Print Page Options
Previous Prev Day Next DayNext

Revised Common Lectionary (Complementary)

Daily Bible readings that follow the church liturgical year, with thematically matched Old and New Testament readings.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 61

ರಚನೆಗಾರ: ದಾವೀದ.

61 ದೇವರೇ, ನನ್ನ ಮೊರೆಯನ್ನು ಕೇಳು.
    ನನ್ನ ಪ್ರಾರ್ಥನೆಗೆ ಕಿವಿಗೊಡು.
ನಾನೆಲ್ಲೇ ಇದ್ದರೂ, ಎಷ್ಟೇ ಬಲಹೀನನಾಗಿದ್ದರೂ
    ಸಹಾಯಕ್ಕಾಗಿ ನಿನಗೇ ಮೊರೆಯಿಡುವೆನು!
ಅತ್ಯುನ್ನತವಾದ ಆಶ್ರಯಗಿರಿಗೆ ನನ್ನನ್ನು ಹತ್ತಿಸು.
ನೀನೇ ನನ್ನ ಆಶ್ರಯಸ್ಥಾನ;
    ಶತ್ರುಗಳಿಂದ ಕಾಪಾಡುವ ಭದ್ರವಾದ ಬುರುಜು.
ನಿನ್ನ ಗುಡಾರದಲ್ಲಿ ಸದಾಕಾಲ ವಾಸಿಸುವುದಕ್ಕೂ,
    ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವುದಕ್ಕೂ ತವಕಪಡುತ್ತಿರುವೆ.

ದೇವರೇ, ನನ್ನ ಹರಕೆಗಳನ್ನೆಲ್ಲಾ ನೀನು ಕೇಳಿರುವೆ.
    ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಬರುವ ಸ್ವಾಸ್ತ್ಯವನ್ನು ನೀನು ನನಗೆ ಕೊಟ್ಟಿರುವೆ.
ರಾಜನಿಗೆ ದೀರ್ಘಾಯುಷ್ಯವನ್ನು ದಯಪಾಲಿಸು.
    ಅವನು ಸದಾಕಾಲ ಜೀವಿಸಲಿ!
ಅವನು ನಿನ್ನ ಸಾನಿಧ್ಯವನ್ನು ಪಡೆದು ಸದಾಕಾಲವೂ ರಾಜನಾಗಿರಲಿ!
    ನಿನ್ನ ನಿಜಪ್ರೀತಿಯಿಂದ ಅವನನ್ನು ಸಂರಕ್ಷಿಸು.
ಆಗ ನಾನು ನಿನ್ನ ಹೆಸರನ್ನು ಸದಾಕಾಲ ಕೊಂಡಾಡುವೆನು.
    ನನ್ನ ಹರಕೆಗಳನ್ನು ಪ್ರತಿದಿನವೂ ಸಲ್ಲಿಸುವೆನು.

2 ರಾಜರುಗಳು 15:1-7

ಯೆಹೂದದಲ್ಲಿ ಅಜರ್ಯನ ಆಳ್ವಿಕೆ

15 ಯಾರೊಬ್ಬಾಮನು ಇಸ್ರೇಲಿನ ರಾಜನಾಗಿದ್ದ ಇಪ್ಪತ್ತೇಳನೆಯ ವರ್ಷದಲ್ಲಿ ಅಮಚ್ಯನ ಮಗನಾದ ಅಜರ್ಯನು ಯೆಹೂದದ ರಾಜನಾದನು. ಅಜರ್ಯನು ಆಳಲಾರಂಭಿಸಿದಾಗ ಅವನಿಗೆ ಹದಿನಾರು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಐವತ್ತೆರಡು ವರ್ಷ ಆಳಿದನು. ಜೆರುಸಲೇಮಿನ ಯೆಕೊಲ್ಯ ಎಂಬ ಹೆಸರಿನವಳು ಅಜರ್ಯನ ತಾಯಿ. ಅಜರ್ಯನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ದೃಷ್ಟಿಗೆ ಯೋಗ್ಯವಾದ ಕಾರ್ಯಗಳನ್ನು ಮಾಡಿದನು. ಅಜರ್ಯನು ತನ್ನ ತಂದೆಯಾದ ಅಮಚ್ಯನು ಮಾಡಿದ ಕಾರ್ಯಗಳನ್ನೇ ಅನುಸರಿಸಿದನು. ಆದರೆ ಅವನು ಉನ್ನತಸ್ಥಳಗಳನ್ನು ನಾಶಗೊಳಿಸಲಿಲ್ಲ. ಈ ಪೂಜಾಸ್ಥಳಗಳಲ್ಲಿ ಜನರು ಇನ್ನೂ ಯಜ್ಞಗಳನ್ನು ಅರ್ಪಿಸುತ್ತಿದ್ದರು ಮತ್ತು ಧೂಪವನ್ನು ಸುಡುತ್ತಿದ್ದರು.

ರಾಜನಾದ ಅಜರ್ಯನು ಕುಷ್ಠರೋಗ ಪೀಡಿತನಾಗುವಂತೆ ಯೆಹೋವನು ಮಾಡಿದನು. ಅವನು ಸಾಯುವವರೆಗೂ ಕುಷ್ಠರೋಗಿಯಾಗಿಯೇ ಇದ್ದನು. ಅಜರ್ಯನು ಪ್ರತ್ಯೇಕವಾದ ಮನೆಯಲ್ಲಿ ವಾಸಿಸುತ್ತಿದ್ದನು. ರಾಜನ ಮಗನಾದ ಯೋತಾಮನು ರಾಜನ ಅರಮನೆಯನ್ನು ನೋಡಿಕೊಳ್ಳುತ್ತಿದ್ದನು ಮತ್ತು ಜನರನ್ನು ಪಾಲಿಸುತ್ತಿದ್ದನು.

“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅಜರ್ಯನು ಮಾಡಿದ ಇತರ ಮಹಾಕಾರ್ಯಗಳನ್ನು ಕುರಿತು ಬರೆಯಲಾಗಿದೆ. ಅಜರ್ಯನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಬಳಿ, ದಾವೀದ ನಗರದಲ್ಲಿ ಸಮಾಧಿಮಾಡಲಾಯಿತು. ಅಜರ್ಯನ ನಂತರ ಅವನ ಮಗನಾದ ಯೋತಾಮನು ಹೊಸ ರಾಜನಾದನು.

ಮತ್ತಾಯ 10:5-15

ಯೇಸು ಈ ಹನ್ನೆರಡು ಅಪೊಸ್ತಲರಿಗೆ ಕೆಲವು ಆಜ್ಞೆಗಳನ್ನು ನೀಡಿ ಪರಲೋಕರಾಜ್ಯವನ್ನು ಕುರಿತು ತಿಳಿಸುವುದಕ್ಕಾಗಿ ಅವರನ್ನು ಕಳುಹಿಸಿದನು. ಯೇಸು ಅವರಿಗೆ ಹೇಳಿದ್ದೇನೆಂದರೆ: “ಯೆಹೂದ್ಯರಲ್ಲದ ಜನರ ಬಳಿಗಾಗಲಿ ಸಮಾರ್ಯದವರು ವಾಸಿಸುವ ಯಾವ ಊರಿಗಾಗಲಿ ಹೋಗಬೇಡಿ. ಆದರೆ ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರೇಲರ ಬಳಿಗೆ ಹೋಗಿ, ಪರಲೋಕರಾಜ್ಯವು ಬೇಗನೆ ಬರುತ್ತದೆ ಎಂದು ಬೋಧಿಸಿ. ರೋಗಿಗಳನ್ನು ವಾಸಿಮಾಡಿರಿ. ಸತ್ತವರನ್ನು ಬದುಕಿಸಿರಿ. ಕುಷ್ಠರೋಗಿಗಳನ್ನು ವಾಸಿಮಾಡಿರಿ. ಜನರನ್ನು ದೆವ್ವಗಳಿಂದ ಬಿಡಿಸಿರಿ. ನಾನು ನಿಮಗೆ ಈ ಅಧಿಕಾರಗಳನ್ನು ಉಚಿತವಾಗಿ ಕೊಡುತ್ತೇನೆ. ಆದ್ದರಿಂದ ಬೇರೆಯವರಿಗೆ ಉಚಿತವಾಗಿ ಸಹಾಯಮಾಡಿ. ನಿಮ್ಮೊಂದಿಗೆ ಹಣವನ್ನಾಗಲಿ ತಾಮ್ರ, ಬೆಳ್ಳಿಬಂಗಾರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿ. 10 ಚೀಲವನ್ನಾಗಲಿ ಹೆಚ್ಚಿನ ಬಟ್ಟೆಗಳನ್ನಾಗಲಿ ಪಾದರಕ್ಷೆಗಳನ್ನಾಗಲಿ ಊರುಗೋಲುಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿ. ಕೆಲಸಗಾರನಿಗೆ ಅಗತ್ಯವಾದವುಗಳನ್ನು ಒದಗಿಸಲಾಗುವುದು.

11 “ನೀವು ಯಾವುದೇ ಊರಿನೊಳಕ್ಕೆ ಅಥವಾ ನಗರಕ್ಕೆ ಪ್ರವೇಶಿಸಿದಾಗ ಅಲ್ಲಿರುವ ಉತ್ತಮ ವ್ಯಕ್ತಿಯನ್ನು ಗುರುತಿಸಿ, ನೀವು ಆ ಊರನ್ನು ಬಿಡುವ ತನಕ ಅವನ ಮನೆಯಲ್ಲೇ ತಂಗಿರಿ. 12 ಆ ಮನೆಗೆ ನೀವು ಪ್ರವೇಶಿಸಿದಾಗ, ‘ನಿಮಗೆ ಶುಭವಾಗಲಿ’ ಎಂದು ಹೇಳಿರಿ. 13 ಆ ಮನೆಯಲ್ಲಿರುವ ಜನರು ನಿಮ್ಮನ್ನು ಸ್ವಾಗತಿಸಿದರೆ ನಿಮ್ಮ ಆಶೀರ್ವಾದಕ್ಕೆ ಅವರು ಯೋಗ್ಯರಾಗಿರುವುದರಿಂದ ಆ ಆಶೀರ್ವಾದವು ಅವರಿಗೆ ದೊರೆಯಲಿ. ಅವರು ನಿಮ್ಮನ್ನು ಸ್ವಾಗತಿಸದಿದ್ದರೆ, ನಿಮ್ಮ ಆಶೀರ್ವಾದವು ನಿಮಗೇ ಹಿಂತಿರುಗಿಬರಲಿ. 14 ಒಂದು ಮನೆಯವರು ಅಥವಾ ಒಂದು ಊರಿನವರು ನಿಮ್ಮನ್ನು ಸ್ವಾಗತಿಸದಿದ್ದರೆ ಇಲ್ಲವೇ ನಿಮ್ಮ ಮಾತನ್ನು ಕೇಳದಿದ್ದರೆ ನೀವು ಆ ಸ್ಥಳವನ್ನು ಬಿಟ್ಟುಹೋಗುವಾಗ, ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. 15 ನ್ಯಾಯವಿಚಾರಣೆಯ ದಿನದಲ್ಲಿ ಈ ಊರಿನ ಗತಿಯು ಸೊದೋಮ್ ಮತ್ತು ಗೊಮೋರಗಳಿಗಿಂತ ಬಹಳ ಕೆಟ್ಟದ್ದಾಗಿರುವುದು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International