Print Page Options
Previous Prev Day Next DayNext

Revised Common Lectionary (Complementary)

Daily Bible readings that follow the church liturgical year, with thematically matched Old and New Testament readings.
Duration: 1245 days
Kannada Holy Bible: Easy-to-Read Version (KERV)
Version
ಆದಿಕಾಂಡ 15:1-6

ದೇವರು ಅಬ್ರಾಮನೊಡನೆ ಮಾಡಿಕೊಂಡ ಒಡಂಬಡಿಕೆ

15 ಈ ಸಂಗತಿಗಳಾದ ಮೇಲೆ, ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ಸಂದೇಶ ಬಂದಿತು. ದೇವರು ಅವನಿಗೆ, “ಅಬ್ರಾಮನೇ ಭಯಪಡಬೇಡ; ನಾನೇ ನಿನಗೆ ಗುರಾಣಿಯಾಗಿದ್ದೇನೆ. ನಾನು ನಿನಗೆ ದೊಡ್ಡ ಪ್ರತಿಫಲವನ್ನು ಕೊಡುತ್ತೇನೆ” ಎಂದು ಹೇಳಿದನು.

ಅದಕ್ಕೆ ಅಬ್ರಾಮನು, “ದೇವರಾದ ಯೆಹೋವನೇ, ನೀನು ನನಗೆ ಏನೇ ಕೊಟ್ಟರೂ ನನಗೆ ಸಂತೋಷವಾಗುವುದಿಲ್ಲ. ಯಾಕೆಂದರೆ, ನನಗೆ ಮಗನೇ ಇಲ್ಲ. ಆದ್ದರಿಂದ ನಾನು ಸತ್ತಮೇಲೆ ನನ್ನ ಆಸ್ತಿಯೆಲ್ಲ ನನ್ನ ಸೇವಕನಾದ ದಮಸ್ಕದ ಎಲೀಯೆಜರನ ಪಾಲಾಗುವುದು” ಎಂದು ಹೇಳಿದನು. ಮತ್ತೆ ಅಬ್ರಾಮನು, “ನೀನು ನನಗೆ ಮಗನನ್ನೇ ಕೊಟ್ಟಿಲ್ಲ. ಆದ್ದರಿಂದ ನನ್ನ ಮನೆಯಲ್ಲಿ ಹುಟ್ಟಿದ ಸೇವಕನೊಬ್ಬನು ನನಗಿರುವುದನ್ನೆಲ್ಲ ಪಡೆದುಕೊಳ್ಳುವನು” ಎಂದು ಹೇಳಿದನು.

ಆಗ ಯೆಹೋವನು ಅಬ್ರಾಮನಿಗೆ, “ನಿನ್ನ ಆಸ್ತಿಯನ್ನೆಲ್ಲ ಪಡೆದುಕೊಳ್ಳುವವನು ನಿನ್ನ ಸೇವಕನಲ್ಲ. ನೀನೇ ಮಗನನ್ನು ಪಡೆಯುವೆ; ನಿನ್ನ ಮಗನೇ ನಿನ್ನ ಆಸ್ತಿಯನ್ನೆಲ್ಲಾ ಪಡೆಯುವನು” ಎಂದು ಹೇಳಿದನು.

ನಂತರ ದೇವರು ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು ಅವನಿಗೆ, “ಆಕಾಶದ ಕಡೆಗೆ ಕಣ್ಣೆತ್ತಿ ನಕ್ಷತ್ರಗಳನ್ನು ನೋಡು. ನೀನು ಲೆಕ್ಕ ಮಾಡಲಾರದಷ್ಟು ನಕ್ಷತ್ರಗಳಿವೆ. ಮುಂದಿನ ಕಾಲದಲ್ಲಿ ನಿನ್ನ ಕುಟುಂಬವು ಅದೇ ರೀತಿಯಲ್ಲಿರುವುದು” ಎಂದು ಹೇಳಿದನು.

ಅಬ್ರಾಮನು ಯೆಹೋವನನ್ನು ನಂಬಿದನು. ಆ ನಂಬಿಕೆಯ ನಿಮಿತ್ತವೇ ಯೆಹೋವನು ಅಬ್ರಾಮನನ್ನು ನೀತಿವಂತನೆಂದು ಪರಿಗಣಿಸಿದನು.

ಕೀರ್ತನೆಗಳು 33:12-22

12 ಯಾರಿಗೆ ಯೆಹೋವನು ದೇವರಾಗಿದ್ದಾನೋ ಅವರೇ ಧನ್ಯರು.
    ಯಾಕೆಂದರೆ ಆತನು ಅವರನ್ನು ಸ್ವಕೀಯರನ್ನಾಗಿ ಆರಿಸಿಕೊಂಡಿದ್ದಾನೆ.
13 ಯೆಹೋವನು ಪರಲೋಕದಿಂದ
    ಮನುಷ್ಯರನ್ನು ದೃಷ್ಟಿಸಿ ನೋಡುವನು.
14 ಆತನು ತನ್ನ ಮಹಾಸಿಂಹಾಸನದಿಂದ
    ಭೂನಿವಾಸಿಗಳೆಲ್ಲರನ್ನು ನೋಡುವನು.
15 ಅವರೆಲ್ಲರ ಮನುಸ್ಸುಗಳನ್ನು ಸೃಷ್ಟಿಸಿದವನು ಆತನೇ.
    ಅವರೆಲ್ಲರ ಆಲೋಚನೆಗಳು ಆತನಿಗೆ ತಿಳಿದಿವೆ.
16 ಮಹಾಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ.
    ಭುಜಬಲದಿಂದಲೇ ಯಾವ ಯುದ್ಧವೀರನೂ ಸುರಕ್ಷಿತನಾಗಿರಲಾರನು.
17 ಯುದ್ಧದಲ್ಲಿ ದೊರೆಯುವ ಜಯ ಕುದುರೆಗಳಿಂದಲ್ಲ.
    ಅವುಗಳ ಬಲವು ನಿನ್ನನ್ನು ರಕ್ಷಿಸಲಾರದು.
18 ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಲಕ್ಷಿಸುವನು.
    ಆತನ ಶಾಶ್ವತವಾದ ಪ್ರೀತಿಯು ಆತನ ಭಕ್ತರನ್ನು ಕಾಪಾಡುವುದು.
19 ಅವರನ್ನು ಸಾವಿನಿಂದ ರಕ್ಷಿಸುವಾತನು ಆತನೇ.
    ಅವರು ಹಸಿವೆಯಿಂದಿರುವಾಗ ಆತನು ಅವರಿಗೆ ಶಕ್ತಿಕೊಡುವನು.
20 ಆದ್ದರಿಂದ ಯೆಹೋವನಿಗಾಗಿಯೇ ಕಾದುಕೊಂಡಿರುತ್ತೇವೆ.
    ಆತನೇ ನಮ್ಮ ಸಹಾಯಕನೂ ಗುರಾಣಿಯೂ ಆಗಿದ್ದಾನೆ.
21 ದೇವರು ನನ್ನನ್ನು ಸಂತೋಷಗೊಳಿಸುವನು.
    ನಾನು ಆತನ ಪರಿಶುದ್ಧ ಹೆಸರಿನಲ್ಲಿಯೇ ಭರವಸವಿಟ್ಟಿದ್ದೇನೆ.
22 ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ.
    ನಿನ್ನ ಶಾಶ್ವತವಾದ ಪ್ರೀತಿಯು ನಮ್ಮ ಮೇಲಿರಲಿ.

ಇಬ್ರಿಯರಿಗೆ 11:1-3

ನಂಬಿಕೆ

11 ನಂಬಿಕೆ ಎಂದರೆ ನಾವು ನಿರೀಕ್ಷೆಯಿಂದಿರುವ ಸಂಗತಿಗಳಲ್ಲಿ ಭರವಸದಿಂದಿರುವುದೂ ನಮ್ಮ ಕಣ್ಣಿಗೆ ಕಾಣದಿರುವುದನ್ನು ನಿಜವೆಂದು ತಿಳಿದುಕೊಳ್ಳುವುದೂ ಆಗಿದೆ. ಬಹಳ ಹಿಂದಿನ ಕಾಲದಲ್ಲಿ ಜೀವಿಸಿದ್ದ ಜನರಲ್ಲಿ ಈ ರೀತಿಯ ನಂಬಿಕೆಯಿದ್ದುದರಿಂದ ದೇವರು ಅವರ ವಿಷಯದಲ್ಲಿ ಸಂತೋಷಪಟ್ಟನು.

ದೇವರು ತನ್ನ ಆಜ್ಞೆಯಿಂದ ಈ ಲೋಕವನ್ನು ಸೃಷ್ಟಿಸಿದನೆಂಬುದನ್ನು ಅರ್ಥಮಾಡಿಕೊಳ್ಳಲು ನಂಬಿಕೆ ನಮಗೆ ಸಹಾಯ ಮಾಡುತ್ತದೆ. ಹೇಗೆಂದರೆ ನಮ್ಮ ಕಣ್ಣಿಗೆ ಕಾಣುವಂಥ ವಸ್ತುಗಳಿಂದ ಈ ಜಗತ್ತು ಸೃಷ್ಟಿಯಾಗಲಿಲ್ಲ.

ಇಬ್ರಿಯರಿಗೆ 11:8-16

ದೇವರು ತಾನು ಕೊಡುತ್ತೇನೆಂದು ವಾಗ್ದಾನ ಮಾಡಿದ್ದ ಸ್ಥಳಕ್ಕೆ ಪ್ರಯಾಣ ಮಾಡಬೇಕೆಂದು ಅಬ್ರಹಾಮನನ್ನು ಕರೆದನು. ಆ ಸ್ಥಳವು ಎಲ್ಲಿದೆಯೆಂಬುದು ಅವನಿಗೆ ತಿಳಿದಿರಲಿಲ್ಲ. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ, ದೇವರಿಗೆ ವಿಧೇಯನಾಗಿ ಪ್ರಯಾಣ ಮಾಡಲಾರಂಭಿಸಿದನು. ದೇವರು ಕೊಡುವುದಾಗಿ ವಾಗ್ದಾನ ಮಾಡಿದ್ದ ದೇಶದಲ್ಲಿ ಅವನು ಪ್ರವಾಸಿಗನಂತೆ ವಾಸಮಾಡಿದ್ದು ನಂಬಿಕೆಯಿಂದಲೇ. ಅದೇ ವಾಗ್ದಾನಕ್ಕೆ ಸಹ ಭಾದ್ಯರಾಗಿದ್ದ ಇಸಾಕನೂ ಯಾಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು. 10 ಅಬ್ರಹಾಮನು ಶಾಶ್ವತವಾದ ಅಡಿಪಾಯಗಳುಳ್ಳ ನಗರಕ್ಕಾಗಿ ಕಾದಿದ್ದನು. ದೇವರೇ ಸಂಕಲ್ಪಿಸಿ, ನಿರ್ಮಿಸಿದ ನಗರಕ್ಕಾಗಿ ಅವನು ಕಾದಿದ್ದನು.

11 ಅಬ್ರಹಾಮನು ಮಕ್ಕಳನ್ನು ಪಡೆಯಲಾಗದಷ್ಟು ವೃದ್ಧನಾಗಿದ್ದನು. ಸಾರಳು ಮಕ್ಕಳನ್ನು ಪಡೆಯಲು ಸಮರ್ಥಳಾಗಿರಲಿಲ್ಲ. ಆದರೆ ಅಬ್ರಹಾಮನಿಗೆ ದೇವರಲ್ಲಿ ನಂಬಿಕೆಯಿದ್ದುದರಿಂದ, ಅವರು ಮಕ್ಕಳನ್ನು ಪಡೆಯಲು ಸಮರ್ಥರಾಗುವಂತೆ ದೇವರು ಮಾಡಿದನು. 12 ಅವನು ಮೃತಪ್ರಾಯನಾಗಿದ್ದವನಂತೆ ವೃದ್ಧನಾಗಿದ್ದರೂ ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಉಸುಬಿನಂತೆಯೂ ಅಸಂಖ್ಯಾತವಾಗಿ ಮಕ್ಕಳು ಹುಟ್ಟಿದರು.

13 ಈ ಮಹಾಪುರಷರೆಲ್ಲರೂ ತಾವು ಸಾಯುವವರೆಗೂ ನಂಬಿಕೆಯುಳ್ಳವರಾಗಿದ್ದರು. ದೇವರು ತನ್ನ ಜನರಿಗೆ ವಾಗ್ದಾನ ಮಾಡಿದ್ದವುಗಳನ್ನು ಆ ಜನರು ಪಡೆಯಲಿಲ್ಲ. ಮುಂದೆ ಬಹುಕಾಲದ ನಂತರ ಬರಲಿದ್ದ ಅವುಗಳನ್ನು ನೋಡಿ ಅವರು ಸಂತೋಷಗೊಂಡರು. ಅವರು ತಾವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಅಪರಿಚಿತರಂತೆ ಇದ್ದೇವೆ ಎಂಬುದನ್ನು ಒಪ್ಪಿಕೊಂಡರು. 14 ಅವರು ಹಾಗೆ ಒಪ್ಪಿಕೊಂಡಿದ್ದರಿಂದ ತಾವು ಸ್ವದೇಶಕ್ಕಾಗಿ ಕಾದಿರುವುದಾಗಿ ತೋರ್ಪಡಿಸಿಕೊಂಡಂತಾಯಿತು. 15 ಆ ಜನರು ತಾವು ಬಿಟ್ಟುಬಂದ ದೇಶದ ಮೇಲೇನಾದರೂ ಮನಸ್ಸಿಟ್ಟಿದ್ದರೆ, ಅವರು ಮರಳಿಹೋಗುತ್ತಿದ್ದರು. 16 ಆದರೆ ಆ ಜನರು ಉತ್ತಮ ದೇಶವಾದ ಪರಲೋಕಕ್ಕಾಗಿ ಕಾದಿದ್ದರು. ಆದ್ದರಿಂದ ದೇವರು ತನ್ನನ್ನು ಅವರ ದೇವರೆಂದು ಹೇಳಿಕೊಳ್ಳಲು ನಾಚಿಕೆಪಡದೆ ಅವರಿಗಾಗಿ ಒಂದು ನಗರವನ್ನು ಸಿದ್ಧಪಡಿಸಿದನು.

ಲೂಕ 12:32-40

ಹಣದಲ್ಲಿ ಭರವಸೆ ಇಡಬೇಡಿ

32 “ಚಿಕ್ಕ ಮಂದೆಯೇ, ಹೆದರಬೇಡ, ನಿಮಗೆ ರಾಜ್ಯವನ್ನು ಕೊಡಲು ನಿಮ್ಮ ತಂದೆ ಬಯಸಿದ್ದಾನೆ. 33 ನಿಮ್ಮಲ್ಲಿರುವ ಆಸ್ತಿಯನ್ನು ಮಾರಿ, ಬಂದ ಹಣವನ್ನು ಕೊರತೆಯಲ್ಲಿರುವ ಜನರಿಗೆ ಕೊಡಿರಿ. ಈ ಲೋಕದ ಐಶ್ವರ್ಯ ಶಾಶ್ವತವಲ್ಲ. ಆದ್ದರಿಂದ ಶಾಶ್ವತವಾದ ಐಶ್ವರ್ಯವನ್ನು ಗಳಿಸಿಕೊಳ್ಳಿರಿ. ಲಯವಾಗದ ಸಂಪತ್ತನ್ನು ಪರಲೋಕದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಆ ಭಂಡಾರವನ್ನು ಕಳ್ಳರು ಕದಿಯಲಾಗುವುದಿಲ್ಲ ಮತ್ತು ಹುಳಗಳು ನಾಶಮಾಡಲಾಗುವುದಿಲ್ಲ. 34 ನಿಮ್ಮ ಭಂಡಾರ ಎಲ್ಲಿದೆಯೋ ಅಲ್ಲಿಯೇ ನಿಮ್ಮ ಹೃದಯವೂ ಇರುತ್ತದೆ.

ಯಾವಾಗಲೂ ಸಿದ್ಧವಾಗಿರಿ

(ಮತ್ತಾಯ 24:42-44)

35 “ಉಡುಪನ್ನು ಧರಿಸಿಕೊಂಡು ಪೂರ್ಣಸಿದ್ಧರಾಗಿರಿ! ನಿಮ್ಮ ದೀಪಗಳು ಉರಿಯುತ್ತಿರಲಿ. 36 ಮದುವೆಯ ಔತಣದಿಂದ ಮನೆಗೆ ಮರಳಿಬರುವ ಯಜಮಾನನನ್ನು ಎದುರುನೋಡುತ್ತಿರುವ ಸೇವಕರಂತಿರಿ. ಯಜಮಾನನು ಬಂದು ಬಾಗಿಲನ್ನು ತಟ್ಟಿದಾಗ ಸೇವಕರು ಬಾಗಿಲನ್ನು ತೆರೆಯುತ್ತಾರೆ. 37 ಆ ಸೇವಕರೇ ಧನ್ಯರು. ಏಕೆಂದರೆ, ಅವರು ಸಿದ್ಧರಾಗಿದ್ದು ತನಗೋಸ್ಕರ ಕಾಯುತ್ತಿದ್ದುದನ್ನು ಯಜಮಾನನು ನೋಡುತ್ತಾನೆ. ನಾನು ನಿಮಗೆ ಸತ್ಯವಾಗಿ ಹೇಳುವುದೇನೆಂದರೆ, ಆಗ ಯಜಮಾನನು ತಾನೇ ಸೇವಕರ ಉಡುಪನ್ನು ಧರಿಸಿಕೊಂಡು, ಆ ಸೇವಕರನ್ನು ಕುಳ್ಳಿರಿಸಿ, ಅವರಿಗೆ ಊಟ ಬಡಿಸುತ್ತಾನೆ. 38 ಆ ಆಳುಗಳು ತಮ್ಮ ಯಜಮಾನನಿಗಾಗಿ ಮಧ್ಯರಾತ್ರಿಯವರೆಗೆ ಅಥವಾ ಇನ್ನೂ ಹೆಚ್ಚು ಸಮಯದವರೆಗೆ ಎಚ್ಚರದಿಂದ ಇರಬೇಕಾಗಬಹುದು. ಆದರೆ ಯಜಮಾನನು ಬಂದು, ಇನ್ನೂ ಎಚ್ಚರದಿಂದಿರುವ ಅವರನ್ನು ಕಂಡಾಗ ಅವರಿಗೆ ಸಂತೋಷವಾಗುವುದು.

39 “ಇದು ನಿಮ್ಮ ನೆನಪಿನಲ್ಲಿರಲಿ: ಕಳ್ಳನು ಬರುವ ಗಳಿಗೆಯು ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ! 40 ಅಂತೆಯೇ, ನೀವೂ ಸಿದ್ಧರಾಗಿರಿ! ನೀವು ನಿರೀಕ್ಷಿಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುವನು!”

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International