Revised Common Lectionary (Complementary)
20 ಇದಲ್ಲದೆ ಯೆಹೋವನು, “ಸೊದೋಮ್ ಮತ್ತು ಗೊಮೋರಗಳ ಜನರು ಬಹಳ ಕೆಟ್ಟವರೆಂದು ಅನೇಕ ಸಲ ಕೇಳಿದ್ದೇನೆ. 21 ಆದ್ದರಿಂದ ನಾನು ಕೆಳಗಿಳಿದು ಅಲ್ಲಿಗೆ ಹೋಗಿ ನಾನು ಕೇಳಿದ್ದು ನಿಜವೇ ಎಂದು ಪರೀಕ್ಷಿಸುವೆನು” ಅಂದನು.
22 ಆದ್ದರಿಂದ ಆ ಪುರುಷರು ಸೊದೋಮಿನ ಕಡೆಗೆ ನಡೆಯತೊಡಗಿದರು. ಆದರೆ ಅಬ್ರಹಾಮನು ಯೆಹೋವನ ಎದುರಿನಲ್ಲಿ ನಿಂತುಕೊಂಡಿದ್ದನು. 23 ಅಬ್ರಹಾಮನು ಯೆಹೋವನ ಸಮೀಪಕ್ಕೆ ಬಂದು, “ಯೆಹೋವನೇ, ನೀನು ಕೆಟ್ಟವರನ್ನು ನಾಶಮಾಡುವಾಗ ನೀತಿವಂತರನ್ನು ಸಹ ನಾಶಮಾಡಬೇಕೆಂದಿರುವೆಯೋ? 24 ಒಂದುವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಏನು ಮಾಡುವೆ? ನೀನು ಆ ಪಟ್ಟಣವನ್ನು ನಾಶಮಾಡುವಿಯೋ? ಖಂಡಿತವಾಗಿಯೂ ಇಲ್ಲ! ಅಲ್ಲಿ ಜೀವಿಸುತ್ತಿರುವ ಐವತ್ತು ಮಂದಿ ನೀತಿವಂತರಿಗಾಗಿ ನೀನು ಆ ಪಟ್ಟಣವನ್ನು ಉಳಿಸಿ ಕಾಪಾಡುವೆ. 25 ಖಂಡಿತವಾಗಿಯೂ ನೀನು ಆ ಪಟ್ಟಣವನ್ನು ನಾಶಮಾಡುವುದಿಲ್ಲ. ಕೆಟ್ಟವರನ್ನು ಕೊಲ್ಲುವುದಕ್ಕಾಗಿ ನೀನು ಐವತ್ತು ಮಂದಿ ನೀತಿವಂತರನ್ನು ಕೊಲ್ಲುವುದಿಲ್ಲ. ಒಂದುವೇಳೆ ನೀನು ಕೊಂದರೆ, ಒಳ್ಳೆಯವರೂ ಕೆಟ್ಟವರೂ ಸರಿಸಮಾನರಾಗುವರು. ಅವರಿಬ್ಬರೂ ದಂಡನೆಗೆ ಗುರಿಯಾಗುವರು. ನೀನು ಲೋಕದವರಿಗೆಲ್ಲ ನ್ಯಾಯಾಧಿಪತಿ. ನೀನು ನ್ಯಾಯವಾದದ್ದನ್ನೇ ಮಾಡುವೆ ಎಂದು ನನಗೆ ಗೊತ್ತಿದೆ” ಎಂದು ಹೇಳಿದನು.
26 ಆಮೇಲೆ ಯೆಹೋವನು, “ನಾನು ಸೊದೋಮಿನಲ್ಲಿ ಐವತ್ತು ಮಂದಿ ನೀತಿವಂತರನ್ನು ಕಂಡರೆ, ನಾನು ಇಡೀ ಪಟ್ಟಣವನ್ನೇ ಉಳಿಸಿ ಕಾಪಾಡುವೆನು” ಎಂದನು.
27 ಆಗ ಅಬ್ರಹಾಮನು ಯೆಹೋವನಿಗೆ, “ನಿನಗೆ ನನ್ನನ್ನು ಹೋಲಿಸಿಕೊಂಡರೆ, ನಾನು ಕೇವಲ ಧೂಳು ಮತ್ತು ಬೂದಿ. ಆದರೆ ಈ ಪ್ರಶ್ನೆಯನ್ನೂ ಕೇಳಲು ನನಗೆ ಅವಕಾಶಕೊಡು. 28 ಒಂದುವೇಳೆ ಐದು ಮಂದಿ ಕಡಿಮೆಯಾಗಿದ್ದು ನಲವತ್ತೈದು ಮಂದಿ ಮಾತ್ರ ನೀತಿವಂತರಿದ್ದರೆ ಆ ಪಟ್ಟಣವನ್ನು ನಾಶಮಾಡುವಿಯಾ?” ಎಂದು ಕೇಳಿದನು.
ಅದಕ್ಕೆ ಯೆಹೋವನು ಅವನಿಗೆ, “ನಾನು ನಲವತ್ತೈದು ಮಂದಿ ನೀತಿವಂತರನ್ನು ಕಂಡರೂ ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಎಂದು ಹೇಳಿದನು.
29 ಮತ್ತೆ ಅಬ್ರಹಾಮನು ದೇವರಿಗೆ, “ಕೇವಲ ನಲವತ್ತು ಮಂದಿ ನೀತಿವಂತರನ್ನು ಕಂಡರೆ, ನೀನು ಆ ಪಟ್ಟಣವನ್ನು ನಾಶಮಾಡುವೆಯಾ?” ಎಂದು ಕೇಳಿದನು.
ಯೆಹೋವನು ಅವನಿಗೆ, “ನಲವತ್ತು ಮಂದಿ ನೀತಿವಂತರನ್ನು ಕಂಡರೂ ನಾನು ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಎಂದು ಹೇಳಿದನು.
30 ಆಮೇಲೆ ಅಬ್ರಹಾಮನು, “ಯೆಹೋವನೇ, ನನ್ನ ಮೇಲೆ ಸಿಟ್ಟುಗೊಳ್ಳಬೇಡ. ಈ ಪ್ರಶ್ನೆಯನ್ನೂ ಕೇಳುವೆ: ಆ ಪಟ್ಟಣದಲ್ಲಿ ಕೇವಲ ಮೂವತ್ತು ಮಂದಿ ನೀತಿವಂತರಿದ್ದರೆ ನೀನು ಆ ಪಟ್ಟಣವನ್ನು ನಾಶಮಾಡುವೆಯಾ?” ಎಂದು ಕೇಳಿದನು.
ಯೆಹೋವನು ಅವನಿಗೆ, “ಅಲ್ಲಿ ಮೂವತ್ತು ಮಂದಿ ನೀತಿವಂತರಿದ್ದರೂ ನಾನು ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಅಂದನು.
31 ಆಮೇಲೆ ಅಬ್ರಹಾಮನು, “ನನ್ನ ಯೆಹೋವನು ಏನೂ ತಿಳಿದುಕೊಳ್ಳದಿರಲಿ. ನಾನು ಮತ್ತೊಂದು ಪ್ರಶ್ನೆ ಕೇಳುವೆ. ಅಲ್ಲಿ ಇಪ್ಪತ್ತು ಮಂದಿ ನೀತಿವಂತರಿದ್ದರೆ ಏನು ಮಾಡುವೆ?” ಎಂದು ಕೇಳಿದನು.
ಯೆಹೋವನು ಅವನಿಗೆ, “ಅಲ್ಲಿ ಇಪ್ಪತ್ತು ಮಂದಿ ನೀತಿವಂತರನ್ನು ಕಂಡರೆ ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಎಂದು ಹೇಳಿದನು.
32 ಆಮೇಲೆ ಅಬ್ರಹಾಮನು, “ಯೆಹೋವನೇ, ದಯಮಾಡಿ ನನ್ನ ಮೇಲೆ ಸಿಟ್ಟುಗೊಳ್ಳಬೇಡ. ಇದೊಂದು ಸಲ ಮಾತ್ರ ಪ್ರಶ್ನೆ ಕೇಳುವೆ. ಹತ್ತು ಮಂದಿ ನೀತಿವಂತರನ್ನು ಕಂಡರೆ ಏನು ಮಾಡುವೆ?” ಎಂದು ಕೇಳಿದನು.
ಯೆಹೋವನು ಅವನಿಗೆ, “ನಾನು ಆ ಪಟ್ಟಣದಲ್ಲಿ ಹತ್ತು ಮಂದಿ ನೀತಿವಂತರನ್ನು ಕಂಡರೂ, ಅದನ್ನು ನಾಶಮಾಡುವುದಿಲ್ಲ” ಅಂದನು.
ಸ್ತುತಿಗೀತೆ. ರಚನೆಗಾರ: ದಾವೀದ.
138 ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಕೊಂಡಾಡುವೆನು.
ನಿನ್ನ ಹಾಡುಗಳನ್ನು ಎಲ್ಲಾ ದೇವರುಗಳ ಎದುರಿನಲ್ಲಿ ಹಾಡುವೆನು.
2 ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡಬೀಳುವೆನು.
ನಾನು ನಿನ್ನ ಹೆಸರನ್ನೂ ನಿನ್ನ ಪ್ರೀತಿಯನ್ನೂ ನಿನ್ನ ನಂಬಿಗಸ್ತಿಕೆಯನ್ನೂ ಕೊಂಡಾಡುವೆನು.
ನೀನು ನಿನ್ನ ವಾಕ್ಯವನ್ನು ನೆರವೇರಿಸಿ ನಿನ್ನ ನಾಮಮಹತ್ವವನ್ನು ಹೆಚ್ಚಿಸಿರುವೆ.
3 ನಾನು ಸಹಾಯಕ್ಕಾಗಿ ನಿನಗೆ ಮೊರೆಯಿಟ್ಟಾಗ
ನೀನು ನನಗೆ ಸದುತ್ತರವನ್ನು ದಯಪಾಲಿಸಿದೆ; ನನಗೆ ಬಲವನ್ನು ಅನುಗ್ರಹಿಸಿದೆ.
4 ಯೆಹೋವನೇ, ಭೂರಾಜರುಗಳೆಲ್ಲಾ ನಿನ್ನ ನುಡಿಗಳನ್ನು ಕೇಳಿ
ನಿನ್ನನ್ನು ಕೊಂಡಾಡಬೇಕೆಂಬುದು ನನ್ನ ಅಪೇಕ್ಷೆ.
5 ಅವರೆಲ್ಲರೂ ಯೆಹೋವನ ಮಾರ್ಗವನ್ನು ಹಾಡಿ ಕೊಂಡಾಡುವರು;
ಯಾಕೆಂದರೆ ಯೆಹೋವನ ಮಹಿಮೆಯು ಮಹತ್ವವಾದದ್ದು.
6 ಯೆಹೋವನೇ ಮಹೋನ್ನತನು.
ಆದರೂ ಆತನು ದೀನರಿಗೋಸ್ಕರ ಚಿಂತಿಸುವನು.
ಗರ್ವಿಷ್ಠರ ಕಾರ್ಯಗಳು ಆತನಿಗೆ ಗೊತ್ತಿವೆ.
ಆದರೆ ಆತನು ಅವರಿಗೆ ದೂರವಾಗಿಯೇ ಇರುತ್ತಾನೆ.
7 ಯೆಹೋವನೇ, ನಾನು ಆಪತ್ತಿನಲ್ಲಿದ್ದರೆ, ನನ್ನ ಪ್ರಾಣವನ್ನು ಕಾಪಾಡು.
ನನ್ನ ವೈರಿಗಳು ನನ್ನ ಮೇಲೆ ಕೋಪಗೊಂಡಿದ್ದರೆ, ನನ್ನನ್ನು ಅವರಿಂದ ರಕ್ಷಿಸು.
8 ಯೆಹೋವನೇ, ನಿನ್ನ ವಾಗ್ದಾನಗಳನ್ನು ನೆರವೇರಿಸು.
ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು.
ನಮ್ಮನ್ನು ಸೃಷ್ಟಿಸಿದಾತನು ನೀನೇ. ನಮ್ಮನ್ನು ಕೈಬಿಡಬೇಡ!
ಕ್ರಿಸ್ತನಲ್ಲಿ ನೆಲೆಗೊಂಡಿರಿ
6 ಪ್ರಭುವಾದ ಕ್ರಿಸ್ತ ಯೇಸುವನ್ನು ನೀವು ಸ್ವೀಕರಿಸಿಕೊಂಡಿರುವುದರಿಂದ ಆತನಲ್ಲಿ ನೆಲೆಗೊಂಡಿದ್ದು ಜೀವಿಸಿರಿ. 7 ಕ್ರಿಸ್ತನನ್ನು ಮಾತ್ರ ನೀವು ಅವಲಂಬಿಸಬೇಕು. ಜೀವವೂ ಶಕ್ತಿಯೂ ಆತನಿಂದಲೇ ಬರುತ್ತವೆ. ನಿಮಗೆ ಸತ್ಯವನ್ನು ಉಪದೇಶಿಸಲಾಗಿದೆ. ನೀವು ಆ ಸತ್ಯ ಬೋಧನೆಯಲ್ಲಿ ದೃಢವಾಗಿ ನೆಲೆಗೊಂಡಿರಬೇಕು ಮತ್ತು ದೇವರಿಗೆ ಸಲ್ಲತಕ್ಕ ಕೃತಜ್ಞತಾಸ್ತುತಿಯಿಂದ ತುಂಬಿದವರಾಗಿರಬೇಕು.
8 ಯಾರೂ ನಿಮ್ಮನ್ನು ಮೋಸಕರವಾದ ಮತ್ತು ನಿರರ್ಥಕವಾದ ತತ್ವಜ್ಞಾನ ಬೋಧನೆಯಿಂದ ತಪ್ಪು ದಾರಿಗೆ ನಡೆಸದಂತೆ ಜಾಗ್ರತೆಯಿಂದಿರಿ. ಆ ತತ್ವಜ್ಞಾನಗಳು ಜನರಿಂದ ಬಂದುವೇ ಹೊರತು ಕ್ರಿಸ್ತನಿಂದಲ್ಲ. ಅವು ಈ ಲೋಕದ ಜನರ ನಿರರ್ಥಕ ತತ್ವಗಳು. 9 ದೇವರ ಸರ್ವಸಂಪೂರ್ಣತೆಯು ಕ್ರಿಸ್ತನಲ್ಲಿ ನೆಲೆಗೊಂಡಿದೆ. (ಕ್ರಿಸ್ತನು ಈ ಲೋಕದಲ್ಲಿದ್ದಾಗಲೂ ಸಹ ನೆಲೆಗೊಂಡಿತ್ತು.) 10 ನೀವೆಲ್ಲರೂ ಕ್ರಿಸ್ತನಲ್ಲಿ ಸಂಪೂರ್ಣರಾಗಿದ್ದೀರಿ. ನಿಮಗೆ ಬೇರೇನೂ ಬೇಕಿಲ್ಲ. ಕ್ರಿಸ್ತನು ಎಲ್ಲ ದೊರೆತನಗಳನ್ನು ಮತ್ತು ಅಧಿಕಾರಗಳನ್ನು ಆಳುತ್ತಾನೆ.
11 ಕ್ರಿಸ್ತನಲ್ಲಿ ನೀವು ಬೇರೊಂದು ಸುನ್ನತಿಯನ್ನು ಪಡೆದಿರುವಿರಿ. ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ. ಅಂದರೆ ನಿಮ್ಮ ಪಾಪಾಧೀನಸ್ವಭಾವದಿಂದ ನಿಮಗೆ ಬಿಡುಗಡೆಯಾಯಿತು. ಇದುವೇ ಕ್ರಿಸ್ತನು ಮಾಡುವ ಸುನ್ನತಿ. 12 ನೀವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಕ್ರಿಸ್ತನೊಂದಿಗೆ ಹೂಳಲ್ಪಟ್ಟಿರಿ. ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸುವುದರ ಮೂಲಕ ತೋರಿದ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ನೀವು ಆ ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಮೇಲಕ್ಕೆ ಎದ್ದುಬಂದಿರಿ.
13 ನೀವು ನಿಮ್ಮ ಪಾಪಗಳ ದೆಸೆಯಿಂದ ಮತ್ತು ನಿಮ್ಮ ಪಾಪ ಸ್ವಭಾವದ ಹಿಡಿತದಿಂದ ಇನ್ನೂ ಮುಕ್ತರಾಗದೆ ಇದ್ದುದರಿಂದ ಆತ್ಮಿಕವಾಗಿ ಸತ್ತವರಾಗಿದ್ದಿರಿ. ಆದರೆ ದೇವರು ನಿಮಗೆ ಕ್ರಿಸ್ತನೊಂದಿಗೆ ಜೀವವನ್ನು ದಯಪಾಲಿಸಿದನು. ಆತನು ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದನು. 14 ದೇವರ ನಿಯಮಗಳನ್ನು ಉಲ್ಲಂಘಿಸಿದ್ದರಿಂದ ನಾವು ಅಪರಾಧಿಗಳಾಗಿದ್ದೆವು. ನಮ್ಮ ಮೇಲೆ ಹೊರಿಸಲಾದ ದೋಷಾರೋಪಣೆಯ ಪಟ್ಟಿಯಲ್ಲಿ ನಾವು ಉಲ್ಲಂಘಿಸಿದ ಆಜ್ಞೆಗಳನ್ನೆಲ್ಲ ಲಿಖಿತಗೊಳಿಸಲಾಗಿತ್ತು. ಆದರೆ ದೇವರು ನಮ್ಮ ಅಪರಾಧಗಳನ್ನೆಲ್ಲ ಕ್ಷಮಿಸಿ ಅವುಗಳನ್ನು ಶಿಲುಬೆಗೆ ಜಡಿದನು. 15 ದೇವರು ತನಗೆ ವಿರೋಧವಾಗಿದ್ದ ದೊರೆತನಗಳನ್ನೂ ಅಧಿಕಾರಗಳನ್ನೂ ಸೋಲಿಸಿ, ಅವುಗಳನ್ನು ನಿರಾಯುಧರನ್ನಾಗಿ ಮಾಡಿ ಶಿಲುಬೆಯ ವಿಜಯೋತ್ಸವದಲ್ಲಿ ಅವುಗಳನ್ನು ಇಡೀ ಲೋಕದ ಎದುರಿನಲ್ಲಿ ಸೆರೆಯಾಳುಗಳನ್ನಾಗಿ ಮೆರವಣಿಗೆ ಮಾಡಿದನು.
ಮಾನವ ನಿರ್ಮಿತ ನಿಯಮಗಳನ್ನು ಅನುಸರಿಸಬೇಡಿ
16 ಹೀಗಿರುವುದರಿಂದ ತಿಂದು ಕುಡಿಯುವುದರ ಬಗ್ಗೆ ಇಲ್ಲವೆ ಯೆಹೂದ್ಯರ ಪದ್ಧತಿಗಳ (ಹಬ್ಬಗಳು, ಅಮಾವಾಸ್ಯೆಯ ಆಚರಣೆಗಳು, ಸಬ್ಬತ್ ದಿನಗಳು) ಬಗ್ಗೆ ನಿಮಗೆ ನಿಯಮಗಳನ್ನು ರೂಪಿಸಲು ಯಾರಿಗೂ ಅವಕಾಶ ಕೊಡಬೇಡಿ. 17 ಪೂರ್ವಕಾಲದಲ್ಲಿ ಈ ಸಂಗತಿಗಳೆಲ್ಲ ಮುಂದೆ ಬರಬೇಕಾಗಿದ್ದವುಗಳ ಛಾಯೆಗಳಾಗಿದ್ದವು. ಅವುಗಳ ನಿಜರೂಪವು ಕ್ರಿಸ್ತನಲ್ಲಿ ತೋರಿಬಂದಿತು. 18 ಕೆಲವರು ದೇವದೂತರ ಪೂಜೆಯಲ್ಲಿಯೂ ಅತಿವಿನಯವಂತರಂತೆ ನಟಿಸುವುದರಲ್ಲಿಯೂ ಆಸಕ್ತರಾಗಿದ್ದಾರೆ. ಆ ಜನರು ತಾವು ಕಂಡ ದರ್ಶನಗಳ ಬಗ್ಗೆ ಯಾವಾಗಲೂ ಮಾತನಾಡುತ್ತಿರುತ್ತಾರೆ. “ನೀವು ಇಂಥಿಂಥ ಕಾರ್ಯಗಳನ್ನು ಮಾಡದಿರುವುದರಿಂದ ತಪ್ಪಿತಸ್ಥರಾಗಿದ್ದೀರಿ” ಎಂದು ಆ ಜನರು ನಿಮ್ಮ ಬಗ್ಗೆ ಹೇಳಲು ಅವಕಾಶಕೊಡಬೇಡಿ. ಅವರ ಪ್ರಾಪಂಚಿಕ ಆಲೋಚನೆಯು ಅವರನ್ನು ನಿಷ್ಕಾರಣವಾಗಿ ಗರ್ವದಿಂದ ಉಬ್ಬಿಸುತ್ತದೆ. 19 ಆ ಜನರು ತಮ್ಮನ್ನು ಕ್ರಿಸ್ತನೆಂಬ ಶಿರಸ್ಸಿನ ಅಧೀನಕ್ಕೆ ಒಳಪಡಿಸುವುದಿಲ್ಲ. ಇಡೀ ದೇಹವು ಆತನನ್ನೇ ಅವಲಂಬಿಸಿಕೊಂಡಿದೆ. ಆತನಿಂದಲೇ ದೇಹದ ಅಂಗಾಂಗಗಳು ಇತರ ಅಂಗಗಳ ಬಗ್ಗೆ ಚಿಂತಿಸುತ್ತವೆ ಮತ್ತು ಪರಸ್ಪರ ಸಹಾಯ ಮಾಡುತ್ತವೆ. ಇದರಿಂದ ದೇಹವು ಬಲಗೊಂಡು ಒಂದಾಗಿ ಕೂಡಿಸಲ್ಪಡುತ್ತದೆ. ಹೀಗೆ, ದೇವರ ಇಚ್ಛೆಯಂತೆ ದೇಹವು ಬೆಳೆಯುತ್ತದೆ.
ಪ್ರಾರ್ಥನೆಯ ಕುರಿತು ಯೇಸುವಿನ ಉಪದೇಶ
(ಮತ್ತಾಯ 6:9-15)
11 ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥಿಸುತ್ತಿದ್ದನು. ಯೇಸು ಪ್ರಾರ್ಥನೆ ಮಾಡಿ ಮುಗಿಸಿದಾಗ, ಆತನ ಶಿಷ್ಯರಲ್ಲೊಬ್ಬನು, “ಪ್ರಭುವೇ, ಯೋಹಾನನು ತನ್ನ ಶಿಷ್ಯರಿಗೆ ಪ್ರಾರ್ಥಿಸುವ ವಿಧಾನವನ್ನು ಕಲಿಸಿದಂತೆ, ದಯಮಾಡಿ ನಮಗೂ ಪ್ರಾರ್ಥಿಸುವ ವಿಧಾನವನ್ನು ಹೇಳಿಕೊಡು” ಎಂದನು.
2 ಯೇಸು ಅವರಿಗೆ ಹೀಗೆಂದನು: “ನೀವು ಹೀಗೆ ಪ್ರಾರ್ಥಿಸಿರಿ:
‘ತಂದೆಯೇ, ನಿನ್ನ ನಾಮವು ಯಾವಾಗಲೂ ಪರಿಶುದ್ಧವಾಗಿರಲಿ.
ನಿನ್ನ ರಾಜ್ಯವು ಬರಲಿ.
3 ನಮ್ಮ ಅನುದಿನದ ಆಹಾರವನ್ನು ನಮಗೆ ದಯಪಾಲಿಸು.
4 ನಮಗೆ ತಪ್ಪುಮಾಡಿದವರನ್ನು ನಾವು ಕ್ಷಮಿಸುವಂತೆ
ನಮ್ಮಪಾಪಗಳನ್ನೂ ಕ್ಷಮಿಸು.
ನಮ್ಮನ್ನು ಶೋಧನೆಗೆ ಒಳಪಡಿಸಬೇಡ.’”
ಎಡಬಿಡದೆ ಪ್ರಾರ್ಥಿಸಿ
(ಮತ್ತಾಯ 7:7-11)
5-6 ಆಗ ಯೇಸು ಅವರಿಗೆ, “ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನೊಬ್ಬನ ಮನೆಗೆ ರಾತ್ರಿ ಬಹಳ ತಡವಾಗಿ ಹೋಗಿದ್ದಾನೆ ಎಂದು ಭಾವಿಸಿಕೊಳ್ಳೋಣ. ಅವನು ತನ್ನ ಸ್ನೇಹಿತನಿಗೆ, ‘ನನ್ನ ಗೆಳೆಯನೊಬ್ಬನು ನನ್ನನ್ನು ನೋಡಲು ದೂರದಿಂದ ನಮ್ಮ ಮನೆಗೆ ಬಂದಿದ್ದಾನೆ. ಆದರೆ ಅವನಿಗೆ ಊಟಕ್ಕೆ ಕೊಡಲು ನನಲ್ಲಿ ಏನೂ ಇಲ್ಲ. ದಯಮಾಡಿ ನನಗೆ ಮೂರು ರೊಟ್ಟಿಗಳನ್ನು ಕೊಡು’ ಎಂದು ಕೇಳುತ್ತಾನೆ. 7 ಮನೆಯೊಳಗಿರುವ ಸ್ನೇಹಿತನು, ‘ಹೊರಟುಹೋಗು! ನನಗೆ ತೊಂದರೆ ಕೊಡಬೇಡ! ಬಾಗಿಲು ಮುಚ್ಚಿದೆ! ನಾನು ಮತ್ತು ನನ್ನ ಮಕ್ಕಳು ಮಲಗಿದ್ದೇವೆ. ಈಗ ಎದ್ದು ನಿನಗೆ ರೊಟ್ಟಿ ಕೊಡಲಾರೆ’ ಎಂದು ಉತ್ತರಕೊಡುತ್ತಾನೆ. 8 ಕೇವಲ ಸ್ನೇಹವೊಂದೇ ಅವನನ್ನು ಏಳಿಸಿ ರೊಟ್ಟಿ ಕೊಡುವಂತೆ ಮಾಡಲಾರದೆಂದು ನಾನು ನಿಮಗೆ ಹೇಳುತ್ತೇನೆ. ಆದರೆ ಅವನು ಎಡಬಿಡದೆ ಕೇಳುತ್ತಲೇ ಇದ್ದರೆ, ಅವನು ಎದ್ದು ತನ್ನ ಸ್ನೇಹಿತನಿಗೆ ಬೇಕಾಗಿರುವ ರೊಟ್ಟಿಯನ್ನು ಖಂಡಿತವಾಗಿ ಕೊಡುವನು. 9 ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು. ಹುಡುಕಿರಿ, ಆಗ ನೀವು ಕಂಡುಕೊಳ್ಳುವಿರಿ. ತಟ್ಟಿರಿ, ಆಗ ನಿಮಗೆ ಬಾಗಿಲು ತೆರೆಯುವುದು. 10 ಹೌದು, ಎಡಬಿಡದೆ ಬೇಡಿಕೊಳ್ಳುವವನಿಗೆ ದೊರೆಯುವುದು. ಎಡಬಿಡದೆ ಹುಡುಕುವವನು ಕಂಡುಕೊಳ್ಳುವನು. ಒಬ್ಬನು ಎಡಬಿಡದೆ ತಟ್ಟುತ್ತಿದ್ದರೆ, ಅವನಿಗೆ ಬಾಗಿಲು ತೆರೆಯಲ್ಪಡುವುದು. 11 ನಿಮ್ಮಲ್ಲಿ ಎಷ್ಟು ಜನರು ತಂದೆಗಳಾಗಿದ್ದೀರಿ? ನಿಮ್ಮ ಮಗನು ಮೀನನ್ನು ಕೇಳಿದರೆ, ನೀವು ಅವನಿಗೆ ಹಾವನ್ನು ಕೊಡುವಿರೋ? ಇಲ್ಲ! ನೀವು ಮೀನನ್ನೇ ಕೊಡುತ್ತೀರಿ. 12 ನಿಮ್ಮ ಮಗನು ಮೊಟ್ಟೆಯನ್ನು ಕೇಳಿದರೆ, ನೀವು ಅವನಿಗೆ ಚೇಳನ್ನು ಕೊಡುವಿರೋ? ಇಲ್ಲ! 13 ನೀವು ಇತರ ಜನರಂತೆ ಕೆಟ್ಟವರಾಗಿದ್ದೀರಿ. ಆದರೆ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡುತ್ತೀರಿ. ಅದೇ ರೀತಿಯಲ್ಲಿ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ತನ್ನನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮನನ್ನು ಖಂಡಿತವಾಗಿ ಕೊಡುತ್ತಾನೆ” ಎಂದು ಹೇಳಿದನು.
Kannada Holy Bible: Easy-to-Read Version. All rights reserved. © 1997 Bible League International