Print Page Options
Previous Prev Day Next DayNext

Revised Common Lectionary (Complementary)

Daily Bible readings that follow the church liturgical year, with thematically matched Old and New Testament readings.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 64

ರಚನೆಗಾರ: ದಾವೀದ.

64 ದೇವರೇ, ನನಗೆ ಕಿವಿಗೊಡು.
    ವೈರಿಯು ನನಗೆ ಬೆದರಿಕೆ ಹಾಕಿದ್ದಾನೆ.
    ನನ್ನ ಪ್ರಾಣವನ್ನು ರಕ್ಷಿಸು.
ನನ್ನ ಶತ್ರುಗಳ ಒಳಸಂಚುಗಳಿಂದ ನನ್ನನ್ನು ಸಂರಕ್ಷಿಸು.
    ಆ ದುಷ್ಟರಿಗೆ ಸಿಕ್ಕದಂತೆ ನನ್ನನ್ನು ಮರೆಮಾಡು.
ಅವರು ನನ್ನ ಬಗ್ಗೆ ಕಡುಸುಳ್ಳುಗಳನ್ನು ಹೇಳಿದ್ದಾರೆ.
    ಅವರ ನಾಲಿಗೆಗಳು ಹರಿತವಾದ ಖಡ್ಗಗಳಂತಿವೆ.
    ಅವರ ಮಾತುಗಳು ವಿಷಬಾಣಗಳಂತಿವೆ.
ಗುಪ್ತಸ್ಥಳಗಳಲ್ಲಿ ಅಡಗಿಕೊಂಡಿದ್ದು ನಿರ್ಭಯದಿಂದ[a]
    ನೀತಿವಂತನ ಮೇಲೆ ಆ ಬಾಣಗಳನ್ನು ಎಸೆಯುತ್ತಾರೆ.
ಕೇಡುಮಾಡಲು ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ ಬಲೆಯೊಡ್ಡಲು ಆಲೋಚಿಸುವರು.
    “ತಮ್ಮ ಬಲೆಗಳು ಯಾರಿಗೂ ಕಾಣುವುದಿಲ್ಲ” ಎಂದು ಮಾತಾಡಿಕೊಳ್ಳುವರು.
ಅವರು ತಮ್ಮ ಬಲೆಗಳನ್ನು ಅಡಗಿಸಿಟ್ಟಿದ್ದಾರೆ; ಬೇಟೆಗಳಿಗಾಗಿ ಎದುರುನೋಡುತ್ತಿದ್ದಾರೆ.
    ಜನರು ಕುತಂತ್ರಿಗಳಾಗಿದ್ದರೆ, ಅವರ ಆಲೋಚನೆಗಳನ್ನು ತಿಳಿದುಕೊಳ್ಳುವುದು ಬಹು ಕಷ್ಟ.[b]
ಆದರೆ ದೇವರು ಇದ್ದಕ್ಕಿದ್ದಂತೆ ತನ್ನ ಬಾಣಗಳನ್ನು ಎಸೆಯುವನು.
    ಆಗ ಆ ದುಷ್ಟರು ಗಾಯಗೊಳ್ಳುವರು.
ದುಷ್ಟರು ಬೇರೆಯವರಿಗೆ ಕೇಡುಮಾಡಲು ಆಲೋಚಿಸುವರು.
    ಆದರೆ ಆ ಕೇಡುಗಳು ಅವರಿಗೇ ಸಂಭವಿಸುವಂತೆ ದೇವರು ಮಾಡುವನು.
ಆಗ ಅವರನ್ನು ಕಂಡ ಪ್ರತಿಯೊಬ್ಬನೂ
    ಆಶ್ಚರ್ಯದಿಂದ ತಲೆಯಾಡಿಸುವನು.
ದೇವರ ಕಾರ್ಯವನ್ನು ಜನರು ಕಂಡು
    ಅದರ ಬಗ್ಗೆ ಬೇರೆಯವರಿಗೂ ತಿಳಿಸುವರು.
ಹೀಗೆ ಪ್ರತಿಯೊಬ್ಬರೂ ದೇವರ ಬಗ್ಗೆ ಹೆಚ್ಚಾಗಿ ಕಲಿತುಕೊಂಡು
    ಆತನಲ್ಲಿ ಭಯಭಕ್ತಿಯುಳ್ಳವರಾಗುವರು.
10 ಸಜ್ಜನರು ಯೆಹೋವನಲ್ಲಿ ಸಂತೋಷಿಸುತ್ತಾ
    ಆತನನ್ನೇ ಆಶ್ರಯಿಸಿಕೊಳ್ಳುವರು.
ಯಥಾರ್ಥವಂತರು ಯೆಹೋವನನ್ನು ಕೊಂಡಾಡುವರು.

ಯೋಬನು 19:1-22

ಯೋಬನ ಉತ್ತರ

19 ಬಳಿಕ ಯೋಬನು ಹೀಗೆ ಉತ್ತರಕೊಟ್ಟನು:

“ಇನ್ನೆಷ್ಟರವರೆಗೆ ನೀವು ನನ್ನನ್ನು ನೋಯಿಸುವಿರಿ?
    ನಿಮ್ಮ ಮಾತುಗಳಿಂದ ನನ್ನನ್ನು ಜಜ್ಜುವಿರಿ?
ಇದುವರೆಗೆ ನೀವು ನನ್ನನ್ನು ಹತ್ತಾರು ಸಲ ಅವಮಾನ ಮಾಡಿರುವಿರಿ.
    ನೀವು ನಾಚಿಕೆಯಿಲ್ಲದೆ ನನ್ನನ್ನು ಎದುರಿಸುತ್ತೀರಿ!
ಒಂದುವೇಳೆ ನಾನು ಪಾಪಮಾಡಿದ್ದರೂ
    ಆ ತಪ್ಪು ನನ್ನದೇ.
ನಿಮ್ಮನ್ನು ನನಗಿಂತಲೂ ಉತ್ತಮರೆಂದು ತೋರಿಸಿಕೊಳ್ಳಬೇಕೆಂದಿದ್ದೀರಿ;
    ನನ್ನ ತೊಂದರೆಗಳೇ ನನ್ನನ್ನು ದೋಷಿಯೆಂದು ನಿರೂಪಿಸುತ್ತವೆಯೆಂದು ಭಾವಿಸಿಕೊಂಡಿದ್ದೀರಿ.
ಆದರೆ ನನ್ನನ್ನು ದೋಷಿಯೋ ಎಂಬಂತೆ ಮಾಡಿದಾತನು ದೇವರೇ.
    ಆತನು ನನಗೆ ವಿರೋಧವಾಗಿ ಬಲೆಯನ್ನು ಒಡ್ಡಿದ್ದಾನೆ.
‘ನನಗೆ ಹಿಂಸೆಯಾಗುತ್ತಿದೆ’ ಎಂದು ಕೂಗಿಕೊಂಡರೂ ನನಗೆ ಯಾರೂ ಉತ್ತರ ಕೊಡುತ್ತಿಲ್ಲ.
    ನಾನು ಸಹಾಯಕ್ಕಾಗಿ ಗಟ್ಟಿಯಾಗಿ ಕೂಗಿಕೊಂಡರೂ ನ್ಯಾಯ ದೊರೆಯುತ್ತಿಲ್ಲ.
ದೇವರು ನನ್ನ ಮಾರ್ಗವನ್ನು ಮುಚ್ಚಿಬಿಟ್ಟಿದ್ದಾನೆ; ಆದ್ದರಿಂದ ನಾನು ಮುಂದೆ ಹೋಗಲಾರೆ.
    ಆತನು ನನ್ನ ಮಾರ್ಗವನ್ನು ಕತ್ತಲೆಯಲ್ಲಿ ಮರೆಮಾಡಿದ್ದಾನೆ.
ದೇವರು ನನ್ನ ಗೌರವವನ್ನು ತೆಗೆದುಹಾಕಿದ್ದಾನೆ.
    ಆತನು ನನ್ನ ತಲೆಯಿಂದ ಕಿರೀಟವನ್ನು ತೆಗೆದುಹಾಕಿದ್ದಾನೆ.
10 ನಾನು ಸಾಯುವ ತನಕ ದೇವರು ನನ್ನನ್ನು ಎಲ್ಲಾ ಕಡೆಗಳಿಂದಲೂ ಅಪ್ಪಳಿಸಿ ಕೆಡುವುತ್ತಿದ್ದಾನೆ.
    ಬೇರುಗಳ ಸಹಿತ ಕೀಳಲ್ಪಟ್ಟ ಮರದ ಹಾಗೆ
    ಆತನು ನನ್ನ ನಿರೀಕ್ಷೆಯನ್ನು ತೆಗೆದುಹಾಕಿದ್ದಾನೆ.
11 ದೇವರ ಕೋಪವು ನನಗೆ ವಿರೋಧವಾಗಿ ಉರಿಯುತ್ತಿದೆ.
    ಆತನು ನನ್ನನ್ನು ತನ್ನ ಶತ್ರುವೆಂದು ಪರಿಗಣಿಸಿದ್ದಾನೆ.
12 ನನ್ನ ಮೇಲೆ ಆಕ್ರಮಣಮಾಡಲು ದೇವರು ತನ್ನ ಸೈನ್ಯವನ್ನು ಕಳುಹಿಸಿದ್ದಾನೆ.
    ಅವರು ನನಗೆ ವಿರುದ್ಧವಾಗಿ ದಿಬ್ಬಹಾಕಿದ್ದಾರೆ.
    ಅವರು ನನ್ನ ಗುಡಾರದ ಸುತ್ತಲೂ ಪಾಳೆಯ ಮಾಡಿಕೊಂಡಿದ್ದಾರೆ.

13 “ನನ್ನ ಸಹೋದರರು ನನ್ನನ್ನು ತೊರೆದುಬಿಡುವಂತೆ ದೇವರು ಮಾಡಿದ್ದಾನೆ.
    ನಾನು ನನ್ನ ಸ್ನೇಹಿತರಿಗೆಲ್ಲಾ ಅಪರಿಚಿತನಾಗಿದ್ದೇನೆ.
14 ನನ್ನ ಸಂಬಂಧಿಕರು ನನ್ನನ್ನು ತೊರೆದುಬಿಟ್ಟರು.
    ನನ್ನ ಸ್ನೇಹಿತರು ನನ್ನನ್ನು ಮರೆತುಬಿಟ್ಟರು.
15 ನನ್ನ ಮನೆಯಲ್ಲಿರುವ ಸಂದರ್ಶಕರೂ ನನ್ನ ದಾಸಿಯರೂ
    ನನ್ನನ್ನು ಅಪರಿಚಿತನಂತೆ ಮತ್ತು ಪರದೇಶಿಯಂತೆ ಕಾಣುತ್ತಾರೆ.
16 ನಾನು ನನ್ನ ಸೇವಕನನ್ನು ಕರೆದರೂ ಅವನು ನನಗೆ ಉತ್ತರಿಸುವುದಿಲ್ಲ.
    ನಾನು ಸಹಾಯಕ್ಕಾಗಿ ಬೇಡಿಕೊಂಡರೂ ನನ್ನ ಸೇವಕನು ಉತ್ತರ ಕೊಡುವುದಿಲ್ಲ.
17 ನನ್ನ ಹೆಂಡತಿಗೂ ನನ್ನ ಉಸಿರು ಅಸಹ್ಯವಾಗಿದೆ.
    ನನ್ನ ಸ್ವಂತ ಮಕ್ಕಳೂ ನನ್ನನ್ನು ಕಂಡು ಹೇಸಿಗೆಪಡುತ್ತಾರೆ.
18 ಚಿಕ್ಕಮಕ್ಕಳೂ ನನ್ನನ್ನು ಗೇಲಿ ಮಾಡುತ್ತಾರೆ;
    ನನ್ನನ್ನು ಕಂಡಾಗ ನಗುತ್ತಾರೆ.
19 ನನ್ನನ್ನು ನೋಡಿ ನನ್ನ ಆಪ್ತಸ್ನೇಹಿತರೂ ಅಸಹ್ಯಪಡುತ್ತಾರೆ.
    ನಾನು ಯಾರನ್ನು ಪ್ರೀತಿಸಿದೆನೋ ಅವರೂ ನನಗೆ ವಿರೋಧವಾಗಿ ಎದ್ದಿದ್ದಾರೆ.

20 “ನನ್ನ ಶಕ್ತಿಯೆಲ್ಲಾ ಕಳೆದುಹೋಗಿದೆ; ನಾನು ಅಸ್ಥಿಪಂಜರದಂತೆ ಆಗಿರುವೆ.
    ನನ್ನಲ್ಲಿ ಸ್ವಲ್ಪ ಜೀವ ಮಾತ್ರ ಉಳಿದುಕೊಂಡಿದೆ.

21 “ನನ್ನ ಸ್ನೇಹಿತರೇ, ಕರುಣಿಸಿರಿ, ನೀವಾದರೂ ನನ್ನನ್ನು ಕರುಣಿಸಿರಿ.
    ದೇವರ ಹಸ್ತವು ನನ್ನನ್ನು ಹೊಡೆದಿದೆ.
22 ದೇವರು ಹಿಂಸಿಸುವಂತೆ ನೀವೂ ನನ್ನನ್ನು ಯಾಕೆ ಹಿಂಸಿಸುತ್ತೀರಿ?
    ನೀವು ಹಿಂಸೆಪಡಿಸಿದ್ದು ಸಾಕಾಗಲಿಲ್ಲವೇ?

ಎಫೆಸದವರಿಗೆ 2:11-22

ಕ್ರಿಸ್ತನ ಮೂಲಕ ಸಮಾನತ್ವ

11 ನೀವು ಹುಟ್ಟಿದಂದಿನಿಂದ ಅನ್ಯಜನರಾಗಿದ್ದೀರಿ. ನಿಮ್ಮನ್ನು “ಸುನ್ನತಿಯಿಲ್ಲದವರು” ಎಂದು ಯೆಹೂದ್ಯರು ಕರೆಯುತ್ತಾರೆ. ನಿಮ್ಮನ್ನು “ಸುನ್ನತಿಯಿಲ್ಲದವರು” ಎಂದು ಕರೆಯುವ ಯೆಹೂದ್ಯರು ತಮ್ಮ ಬಗ್ಗೆ “ಸುನ್ನತಿಯವರು” ಎಂದು ಹೇಳಿಕೊಳ್ಳುತ್ತಾರೆ. (ಅವರ ಸುನ್ನತಿಯು ಶರೀರದಲ್ಲಿ ಕೈಯಿಂದ ಮಾಡಲ್ಪಡುತ್ತದೆ.) 12 ಪೂರ್ವಕಾಲದಲ್ಲಿ ನೀವು ಕ್ರಿಸ್ತನಿಲ್ಲದವರಾಗಿದ್ದಿರಿ ಎಂಬುದನ್ನು ಜ್ಞಾಪಿಸಿಕೊಳ್ಳಿರಿ. ನೀವು ಇಸ್ರೇಲಿನ ಪ್ರಜೆಗಳಾಗಿರಲಿಲ್ಲ. ದೇವರು ತನ್ನ ಜನರೊಂದಿಗೆ ಮಾಡಿಕೊಂಡಿದ್ದ ವಾಗ್ದಾನಗಳಿಗೆ ಸಂಬಂಧಪಟ್ಟ ಒಡಂಬಡಿಕೆಗಳನ್ನು ನೀವು ಹೊಂದಿರಲಿಲ್ಲ. ನಿಮಗೆ ನಿರೀಕ್ಷೆಯಿರಲಿಲ್ಲ ಮತ್ತು ನೀವು ದೇವರನ್ನು ತಿಳಿದಿರಲಿಲ್ಲ. 13 ಹೌದು, ಒಂದು ಕಾಲದಲ್ಲಿ ನೀವು ದೇವರಿಗೆ ಬಹು ದೂರವಾಗಿದ್ದಿರಿ. ಆದರೆ ಈಗ ನೀವು ಕ್ರಿಸ್ತ ಯೇಸುವಿನ ರಕ್ತದ ಮೂಲಕ ದೇವರಿಗೆ ಸಮೀಪಸ್ಥರಾದಿರಿ.

14 ಕ್ರಿಸ್ತನಿಂದ ಈಗ ನಮಗೆ ಸಮಾಧಾನ ದೊರೆತಿದೆ. ಕ್ರಿಸ್ತನು ಯೆಹೂದ್ಯರನ್ನೂ ಯೆಹೂದ್ಯರಲ್ಲದವರನ್ನೂ ಒಂದೇ ಜನಾಂಗವನ್ನಾಗಿ ಮಾಡಿದ್ದಾನೆ. ಯೆಹೂದ್ಯರೂ ಯೆಹೂದ್ಯರಲ್ಲದವರೂ ತಮ್ಮ ಮಧ್ಯೆ ಒಂದು ಅಡ್ಡಗೋಡೆಯಿದೆಯೋ ಎಂಬಂತೆ ಬೇರ್ಪಟ್ಟಿದ್ದರು. ಅವರು ಒಬ್ಬರನ್ನೊಬ್ಬರು ದ್ವೇಷಿಸಿದರು. ಆದರೆ ಕ್ರಿಸ್ತನು ತನ್ನ ದೇಹವನ್ನೇ ಅರ್ಪಿಸುವುದರ ಮೂಲಕ ದ್ವೇಷವೆಂಬ ಆ ಗೋಡೆಯನ್ನು ಕೆಡವಿದನು. 15 ಯೆಹೂದ್ಯರ ಧರ್ಮಶಾಸ್ತ್ರವು ಅನೇಕ ಆಜ್ಞೆಗಳನ್ನೂ ನಿಯಮಗಳನ್ನೂ ಹೊಂದಿತ್ತು. ಆದರೆ ಕ್ರಿಸ್ತನು ಆ ಧರ್ಮಶಾಸ್ತ್ರವನ್ನು ಅಂತಿಮಗೊಳಿಸಿದನು. ಯೆಹೂದ್ಯರನ್ನು ಮತ್ತು ಯೆಹೂದ್ಯರಲ್ಲದವರನ್ನು ತನ್ನಲ್ಲಿ ಒಂದು ಜನಾಂಗವನ್ನಾಗಿ ಮಾಡಿ ಶಾಂತಿಯನ್ನು ಸ್ಥಾಪಿಸಬೇಕೆಂಬುದೇ ಕ್ರಿಸ್ತನ ಉದ್ದೇಶವಾಗಿತ್ತು. 16 ಈ ಎರಡು ಜನಾಂಗಗಳ ನಡುವೆ ಇದ್ದ ದ್ವೇಷವನ್ನು ಕ್ರಿಸ್ತನು ಶಿಲುಬೆಯ ಮೂಲಕ ಕೊನೆಗೊಳಿಸಿದನು. ಈ ಜನಾಂಗಗಳು ಒಂದೇ ದೇಹವಾದ ಬಳಿಕ ಅವರನ್ನು ದೇವರ ಬಳಿಗೆ ನಡೆಸಬೇಕೆಂಬುದು ಕ್ರಿಸ್ತನ ಬಯಕೆಯಾಗಿತ್ತು. ಶಿಲುಬೆಯ ಮೇಲೆ ಪ್ರಾಣಕೊಡುವುದರ ಮೂಲಕ ಕ್ರಿಸ್ತನು ತನ್ನ ಈ ಬಯಕೆಯನ್ನು ಪೂರೈಸಿದನು. 17 ದೇವರಿಗೆ ದೂರವಾಗಿದ್ದ ನಿಮ್ಮ ಬಳಿಗೂ ಸಮೀಪಸ್ಥರಾಗಿದ್ದವರ ಬಳಿಗೂ ಕ್ರಿಸ್ತನು ಬಂದು ಸಮಾಧಾನದ ಕುರಿತು ಉಪದೇಶಿಸಿದನು. 18 ಹೌದು, ಕ್ರಿಸ್ತನ ಮೂಲಕ ನಾವೆಲ್ಲರೂ ಒಬ್ಬ ಆತ್ಮನಿಂದ ನಮ್ಮ ತಂದೆಯಾದ ದೇವರ ಬಳಿಗೆ ಬರಲು ಶಕ್ತರಾಗಿದ್ದೇವೆ.

19 ಆದ್ದರಿಂದ ಯೆಹೂದ್ಯರಲ್ಲದವರಾದ ನೀವು ಈಗ ವಿದೇಶಿಯರಲ್ಲ ಮತ್ತು ಅನ್ಯಜನರಲ್ಲ. ಈಗ ನೀವು ದೇವರ ಪರಿಶುದ್ಧ ಜನರೊಂದಿಗೆ ಪ್ರಜೆಗಳಾಗಿದ್ದೀರಿ. ನೀವು ದೇವರ ಕುಟುಂಬಕ್ಕೆ ಸೇರಿದವರಾಗಿದ್ದೀರಿ. 20 ವಿಶ್ವಾಸಿಗಳಾದ ನೀವು ದೇವರ ಸ್ವಂತ ಕಟ್ಟಡವಾಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ಆ ಕಟ್ಟಡವು ಕಟ್ಟಲ್ಪಟ್ಟಿದೆ. ಕ್ರಿಸ್ತನೇ ಆ ಕಟ್ಟಡಕ್ಕೆ ಮೂಲೆಗಲ್ಲಾಗಿದ್ದಾನೆ. 21 ಇಡೀ ಕಟ್ಟಡವು ಕ್ರಿಸ್ತನಲ್ಲಿ ಒಂದಾಗಿ ಸೇರಿಕೊಂಡಿದೆ. ಕ್ರಿಸ್ತನೇ ಅದನ್ನು ಬೆಳೆಯಿಸಿ ಪ್ರಭುವಿನಲ್ಲಿ ಪರಿಶುದ್ಧವಾದ ದೇವಾಲಯವನ್ನಾಗಿ ಮಾಡುತ್ತಾನೆ. 22 ನೀವು ಕ್ರಿಸ್ತನಲ್ಲಿ ಇತರ ಜನರೊಂದಿಗೆ (ಯೆಹೂದ್ಯರೊಂದಿಗೆ) ಕಟ್ಟಲ್ಪಡುತ್ತಿದ್ದೀರಿ. ದೇವರು ತನ್ನ ಆತ್ಮನ ಮೂಲಕ ವಾಸಿಸತಕ್ಕ ನಿವಾಸಸ್ಥಾನವಾಗಿ ನಿರ್ಮಿತರಾಗುತ್ತಿದ್ದೀರಿ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International