Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 77

ರಚನೆಗಾರ: ಆಸಾಫ.

77 ನಾನು ಸ್ವರವೆತ್ತಿ ದೇವರಿಗೆ ಮೊರೆಯಿಡುವೆನು.
    ದೇವರೇ, ಸ್ವರವೆತ್ತಿ ಮೊರೆಯಿಡುವೆನು, ನನಗೆ ಕಿವಿಗೊಡು.
ನನ್ನ ಯೆಹೋವನೇ, ಇಕ್ಕಟ್ಟಿನಲ್ಲಿ ನಿನ್ನನ್ನು ಕರೆದೆನು;
    ರಾತ್ರಿಯೆಲ್ಲಾ ನಿನಗಾಗಿ ಕೈಚಾಚಿಕೊಂಡಿದ್ದೆನು.
    ಆದರೆ ನನ್ನ ಮನಸ್ಸು ಸಮಾಧಾನಗೊಳ್ಳಲಿಲ್ಲ.
ನಾನು ದೇವರನ್ನೇ ಧ್ಯಾನಿಸುತ್ತಾ ನನ್ನ ವ್ಯಥೆಯನ್ನು ಹೇಳಿಕೊಳ್ಳಬಯಸಿದೆ.
    ಆದರೂ ನನ್ನಿಂದಾಗಲಿಲ್ಲ.
ನೀನು ನನಗೆ ನಿದ್ರೆಮಾಡಗೊಡಿಸಲಿಲ್ಲ.
    ನಾನು ಬಹು ಗಲಿಬಿಲಿಗೊಂಡಿದ್ದರಿಂದ ನಿನ್ನೊಂದಿಗೆ ಮಾತಾಡಲಾಗಲಿಲ್ಲ.
ಹಿಂದಿನಕಾಲದ ಬಗ್ಗೆ ಯೋಚಿಸತೊಡಗಿದೆನು.
    ಬಹುಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ಯೋಚಿಸತೊಡಗಿದೆನು.
ರಾತ್ರಿಯಲ್ಲಿ, ನಾನು ಮಾಡುತ್ತಿದ್ದ ಗಾನವನ್ನು ನೆನಸಿಕೊಳ್ಳುವೆನು;
    ಆಂತರ್ಯದಲ್ಲಿ ಮಾತಾಡುತ್ತಾ ಅರ್ಥಮಾಡಿಕೊಳ್ಳಲು ಪ್ರಯತ್ನಿಸುವೆನು.
ನಾನು ಆಶ್ಚರ್ಯದಿಂದ ಹೀಗೆಂದುಕೊಳ್ಳುವೆನು:
    “ನಮ್ಮ ಯೆಹೋವನು ನಮ್ಮನ್ನು ಶಾಶ್ವತವಾಗಿ ಕೈಬಿಟ್ಟಿರುವನೇ?
    ಆತನು ನಮ್ಮನ್ನು ಮತ್ತೆಂದಾದರೂ ಅಪೇಕ್ಷಿಸುವನೇ?
ದೇವರ ಕೃಪಾವಾತ್ಸಲ್ಯವು ಎಂದೆಂದಿಗೂ ನಿಂತುಹೋಯಿತೇ?
    ಆತನು ನಮ್ಮೊಂದಿಗೆ ಮತ್ತೆಂದೂ ಮಾತಾಡುವುದಿಲ್ಲವೇ?
ದೇವರು ಕರುಣೆಯನ್ನು ಮರೆತುಬಿಟ್ಟಿರುವನೇ?
    ಆತನ ಕನಿಕರವು ಬದಲಾವಣೆ ಹೊಂದಿ ಕೋಪವಾಗಿರುವುದೇ?”

10 ಬಳಿಕ ನಾನು ಹೀಗೆ ಆಲೋಚಿಸಿಕೊಂಡೆ: “ಮಹೋನ್ನತವಾದ ದೇವರು ತನ್ನ ಶಕ್ತಿಯನ್ನು ಕಳೆದುಕೊಂಡನೇ?”
    ಎಂಬುದೇ ನನ್ನನ್ನು ಕಾಡಿಸುವ ಪ್ರಶ್ನೆ.

11 ಯೆಹೋವನೇ, ನಿನ್ನ ಕಾರ್ಯಗಳನ್ನು ಜ್ಞಾಪಿಸಿಕೊಳ್ಳುವೆನು.
    ಬಹುಕಾಲದ ಹಿಂದೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಿಸಿಕೊಳ್ಳುವೆನು.
12 ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು;
    ನಿನ್ನ ಕಾರ್ಯಗಳ ಕುರಿತಾಗಿ ಆಲೋಚಿಸುವೆನು.
13 ದೇವರೇ, ನಿನ್ನ ಮಾರ್ಗಗಳು ಪರಿಶುದ್ಧವಾಗಿವೆ.
    ದೇವರೇ, ನಿನ್ನಂತೆ ಮಹತ್ವವುಳ್ಳವರು ಬೇರೆ ಯಾರೂ ಇಲ್ಲ.
14 ಅದ್ಭುತಕಾರ್ಯಗಳನ್ನು ಮಾಡಿದ ದೇವರು ನೀನೇ.
    ನೀನು ಜನರಿಗೆ ನಿನ್ನ ಮಹಾಶಕ್ತಿಯನ್ನು ತೋರಿಸಿದೆ.
15 ನೀನು ನಿನ್ನ ಶಕ್ತಿಯಿಂದ ನಿನ್ನ ಜನರನ್ನು ರಕ್ಷಿಸಿದೆ.
    ಯಾಕೋಬನ ಮತ್ತು ಯೋಸೇಫನ ಸಂತತಿಯವರನ್ನು ನೀನು ರಕ್ಷಿಸಿದೆ.

16 ದೇವರೇ, ನಿನ್ನನ್ನು ಕಂಡು ಜಲರಾಶಿಗಳು ಭಯಗೊಂಡವು.
    ಆಳವಾದ ಜಲರಾಶಿಗಳು ಭಯದಿಂದ ನಡುಗಿದವು.
17 ದಟ್ಟವಾದ ಕಪ್ಪುಮೋಡಗಳು ಮಳೆಗರೆದವು.
    ಜನರಿಗೆ ಮೇಘಮಂಡಲದಿಂದ ಗುಡುಗು ಕೇಳಿಸಿತು.
    ನಿನ್ನ ಮಿಂಚಿನ ಬಾಣಗಳು ಆ ಮೋಡಗಳಲ್ಲಿ ಹಾರಿದವು.
18 ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು.
    ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು.
    ಭೂಮಿಯು ಅಲ್ಲಾಡಿ ಕಂಪಿಸಿತು.
19 ನೀನು ಸಮುದ್ರದಲ್ಲಿ ಮಾರ್ಗಮಾಡಿದೆ;
    ಆಳವಾದ ಜಲರಾಶಿಗಳನ್ನು ದಾಟಿದೆ.
    ಆದರೆ ನಿನ್ನ ಹೆಜ್ಜೆಯ ಗುರುತು ಕಾಣಲೇ ಇಲ್ಲ.
20 ಕುರುಬನು ಕುರಿಹಿಂಡನ್ನು ಕರೆದೊಯ್ಯುವಂತೆ
    ನಿನ್ನ ಜನರನ್ನು ಕರೆದೊಯ್ಯಲು ಮೋಶೆಯನ್ನೂ ಆರೋನನನ್ನೂ ಉಪಯೋಗಿಸಿದೆ.

ಜ್ಞಾನೋಕ್ತಿಗಳು 30:1-9

ಯಾಕೆಯ ಮಾಗನಾದ ಅಗೂರನ ಜ್ಞಾನೋಕ್ತಿಗಳು

30 ಮಾಸ್ಸಾದ ಯಾಕೆ ಎಂಬವನ ಮಗನಾದ ಅಗೂರನ ನುಡಿಗಳಿವು. ಇಥಿಯೇಲನಿಗೂ ಉಕ್ಕಾಲನಿಗೂ ಇವನು ನೀಡಿದ ಸಂದೇಶವಿದು:

ನಾನು ಬೇರೆಯವರಿಗಿಂತ ದಡ್ಡನಾಗಿರುವೆ. ಸರ್ವಸಾಮಾನ್ಯವಾದ ಬುದ್ಧಿಯೂ ನನಗಿಲ್ಲ. ನಾನು ಜ್ಞಾನವನ್ನು ಕಲಿತವನಲ್ಲ; ಪರಿಶುದ್ಧನಾದ ದೇವರ ಬಗ್ಗೆಯೂ ಗೊತ್ತಿಲ್ಲ. ಎಂದಾದರೂ ಪರಲೋಕಕ್ಕೆ ಏರಿಹೋಗಿ ಇಳಿದುಬಂದವನು ಯಾರು? ಗಾಳಿಯನ್ನು ತನ್ನ ಕೈಯಲ್ಲಿ ಹಿಡಿದವನು ಯಾರು? ತನ್ನ ಉಡುಪಿನಲ್ಲಿ ಸಮುದ್ರವನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಮೇರೆಗಳನ್ನು ಹಾಕಿದವನು ಯಾರು? ಈ ಕಾರ್ಯಗಳನ್ನು ಯಾವನಾದರೂ ಮಾಡಿದ್ದರೆ, ಅವನು ಯಾರು? ಅವನು ಕುಟುಂಬ ಎಲ್ಲಿದೆ?

ದೇವರು ಹೇಳುವ ಪ್ರತಿಯೊಂದು ಮಾತೂ ನಂಬಿಕೆಗೆ ಯೋಗ್ಯವಾಗಿದೆ. ತನ್ನ ಬಳಿಗೆ ಬರುವ ಜನರಿಗೆ ದೇವರು ಆಶ್ರಯದುರ್ಗವಾಗಿದ್ದಾನೆ. ಆದ್ದರಿಂದ ದೇವರು ಹೇಳುವ ಸಂಗತಿಗಳಿಗೆ ಏನನ್ನೂ ಸೇರಿಸಬೇಡ. ನೀನು ಬದಲಾಯಿಸಿದರೆ, ಆತನು ನಿನ್ನನ್ನು ಶಿಕ್ಷಿಸುವನು ಮತ್ತು ನಿನ್ನನ್ನು ಸುಳ್ಳುಗಾರನೆಂದು ರುಜುವಾತು ಮಾಡುವನು.

ಯೆಹೋವನೇ, ನಾನು ಸಾಯುವ ಮೊದಲು ನೀನು ನನಗೋಸ್ಕರ ಎರಡು ಕಾರ್ಯಗಳನ್ನು ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುವೆ. ಸುಳ್ಳುಹೇಳದಂತೆ ನನಗೆ ಸಹಾಯಮಾಡು. ನನ್ನನ್ನು ತುಂಬ ಐಶ್ವರ್ಯವಂತನನ್ನಾಗಿಯೂ ಮಾಡಬೇಡ; ತುಂಬ ಬಡವನನ್ನಾಗಿಯೂ ಮಾಡಬೇಡ; ಅನುದಿನಕ್ಕೆ ಬೇಕಾದವುಗಳನ್ನು ಮಾತ್ರ ಕೊಡು. ನನಗೆ ಹೆಚ್ಚಾಗಿದ್ದರೆ, ನಿನ್ನನ್ನೇ ತಿರಸ್ಕರಿಸಿ, “ನನಗೆ ಯೆಹೋವನ ಅಗತ್ಯವಿಲ್ಲ” ಎಂದು ಹೇಳುವೆನು. ನಾನು ಬಡವನಾಗಿದ್ದರೆ, ಕಳವುಮಾಡಿ ನಿನ್ನ ಹೆಸರಿಗೆ ಅವಮಾನ ಮಾಡುವೆನು.

ಮತ್ತಾಯ 4:1-11

ಯೇಸುವಿಗಾದ ಶೋಧನೆ

(ಮಾರ್ಕ 1:12-13; ಲೂಕ 4:1-13)

ಆಗ ದೇವರಾತ್ಮನು ಸೈತಾನನಿಂದ ಶೋಧಿಸಲ್ಪಡಲು ಯೇಸುವನ್ನು ಅಡವಿಗೆ ನಡೆಸಿದನು. ಯೇಸು ನಲವತ್ತು ದಿನ ಹಗಲಿರುಳು ಏನನ್ನೂ ತಿನ್ನಲಿಲ್ಲ. ಬಳಿಕ ಆತನಿಗೆ ಬಹಳ ಹಸಿವಾಯಿತು. ಆಗ ಆತನನ್ನು ಶೋಧಿಸಲು ಸೈತಾನನು ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳು ರೊಟ್ಟಿಗಳಾಗಲೆಂದು ಆಜ್ಞಾಪಿಸು” ಅಂದನು.

ಯೇಸು ಅವನಿಗೆ,

“‘ಮನುಷ್ಯನು ಬದುಕುವುದು ಕೇವಲ ರೊಟ್ಟಿಯಿಂದಲ್ಲ,
    ಮನುಷ್ಯನ ಜೀವಿತವು ದೇವರು ಹೇಳುವ ಪ್ರತಿಯೊಂದು ಮಾತನ್ನು ಅವಲಂಬಿಸಿಕೊಂಡಿದೆ’(A)

ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂಬುದಾಗಿ ಉತ್ತರಕೊಟ್ಟನು.

ಆಗ ಸೈತಾನನು ಯೇಸುವನ್ನು ಪರಿಶುದ್ಧ ಪಟ್ಟಣವಾದ ಜೆರುಸಲೇಮಿಗೆ ಕರೆದುಕೊಂಡು ಹೋಗಿ, ದೇವಾಲಯದ ಅತಿ ಎತ್ತರವಾದ ಸ್ಥಳದಲ್ಲಿ ನಿಲ್ಲಿಸಿ, “ನೀನು ದೇವರ ಮಗನಾಗಿದ್ದರೆ, ಕೆಳಕ್ಕೆ ದುಮುಕು.

‘ದೇವರು ನಿನಗೋಸ್ಕರ ತನ್ನ ದೂತರಿಗೆ ಆಜ್ಞಾಪಿಸುವನು.
    ನಿನ್ನ ಪಾದಗಳು ಬಂಡೆಗೆ ಅಪ್ಪಳಿಸದಂತೆ
    ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’(B)

ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆಯಲ್ಲ” ಎಂದನು.

ಅದಕ್ಕೆ ಯೇಸು,

“‘ನಿನ್ನ ದೇವರಾದ ಪ್ರಭುವನ್ನು ನೀನು ಪರೀಕ್ಷಿಸಕೂಡದು’(C)

ಎಂಬುದಾಗಿಯೂ ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಉತ್ತರಕೊಟ್ಟನು.

ಬಳಿಕ ಸೈತಾನನು ಯೇಸುವನ್ನು ಎತ್ತರವಾದ ಬೆಟ್ಟದ ತುದಿಗೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನು ಮತ್ತು ಅವುಗಳ ವೈಭವವನ್ನು ತೋರಿಸಿ, “ನೀನು ನನಗೆ ಅಡ್ಡಬಿದ್ದು ಆರಾಧಿಸಿದರೆ ನಾನು ಅವೆಲ್ಲವನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.

10 ಯೇಸು ಸೈತಾನನಿಗೆ, “ಇಲ್ಲಿಂದ ತೊಲಗು!

‘ನಿನ್ನ ದೇವರಾದ ಪ್ರಭುವನ್ನೇ ಆರಾಧಿಸಬೇಕು,
    ಆತನೊಬ್ಬನನ್ನೇ ಸೇವಿಸಬೇಕು’(D)

ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಹೇಳಿದನು.

11 ಆದ್ದರಿಂದ ಸೈತಾನನು ಯೇಸುವನ್ನು ಬಿಟ್ಟುಹೋದನು. ಆಗ ಕೆಲವು ದೇವದೂತರು ಬಂದು ಆತನನ್ನು ಉಪಚರಿಸಿದರು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International