Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 119:9-16

ಯೌವನಸ್ಥನು ಪವಿತ್ರನಾಗಿ ಜೀವಿಸುವುದು ಯಾವುದರಿಂದ?
    ನಿನ್ನ ಆಜ್ಞೆಗಳಿಗೆ ವಿಧೇಯನಾಗುವುದರಿಂದಲೇ.
10 ನಾನು ಪೂರ್ಣಹೃದಯದಿಂದ ದೇವರ ಸೇವೆಮಾಡುವೆ;
    ದೇವರೇ, ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ನನಗೆ ಸಹಾಯಮಾಡು.
11 ನಾನು ನಿನಗೆ ವಿರೋಧವಾಗಿ ಪಾಪಮಾಡದಂತೆ
    ನಿನ್ನ ಉಪದೇಶಗಳನ್ನು ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.
12 ಯೆಹೋವನೇ, ನಿನಗೆ ಸ್ತೋತ್ರವಾಗಲಿ.
    ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.
13 ನನ್ನ ತುಟಿಗಳು
    ನಿನ್ನ ಜ್ಞಾನದ ನಿರ್ಧಾರಗಳ ಕುರಿತು ವರ್ಣಿಸುತ್ತವೆ.
14 ಸಕಲ ಸಂಪತ್ತಿನಲ್ಲಿ ಹೇಗೋ
    ಹಾಗೆಯೇ ನಿನ್ನ ಒಡಂಬಡಿಕೆಯನ್ನು ಅಭ್ಯಾಸ ಮಾಡುವುದರಲ್ಲಿ ಆನಂದಿಸುವೆನು.
15 ನಾನು ನಿನ್ನ ನಿಯಮಗಳನ್ನು ಚರ್ಚಿಸುವೆನು
    ನಿನ್ನ ಜೀವಮಾರ್ಗವನ್ನು ಅನುಸರಿಸುವೆನು.
16 ನಾನು ನಿನ್ನ ಕಟ್ಟಳೆಗಳಲ್ಲಿ ಆನಂದಿಸುವೆನು,
    ನಿನ್ನ ಮಾತುಗಳನ್ನು ಮರೆಯುವುದಿಲ್ಲ.

ಯೆಶಾಯ 43:8-13

“ಕಣ್ಣಿದ್ದೂ ಕುರುಡರಂತಿರುವ ಜನರನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ಕಿವಿಯಿದ್ದೂ ಕಿವುಡರಂತಿರುವ ಜನರನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ಎಲ್ಲಾ ಜನಾಂಗದವರೂ ಎಲ್ಲಾ ಜನರೂ ಒಟ್ಟುಗೂಡಬೇಕು. ಅವರ ಸುಳ್ಳುದೇವರಲ್ಲಿ ಒಬ್ಬನು ಆದಿಯಲ್ಲಿ ಸಂಭವಿಸಿದ್ದನ್ನು ಹೇಳುವದಾಗಿದ್ದರೆ ತನ್ನ ಸಾಕ್ಷಿಗಳನ್ನು ಕರೆದು ತರಲಿ. ಆ ಸಾಕ್ಷಿಗಳು ಸತ್ಯವನ್ನಾಡಲಿ. ಆಗ ಅವರು ಸತ್ಯವಂತರೋ ಇಲ್ಲವೋ ಎಂದು ಗೊತ್ತಾಗುವದು.”

10 ಯೆಹೋವನು ಹೇಳುವುದೇನೆಂದರೆ: “ನೀವು ನನ್ನ ಸಾಕ್ಷಿಗಳಾಗಿದ್ದೀರಿ. ನಾನು ಆರಿಸಿಕೊಂಡ ಸೇವಕನು ನೀನೇ. ಜನರು ನನ್ನನ್ನು ನಂಬುವಂತೆ ನಾನು ನಿಮ್ಮನ್ನು ಆರಿಸಿಕೊಂಡೆನು. ನಾನು ನಿಜ ದೇವರು ಎಂದು ನೀವು ತಿಳಿಯಬೇಕೆಂದು ನಿಮ್ಮನ್ನು ಆರಿಸಿಕೊಂಡೆನು. ನಾನೇ ನಿಜವಾದ ದೇವರು. ನನಗಿಂತ ಮೊದಲು ಯಾರೂ ಇರಲಿಲ್ಲ, ಇನ್ನು ಮುಂದೆಯೂ ನನ್ನ ಹೊರತು ಯಾವ ದೇವರೂ ಇರುವದಿಲ್ಲ. 11 ನಾನೇ, ನಾನೇ ಯೆಹೋವನು! ನನ್ನ ಹೊರತು ಬೇರೆ ರಕ್ಷಕನಿಲ್ಲ! 12 ನಾನೇ ನಿಮ್ಮೊಂದಿಗೆ ಮಾತನಾಡಿದೆನು. ನಾನೇ ನಿಮ್ಮನ್ನು ರಕ್ಷಿಸಿದೆನು. ನಾನು ಆ ವಿಷಯಗಳನ್ನು ನಿಮಗೆ ತಿಳಿಸಿದೆನು. ನಿಮ್ಮೊಂದಿಗೆ ಇದ್ದಾತನು ಅಪರಿಚಿತನಾಗಿರಲಿಲ್ಲ. ನೀವು ನನ್ನ ಸಾಕ್ಷಿಗಳಾಗಿದ್ದೀರಿ. ನಾನೇ ನಿಮ್ಮ ದೇವರು.” (ಯೆಹೋವನು ತಾನೇ ಈ ವಿಷಯಗಳನ್ನು ಹೇಳಿದ್ದಾನೆ.) 13 “ನಾನು ಯಾವಾಗಲೂ ದೇವರಾಗಿದ್ದೇನೆ. ನನ್ನ ಕಾರ್ಯವನ್ನು ತಡೆಯಲು ಯಾರಿಗೆ ಸಾಧ್ಯ? ನನ್ನ ಬಲವಾದ ಹಸ್ತದಿಂದ ಯಾರು ಬಿಡಿಸಬಲ್ಲರು?”

2 ಕೊರಿಂಥದವರಿಗೆ 3:4-11

ನಾವು ಈ ಸಂಗತಿಗಳನ್ನು ಹೇಳಬಲ್ಲೆವು; ಏಕೆಂದರೆ ನಾವು ಕ್ರಿಸ್ತನ ಮೂಲಕ ದೇವರ ಸನ್ನಿಧಿಯಲ್ಲಿ ಭರವಸದಿಂದಿದ್ದೇವೆ. ನಮ್ಮ ಸ್ವಂತ ಶಕ್ತಿಯಿಂದಲೇ ನಾವು ಯಾವ ಒಳ್ಳೆಯದನ್ನಾದರೂ ಮಾಡಬಲ್ಲೆವೆಂದು ನಾನು ಹೇಳುತ್ತಿಲ್ಲ. ನಾವು ಮಾಡುವ ಕಾರ್ಯಗಳನ್ನು ದೇವರು ಒದಗಿಸಿದ ಸಾಮರ್ಥ್ಯದಿಂದಲೇ ಮಾಡುತ್ತೇವೆ. ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ದೇವರೇ ನಮಗೆ ಕೊಟ್ಟನು. ಈ ಹೊಸ ಒಡಂಬಡಿಕೆಯು ಲಿಖಿತ ರೂಪವಾದ ಧರ್ಮಶಾಸ್ತ್ರವಲ್ಲ. ಇದು ಪವಿತ್ರಾತ್ಮನದು. ಲಿಖಿತ ರೂಪವಾದ ಧರ್ಮಶಾಸ್ತ್ರವು ಮರಣವನ್ನು ತರುತ್ತದೆ, ಆದರೆ ಪವಿತ್ರಾತ್ಮನು ಜೀವವನ್ನು ಕೊಡುತ್ತಾನೆ.

ಹೊಸ ಒಡಂಬಡಿಕೆಯು ಹೆಚ್ಚಿನ ಮಹಿಮೆಯನ್ನು ತರುತ್ತದೆ

ಮರಣವನ್ನು ವಿಧಿಸುವ ಸೇವೆಯು (ಧರ್ಮಶಾಸ್ತ್ರ) ಕಲ್ಲಿನ ಹಲಗೆಗಳ ಮೇಲೆ ಅಕ್ಷರಗಳಲ್ಲಿ ಬರೆಯಲ್ಪಟ್ಟಿತ್ತು. ಅದು ದೇವರ ಮಹಿಮೆಯೊಂದಿಗೆ ಬಂದಿತು. ಮೋಶೆಯ ಮುಖವು ಪ್ರಕಾಶಮಾನವಾಗಿ ಹೊಳೆಯುತ್ತಿದ್ದುದರಿಂದ ಇಸ್ರೇಲರು ಅವನ ಮುಖವನ್ನು ನೋಡಲಾರದೆ ಹೋದರು. ಆ ಬಳಿಕ ಆ ಮಹಿಮೆಯು ಕುಂದಿಹೋಯಿತು. ಹೀಗಿರಲಾಗಿ ಪವಿತ್ರಾತ್ಮನ ಸಂಬಂಧವಾದ ಸೇವೆಯು ಇನ್ನೂ ಹೆಚ್ಚಿನ ಮಹಿಮೆಯನ್ನು ಹೊಂದಿದೆ. ಇದರರ್ಥವೇನೆಂದರೆ: ಆ ಸೇವೆಯು (ಧರ್ಮಶಾಸ್ತ್ರ) ಜನರನ್ನು ಅಪರಾಧಿಗಳೆಂದು ತೀರ್ಪು ನೀಡಿತು, ಆದರೆ ಅದು ಮಹಿಮೆಯನ್ನು ಹೊಂದಿತ್ತು. ಹೀಗಿರಲಾಗಿ, ನೀತಿಗೆ ಸಾಧನವಾಗಿರುವ ಸೇವೆಯು ಇನ್ನೂ ಹೆಚ್ಚಿನ ಮಹಿಮೆಯನ್ನು ಉಂಟುಮಾಡುವುದು ಎಷ್ಟೋ ನಿಶ್ಚಯವಾಗಿದೆ. 10 ಆ ಹಳೆ ಸೇವೆಯು ಮಹಿಮೆಯನ್ನು ಹೊಂದಿತ್ತು. ಆದರೆ ಅದು ಹೊಸ ಸೇವೆಯ ಎದುರಿನಲ್ಲಿ ಮಹಿಮೆಯಿಲ್ಲದ್ದಾಯಿತು. 11 ಲಯಗೊಂಡ ಆ ಸೇವೆಯು ಮಹಿಮೆಯೊಂದಿಗೆ ಬಂದಿರುವುದಾಗಿದ್ದರೆ, ಎಂದೆಂದಿಗೂ ಮುಂದುವರಿಯುವ ಈ ಸೇವೆಯು ಇನ್ನೂ ಹೆಚ್ಚಿನ ಮಹಿಮೆಯನ್ನು ಹೊಂದಿದೆ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International