Revised Common Lectionary (Semicontinuous)
ಸ್ತುತಿಗೀತೆ. ರಚನೆಗಾರ: ದಾವೀದ.
139 ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ
ಸಂಪೂರ್ಣವಾಗಿ ತಿಳಿದುಕೊಂಡಿರುವೆ.
2 ನಾನು ಕುಳಿತುಕೊಳ್ಳುವುದೂ ಎದ್ದೇಳುವುದೂ ನಿನಗೆ ತಿಳಿದಿದೆ.
ನೀನು ಬಹುದೂರದಿಂದಲೇ ನನ್ನ ಆಲೋಚನೆಗಳನ್ನು ತಿಳಿದಿರುವೆ.
3 ನಾನು ಎಲ್ಲಿಗೇ ಹೋಗುತ್ತಿದ್ದರೂ ಎಲ್ಲೇ ಮಲಗಿದ್ದರೂ ನಿನಗೆ ತಿಳಿದಿರುತ್ತದೆ.
ನನ್ನ ಕಾರ್ಯಗಳೆಲ್ಲಾ ನಿನಗೆ ತಿಳಿದಿದೆ.
4 ಯೆಹೋವನೇ, ನನ್ನ ಬಾಯಿಂದ ಮಾತುಗಳು ಹೊರಡುವುದಕ್ಕಿಂತ ಮೊದಲೇ
ನಾನು ಹೇಳಬೇಕೆಂದಿರುವುದು ನಿನಗೆ ತಿಳಿದಿದೆ.
5 ನೀನು ನನ್ನ ಸುತ್ತಲೂ ಆವರಿಸಿರುವೆ;
ನಿನ್ನ ಹಸ್ತವನ್ನು ನನ್ನ ಮೇಲೆ ಇಟ್ಟಿರುವೆ.
6 ನನ್ನ ವಿಷಯವಾಗಿ ನನಗಿಂತಲೂ ನಿನಗೆ ಎಷ್ಟೋ ಹೆಚ್ಚಾಗಿ ತಿಳಿದಿರುವುದು ನನ್ನನ್ನು ಆಶ್ಚರ್ಯಗೊಳಿಸಿದೆ,
ಅದನ್ನು ಗ್ರಹಿಸಿಕೊಳ್ಳುವುದಕ್ಕೂ ನನ್ನಿಂದಾಗದು.
13 ನನ್ನ ಅಂತರೀಂದ್ರಿಯಗಳನ್ನು ಸೃಷ್ಟಿಮಾಡಿದವನೂ ನೀನೇ.
ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನೇ.
14 ನಿನ್ನ ಎಲ್ಲಾ ಅದ್ಭುತಕಾರ್ಯಗಳಿಗಾಗಿ ನಿನಗೆ ಕೃತಜ್ಞತಾಸ್ತುತಿ ಮಾಡುವೆನು.
ನಿನ್ನ ಕಾರ್ಯಗಳು ಅದ್ಭುತಕರವಾಗಿವೆಯೆಂದು ನಾನು ಗ್ರಹಿಸಿಕೊಂಡಿರುವೆ.
15 ನನ್ನ ವಿಷಯವೆಲ್ಲಾ ನಿನಗೆ ಗೊತ್ತಿದೆ.
ತಾಯಿಗರ್ಭದಲ್ಲಿ ನನ್ನ ದೇಹ ರೂಪಗೊಳ್ಳುತ್ತಿದ್ದಾಗ ನನ್ನ ಎಲುಬುಗಳು ಬೆಳೆಯುವುದನ್ನೂ ನೀನು ನೋಡಿದೆ.
16 ನನ್ನ ದೇಹದ ಅಂಗಾಂಗಗಳು ಬೆಳೆಯುವುದನ್ನೂ ನೀನು ಗಮನಿಸಿದೆ.
ನನ್ನ ಆಯುಷ್ಕಾಲದ ಮೊದಲನೆ ದಿನ ಆರಂಭವಾಗುವುದಕ್ಕಿಂತ ಮೊದಲೇ ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.
17 ದೇವರೇ, ನಿನ್ನ ಆಲೋಚನೆಗಳು ನನಗೆ ಎಷ್ಟೋ ಮುಖ್ಯವಾಗಿವೆ.
ಅವು ಅಸಂಖ್ಯಾತವಾಗಿವೆ.
18 ಅವುಗಳನ್ನು ಎಣಿಸುವುದಾದರೆ, ಸಮುದ್ರದ ಮರಳಿಗಿಂತಲೂ ಹೆಚ್ಚಾಗಿವೆ.
ನಾನು ಎಚ್ಚರಗೊಂಡಾಗ ಮುಂಚಿನಂತೆ ನಿನ್ನೊಂದಿಗೇ ಇರುವೆನು.
21 ಯೆಹೋವನು ಹನ್ನಳಿಗೆ ದಯೆತೋರಿದನು. ಅವಳಿಗೆ ಮೂರು ಮಂದಿ ಗಂಡುಮಕ್ಕಳೂ ಇಬ್ಬರು ಹೆಣ್ಣುಮಕ್ಕಳೂ ಆದರು. ಬಾಲಕನಾದ ಸಮುವೇಲನು ಯೆಹೋವನ ಸನ್ನಿಧಿಯಲ್ಲಿ ದೊಡ್ಡವನಾದನು.
ಏಲಿಯು ತನ್ನ ದುಷ್ಟಮಕ್ಕಳನ್ನು ಹತೋಟಿಯಲ್ಲಿಡಲಿಲ್ಲ
22 ಏಲಿಯು ಬಹಳ ವೃದ್ಧನಾದನು. ತನ್ನ ಗಂಡುಮಕ್ಕಳು ಶೀಲೋವಿನಲ್ಲಿ ಇಸ್ರೇಲರೊಂದಿಗೆ ನಡೆದುಕೊಳ್ಳುತ್ತಿರುವ ರೀತಿಯನ್ನು ಮತ್ತು ಅವರು ದೇವದರ್ಶನ ಗುಡಾರದ ಬಾಗಿಲಿನಲ್ಲಿ ಸೇವೆ ಮಾಡುತ್ತಿರುವ ಸ್ತ್ರೀಯರೊಡನೆ ಕೂಡುತ್ತಿರುವುದನ್ನು ಅವನು ಕೇಳುತ್ತಿದ್ದನು.
23 ಏಲಿಯು ತನ್ನ ಗಂಡುಮಕ್ಕಳಿಗೆ, “ಇಲ್ಲಿಯ ಜನರು ನೀವು ಮಾಡುವ ದುಷ್ಕೃತ್ಯಗಳ ಬಗ್ಗೆ ತಿಳಿಸಿದ್ದಾರೆ. ನೀವು ಇಂತಹ ದುಷ್ಕೃತ್ಯಗಳನ್ನು ಏಕೆ ಮಾಡುತ್ತೀರಿ? 24 ಮಕ್ಕಳೇ, ಇಂತಹ ದುಷ್ಕೃತ್ಯಗಳನ್ನು ಮಾಡಬೇಡಿ. ಯೆಹೋವನ ಜನರು ನಿಮ್ಮ ಬಗ್ಗೆ ಕೆಟ್ಟ ಸಂಗತಿಗಳನ್ನು ಮಾತಾಡುತ್ತಿದ್ದಾರೆ. 25 ಒಬ್ಬ ಮನುಷ್ಯನು ಬೇರೊಬ್ಬನ ವಿರುದ್ಧ ಅಪರಾಧ ಮಾಡಿದರೆ, ಯೆಹೋವನು ಅವನಿಗೆ ಸಹಾಯ ಮಾಡಬಹುದು, ಆದರೆ ಒಬ್ಬ ಮನುಷ್ಯನು ಯೆಹೋವನ ವಿರುದ್ಧವೇ ಅಪರಾಧ ಮಾಡಿದರೆ, ಆಗ ಅವನಿಗೆ ಸಹಾಯ ಮಾಡುವವರು ಯಾರು?” ಎಂದು ಬುದ್ಧಿಮಾತು ಹೇಳಿದನು.
ಆದರೆ ಏಲಿಯ ಮಾತನ್ನು ಅವನ ಮಕ್ಕಳು ಕೇಳಲಿಲ್ಲ. ಆದ್ದರಿಂದ ಯೆಹೋವನು ಏಲಿಯ ಮಕ್ಕಳನ್ನು ಕೊಲ್ಲಲು ನಿರ್ಧರಿಸಿದನು.
ಹತ್ತು ಮಂದಿ ಕನ್ನಿಕೆಯರನ್ನು ಕುರಿತ ಸಾಮ್ಯ
25 “ಆ ದಿನಗಳಲ್ಲಿ ಪರಲೋಕರಾಜ್ಯವು ಹೇಗಿರುತ್ತದೆ ಎನ್ನುವುದಕ್ಕೆ ಈ ಸಾಮ್ಯವು ಉದಾಹರಣೆಯಾಗಿದೆ. ಹತ್ತು ಮಂದಿ ಕನ್ನಿಕೆಯರು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳಲು ಹೊರಟರು. 2 ಅವರಲ್ಲಿ ಐದು ಮಂದಿ ಬುದ್ಧಿಹೀನರಾಗಿದ್ದರು. ಇನ್ನುಳಿದ ಐದು ಮಂದಿ ಬುದ್ಧಿವಂತೆಯರಾಗಿದ್ದರು. 3 ಬುದ್ಧಿಹೀನ ಕನ್ನಿಕೆಯರು ತಮ್ಮ ದೀಪಾರತಿಗಳನ್ನು ತಂದರೇ ಹೊರತು ಬೇಕಾಗುವಷ್ಟು ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. 4 ಬುದ್ಧಿವಂತೆಯರು ತಮ್ಮ ದೀಪಗಳೊಂದಿಗೆ ಬೇಕಾದಷ್ಟು ಎಣ್ಣೆಯನ್ನೂ ತೆಗೆದುಕೊಂಡರು. 5 ಮದುಮಗನ ಆಗಮನ ತಡವಾಯಿತು. ಅವರೆಲ್ಲರೂ ಆಯಾಸದಿಂದ ತೂಕಡಿಸುತ್ತಾ ನಿದ್ರೆಹೋದರು.
6 “ಮಧ್ಯರಾತ್ರಿಯಲ್ಲಿ, ‘ಮದುಮಗನು ಬರುತ್ತಿದ್ದಾನೆ! ಬನ್ನಿರಿ, ಆತನನ್ನು ಸಂಧಿಸಿರಿ!’ ಎಂದು ಯಾರೋ ಒಬ್ಬನು ಪ್ರಕಟಿಸಿದನು.
7 “ಆಗ ಕನ್ನಿಕೆಯರೆಲ್ಲ ಎಚ್ಚರಗೊಂಡು ತಮ್ಮ ದೀಪಾರತಿಗಳನ್ನು ಸಿದ್ಧಮಾಡಿಕೊಂಡರು. 8 ಬುದ್ಧಿಹೀನ ಕನ್ನಿಕೆಯರು ಬುದ್ಧಿವಂತ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿ. ನಮ್ಮ ದೀಪಾರತಿಗಳಲ್ಲಿದ್ದ ಎಣ್ಣೆಯೆಲ್ಲಾ ಮುಗಿಯಿತು’ ಎಂದರು.
9 “ಬುದ್ಧಿವಂತೆಯರು, ‘ಇಲ್ಲ! ನಮ್ಮಲ್ಲಿರುವ ಎಣ್ಣೆ ನಮಗೇ ಸಾಕಾಗದಿರಬಹುದು. ಅಂಗಡಿಗೆ ಹೋಗಿ ಕೊಂಡುಕೊಳ್ಳಿರಿ’ ಎಂದು ಉತ್ತರಕೊಟ್ಟರು.
10 “ಆದ್ದರಿಂದ ಐದು ಮಂದಿ ಬುದ್ಧಿಹೀನ ಕನ್ನಿಕೆಯರು ಎಣ್ಣೆ ಕೊಂಡುಕೊಳ್ಳುವುದಕ್ಕೆ ಹೋದರು. ಅವರು ಹೋಗುತ್ತಿರುವಾಗ, ಮದುಮಗನು ಬಂದನು. ಸಿದ್ಧವಾಗಿದ್ದ ಕನ್ನಿಕೆಯರು ಮದುಮಗನ ಜೊತೆಯಲ್ಲಿ ಔತಣಕ್ಕೆ ಹೋದರು. ನಂತರ ಬಾಗಿಲು ಮುಚ್ಚಲಾಯಿತು.
11 “ತರುವಾಯ ಬುದ್ಧಿಹೀನ ಕನ್ನಿಕೆಯರು ಬಂದು, ‘ಸ್ವಾಮೀ, ಸ್ವಾಮೀ, ಒಳಗೆ ಬರಲು ನಮಗೆ ಬಾಗಿಲು ತೆರೆ’ ಅಂದರು.
12 “ಆದರೆ ಮದುಮಗನು, ‘ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ನೀವು ಯಾರೋ ನನಗೆ ಗೊತ್ತಿಲ್ಲ’ ಎಂದು ಉತ್ತರಕೊಟ್ಟನು.
13 “ಆದ್ದರಿಂದ ಯಾವಾಗಲೂ ಸಿದ್ಧವಾಗಿರಿ. ಮನುಷ್ಯಕುಮಾರನು ಬರುವ ದಿನವಾಗಲಿ ಸಮಯವಾಗಲಿ ನಿಮಗೆ ಗೊತ್ತಿಲ್ಲ.
Kannada Holy Bible: Easy-to-Read Version. All rights reserved. © 1997 Bible League International