Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 73:1-20

ಮೂರನೆ ಭಾಗ

(ಕೀರ್ತನೆಗಳು 73–89)

ಸ್ತುತಿಗೀತೆ. ರಚನೆಗಾರ: ಆಸಾಫ.

73 ದೇವರು ಇಸ್ರೇಲಿಗೆ ಒಳ್ಳೆಯವನೇ ನಿಜ!
    ಶುದ್ಧ ಹೃದಯವುಳ್ಳವರಿಗೆ ದೇವರು ಒಳ್ಳೆಯವನೇ ಸರಿ!
ಆದರೆ ನನ್ನ ಕಾಲುಗಳು ಜಾರಿದವು;
    ನನ್ನ ಹೆಜ್ಜೆಗಳು ತಪ್ಪಿದವು.
ದುಷ್ಟರ ಏಳಿಗೆಯನ್ನು ಕಂಡು
    ಗರ್ವಿಷ್ಠರ ಮೇಲೆ ಅಸೂಯೆಗೊಂಡೆನು.
ಅವರು ಆರೋಗ್ಯವಂತರಾಗಿದ್ದಾರೆ.
    ಜೀವನೋಪಾಯಕ್ಕಾಗಿ ಅವರು ಹೋರಾಡಬೇಕಿಲ್ಲ.[a]
ಆ ಗರ್ವಿಷ್ಠರು ನಮ್ಮಂತೆ ಕಷ್ಟಪಡುವುದಿಲ್ಲ.
    ಅವರಿಗೆ ಬೇರೆಯವರಂತೆ ತೊಂದರೆಗಳಿಲ್ಲ.
ಆದ್ದರಿಂದ ಗರ್ವವು ಅವರಿಗೆ ಆಭರಣವಾಗಿದೆ;
    ದ್ವೇಷವು ಅವರಿಗೆ ಉಡುಪಾಗಿದೆ.
ಅವರ ಕಣ್ಣುಗಳು ಕೊಬ್ಬಿವೆ;
    ಅವರ ಮನಸ್ಸು ದುಷ್ಕಲ್ಪನೆಗಳಿಂದ ತುಂಬಿತುಳುಕುತ್ತದೆ.
ಅವರು ಗೇಲಿಮಾಡುತ್ತಾ ಬೇರೆಯವರ ವಿರುದ್ಧ ಕೆಟ್ಟದ್ದನ್ನೇ ಮಾತಾಡುವರು.
    ಗರ್ವಿಷ್ಠರಾದ ಅವರು ಬೇರೆಯವರ ಮೇಲೆ ಬಲಾತ್ಕಾರ ನಡೆಸಲು ಸಂಚು ಮಾಡುವರು.
ಆ ಗರ್ವಿಷ್ಠರು ತಮ್ಮನ್ನು ದೇವರುಗಳೆಂದು ಭಾವಿಸಿಕೊಂಡಿದ್ದಾರೆ,
    ತಾವೇ ಭೂಮಿಯ ಅಧಿಪತಿಗಳೆಂದು ಆಲೋಚಿಸಿಕೊಂಡಿದ್ದಾರೆ.
10 ಆದ್ದರಿಂದ ದೇವರ ಮಕ್ಕಳೂ ಅವರ ಪಕ್ಷ ಹಿಡಿಯುವರು;
    ಅವರು ಹೇಳಿದಂತೆಯೇ ಮಾಡುವರು.
11 “ನಮ್ಮ ಕಾರ್ಯಗಳು ದೇವರಿಗೆ ಗೊತ್ತಿಲ್ಲ! ಮಹೋನ್ನತನಾದ ದೇವರಿಗೆ ಗೊತ್ತೇ ಇಲ್ಲ!”
    ಎಂದು ಆ ದುಷ್ಟರು ಹೇಳಿಕೊಳ್ಳುವರು.

12 ಆ ಗರ್ವಿಷ್ಠರು ದುಷ್ಟರೇ ಸರಿ!
    ಆದರೂ ಅವರ ಐಶ್ವರ್ಯವು ಹೆಚ್ಚಾಗುತ್ತಲೇ ಇದೆ.
13 ಹೀಗಿರಲು, ನನ್ನ ಹೃದಯವನ್ನು ನಾನೇಕೆ ನಿರ್ಮಲಗೊಳಿಸಿಕೊಳ್ಳಲಿ?
    ನನ್ನ ಕೈಗಳನ್ನು ನಾನೇಕೆ ಸ್ವಚ್ಛಗೊಳಿಸಿಕೊಳ್ಳಲಿ?
14 ದೇವರೇ ದಿನವೆಲ್ಲಾ ನಾನು ಕಷ್ಟಪಡುತ್ತಿರುವೆ.
    ಪ್ರತಿ ಮುಂಜಾನೆಯೂ ನೀನು ನನ್ನನ್ನು ಶಿಕ್ಷಿಸುವೆ.

15 ಇವುಗಳ ಬಗ್ಗೆ ನಾನು ಬೇರೆಯವರಿಗೆ ಹೇಳಬೇಕೆಂದಿದ್ದೆ.
    ಒಂದುವೇಳೆ ಹೇಳಿದ್ದರೆ, ನಿನ್ನ ಜನರಿಗೆ ದ್ರೋಹಿಯಾಗುತ್ತಿದ್ದೆ.
16 ಇವುಗಳನ್ನು ಅರ್ಥಮಾಡಿಕೊಳ್ಳಲು ನಾನು ಬಹಳವಾಗಿ ಪ್ರಯತ್ನಿಸಿದರೂ
    ನಿನ್ನ ಆಲಯಕ್ಕೆ ಹೋಗುವವರೆಗೂ ಕಷ್ಟಕರವಾಗಿತ್ತು.
17 ಆದರೆ ನಿನ್ನ ಆಲಯಕ್ಕೆ ಹೋದಮೇಲೆ
    ನನಗೆ ಅರ್ಥವಾಯಿತು.
18 ನೀನು ಅವರನ್ನು ಅಪಾಯಕರವಾದ ಪರಿಸ್ಥಿತಿಯಲ್ಲಿ ಇಟ್ಟಿರುವೆ.
    ಅವರು ಸುಲಭವಾಗಿ ಬಿದ್ದು ನಾಶವಾಗುವರು.
19 ಇದ್ದಕ್ಕಿದ್ದಂತೆ ಆಪತ್ತು ಬರುವುದು,
    ಆಗ ಆ ಗರ್ವಿಷ್ಠರು ನಾಶವಾಗುವರು.
ಭಯಂಕರವಾದ ಸಂಗತಿಗಳು ಅವರಿಗೆ ಸಂಭವಿಸುತ್ತವೆ;
    ಆಗ ಅವರು ಅಂತ್ಯಗೊಳ್ಳುವರು.
20 ಯೆಹೋವನೇ, ನಾವು ನಿದ್ರೆಯಿಂದ ಎಚ್ಚರಗೊಂಡಾಗ
    ಮರೆತುಬಿಡುವ ಕನಸಿನಂತಿದ್ದಾರೆ ಆ ಜನರು.
ನಾವು ಕನಸಿನಲ್ಲಿ ಕಾಣುವ ರಾಕ್ಷಸರಂತೆ
    ನೀನು ಅವರನ್ನು ಮಾಯಗೊಳಿಸುವೆ.

ಜ್ಞಾನೋಕ್ತಿಗಳು 8:32-9:6

32 “ಆದ್ದರಿಂದ ಮಕ್ಕಳೇ, ನನಗೆ ಕಿವಿಗೊಡಿರಿ!
    ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರಾಗಿದ್ದಾರೆ.
33 ನನ್ನ ಉಪದೇಶಗಳನ್ನು ಕೇಳಿ ಜ್ಞಾನವಂತರಾಗಿರಿ.
    ಕಿವಿಗೊಡದಿರಬೇಡಿ!
34 ನನಗೆ ಕಿವಿಗೊಡುವವನು ಧನ್ಯನಾಗಿದ್ದಾನೆ.
    ಅವನು ಪ್ರತಿದಿನ ನನ್ನ ಮನೆಬಾಗಿಲುಗಳ ಬಳಿಯಲ್ಲೂ ನನ್ನ ಬಾಗಿಲಿನ ನಿಲುವುಗಳ ಬಳಿಯಲ್ಲೂ ಕಾದುಕೊಂಡಿರುತ್ತಾನೆ.
35 ನನ್ನನ್ನು ಕಂಡುಕೊಂಡಂಥವನು ಜೀವವನ್ನು ಕಂಡುಕೊಳ್ಳುತ್ತಾನೆ.
    ಅವನಿಗೆ ಯೆಹೋವನ ಕೃಪೆಯು ದೊರೆಯುತ್ತದೆ.
36 ಆದರೆ ನನ್ನನ್ನು ಕಂಡುಕೊಳ್ಳಲಾರದವನು
    ತನಗೇ ಕೇಡುಮಾಡಿಕೊಳ್ಳುವನು.
ನನ್ನನ್ನು ದ್ವೇಷಿಸುವ ಜನರೆಲ್ಲರೂ ಮರಣವನ್ನು ಪ್ರೀತಿಸುವರು.”

ಜ್ಞಾನ ಮತ್ತು ಮೂರ್ಖತನ

ಜ್ಞಾನವೆಂಬಾಕೆ ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ. ಆಕೆ ಅದಕ್ಕೆ ಏಳು ಕಂಬಗಳನ್ನು ಹಾಕಿದ್ದಾಳೆ. ಜ್ಞಾನವೆಂಬಾಕೆ ಮಾಂಸದ ಅಡಿಗೆಯನ್ನೂ ದ್ರಾಕ್ಷಾರಸವನ್ನೂ ತಯಾರಿಸಿದ್ದಾಳೆ. ಆಕೆ ತನ್ನ ಮೇಜಿನ ಮೇಲೆ ಆಹಾರವನ್ನು ಇಟ್ಟಿದ್ದಾಳೆ. ಆಮೇಲೆ ಆಕೆ, ತನ್ನ ಸೇವಕಿಯರನ್ನು ಕಳುಹಿಸಿ ನಗರದ ಎತ್ತರವಾದ ಸ್ಥಳದಿಂದ, “ಕಲಿತುಕೊಳ್ಳಬೇಕಾಗಿರುವ ಜನರೇ, ಬನ್ನಿರಿ” ಎಂದು ಕೂಗುತ್ತಾಳೆ. ಆಕೆಯು ಬುದ್ಧಿಹೀನರಿಗೆ, “ಬನ್ನಿರಿ, ನನ್ನ ಜ್ಞಾನದ ಆಹಾರವನ್ನು ತಿನ್ನಿರಿ. ನಾನು ತಯಾರಿಸಿರುವ ದ್ರಾಕ್ಷಾರಸವನ್ನು ಕುಡಿಯಿರಿ. ನಿಮ್ಮ ಮೂರ್ಖ ಮಾರ್ಗಗಳನ್ನು ತೊರೆದುಬಿಡಿ. ಆಗ ನಿಮಗೆ ಜೀವವು ದೊರೆಯುವುದು. ವಿವೇಕಮಾರ್ಗದಲ್ಲಿ ಮುಂದೆ ಸಾಗಿರಿ” ಎಂದು ಆಕೆ ಹೇಳಿದಳು.

ಇಬ್ರಿಯರಿಗೆ 11:29-12:2

29 ಮೋಶೆಯಿಂದ ಮುನ್ನಡೆಸಲ್ಪಟ್ಟ ಜನರು ಕೆಂಪುಸಮುದ್ರವನ್ನು ಒಣಭೂಮಿಯೋ ಎಂಬಂತೆ ದಾಟಿದ್ದು ನಂಬಿಕೆಯಿಂದಲೇ. ಆದರೆ ಈಜಿಪ್ಟ್ ದೇಶದವರು ಕೆಂಪುಸಮುದ್ರವನ್ನು ದಾಟಲು ಪ್ರಯತ್ನಿಸಿ, ಮುಳುಗಿಹೋದರು.

30 ದೇವಜನರ ನಂಬಿಕೆಯಿಂದಲೇ ಜೆರಿಕೊ ಪಟ್ಟಣದ ಗೋಡೆಗಳ ಸುತ್ತಲೂ ಏಳು ದಿನಗಳವರೆಗೆ ಸುತ್ತಿದಾಗ ಅವು ಬಿದ್ದುಹೋದವು.

31 ರಹಾಬಳೆಂಬ ವೇಶ್ಯೆಯು ಇಸ್ರೇಲಿನ ಗೂಢಚಾರರನ್ನು ಬರಮಾಡಿಕೊಂಡು, ಅವರನ್ನು ಸ್ನೇಹಿತರಂತೆ ನೋಡಿಕೊಂಡಳು. ನಂಬಲೊಲ್ಲದ ಜನರನ್ನು ಕೊಂದಾಗ ಅವಳನ್ನು ಕೊಲ್ಲದೆ ಹೋದದ್ದು ಅವಳಲ್ಲಿದ್ದ ಆ ನಂಬಿಕೆಯಿಂದಲೇ.

32 ನಾನು ನಿಮಗೆ ಮತ್ತಷ್ಟು ದೃಷ್ಟಾಂತಗಳನ್ನು ಹೇಳುವ ಅಗತ್ಯವಿದೆಯೋ? ನಾನು ಗಿದ್ಯೋನನ, ಬಾರಾಕನ, ಸಂಸೋನನ, ಯೆಫ್ತಾಹನ, ದಾವೀದನ, ಸಮುವೇಲನ ಮತ್ತು ಪ್ರವಾದಿಗಳ ಕುರಿತು ನಿಮಗೆ ಹೇಳುವಷ್ಟು ಸಮಯ ನನಗಿಲ್ಲ. 33 ಆ ಜನರೆಲ್ಲರೂ ಬಲವಾದ ನಂಬಿಕೆಯುಳ್ಳವರಾಗಿದ್ದರು. ಆ ನಂಬಿಕೆಯಿಂದಲೇ ರಾಜ್ಯಗಳನ್ನು ಸೋಲಿಸಿದರು. ಅವರು ಯೋಗ್ಯವಾದ ಕಾರ್ಯಗಳನ್ನು ಮಾಡಿದರು ಮತ್ತು ದೇವರು ವಾಗ್ದಾನ ಮಾಡಿದ್ದವುಗಳನ್ನು ಪಡೆದುಕೊಂಡರು. ಅವರಲ್ಲಿ ಕೆಲವರು ತಮ್ಮ ನಂಬಿಕೆಯಿಂದ ಸಿಂಹಗಳ ಬಾಯಿಗಳನ್ನು ಮುಚ್ಚಿದರು; 34 ಕೆಲವರು ಉರಿಯುವ ಬೆಂಕಿಯನ್ನು ನಂದಿಸಿದರು; ಇನ್ನು ಕೆಲವರು ಕತ್ತಿಗಳ ಬಾಯಿಂದ ಪಾರಾದರು; ದುರ್ಬಲರಾಗಿದ್ದವರು ತಮ್ಮ ನಂಬಿಕೆಯಿಂದ ಪ್ರಬಲರಾದರು; ಯುದ್ಧದಲ್ಲಿ ಶಕ್ತಿಶಾಲಿಗಳಾಗಿ ಶತ್ರುಗಳನ್ನು ಸೋಲಿಸಿದರು. 35 ಸತ್ತುಹೋಗಿದ್ದವರು ಸಾವಿನಿಂದ ಮೇಲೆದ್ದರು ಮತ್ತು ಅವರನ್ನು ಅವರವರ ಕುಟುಂಬಗಳ ಸ್ತ್ರೀಯರಿಗೆ ಒಪ್ಪಿಸಲಾಯಿತು. ಇತರ ಕೆಲವರು ಯಾತನೆಯನ್ನು ಅನುಭವಿಸುತ್ತಿದ್ದಾಗಲೂ ಪುನರುತ್ಥಾನದ ನಂತರವಿರುವ ಶ್ರೇಷ್ಠ ಜೀವಿತಕ್ಕಾಗಿ ಬಿಡುಗಡೆ ಹೊಂದಲು ಒಪ್ಪಲಿಲ್ಲ. 36 ಕೆಲವರು ಇತರರಿಂದ ಅಪಹಾಸ್ಯಕ್ಕೆ ಗುರಿಯಾದರು, ಪೆಟ್ಟುಗಳನ್ನು ಅನುಭವಿಸಿದರು, ಸೆರೆವಾಸದಲ್ಲಿದ್ದರು. 37 ಕೆಲವರನ್ನು ಕಲ್ಲೆಸೆದು ಕೊಂದರು, ಕೆಲವರನ್ನು ಅರ್ಧಕತ್ತರಿಸಿ ಎರಡು ಭಾಗ ಮಾಡಿದರು. ಕೆಲವರನ್ನು ಕತ್ತಿಗಳಿಂದ ಇರಿದುಕೊಂದರು. ಇವರಲ್ಲಿ ಕೆಲವರು ಕುರಿ ಮತ್ತು ಹೋತಗಳ ಚರ್ಮಗಳನ್ನು ತೊಟ್ಟುಕೊಂಡಿದ್ದರು; ಕೆಲವರು ಬಡವರಾಗಿದ್ದರು; ಹಿಂಸೆಗೆ ಒಳಗಾಗಿದ್ದರು ಮತ್ತು ಜನರ ಕ್ರೂರ ವರ್ತನೆಗೆ ಗುರಿಯಾಗಿದ್ದರು. 38 ಇವರಿಗೆ ಈ ಲೋಕವು ಯೋಗ್ಯವಾಗಿರಲಿಲ್ಲ. ಇವರು ಮರುಭೂಮಿಗಳಲ್ಲಿ, ಬೆಟ್ಟಗಳಲ್ಲಿ ಅಲೆಯುತ್ತಾ ಗುಹೆಗಳಲ್ಲಿಯೂ ನೆಲದ ಕುಣಿಗಳಲ್ಲಿಯೂ ವಾಸಿಸುತ್ತಿದ್ದರು.

39 ಇವರೆಲ್ಲರೂ ತಮ್ಮ ನಂಬಿಕೆಯ ವಿಷಯದಲ್ಲಿ ಪ್ರಸಿದ್ಧರಾಗಿದ್ದರು. ಆದರೆ ದೇವರ ದೊಡ್ಡ ವಾಗ್ದಾನವನ್ನು ಇವರಲ್ಲಿ ಯಾರೂ ಹೊಂದಿಕೊಳ್ಳಲಿಲ್ಲ. 40 ದೇವರು ನಮಗೆ ಶ್ರೇಷ್ಠವಾದದ್ದನ್ನು ಕೊಡಲು ಯೋಜನೆ ಮಾಡಿದನು. ನಮ್ಮೊಡನೆ ಮಾತ್ರ ಅವರು ಪರಿಪೂರ್ಣರಾಗಬೇಕೆಂಬುದೇ ಆ ಯೋಜನೆ.

ಯೇಸುವನ್ನೇ ಅನುಸರಿಸಿರಿ

12 ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು. ನಾವು ಯಾವಗಲೂ ಯೇಸುವನ್ನು ಮಾದರಿಯಾಗಿ ಇಟ್ಟುಕೊಂಡಿರಬೇಕು. ನಮ್ಮ ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆತನೇ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡನು. ಈಗ ಆತನು ದೇವರ ಸಿಂಹಾಸನದ ಬಲಭಾಗದಲ್ಲಿ ಕುಳಿತಿರುವನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International