Revised Common Lectionary (Semicontinuous)
ಐದನೆಯ ಭಾಗ
(ಕೀರ್ತನೆಗಳು 107–150)
107 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ! ಆತನು ಒಳ್ಳೆಯವನು!
ಆತನ ಪ್ರೀತಿ ಶಾಶ್ವತವಾದದ್ದು!
2 ಯೆಹೋವನಿಂದ ರಕ್ಷಿಸಲ್ಪಟ್ಟ ಪ್ರತಿಯೊಬ್ಬರೂ ಆತನಿಗೆ ಕೃತಜ್ಞತಾಸ್ತುತಿ ಮಾಡಲಿ.
ಯೆಹೋವನು ಅವರನ್ನು ವೈರಿಗಳಿಂದ ಬಿಡಿಸಿದನು.
3 ಯೆಹೋವನು ತನ್ನ ಜನರನ್ನು ಅನೇಕ ದೇಶಗಳಿಂದ ಒಟ್ಟುಗೂಡಿಸಿದನು;
ಪೂರ್ವಪಶ್ಚಿಮಗಳಿಂದಲೂ ಉತ್ತರ ದಕ್ಷಿಣಗಳಿಂದಲೂ ಬರಮಾಡಿದನು.
4 ಅವರಲ್ಲಿ ಕೆಲವರು ಮರುಭೂಮಿಯಲ್ಲಿ ಅಲೆದಾಡಿದರು.
ತಾವು ನೆಲೆಸತಕ್ಕ ಪಟ್ಟಣಕ್ಕಾಗಿ ಅವರು ಹುಡುಕಿದರೂ ಅದು ಅವರಿಗೆ ಕಾಣಲಿಲ್ಲ.
5 ಅವರು ಹಸಿವೆಯಿಂದಲೂ
ಬಾಯಾರಿಕೆಯಿಂದಲೂ ಬಲಹೀನರಾಗತೊಡಗಿದರು.
6 ಆಗ ಅವರು ಯೆಹೋವನಿಗೆ ಮೊರೆಯಿಡಲು
ಆತನು ಅವರನ್ನು ಎಲ್ಲಾ ಆಪತ್ತುಗಳಿಂದ ರಕ್ಷಿಸಿದನು.
7 ಅವರು ನೆಲಸತಕ್ಕ ಪಟ್ಟಣಕ್ಕೆ ದೇವರು ಅವರನ್ನು ನೇರವಾಗಿ ನಡೆಸಿದನು.
8 ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ
ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ.
9 ಆತನು ಬಾಯರಿದವರನ್ನು ನೀರಿನಿಂದಲೂ
ಹಸಿದವರನ್ನು ಮೃಷ್ಟಾನ್ನದಿಂದಲೂ ತೃಪ್ತಿಗೊಳಿಸುವನು.
10 ದೇವಜನರಲ್ಲಿ ಕೆಲವರು ಸೆರೆಯಾಳುಗಳಾಗಿದ್ದರು;
ಕಾರ್ಗತ್ತಲೆಯ ಸೆರೆಮನೆಗಳಲ್ಲಿ ಬಂಧಿತರಾಗಿದ್ದರು.
11 ಯಾಕೆಂದರೆ ಅವರು ಯೆಹೋವನ ಆಜ್ಞೆಗಳಿಗೆ ವಿರೋಧವಾಗಿ ದಂಗೆ ಎದ್ದರು.
ಮಹೋನ್ನತನಾದ ದೇವರ ಉಪದೇಶವನ್ನು ತಿರಸ್ಕರಿಸಿದರು.
12 ಅವರ ಕಾರ್ಯಗಳ ನಿಮಿತ್ತವೇ
ದೇವರು ಅವರ ಜೀವನವನ್ನು ಸಂಕಷ್ಟಕ್ಕೆ ಒಳಪಡಿಸಿದನು.
ಅವರು ಎಡವಿಬಿದ್ದರು,
ಅವರಿಗೆ ಸಹಾಯಮಾಡಲು ಯಾರೂ ಇರಲಲ್ಲ.
13 ಅವರು ಆಪತ್ತಿನಲ್ಲಿದ್ದಾಗ ಯೆಹೋವನಿಗೆ ಮೊರೆಯಿಟ್ಟರು.
ಆತನು ಅವರನ್ನು ಆಪತ್ತುಗಳಿಂದ ಬಿಡಿಸಿದನು.
14 ಆತನು ಅವರನ್ನು ಕಾರ್ಗತ್ತಲೆಯ ಸೆರೆಮನೆಗಳಿಂದ ಹೊರತಂದನು;
ಕಟ್ಟಿದ ಹಗ್ಗಗಳನ್ನು ಕಿತ್ತುಹಾಕಿದನು.
15 ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ
ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ.
16 ನಮ್ಮ ಶತ್ರುಗಳನ್ನು ಸೋಲಿಸಲು ದೇವರು ನಮಗೆ ಸಹಾಯಮಾಡುವನು.
ಅವರ ತಾಮ್ರದ ಬಾಗಿಲುಗಳನ್ನು ಆತನು ಮುರಿದುಹಾಕಬಲ್ಲನು.
ಅವರ ಬಾಗಿಲುಗಳ ಮೇಲಿರುವ ಕಬ್ಬಿಣದ ಸರಳುಗಳನ್ನು ಆತನು ನುಚ್ಚುನೂರು ಮಾಡಬಲ್ಲನು.
ಮಿರ್ಯಾಮಳ ಮರಣ
20 ಮೊದಲನೆಯ ತಿಂಗಳಲ್ಲಿ ಇಡೀ ಇಸ್ರೇಲ್ ಸಮುದಾಯವು ಚಿನ್ ಮರುಭೂಮಿಗೆ ಬಂದಿತು. ಅವರು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ಸತ್ತಳು. ಆಕೆಯ ಶವವನ್ನು ಅಲ್ಲಿ ಸಮಾಧಿ ಮಾಡಲಾಯಿತು.
ಮೋಶೆಯ ತಪ್ಪು
2 ಅಲ್ಲಿ ನೀರಿಲ್ಲದಿದ್ದ ಕಾರಣ ಅವರು ಮೋಶೆ ಆರೋನರ ವಿರುದ್ಧವಾಗಿ ಸೇರಿಬಂದರು. 3 ಜನರು ಮೋಶೆಯ ಸಂಗಡ ವಾದಮಾಡಿ, “ನಮ್ಮ ಸಹೋದರರು ಯೆಹೋವನ ಸನ್ನಿಧಿಯಲ್ಲಿ ಸತ್ತಾಗ ನಾವೂ ಸತ್ತುಹೋಗಿದ್ದರೆ ಎಷ್ಟೋ ಮೇಲಾಗಿತ್ತು. 4 ಯೆಹೋವನ ಜನರನ್ನು ಈ ಮರುಭೂಮಿಗೆ ಯಾಕೆ ಕರೆದುಕೊಂಡು ಬಂದೆ? ನಾವು ಮತ್ತು ನಮ್ಮ ಪ್ರಾಣಿಗಳು ಇಲ್ಲಿ ಸಾಯಬೇಕೆಂದು ನೀನು ಇಚ್ಛಿಸುತ್ತೀಯೋ? 5 ಈಜಿಪ್ಟಿನಿಂದ ನಮ್ಮನ್ನು ಇಲ್ಲಿಗೆ ಯಾಕೆ ಕರೆತಂದೆ? ಈ ಕೆಟ್ಟ ಸ್ಥಳಕ್ಕೆ ನಮ್ಮನ್ನು ಯಾಕೆ ಕರೆದುಕೊಂಡು ಬಂದೆ? ಇಲ್ಲಿ ಧಾನ್ಯವಾಗಲಿ ಅಂಜೂರವಾಗಲಿ ದ್ರಾಕ್ಷಿಯಾಗಲಿ ದಾಳಿಂಬೆಯಾಗಲಿ ಇಲ್ಲ, ಕುಡಿಯುವುದಕ್ಕೆ ನೀರೂ ಇಲ್ಲ” ಎಂದು ಹೇಳಿದರು.
6 ಮೋಶೆ ಆರೋನರು ಜನಸಮೂಹದ ಎದುರಿನಿಂದ ದೇವದರ್ಶನಗುಡಾರದ ಪ್ರವೇಶದ್ವಾರಕ್ಕೆ ಹೋಗಿ ಅಡ್ಡಬಿದ್ದರು. ಆಗ ಯೆಹೋವನ ಮಹಿಮೆಯು ಅವರಿಗೆ ಪ್ರತ್ಯಕ್ಷವಾಯಿತು.
7 ಆಗ ಯೆಹೋವನು ಮೋಶೆಯೊಡನೆ ಮಾತಾಡಿ, 8 “ಬಳಿಕ ನೀನು ಮತ್ತು ನಿನ್ನ ಸಹೋದರನಾದ ಆರೋನನು ಜನರನ್ನು ಬಂಡೆಯ ಮುಂದೆ ಸಭೆಸೇರಿಸಿ, ಜನರ ಮುಂದೆ ಆ ಬಂಡೆಗೆ ಮಾತಾಡು. ಆಗ ನೀರು ಬಂಡೆಯಿಂದ ಹರಿಯುವುದು ಮತ್ತು ನೀರನ್ನು ಜನರಿಗೂ ಅವರ ಪಶುಗಳಿಗೂ ಕೊಡು” ಎಂದು ಹೇಳಿದನು.
9 ಕೋಲು ಪವಿತ್ರಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿತ್ತು. ಯೆಹೋವನು ಹೇಳಿದಂತೆ ಮೋಶೆ ಕೋಲನ್ನು ತೆಗೆದುಕೊಂಡನು. 10 ಜನರು ಬಂಡೆಯ ಮುಂದೆ ಒಟ್ಟಾಗಿ ಸೇರಿಬರಬೇಕೆಂದು ಮೋಶೆ ಆರೋನರು ಹೇಳಿದರು. ಆಗ ಮೋಶೆ, “ದ್ರೋಹಿಗಳೇ, ಈಗ ನನಗೆ ಕಿವಿಗೊಡಿರಿ. ನಿಮಗೋಸ್ಕರವಾಗಿ ಈ ಬಂಡೆಯಿಂದ ನೀರು ಹರಿಯುವಂತೆ ನಾವು ಮಾಡಬೇಕೋ?” ಎಂದು ಹೇಳಿ, 11 ತನ್ನ ಕೈಯಲ್ಲಿದ್ದ ಕೋಲನ್ನು ಎತ್ತಿ ಎರಡು ಸಾರಿ ಬಂಡೆಯನ್ನು ಹೊಡೆದನು. ಬಂಡೆಯಿಂದ ನೀರು ಹರಿಯತೊಡಗಿತು. ಜನರಿಗೆ ಮತ್ತು ಪಶುಗಳಿಗೆ ಕುಡಿಯಲು ನೀರು ದೊರೆಯಿತು.
12 ಆದರೆ ಯೆಹೋವನು ಮೋಶೆ ಆರೋನರಿಗೆ, “ನೀವು ನನ್ನನ್ನು ನಂಬದವರಾಗಿ ಇಸ್ರೇಲರ ಎದುರಿನಲ್ಲಿ ನನ್ನ ಪವಿತ್ರತೆಯನ್ನು ತೋರಿಸದೆ ಹೋದದ್ದರಿಂದ ಈ ಸಮುದಾಯದವರಿಗೆ ಕೊಡಲಿರುವ ದೇಶಕ್ಕೆ ನೀವು ಅವರನ್ನು ಕರೆದುಕೊಂಡು ಹೋಗುವುದಿಲ್ಲ.” ಎಂದು ಹೇಳಿದನು.
13 ಇಸ್ರೇಲರು ಅಲ್ಲಿ ಯೆಹೋವನೊಡನೆ ವಾದ ಮಾಡಿದ್ದರಿಂದ ಆ ಸ್ಥಳವು “ಮೆರೀಬಾ ಬುಗ್ಗೆ” ಎಂದು ಕರೆಯಲ್ಪಟ್ಟಿತು. ಅದಲ್ಲದೆ ಯೆಹೋವನು ತಾನು ಪರಿಶುದ್ಧನು ಎಂಬುದನ್ನು ಅವರಿಗೆ ತೋರಿಸಿದ ಸ್ಥಳವು ಇದೇ.
6 ಅವರು ಮಾಡಿದಂತೆ ನಾವು ಕೆಟ್ಟವುಗಳನ್ನು ಆಶಿಸಬಾರದೆಂಬುದಕ್ಕೆ ಈ ಘಟನೆಗಳು ನಮಗೆ ಎಚ್ಚರಿಕೆ ನೀಡುವ ನಿದರ್ಶನಗಳಾಗಿವೆ. 7 ಅವರಲ್ಲಿ ಕೆಲವರು ಮಾಡಿದಂತೆ ನೀವು ವಿಗ್ರಹಗಳನ್ನು ಪೂಜಿಸಬೇಡಿ. “ಜನರು ತಿನ್ನಲು, ಕುಡಿಯಲು ಕುಳಿತುಕೊಂಡರು; ನೃತ್ಯ ಮಾಡಲು ಎದ್ದುನಿಂತರು”(A) ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. 8 ಅವರಲ್ಲಿ ಕೆಲವರು ಮಾಡಿದಂತೆ ನಾವು ಲೈಂಗಿಕ ಪಾಪಗಳನ್ನು ಮಾಡಬಾರದು. ಅವರಲ್ಲಿ ಇಪ್ಪತ್ತಮೂರು ಸಾವಿರ ಮಂದಿ ತಮ್ಮ ಆ ಪಾಪದ ಫಲವಾಗಿ ಒಂದೇ ದಿನದಲ್ಲಿ ಸತ್ತುಹೋದರು. 9 ಅವರಲ್ಲಿ ಕೆಲವರು ಮಾಡಿದಂತೆ ನಾವು ಪ್ರಭುವನ್ನು ಪರೀಕ್ಷಿಸಬಾರದು. ಅದರ ಫಲವಾಗಿ ಅವರು ಹಾವುಗಳಿಂದ ಮರಣಹೊಂದಿದರು. 10 ಅವರಲ್ಲಿ ಕೆಲವರು ಮಾಡಿದಂತೆ ಗುಣುಗುಟ್ಟಬೇಡಿ. ಆ ಜನರು ಸಂಹಾರಕ ದೂತನಿಂದ ಕೊಲ್ಲಲ್ಪಟ್ಟರು.
11 ಆ ಜನರಿಗೆ ಸಂಭವಿಸಿದ ಸಂಗತಿಗಳು ನಮಗೆ ನಿದರ್ಶನಗಳಾಗಿವೆ. ನಮ್ಮನ್ನು ಎಚ್ಚರಿಸುವುದಕ್ಕಾಗಿ ಆ ಸಂಗತಿಗಳನ್ನು ಬರೆದಿಡಲಾಗಿದೆ. ಈಗ ನಾವು ಯುಗದ ಅಂತಿಮ ಕಾಲದಲ್ಲಿ ಜೀವಿಸುತ್ತಿದ್ದೇವೆ. 12 ಆದ್ದರಿಂದ ತಾನು ದೃಢವಾಗಿ ನಿಂತಿದ್ದೇನೆ ಎಂದು ಯೋಚಿಸುವ ವ್ಯಕ್ತಿಯು ಬೀಳದಂತೆ ಎಚ್ಚರಿಕೆಯಿಂದಿರಬೇಕು. 13 ಎಲ್ಲಾ ಜನರಿಗೆ ಬರುವಂತೆ ನಿಮಗೂ ಶೋಧನೆಗಳು ಬರುತ್ತವೆ. ಆದರೆ ದೇವರು ನಂಬಿಗಸ್ತನಾಗಿದ್ದಾನೆ. ನೀವು ಸಹಿಸಿಕೊಳ್ಳಲಾರದ ಶೋಧನೆಯನ್ನು ಆತನು ನಿಮಗೆ ಬರಗೊಡಿಸುವುದಿಲ್ಲ. ಶೋಧನೆಗಳು ಬಂದಾಗ, ಅವುಗಳಿಂದ ಪಾರಾಗುವ ಮಾರ್ಗವನ್ನು ಸಹ ದೇವರು ನಿಮಗೆ ಒದಗಿಸುತ್ತಾನೆ. ಆಗ ನೀವು ಅದನ್ನು ಸಹಿಸಿಕೊಳ್ಳುವುದಕ್ಕೆ ಶಕ್ತರಾಗುವಿರಿ.
Kannada Holy Bible: Easy-to-Read Version. All rights reserved. © 1997 Bible League International