Print Page Options
Previous Prev Day Next DayNext

Revised Common Lectionary (Complementary)

Daily Bible readings that follow the church liturgical year, with thematically matched Old and New Testament readings.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 34

ದಾವೀದನು ಹುಚ್ಚನಂತೆ ವರ್ತಿಸಿ, ಅಬೀಮೆಲೆಕನಿಂದ ಹೊರಡಿಸಲ್ಪಟ್ಟಾಗ ರಚಿಸಲ್ಪಟ್ಟಿತು. ರಚನೆಗಾರ: ದಾವೀದ.

[a]34 ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು.
    ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿರುವುದು.
ದೀನರೇ, ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದನ್ನು
    ಕೇಳಿ ಸಂತೋಷಪಡಿರಿ.
ನನ್ನೊಂದಿಗೆ ಯೆಹೋವನನ್ನು ಸ್ತುತಿಸಿರಿ.
    ನಾವು ಒಟ್ಟಾಗಿ ಆತನ ಹೆಸರನ್ನು ಸನ್ಮಾನಿಸೋಣ.
ನಾನು ಯೆಹೋವನ ಸನ್ನಿಧಿಯಲ್ಲಿ ಮೊರೆಯಿಟ್ಟಾಗ ಆತನು ನನಗೆ ಸಹಾಯಮಾಡಿದನು.
    ನನ್ನನ್ನು ಎಲ್ಲಾ ಭೀತಿಗಳಿಂದ ಬಿಡಿಸಿದನು.
ಆತನನ್ನೇ ದೃಷ್ಟಿಸುವವರು ಸಹಾಯವನ್ನು ಹೊಂದಿಕೊಳ್ಳುವರು.[b]
    ಅವರಿಗೆ ಆಶಾಭಂಗವಾಗದು.
ಕಷ್ಟದಲ್ಲಿದ್ದ ಈ ಬಡಮನುಷ್ಯನು ಮೊರೆಯಿಡಲು
    ಯೆಹೋವನು ಕೇಳಿ ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದನು.
ಯೆಹೋವನ ಭಕ್ತರ ಸುತ್ತಲೂ ಆತನ ದೂತನು
    ದಂಡಿಳಿಸಿ ಕಾವಲಾಗಿದ್ದು ಕಾಪಾಡುವನು.
ಯೆಹೋವನು ಎಷ್ಟು ಒಳ್ಳೆಯವನೆಂಬುದನ್ನು ಅನುಭವದಿಂದಲೇ ತಿಳಿದುಕೊಳ್ಳಿರಿ.
    ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಭಾಗ್ಯವಂತರು.
ಯೆಹೋವನ ಜನರೇ, ಆತನನ್ನು ಆರಾಧಿಸಿರಿ.
    ಆತನ ಭಕ್ತರಿಗೆ ಬೇರೆ ಯಾವ ಆಶ್ರಯಸ್ಥಾನವೂ ಇಲ್ಲ.
10 ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು.
    ಆದರೆ ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರು ಸುವರಗಳನ್ನು ಹೊಂದಿಕೊಳ್ಳುವರು.
11 ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ;
    ಯೆಹೋವನಲ್ಲಿ ನಿಮಗಿರಬೇಕಾದ ಭಯಭಕ್ತಿಯನ್ನು ಕಲಿಸಿಕೊಡುವೆನು.
12 ದೀರ್ಘಾಯುಷ್ಯವು ಬೇಕೋ?
    ಬಹುಕಾಲ ಸುಖವನ್ನು ಅನುಭವಿಸಬೇಕೋ?
13 ಹಾಗಾದರೆ ಕೆಟ್ಟದ್ದನ್ನು ಮಾತಾಡದಂತೆ ನಾಲಿಗೆಯನ್ನು ಕಾದುಕೊಳ್ಳಿರಿ.
    ಸುಳ್ಳಾಡದಂತೆ ತುಟಿಗಳನ್ನು ಇಟ್ಟುಕೊಳ್ಳಿರಿ.
14 ಕೆಟ್ಟದ್ದನ್ನು ಬಿಟ್ಟು ಒಳ್ಳೆಯವುಗಳನ್ನು ಮಾಡಿರಿ.
    ಸಮಾಧಾನವನ್ನು ಬಯಸಿ ಅದನ್ನು ಪಡೆದುಕೊಳ್ಳಲು ಪ್ರಯತ್ನಿಸಿರಿ.
15 ಯೆಹೋವನು ನೀತಿವಂತರನ್ನು ಕಾಪಾಡುವನು.
    ಆತನು ಅವರ ಪ್ರಾರ್ಥನೆಗಳಿಗೆ ಕಿವಿಗೊಡುವನು.
16 ಕೆಡುಕರಿಗಾದರೋ ಯೆಹೋವನು ವಿರೋಧವಾಗಿರುವನು.
    ಆತನು ಅವರನ್ನು ಸಂಪೂರ್ಣವಾಗಿ ನಾಶಮಾಡುವನು.

17 ಯೆಹೋವನಿಗೆ ಪ್ರಾರ್ಥಿಸಿರಿ, ಆತನು ನಿಮಗೆ ಕಿವಿಗೊಡುವನು;
    ನಿಮ್ಮನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸುವನು.
18 ಮನಗುಂದಿದವರಿಗೆ ಯೆಹೋವನು ಸಮೀಪವಾಗಿದ್ದಾನೆ;
    ಕುಗ್ಗಿಹೋದ ಅವರನ್ನು ಆತನು ರಕ್ಷಿಸುವನು.
19 ನೀತಿವಂತರಿಗೆ ಅನೇಕ ಕಷ್ಟಗಳು ಬಂದರೂ
    ಯೆಹೋವನು ಅವೆಲ್ಲವುಗಳಿಂದ ಬಿಡಿಸುವನು.
20 ಆತನು ಅವರ ಎಲುಬುಗಳನ್ನೆಲ್ಲ ಕಾಪಾಡುವನು.
    ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ.
21 ದುಷ್ಟರಾದರೋ ಆಪತ್ತುಗಳಿಂದ ಸಾಯುವರು.
    ನೀತಿವಂತರ ವೈರಿಗಳು ನಾಶವಾಗುವರು.
22 ಯೆಹೋವನು ತನ್ನ ಸೇವಕರ ಪ್ರಾಣವನ್ನು ರಕ್ಷಿಸುವನು.
    ಆತನನ್ನು ಆಶ್ರಯಿಸಿಕೊಂಡಿರುವವರಲ್ಲಿ ಒಬ್ಬರಾದರೂ ನಾಶವಾಗುವುದಿಲ್ಲ.

ಆಮೋಸ 9:5-15

ಶಿಕ್ಷೆಯು ಜನರನ್ನು ನಾಶಮಾಡುವದು

ನನ್ನ ಒಡೆಯನಾದ ಸರ್ವಶಕ್ತನಾದ ಯೆಹೋವನು ಭೂಮಿಯನ್ನು ಸ್ಪರ್ಶಿಸುವನು.
    ಆಗ ಅದು ಕರಗಿಹೋಗುವುದು.
    ದೇಶದಲ್ಲಿ ವಾಸಿಸುವ ಜನರೆಲ್ಲಾ ಸತ್ತುಹೋದವರಿಗಾಗಿ ಗೋಳಾಡುವರು.
ಈಜಿಪ್ಟಿನ ನೈಲ್ ನದಿಯಂತೆ
    ದೇಶದಲ್ಲಿ ಏರಿಳಿತ ಉಂಟಾಗುವುದು.
ಯೆಹೋವನು ಆಕಾಶದ ಮೇಲೆ ತನಗಾಗಿ ಮೇಲುಪ್ಪರಿಗೆಗಳನ್ನು ಕಟ್ಟಿದನು.
    ಭೂಮಿಯ ಮೇಲೆ ಆಕಾಶವನ್ನು ಹರಡಿದನು.
ಸಮುದ್ರದ ನೀರನ್ನು ಕರೆದು ಭೂಮಿಯ ಮೇಲೆ
    ಮಳೆಗೆರೆಯುವಂತೆ ಮಾಡುವನು.
    ಆತನ ಹೆಸರು ಯೆಹೋವ.

ಇಸ್ರೇಲಿನ ನಾಶನದ ವಾಗ್ದಾನ

ಯೆಹೋವನು ಹೀಗೆನ್ನುತ್ತಾನೆ:

“ಇಸ್ರೇಲೇ, ನೀನು ನನಗೆ ಇಥಿಯೋಪ್ಯದವರಂತಿರುವೆ.
    ಇಸ್ರೇಲನ್ನು ಈಜಿಪ್ಟ್ ದೇಶದಿಂದ ನಾನು ಹೊರತಂದೆನು.
    ಕಪ್ತೋರಿನಿಂದ ಫಿಲಿಷ್ಟಿಯರನ್ನು ಹೊರತಂದೆನು
    ಮತ್ತು ಕೀರ್‌ನಿಂದ ಅರಾಮ್ಯರನ್ನು ತಂದೆನು.”

ಪಾಪದಿಂದ ತುಂಬಿದ ಇಸ್ರೇಲ್ ದೇಶವನ್ನು ಯೆಹೋವನು ನೋಡುತ್ತಿದ್ದಾನೆ.
ಆತನು ಹೇಳಿದ್ದೇನೆಂದರೆ,
“ನಾನು ಇಸ್ರೇಲರನ್ನು ಈ ಭೂಮುಖದಿಂದ ಅಳಿಸಿಬಿಡುವೆನು.
    ಆದರೆ ಯಾಕೋಬನ ಸಂತತಿಯವರನ್ನು ಸಂಪೂರ್ಣವಾಗಿ ನಾಶಮಾಡುವುದಿಲ್ಲ.
ಇಸ್ರೇಲನ್ನು ನಾಶನ ಮಾಡುವದಕ್ಕಾಗಿ ಆಜ್ಞಾಪಿಸುವೆನು.
    ಇಸ್ರೇಲರನ್ನು ನಾನು ಪರದೇಶಗಳಲ್ಲಿ, ಚದರಿಸಿಬಿಡುವೆನು.
ಒಬ್ಬನು ಜಾಳಿಗೆಯಲ್ಲಿ ಹಿಟ್ಟನ್ನು ಜಾಳಿಸುವಂತೆ ಇರುವುದು.
ಒಳ್ಳೆಯ ಹಿಟ್ಟು ಜಾಳಿಗೆಯ ರಂಧ್ರದ ಮೂಲಕ ಕೆಳಗೆ ಬಿದ್ದರೆ,
    ಹಿಟ್ಟಿನ ಗಂಟುಗಳು ಜಾಳಿಗೆಯ ಮೇಲೆ ಸಿಕ್ಕಿಕೊಳ್ಳುವವು.
    ಯಾಕೋಬನ ಕುಟುಂಬಕ್ಕೆ ಇದೇ ರೀತಿಯಾಗುವುದು.

10 “ನನ್ನ ಜನರಲ್ಲಿ ಪಾಪಿಗಳು ಹೇಳುತ್ತಾರೆ:
    ‘ನಮಗೆ ಯಾವ ಕೇಡೂ ಸಂಭವಿಸುವುದಿಲ್ಲ.’
ಆದರೆ ಅವರೆಲ್ಲಾ ಕತ್ತಿಯಿಂದ ಸಾಯುವರು.”

ರಾಜ್ಯವು ತಿರುಗಿ ಸ್ಥಾಪಿಸಲ್ಪಡುವದೆಂದು ದೇವರ ವಾಗ್ದಾನ

11 “ದಾವೀದನ ಗುಡಾರವು ಕುಸಿದುಬಿದ್ದಿದೆ.
    ಆದರೆ ಆ ದಿವಸಗಳಲ್ಲಿ ತಿರುಗಿ ಅದನ್ನು ಮೇಲಕ್ಕೆತ್ತುವೆನು.
ಗೋಡೆಯಲ್ಲಿರುವ ರಂಧ್ರಗಳನ್ನು ನಾನು ಸರಿಪಡಿಸುವೆನು.
    ಬಿದ್ದುಹೋದ ಕಟ್ಟಡಗಳನ್ನು ತಿರುಗಿ ಕಟ್ಟುವೆನು.
    ಮುಂಚೆ ಹೇಗಿತ್ತೋ ಹಾಗೆಯೇ ಇರುವದು.
12 ಆಗ ಎದೋಮಿನಲ್ಲಿ ಉಳಿದವರು
    ಮತ್ತು ನನ್ನ ಹೆಸರಿನಿಂದ ಕರೆಯಲ್ಪಟ್ಟ ಜನರು ಸಹಾಯಕ್ಕಾಗಿ ಯೆಹೋವನನ್ನು ನೋಡುವರು.”
ಇದು ಯೆಹೋವನ ನುಡಿ.
    ಆತನು ಅವುಗಳನ್ನು ನೆರವೇರಿಸುವನು.
13 ಯೆಹೋವನು ಹೇಳುವುದೇನೆಂದರೆ, “ಒಂದು ಸಮಯವು ಬರುವುದು,
ಆಗ ಉಳುವವನು ಕೊಯ್ಯುವವನನ್ನೇ
    ಮೀರಿಸಿ ಮುಂದೆ ಹೋಗುವನು.
ದ್ರಾಕ್ಷಿನೆಡುವವನು ದ್ರಾಕ್ಷಿಯನ್ನು ಕೊಯ್ಯುವನನ್ನೇ
    ಮೀರಿಸಿ ಮುಂದೆ ಹೋಗುವನು.
ಬೆಟ್ಟಗಳಿಂದಲೂ ಪರ್ವತಗಳಿಂದಲೂ
    ಸಿಹಿ ದ್ರಾಕ್ಷಾರಸವು ಹರಿದುಬರುವುದು.
14 ಸೆರೆಯಿಂದ ಬಿಡಿಸಿ ನನ್ನ ಜನರಾದ ಇಸ್ರೇಲನ್ನು
    ಹಿಂದಕ್ಕೆ ಕರೆತರುವೆನು.
ಪಾಳುಬಿದ್ದ ಪಟ್ಟಣಗಳನ್ನು ತಿರುಗಿ ಕಟ್ಟಿ
    ಅದರಲ್ಲಿ ವಾಸಿಸುವರು.
ದ್ರಾಕ್ಷಿತೋಟವನ್ನು ಮಾಡಿ
    ಅದರಿಂದ ಸಿಗುವ ದ್ರಾಕ್ಷಾರಸವನ್ನು ಕುಡಿಯುವರು.
ತೋಟಗಳನ್ನು ಮಾಡಿ
    ಅದರ ಫಲಗಳನ್ನು ಭೋಗಿಸುವರು.
15 ನಾನು ನನ್ನ ಜನರನ್ನು ಅವರ ದೇಶದಲ್ಲಿ ಸ್ಥಾಪಿಸುವೆನು.
    ನಾನು ಕೊಟ್ಟಿರುವ ದೇಶದಿಂದ ಅವರು ಕೀಳಲ್ಪಡುವುದಿಲ್ಲ.”
ನಿಮ್ಮ ದೇವರಾದ ಯೆಹೋವನು ಈ ಸಂಗತಿಗಳನ್ನು ಹೇಳಿದ್ದಾನೆ.

ಫಿಲಿಪ್ಪಿಯವರಿಗೆ 3:13-4:1

13 ಸಹೋದರ ಸಹೋದರಿಯರೇ, ನಾನಿನ್ನೂ ಆ ಗುರಿಯನ್ನು ಮುಟ್ಟಿಲ್ಲವೆಂಬುದು ನನಗೆ ಗೊತ್ತಿದೆ. ಆದರೆ ನಾನು ಯಾವಾಗಲೂ ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ನನ್ನ ಮುಂದಿರುವ ಗುರಿಯನ್ನು ಮುಟ್ಟಲು ನನ್ನಿಂದಾದಷ್ಟರ ಮಟ್ಟಿಗೆ ಓಡುತ್ತಿದ್ದೇನೆ. 14 ದೇವರು ನಮ್ಮನ್ನು ಕ್ರಿಸ್ತನ ಮೂಲಕ ಮೇಲೋಕದ ಜೀವಿತಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.

15 ಆತ್ಮಿಕತೆಯಲ್ಲಿ ಪರಿಪೂರ್ಣವಾದ ಮಟ್ಟಕ್ಕೆ ಬಂದಿರುವ ನಾವೆಲ್ಲರೂ ಇದೇ ರೀತಿ ಯೋಚಿಸಬೇಕು. ನೀವು ಈ ಸಂಗತಿಗಳಲ್ಲಿ ಯಾವುದನ್ನಾದರೂ ಒಪ್ಪಿಕೊಳ್ಳದಿದ್ದರೆ ದೇವರೇ ನಿಮಗೆ ಅದನ್ನು ಸ್ಪಷ್ಟಪಡಿಸುವನು. 16 ಆದರೆ ನಾವು ಈಗಾಗಲೇ ಹೊಂದಿರುವ ಸತ್ಯವನ್ನು ಅನುಸರಿಸುತ್ತಾ ನಡೆಯೋಣ.

17 ಸಹೋದರ ಸಹೋದರಿಯರೇ, ನೀವೆಲ್ಲರೂ ನನ್ನಂತೆ ಜೀವಿಸಲು ಪ್ರಯತ್ನಿಸಿ. ನಾವು ನಿಮಗೆ ತೋರಿಸಿದ ಮಾದರಿಯ ಪ್ರಕಾರ ಜೀವಿಸುವವರನ್ನು ಅನುಸರಿಸಿರಿ. 18 ಅನೇಕರು ಕ್ರಿಸ್ತನ ಶಿಲುಬೆಗೆ ವೈರಿಗಳೊ ಎಂಬಂತೆ ಜೀವಿಸುತ್ತಾರೆ. ಅವರ ಬಗ್ಗೆ ನಾನು ನಿಮಗೆ ಅನೇಕ ಸಲ ತಿಳಿಸಿದ್ದೇನೆ. ಈಗಲೂ ಕಣ್ಣೀರಿನಿಂದ ಹೇಳುತ್ತೇನೆ. 19 ಅವರ ನಡತೆಯು ಅವರನ್ನು ನಾಶದೆಡೆಗೆ ನಡೆಸುತ್ತಿದೆ. ಅವರು ದೇವರ ಸೇವೆ ಮಾಡುತ್ತಿಲ್ಲ. ಆ ಜನರು ಕೇವಲ ತಮ್ಮ ಸಂತೋಷಕ್ಕಾಗಿ ಜೀವಿಸುತ್ತಿದ್ದಾರೆ. ಅವರು ನಾಚಿಕೆಕರವಾದ ಕೆಲಸಗಳನ್ನು ಮಾಡಿ, ಅವುಗಳ ಬಗ್ಗೆ ಹೆಮ್ಮೆಪಡುತ್ತಾರೆ. ಅವರು ಕೇವಲ ಈ ಲೋಕದ ವಿಷಯಗಳ ಬಗ್ಗೆ ಆಲೋಚಿಸುತ್ತಾರೆ. 20 ನಾವಾದರೋ ಪರಲೋಕ ಸಂಸ್ಥಾನದವರು. ನಮ್ಮ ರಕ್ಷಕನು ಅಲ್ಲಿಂದಲೇ ಬರುವುದನ್ನು ನಾವು ಎದುರುನೋಡುತ್ತಿದ್ದೇವೆ. ಪ್ರಭುವಾದ ಯೇಸು ಕ್ರಿಸ್ತನೇ ನಮ್ಮ ರಕ್ಷಕನು. 21 ಆತನು ತನ್ನ ಶಕ್ತಿಯಿಂದ ಸಮಸ್ತವನ್ನು ಆಳುತ್ತಾನೆ ಮತ್ತು ನಮ್ಮ ದೀನಾವಸ್ಥೆಯ ಈ ಶರೀರವನ್ನು ರೂಪಾಂತರಪಡಿಸಿ ತನ್ನ ಸ್ವಂತ ಮಹಿಮಾಶರೀರದಂತೆ ಮಾಡುತ್ತಾನೆ.

ಮಾಡಬೇಕಾದ ಕಾರ್ಯಗಳು

ನನ್ನ ಸಹೋದರ ಸಹೋದರಿಯರೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆ ಮತ್ತು ನಿಮ್ಮನ್ನು ನೋಡಬಯಸುತ್ತೇನೆ. ನೀವು ನನಗೆ ಆನಂದವನ್ನು ಉಂಟುಮಾಡಿ, ನಿಮ್ಮ ವಿಷಯದಲ್ಲಿ ನಾನು ಹೆಮ್ಮಪಡುವಂತೆ ಮಾಡಿದ್ದೀರಿ. ನಾನು ನಿಮಗೆ ಹೇಳಿದಂತೆ ಪ್ರಭುವನ್ನು ಅನುಸರಿಸಿರಿ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International