Print Page Options
Previous Prev Day Next DayNext

Revised Common Lectionary (Complementary)

Daily Bible readings that follow the church liturgical year, with thematically matched Old and New Testament readings.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 103:1-13

ರಚನೆಗಾರ: ದಾವೀದ.

103 ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು!
    ನನ್ನ ಸರ್ವಾಂಗಗಳೇ, ಆತನ ಪವಿತ್ರ ಹೆಸರನ್ನು ಕೊಂಡಾಡಿರಿ!
ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು!
    ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ.
ಆತನು ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸುವನು;
    ನಮ್ಮ ಕಾಯಿಲೆಗಳನ್ನೆಲ್ಲಾ ವಾಸಿಮಾಡುವನು.
ಆತನು ನಮ್ಮ ಜೀವವನ್ನು ನಾಶನದಿಂದ ರಕ್ಷಿಸಿ
    ನಮಗೆ ಪ್ರೀತಿಯನ್ನೂ ಕನಿಕರವನ್ನೂ ತೋರುವನು.
ಆತನು ನಮಗೆ ಸುವರಗಳನ್ನು ಹೇರಳವಾಗಿ ದಯಪಾಲಿಸುವನು.
    ಹದ್ದಿಗೆ ಬರುವಂತೆಯೇ ನಮಗೆ ಯೌವನವನ್ನು ಬರಮಾಡುತ್ತಾನೆ.
ಯೆಹೋವನು ನೀತಿವಂತನಾಗಿದ್ದಾನೆ.
    ಕುಗ್ಗಿಹೋದವರಿಗೆ ಆತನು ನ್ಯಾಯ ದೊರಕಿಸುವನು.
ಆತನು ತನ್ನ ಕಟ್ಟಳೆಗಳನ್ನು ಮೋಶೆಗೆ ಉಪದೇಶಿಸಿದನು;
    ತನ್ನ ಮಹತ್ಕಾರ್ಯಗಳನ್ನು ಇಸ್ರೇಲರಿಗೆ ತೋರಿಸಿದನು.
ಯೆಹೋವನು ಕನಿಕರವುಳ್ಳವನೂ ಕೃಪಾಪೂರ್ಣನೂ
    ತಾಳ್ಮೆಯುಳ್ಳವನೂ ಪ್ರೀತಿಪೂರ್ಣನೂ ಆಗಿದ್ದಾನೆ.
ಆತನು ಯಾವಾಗಲೂ ಟೀಕಿಸುವವನಲ್ಲ.
    ಆತನು ನಮ್ಮ ಮೇಲೆ ನಿತ್ಯವೂ ಕೋಪವಾಗಿರುವವನಲ್ಲ.
10 ನಾವು ದೇವರಿಗೆ ವಿರೋಧವಾಗಿ ಪಾಪಮಾಡಿದೆವು.
    ಆದರೂ ತಕ್ಕ ದಂಡನೆಯನ್ನು ಆತನು ನಮಗೆ ಕೊಡಲಿಲ್ಲ.
11 ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವಾಗಿದೆಯೋ
    ಆತನ ಮಹಾಪ್ರೀತಿಯು ಆತನ ಭಕ್ತರ ಮೇಲೆ ಅಷ್ಟೇ ಅಪಾರವಾಗಿದೆ.
12 ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟೋ ದೂರವಿರುವಂತೆ
    ನಮ್ಮ ಪಾಪಗಳನ್ನು ನಮ್ಮಿಂದ ತೆಗೆದು ದೂರ ಮಾಡಿದ್ದಾನೆ.
13 ತಂದೆಯು ಮಕ್ಕಳನ್ನು ಕನಿಕರಿಸುವಂತೆ
    ಯೆಹೋವನು ತನ್ನ ಭಕ್ತರನ್ನು ಕನಿಕರಿಸುವನು.

ಕೀರ್ತನೆಗಳು 103:22

22 ಸರ್ವಸ್ಥಳಗಲ್ಲಿರುವ ಸಮಸ್ತವನ್ನು ಸೃಷ್ಟಿಸಿದಾತನು ಯೆಹೋವನೇ ಸರ್ವಸ್ಥಳಗಳಲ್ಲಿರುವ ಸಮಸ್ತಕ್ಕೂ ದೇವರೇ ಅಧಿಪತಿ.
    ಅವುಗಳೆಲ್ಲಾ ಆತನನ್ನು ಕೊಂಡಾಡಲಿ!
ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು!

ಯೆಹೆಜ್ಕೇಲ 16:1-14

ಜೆರುಸಲೇಮಿನ ಮೇಲೆ ಯೆಹೋವನ ಪ್ರೀತಿ

16 ಮತ್ತೆ ಯೆಹೋವನ ವಾಕ್ಯವು ನನಗೆ ಬಂತು. ಆತನು ಹೇಳಿದ್ದೇನೆಂದರೆ, “ನರಪುತ್ರನೇ, ಜೆರುಸಲೇಮ್ ಪಟ್ಟಣಕ್ಕೆ ಅದರ ಅಸಹ್ಯವಾದ ಆಚರಣೆಗಳ ಬಗ್ಗೆ ಹೇಳು. ದುಷ್ಟತ್ವದ ಕುರಿತು ಅವರಿಗೆ ತಿಳಿಸು. ನೀನು ಏನು ಹೇಳಬೇಕೆಂದರೆ, ‘ಜೆರುಸಲೇಮಿಗೆ ನನ್ನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ನಿನ್ನ ಇತಿಹಾಸವನ್ನು ನೋಡು. ನೀನು ಕಾನಾನ್‌ನಲ್ಲಿ ಜನಿಸಿರುತ್ತೀ. ನಿನ್ನ ತಂದೆಯು ಅಮೋರಿಯನು, ನಿನ್ನ ತಾಯಿ ಹಿತ್ತಿಯಳು. ಜೆರುಸಲೇಮೇ, ನೀನು ಹುಟ್ಟಿದ ಆ ದಿವಸದಲ್ಲಿ ನಿನ್ನ ಹೊಕ್ಕಳ ನಾಳವನ್ನು ಕೊಯ್ಯಲು ಯಾರೂ ಇದ್ದಿಲ್ಲ. ನಿನ್ನ ಮೈಯನ್ನು ನೀರು ಹಾಕಿ ಯಾರೂ ತೊಳೆದು ಶುದ್ಧಮಾಡಿಲ್ಲ. ನಿನ್ನನ್ನು ಯಾರೂ ಉಪ್ಪಿನಿಂದ ಉಜ್ಜಿಲ್ಲ. ಯಾರೂ ನಿನಗೆ ಬಟ್ಟೆ ಸುತ್ತಲಿಲ್ಲ. ಇವುಗಳಲ್ಲಿ ಯಾವುದನ್ನೇ ಮಾಡಲು ನಿನಗೋಸ್ಕರ ಯಾರೂ ಸಾಕಷ್ಟು ಮರುಕಪಡಲಿಲ್ಲ. ಜೆರುಸಲೇಮೇ, ನೀನು ಜನಿಸಿದ ದಿನದಲ್ಲಿ ನಿನಗೆ ಜನ್ಮವಿತ್ತವರು ನಿನ್ನನ್ನು ಹೊರಗೆ ಬಯಲಿನಲ್ಲಿ ಎಸೆದುಬಿಟ್ಟರು. ನೀನು ತಿರಸ್ಕರಿಸಲ್ಪಟ್ಟಿದ್ದೆ.

“‘ಆಗ ನಾನು (ದೇವರು) ಆ ಮಾರ್ಗವಾಗಿ ಹಾದುಹೋಗುವಾಗ ನೀನು ರಕ್ತಮಯವಾಗಿ ಹೊರಳಾಡುತ್ತಾ ಬಿದ್ದಿದ್ದೆ. ಆಗ ನಾನು “ಜೀವಿಸು” ಅಂದೆನು. ಹೌದು, ನೀನು ರಕ್ತದಲ್ಲಿ ಮುಳುಗಿದ್ದೀ. ಆಗ ನಾನು “ಜೀವಿಸು” ಅಂದೆನು. ನಾನು, ಹೊಲದಲ್ಲಿ ಸಸಿಯು ಹೇಗೆ ಬೆಳೆಯುತ್ತದೋ ಹಾಗೆಯೇ ನೀನು ಬೆಳೆಯಲು ಸಹಾಯ ಮಾಡಿದೆನು. ನೀನು ಬೆಳೆಯುತ್ತಾ ಯೌವನದ ಹೊಸ್ತಿಲಲ್ಲಿ ಕಾಲಿಟ್ಟ ಹೆಂಗಸಿನಂತಾದೆ. ನಿನಗೆ ಮುಟ್ಟು ಪ್ರಾರಂಭವಾಯಿತು. ನಿನ್ನ ಸ್ತನಗಳು ಬೆಳೆದವು. ಕೂದಲುಗಳು ಬೆಳೆದವು. ಆದರೂ ನೀನು ಬಟ್ಟೆಯಿಲ್ಲದವಳಾಗಿ ಬೆತ್ತಲೆಯಾಗಿದ್ದೆ. ನಾನು ಮತ್ತೆ ಹಾದುಹೋಗುವಾಗ ನಿನ್ನನ್ನು ನೋಡಲಾಗಿ ನೀನು ಸಂಭೋಗಿಸಲು ತಯಾರಾಗಿದ್ದೆ. ನಾನು ನನ್ನ ಹೊದಿಕೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಬೆತ್ತಲೆ ದೇಹವನ್ನು ಮುಚ್ಚಿದೆನು. ನಿನ್ನನ್ನು ವಿವಾಹವಾಗಲು ಮಾತುಕೊಟ್ಟೆನು. ನಾನು ನಿನ್ನೊಡನೆ ಒಡಂಬಡಿಕೆ ಮಾಡಿಕೊಂಡೆನು. ಆಗ ನೀನು ನನ್ನವಳಾದೆ.’” ಇದು ನನ್ನ ಒಡೆಯನಾದ ಯೆಹೋವನ ನುಡಿ. “‘ನಾನು ನಿನ್ನನ್ನು ನೀರಿನಲ್ಲಿ ತೊಳೆದೆನು. ನಿನ್ನ ರಕ್ತವನ್ನು ತೊಳೆದೆನು. ನಿನ್ನ ಮೈಗೆ ಎಣ್ಣೆ ಹಚ್ಚಿ ಉಜ್ಜಿದೆನು. 10 ನಿನಗೆ ಅಂದವಾದ ಉಡುಪನ್ನು ಕೊಟ್ಟು ಕಾಲಿಗೆ ನಯವಾದ ಚರ್ಮದ ಕೆರಗಳನ್ನು ಕೊಟ್ಟೆನು. ನಿನ್ನ ತಲೆಗೆ ನಾರುಮಡಿಯ ತಲೆಕಟ್ಟನ್ನು ಕೊಟ್ಟೆನು ಮತ್ತು ನಿನಗೆ ರೇಷ್ಮೆಯ ಬಟ್ಟೆಯನ್ನು ಹೊದಿಸಿದೆನು. 11 ಅನಂತರ ನಿನಗೆ ಕೆಲವು ಆಭರಣಗಳನ್ನು ಕೊಟ್ಟೆನು. ನಿನ್ನ ತೋಳುಗಳಿಗೆ ತೋಳುಕಟ್ಟುಗಳನ್ನು, ಕುತ್ತಿಗೆಗೆ ಹಾರವನ್ನು ತೊಡಿಸಿದೆನು. 12 ನಿನಗೆ ಮೂಗುತಿ, ಕಿವಿಗೆ ಕಿವಿಯುಂಗುರಗಳನ್ನು ಮತ್ತು ಒಂದು ಅಂದವಾದ ಕಿರೀಟವನ್ನು ಧರಿಸಲು ಕೊಟ್ಟೆನು. 13 ನಿನ್ನ ಚಿನ್ನ, ಬೆಳ್ಳಿ, ಆಭರಣ, ನಾರುಮಡಿ, ರೇಷ್ಮೆ ಮತ್ತು ಕಸೂತಿ ಹಾಕಿದ ಬಟ್ಟೆಗಳಲ್ಲಿ ನೀನು ಸುಂದರಳಾಗಿ ಕಾಣಿಸುತ್ತಿದ್ದೆ. ನೀನು ಉತ್ತಮವಾದ ಆಹಾರವನ್ನು ಊಟ ಮಾಡಿದೆ: ಉತ್ತಮ ಗೋಧಿಹಿಟ್ಟು, ಜೇನುತುಪ್ಪ ಮತ್ತು ಆಲೀವ್ ಎಣ್ಣೆ. ನೀನು ಅತ್ಯಂತ ಸುಂದರಿಯಾದೆ. ಮತ್ತು ನೀನು ರಾಣಿಯಾಗಿದ್ದೆ. 14 ಹೌದು, ನೀನು ನಿನ್ನ ಸಂಪೂರ್ಣವಾದ ಸೌಂದರ್ಯಕ್ಕಾಗಿ ಜನಾಂಗಗಳ ಮಧ್ಯದಲ್ಲಿ ಹೆಸರು ವಾಸಿಯಾಯಿತು. ಯಾಕೆಂದರೆ ನಾನು ನಿನ್ನನ್ನು ಅತ್ಯಂತ ಸೌಂದರ್ಯವತಿಯನ್ನಾಗಿ ಮಾಡಿದೆನು.’” ಇವುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದನು.

ರೋಮ್ನಗರದವರಿಗೆ 3:1-8

ಹೀಗಿರಲು, ಯೆಹೂದ್ಯರ ವೈಶಿಷ್ಟವೇನು? ಸುನ್ನತಿ ಮಾಡಿಸಿಕೊಂಡಿರುವುದರಲ್ಲಿ ಏನಾದರೂ ವಿಶೇಷತೆಯಿದೆಯೇ? ಹೌದು, ಯೆಹೂದ್ಯರಿಗೆ ಅನೇಕ ವಿಶೇಷತೆಗಳಿವೆ. ಎಲ್ಲಕ್ಕಿಂತಲೂ ಅತಿಮುಖ್ಯವಾದದ್ದೇನೆಂದರೆ, ದೇವರು ಯೆಹೂದ್ಯರಲ್ಲಿ ಭರವಸವಿಟ್ಟು ತನ್ನ ಉಪದೇಶಗಳನ್ನು ಅವರಿಗೆ ಕೊಟ್ಟನು. ಕೆಲವು ಯೆಹೂದ್ಯರು ದೇವರಿಗೆ ನಂಬಿಗಸ್ತರಾಗಿರಲಿಲ್ಲ ಎಂಬುದೇನೊ ಸತ್ಯ. ಆದರೆ ದೇವರು ತಾನು ಮಾಡಿದ ವಾಗ್ದಾನವನ್ನು ನೆರವೇರಿಸದಂತೆ ಅದು ಮಾಡುತ್ತದೆಯೇ? ಇಲ್ಲ! ಪ್ರತಿಯೊಬ್ಬ ವ್ಯಕ್ತಿ ಸುಳ್ಳುಗಾರನಾದರೂ ದೇವರು ಸತ್ಯವಂತನಾಗಿಯೇ ಇರುತ್ತಾನೆ. ಪವಿತ್ರ ಗ್ರಂಥವು ಹೀಗೆಂದು ಹೇಳುತ್ತದೆ:

“ನಿನ್ನ ಮಾತುಗಳಲ್ಲಿ ನೀನು ನ್ಯಾಯಸ್ಥನೆಂದು ನಿರೂಪಿತನಾಗಬೇಕು.
    ನಿನಗೆ ತೀರ್ಪಾಗುವಾಗ ನೀನು ಜಯಗಳಿಸಬೇಕು.”(A)

ದೇವರು ನ್ಯಾಯವಂತನೆಂಬುದನ್ನು ನಾವು ಮಾಡುವ ತಪ್ಪು ಮತ್ತಷ್ಟು ಸ್ಪಷ್ಟವಾಗಿ ತೋರ್ಪಡಿಸುತ್ತದೆ. ಹೀಗಿರಲು, ದೇವರು ನಮ್ಮನ್ನು ಶಿಕ್ಷಿಸುವಾಗ, ಆತನು ಅನ್ಯಾಯ ಮಾಡುತ್ತಿದ್ದಾನೆಂದು ನಾವು ಹೇಳಲು ಸಾಧ್ಯವೇ? (ಬೇರೆ ಕೆಲವು ಜನರಿಗೆ ಇರಬಹುದಾದ ಆಲೋಚನೆಯನ್ನೇ ನಾನು ಇಲ್ಲಿ ಹೇಳುತ್ತಿದ್ದೇನೆ.) ಇಲ್ಲ! ದೇವರು ನಮ್ಮನ್ನು ದಂಡಿಸಲಾಗದಿದ್ದರೆ, ದೇವರು ಲೋಕಕ್ಕೆ ತೀರ್ಪುಮಾಡಲಾಗುವುದಿಲ್ಲ.

“ನಾನಾಡುವ ಸುಳ್ಳು ದೇವರ ಸತ್ಯವನ್ನು ತೋರಿಸುವುದಾದರೆ ನನ್ನ ಸುಳ್ಳಿನಿಂದ ದೇವರಿಗೆ ನಿಜವಾಗಿಯೂ ಮಹಿಮೆಯಾಗುತ್ತದೆ. ಹೀಗಿರಲು ನನಗೆ ‘ಪಾಪಿ’ ಎಂಬ ತೀರ್ಪಾಗುವುದೇಕೆ?” ಎಂದು ಒಬ್ಬನು ಕೇಳಬಹುದು. “ಒಳ್ಳೆಯದಾಗುವಂತೆ ನಾವು ಕೇಡುಮಾಡೋಣ” ಎಂದು ಹೇಳುವುದಕ್ಕೂ ಅದಕ್ಕೂ ಯಾವ ವ್ಯತ್ಯಾಸವಿಲ್ಲ. ಅನೇಕ ಜನರು ನಮ್ಮನ್ನು ಟೀಕಿಸುತ್ತಾರೆ ಮತ್ತು ನಾವು ಅಂಥ ಸಂಗತಿಗಳನ್ನು ಬೋಧಿಸುತ್ತೇವೆ ಎಂದು ಹೇಳುತ್ತಾರೆ. ಆ ಜನರು ತಪ್ಪಿತಸ್ಥರಾಗಿದ್ದಾರೆ. ಅವರಿಗೆ ದಂಡನೆಯಾಗಲೇಬೇಕು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International