Revised Common Lectionary (Complementary)
ರಚನೆಗಾರರು: ಕೋರಹೀಯರು.
46 ದೇವರು ನಮಗೆ ಆಶ್ರಯವೂ ಬಲವೂ ಆಗಿದ್ದಾನೆ.
ಆತನು ಆಪತ್ತಿನಲ್ಲಿ ನಮಗೆ ಸಹಾಯಮಾಡಲು ಸದಾ ಸಿದ್ಧನಾಗಿರುವನು.
2 ಆದ್ದರಿಂದ ಭೂಮಿಯು ನಡುಗಿದರೂ ಬೆಟ್ಟಗಳು
ಸಮುದ್ರದೊಳಗೆ ಮುಳುಗಿಹೋದರೂ ನಮಗೇನೂ ಭಯವಿಲ್ಲ.
3 ಸಮುದ್ರಗಳು ಭೋರ್ಗರೆಯುತ್ತಾ ನೊರೆಕಾರಿದರೂ
ಅವುಗಳ ಅಲ್ಲೋಲಕಲ್ಲೋಲಗಳಿಂದ ಬೆಟ್ಟಗಳು ನಡುಗಿದರೂ ನಮಗೇನೂ ಭಯವಿಲ್ಲ.
4 ಒಂದು ನದಿ ಅದೆ; ಅದರ ಕಾಲುವೆಗಳು ಮಹೋನ್ನತನಾದ ದೇವರ ಪವಿತ್ರ ಪಟ್ಟಣವಾಗಿರುವ
ದೇವನಗರವನ್ನು ಸಂತೋಷಪಡಿಸುತ್ತದೆ.
5 ದೇವರು ಆ ಪಟ್ಟಣದಲ್ಲಿದ್ದಾನೆ, ಆದ್ದರಿಂದ ಅದೆಂದಿಗೂ ನಾಶವಾಗುವುದಿಲ್ಲ.
ಸೂರ್ಯೋದಯಕ್ಕಿಂತ ಮೊದಲೇ ದೇವರು ಅದರ ಸಹಾಯಕ್ಕಾಗಿ ಬರುವನು.
6 ಆತನು ಗರ್ಜಿಸಲು, ಜನಾಂಗಗಳು ಭಯದಿಂದ ನಡುಗುತ್ತವೆ, ರಾಷ್ಟ್ರಗಳು ಬಿದ್ದುಹೋಗುತ್ತವೆ;
ಭೂಮಿಯು ಕರಗಿಹೋಗುವುದು.
7 ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ.
ಯಾಕೋಬನ ದೇವರು ನಮ್ಮ ಆಶ್ರಯದುರ್ಗವಾಗಿದ್ದಾನೆ.
8 ಬನ್ನಿರಿ, ಯೆಹೋವನ ಕಾರ್ಯಗಳನ್ನು ನೋಡಿರಿ;
ಭೂಮಿಯ ಮೇಲೆ ಆತನು ಮಾಡುತ್ತಿರುವ ಭಯಂಕರವಾದ ಕಾರ್ಯಗಳನ್ನು ನೋಡಿರಿ.
9 ಇಡೀ ಪ್ರಪಂಚದಲ್ಲಿ ಆತನು ಯುದ್ಧವನ್ನು ನಿಲ್ಲಿಸುವನು;
ಬಿಲ್ಲುಗಳನ್ನೂ ಗುರಾಣಿಗಳನ್ನೂ[a] ಮುರಿದುಹಾಕುವನು; ಗುರಾಣಿಗಳನ್ನು ಬೆಂಕಿಯಿಂದ ಸುಟ್ಟುಹಾಕುವನು.
10 ದೇವರು ಹೀಗೆನ್ನುವನು: “ಹೋರಾಡುವುದನ್ನು ನಿಲ್ಲಿಸಿ, ನಾನೇ ದೇವರೆಂಬುದನ್ನು ಕಲಿತುಕೊಳ್ಳಿ!
ನಾನು ಜನಾಂಗಗಳನ್ನು ಸೋಲಿಸುವೆನು!
ಇಡೀ ಲೋಕವನ್ನು ಹತೋಟಿಗೆ ತೆಗೆದುಕೊಳ್ಳುವೆನು!”
11 ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ.
ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ.
ದೇವರು ಅನ್ಯ ದೇಶಗಳವರನ್ನು ಶಿಕ್ಷಿಸುವನು
11 ಲೆಬನೋನೇ, ನೀನು ನಿನ್ನ ದ್ವಾರಗಳನ್ನು ತೆರೆ.
ಆಗ ಬೆಂಕಿಯು ಒಳಬಂದು ನಿನ್ನ ದೇವದಾರು ಮರಗಳನ್ನೆಲ್ಲಾ ಸುಟ್ಟು ಹಾಕುವದು.
2 ದೇವದಾರು ಮರಗಳು ಬೀಳುವಾಗ ಓಕ್ ಮರಗಳು ರೋದಿಸುವವು.
ಆ ಬಲವಾದ ಮರಗಳನ್ನು ತೆಗೆದುಕೊಂಡು ಹೋಗಲಾಗುವುದು.
ಅಡವಿಯು ಕಡಿದುಹಾಕಲ್ಪಟ್ಟಿದ್ದಕ್ಕಾಗಿ
ಬಾಷಾನಿನ ಶ್ರೇಷ್ಠ ವೃಕ್ಷಗಳು ದುಃಖಿಸುವವು.
3 ರೋದಿಸುವ ಕುರುಬರ ಕಡೆಗೆ ಕಿವಿಗೊಡಿರಿ.
ಅವರ ನಾಯಕರುಗಳನ್ನು ತೆಗೆದುಕೊಂಡು ಹೋಗಿರುತ್ತಾರೆ.
ಪ್ರಾಯದ ಸಿಂಹಗಳ ಗರ್ಜನೆಗೆ ಕಿವಿಗೊಡಿರಿ.
ಯೋರ್ದನ್ ಹೊಳೆಯ ಬದಿಯಲ್ಲಿದ್ದ ದಟ್ಟವಾದ ಪೊದರುಗಳೆಲ್ಲಾ ತೆಗೆದುಕೊಂಡು ಹೋಗಲಾಗಿದೆ.
4 ನನ್ನ ದೇವರಾದ ಯೆಹೋವನು ಹೇಳುವುದೇನೆಂದರೆ, “ಕೊಲ್ಲುವದಕ್ಕೋಸ್ಕರವಾಗಿ ಬೆಳೆಸಿದ ಕುರಿಗಳನ್ನು ಪರಾಮರಿಸು. 5 ಅವರ ನಾಯಕರುಗಳು ವರ್ತಕರಂತೆಯೂ ಧಣಿಗಳಂತೆಯೂ ಇರುವರು. ಧಣಿಗಳು ಕುರಿಗಳನ್ನು ಕೊಂದರೂ ಶಿಕ್ಷಿಸಲ್ಪಡುವುದಿಲ್ಲ. ವರ್ತಕರು ಕುರಿಗಳನ್ನು ಮಾರಿ, ‘ನಾನೀಗ ಧನಿಕನಾಗಿದ್ದೇನೆ. ಯೆಹೋವನಿಗೆ ಸ್ತೋತ್ರವಾಗಲಿ’ ಎಂದು ಅನ್ನುವರು. ಕುರುಬರು ತಮ್ಮ ಕುರಿಗಳಿಗಾಗಿ ಚಿಂತಿಸುವುದಿಲ್ಲ. 6 ಈ ದೇಶದಲ್ಲಿ ವಾಸಿಸುವ ಜನರ ಬಗ್ಗೆ ನಾನು ದುಃಖಿಸುವುದಿಲ್ಲ.” ಇದು ಯೆಹೋವನ ನುಡಿ. “ನೋಡಿರಿ, ಪ್ರತಿಯೊಬ್ಬನೂ ತನ್ನ ಅರಸನಿಂದಲೂ ನೆರೆಯವರಿಂದಲೂ ಹಾಳುಮಾಡಲ್ಪಡುವಂತೆ ನಾನು ಮಾಡುವೆನು. ಅವರ ದೇಶವನ್ನು ಹಾಳುಮಾಡುವಂತೆ ಅವರನ್ನು ಬಿಡುವೆನು. ಅವರನ್ನು ನಿಲ್ಲಿಸುವುದಿಲ್ಲ.”
7 ಕೊಲ್ಲುವದಕ್ಕಾಗಿ ಬೆಳೆಸುವ ಕುರಿಗಳನ್ನು ನಾನು ಪರಾಮರಿಸಿದೆನು. ನನಗೆ ಎರಡು ಕೋಲುಗಳು ದೊರೆತವು. ಒಂದು ಕೋಲನ್ನು ದಯೆ ಎಂದೂ ಇನ್ನೊಂದನ್ನು ಒಗ್ಗಟ್ಟು ಎಂಬ ಹೆಸರಿನಿಂದಲೂ ಕರೆದೆನು. ಆ ಬಳಿಕ ಕುರಿಗಳನ್ನು ಪರಾಮರಿಸ ತೊಡಗಿದೆನು. 8 ಒಂದೇ ತಿಂಗಳೊಳಗೆ ಮೂರು ಮಂದಿ ಕುರುಬರನ್ನು ನಾನು ಕೆಲಸದಿಂದ ಬಿಡಿಸಿದೆನು. ನಾನು ಕುರಿಗಳ ಮೇಲೆ ಸಿಟ್ಟುಗೊಳ್ಳಲಾರಂಭಿಸಿದೆನು. ಅವು ನನ್ನನ್ನು ಹಗೆ ಮಾಡಲಾರಂಭಿಸಿದವು. 9 ಆಗ ನಾನು, “ಸರಿ, ನಾನು ನಿಮ್ಮನ್ನು ಇನ್ನು ನೋಡಿಕೊಳ್ಳುವದಿಲ್ಲ. ಹೋಗಿಬಿಡುತ್ತೇನೆ” ಅಂದೆನು. ಸಾಯಲು ಮನಸ್ಸುಳ್ಳವುಗಳನ್ನು ಸಾಯಲುಬಿಟ್ಟೆನು. ನಾಶವಾಗಲು ಮನಸ್ಸುಳ್ಳವುಗಳನ್ನು ನಾಶವಾಗಲು ಬಿಟ್ಟೆನು. ಅಳಿಯದೆ ಉಳಿದವುಗಳು ಪರಸ್ಪರ ನಾಶಮಾಡಿಕೊಳ್ಳುವವು. 10 ಆಗ ನಾನು ದಯೆ ಹೆಸರಿನ ಕೋಲನ್ನು ತೆಗೆದುಕೊಂಡು ತುಂಡುಮಾಡಿದೆನು. ಯೆಹೋವನು ಎಲ್ಲಾ ಜನರೊಂದಿಗೆ ಮಾಡಿದ ಒಡಂಬಡಿಕೆಯು ಮುರಿಯಿತು ಎಂಬುದಾಗಿ ಅವರಿಗೆ ತೋರಿಸಿದೆನು. 11 ಹೀಗೆ ಆ ದಿವಸ ಒಡಂಬಡಿಕೆಗೆ ಅಂತ್ಯವಾಯಿತು. ನನ್ನನ್ನೇ ನೋಡುತ್ತಿದ್ದ ಆ ಬಡ ಕುರಿಗಳಿಗೆ ಈ ಸಂದೇಶವು ಯೆಹೋವನಿಂದಲೇ ನನಗೆ ಬಂದಿದೆ ಎಂಬುದು ತಿಳಿದಿತ್ತು.
12 ಆಗ ನಾನು ಹೀಗೆಂದೆನು, “ನನಗೆ ಸಂಬಳ ಕೊಡಲು ನಿಮಗೆ ಇಷ್ಟವಿದ್ದರೆ ಕೊಡಿರಿ, ಇಷ್ಟವಿಲ್ಲದಿದ್ದರೆ ಬೇಡ.” ಆಗ ಅವರು ನನಗೆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಕೊಟ್ಟರು. 13 ಆಗ ಯೆಹೋವನು ನನಗೆ ಹೇಳಿದ್ದೇನೆಂದರೆ, “ನನ್ನ ಬೆಲೆ ಅಷ್ಟೇ ಎಂದು ಅವರು ನೆನಸುತ್ತಾರೆ. ಆ ಹಣವನ್ನು ತೆಗೆದು ಆಲಯದ ಖಜಾನೆಗೆ ಸುರಿ.” ನಾನು ಆ ಮೂವತ್ತು ಬೆಳ್ಳಿ ನಾಣ್ಯವನ್ನು ತೆಗೆದುಕೊಂಡು ಆಲಯದ ಖಜಾನೆಗೆ ಸುರಿದೆನು. 14 ಆಮೇಲೆ ನಾನು “ಒಗ್ಗಟ್ಟು” ಎಂಬ ಹೆಸರಿನ ಕೋಲನ್ನು ಎರಡು ತುಂಡಾಗಿ ಮುರಿದೆನು. ಇಸ್ರೇಲ್ ಮತ್ತು ಯೆಹೂದ ರಾಜ್ಯಗಳ ಒಗ್ಗಟ್ಟು ಮುರಿಯಿತು ಎಂದು ತೋರಿಸುವದಕ್ಕಾಗಿ ನಾನು ಹಾಗೆ ಮಾಡಿದೆನು.
15 ಆಗ ಯೆಹೋವನು ನನಗೆ ಹೇಳಿದ್ದೇನೆಂದರೆ, “ಒಬ್ಬ ಮೂರ್ಖ ಕುರುಬನು ಉಪಯೋಗಿಸುವ ವಸ್ತುಗಳನ್ನು ತೆಗೆದುಕೊಂಡು ಬಾ. 16 ನಾನು ಈ ದೇಶಕ್ಕೆ ಒಬ್ಬ ಹೊಸ ಕುರುಬನನ್ನು ನೇಮಕ ಮಾಡುವೆನೆಂದು ಆ ರೀತಿಯಾಗಿ ತೋರಿಸುವೆನು. ಆದರೆ ಈ ಮನುಷ್ಯನಿಗೆ ನಾಶಮಾಗುತ್ತಿರುವ ಕುರಿಗಳನ್ನು ಪರಾಮರಿಸಲು ಸಾಧ್ಯವಾಗುವುದಿಲ್ಲ. ಗಾಯಗೊಂಡ ಕುರಿಗಳನ್ನು ಗುಣಮಾಡಲು ಅವನಿಂದ ಸಾಧ್ಯವಾಗುವುದಿಲ್ಲ. ಸಾಯದೆ ಉಳಿದ ಕುರಿಗಳಿಗೆ ಆಹಾರ ಕೊಡಲು ಅವನಿಂದ ಸಾಧ್ಯವಾಗುವುದಿಲ್ಲ. ಪುಷ್ಟಿಕರವಾದ ಕುರಿಗಳನ್ನು ಪೂರ್ತಿಯಾಗಿ ತಿಂದುಹಾಕಲಾಗುವದು. ಅದರ ಗೊರಸುಗಳು ಮಾತ್ರವೇ ಉಳಿಯುವದು.”
17 ಕೆಲಸಕ್ಕೆ ಬಾರದ ಕುರುಬನೇ,
ನೀನು ನನ್ನ ಕುರಿಗಳನ್ನು ತೊರೆದುಬಿಟ್ಟೆ.
ಅವನನ್ನು ಶಿಕ್ಷಿಸಿರಿ!
ಖಡ್ಗದಿಂದ ಅವನ ಬಲಗೈಯನ್ನು ಕತ್ತರಿಸಿಹಾಕಿರಿ, ಮತ್ತು ಬಲಗಣ್ಣನ್ನು ಕಿತ್ತುಹಾಕಿರಿ.
ಆಗ ಅವನ ಬಲಗೈ ಅಪ್ರಯೋಜಕವಾಗುವದು,
ಬಲಗಣ್ಣು ದೃಷ್ಟಿಹೀನವಾಗುವದು.
ಜೀವಂತವಾದ ನಿರೀಕ್ಷೆ
3 ನಮ್ಮ ಪ್ರಭುವಾಗಿರುವ ಯೇಸು ಕ್ರಿಸ್ತನ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ದೇವರು ಮಹಾ ಕರುಣಾಳುವಾಗಿದ್ದಾನೆ. ಆತನು ತನ್ನ ಕರುಣೆಯಿಂದಲೇ ನಮಗೆ ಹೊಸ ಜೀವವನ್ನು ನೀಡಿದನು. ಸತ್ತವರೊಳಗಿಂದ ಎದ್ದುಬಂದ ಯೇಸು ಕ್ರಿಸ್ತನ ಮೂಲಕ ಅದು ನಮಗೆ ಒಂದು ಜೀವಂತ ನಿರೀಕ್ಷೆಯನ್ನು ತರುತ್ತದೆ. 4 ದೇವರು ತನ್ನ ಮಕ್ಕಳಿಗೆ ನೀಡುವ ಆಶೀರ್ವಾದಗಳಲ್ಲಿ ಈಗ ನಮಗೆ ನಿರೀಕ್ಷೆಯಿದೆ. ಅವು ನಿಮಗಾಗಿ ಪರಲೋಕದಲ್ಲಿ ಇಡಲ್ಪಟ್ಟಿವೆ. ಅವು ಹಾಳಾಗುವುದಿಲ್ಲ, ನಾಶವಾಗುವುದಿಲ್ಲ ಮತ್ತು ಸೌಂದರ್ಯವನ್ನು ಕಳೆದುಕೊಳ್ಳುವುದಿಲ್ಲ.
5 ದೇವರ ಶಕ್ತಿಯು ನಿಮ್ಮ ನಂಬಿಕೆಯ ಮೂಲಕ ನಿಮ್ಮನ್ನು ಕಾಯುತ್ತದೆ. ನಿಮಗೆ ರಕ್ಷಣೆಯಾಗುವವರೆಗೆ ನಿಮ್ಮನ್ನು ಸುರಕ್ಷಿತವಾಗಿಡುತ್ತದೆ. ಸಿದ್ಧವಾಗಿರುವ ಆ ರಕ್ಷಣೆಯು ಅಂತ್ಯಕಾಲದಲ್ಲಿ ನಿಮಗೆ ದೊರೆಯುವುದು. 6 ಇದು ನಿಮ್ಮನ್ನು ಬಹಳ ಸಂತೋಷಗೊಳಿಸುತ್ತದೆ. ಆದರೆ ಈಗ ಸ್ವಲ್ಪಕಾಲ ಅನೇಕ ವಿಧವಾದ ತೊಂದರೆಗಳು ನಿಮ್ಮಲ್ಲಿ ದುಃಖವನ್ನು ಉಂಟುಮಾಡಬಹುದು. 7 ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.
8 ನೀವು ಕ್ರಿಸ್ತನನ್ನು ನೋಡದಿದ್ದರೂ ಆತನನ್ನು ಪ್ರೀತಿಸುವಿರಿ. ಈಗ ಆತನನ್ನು ನೋಡದಿದ್ದರೂ ಆತನಲ್ಲಿ ನಂಬಿಕೆಯಿಟ್ಟಿದ್ದೀರಿ. ನಿಮ್ಮಲ್ಲಿ ಹೇಳಲಾಗದಷ್ಟು ಆನಂದವು ತುಂಬಿಕೊಂಡಿದೆ. ಆ ಆನಂದವು ಪ್ರಭಾವಪೂರ್ಣವಾಗಿದೆ. 9 ನಿಮ್ಮ ನಂಬಿಕೆಗೆ ಒಂದು ಗುರಿಯಿದೆ. ನಿಮ್ಮ ಆತ್ಮವನ್ನು ರಕ್ಷಿಸಬೇಕೆಂಬುದೇ ಆ ಗುರಿ. ನಿಮ್ಮ ಗುರಿಯಾಗಿರುವ ರಕ್ಷಣೆಯನ್ನು ಹೊಂದಿಕೊಳ್ಳುವಿರಿ.
Kannada Holy Bible: Easy-to-Read Version. All rights reserved. © 1997 Bible League International