Revised Common Lectionary (Complementary)
9 ಎಲೀಯನು ಅಲ್ಲಿನ ಒಂದು ಗುಹೆಗೆ ಹೋಗಿ ರಾತ್ರಿಯೆಲ್ಲಾ ಅಲ್ಲಿ ಕಳೆದನು.
ಆಗ ಯೆಹೋವನು ಎಲೀಯನೊಂದಿಗೆ ಮಾತನಾಡಿ, “ಎಲೀಯನೇ, ನೀನು ಇಲ್ಲಿರುವುದೇಕೆ?” ಎಂದು ಕೇಳಿದನು.
10 ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.
11 ಆಗ ಯೆಹೋವನು ಎಲೀಯನಿಗೆ, “ಹೋಗು, ನನ್ನ ಎದುರಿಗೆ ಬೆಟ್ಟದ ಮೇಲೆ ನಿಲ್ಲು. ನಾನು ನಿನ್ನ ಬಳಿಯಲ್ಲಿ ಹಾದು ಹೋಗುತ್ತೇನೆ” ಎಂದು ಹೇಳಿದನು. ಆಗ ಬಿರುಗಾಳಿಯು ಬೀಸಿತು. ಆ ಬಿರುಗಾಳಿಯು ಬೆಟ್ಟಗಳನ್ನು ಸೀಳಿಹಾಕಿತು; ಅದು ದೊಡ್ಡ ಬಂಡೆಗಳನ್ನು ಯೆಹೋವನ ಎದುರಿನಲ್ಲಿ ಒಡೆದುಹಾಕಿತು. ಆದರೆ ಆ ಗಾಳಿಯೇ ಯೆಹೋವನಲ್ಲ! ಆ ಬಿರುಗಾಳಿಯ ನಂತರ ಅಲ್ಲಿ ಒಂದು ಭೂಕಂಪವುಂಟಾಯಿತು. ಆದರೆ ಆ ಭೂಕಂಪವು ಯೆಹೋವನಲ್ಲ. 12 ಭೂಕಂಪದ ನಂತರ ಅಲ್ಲಿ ಬೆಂಕಿ ಉಂಟಾಯಿತು. ಆದರೆ ಆ ಬೆಂಕಿಯೂ ಯೆಹೋವನಲ್ಲ. ಆ ಬೆಂಕಿಯ ನಂತರ ಸದ್ದಿಲ್ಲದ ಮೃದುವಾದ ಧ್ವನಿ ಉಂಟಾಯಿತು.
13 ಎಲೀಯನಿಗೆ ಆ ಧ್ವನಿಯು ಕೇಳಿಸಿದಾಗ, ಅವನು ತನ್ನ ಮೇಲಂಗಿಯಿಂದ ಮುಖವನ್ನು ಮುಚ್ಚಿಕೊಂಡನು. ನಂತರ ಅವನು ಗುಹೆಯ ಹತ್ತಿರಕ್ಕೆ ಹೋಗಿ, ಅದರ ದ್ವಾರದಲ್ಲಿ ನಿಂತುಕೊಂಡನು. ಆಗ ಆ ಧ್ವನಿಯು, “ಎಲೀಯನೇ, ನೀನು ಏಕೆ ಇಲ್ಲಿರುವೆ?” ಎಂದು ಅವನನ್ನು ಕೇಳಿತು.
14 ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.
15 ಯೆಹೋವನು, “ನೀನು ಬಂದ ದಾರಿಯಿಂದ ಹಿಂತಿರುಗಿ ದಮಸ್ಕದ ಅರಣ್ಯಕ್ಕೆ ಹೋಗು. ಅಲ್ಲಿಂದ ದಮಸ್ಕಕ್ಕೆ ಹೋಗಿ, ಹಜಾಯೇಲನನ್ನು ಅರಾಮ್ಯರ ರಾಜನನ್ನಾಗಿ ಅಭಿಷೇಕಿಸು. 16 ನಂತರ ನಿಂಷಿಯ ಮಗನಾದ ಯೇಹುವನ್ನು ಇಸ್ರೇಲಿನ ರಾಜನನ್ನಾಗಿ ಅಭಿಷೇಕಿಸು. ಅಬೇಲ್ ಮೆಹೋಲದ ಶಾಫಾಟನ ಮಗನಾದ ಎಲೀಷನನ್ನು ನಿನ್ನ ಜಾಗದಲ್ಲಿ ಪ್ರವಾದಿಯನ್ನಾಗಿ ಅಭಿಷೇಕಿಸು. 17 ಹಜಾಯೇಲನು ಕೆಟ್ಟವರಾದ ಅನೇಕ ಜನರನ್ನು ಕೊಲ್ಲುತ್ತಾನೆ. ಹಜಾಯೇಲನ ಖಡ್ಗದಿಂದ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುತ್ತಾನೆ. ಯೇಹುವಿನಿಂದ ತಪ್ಪಿಸಿಕೊಂಡ ಆ ಕೆಟ್ಟ ಜನರನ್ನೆಲ್ಲ ಎಲೀಷನು ಕೊಲ್ಲುತ್ತಾನೆ. 18 ಎಲೀಯನೇ, ಇಸ್ರೇಲಿನಲ್ಲಿ ನಂಬಿಗಸ್ಥನಾದ ವ್ಯಕ್ತಿಯು ನೀನೊಬ್ಬನು ಮಾತ್ರ ಅಲ್ಲ. ಆ ದುಷ್ಟಜನರು ಅನೇಕ ಜನರನ್ನು ಕೊಲ್ಲುತ್ತಾರೆ. ಆದರೂ, ಅದಾದ ನಂತರ, ಬಾಳನಿಗೆ ಎಂದೆಂದೂ ಬಾಗಿ ನಮಸ್ಕರಿಸದಿರುವ ಏಳು ಸಾವಿರ ಜನರು ಇನ್ನೂ ಇಸ್ರೇಲಿನಲ್ಲಿ ವಾಸಮಾಡುತ್ತಿದ್ದಾರೆ! ಬಾಳನ ವಿಗ್ರಹಕ್ಕೆ ಎಂದೂ ಮುದ್ದಿಡದ ಆ ಏಳು ಸಾವಿರ ಜನರನ್ನು ನಾನು ಅಲ್ಲಿ ಉಳಿಸುವೆನು.”
8 ದೇವರಾದ ಯೆಹೋವನು ಹೇಳಿದ್ದು ನನಗೆ ಕೇಳಿಸಿತು.
ತನ್ನ ಜನರಿಗೂ ತನ್ನ ಸದ್ಭಕ್ತರಿಗೂ ಶಾಂತಿ ಇರುವುದೆಂದು ಆತನು ಹೇಳಿದನು.
ಆದ್ದರಿಂದ ಅವರು ತಮ್ಮ ಮೂಢಜೀವನಕ್ಕೆ ಹೋಗಕೂಡದು.
9 ದೇವರು ತನ್ನ ಭಕ್ತರನ್ನು ರಕ್ಷಿಸುವ ಕಾಲ ಸಮೀಪವಾಗಿದೆ.
ನಾವು ಸ್ವದೇಶದಲ್ಲಿ ಗೌರವದೊಂದಿಗೆ ನೆಲೆಸುವ ಸಮಯ ಹತ್ತಿರವಾಗಿದೆ.
10 ದೇವರ ನಿಜಪ್ರೀತಿಯು ಆತನ ಭಕ್ತರನ್ನು ಸಂಧಿಸುತ್ತದೆ.
ನೀತಿಯೂ ಸಮಾಧಾನವೂ ಅವರಿಗೆ ಮುದ್ದಿಡುತ್ತವೆ.
11 ನಿವಾಸಿಗಳೆಲ್ಲರೂ ದೇವರಿಗೆ ನಂಬಿಗಸ್ತರಾಗಿರುವರು.
ಪರಲೋಕದ ದೇವರು ಅವರಿಗೆ ಒಳ್ಳೆಯವನಾಗಿರುವನು.[a]
12 ಯೆಹೋವನು ನಮಗೆ ಒಳ್ಳೆಯವುಗಳನ್ನು ಹೇರಳವಾಗಿ ಒದಗಿಸುವನು.
ಭೂಮಿಯು ಒಳ್ಳೆಯ ಬೆಳೆಗಳನ್ನು ಬೆಳೆಯಿಸುವುದು.
13 ನೀತಿಯು ಆತನ ಮುಂದೆ ಹೋಗುತ್ತಾ
ಆತನಿಗಾಗಿ ಹಾದಿಯನ್ನು ಸಿದ್ಧಪಡಿಸುವುದು.
5 ಧರ್ಮಶಾಸ್ತ್ರದಿಂದಾಗುವ ನೀತಿಯ ಬಗ್ಗೆ, “ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಜೀವವನ್ನು ಪಡೆದುಕೊಳ್ಳಲು ಬಯಸುವವನು, ಧರ್ಮಶಾಸ್ತವು ಹೇಳುವ ಕಾರ್ಯಗಳನ್ನು ಮಾಡಲೇಬೇಕು”(A) ಎಂದು ಮೋಶೆ ಹೇಳಿದ್ದಾನೆ. 6 ಆದರೆ ನಂಬಿಕೆಯ ಮೂಲಕ ನೀತಿನಿರ್ಣಯ ಹೊಂದುವುದರ ಬಗ್ಗೆ, “(ಕ್ರಿಸ್ತನನ್ನು ಕೆಳಕ್ಕೆ ಕರೆದುಕೊಂಡು ಬರಲು) ‘ಯಾರು ಪರಲೋಕಕ್ಕೆ ಏರಿಹೋಗಬಲ್ಲರು?’” ಎಂದಾಗಲಿ (ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರಲು.) 7 “‘ಯಾರು ಪಾತಾಳಕ್ಕೆ ಇಳಿದುಹೋಗಬಲ್ಲರು’ ಎಂದಾಗಲಿ ಹೇಳಬೇಡಿ” ಎಂದು ಪವಿತ್ರ ಗ್ರಂಥವು ಹೇಳುತ್ತದೆ.
8 ಇದಲ್ಲದೆ, “ದೇವರ ವಾಕ್ಯವು ನಿಮ್ಮ ಸಮೀಪದಲ್ಲೇ ಇದೆ. ಅದು ನಿಮ್ಮ ಬಾಯಲ್ಲಿಯೂ ನಿಮ್ಮ ಹೃದಯದಲ್ಲಿಯೂ ಇದೆ” ಎಂದು ಪವಿತ್ರ ಗ್ರಂಥವು ಹೇಳುತ್ತದೆ. ನಾವು ಜನರಿಗೆ ನಂಬಿಕೆಯ ಕುರಿತಾಗಿ ಸಾರುವ ವಾಕ್ಯವೇ ಅದು. 9 “ಯೇಸುವೇ ಪ್ರಭು”ವೆಂದು ನಿನ್ನ ಬಾಯಿಯ ಮೂಲಕ ಹೇಳುವುದಾದರೆ ಮತ್ತು ಯೇಸುವನ್ನು ಸತ್ತವರೊಳಗಿಂದ ಜೀವಂತನಾಗಿ ಎಬ್ಬಿಸಿದವನು ದೇವರೇ ಎಂದು ನಿನ್ನ ಹೃದಯದಲ್ಲಿ ನಂಬುವುದಾದರೆ, ನೀನು ರಕ್ಷಣೆ ಹೊಂದುವೆ. 10 ಹೌದು, ನಾವು ನಮ್ಮ ಹೃದಯಗಳಲ್ಲಿ ನಂಬುವುದರ ಮೂಲಕ ನೀತಿವಂತರಾಗುತ್ತೇವೆ. “ನಂಬುತ್ತೇವೆ” ಎಂದು ಬಾಯಾರೆ ಹೇಳುವುದರ ಮೂಲಕ ರಕ್ಷಣೆ ಹೊಂದುತ್ತೇವೆ.
11 ಪವಿತ್ರ ಗ್ರಂಥವು ಹೀಗೆ ಹೇಳುತ್ತದೆ: “ಆತನಲ್ಲಿ ನಂಬಿಕೆಯಿಡುವ ಯಾವ ವ್ಯಕ್ತಿಯೂ ನಾಚಿಕೆಗೆ ಗುರಿಯಾಗುವುದೇ ಇಲ್ಲ.”(B) 12 ಏಕೆಂದರೆ ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವೂ ಇಲ್ಲ. ಎಲ್ಲರಿಗೂ ಒಬ್ಬನೇ ಪ್ರಭು. ತನ್ನಲ್ಲಿ ನಂಬಿಕೆಯಿಡುವ ಜನರೆಲ್ಲರಿಗೆ ಪ್ರಭುವು ಅನೇಕ ಆಶೀರ್ವಾದಗಳನ್ನು ಕೊಡುತ್ತಾನೆ. 13 ಹೌದು, ಪವಿತ್ರ ಗ್ರಂಥವು ಹೇಳುವಂತೆ, “ಪ್ರಭುವಿನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ರಕ್ಷಣೆ ಹೊಂದುವನು.”(C)
14 ಪ್ರಭುವಿನಲ್ಲಿ ನಂಬಿಕೆಯಿಲ್ಲದೆ ಆತನಲ್ಲಿ ಭರವಸೆವಿಡುವುದಾದರೂ ಹೇಗೆ? ಪ್ರಭುವಿನ ವಿಷಯವನ್ನು ಕೇಳದೆ ಆತನಲ್ಲಿ ನಂಬಿಕೆ ಇಡುವುದಾದರೂ ಹೇಗೆ? ಮತ್ತೊಬ್ಬನು ತಿಳಿಸದ ಹೊರತು ಪ್ರಭುವಿನ ಬಗ್ಗೆ ಕೇಳುವುದಾದರೂ ಹೇಗೆ? 15 ಬೋಧಕರನ್ನು ಕಳುಹಿಸದ ಹೊರತು ಜನರಿಗೆ ತಿಳಿಸುವುದಾದರೂ ಹೇಗೆ? ಆದ್ದರಿಂದಲೇ, “ಸುವಾರ್ತಿಕರ ಪಾದಗಳು ಸುಂದರವಾಗಿವೆ”(D) ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.
ಸರೋವರದ ಮೇಲೆ ಯೇಸುವಿನ ಕಾಲುನಡಿಗೆ
(ಮಾರ್ಕ 6:45-52; ಯೋಹಾನ 6:15-21)
22 ಬಳಿಕ ಯೇಸು ತನ್ನ ಶಿಷ್ಯರಿಗೆ, “ನಾನು ಈ ಜನರನ್ನು ಬೀಳ್ಕೊಟ್ಟು ಬರುತ್ತೇನೆ. ನೀವು ಈಗಲೇ ದೋಣಿ ಹತ್ತಿಕೊಂಡು ಸರೋವರದ ಆಚೆದಡಕ್ಕೆ ಹೋಗಿರಿ” ಎಂದು ಹೇಳಿ ಕಳುಹಿಸಿದನು. 23 ಆತನು ಜನರಿಗೆ ಶುಭವನ್ನು ಕೋರಿ ಕಳುಹಿಸಿದ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ತಾನೊಬ್ಬನೇ ಬೆಟ್ಟದ ಮೇಲಕ್ಕೆ ಹೋದನು. ಆಗಲೇ ರಾತ್ರಿಯಾಗಿತ್ತು. ಅಲ್ಲಿ ಆತನೊಬ್ಬನೇ ಇದ್ದನು. 24 ಅಷ್ಟರಲ್ಲಿ ದೋಣಿಯು ಸರೋವರದ ಮೇಲೆ ಬಹಳ ದೂರ ಹೋಗಿತ್ತು. ಎದುರುಗಾಳಿಯಿಂದ ಅಲೆಗಳ ಬಡಿತಕ್ಕೆ ಸಿಕ್ಕಿಹಾಕಿಕೊಂಡಿತ್ತು.
25 ಆ ರಾತ್ರಿಯ ಕಡೇ ಜಾವದ ಸಮಯದಲ್ಲಿ ಆತನ ಶಿಷ್ಯರು ದೋಣಿಯಲ್ಲೇ ಇದ್ದರು. ಆತನು ಸರೋವರದ ನೀರಿನ ಮೇಲೆ ನಡೆಯುತ್ತಾ ಅವರ ಬಳಿಗೆ ಬರತೊಡಗಿದನು. 26 ನೀರಿನ ಮೇಲೆ ನಡೆದುಕೊಂಡು ಬರುತ್ತಿದ್ದ ಆತನನ್ನು ಕಂಡ ಶಿಷ್ಯರು ಭೂತವೆಂದು ಭಾವಿಸಿ ಭಯದಿಂದ ಕೂಗಿಕೊಂಡರು.
27 ಕೂಡಲೇ ಯೇಸು, “ಚಿಂತಿಸಬೇಡಿ! ನಾನೇ! ಭಯಪಡಬೇಡಿ” ಎಂದು ಅವರೊಂದಿಗೆ ಮಾತಾಡಿದನು.
28 ಪೇತ್ರನು, “ಪ್ರಭುವೇ, ನಿಜವಾಗಿಯೂ ನೀನೇ ಆಗಿದ್ದರೆ, ನೀರಿನ ಮೇಲೆ ನಡೆದುಕೊಂಡು ನಿನ್ನ ಬಳಿಗೆ ಬರಲು ನನಗೆ ಆಜ್ಞಾಪಿಸು” ಎಂದನು.
29 ಯೇಸು, “ಪೇತ್ರನೇ, ಬಾ” ಅಂದನು.
ಕೂಡಲೆ ಪೇತ್ರನು ದೋಣಿಯಿಂದ ಇಳಿದು ಯೇಸುವಿನ ಬಳಿಗೆ ನೀರಿನ ಮೇಲೆ ನಡೆದನು. 30 ಆದರೆ ಅವನು ಗಾಳಿಯನ್ನು ಮತ್ತು ಅಲೆಗಳನ್ನು ನೋಡಿ ಭಯಪಟ್ಟದ್ದರಿಂದ ನೀರಿನಲ್ಲಿ ಮುಳುಗತೊಡಗಿ, “ಪ್ರಭುವೇ, ನನ್ನನ್ನು ರಕ್ಷಿಸು” ಎಂದು ಕೂಗಿಕೊಂಡನು.
31 ಯೇಸು ತನ್ನ ಕೈ ಚಾಚಿ ಪೇತ್ರನನ್ನು ಹಿಡಿದುಕೊಂಡನು. ಯೇಸು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದನು.
32 ಪೇತ್ರನು ಮತ್ತು ಯೇಸು ದೋಣಿ ಹತ್ತಿದ ಮೇಲೆ ಗಾಳಿ ಶಾಂತವಾಯಿತು. 33 ದೋಣಿಯಲ್ಲಿದ್ದ ಶಿಷ್ಯರು ಯೇಸುವನ್ನು ಆರಾಧಿಸಿ, “ನೀನು ನಿಜವಾಗಿಯೂ ದೇವರ ಮಗನು” ಎಂದು ಹೇಳಿದರು.
Kannada Holy Bible: Easy-to-Read Version. All rights reserved. © 1997 Bible League International