರಿಸಿಕೊಂಡಿರುವ ಜನರ ನಡುವೆ ಇದ್ದೇನೆ. ಇಲ್ಲಿ ಅನೇಕಾನೇಕ ಜನರಿದ್ದಾರೆ. ಅವರನ್ನು ಎಣಿಸಲಾಗದು, ಒಬ್ಬ ಆಡಳಿತಗಾರನು ಅವರ ಮಧ್ಯದಲ್ಲಿದ್ದು ಅನೇಕ ತೀರ್ಪುಗಳನ್ನು ಮಾಡಬೇಕಾಗುತ್ತದೆ. 9 ಆದ್ದರಿಂದ ನಿನ್ನ ಜನರನ್ನು ಒಳ್ಳೆಯ ರೀತಿಯಲ್ಲಿ ಆಳಲು ಮತ್ತು ಅವರಿಗೆ ಸರಿಯಾದ ತೀರ್ಪುಗಳನ್ನು ನೀಡಲು ನನಗೆ ವಿವೇಕವನ್ನು ಕರುಣಿಸು. ಇದು ನನಗೆ ಸರಿ ಮತ್ತು ತಪ್ಪುಗಳ ನಡುವಿರುವ ಭೇದವನ್ನು ತಿಳಿಸಿಕೊಡುತ್ತದೆ. ನನಗೆ ಉತ್ತಮವಾದ ವಿವೇಕವಿಲ್ಲದಿದ್ದರೆ, ನಾನು ಈ ಮಹಾಜನಾಂಗವನ್ನು ಆಳುವುದು ಸಾಧ್ಯವಾಗುವುದಿಲ್ಲ” ಎಂದು ಉತ್ತರಿಸಿದನು.
10 ಸೊಲೊಮೋನನ ಈ ಕೋರಿಕೆಯನ್ನು ಕೇಳಿ ಯೆಹೋವನಿಗೆ ಸಂತೋಷವಾಯಿತು. 11 ಆದ್ದರಿಂದ ದೇವರು ಅವನಿಗೆ, “ನೀನು ನಿನಗಾಗಿ ಹೆಚ್ಚು ಆಯಸ್ಸನ್ನೂ ಕೇಳಲಿಲ್ಲ, ಶ್ರೀಮಂತಿಕೆಯನ್ನೂ ಕೇಳಲಿಲ್ಲ, ನಿನ್ನ ಶತ್ರುಗಳಿಗೆ ಮರಣವನ್ನು ದಯಪಾಲಿಸೆಂದೂ ಕೇಳಲಿಲ್ಲ, ನೀನು ನ್ಯಾಯವಾದ ತೀರ್ಪು ನೀಡಲು ವಿವೇಕವನ್ನು ಕೇಳಿದೆ. 12 ನಿನ್ನ ಕೋರಿಕೆಯನ್ನು ಅನುಗ್ರಹಿಸುವೆನು; ನಿನ್ನನ್ನು ಜ್ಞಾನಿಯನ್ನಾಗಿಯೂ ವಿವೇಕಿಯನ್ನಾಗಿಯೂ ಮಾಡುವೆನು. ಪೂರ್ವಕಾಲದಲ್ಲಿ ನಿನ್ನಂತವರು ಯಾರೊಬ್ಬರೂ ಇರಲಿಲ್ಲ ಎನ್ನುವಷ್ಟು ಜ್ಞಾನಿಯನ್ನಾಗಿ ನಿನ್ನನ್ನು ಮಾಡುತ್ತೇನೆ. ಮುಂದೆ ನಿನ್ನಂತವರು ಯಾರೊಬ್ಬರೂ ಇರುವುದಿಲ್ಲ.
129 ನಿನ್ನ ಕಟ್ಟಳೆಗಳು ಆಶ್ಚರ್ಯಕರವಾಗಿವೆ.
ಪೂರ್ಣಹೃದಯದಿಂದ ಅವುಗಳನ್ನು ಅನುಸರಿಸುವೆನು.
130 ಜನರು ನಿನ್ನ ವಾಕ್ಯವನ್ನು ಅರ್ಥಮಾಡಿಕೊಂಡಾಗ ಅದು ಅವರಿಗೆ ನೀತಿಮಾರ್ಗವನ್ನು ತೋರಿಸುವ ಬೆಳಕಿನಂತಿರುವುದು.
ನಿನ್ನ ವಾಕ್ಯವು ಸಾಮಾನ್ಯರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
131 ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳಲು ನನಗೆ ನಿಜವಾಗಿಯೂ ಇಷ್ಟ.
ನಾನು ಏದುಸಿರುಬಿಡುತ್ತಾ ಲವಲವಿಕೆಯಿಂದ ನಿನ್ನ ಆಜ್ಞೆಗಳಿಗಾಗಿ ಕಾಯುತ್ತಿದ್ದೇನೆ.
132 ನನ್ನನ್ನು ನೋಡಿ ಕರುಣಿಸು.
ನಿನ್ನ ಹೆಸರನ್ನು ಪ್ರೀತಿಸುವವರಿಗೆ ಯೋಗ್ಯವಾದುವುಗಳನ್ನು ಮಾಡು.
133 ನಿನ್ನ ವಾಗ್ದಾನಕ್ಕನುಸಾರವಾಗಿ ನನಗೆ ಮಾರ್ಗದರ್ಶನ ನೀಡು.
ಯಾವ ಕೇಡೂ ನನಗೆ ಸಂಭವಿಸದಿರಲಿ.
134 ಕೆಡುಕರಿಂದ ನನ್ನನ್ನು ರಕ್ಷಿಸು.
ಆಗ ನಾನು ನಿನ್ನ ನಿಯಮಗಳಿಗೆ ವಿಧೇಯನಾಗುವೆನು.
135 ನಿನ್ನ ಸೇವಕನ ಮೇಲೆ ಕರುಣೆಯಿರಲಿ,
ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.
136 ಜನರು ನಿನ್ನ ಉಪದೇಶಗಳಿಗೆ ವಿಧೇಯರಾಗದಿರುವುದರಿಂದ
ನನ್ನ ಕಣ್ಣೀರು ಗೋಳಾಟದಿಂದ ನದಿಯಾಗಿ ಹರಿಯುತ್ತಿದೆ.
26 ನಾವು ಬಲಹೀನರಾಗಿರುವುದರಿಂದ ನಮ್ಮ ಬಲಹೀನತೆಯಲ್ಲಿ ಪವಿತ್ರಾತ್ಮನು ನಮಗೆ ಸಹಾಯ ಮಾಡುತ್ತಾನೆ. ನಾವು ಹೇಗೆ ಪ್ರಾರ್ಥಿಸಬೇಕು ಮತ್ತು ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದು ನಮಗೆ ತಿಳಿಯದು. ಆದರೆ ಪವಿತ್ರಾತ್ಮನು ತಾನೇ ನಮಗೋಸ್ಕರ ದೇವರಲ್ಲಿ ವಿವರಿಸಲಾಗದ ಅಂತರ್ಭಾವದಿಂದ ಬೇಡಿಕೊಳ್ಳುತ್ತಾನೆ. 27 ಅಂತರಂಗವನ್ನು ನೋಡಬಲ್ಲ ದೇವರಿಗೆ ಪವಿತ್ರಾತ್ಮನ ಮನಸ್ಸಿನಲ್ಲಿರುವುದೆಲ್ಲಾ ಗೊತ್ತಿದೆ, ಏಕೆಂದರೆ ದೇವರ ಚಿತ್ತಕ್ಕನುಸಾರವಾಗಿಯೇ ಪವಿತ್ರಾತ್ಮನು ದೇವಜನರಿಗೋಸ್ಕರ ದೇವರಲ್ಲಿ ವಿಜ್ಞಾಪಿಸುತ್ತಾನೆ.
28 ದೇವರು ತನ್ನನ್ನು ಪ್ರೀತಿಸುವವರ ಒಳ್ಳೆಯದಕ್ಕಾಗಿ ಪ್ರತಿಯೊಂದು ಕಾರ್ಯವನ್ನೂ ಅನುಕೂಲ ಮಾಡುತ್ತಾನೆಂದು ನಮಗೆ ಗೊತ್ತಿದೆ. ಆ ಜನರನ್ನು ದೇವರೇ ಆರಿಸಿಕೊಂಡನು, ಏಕೆಂದರೆ ಅದು ಆತನ ಯೋಜನೆಯಾಗಿತ್ತು. 29 ದೇವರು ತಾನು ಜಗತ್ತನ್ನು ಸೃಷ್ಟಿಸುವುದಕ್ಕಿಂತ ಮೊದಲೇ ಆ ಜನರನ್ನು ಬಲ್ಲವನಾಗಿದ್ದನು ಮತ್ತು ಆ ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂದು ನಿರ್ಧರಿಸಿದನು. ಹೀಗಿರಲಾಗಿ, ಅನೇಕ ಸಹೋದರ ಸಹೋದರಿಯರಲ್ಲಿ ಯೇಸುವೇ ಹಿರಿಯವನಾಗಿದ್ದಾನೆ. 30 ಆ ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂಬ ತನ್ನ ಯೋಜನೆಗನುಸಾರವಾಗಿ ದೇವರು ಅವರನ್ನು ಕರೆದು, ನೀತಿವಂತರನ್ನಾಗಿ ಮಾಡಿ, ಅವರಿಗೆ ತನ್ನ ಮಹಿಮೆಯನ್ನು ಕೊಟ್ಟನು.
ಕ್ರಿಸ್ತ ಯೇಸುವಿನಲ್ಲಿ ದೇವರ ಪ್ರೀತಿ
31 ಹೀಗಿರುವಲ್ಲಿ ಇದರ ಬಗ್ಗೆ ನಾವು ಏನು ಹೇಳೋಣ? ದೇವರು ನಮ್ಮೊಂದಿಗೆ ಇರುವಾಗ, ನಮ್ಮನ್ನು ಯಾರೂ ಸೋಲಿಸಲಾರರು. 32 ದೇವರು ತನ್ನ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೊಸ್ಕರ ಕೊಟ್ಟನು. ಆದ್ದರಿಂದ ಈಗ, ದೇವರು ಯೇಸುವಿನೊಂದಿಗೆ ನಮಗೆ ಎಲ್ಲವನ್ನು ಖಂಡಿತವಾಗಿ ಕೊಡುತ್ತಾನೆ. 33 ದೇವರು ಆರಿಸಿಕೊಂಡಿರುವ ಜನರ ಮೇಲೆ ಯಾರು ದೋಷಾರೋಪಣೆ ಮಾಡಬಲ್ಲರು? ಯಾರೂ ಇಲ್ಲ! ಅವರನ್ನು ನೀತಿವಂತರನ್ನಾಗಿ ಮಾಡುವಾತನು ದೇವರೇ. 34 ದೇವಜನರು ದೋಷಿಗಳೆಂದು ಯಾರು ಹೇಳಬಲ್ಲರು? ಯಾರು ಇಲ್ಲ! ಕ್ರಿಸ್ತ ಯೇಸು ನಮಗೋಸ್ಕರ ಪ್ರಾಣಕೊಟ್ಟನು. ಅಷ್ಟೇ ಅಲ್ಲ, ಆತನು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದನು. ಈಗ ಆತನು ದೇವರ ಬಲಗಡೆಯಲ್ಲಿದ್ದಾನೆ ಮತ್ತು ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಿದ್ದಾನೆ. 35 ಕ್ರಿಸ್ತನ ಪ್ರೀತಿಯಿಂದ ಯಾವುದು ನಮ್ಮನ್ನು ಬೇರ್ಪಡಿಸಬಲ್ಲದು? ಕಷ್ಟಸಂಕಟಗಳಾಗಲಿ ಇಕ್ಕಟ್ಟುಗಳಾಗಲಿ ಹಿಂಸೆಯಾಗಲಿ ಆಹಾರವಿಲ್ಲದಿರುವುದಾಗಲಿ ಬಟ್ಟೆಯಿಲ್ಲದಿರುವುದಾಗಲಿ ಅಪಾಯವಾಗಲಿ ಮರಣವಾಗಲಿ ನಮ್ಮನ್ನು ಕ್ರಿಸ್ತನ ಪ್ರೀತಿಯಿಂದ ಬೇರ್ಪಡಿಸಬಲ್ಲವೇ? ಇಲ್ಲ! 36 ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ:
“ನಿನಗೋಸ್ಕರವಾಗಿ ನಾವು ಎಲ್ಲಾ ಸಮಯಗಳಲ್ಲಿ ಸಾವಿನ ದವಡೆಯಲ್ಲಿದ್ದೇವೆ.
ಕೊಯ್ಯಲು ಕೊಂಡೊಯ್ಯುವ ಕುರಿಗಳಿಗಿಂತ ಕಡೆಗಣಿಸಲ್ಪಟ್ಟಿದ್ದೇವೆ.”(A)
37 ಆದರೆ ನಮಗೋಸ್ಕರ ತನ್ನ ಪ್ರೀತಿಯನ್ನು ತೋರಿಸಿದ ದೇವರ ಮೂಲಕವಾಗಿ ಈ ಎಲ್ಲಾ ಸಂಗತಿಗಳಲ್ಲಿ ನಮಗೆ ಪೂರ್ಣ ಜಯವಿದೆ. 38-39 ಹೌದು, ದೇವರ ಪ್ರೀತಿಯಿಂದ ನಮ್ಮನ್ನು ಯಾವುದೂ ಬೇರ್ಪಡಿಸಲಾರದೆಂದು ನನಗೆ ನಿಶ್ಚಯವಾಗಿ ತಿಳಿದಿದೆ. ಮರಣವಾಗಲಿ ಜೀವವಾಗಲಿ ದೇವದೂತರಾಗಲಿ ದುರಾತ್ಮಗಳಾಗಲಿ ಈಗಿನ ಸಂಗತಿಗಳಾಗಲಿ ಮುಂದಿನ ಸಂಗತಿಗಳಾಗಲಿ ಯಾವ ಶಕ್ತಿಗಳೇ ಆಗಲಿ ಮೇಲಿನ ಸಂಗತಿಗಳಾಗಲಿ ಕೆಳಗಿನ ಸಂಗತಿಗಳಾಗಲಿ ಅಥವಾ ಇಡೀ ಜಗತ್ತಿನಲ್ಲಿರುವ ಯಾವುದೇ ಸಂಗತಿಗಳಾಗಲಿ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ.
ಅನೇಕ ಸಾಮ್ಯಗಳ ಮೂಲಕ ಯೇಸುವಿನ ಉಪದೇಶ
(ಮಾರ್ಕ 4:30-34; ಲೂಕ 13:18-21)
31 ನಂತರ ಯೇಸು ಜನರಿಗೆ ಮತ್ತೊಂದು ಸಾಮ್ಯವನ್ನು ಹೇಳಿದನು: “ಪರಲೋಕರಾಜ್ಯ ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ತನ್ನ ಹೊಲದಲ್ಲಿ ಬಿತ್ತಿದನು. 32 ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣ ಬೀಜವಾಗಿದೆ. ಆದರೆ ಅದು ಬೆಳೆದಾಗ ತೋಟದ ಗಿಡಗಳಿಗಿಂತಲೂ ದೊಡ್ಡದಾಗಿರುವುದು. ಅದು ಮರವಾದಾಗ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಮಾಡಿಕೊಳ್ಳುವಷ್ಟು ದೊಡ್ಡದಾಗಿರುತ್ತದೆ.”
33 ಬಳಿಕ ಯೇಸು ಜನರಿಗೆ ಇನ್ನೊಂದು ಸಾಮ್ಯವನ್ನು ಹೇಳಿದನು: “ಪರಲೋಕರಾಜ್ಯವು ಒಬ್ಬ ಸ್ತ್ರೀ ರೊಟ್ಟಿ ಮಾಡುವುದಕ್ಕೆ ಒಂದು ದೊಡ್ಡ ಬೋಗುಣಿಯ ಹಿಟ್ಟಿಗೆ ಬೆರೆಸಿದ ಹುಳಿಗೆ ಹೋಲಿಕೆಯಾಗಿದೆ. ಆ ಹುಳಿಯು ನಾದಿದ ಹಿಟ್ಟನ್ನೆಲ್ಲಾ ಉಬ್ಬಿಸಿತು.”
ನಿಧಿ ಮತ್ತು ಮುತ್ತಿನ ಸಾಮ್ಯಗಳು
44 “ಪರಲೋಕರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಂದು ದಿನ ಒಬ್ಬನು ಆ ನಿಧಿಯನ್ನು ಕಂಡು ಬಹಳ ಸಂತೋಷದಿಂದ ಅದನ್ನು ಹೊಲದಲ್ಲಿ ಅಡಗಿಸಿಟ್ಟನು. ಬಳಿಕ ಅವನು ತನ್ನ ಆಸ್ತಿಯನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.
45 “ಪರಲೋಕರಾಜ್ಯವು ಶ್ರೇಷ್ಠವಾದ ಮುತ್ತುಗಳನ್ನು ಹುಡುಕುವ ಒಬ್ಬ ವ್ಯಾಪಾರಿಯಂತಿದೆ. 46 ಒಂದು ದಿನ ಆ ವ್ಯಾಪಾರಿಗೆ ಬಹು ಅಮೂಲ್ಯವಾದ ಒಂದು ಮುತ್ತು ಸಿಕ್ಕಿತು. ಆಗ ಅವನು ತನ್ನ ಆಸ್ತಿಯನ್ನೆಲ್ಲಾ ಮಾರಿ ಆ ಮುತ್ತನ್ನು ಕೊಂಡುಕೊಂಡನು.
ಮೀನಿನ ಬಲೆಯ ಕುರಿತಾದ ಸಾಮ್ಯ
47 “ಪರಲೋಕರಾಜ್ಯವು ಸರೋವರದೊಳಗೆ ಬೀಸಿದ ಬಲೆಯಂತಿದೆ. ಆ ಬಲೆಗೆ ಅನೇಕ ಜಾತಿಯ ಮೀನುಗಳು ಸಿಕ್ಕಿಕೊಂಡವು. 48 ಆಗ ಆ ಬಲೆಯು ತುಂಬಿಹೋಯಿತು. ಬೆಸ್ತರು ಆ ಬಲೆಯನ್ನು ದಡಕ್ಕೆ ಎಳೆದುಕೊಂಡು ಬಂದು ಒಳ್ಳೆಯ ಮೀನುಗಳನ್ನೆಲ್ಲಾ ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿದರು. 49 ಈ ಪ್ರಪಂಚದ ಅಂತ್ಯದಲ್ಲಿ ಅದೇ ರೀತಿ ಆಗುವುದು. ದೇವದೂತರು ಬಂದು ಒಳ್ಳೆಯ ಜನರಿಂದ ಕೆಟ್ಟಜನರನ್ನು ಬೇರೆ ಮಾಡುವರು. 50 ದೇವದೂತರು ಕೆಟ್ಟಜನರನ್ನು ಬೆಂಕಿಯ ಸ್ಥಳದೊಳಕ್ಕೆ ಎಸೆಯುವರು. ಆ ಸ್ಥಳದಲ್ಲಿ ಜನರು ಗೋಳಾಡುತ್ತಾ ನೋವಿನಿಂದ ತಮ್ಮ ಹಲ್ಲುಗಳನ್ನು ಕಡಿಯುವರು.”
51 ಯೇಸು ತನ್ನ ಶಿಷ್ಯರಿಗೆ, “ನೀವು ಈ ವಿಷಯಗಳನ್ನೆಲ್ಲಾ ಅರ್ಥಮಾಡಿಕೊಂಡಿರೋ?” ಎಂದು ಕೇಳಿದನು.
ಅದಕ್ಕೆ ಶಿಷ್ಯರು, “ನಾವು ಅರ್ಥಮಾಡಿಕೊಂಡೆವು” ಎಂದು ಉತ್ತರಕೊಟ್ಟರು.
52 ಆಗ ಯೇಸು ತನ್ನ ಶಿಷ್ಯರಿಗೆ, “ಹೀಗಿರಲಾಗಿ ಪರಲೋಕರಾಜ್ಯದ ವಿಷಯವಾಗಿ ಬೋಧಿಸಿದಂಥ ಪ್ರತಿಯೊಬ್ಬ ಧರ್ಮೋಪದೇಶಕನು ಒಂದು ಮನೆಯ ಯಜಮಾನನಂತಿದ್ದಾನೆ. ಆ ಮನುಷ್ಯನು ಹೊಸ ವಸ್ತುಗಳನ್ನೂ ಹಳೆಯ ವಸ್ತುಗಳನ್ನೂ ಆ ಮನೆಯಲ್ಲಿ ಶೇಖರಿಸಿಕೊಂಡು ಅವುಗಳನ್ನು ಹೊರಗೆ ತರುವನು” ಎಂದನು.
Kannada Holy Bible: Easy-to-Read Version. All rights reserved. © 1997 Bible League International