Print Page Options
Previous Prev Day Next DayNext

Revised Common Lectionary (Complementary)

Daily Bible readings that follow the church liturgical year, with thematically matched Old and New Testament readings.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 146

146 ಯೆಹೋವನಿಗೆ ಸ್ತೋತ್ರವಾಗಲಿ!
    ನನ್ನ ಮನವೇ, ಯೆಹೋವನನ್ನು ಸ್ತುತಿಸು!
ನನ್ನ ಜೀವಮಾನವೆಲ್ಲಾ ಯೆಹೋವನನ್ನು ಸ್ತುತಿಸುವೆನು;
    ಆತನನ್ನು ಸಂಕೀರ್ತಿಸುವೆನು.
ಸಹಾಯಕ್ಕಾಗಿ ನಿಮ್ಮ ನಾಯಕರುಗಳನ್ನು ಅವಲಂಬಿಸಿಕೊಳ್ಳಬೇಡಿ.
    ಮನುಷ್ಯರಲ್ಲಿ ಭರವಸವಿಡಬೇಡಿ, ಅವರು ನಿಮ್ಮನ್ನು ರಕ್ಷಿಸಲಾರರು.
ಮನುಷ್ಯರು ಸತ್ತು ಸಮಾಧಿಗೆ ಸೇರುವರು;
    ಆಗ ನಿಮಗೆ ಸಹಾಯಮಾಡಬೇಕೆಂಬ ಅವರ ಆಲೋಚನೆಗಳೆಲ್ಲಾ ಅಳಿದುಹೋಗುತ್ತವೆ.
ಯಾರಿಗೆ ದೇವರು ಸಹಾಯಕನೋ,
    ಯಾರು ತಮ್ಮ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದಾರೋ, ಅವರೇ ಭಾಗ್ಯವಂತರು.
ಯೆಹೋವನು ಆಕಾಶವನ್ನೂ ಭೂಮಿಯನ್ನೂ
    ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದನು.
ಆತನು ಅವುಗಳನ್ನು ಶಾಶ್ವತವಾಗಿ ಸಂರಕ್ಷಿಸುವನು.
ಹಿಂಸೆಗೆ ಗುರಿಯಾಗಿರುವವರಿಗೆ ನ್ಯಾಯವನ್ನೂ;
    ಹಸಿದವರಿಗೆ ಆಹಾರವನ್ನೂ ಕೊಡುವವನು ಆತನೇ.
ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುವನು.
    ಯೆಹೋವನು ಕುರುಡರಿಗೆ ದೃಷ್ಟಿಕೊಡುವನು.
ಯೆಹೋವನು ಕುಗ್ಗಿಹೋದವರನ್ನು ಉದ್ಧರಿಸುವನು.
    ಯೆಹೋವನು ನೀತಿವಂತರನ್ನು ಪ್ರೀತಿಸುವನು.
ಯೆಹೋವನು ನಮ್ಮ ದೇಶದಲ್ಲಿ ವಾಸವಾಗಿರುವ ವಿದೇಶಿಯರನ್ನು ಕಾಪಾಡುತ್ತಾನೆ.
    ಆತನು ವಿಧವೆಯರನ್ನೂ ಅನಾಥರನ್ನೂ ಪರಿಪಾಲಿಸುತ್ತಾನೆ.
    ಆದರೆ ಆತನು ದುಷ್ಟರ ಆಲೋಚನೆಗಳನ್ನು ನಾಶಮಾಡುವನು.
10 ಯೆಹೋವನು ಸದಾಕಾಲ ಆಳುವನು!
    ಚೀಯೋನೇ, ನಿನ್ನ ದೇವರು ಶಾಶ್ವತವಾಗಿ ಆಳುವನು!

ಯೆಹೋವನಿಗೆ ಸ್ತೋತ್ರವಾಗಲಿ!

ಜ್ಞಾನೋಕ್ತಿಗಳು 22:2-16

ಐಶ್ವರ್ಯವಂತರಿಗೂ ಬಡವರಿಗೂ ಯಾವ ವ್ಯತ್ಯಾಸವಿಲ್ಲ. ಯಾಕೆಂದರೆ ಎಲ್ಲರನ್ನು ನಿರ್ಮಿಸಿದಾತನು ಯೆಹೋವನೇ.

ಜ್ಞಾನಿಗಳು ಕೇಡನ್ನು ಕಂಡು ದೂರವಾಗುತ್ತಾರೆ. ಮೂಢರಾದರೋ ನೇರವಾಗಿ ಹೋಗಿ ಆಪತ್ತಿಗೀಡಾಗುವರು.

ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದು ದೀನತೆಯಿಂದಿರು; ಆಗ ನೀನು ಐಶ್ವರ್ಯ, ಸನ್ಮಾನ ಮತ್ತು ನಿಜಜೀವವನ್ನು ಹೊಂದಿಕೊಳ್ಳುವೆ.

ವಕ್ರಬುದ್ಧಿಯುಳ್ಳವರು ಅನೇಕ ಆಪತ್ತುಗಳಿಗೆ ಸಿಕ್ಕಿಕ್ಕೊಂಡಿದ್ದಾರೆ. ಆದರೆ ತನ್ನ ಆತ್ಮದ ಬಗ್ಗೆ ಚಿಂತಿಸುವವನು ಆ ಆಪತ್ತುಗಳಿಂದ ದೂರವಿರುವನು.

ಮಗನಿಗೆ ಬಾಲ್ಯದಲ್ಲಿಯೇ ಒಳ್ಳೆಯ ಮಾರ್ಗವನ್ನು ಉಪದೇಶಿಸು. ಅವನು ಬೆಳೆದು ದೊಡ್ಡವನಾದಾಗ ಅದೇ ರೀತಿಯಲ್ಲಿ ಜೀವಿಸುವನು.

ಬಡವನು ಐಶ್ವರ್ಯವಂತನಿಗೆ ಗುಲಾಮನಾಗಿದ್ದಾನೆ. ಸಾಲ ತೆಗೆದುಕೊಳ್ಳುವವನು ಸಾಲಕೊಡುವವನಿಗೆ ಸೇವಕನಾಗಿದ್ದಾನೆ.

ಕೇಡನ್ನು ಬಿತ್ತುವವನು ಕೇಡನ್ನು ಕೊಯ್ಯುವನು. ಅವನ ದುಷ್ಟಶಕ್ತಿಯು ನಾಶವಾಗುವುದು.

ಉದಾರಿಯು ತನ್ನ ಆಹಾರವನ್ನು ಬಡವರೊಂದಿಗೆ ಹಂಚಿಕೊಳ್ಳುವುದರಿಂದ ಆಶೀರ್ವಾದ ಹೊಂದುವನು.

10 ದುರಾಭಿಮಾನಿಯನ್ನು ಬಲವಂತವಾಗಿ ಹೊರಗಟ್ಟಿ. ಆಗ ಜಗಳವಾಗಲಿ ವಾದಗಳಾಗಲಿ ಅವಮಾನಗಳಾಗಲಿ ಇರುವುದಿಲ್ಲ.

11 ನೀನು ಶುದ್ಧಹೃದಯವನ್ನೂ ಸವಿಮಾತುಗಳನ್ನೂ ಪ್ರೀತಿಸಿದರೆ ರಾಜನು ನಿನಗೆ ಸ್ನೇಹಿತನಾಗುವನು.

12 ಯೆಹೋವನು ಜ್ಞಾನಿಗಳ ಮೇಲೆ ಲಕ್ಷ್ಯವಿಟ್ಟು ಕಾಪಾಡುವನು; ವಂಚಕರ ಮಾತುಗಳನ್ನಾದರೋ ನಾಶಪಡಿಸುವನು.

13 “ನಾನು ಕೆಲಸಕ್ಕೆ ಹೋಗಲಾರೆ. ಹೊರಗಡೆ ಸಿಂಹವಿದೆ. ಅದು ನನ್ನನ್ನು ಕೊಲ್ಲುತ್ತದೆ” ಎನ್ನುತ್ತಾನೆ ಸೋಮಾರಿ.

14 ಕಾಮುಕಿಯ ಬಾಯಿ ಆಳವಾದ ಗುಂಡಿಯಂತಿದೆ. ಯೆಹೋವನಿಂದ ಶಪಿಸಲ್ಪಟ್ಟವರು ಆ ಗುಂಡಿಯೊಳಗೆ ಬೀಳುವರು.

15 ಮಕ್ಕಳು ಮೂಢಕಾರ್ಯಗಳನ್ನು ಮಾಡುವರು. ನೀವು ಅವರನ್ನು ಶಿಕ್ಷಿಸಿದರೆ, ಅವುಗಳನ್ನು ಮಾಡಬಾರದೆಂದು ಅವರಿಗೆ ಗೊತ್ತಾಗುವುದು.

16 ಐಶ್ವರ್ಯವಂತರಾಗಲು ಬಡವರನ್ನು ಹಿಂಸಿಸುವವರಿಗೂ ಐಶ್ವರ್ಯವಂತರಿಗೆ ಉಡುಗೊರೆಗಳನ್ನು ಕೊಡುವವರಿಗೂ ಕೊರತೆಯೇ ಗತಿ.

2 ಕೊರಿಂಥದವರಿಗೆ 8:8-15

ನೀವು ಕೊಡಬೇಕೆಂದು ನಾನು ಆಜ್ಞಾಪಿಸುತ್ತಿಲ್ಲ. ಆದರೆ ನಿಮ್ಮ ಪ್ರೀತಿಯು ನಿಜವಾದ ಪ್ರೀತಿಯೇ ಎಂಬುದನ್ನು ನಾನು ನೋಡಬಯಸುತ್ತೇನೆ. ಸಹಾಯ ಮಾಡಲು ಇತರ ಜನರಿಗಿರುವ ನಿಜವಾದ ಬಯಕೆಯನ್ನು ನಿಮಗೆ ತೋರಿಸುವುದರ ಮೂಲಕವಾಗಿ ನಾನು ನಿಮ್ಮನ್ನು ಪರೀಕ್ಷಿಸುತ್ತೇನೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಿದೆ. ಕ್ರಿಸ್ತನು ದೇವರೊಂದಿಗೆ ಶ್ರೀಮಂತಿಕೆಯಲ್ಲಿದ್ದರೂ ನಿಮಗೋಸ್ಕರವಾಗಿ ಬಡವನಾದದ್ದು ನಿಮಗೆ ಗೊತ್ತಿದೆ. ನೀವು ಶ್ರೀಮಂತರಾಗಬೇಕೆಂದು ಕ್ರಿಸ್ತನು ಬಡವನಾದನು.

10 ನಾನು ನಿಮಗೆ ಹೇಳುವುದೇನೆಂದರೆ: ಕಳೆದ ವರ್ಷ ಕೊಡುವುದರಲ್ಲಿ ನೀವೇ ಮೊದಲಿಗರಾಗಿದ್ದಿರಿ ಮತ್ತು ಮೊಟ್ಟಮೊದಲನೆಯದಾಗಿ ಕೊಟ್ಟವರು ನೀವೇ. 11 ಆದ್ದರಿಂದ ನೀವು ಆರಂಭಿಸಿದ ಕಾರ್ಯವನ್ನು ಈಗ ಪೂರ್ಣಗೊಳಿಸಿರಿ. ಆಗ, ನಿಮ್ಮ ಕಾರ್ಯ ಮತ್ತು ನಿಮ್ಮ ಸಿದ್ಧಮನಸ್ಸು ಸರಿಸಮಾನವಾಗಿರುವುದು. ನಿಮ್ಮಲ್ಲಿರುವುದನ್ನು ಕೊಡಿರಿ. 12 ನೀವು ಕೊಡಬೇಕೆಂದು ಕೊಟ್ಟರೆ ನಿಮ್ಮ ದಾನವು ಸ್ವೀಕೃತವಾಗುವುದು. ನಿಮ್ಮ ದಾನದ ಮೌಲ್ಯಮಾಪನವು ನೀವು ಏನನ್ನು ಹೊಂದಿದ್ದೀರಿ ಎಂಬುದರ ಮೇಲೆಯೇ ಹೊರತು ನೀವು ಏನನ್ನು ಹೊಂದಿಲ್ಲ ಎಂಬುದರ ಮೇಲೆ ಆಧಾರಗೊಂಡಿಲ್ಲ. 13 ಇತರ ಜನರು ಸುಖವಾಗಿರುವಾಗ ನೀವು ಕಷ್ಟದಿಂದಿರುವುದು ನಮಗೆ ಇಷ್ಟವಿಲ್ಲ. ಪ್ರತಿಯೊಂದರಲ್ಲಿಯೂ ಸಮಾನತೆ ಇರಬೇಕೆಂಬುದೇ ನಮ್ಮ ಬಯಕೆ. 14 ಈಗ ನಿಮ್ಮಲ್ಲಿ ಬೇಕಾದಷ್ಟಿದೆ. ನಿಮ್ಮ ಈ ಸಮೃದ್ಧಿಯು ಇತರ ಜನರ ಕೊರತೆಯನ್ನು ನೀಗಿಸುವುದು. ಬಳಿಕ, ಅವರು ಸಮೃದ್ಧರಾಗಿರುವಾಗ ನಿಮ್ಮ ಕೊರತೆಯನ್ನು ನೀಗಿಸುವರು. ಹೀಗೆ ಎಲ್ಲರೂ ಸಮಾನರಾಗಿರುವರು. 15 ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ ಇದಾಗುವುದು,

“ಬಹಳವಾಗಿ ಶೇಖರಿಸಿಕೊಂಡವನಿಗೆ ಏನೂ ಹೆಚ್ಚಾಗಲಿಲ್ಲ,
ಸ್ವಲ್ಪ ಶೇಖರಿಸಿಕೊಂಡವನಿಗೆ ಏನೂ ಕಡಿಮೆಯಾಗಲಿಲ್ಲ.”(A)

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International