Revised Common Lectionary (Semicontinuous)
ರಚನೆಗಾರರು: ಕೋರಹೀಯರು.
46 ದೇವರು ನಮಗೆ ಆಶ್ರಯವೂ ಬಲವೂ ಆಗಿದ್ದಾನೆ.
ಆತನು ಆಪತ್ತಿನಲ್ಲಿ ನಮಗೆ ಸಹಾಯಮಾಡಲು ಸದಾ ಸಿದ್ಧನಾಗಿರುವನು.
2 ಆದ್ದರಿಂದ ಭೂಮಿಯು ನಡುಗಿದರೂ ಬೆಟ್ಟಗಳು
ಸಮುದ್ರದೊಳಗೆ ಮುಳುಗಿಹೋದರೂ ನಮಗೇನೂ ಭಯವಿಲ್ಲ.
3 ಸಮುದ್ರಗಳು ಭೋರ್ಗರೆಯುತ್ತಾ ನೊರೆಕಾರಿದರೂ
ಅವುಗಳ ಅಲ್ಲೋಲಕಲ್ಲೋಲಗಳಿಂದ ಬೆಟ್ಟಗಳು ನಡುಗಿದರೂ ನಮಗೇನೂ ಭಯವಿಲ್ಲ.
4 ಒಂದು ನದಿ ಅದೆ; ಅದರ ಕಾಲುವೆಗಳು ಮಹೋನ್ನತನಾದ ದೇವರ ಪವಿತ್ರ ಪಟ್ಟಣವಾಗಿರುವ
ದೇವನಗರವನ್ನು ಸಂತೋಷಪಡಿಸುತ್ತದೆ.
5 ದೇವರು ಆ ಪಟ್ಟಣದಲ್ಲಿದ್ದಾನೆ, ಆದ್ದರಿಂದ ಅದೆಂದಿಗೂ ನಾಶವಾಗುವುದಿಲ್ಲ.
ಸೂರ್ಯೋದಯಕ್ಕಿಂತ ಮೊದಲೇ ದೇವರು ಅದರ ಸಹಾಯಕ್ಕಾಗಿ ಬರುವನು.
6 ಆತನು ಗರ್ಜಿಸಲು, ಜನಾಂಗಗಳು ಭಯದಿಂದ ನಡುಗುತ್ತವೆ, ರಾಷ್ಟ್ರಗಳು ಬಿದ್ದುಹೋಗುತ್ತವೆ;
ಭೂಮಿಯು ಕರಗಿಹೋಗುವುದು.
7 ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ.
ಯಾಕೋಬನ ದೇವರು ನಮ್ಮ ಆಶ್ರಯದುರ್ಗವಾಗಿದ್ದಾನೆ.
8 ಬನ್ನಿರಿ, ಯೆಹೋವನ ಕಾರ್ಯಗಳನ್ನು ನೋಡಿರಿ;
ಭೂಮಿಯ ಮೇಲೆ ಆತನು ಮಾಡುತ್ತಿರುವ ಭಯಂಕರವಾದ ಕಾರ್ಯಗಳನ್ನು ನೋಡಿರಿ.
9 ಇಡೀ ಪ್ರಪಂಚದಲ್ಲಿ ಆತನು ಯುದ್ಧವನ್ನು ನಿಲ್ಲಿಸುವನು;
ಬಿಲ್ಲುಗಳನ್ನೂ ಗುರಾಣಿಗಳನ್ನೂ[a] ಮುರಿದುಹಾಕುವನು; ಗುರಾಣಿಗಳನ್ನು ಬೆಂಕಿಯಿಂದ ಸುಟ್ಟುಹಾಕುವನು.
10 ದೇವರು ಹೀಗೆನ್ನುವನು: “ಹೋರಾಡುವುದನ್ನು ನಿಲ್ಲಿಸಿ, ನಾನೇ ದೇವರೆಂಬುದನ್ನು ಕಲಿತುಕೊಳ್ಳಿ!
ನಾನು ಜನಾಂಗಗಳನ್ನು ಸೋಲಿಸುವೆನು!
ಇಡೀ ಲೋಕವನ್ನು ಹತೋಟಿಗೆ ತೆಗೆದುಕೊಳ್ಳುವೆನು!”
11 ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ.
ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ.
ಭೂಲೋಕದ ಸೃಷ್ಟಿ
1 ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು. 2 ಭೂಮಿಯು ಅಸ್ತವ್ಯಸ್ತವಾಗಿಯೂ ಬರಿದಾಗಿಯೂ ಇತ್ತು. ಭೂಮಿಯ ಮೇಲೆ ಏನೂ ಇರಲಿಲ್ಲ. ಸಾಗರದ ಮೇಲೆ ಕತ್ತಲು ಕವಿದಿತ್ತು. ದೇವರಾತ್ಮನು ಜಲಸಮೂಹಗಳ ಮೇಲೆ ಚಲಿಸುತ್ತಿದ್ದನು.[a]
ಮೊದಲನೆ ದಿನ—ಬೆಳಕು
3 ಆಗ ದೇವರು, “ಬೆಳಕಾಗಲಿ” ಅನ್ನಲು ಬೆಳಕಾಯಿತು. 4 ದೇವರಿಗೆ ಬೆಳಕು ಒಳ್ಳೆಯದಾಗಿ ಕಂಡಿತು. ಬಳಿಕ ದೇವರು ಕತ್ತಲೆಯಿಂದ ಬೆಳಕನ್ನು ಬೇರ್ಪಡಿಸಿದನು. 5 ದೇವರು ಬೆಳಕಿಗೆ ಹಗಲೆಂದೂ ಕತ್ತಲೆಗೆ ರಾತ್ರಿಯೆಂದೂ ಹೆಸರಿಟ್ಟನು.
ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಮೊದಲನೆ ದಿನವಾಯಿತು.
ಎರಡನೆ ದಿನ—ಆಕಾಶ
6 ಬಳಿಕ ದೇವರು, “ಜಲಸಮೂಹಗಳ ನಡುವೆ ಗುಮಟ[b] ಉಂಟಾಗಲಿ. ಅದು ಕೆಳಭಾಗದ ನೀರುಗಳನ್ನು ಮೇಲ್ಭಾಗದ ನೀರುಗಳಿಂದ ಬೇರ್ಪಡಿಸಲಿ” ಅಂದನು. 7 ಹೀಗೆ ದೇವರು ಗುಮಟವನ್ನು ಉಂಟುಮಾಡಿ ಅದರ ಕೆಳಭಾಗದ ನೀರುಗಳನ್ನು ಅದರ ಮೇಲ್ಭಾಗದ ನೀರುಗಳಿಂದ ಬೇರ್ಪಡಿಸಿದನು. 8 ದೇವರು ಆ ಗುಮಟಕ್ಕೆ ಆಕಾಶವೆಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಎರಡನೆ ದಿನವಾಯಿತು.
ಮೂರನೆ ದಿನ—ಒಣನೆಲ ಮತ್ತು ಸಸ್ಯಗಳು
9 ಬಳಿಕ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಟ್ಟಿಗೆ ಸೇರಿಕೊಂಡು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು. 10 ದೇವರು ಒಣನೆಲಕ್ಕೆ ಭೂಮಿಯೆಂದೂ ಒಟ್ಟಿಗೆ ಸೇರಿಕೊಂಡಿದ್ದ ನೀರಿಗೆ ಸಮುದ್ರವೆಂದೂ ಹೆಸರಿಟ್ಟನು. ದೇವರಿಗೆ ಇವು ಒಳ್ಳೆಯದಾಗಿ ಕಂಡವು.
11 ಬಳಿಕ ದೇವರು, “ಭೂಮಿಯು ಸಸ್ಯರಾಶಿಯನ್ನು ಬೆಳೆಸಲಿ; ಬೀಜಗಳನ್ನು ಫಲಿಸುವ ಸಸ್ಯಗಳು ಬೆಳೆಯಲಿ; ತನ್ನತನ್ನ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಹಣ್ಣಿನ ಮರಗಳು ಭೂಮಿಯ ಮೇಲೆ ಬೆಳೆಯಲಿ” ಅಂದನು. ಹಾಗೆಯೇ ಆಯಿತು. 12 ಸಸಿಗಳು ಭೂಮಿಯ ಮೇಲೆ ಬೆಳೆದವು. ಅವುಗಳಲ್ಲಿ ಬೀಜ ಫಲಿಸುವ ಗಿಡಗಳೂ ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಮರಗಳೂ ಇದ್ದವು. ಪ್ರತಿಯೊಂದು ಸಸಿಯು ತನ್ನದೇ ಆದ ರೀತಿಯ ಬೀಜವನ್ನು ಫಲಿಸಿತು. ದೇವರಿಗೆ ಇವು ಒಳ್ಳೆಯದಾಗಿ ಕಂಡವು.
13 ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಮೂರನೆ ದಿನವಾಯಿತು.
ನಾಲ್ಕನೆ ದಿನ—ಸೂರ್ಯ, ಚಂದ್ರ ಮತ್ತು ನಕ್ಷತ್ರ
14 ಬಳಿಕ ದೇವರು, “ಆಕಾಶದಲ್ಲಿ ಬೆಳಕುಗಳು ಉಂಟಾಗಲಿ. ಈ ಬೆಳಕುಗಳು ಹಗಲುರಾತ್ರಿಗಳನ್ನು ಬೇರ್ಪಡಿಸಲಿ. ಈ ಬೆಳಕುಗಳು ವಿಶೇಷವಾದ ಗುರುತುಗಳಾಗಿದ್ದು, ವಿಶೇಷವಾದ ಸಮಯಗಳನ್ನೂ ದಿನಗಳನ್ನೂ ವರ್ಷಗಳನ್ನೂ ತೋರಿಸಲಿ. 15 ಈ ಬೆಳಕುಗಳು ಆಕಾಶದಲ್ಲಿದ್ದು ಭೂಮಿಯ ಮೇಲೆ ಬೆಳಕನ್ನು ಪ್ರಕಾಶಿಸಲಿ” ಅಂದನು. ಹಾಗೆಯೇ ಆಯಿತು.
16 ಆದ್ದರಿಂದ ದೇವರು ಎರಡು ದೊಡ್ಡಬೆಳಕುಗಳನ್ನು ಸೃಷ್ಟಿಸಿದನು. ಹಗಲನ್ನಾಳುವುದಕ್ಕಾಗಿ ದೊಡ್ಡಬೆಳಕನ್ನೂ ರಾತ್ರಿಯನ್ನಾಳುವುದಕ್ಕಾಗಿ ಅದಕ್ಕಿಂತ ಚಿಕ್ಕಬೆಳಕನ್ನೂ ಸೃಷ್ಟಿಸಿದನು. ಆತನು ನಕ್ಷತ್ರಗಳನ್ನು ಸಹ ಸೃಷ್ಟಿಸಿದನು. 17 ಈ ಬೆಳಕುಗಳು ಭೂಮಿಯ ಮೇಲೆ ಪ್ರಕಾಶಿಸಲೆಂದು ದೇವರು ಅವುಗಳನ್ನು ಆಕಾಶದಲ್ಲಿರಿಸಿದನು. 18 ಹಗಲನ್ನು ಮತ್ತು ರಾತ್ರಿಯನ್ನು ಆಳಲೆಂದು ದೇವರು ಈ ಬೆಳಕುಗಳನ್ನು ಆಕಾಶದಲ್ಲಿರಿಸಿದನು. ಇವು ಬೆಳಕನ್ನು ಕತ್ತಲೆಯಿಂದ ಬೇರ್ಪಡಿಸಿದವು. ದೇವರಿಗೆ ಇವು ಒಳ್ಳೆಯದಾಗಿ ಕಂಡವು.
19 ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ನಾಲ್ಕನೆ ದಿನವಾಯಿತು.
ಐದನೆ ದಿನ—ಮೀನುಗಳು ಮತ್ತು ಪಕ್ಷಿಗಳು
20 ಬಳಿಕ ದೇವರು, “ನೀರಿನಲ್ಲಿ ಅನೇಕ ಜಲಚರಗಳು ತುಂಬಿಕೊಳ್ಳಲಿ. ಭೂಮಿಯ ಮೇಲೆ ಆಕಾಶದಲ್ಲಿ ಪಕ್ಷಿಗಳು ಹಾರಾಡಲಿ” ಅಂದನು. 21 ಹೀಗೆ ದೇವರು ಸಮುದ್ರದ ಬೃಹದಾಕಾರದ ಪ್ರಾಣಿಗಳನ್ನು, ಸಮುದ್ರದಲ್ಲಿ ಚಲಿಸುವ ಪ್ರತಿಯೊಂದು ಬಗೆಯ ಜೀವಿಗಳನ್ನು ಮತ್ತು ರೆಕ್ಕೆಗಳುಳ್ಳ ಪ್ರತಿಯೊಂದು ಬಗೆಯ ಪಕ್ಷಿಗಳನ್ನು ಸೃಷ್ಟಿಸಿದನು. ಆತನಿಗೆ ಇವು ಒಳ್ಳೆಯದಾಗಿ ಕಂಡವು.
22 ಇದಲ್ಲದೆ ದೇವರು, “ಜಲಚರಗಳು ಅಸಂಖ್ಯಾತವಾಗಿ ಸಮುದ್ರಗಳನ್ನು ತುಂಬಿಕೊಳ್ಳಲಿ; ಪಕ್ಷಿಗಳು ಅಸಂಖ್ಯಾತವಾಗಿ ಭೂಮಿಯಲ್ಲೆಲ್ಲಾ ಹರಡಿಕೊಳ್ಳಲಿ” ಎಂದು ಹೇಳಿ ಆಶೀರ್ವದಿಸಿದನು.
23 ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಐದನೆ ದಿನವಾಯಿತು.
ಆರನೆ ದಿನ—ನೆಲಪ್ರಾಣಿಗಳು ಮತ್ತು ಮನುಷ್ಯರು
24 ಬಳಿಕ ದೇವರು, “ಭೂಮಿಯು ಅನೇಕ ಬಗೆಯ ಪ್ರಾಣಿಗಳನ್ನು ಅವುಗಳ ಜಾತಿಗನುಸಾರವಾಗಿ ಹುಟ್ಟಿಸಲಿ. ಪ್ರತಿಯೊಂದು ಬಗೆಯ ದೊಡ್ಡ ಪ್ರಾಣಿಗಳು ಮತ್ತು ಹರಿದಾಡುವ ಚಿಕ್ಕ ಪ್ರಾಣಿಗಳು ಹುಟ್ಟಿಕೊಂಡು ಅಭಿವೃದ್ಧಿಯಾಗಲಿ” ಅಂದನು. ಹಾಗೆಯೇ ಆಯಿತು.
25 ಹೀಗೆ ದೇವರು ಪ್ರತಿಯೊಂದು ಬಗೆಯ ಕಾಡುಪ್ರಾಣಿಗಳನ್ನು, ಸಾಕುಪ್ರಾಣಿಗಳನ್ನು ಮತ್ತು ಹರಿದಾಡುವ ಎಲ್ಲಾ ಕ್ರಿಮಿಗಳನ್ನು ಸೃಷ್ಟಿಸಿದನು. ಆತನಿಗೆ ಇವು ಒಳ್ಳೆಯದಾಗಿ ಕಂಡವು.
26 ಬಳಿಕ ದೇವರು, “ಈಗ ನಾವು ಮನುಷ್ಯನನ್ನು ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ನಿರ್ಮಿಸೋಣ. ಅವರು ಸಮುದ್ರದಲ್ಲಿರುವ ಎಲ್ಲಾ ಮೀನುಗಳ ಮೇಲೆ, ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳ ಮೇಲೆ ಮತ್ತು ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳ ಮೇಲೆ ದೊರೆತನ ಮಾಡಲಿ” ಅಂದನು.
27 ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾಗಿ ಸೃಷ್ಟಿಸಿದನು. ಆತನು ಅವರನ್ನು ಗಂಡು ಮತ್ತು ಹೆಣ್ಣುಗಳಾಗಿ ರೂಪಿಸಿದನು. 28 ದೇವರು ಅವರನ್ನು ಆಶೀರ್ವದಿಸಿ, “ನೀವು ಅನೇಕ ಮಕ್ಕಳನ್ನು ಪಡೆದು ಭೂಮಿಯಲ್ಲೆಲ್ಲಾ ಹರಡಿಕೊಂಡು ಅದನ್ನು ಸ್ವಾಧೀನಪಡಿಸಿಕೊಳ್ಳಿರಿ. ಸಮುದ್ರದಲ್ಲಿರುವ ಮೀನುಗಳ ಮೇಲೆ, ಆಕಾಶದಲ್ಲಿರುವ ಪಕ್ಷಿಗಳ ಮೇಲೆ ಮತ್ತು ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆ ದೊರೆತನ ಮಾಡಿರಿ” ಅಂದನು.
29 ಇದಲ್ಲದೆ ದೇವರು ಅವರಿಗೆ, “ಬೀಜಫಲಿಸುವ ಎಲ್ಲಾ ಸಸಿಗಳನ್ನು ಮತ್ತು ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಎಲ್ಲಾ ಮರಗಳನ್ನು ನಿಮಗೆ ಆಹಾರವಾಗಿ ಕೊಟ್ಟಿದ್ದೇನೆ. 30 ಭೂಮಿಯ ಮೇಲಿರುವ ಪ್ರಾಣಿಗಳಿಗೆಲ್ಲಾ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆಲ್ಲಾ ಭೂಮಿಯ ಮೇಲೆ ಹರಿದಾಡುವ ಕ್ರಿಮಿಕೀಟಗಳಿಗೆಲ್ಲಾ ಆಹಾರಕ್ಕಾಗಿ ಸಸ್ಯರಾಶಿಯನ್ನು ಕೊಟ್ಟಿದ್ದೇನೆ” ಅಂದನು. ಹಾಗೆಯೇ ಆಯಿತು.
31 ದೇವರು ತಾನು ಸೃಷ್ಟಿಸಿದ್ದನ್ನೆಲ್ಲಾ ನೋಡಿದಾಗ, ಅವು ಆತನಿಗೆ ಒಳ್ಳೆಯದಾಗಿ ಕಂಡವು.
ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಆರನೆ ದಿನವಾಯಿತು.
ಏಳನೆ ದಿನ—ವಿಶ್ರಾಂತಿ
2 ಹೀಗೆ ಭೂಮಿಯೂ ಆಕಾಶವೂ ಅವುಗಳಲ್ಲಿರುವ ಪ್ರತಿಯೊಂದೂ ನಿರ್ಮಿತವಾದವು. 2 ದೇವರು ತನ್ನ ಸೃಷ್ಟಿಕಾರ್ಯವನ್ನು ಮುಕ್ತಾಯಗೊಳಿಸಿ ಏಳನೆ ದಿನದಲ್ಲಿ ವಿಶ್ರಮಿಸಿಕೊಂಡನು. 3 ದೇವರು ತನ್ನ ಸೃಷ್ಟಿಕಾರ್ಯಗಳನ್ನೆಲ್ಲಾ ಮುಗಿಸಿ ಏಳನೆ ದಿನದಲ್ಲಿ ವಿಶ್ರಮಿಸಿಕೊಂಡದ್ದರಿಂದ ಆ ದಿನವು “ಪರಿಶುದ್ಧ ದಿನವಾಗಿರಲಿ” ಎಂದು ಆಶೀರ್ವದಿಸಿದನು.
ಮಾನವನ ಪ್ರಾರಂಭ
4 ಇದು ಆಕಾಶದ ಮತ್ತು ಭೂಮಿಯ ಚರಿತ್ರೆ. ದೇವರು ಭೂಮಿಯನ್ನು ಮತ್ತು ಆಕಾಶವನ್ನು ಸೃಷ್ಟಿಸಿದಾಗ ನಡೆದ ಸಂಗತಿಗಳೇ ಈ ಚರಿತ್ರೆ.
ಯೆಹೂದ್ಯರು ಮತ್ತು ಧರ್ಮಶಾಸ್ತ್ರ
17 “ನಾನು ಯೆಹೂದ್ಯನು” ಎಂದು ಹೇಳಿಕೊಳ್ಳುತ್ತಿರುವ ನಿನ್ನ ವಿಷಯವಾದರೂ ಏನು? ಧರ್ಮಶಾಸ್ತ್ರದಲ್ಲಿ ನಂಬಿಕೆಯಿಟ್ಟು ದೇವರಿಗೆ ಸಮೀಪವಾಗಿರುವುದಾಗಿ ನೀನು ಹೆಮ್ಮೆಪಡುವೆ. 18 ದೇವರ ಚಿತ್ತಕ್ಕನುಸಾರವಾದ ಕಾರ್ಯಗಳನ್ನು ಧರ್ಮಶಾಸ್ತ್ರದಿಂದ ಕಲಿತುಕೊಂಡಿರುವುದಾಗಿ ನೀನು ಹೇಳಿಕೊಳ್ಳುವೆ. 19 ಸರಿಯಾದ ಮಾರ್ಗವನ್ನು ತಿಳಿದಿಲ್ಲದ ಜನರಿಗೆ ಮಾರ್ಗದರ್ಶಕನಾಗಿಯೂ ಕತ್ತಲೆಯಲ್ಲಿರುವ ಜನರಿಗೆ ಬೆಳಕಾಗಿಯೂ ಇರುವುದಾಗಿ ನಿನ್ನ ಕುರಿತು ಭಾವಿಸಿಕೊಂಡಿರುವೆ. 20 ಮೂಢರಿಗೆ ಶಿಕ್ಷಕನೆಂತಲೂ ಕಲಿಯಬೇಕಾದವರಿಗೆ ಉಪಾಧ್ಯಾಯನೆಂತಲೂ ನೀನು ನಿನ್ನ ಬಗ್ಗೆ ಆಲೋಚಿಸಿಕೊಂಡಿರುವೆ. ನಿನ್ನಲ್ಲಿ ಧರ್ಮಶಾಸ್ತ್ರವಿದೆ, ಆದ್ದರಿಂದ ಪ್ರತಿಯೊಂದನ್ನೂ ತಿಳಿದುಕೊಂಡಿರುವುದಾಗಿಯೂ ಎಲ್ಲಾ ಸತ್ಯವನ್ನು ಹೊಂದಿಕೊಂಡಿರುವುದಾಗಿಯೂ ನೀನು ಭಾವಿಸಿಕೊಂಡಿರುವೆ. 21 ನೀನು ಬೇರೆಯವರಿಗೆ ಉಪದೇಶಿಸುವೆ. ಹೀಗಿರಲು ನೀನು ನಿನಗೇ ಉಪದೇಶ ಮಾಡಿಕೊಳ್ಳಬಾರದೇಕೆ? ಕದಿಯಬಾರದೆಂದು ನೀನು ಜನರಿಗೆ ಹೇಳುವೆ, ಆದರೆ ನೀನೇ ಕದಿಯುವೆ. 22 ಜನರು ವ್ಯಭಿಚಾರವೆಂಬ ಪಾಪವನ್ನು ಮಾಡಕೂಡದೆಂದು ನೀನು ಹೇಳುವೆ, ಆದರೆ ನೀನೇ ಆ ಪಾಪಮಾಡಿ ಅಪರಾಧಿಯಾಗಿರುವೆ. ನೀನು ವಿಗ್ರಹಗಳನ್ನು ದ್ವೇಷಿಸುವೆ, ಆದರೆ ನೀನೇ ಅವುಗಳನ್ನು ಗುಡಿಗಳಿಂದ ಕದಿಯುವೆ. 23 ನೀನು ದೇವರ ಧರ್ಮಶಾಸ್ತ್ರದ ಬಗ್ಗೆ ಹೆಮ್ಮೆಪಡುವೆ. ಆದರೆ ಆ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ದೇವರಿಗೆ ಅವಮಾನ ಮಾಡುವೆ. 24 “ಯೆಹೂದ್ಯರಾದ ನಿಮ್ಮ ದೆಸೆಯಿಂದ ಯೆಹೂದ್ಯರಲ್ಲದ ಜನರು ದೇವರ ಹೆಸರಿಗೆ ವಿರೋಧವಾಗಿ ಮಾತಾಡುತ್ತಾರೆ”(A) ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.
25 ನೀನು ಧರ್ಮಶಾಸ್ತ್ರವನ್ನು ಅನುಸರಿಸಿದರೆ ನೀನು ಮಾಡಿಸಿಕೊಂಡ ಸುನ್ನತಿಗೆ ಅರ್ಥವಿದೆ. ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆದರೆ ನಿನಗೆ ಸುನ್ನತಿಯಾಗಿಲ್ಲದಂತೆಯೇ ಆಯಿತು. 26 ಯೆಹೂದ್ಯರಲ್ಲದ ಜನರಿಗೆ ಸುನ್ನತಿಯಾಗಿಲ್ಲ, ಆದರೆ ಧರ್ಮಶಾಸ್ತ್ರವು ಹೇಳುವುದನ್ನು ಅವರು ಮಾಡುವುದಾದರೆ, ಅವರು ಸುನ್ನತಿಯನ್ನು ಹೊಂದಿದಂಥವರಾದರು. 27 ಯೆಹೂದ್ಯರಾದ ನಿಮಗೆ ಲಿಖಿತ ಧರ್ಮಶಾಸ್ತ್ರವಿದೆ ಮತ್ತು ಸುನ್ನತಿಯಾಗಿದೆ. ಆದರೆ ನೀವು ಧರ್ಮಶಾಸ್ತ್ರವನ್ನು ಮೀರಿ ನಡೆಯುತ್ತೀರಿ. ಹೀಗಿರಲು, ದೇಹದಲ್ಲಿ ಸುನ್ನತಿಯನ್ನು ಹೊಂದಿಲ್ಲದಿದ್ದರೂ ಧರ್ಮಶಾಸ್ತ್ರಕ್ಕೆ ವಿಧೇಯರಾಗುವ ಜನರು ನಿಮ್ಮನ್ನು ಅಪರಾಧಿಗಳೆಂದು ತೋರ್ಪಡಿಸುತ್ತಾರೆ.
28 ಕೇವಲ ಬಾಹ್ಯ ದೇಹದಲ್ಲಿ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ. ಕೇವಲ ದೇಹದ ಹೊರಭಾಗದ ಸುನ್ನತಿಯು ನಿಜವಾದ ಸುನ್ನತಿಯಲ್ಲ. 29 ಅಂತರಂಗದಲ್ಲಿ ಯೆಹೂದ್ಯನಾಗಿರುವವನು ಮಾತ್ರ ನಿಜವಾದ ಯೆಹೂದ್ಯನು. ಹೃದಯದಲ್ಲಿ ಆದ ಸುನ್ನತಿಯೇ ನಿಜವಾದ ಸುನ್ನತಿ. ಈ ಸುನ್ನತಿಯಾದದ್ದು ಪವಿತ್ರಾತ್ಮನಿಂದಲೇ ಹೊರತು ಲಿಖಿತ ಧರ್ಮಶಾಸ್ತ್ರದಿಂದಲ್ಲ. ಪವಿತ್ರಾತ್ಮನಿಂದ ಹೃದಯದಲ್ಲಿ ಸುನ್ನತಿ ಹೊಂದಿರುವ ವ್ಯಕ್ತಿಯು ಹೊಗಳಿಕೆಯನ್ನು ಪಡೆಯುವುದು ದೇವರಿಂದಲೇ ಹೊರತು ಮನುಷ್ಯರಿಂದಲ್ಲ.
Kannada Holy Bible: Easy-to-Read Version. All rights reserved. © 1997 Bible League International