Revised Common Lectionary (Complementary)
ಪ್ರಾರ್ಥನೆ. ರಚನೆಗಾರ: ದಾವೀದ.
17 ಯೆಹೋವನೇ, ನ್ಯಾಯವಾದ ನನ್ನ ಪ್ರಾರ್ಥನೆಗೆ ಕಿವಿಗೊಡು.
ನನ್ನ ಮೊರೆಯನ್ನು ಆಲೈಸು, ನನ್ನ ಯಥಾರ್ಥವಾದ ಪ್ರಾರ್ಥನೆಗೆ ಕಿವಿಗೊಡು.
2 ನನ್ನ ಕುರಿತಾಗಿ ನ್ಯಾಯವಾದ ತೀರ್ಪು ನಿನ್ನಿಂದಲೇ ಬರಲಿ.
ನೀನು ಸತ್ಯವನ್ನು ನೋಡಬಲ್ಲಾತನಾಗಿರುವೆ.
3 ನೀನು ನನ್ನ ಅಂತರಾಳವನ್ನು ರಾತ್ರಿಯೆಲ್ಲಾ ಪರೀಕ್ಷಿಸಿರುವೆ.
ನೀನು ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದಾಗ
ನನ್ನಲ್ಲಿ ಯಾವ ದೋಷವೂ ಕಂಡುಬರಲಿಲ್ಲ.
ನಾನು ಯಾವ ತಪ್ಪನ್ನೂ ಮಾಡಿರಲಿಲ್ಲ.
4 ನಿನ್ನ ಆಜ್ಞೆಗಳಿಗೆ ವಿಧೇಯನಾಗಲು
ನನ್ನಿಂದಾದಷ್ಟು ಪ್ರಯತ್ನಿಸಿದ್ದೇನೆ.
5 ನಿನ್ನ ಜೀವಮಾರ್ಗದಲ್ಲೇ ಹೆಜ್ಜೆಯಿಡುತ್ತಾ ನಡೆಯುತ್ತಿದ್ದೇನೆ.
ನನ್ನ ಪಾದವು ತಪ್ಪು ದಾರಿಗೆ ಹೋಗಲಿಲ್ಲ.
6 ದೇವರೇ, ನಾನು ನಿನ್ನನ್ನು ಕರೆದಾಗಲ್ಲೆಲ್ಲಾ, ನೀನು ನನಗೆ ಉತ್ತರಿಸಿದೆ.
ಆದ್ದರಿಂದ ಈಗಲೂ ನನಗೆ ಕಿವಿಗೊಡು.
7 ದೇವರೇ, ನಿನ್ನಲ್ಲಿ ಭರವಸೆಯಿಟ್ಟಿರುವ ಭಕ್ತರಿಗೆ
ನೀನು ಸಹಾಯಮಾಡುವೆ;
ಅವರು ನಿನ್ನ ಬಲಗಡೆಯಲ್ಲಿ ಸುರಕ್ಷಿತವಾಗಿರುವರು.
ಆದ್ದರಿಂದ ನಿನ್ನ ಭಕ್ತನಾದ ನನ್ನ ಪ್ರಾರ್ಥನೆಗೂ ಕಿವಿಗೊಡು.
8 ನಿನ್ನ ಕಣ್ಣಿನ ಗುಡ್ಡೆಯಂತೆ ನನ್ನನ್ನು ಸಂರಕ್ಷಿಸು.
ನಿನ್ನ ರೆಕ್ಕೆಗಳ ಮರೆಯಲ್ಲಿ ನನ್ನನ್ನು ಅಡಗಿಸಿಕೊ.
9 ಯೆಹೋವನೇ, ನನ್ನನ್ನು ನಾಶಮಾಡಬೇಕೆಂದಿರುವ ದುಷ್ಟರಿಂದ ನನ್ನನ್ನು ತಪ್ಪಿಸಿ ಕಾಪಾಡು.
ನನಗೆ ಕೇಡುಮಾಡಬೇಕೆಂದು ಸುತ್ತುಗಟ್ಟಿರುವ ಜನರಿಂದ ನನ್ನನ್ನು ಸಂರಕ್ಷಿಸು.
10 ಆ ದುಷ್ಟರು ಗರ್ವಿಷ್ಠರಾಗಿದ್ದಾರೆ.
ಅವರು ಜಂಬಕೊಚ್ಚಿಕೊಳ್ಳುತ್ತಾರೆ.
11 ಅವರು ನನ್ನನ್ನು ಬೆನ್ನಟ್ಟಿ ಬಂದು ಸುತ್ತುಗಟ್ಟಿದ್ದಾರೆ;
ಆಕ್ರಮಣಮಾಡಲು ಸಿದ್ಧರಾಗಿದ್ದಾರೆ.[a]
12 ಅವರು ಬೇಟೆಗಾಗಿ ಕಾಯುತ್ತಿರುವ ಸಿಂಹಗಳಂತಿದ್ದಾರೆ;
ಅಡಗಿಕೊಂಡು ಹೊಂಚುಹಾಕುತ್ತಿರುವ ಪ್ರಾಯದ ಸಿಂಹಗಳಂತಿದ್ದಾರೆ.
13 ಯೆಹೋವನೇ, ಎದ್ದೇಳು,[b] ವೈರಿಗಳ ಬಳಿಗೆ ಹೋಗು.
ಅವರನ್ನು ಶರಣಾಗತರನ್ನಾಗಿ ಮಾಡು.
ನಿನ್ನ ಖಡ್ಗವನ್ನು ಪ್ರಯೋಗಿಸಿ ದುಷ್ಟರಿಂದ ನನ್ನನ್ನು ರಕ್ಷಿಸು.
14 ಯೆಹೋವನೇ, ಈ ಲೋಕಕ್ಕಾಗಿಯೇ ಜೀವಿಸುವ ಜನರಿಂದ
ನನ್ನನ್ನು ತಪ್ಪಿಸಿ ಕಾಪಾಡು.
ನಿನ್ನ ಸಹಾಯಕ್ಕಾಗಿ ಮೊರೆಯಿಡುವ ಅನೇಕರು ಕೊರತೆಯಲ್ಲಿದ್ದಾರೆ.
ಅವರಿಗೆ ಆಹಾರವನ್ನು ಹೇರಳವಾಗಿ ದಯಪಾಲಿಸು.
ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಬೇಕಾದದ್ದನ್ನೆಲ್ಲಾ ಒದಗಿಸಿಕೊಡು.
15 ನಾನು ನ್ಯಾಯಕ್ಕಾಗಿ ಪ್ರಾರ್ಥಿಸಿದ್ದರಿಂದ ನನಗೆ ನಿನ್ನ ಮುಖದ ದರ್ಶನವಾಗುವುದು.
ಎಚ್ಚೆತ್ತಾಗ ನಿನ್ನ ಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.
2 ಅವನು ಸಾಯಂಕಾಲ ತನ್ನ ಹಾಸಿಗೆಯಿಂದ ಮೇಲೆದ್ದು ಅರಮನೆಯ ಮಾಳಿಗೆಯ ಮೇಲಕ್ಕೆ ಹೋಗಿ ತಿರುಗಾಡುತ್ತಿದ್ದನು. ದಾವೀದನು ಮಾಳಿಗೆಯ ಮೇಲಿರುವಾಗ, ಒಬ್ಬ ಹೆಂಗಸು ಸ್ನಾನ ಮಾಡುತ್ತಿರುವುದನ್ನು ನೋಡಿದನು. ಅವಳು ಅತ್ಯಂತ ಸುಂದರಳಾಗಿದ್ದಳು. 3 ದಾವೀದನು ತನ್ನ ಸೇವಕರನ್ನು ಕರೆದು ಅವಳು ಯಾರೆಂದು ಕೇಳಿದನು. ಒಬ್ಬ ಸೇವಕನು, “ಅವಳು ಎಲೀಯಾಮನ ಮಗಳಾದ ಬತ್ಷೆಬೆಳು. ಹಿತ್ತಿಯನಾದ ಊರೀಯನ ಹೆಂಡತಿ” ಎಂದು ಉತ್ತರಿಸಿದನು.
4 ದಾವೀದನು ತನಗಾಗಿ ಬತ್ಷೆಬೆಳನ್ನು ಕರೆತರಲು ಸಂದೇಶಕರನ್ನು ಕಳುಹಿಸಿದನು. ಅವಳು ದಾವೀದನ ಬಳಿಗೆ ಬಂದಾಗ ಅವನು ಅವಳೊಡನೆ ಲೈಂಗಿಕ ಸಂಬಂಧವನ್ನು ಹೊಂದಿದನು. ತನ್ನ ಮಾಸಿಕ ಮುಟ್ಟು ನಿಂತಮೇಲೆ ತನ್ನನ್ನು ಶುದ್ಧಪಡಿಸಿಕೊಳ್ಳಲು ಆಕೆ ಸ್ನಾನಮಾಡಿಕೊಂಡ ಮೇಲೆ ಇದು ಸಂಭವಿಸಿತು.[a] 5 ಬಳಿಕ ಬತ್ಷೆಬೆ ಗರ್ಭಿಣಿಯಾದಳು. ಅವಳು ದಾವೀದನಿಗೆ, “ನಾನು ಗರ್ಭಿಣಿಯಾಗಿದ್ದೇನೆ” ಎಂದು ಹೇಳಿ ಕಳುಹಿಸಿದಳು.
ದಾವೀದನು ತನ್ನ ಪಾಪವನ್ನು ಮುಚ್ಚಿಡಲು ಪ್ರಯತ್ನಿಸುವನು
6 ದಾವೀದನು ಯೋವಾಬನಿಗೆ, “ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು” ಎಂಬ ಸಂದೇಶವನ್ನು ಕಳುಹಿಸಿದನು.
ಯೋವಾಬನು ಊರೀಯನನ್ನು ದಾವೀದನ ಬಳಿಗೆ ಕಳುಹಿಸಿದನು. 7 ಊರೀಯನು ದಾವೀದನ ಬಳಿಗೆ ಬಂದನು. ದಾವೀದನು ಊರೀಯನ ಜೊತೆಯಲ್ಲಿ ಮಾತನಾಡಿ, ಯೋವಾಬನು ಹೇಗಿದ್ದಾನೆ? ಸೈನಿಕರು ಹೇಗಿದ್ದಾರೆ? ಯುದ್ಧವು ಹೇಗೆ ನಡೆಯುತ್ತಿದೆ? ಎಂದು ಕೇಳಿದನು. 8 ನಂತರ ದಾವೀದನು ಊರೀಯನಿಗೆ, “ಮನೆಗೆ ಹೋಗಿ ವಿಶ್ರಾಂತಿಯನ್ನು ಪಡೆ” ಎಂದನು.
ಊರೀಯನು ರಾಜನ ಮನೆಯನ್ನು ಬಿಟ್ಟುಹೋದನು. ಊರೀಯನಿಗೆ ರಾಜನು ಕೊಡುಗೆಗಳನ್ನು ಸಹ ಕಳುಹಿಸಿದನು. 9 ಆದರೆ ಊರೀಯನು ಮನೆಗೆ ಹೋಗದೆ ಅರಮನೆಯ ಹೊರಬಾಗಿಲಿನಲ್ಲಿ ರಾಜನ ಸೇವಕರೊಂದಿಗೆ ಮಲಗಿದನು. 10 ಸೇವಕರು ದಾವೀದನಿಗೆ, “ಊರಿಯನು ಮನೆಗೆ ಹೋಗಲೇ ಇಲ್ಲ” ಎಂದು ಹೇಳಿದರು.
ಆಗ ದಾವೀದನು, “ನೀನು ದೀರ್ಘ ಪ್ರಯಾಣದಿಂದ ಬಂದಿರುವೆ. ನೀನು ಏಕೆ ಮನೆಗೆ ಹೋಗಲಿಲ್ಲ?” ಎಂದು ಊರೀಯನನ್ನು ಕೇಳಿದನು.
11 ಊರೀಯನು ದಾವೀದನಿಗೆ, “ಪವಿತ್ರ ಪೆಟ್ಟಿಗೆಯೂ ಇಸ್ರೇಲಿನ ಮತ್ತು ಯೆಹೂದದ ಸೈನಿಕರೂ ಗುಡಾರಗಳಲ್ಲಿ ನೆಲೆಸಿದ್ದಾರೆ. ನನ್ನ ಒಡೆಯನಾದ ಯೋವಾಬನು ಮತ್ತು ನನ್ನ ರಾಜನ ಸೇವಕರು ಹೊಲದಲ್ಲಿ ಪಾಳೆಯ ಮಾಡಿಕೊಂಡಿದ್ದಾರೆ. ಆದ್ದರಿಂದ ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕೂ ಪತ್ನಿಯ ಜೊತೆಯಲ್ಲಿ ಮಲಗುವುದಕ್ಕೂ ನಾನು ಮನೆಗೆ ಹೋಗುವುದು ಸರಿಯಲ್ಲ. ನಿನ್ನಾಣೆ, ನಿನ್ನ ಜೀವದಾಣೆ, ನಾನು ಇಂಥದನ್ನು ಮಾಡುವುದೇ ಇಲ್ಲ.” ಎಂದು ಹೇಳಿದನು.
12 ದಾವೀದನು ಊರೀಯನಿಗೆ, “ಈ ದಿನ ಇಲ್ಲಿಯೇ ಇರು. ನಾಳೆ ನಿನ್ನನ್ನು ಯುದ್ಧಕ್ಕೆ ಕಳುಹಿಸುತ್ತೇನೆ” ಎಂದು ಹೇಳಿದನು.
ಊರೀಯನು ಅಂದು ಜೆರುಸಲೇಮಿನಲ್ಲಿಯೇ ಉಳಿದುಕೊಂಡನು. ಅಂದರೆ ಮಾರನೆಯ ದಿನದ ಬೆಳಗಿನವರೆಗೆ ಅಲ್ಲೇ ಇದ್ದನು. 13 ಆಗ ದಾವೀದನು ತನ್ನನ್ನು ಬಂದು ಕಾಣುವಂತೆ ಊರೀಯನಿಗೆ ಹೇಳಿ ಕಳುಹಿಸಿದನು; ಊರೀಯನು ದಾವೀದನೊಂದಿಗೆ ಕುಡಿದು ಊಟ ಮಾಡಿದನು. ದಾವೀದನು ಊರೀಯನನ್ನು ಮತ್ತನನ್ನಾಗಿ ಮಾಡಿದನು. ಆದರೂ ಊರೀಯನು ಮನೆಗೆ ಹೋಗಲಿಲ್ಲ. ಅಂದು ಸಂಜೆ ರಾಜನ ಮನೆಯ ಹೊರಬಾಗಿಲಿನಲ್ಲಿ ಸೇವಕರೊಂದಿಗೆ ಮಲಗಲು ಹೋದನು.
ಊರೀಯನನ್ನು ಕೊಲ್ಲಲು ದಾವೀದನ ಉಪಾಯ
14 ಮಾರನೆಯ ದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದನು. ದಾವೀದನು ಆ ಪತ್ರವನ್ನು ಊರೀಯನ ಕೈಯಿಂದ ಕಳುಹಿಸಿಕೊಟ್ಟನು. 15 ದಾವೀದನು ಆ ಪತ್ರದಲ್ಲಿ, “ಯುದ್ಧವು ಹೆಚ್ಚು ಭೀಕರವಾಗಿ ನಡೆಯುವ ಕಡೆ ಊರೀಯನನ್ನು ಮುಂದಿನ ಸಾಲಿನಲ್ಲಿ ನಿಲ್ಲಿಸು. ಅವನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಡಿ. ಅವನು ಯುದ್ಧದಲ್ಲಿ ಕೊಲ್ಲಲ್ಪಡಲಿ” ಎಂದು ಬರೆದಿದ್ದನು.
16 ಅಮ್ಮೋನಿಯರಲ್ಲಿ ಅತ್ಯಂತ ಧೈರ್ಯಶಾಲಿಗಳು ಆ ನಗರದಲ್ಲಿ ಎಲ್ಲಿರುವರೆಂಬುದನ್ನು ಯೋವಾಬನು ಗುರುತಿಸಿದನು. ಆ ಸ್ಥಳಕ್ಕೆ ಕಳುಹಿಸಲು ಊರೀಯನನ್ನು ಆರಿಸಿಕೊಂಡನು. 17 ಯೋವಾಬನ ವಿರುದ್ಧ ಹೋರಾಡಲು ಆ ನಗರದ[b] ಜನರು ಹೊರಗೆ ಬಂದು ದಾವೀದನ ಕೆಲವು ಜನರನ್ನು ಕೊಂದರು. ಹಿತ್ತಿಯನಾದ ಊರೀಯನೂ ಅವರಲ್ಲೊಬ್ಬನಾಗಿದ್ದನು.
18 ಅನಂತರ ಯೋವಾಬನು ತನ್ನ ಸಂದೇಶಕರಲ್ಲಿ ಒಬ್ಬನನ್ನು ಕರೆದು, “ಯುದ್ಧದಲ್ಲಿ ಸಂಭವಿಸಿದ ಎಲ್ಲಾ ವಿವರಗಳನ್ನು ದಾವೀದನಿಗೆ ತಿಳಿಸು. 19 ನೀನು ಹೇಳಿ ಮುಗಿಸಿದ ಮೇಲೆ 20 ರಾಜನು ತಳಮಳಗೊಂಡು, ‘ಯೋವಾಬನ ಸೈನ್ಯವು ಯುದ್ಧಮಾಡುವುದಕ್ಕಾಗಿ ನಗರದ ಹತ್ತಿರಕ್ಕೆ ಏಕೆ ಹೋಯಿತು? ನಗರದ ಗೋಡೆಗಳ ಮೇಲಿರುವ ಜನರು, ಕೆಳಗಿರುವ ಜನರ ಮೇಲೆ ಬಾಣಗಳನ್ನು ಪ್ರಯೋಗಿಸಬಲ್ಲರೆಂಬುದು ಅವನಿಗೆ ಖಂಡಿತವಾಗಿಯೂ ತಿಳಿದಿದೆ. 21 ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಯಾರು ಕೊಂದರೆಂಬುದು ನಿಮಗೆ ಗೊತ್ತಿಲ್ಲವೇ? ಅಬೀಮೆಲೆಕನ ಮೇಲೆ ಬೀಸುವ ಕಲ್ಲನ್ನು ನಗರದ ಗೋಡೆಯ ಮೇಲಿನಿಂದ ಎಸೆದವಳು ತೇಬೇಚಿನ ಒಬ್ಬ ಹೆಂಗಸಲ್ಲವೇ? ನೀವು ಗೋಡೆಯ ಹತ್ತಿರಕ್ಕೆ ಏಕೆ ಹೋದಿರಿ?’ ಎಂದು ಹೇಳಬಹುದು. ಆಗ ನೀನು, ‘ಹಿತ್ತಿಯನಾದ ನಿನ್ನ ಸೇವಕ ಊರೀಯನು ಸಹ ಸತ್ತುಹೋದನು’ ಎಂದು ಉತ್ತರಿಸಬೇಕು” ಎಂದು ಹೇಳಿ ಕಳುಹಿಸಿದನು.
22 ಯೋವಾಬನು ತಿಳಿಸಲು ಹೇಳಿದ್ದನ್ನೆಲ್ಲವನ್ನೂ ಸಂದೇಶಕನು ದಾವೀದನಿಗೆ ತಿಳಿಸಿದನು. 23 ಸಂದೇಶಕನು ದಾವೀದನಿಗೆ, “ಅಮ್ಮೋನಿಯರು ಮೈದಾನದಲ್ಲಿ ನಮ್ಮ ಮೇಲೆ ಆಕ್ರಮಣ ಮಾಡಿದರು. ಆದರೆ ನಾವು ಅವರೊಡನೆ ಹೋರಾಡಿ ನಗರದ ಬಾಗಿಲಿನವರೆಗೂ ಅಟ್ಟಿಸಿಕೊಂಡು ಹೋದೆವು. 24 ನಗರದ ಗೋಡೆಯ ಮೇಲಿದ್ದ ಜನರು ನಿಮ್ಮ ಸೈನಿಕರ ಮೇಲೆ ಬಾಣಗಳನ್ನು ಎಸೆದರು. ನಿಮ್ಮ ಸೈನಿಕರಲ್ಲಿ ಕೆಲವರನ್ನು ಕೊಂದರು. ಹಿತ್ತಿಯನಾದ ನಿನ್ನ ಸೈನಿಕ ಊರೀಯನೂ ಸಹ ಸತ್ತುಹೋದನು” ಎಂದು ಹೇಳಿದನು.
25 ದಾವೀದನು ಸಂದೇಶಕನಿಗೆ, “ನೀನು ಹೋಗಿ ಯೋವಾಬನಿಗೆ: ‘ಇದರಿಂದ ನೀನು ತಳಮಳಗೊಳ್ಳಬೇಡ. ಒಂದೇ ಖಡ್ಗವು ಈ ಹೊತ್ತು ಒಬ್ಬನನ್ನು ಕೊಂದರೆ, ಇನ್ನೊಂದು ದಿನ ಇನ್ನೊಬ್ಬನನ್ನು ಕೊಲ್ಲುವುದು. ರಬ್ಬ ನಗರದ ಮೇಲೆ ಧೈರ್ಯವಾಗಿ ಆಕ್ರಮಣಮಾಡು. ಆಗ ನೀನು ನಗರವನ್ನು ಗೆಲ್ಲುವೆ!’ ಈ ಮಾತುಗಳಿಂದ ಯೋವಾಬನನ್ನು ಹುರಿದುಂಬಿಸು” ಎಂಬುದಾಗಿ ಹೇಳಿದನು.
ದಾವೀದನು ಬತ್ಷೆಬೆಳನ್ನು ಮದುವೆಯಾದನು
26 ತನ್ನ ಗಂಡನಾದ ಊರೀಯನು ಸತ್ತನೆಂಬ ಸುದ್ದಿಯು ಬತ್ಷೆಬೆಳಿಗೆ ತಿಳಿಯಿತು. ಆಗ ಅವಳು ತನ್ನ ಗಂಡನಿಗಾಗಿ ಗೋಳಾಡಿದಳು.
ಸಾರ್ದಿಸ್ನಲ್ಲಿರುವ ಸಭೆಗೆ ಯೇಸುವಿನ ಪತ್ರ
3 “ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ:
“ಏಳು ಆತ್ಮಗಳು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವಾತನು ಹೇಳುವುದೇನೆಂದರೆ: ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಜೀವವುಳ್ಳವನೆಂದು ಜನರು ಹೇಳುತ್ತಾರೆ. ಆದರೆ ನೀನು ನಿಜವಾಗಿಯೂ ಸತ್ತು ಹೋಗಿರುವೆ. 2 ಎದ್ದೇಳು! ಸಾಯುವ ಸ್ಥಿತಿಯಲ್ಲಿರುವಂಥವುಗಳನ್ನು ಬಲಪಡಿಸು. ನೀನು ಮಾಡಿರುವ ಕಾರ್ಯಗಳನ್ನು ನನ್ನ ದೇವರ ದೃಷ್ಟಿಯಲ್ಲಿ ನಿಷ್ಕಳಂಕವಾಗಿರುವುದನ್ನು ನಾನು ಕಾಣಲಿಲ್ಲ. 3 ಆದ್ದರಿಂದ ನೀನು ಸ್ವೀಕರಿಸಿಕೊಂಡ ಮತ್ತು ಕೇಳಿದ ಉಪದೇಶವನ್ನು ಮರೆಯದೆ ಅದಕ್ಕೆ ವಿಧೇಯನಾಗಿರು. ನಿನ್ನ ಹೃದಯವನ್ನೂ ಜೀವಿತವನ್ನೂ ಪರಿವರ್ತಿಸಿಕೊ! ಎಚ್ಚರಗೊಳ್ಳು! ಇಲ್ಲವಾದರೆ, ನಾನು ಕಳ್ಳನಂತೆ ನಿನ್ನ ಬಳಿಗೆ ಬಂದು ಆಶ್ಚರ್ಯಗೊಳಿಸುತ್ತೇನೆ. ನಾನು ಯಾವಾಗ ಬರುತ್ತೇನೆ ಎಂಬುದು ನಿನಗೆ ಗೊತ್ತಿರುವುದಿಲ್ಲ.
4 “ನಿಮ್ಮ ಸಭೆಗೆ ಸೇರಿದ ಸಾರ್ದಿಸಿನ ಕೆಲವರು ಇನ್ನೂ ಪರಿಶುದ್ಧರಾಗಿದ್ದಾರೆ. ಅವರು ತಮ್ಮ ಬಟ್ಟೆಗಳನ್ನು ಕೊಳಕು ಮಾಡಿಕೊಂಡಿಲ್ಲ. ಅವರು ನನ್ನೊಂದಿಗೆ ನಡೆಯುವರು. ಅವರು ಯೋಗ್ಯರಾಗಿರುವುದರಿಂದ ಬಿಳಿವಸ್ತ್ರಗಳನ್ನು ಧರಿಸುತ್ತಾರೆ. 5 ಜಯಗಳಿಸುವ ಪ್ರತಿಯೊಬ್ಬನೂ ಈ ಜನರಂತೆ ಬಿಳಿಯ ವಸ್ತ್ರಗಳನ್ನು ಧರಿಸುತ್ತಾನೆ. ಆ ವ್ಯಕ್ತಿಯ ಹೆಸರನ್ನು ನಾನು ಜೀವಭಾದ್ಯರ ಪುಸ್ತಕದಿಂದ ತೆಗೆದು ಹಾಕುವುದಿಲ್ಲ. ಅವನು ನನಗೆ ಸೇರಿದವನೆಂದು ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಹೇಳುತ್ತೇನೆ. 6 ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು.
Kannada Holy Bible: Easy-to-Read Version. All rights reserved. © 1997 Bible League International