Print Page Options
Previous Prev Day Next DayNext

Revised Common Lectionary (Complementary)

Daily Bible readings that follow the church liturgical year, with thematically matched Old and New Testament readings.
Duration: 1245 days
Kannada Holy Bible: Easy-to-Read Version (KERV)
Version
ಲೂಕ 1:46-55

ಮರಿಯಳು ದೇವರನ್ನು ಸ್ತುತಿಸಿದಳು

46 ಆಗ ಮರಿಯಳು,

47 “ನನ್ನ ಪ್ರಾಣವು ಪ್ರಭುವನ್ನು ಸ್ತುತಿಸುತ್ತದೆ.
    ದೇವರೇ ನನ್ನ ರಕ್ಷಕನಾಗಿರುವುದರಿಂದ ನನ್ನ ಹೃದಯವು ಸಂತೋಷಗೊಂಡಿದೆ.
48 ದೇವರು ತನ್ನ ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದಾನೆ.
    ಇಂದಿನಿಂದ, ಎಲ್ಲಾ ಜನರು ನನ್ನನ್ನು ಧನ್ಯಳೆಂದು ಹೇಳುವರು.
49 ಏಕೆಂದರೆ ಸರ್ವಶಕ್ತನು (ದೇವರು) ನನಗೆ ಮಹಾಕಾರ್ಯಗಳನ್ನು ಮಾಡಿದ್ದಾನೆ.
    ಆತನ ಹೆಸರು ಅತಿ ಪರಿಶುದ್ಧವಾದದ್ದು.
50 ದೇವರು ತನ್ನಲ್ಲಿ ಭಯಭಕ್ತಿಯುಳ್ಳ ಜನರಿಗೆ ಎಂದೆಂದಿಗೂ ಕರುಣೆ ತೋರುವನು.
51 ಆತನು ತನ್ನ ಭುಜಬಲವನ್ನು ತೋರಿ
    ಗರ್ವಿಷ್ಠರನ್ನು ಚದರಿಸುತ್ತಾನೆ.
52 ದೇವರು ಅಧಿಪತಿಗಳನ್ನು ಅವರ ಸಿಂಹಾಸನಗಳಿಂದ ಕೆಳಗಿಳಿಸಿ
    ದೀನರನ್ನು ಉನ್ನತಿಗೇರಿಸುತ್ತಾನೆ.
53 ಆತನು ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸಿ
    ಐಶ್ವರ್ಯವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಡುತ್ತಾನೆ.
54 ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನಕ್ಕನುಸಾರವಾಗಿ
    ಅಬ್ರಹಾಮನಿಗೂ ಅವನ ಸಂತತಿಯವರಿಗೂ ಯಾವಾಗಲೂ
55 ಕರುಣೆ ತೋರಬೇಕೆಂದುಕೊಂಡು ತನ್ನ ಸೇವಕನಾದ ಇಸ್ರೇಲನನ್ನು ಕೈ ಹಿಡಿದಿದ್ದಾನೆ” ಎಂದಳು.

1 ಸಮುವೇಲನು 1:19-28

19 ಎಲ್ಕಾನನ ಕುಟುಂಬದವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ, ರಾಮಾತಯಿಮಿನಲ್ಲಿದ್ದ ತಮ್ಮ ಮನೆಗೆ ಹಿಂದಿರುಗಿದರು.

ಸಮುವೇಲನ ಜನನ

ಎಲ್ಕಾನನು ಹನ್ನಳನ್ನು ಕೂಡಿದನು. ಯೆಹೋವನು ಹನ್ನಳನ್ನು ಜ್ಞಾಪಿಸಿಕೊಂಡನು. 20 ಹನ್ನಳು ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಹನ್ನಳು ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು. ಅವಳು, “ಅವನ ಹೆಸರು ಸಮುವೇಲ, ಏಕೆಂದರೆ ನಾನು ಅವನಿಗಾಗಿ ಯೆಹೋವನಲ್ಲಿ ಪ್ರಾರ್ಥಿಸಿದ್ದೆ” ಎಂದಳು.

21 ಎಲ್ಕಾನನು ಯಜ್ಞವನ್ನು ಅರ್ಪಿಸಲು ಮತ್ತು ಯೆಹೋವನಿಗೆ ಮಾಡಿದ ಹರಕೆಯನ್ನು ಸಲ್ಲಿಸಲು ಆ ವರ್ಷವೂ ಶೀಲೋವಿಗೆ ತನ್ನ ಕುಟುಂಬ ಸಮೇತವಾಗಿ ಹೋದನು. 22 ಆದರೆ ಹನ್ನಳು ಹೋಗಲಿಲ್ಲ. ಅವಳು ಎಲ್ಕಾನನಿಗೆ, “ಮಗುವು ಗಟ್ಟಿಯಾದ ಊಟಮಾಡುವ ತನಕ ನಾನು ಬರುವುದಿಲ್ಲ. ಅವನು ದೊಡ್ಡವನಾದ ಮೇಲೆ ನಾನೇ ಶೀಲೋವಿಗೆ ಕರೆದೊಯ್ದು ಯೆಹೋವನಿಗೆ ಒಪ್ಪಿಸುತ್ತೇನೆ. ಅವನು ನಾಜೀರನಾಗುತ್ತಾನೆ. ಅವನು ಯಾವಾಗಲೂ ಶೀಲೋವಿನಲ್ಲಿಯೇ ಇರುತ್ತಾನೆ” ಎಂದು ಹೇಳಿದಳು.

23 ಹನ್ನಳ ಗಂಡನಾದ ಎಲ್ಕಾನನು ಅವಳಿಗೆ, “ನಿನಗೆ ಸರಿತೋರಿದಂತೆ ಮಾಡು. ಮಗುವು ಗಟ್ಟಿಯಾದ ಊಟ ಮಾಡುವಷ್ಟು ವಯಸ್ಸಾಗುವ ತನಕ ಮನೆಯಲ್ಲಿಯೇ ಇರು. ನೀನು ಹೇಳಿದ್ದನ್ನು ಯೆಹೋವನು ನೆರವೇರಿಸಲಿ” ಎಂದು ಹೇಳಿದನು. ಆದ್ದರಿಂದ ಹನ್ನಳು ತನ್ನ ಮಗುವು ಗಟ್ಟಿಯಾದ ಆಹಾರವನ್ನು ತಿನ್ನಲು ಆರಂಭಿಸುವ ತನಕ ಆರೈಕೆಮಾಡಿ ಬೆಳೆಸಲು ಮನೆಯಲ್ಲಿಯೇ ಇದ್ದಳು.

ಸಮುವೇಲನನ್ನು ಯೆಹೋವನಿಗೆ ಒಪ್ಪಿಸಿದ್ದು

24 ಮಗುವು ಗಟ್ಟಿಯಾದ ಊಟ ಮಾಡುವಂತಾದಾಗ ಹನ್ನಳು ಶೀಲೋವಿನಲ್ಲಿದ್ದ ಯೆಹೋವನ ಆಲಯಕ್ಕೆ ಅವನನ್ನು ಕರೆದುಕೊಂಡು ಹೋದಳು. ಹನ್ನಳು ಮೂರು ವರ್ಷದ ಒಂದು ಹೋರಿಯನ್ನೂ ಮೂವತ್ತು ಸೇರು ಹಿಟ್ಟನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ತೆಗೆದುಕೊಂಡು ಹೋದಳು.

25 ಅವರೆಲ್ಲಾ ಯೆಹೋವನ ಸನ್ನಿಧಿಗೆ ಹೋದರು. ಎಲ್ಕಾನನು ಎಂದಿನಂತೆ ಹೋರಿಯನ್ನು ಯಜ್ಞವಾಗಿ ಅರ್ಪಿಸಿದನು. ಆಮೇಲೆ ಹನ್ನಳು ಏಲಿಯನ ಬಳಿಗೆ ಮಗನನ್ನು ಕರೆದೊಯ್ದಳು. 26 ಹನ್ನಳು, “ಸ್ವಾಮೀ, ನನ್ನನ್ನು ಕ್ಷಮಿಸಿ. ನಿಮ್ಮ ಬಳಿ ನಿಂತಿರುವ ನಾನೇ ಅಂದು ಯೆಹೋವನಿಗೆ ಪ್ರಾರ್ಥನೆ ಮಾಡಿದವಳು. ನಾನು ಹೇಳುತ್ತಿರುವುದು ನಿಜವೆಂದು ಪ್ರಮಾಣ ಮಾಡುತ್ತೇನೆ. 27 ನಾನು ಈ ಮಗುವಿಗಾಗಿ ಪ್ರಾರ್ಥನೆ ಮಾಡಿದೆ. ಯೆಹೋವನು ನನ್ನ ಪ್ರಾರ್ಥನೆಗೆ ಉತ್ತರಿಸಿದನು. ಯೆಹೋವನು ಅನುಗ್ರಹಿಸಿದ ಮಗನೇ ಇವನು. 28 ಈಗ ನಾನು ಈ ಮಗನನ್ನು ಯೆಹೋವನಿಗೆ ಒಪ್ಪಿಸುತ್ತೇನೆ. ಇವನು ಜೀವದಿಂದಿರುವ ತನಕ ಯೆಹೋವನಿಗೆ ಪ್ರತಿಷ್ಠಿತನಾಗಿರುತ್ತಾನೆ” ಎಂದು ಏಲಿಗೆ ಹೇಳಿದಳು.

ಬಳಿಕ ಹನ್ನಳು ಆ ಬಾಲಕನನ್ನು ಅಲ್ಲಿಯೇ ಬಿಟ್ಟು ಯೆಹೋವನನ್ನು ಆರಾಧಿಸಿದಳು.

ಇಬ್ರಿಯರಿಗೆ 8

ಯೇಸುವೇ ನಮ್ಮ ಪ್ರಧಾನಯಾಜಕನು

ನಾವು ಹೇಳುವ ಸಂಗತಿಗಳಲ್ಲಿ ಮುಖ್ಯವಾದದ್ದೇನೆಂದರೆ, ನಿಮಗೆ ಹೇಳಿದಂತೆಯೇ ನಮಗೊಬ್ಬ ಪ್ರಧಾನ ಯಾಜಕನಿದ್ದಾನೆ. ಆತನು ಪರಲೋಕದಲ್ಲಿ ದೇವರ ಸಿಂಹಾಸನದ ಬಲಭಾಗದಲ್ಲಿ ಈಗ ಕುಳಿತುಕೊಂಡಿದ್ದಾನೆ. ಆತನು ಮಹಾ ಪವಿತ್ರಸ್ಥಳದಲ್ಲಿ ಅಂದರೆ ಜನರಿಂದ ನಿರ್ಮಿತವಾಗದೆ, ದೇವರಿಂದಲೇ ನಿರ್ಮಿಸಲ್ಪಟ್ಟಿರುವ ನಿಜವಾದ ದೇವದರ್ಶನ ಗುಡಾರದಲ್ಲಿ ಸೇವೆಮಾಡುತ್ತಿದ್ದಾನೆ.

ಪ್ರತಿಯೊಬ್ಬ ಪ್ರಧಾನಯಾಜಕನೂ ದೇವರಿಗೆ ಯಜ್ಞಗಳನ್ನೂ ಕಾಣಿಕೆಗಳನ್ನೂ ಅರ್ಪಿಸಬೇಕು. ಆದ್ದರಿಂದ ನಮ್ಮ ಪ್ರಧಾನ ಯಾಜಕನೂ ದೇವರಿಗೆ ಏನನ್ನಾದರೂ ಅರ್ಪಿಸಲೇಬೇಕು. ಆತನು ಇನ್ನೂ ಭೂಮಿಯ ಮೇಲೆ ವಾಸಮಾಡುತ್ತಿದ್ದರೆ ಯಾಜಕನಾಗಿರುತ್ತಿರಲಿಲ್ಲ. ಕಾರಣವೇನೆಂದರೆ, ಧರ್ಮಶಾಸ್ತ್ರದ ಪ್ರಕಾರ ದೇವರಿಗೆ ಕಾಣಿಕೆಗಳನ್ನು ಅರ್ಪಿಸುವ ಯಾಜಕರು ಈಗಾಗಲೇ ಇಲ್ಲಿದ್ದಾರೆ. ಈ ಯಾಜಕರು ಮಾಡುವ ಕಾರ್ಯಗಳು ಪರಲೋಕದಲ್ಲಿನ ಕಾರ್ಯಗಳ ನಿಜವಾದ ಪ್ರತಿರೂಪಗಳೂ ಛಾಯೆಗಳೂ ಆಗಿವೆ. ಮೋಶೆಯು ದೇವದರ್ಶನ ಗುಡಾರವನ್ನು ನಿರ್ಮಿಸಲು ಸಿದ್ಧನಾದಾಗ ದೇವರು ಅವನಿಗೆ, “ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಎಚ್ಚರಿಕೆಯಿಂದ ನಿರ್ಮಿಸಬೇಕು”(A) ಎಂದು ಹೇಳಿದ್ದು ಈ ಕಾರಣದಿಂದಲೇ. ಆದರೆ ಯೇಸುವಿಗೆ ಕೊಡಲ್ಪಟ್ಟ ಕಾರ್ಯವು ಆ ಯಾಜಕರಿಗೆ ಕೊಡಲ್ಪಟ್ಟ ಕಾರ್ಯಕ್ಕಿಂತ ಅತ್ಯಂತ ಮಹತ್ವದ್ದಾಗಿದೆ. ಇದೇ ರೀತಿಯಲ್ಲಿ ಯೇಸು ತನ್ನ ಜನರಿಗಾಗಿ ದೇವರಿಂದ ತಂದ ಹೊಸ ಒಡಂಬಡಿಕೆಯು ಹಳೆಯದಕ್ಕಿಂತ ಶ್ರೇಷ್ಠವಾಗಿದೆ. ಉತ್ತಮ ಸಂಗತಿಗಳ ವಾಗ್ದಾನದ ಆಧಾರದ ಮೇಲೆ ಹೊಸ ಒಡಂಬಡಿಕೆಯು ಸ್ಥಾಪಿತವಾಗಿದೆ.

ಮೊದಲನೆ ಒಡಂಬಡಿಕೆ ಏನೂ ದೋಷವಿಲ್ಲದ್ದಾಗಿದ್ದರೆ, ಎರಡನೆ ಒಡಂಬಡಿಕೆಯ ಅಗತ್ಯವೇ ಇರಲಿಲ್ಲ. ಆದರೆ ದೇವರು ಜನರಲ್ಲಿ ಯಾವುದೋ ದೋಷವನ್ನು ಕಂಡು ಹೇಳಿದ್ದೇನೆಂದರೆ:

“ಇಸ್ರೇಲರೊಡನೆಯೂ ಯೆಹೂದ್ಯರೊಡನೆಯೂ
    ನಾನು ಹೊಸ ಒಡಂಬಡಿಕೆ ಮಾಡಿಕೊಳ್ಳುವ ಕಾಲ ಬರುತ್ತಿದೆ ಎಂದು ಪ್ರಭು ಹೇಳುತ್ತಾನೆ.
ಅದು, ಅವರ ಪಿತೃಗಳೊಡನೆ ನಾನು ಮಾಡಿಕೊಂಡ ಒಡಂಬಡಿಕೆಯಂತಿರುವುದಿಲ್ಲ.
    ಅವರನ್ನು ಈಜಿಪ್ಟಿನಿಂದ ಕೈಹಿಡಿದು ಹೊರಗೆ ಕರೆದುಕೊಂಡು ಬಂದ ಕಾಲದಲ್ಲಿ ಅವರೊಡನೆ ಆ ಒಡಂಬಡಿಕೆಯನ್ನೂ ಮಾಡಿಕೊಂಡೆನು.
ಆದರೆ ಅವರು ಅದನ್ನು ಅನುಸರಿಸಲಿಲ್ಲವಾದ್ದರಿಂದ
    ಅವರಿಗೆ ವಿಮುಖನಾದೆನು ಎಂದು ಪ್ರಭು ಹೇಳುತ್ತಾನೆ.
10 ನಾನು ಇಸ್ರೇಲರೊಡನೆ ಮುಂದಿನ ದಿನಗಳಲ್ಲಿ ಮಾಡಿಕೊಳ್ಳುವ
    ಹೊಸ ಒಡಂಬಡಿಕೆಯು ಇಂತಿದೆ:
ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇರಿಸುವೆನು;
    ಅವರ ಹೃದಯದ ಮೇಲೆ ಬರೆಯುವೆನು;
ನಾನು ಅವರ ದೇವರಾಗಿರುವೆನು;
    ಅವರು ನನ್ನ ಜನರಾಗಿರುವರು.
11 ಒಬ್ಬನು ಸಹೋದರನಿಗಾಗಲಿ, ಬೇರೆಯವರಿಗಾಗಲಿ ಬೋಧಿಸಬೇಕಾಗಿರುವುದಿಲ್ಲ;
ದೇವರನ್ನು ತಿಳಿದುಕೊಳ್ಳಿ ಎಂದು ಹೇಳಬೇಕಾಗಿರುವುದಿಲ್ಲ. ಏಕೆಂದರೆ ಅತ್ಯಂತ ಪ್ರಮುಖರನ್ನು ಮೊದಲುಗೊಂಡು ಅತ್ಯಂತ ಅಲ್ಪರಾದವರೆಲ್ಲರೂ ನನ್ನನ್ನು ತಿಳಿದುಕೊಂಡಿರುವರು.
12 ಅವರು ನನ್ನ ವಿರುದ್ಧವಾಗಿ ಮಾಡುವ ಎಲ್ಲಾ ಕೆಟ್ಟಕಾರ್ಯಗಳನ್ನು ಕ್ಷಮಿಸುವೆನು;
    ಅವರ ಪಾಪಗಳನ್ನು ನೆನಪಿಗೆ ತಂದುಕೊಳ್ಳುವುದಿಲ್ಲ.”(B)

13 ದೇವರು ಇದನ್ನು ಹೊಸ ಒಡಂಬಡಿಕೆ ಎಂದು ಕರೆದನು. ಆದ್ದರಿಂದ ಮೊದಲನೆ ಒಡಂಬಡಿಕೆಯನ್ನು ದೇವರು ಹಳೆಯದಾಗಿ ಮಾಡಿದನು. ಯಾವುದು ಹಳೆಯದಾಗಿ ಉಪಯೋಗಕ್ಕೆ ಬಾರದಾಗುತ್ತದೋ ಅದು ಅದೃಶ್ಯವಾಗುವುದು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International