Revised Common Lectionary (Complementary)
ರಚನೆಗಾರ: ದಾವೀದ.
144 ಯೆಹೋವನು ನನಗೆ ಬಂಡೆಯಾಗಿದ್ದಾನೆ.
ಆತನಿಗೆ ಸ್ತೋತ್ರವಾಗಲಿ.
ಆತನು ನನ್ನನ್ನು ಯುದ್ಧಕ್ಕೂ
ಕದನಕ್ಕೂ ತರಬೇತು ಮಾಡುವನು.
2 ಆತನು ನನ್ನನ್ನು ಪ್ರೀತಿಸುವ ದೇವರೂ
ನನ್ನ ಕೋಟೆಯೂ ನನ್ನ ದುರ್ಗವೂ ನನ್ನ ರಕ್ಷಕನೂ ನನ್ನ ಗುರಾಣಿಯೂ ನನ್ನ ಆಶ್ರಯವೂ ಆಗಿದ್ದಾನೆ.
3 ಯೆಹೋವನೇ, ಮನುಷ್ಯರು ಎಷ್ಟು ಮಾತ್ರದವರು?
ನೀನು ಅವರನ್ನು ಯಾಕೆ ನೆನಸಬೇಕು?
ಮನುಷ್ಯರು ಎಷ್ಟರವರು?
ನೀನು ಅವರನ್ನು ಯಾಕೆ ಗಮನಿಸಬೇಕು?
4 ಮನುಷ್ಯರು ಕೇವಲ ಉಸಿರೇ.
ಅವರ ಜೀವಮಾನವು ಬೇಗನೆ ಗತಿಸಿಹೋಗುವ ನೆರಳಿನಂತಿದೆ.
5 ಯೆಹೋವನೇ, ಆಕಾಶವನ್ನು ಹರಿದು ಇಳಿದು ಬಾ.
ಪರ್ವತಗಳನ್ನು ಮುಟ್ಟು.
ಆಗ ಅವುಗಳಿಂದ ಹೊಗೆಯು ಮೇಲೇರುವುದು.
6 ಸಿಡಿಲಿನಿಂದ ಶತ್ರುಗಳನ್ನು ಚದರಿಸಿಬಿಡು.
ನಿನ್ನ ಬಾಣಗಳಿಂದ ಅವರನ್ನು ಓಡಿಸಿಬಿಡು.
7 ಮೇಲಿನ ಲೋಕದಿಂದ ಕೈಚಾಚಿ ಮಹಾ ಜಲರಾಶಿಯಂತಿರುವ
ನನ್ನ ಶತ್ರುಗಳಿಂದ ನನ್ನನ್ನು ಎಳೆದುಕೋ.
ಅನ್ಯಜನರ ಕೈಯಿಂದ ನನ್ನನ್ನು ಬಿಡಿಸು.
8 ಅವರ ಬಾಯಿ ಸುಳ್ಳುಗಳಿಂದ ತುಂಬಿವೆ.
ಅವರ ಬಲಗೈ ಮೋಸದಿಂದ ತುಂಬಿವೆ.
9 ಯೆಹೋವನೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು.
ನಾನು ಹತ್ತು ತಂತಿಗಳ ಹಾರ್ಪ್ವಾದ್ಯವನ್ನು ನುಡಿಸುತ್ತಾ ನಿನ್ನನ್ನು ಸ್ತುತಿಸುವೆನು.
10 ರಾಜರುಗಳಿಗೆ ಸಹಾಯಮಾಡಿ ಯುದ್ಧಗಳಲ್ಲಿ ಗೆಲ್ಲಿಸುವವನೂ ನೀನೇ.
ನಿನ್ನ ಸೇವಕನಾದ ದಾವೀದನನ್ನು ಅವನ ಶತ್ರುಗಳ ಖಡ್ಗಗಳಿಂದ ರಕ್ಷಿಸಿದವನೂ ನೀನೇ.
11 ಈ ಅನ್ಯಜನರಿಂದ ನನ್ನನ್ನು ರಕ್ಷಿಸು.
ಅವರ ಬಾಯಿಗಳು ಸುಳ್ಳುಗಳಿಂದ ತುಂಬಿವೆ.
ಅವರ ಬಲಗೈಗಳು ಮೋಸದಿಂದ ತುಂಬಿವೆ.
12 ನಮ್ಮ ಯುವಕರು ಮಹಾವೃಕ್ಷಗಳಂತಿದ್ದಾರೆ.
ನಮ್ಮ ಯುವತಿಯರು ಅರಮನೆಯಲ್ಲಿ ಸುಂದರವಾಗಿ ಕೆತ್ತಲ್ಪಟ್ಟ ಕಂಬಗಳಂತಿರುವರು.
13 ನಮ್ಮ ಕಣಜಗಳು ಸಕಲ ಬಗೆಯ ದವಸಧಾನ್ಯಗಳಿಂದ ತುಂಬಿರುತ್ತವೆ.
ನಮ್ಮ ಹೊಲಗಳಲ್ಲಿರುವ ಕುರಿಗಳು ಸಾವಿರಾರು ಮರಿಗಳನ್ನು ಈಯುತ್ತವೆ.
14 ನಮ್ಮ ಸೈನಿಕರು ಸುರಕ್ಷಿತವಾಗಿದ್ದಾರೆ.
ಯಾವ ಶತ್ರುಗಳೂ ನುಗ್ಗಿಬರಲು ಪ್ರಯತ್ನಿಸುತ್ತಿಲ್ಲ.
ನಾವು ಯುದ್ಧಕ್ಕೆ ಹೋಗುವುದೂ ಇಲ್ಲ;
ನಮ್ಮ ಬೀದಿಗಳಲ್ಲಿ ಗೋಳಾಟವೂ ಇರುವುದಿಲ್ಲ.
15 ಇಂಥ ಸುಸ್ಥಿತಿಯಲ್ಲಿರುವ ಜನರೇ ಧನ್ಯರು.
ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರೇ ಭಾಗ್ಯವಂತರು.
27 ಆ ಸಮಯದಲ್ಲಿ ಯೆಹೋವನು ವಂಚನೆಯ ಸರ್ಪವಾದ ಲಿವ್ಯಾತಾನನಿಗೆ ನ್ಯಾಯತೀರಿಸುವನು.
ಯೆಹೋವನು ಕಠಿಣವೂ ಮಹತ್ವವೂ ಬಲವೂ ಆಗಿರುವ ತನ್ನ ಖಡ್ಗದಿಂದ
ಸುತ್ತಿಕೊಂಡಿರುವ ಸರ್ಪವಾದ ಲಿವ್ಯಾತಾನನನ್ನು ಕೊಲ್ಲುವನು.
ಯೆಹೋವನು ಸಮುದ್ರದಲ್ಲಿರುವ ಘಟಸರ್ಪವನ್ನು ಕೊಲ್ಲುವನು.
2 ಆ ಸಮಯದಲ್ಲಿ ಜನರು ಮನೋಹರವಾದ ದ್ರಾಕ್ಷಿತೋಟದ ವಿಷಯವಾಗಿ ಹಾಡುವರು.
3 “ಯೆಹೋವನಾದ ನಾನು ಆ ತೋಟವನ್ನು ಚೆನ್ನಾಗಿ ನೋಡಿಕೊಳ್ಳುವೆನು;
ಸರಿಯಾದ ಕಾಲದಲ್ಲಿ ತೋಟಕ್ಕೆ ನೀರು ಹೊಯ್ಯುವೆನು.
ಹಗಲಿರುಳು ತೋಟವನ್ನು ಕಾಯುವೆನು.
ಆ ತೋಟವನ್ನು ಯಾರೂ ಹಾಳುಮಾಡುವದಿಲ್ಲ.
4 ನಾನು ಕೋಪಗೊಂಡಿಲ್ಲ.
ಆದರೆ ಯುದ್ಧ ನಡೆಯುತ್ತಿರುವಾಗ ಯಾರಾದರೂ ಮುಳ್ಳುಬೇಲಿಯನ್ನು ಹಾಕಿದರೆ,
ನಾನು ಮುನ್ನುಗ್ಗಿ ಅದನ್ನು ಸುಟ್ಟುಹಾಕುವೆನು.
5 ಆದರೆ ಯಾವನಾದರೂ ಆಶ್ರಯಕ್ಕಾಗಿ ನನ್ನ ಬಳಿಗೆ ಬಂದು ನನ್ನೊಡನೆ ಸಮಾಧಾನ ಮಾಡಿಕೊಳ್ಳುವುದಾದರೆ
ಅವನು ನನ್ನ ಬಳಿಗೆ ಬಂದು ಸಮಾಧಾನದಲ್ಲಿರಲಿ.
6 ಜನರು ನನ್ನ ಬಳಿಗೆ ಬರುವರು.
ಆ ಜನರು ಮುಂದಿನ ಕಾಲದಲ್ಲಿ ಯಾಕೋಬನನ್ನು ಆಳವಾದ ಬೇರುಳ್ಳ ಗಿಡದಂತೆ ಬಲಶಾಲಿಯನ್ನಾಗಿ ಮಾಡುವರು.
ಬೆಳೆದು ಹೂಬಿಡುವ ಗಿಡದಂತೆ ಅವರು ಇಸ್ರೇಲಿಗೆ ಮಾಡುವರು.
ಹಣ್ಣುಗಳಂತೆ ಇಸ್ರೇಲರ ಮಕ್ಕಳು ಭೂಮಿಯ ಮೇಲೆ ತುಂಬಿಹೋಗುವರು.”
17 ಯಾವನಾದರೂ ಕ್ರಿಸ್ತನಲ್ಲಿದ್ದರೆ, ಅವನು ಹೊಸ ಸೃಷ್ಟಿಯಾಗಿದ್ದಾನೆ. ಹಳೆಯ ಸಂಗತಿಗಳೆಲ್ಲಾ ಅಳಿದು ಹೋದವು; ಪ್ರತಿಯೊಂದೂ ಹೊಸದಾಯಿತು. 18 ಇದೆಲ್ಲಾ ದೇವರಿಂದಲೇ ಆಯಿತು. ಕ್ರಿಸ್ತನ ಮೂಲಕವಾಗಿ ದೇವರು ನಮ್ಮನ್ನು ತನ್ನೊಂದಿಗೆ ಸಮಾಧಾನ ಪಡಿಸಿಕೊಂಡಿದ್ದಾನೆ. ಇದಲ್ಲದೆ ಇತರರನ್ನು ಈ ಸಮಾಧಾನಕ್ಕೆ ಕರೆದುಕೊಂಡು ಬರುವ ಕೆಲಸವನ್ನು ದೇವರು ನಮಗೆ ಕೊಟ್ಟಿದ್ದಾನೆ. 19 ಅಂದರೆ, ದೇವರು ಕ್ರಿಸ್ತನಲ್ಲಿ ಇಡೀ ಜಗತ್ತನ್ನೇ ತನ್ನೊಂದಿಗೆ ಸಮಾಧಾನಪಡಿಸಿಕೊಳ್ಳುತ್ತಿದ್ದನು. ದೇವರು ಕ್ರಿಸ್ತನಲ್ಲಿ ಜನರ ಅಪರಾಧಗಳನ್ನು ಪರಿಗಣಿಸುವುದಿಲ್ಲ. ಈ ಸಮಾಧಾನದ ಸಂದೇಶವನ್ನು ಜನರಿಗೆ ತಿಳಿಸುವ ಕೆಲಸವನ್ನು ದೇವರು ನಮಗೆ ಕೊಟ್ಟಿದ್ದಾನೆ. 20 ಆದ್ದರಿಂದ ಕ್ರಿಸ್ತನ ಪರವಾಗಿ ಮಾತಾಡಲು ನಮ್ಮನ್ನು ಕಳುಹಿಸಲಾಗಿದೆ. ಇದು, ದೇವರು ನಮ್ಮ ಮೂಲಕವಾಗಿ ಜನರನ್ನು ಕರೆಯುವಂತಿದೆ. ದೇವರೊಂದಿಗೆ ಸಮಾಧಾನವಾಗಿರಿ ಎಂದು ನಾವು ನಿಮ್ಮನ್ನು ಬೇಡಿಕೊಳ್ಳುವಾಗ ಕ್ರಿಸ್ತನ ಪರವಾಗಿ ಮಾತಾಡುವವರಾಗಿದ್ದೇವೆ. 21 ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.
Kannada Holy Bible: Easy-to-Read Version. All rights reserved. © 1997 Bible League International