Revised Common Lectionary (Semicontinuous)
ಯೋಸೇಫನು ತಾನು ಯಾರೆಂದು ಹೇಳುವನು
45 ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿದ್ದವರ ಮುಂದೆ ತಾಳಿಕೊಳ್ಳಲಾರದೆ, “ಇಲ್ಲಿರುವ ಎಲ್ಲರನ್ನೂ ಹೊರಗೆ ಕಳುಹಿಸಿರಿ” ಎಂದು ಅಪ್ಪಣೆಕೊಟ್ಟನು. ಅಲ್ಲಿದ್ದವರು ಹೊರಗೆ ಹೋದರು; ಸಹೋದರರು ಮಾತ್ರ ಯೋಸೇಫನೊಡನೆ ಇದ್ದರು. 2 ಆಮೇಲೆ ಯೋಸೇಫನು ಗಟ್ಟಿಯಾಗಿ ಅತ್ತನು. ಫರೋಹನ ಮನೆಯಲ್ಲಿದ್ದ ಈಜಿಪ್ಟಿನವರೆಲ್ಲ ಅದನ್ನು ಕೇಳಿಸಿಕೊಂಡರು. 3 ಯೋಸೇಫನು ತನ್ನ ಸಹೋದರರಿಗೆ, “ನಾನು ನಿಮ್ಮ ತಮ್ಮನಾದ ಯೋಸೇಫ. ನನ್ನ ತಂದೆ ಚೆನ್ನಾಗಿದ್ದಾನೆಯೇ?” ಎಂದು ಕೇಳಿದನು. ಆದರೆ ಸಹೋದರರು ಅವನಿಗೆ ಉತ್ತರಿಸಲಿಲ್ಲ. ಅವರಿಗೆ ಭಯವಾಗಿತ್ತು ಮತ್ತು ಗಲಿಬಿಲಿಗೊಂಡಿದ್ದರು.
4 ಯೋಸೇಫನು ಮತ್ತೆ ತನ್ನ ಸಹೋದರರಿಗೆ, “ನನ್ನ ಬಳಿಗೆ ಬನ್ನಿ. ನನ್ನ ಹತ್ತಿರ ಬನ್ನಿ ಎಂದು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು. ಆದ್ದರಿಂದ ಸಹೋದರರು ಯೋಸೇಫನ ಹತ್ತಿರ ಹೋದರು. ಯೋಸೇಫನು ಅವರಿಗೆ, “ನಾನು ನಿಮ್ಮ ತಮ್ಮನಾದ ಯೋಸೇಫ. ನೀವು ಈಜಿಪ್ಟಿನವರಿಗೆ ಯಾವನನ್ನು ಗುಲಾಮನನ್ನಾಗಿ ಮಾರಿದಿರೋ ಅವನೇ ನಾನು. 5 ಈಗ ಚಿಂತಿಸಬೇಡಿ, ನೀವು ಮಾಡಿದ್ದಕ್ಕೆ ದುಃಖವನ್ನೂ ಪಡಬೇಡಿ. ನಾನು ಇಲ್ಲಿಗೆ ಬರಬೇಕೆಂಬುದು ದೇವರ ಯೋಜನೆಯಾಗಿತ್ತು. ನಾನು ನಿಮ್ಮನ್ನು ರಕ್ಷಿಸಲು ಇಲ್ಲಿಗೆ ಬಂದಿದ್ದೇನೆ. 6 ಈ ಭೀಕರವಾದ ಬರಗಾಲವು ಆರಂಭವಾಗಿ ಈಗಾಗಲೇ ಎರಡು ವರ್ಷಗಳಾಯಿತು. ಇನ್ನೂ ಐದು ವರ್ಷಗಳವರೆಗೆ ಬಿತ್ತನೆ ಇರುವುದಿಲ್ಲ; ಸುಗ್ಗಿಯೂ ಇರುವುದಿಲ್ಲ. 7 ಆದ್ದರಿಂದ ಈ ದೇಶದಲ್ಲಿ ತನ್ನ ಜನರನ್ನು ಕಾಪಾಡಲು ದೇವರು ನನ್ನನ್ನು ನಿಮಗಿಂತ ಮೊದಲೇ ಇಲ್ಲಿಗೆ ಕಳುಹಿಸಿದ್ದಾನೆ. 8 ನನ್ನನ್ನು ಇಲ್ಲಿಗೆ ಕಳುಹಿಸಿದ್ದು ನಿಮ್ಮ ತಪ್ಪಲ್ಲ. ಅದು ದೇವರ ಯೋಜನೆ. ದೇವರು ನನ್ನನ್ನು ಫರೋಹನ ಅತ್ಯುನ್ನತವಾದ ಅಧಿಕಾರಿಯನ್ನಾಗಿ ಮಾಡಿದ್ದಾನೆ. ನಾನು ಅವನ ಮನೆಗೆಲ್ಲಾ ಮತ್ತು ಈಜಿಪ್ಟಿಗೆಲ್ಲಾ ರಾಜ್ಯಪಾಲನಾಗಿದ್ದೇನೆ” ಎಂದು ಹೇಳಿದನು.
ಇಸ್ರೇಲರನ್ನು ಈಜಿಪ್ಟಿಗೆ ಆಮಂತ್ರಿಸಿದ್ದು
9 ಬಳಿಕ ಯೋಸೇಫನು, “ನನ್ನ ತಂದೆಯ ಬಳಿಗೆ ಬೇಗನೆ ಹೋಗಿ ಅವನಿಗೆ, ನಿನ್ನ ಮಗನಾದ ಯೋಸೇಫನು ಈ ಸಂದೇಶವನ್ನು ಕಳುಹಿಸಿದ್ದಾನೆ: ‘ದೇವರು ನನ್ನನ್ನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನನ್ನಾಗಿ ಮಾಡಿದ್ದಾನೆ. ತಡಮಾಡದೆ ನನ್ನ ಬಳಿಗೆ ಬಾ. 10 ನೀನು ಗೋಷೆನ್ ಪ್ರಾಂತ್ಯದಲ್ಲಿ ನನ್ನೊಂದಿಗೆ ವಾಸಿಸುವೆ. ನೀನೂ ನಿನ್ನ ಮಕ್ಕಳೂ ನಿನ್ನ ಮೊಮ್ಮಕ್ಕಳೂ ನಿಮ್ಮ ಎಲ್ಲಾ ಪಶುಗಳೊಡನೆ ಇಲ್ಲಿ ನೆಲೆಸಬಹುದು. 11 ಮುಂದಿನ ಐದು ವರ್ಷಗಳ ಬರಗಾಲದಲ್ಲಿ ನಾನು ನಿಮ್ಮನ್ನು ಪೋಷಿಸುವೆನು. ಆಗ ನಿನಗಾಗಲಿ ನಿನ್ನ ಕುಟುಂಬದವರಿಗಾಗಲಿ ಬಡತನವಿರುವುದಿಲ್ಲ’ ಎಂಬುದಾಗಿ ತಿಳಿಸಿರಿ” ಎಂದು ಹೇಳಿದನು.
12 ಯೋಸೇಫನು ತನ್ನ ಸಹೋದರರೊಂದಿಗೆ ಮಾತನ್ನು ಮುಂದುವರಿಸಿ, “ನಾನೇ ಯೋಸೇಫನೆಂದು ನಿಮಗೆ ಈಗ ಗೊತ್ತಾಗಿದೆ; ನಿಮ್ಮ ತಮ್ಮನಾದ ಬೆನ್ಯಾಮೀನನಿಗೂ ಗೊತ್ತಾಗಿದೆ. 13 ಆದ್ದರಿಂದ ಈಜಿಪ್ಟಿನಲ್ಲಿರುವ ಮಹಾ ಐಶ್ವರ್ಯವನ್ನೂ ನೀವು ಇಲ್ಲಿ ನೋಡಿರುವ ಪ್ರತಿಯೊಂದನ್ನೂ ನನ್ನ ತಂದೆಗೆ ತಿಳಿಸಿ ಬೇಗನೆ ಅವನನ್ನು ಕರೆದುಕೊಂಡು ಬನ್ನಿ” ಎಂದು ಹೇಳಿದನು. 14 ಆಮೇಲೆ ಯೋಸೇಫನು ತನ್ನ ತಮ್ಮನಾದ ಬೆನ್ಯಾಮೀನನನ್ನು ಅಪ್ಪಿಕೊಂಡು ಅತ್ತನು. ಬೆನ್ಯಾಮೀನನು ಸಹ ಅತ್ತನು. 15 ಆಮೇಲೆ ಯೋಸೇಫನು ತನ್ನ ಎಲ್ಲಾ ಸಹೋದರರಿಗೂ ಮುದ್ದಿಟ್ಟು ಅತ್ತನು. ಇದಾದ ಮೇಲೆ ಆ ಸಹೋದರರು ಅವನೊಂದಿಗೆ ಮಾತಾಡತೊಡಗಿದರು.
ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. ರಚನೆಗಾರ: ದಾವೀದ.
133 ಆಹಾ, ಸಹೋದರರು ಅನ್ಯೋನ್ಯತೆಯಿಂದಿರುವುದು
ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು.
2 ಅದು ಯಾಜಕನ ತಲೆಯ ಮೇಲೆ ಹಾಕಲ್ಪಟ್ಟು ಆರೋನನ ಗಡ್ಡಕ್ಕೂ
ಅಲ್ಲಿಂದ ಅವನ ಉಡುಪುಗಳ ಮೇಲೆಯೂ ಇಳಿದುಬರುವ ಪರಿಮಳ ತೈಲದಂತಿರುವುದು;
3 ಅದು ಹೆರ್ಮೋನ್ ಪರ್ವತದಿಂದ ಹುಟ್ಟಿ ಚೀಯೋನ್ ಪರ್ವತದ ಮೇಲೆ ಬೀಳುವ ದಟ್ಟವಾದ ಮಂಜಿನಂತಿರುವುದು.
ಯೆಹೋವನು ನಿತ್ಯಜೀವವೆಂಬ ತನ್ನ ಆಶೀರ್ವಾದವನ್ನು ಅನುಗ್ರಹಿಸಿದ್ದು ಚೀಯೋನಿನಲ್ಲಿಯೇ.
ದೇವರು ತನ್ನ ಜನರನ್ನು ಮರೆತಿಲ್ಲ
11 ಹಾಗಾದರೆ, “ದೇವರು ತನ್ನ ಜನರನ್ನು ತಿರಸ್ಕರಿಸಿದನೇ?” ಎಂದು ನಾನು ಕೇಳುತ್ತೇನೆ. ಇಲ್ಲ! ನಾನೂ ಒಬ್ಬ ಇಸ್ರೇಲನಾಗಿದ್ದೇನೆ. ನಾನು ಅಬ್ರಹಾಮನ ಕುಟುಂಬಕ್ಕೆ ಸೇರಿದವನಾಗಿದ್ದೇನೆ: ಬೆನ್ಯಾಮೀನನ ಕುಲದವನಾಗಿದ್ದೇನೆ. 2 ಇಸ್ರೇಲರು ಹುಟ್ಟುವುದಕ್ಕಿಂತ ಮೊದಲೇ ದೇವರು ಅವರನ್ನು ತನ್ನ ಜನರನ್ನಾಗಿ ಆರಿಸಿಕೊಂಡನು. ಆತನು ಅವರನ್ನು ಹೊರಕ್ಕೆ ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಪವಿತ್ರ ಗ್ರಂಥವು ಏನು ಹೇಳುತ್ತದೆ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ಇಸ್ರೇಲಿನ ಜನರ ವಿರೋಧವಾಗಿ ಎಲೀಯನು ದೇವರಿಗೆ ಮಾಡಿದ ಪ್ರಾರ್ಥನೆಯ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿದೆ.
29 ಆತನು, ತಾನು ಕರೆಯುವ ಜನರ ವಿಷಯವಾಗಿಯೂ ತಾನು ಅವರಿಗೆ ಕೊಡುವ ವರಗಳ ವಿಷಯವಾಗಿಯೂ ತನ್ನ ಮನಸ್ಸನ್ನು ಬದಲಾಯಿಸುವುದೇ ಇಲ್ಲ; ತಾನು ಜನರಿಗೆ ನೀಡಿದ ಕರೆಯನ್ನು ಹಿಂತೆಗೆದುಕೊಳ್ಳುವುದೇ ಇಲ್ಲ. 30 ಒಂದು ಕಾಲದಲ್ಲಿ ನೀವು ಆತನಿಗೆ ವಿಧೇಯರಾಗಿರಲಿಲ್ಲ. ಈಗಲಾದರೋ ನೀವು ಕರುಣೆಯನ್ನು ಹೊಂದಿಕೊಂಡಿರಿ. ಏಕೆಂದರೆ ಅವರು (ಯೆಹೂದ್ಯರು) ಆತನಿಗೆ ಅವಿಧೇಯರಾದರು. 31 ದೇವರು ನಿಮಗೆ ಕರುಣೆ ತೋರಿದ್ದರಿಂದ ಈಗ ಯೆಹೂದ್ಯರು ವಿಧೇಯರಾಗುವುದಿಲ್ಲ. ಆದರೆ ಅವರು ಸಹ ದೇವರಿಂದ ಕರುಣೆಯನ್ನು ಹೊಂದಿಕೊಳ್ಳಲೆಂದು ಹೀಗಾಯಿತು. 32 ಎಲ್ಲರೂ ದೇವರಿಗೆ ಅವಿಧೇಯರಾದರು. ದೇವರು ಎಲ್ಲರಿಗೂ ಕರುಣೆಯನ್ನು ತೋರಬೇಕೆಂದು ಎಲ್ಲರನ್ನೂ ಒಟ್ಟಾಗಿ ಅವಿಧೇಯತ್ವದಿಂದ ಬಂಧಿಸಿದ್ದಾನೆ.
10 ಯೇಸು ಜನರನ್ನು ತನ್ನ ಬಳಿಗೆ ಕರೆದು, “ನಾನು ಹೇಳುವುದನ್ನು ಆಲಿಸಿರಿ ಮತ್ತು ಅರ್ಥಮಾಡಿಕೊಳ್ಳಿರಿ. 11 ಒಬ್ಬನು ಕಲುಷಿತನಾಗುವುದು ತನ್ನ ಬಾಯಿಂದ ತಿನ್ನುವ ಪದಾರ್ಥಗಳಿಂದಲ್ಲ. ಅವನ ಬಾಯಿಂದ ಬರುವ ಕೆಟ್ಟಮಾತುಗಳೇ ಅವನನ್ನು ಕಲುಷಿತಗೊಳಿಸುತ್ತವೆ” ಎಂದು ಹೇಳಿದನು.
12 ಆಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ನೀನು ಹೇಳಿದ್ದನ್ನು ಕೇಳಿ ಫರಿಸಾಯರು ಬೇಸರಗೊಂಡದ್ದು ನಿನಗೆ ತಿಳಿಯಿತೋ?” ಎಂದು ಕೇಳಿದರು.
13 ಯೇಸು, “ಪರಲೋಕದಲ್ಲಿರುವ ನನ್ನ ತಂದೆ ನೆಡದಿರುವ ಪ್ರತಿಯೊಂದು ಗಿಡವನ್ನು ಬೇರಿನೊಂದಿಗೆ ಕಿತ್ತುಹಾಕಲಾಗುವುದು. 14 ಫರಿಸಾಯರಿಂದ ದೂರವಾಗಿರಿ. ಅವರೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಹಳ್ಳದಲ್ಲಿ ಬೀಳುವರು” ಎಂದು ಉತ್ತರಕೊಟ್ಟನು.
15 ಆಗ ಪೇತ್ರನು, “ನೀನು ಜನರಿಗೆ ಮೊದಲು ಹೇಳಿದ್ದನ್ನು ನಮಗೆ ವಿವರಿಸು” ಎಂದನು.
16 ಯೇಸು, “ನಿಮಗೆ ಇನ್ನೂ ಅರ್ಥವಾಗುವುದಿಲ್ಲವೇ? 17 ಒಬ್ಬ ಮನುಷ್ಯನ ಬಾಯಿಂದ ಆಹಾರ ಹೊಟ್ಟೆಯೊಳಕ್ಕೆ ಹೋಗುತ್ತದೆ. ನಂತರ ಅದು ದೇಹದಿಂದ ಹೊರಗೆ ಹೋಗಿಬಿಡುತ್ತದೆ. ಇದು ನಿಮಗೆ ತಿಳಿದೇ ಇದೆ. 18 ಆದರೆ ಒಬ್ಬ ಮನುಷ್ಯನ ಬಾಯಿಂದ ಹೊರಡುವ ಕೆಟ್ಟಮಾತುಗಳು ಅವನ ಆಲೋಚನೆಯಿಂದ ಉದ್ಭವಿಸಿ ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ. 19 ಮನುಷ್ಯನ ಮನಸ್ಸಿನಲ್ಲಿ ದುರಾಲೋಚನೆ, ಕೊಲೆ, ವ್ಯಭಿಚಾರ, ಸೂಳೆಗಾರಿಕೆ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ಬೈಗಳು ಹೊರಟುಬರುತ್ತವೆ. 20 ಇವು ಮನುಷ್ಯನನ್ನು ಅಶುದ್ಧನನ್ನಾಗಿ ಮಾಡುತ್ತವೆ. ಆದರೆ ಊಟಕ್ಕೆ ಮೊದಲು ಕೈತೊಳೆಯದ ಮಾತ್ರಕ್ಕೆ ಮನುಷ್ಯನೇನೂ ಅಶುದ್ಧನಾಗುವುದಿಲ್ಲ” ಎಂದು ಹೇಳಿದನು.
ಯೆಹೂದ್ಯಳಲ್ಲದ ಸ್ತ್ರೀಗೆ ಯೇಸು ಮಾಡಿದ ಸಹಾಯ
(ಮಾರ್ಕ 7:24-30)
21 ಯೇಸು ಆ ಸ್ಥಳವನ್ನು ಬಿಟ್ಟು, ಟೈರ್ ಮತ್ತು ಸೀದೋನ್ಗಳ ಸುತ್ತಮುತ್ತಲಿನ ಪ್ರದೇಶಕ್ಕೆ ಹೋದನು. 22 ಆ ಸ್ಥಳದಿಂದ ಕಾನಾನ್ಯಳಾದ ಒಬ್ಬ ಸ್ತ್ರೀ ಯೇಸುವಿನ ಬಳಿಗೆ ಬಂದು, “ಪ್ರಭುವೇ, ದಾವೀದನ ಮಗನೇ, ದಯವಿಟ್ಟು ನನಗೆ ಕರುಣೆ ತೋರು! ನನ್ನ ಮಗಳಲ್ಲಿ ದೆವ್ವ ಸೇರಿಕೊಂಡಿದೆ ಮತ್ತು ಆಕೆ ಬಹಳ ಸಂಕಟಪಡುತ್ತಿದ್ದಾಳೆ” ಎಂದು ಗಟ್ಟಿಯಾಗಿ ಕೂಗಿಕೊಂಡಳು.
23 ಆದರೆ ಯೇಸು ಆ ಸ್ತ್ರೀಗೆ ಉತ್ತರ ಕೊಡಲಿಲ್ಲ. ಆದ್ದರಿಂದ ಶಿಷ್ಯರು ಯೇಸುವಿನ ಬಳಿಗೆ ಬಂದು, “ಆ ಸ್ತ್ರೀಗೆ ಹೊರಟುಹೋಗುವುದಕ್ಕೆ ಹೇಳು. ಆಕೆಯು ಕೂಗಿಕೊಂಡು ನಮ್ಮ ಹಿಂದೆಯೇ ಬರುತ್ತಿದ್ದಾಳೆ” ಎಂದು ಕೇಳಿಕೊಂಡರು.
24 ಯೇಸು, “ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರೇಲರ ಬಳಿಗೆ ಮಾತ್ರ ದೇವರು ನನ್ನನ್ನು ಕಳುಹಿಸಿದನು” ಎಂದನು.
25 ಆಗ ಆ ಸ್ತ್ರೀಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಅಡ್ಡಬಿದ್ದು, “ಪ್ರಭುವೇ, ನನಗೆ ಸಹಾಯ ಮಾಡು” ಎಂದು ಕೇಳಿದಳು.
26 ಯೇಸು, “ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದುಕೊಂಡು ನಾಯಿಗಳಿಗೆ ಕೊಡುವುದು ಸರಿಯಲ್ಲ” ಎಂದು ಉತ್ತರಕೊಟ್ಟನು.
27 ಆ ಸ್ತ್ರೀಯು, “ಹೌದು ಪ್ರಭುವೇ, ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ಆಹಾರದ ತುಂಡುಗಳನ್ನು ತಿನ್ನುತ್ತವೆಯಲ್ಲಾ” ಎಂದಳು.
28 ಆಗ ಯೇಸು, “ಅಮ್ಮಾ, ನಿನ್ನ ನಂಬಿಕೆ ದೊಡ್ಡದು. ನಿನ್ನ ಕೋರಿಕೆಯನ್ನು ನಾನು ಈಡೇರಿಸುತ್ತೇನೆ” ಎಂದನು. ಆ ಕ್ಷಣದಲ್ಲೇ ಆಕೆಯ ಮಗಳು ಗುಣವಾದಳು.
Kannada Holy Bible: Easy-to-Read Version. All rights reserved. © 1997 Bible League International