Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 118:1-2

118 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ.
    ಆತನು ಒಳ್ಳೆಯವನು.
    ಆತನ ಪ್ರೀತಿಯು ಶಾಶ್ವತವಾದದ್ದು!
ಇಸ್ರೇಲರೇ,
    “ಆತನ ಪ್ರೀತಿ ಶಾಶ್ವತವಾದದ್ದು” ಎಂದು ಹೇಳಿರಿ.

ಕೀರ್ತನೆಗಳು 118:19-29

19 ನೀತಿಯ ಬಾಗಿಲುಗಳೇ, ನನಗೋಸ್ಕರ ತೆರೆಯಿರಿ,
    ನಾನು ಒಳಗೆ ಬಂದು ಯೆಹೋವನನ್ನು ಆರಾಧಿಸುತ್ತೇನೆ.
20 ಅವು ಯೆಹೋವನ ಬಾಗಿಲುಗಳು.
    ನೀತಿವಂತರು ಮಾತ್ರ ಆ ಬಾಗಿಲುಗಳ ಮೂಲಕ ಹೋಗಬಲ್ಲರು.
21 ಯೆಹೋವನೇ, ನನ್ನ ಪ್ರಾರ್ಥನೆಗೆ ನೀನು ಉತ್ತರಿಸಿ
    ನನ್ನನ್ನು ರಕ್ಷಿಸಿದ್ದಕ್ಕೋಸ್ಕರ ನಿನಗೆ ಕೃತಜ್ಞತಾಸ್ತುತಿ ಮಾಡುವೆನು.

22 ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು.
23 ಇದು ಯೆಹೋವನಿಂದಲೇ ಆಯಿತು.
    ನಮಗಂತೂ ಇದು ಆಶ್ಚರ್ಯಕರವಾಗಿದೆ!
24 ಈ ದಿನವನ್ನು ಮಾಡಿದಾತನು ಯೆಹೋವನೇ.
    ಇಂದೇ ನಾವು ಉಲ್ಲಾಸದಿಂದ ಆನಂದಿಸೋಣ.

25 “ಯೆಹೋವನಿಗೆ ಸ್ತೋತ್ರವಾಗಲಿ!
    ಆತನು ನಮ್ಮನ್ನು ರಕ್ಷಿಸಿದ್ದಾನೆ.
26     ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಸುಸ್ವಾಗತ!”

“ಯೆಹೋವನ ಆಲಯದಿಂದ ನಾವು ನಿನ್ನನ್ನು ಆಶೀರ್ವದಿಸುತ್ತೇವೆ!
27 ಯೆಹೋವನೇ ದೇವರು.
    ಆತನು ನಮ್ಮನ್ನು ಸ್ವೀಕರಿಸಿಕೊಳ್ಳುವನು.
    ಯಜ್ಞಕ್ಕೋಸ್ಕರ ಕುರಿಮರಿಯನ್ನು ಕಟ್ಟಿ ಯಜ್ಞವೇದಿಕೆಯ ಕೊಂಬುಗಳ ಸಮೀಪಕ್ಕೆ ಹೊತ್ತುಕೊಂಡು ಬನ್ನಿರಿ” ಎಂದು ಯಾಜಕರು ಉತ್ತರಿಸಿದರು.

28 ಯೆಹೋವನೇ, ನೀನೇ ನನ್ನ ದೇವರು; ನಾನು ನಿನಗೆ ಕೃತಜ್ಞತೆ ಸಲ್ಲಿಸುವೆನು.
    ನಾನು ನಿನ್ನನ್ನು ಘನಪಡಿಸುವೆನು!
29 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು.
    ಆತನ ಪ್ರೀತಿಯು ಶಾಶ್ವತವಾದದ್ದು.

ಮಾರ್ಕ 11:1-11

ರಾಜನಂತೆ ಜೆರುಸಲೇಮಿಗೆ ಪ್ರವೇಶ

(ಮತ್ತಾಯ 21:1-11; ಲೂಕ 19:28-40; ಯೋಹಾನ 12:12-19)

11 ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮಿನ ಸಮೀಪಕ್ಕೆ ಬಂದಿದ್ದರು. ಅವರು ಆಲಿವ್ ಗುಡ್ಡದ ಬಳಿಯಿರುವ ಬೆತ್ಛಗೆ ಹಾಗೂ ಬೆಥಾನಿ ಎಂಬ ಊರುಗಳಿಗೆ ಬಂದಾಗ ಅಲ್ಲಿ ಯೇಸು ತನ್ನ ಇಬ್ಬರು ಶಿಷ್ಯರನ್ನು ಕರೆದು, “ಅಲ್ಲಿ ಕಾಣುತ್ತಿರುವ ಊರಿಗೆ ಹೋಗಿರಿ. ನೀವು ಅದನ್ನು ಪ್ರವೇಶಿಸಿದಾಗ, ಯಾರೂ ಸವಾರಿ ಮಾಡಿಲ್ಲದ ಒಂದು ಕತ್ತೆ ಮರಿಯನ್ನು ಅಲ್ಲಿ ಕಟ್ಟಿರುವುದನ್ನು ಕಾಣುವಿರಿ. ಆ ಕತ್ತೆಯನ್ನು ಬಿಚ್ಚಿಕೊಂಡು, ನನ್ನ ಬಳಿಗೆ ತನ್ನಿರಿ. ಯಾವನಾದರೂ ‘ಆ ಕತ್ತೆಯನ್ನು ಏಕೆ ತೆಗೆದುಕೊಂಡು ಹೋಗುತ್ತಿದ್ದೀರಿ’ ಎಂದು ನಿಮ್ಮನ್ನು ಕೇಳಿದರೆ, ‘ಒಡೆಯನಿಗೆ ಈ ಕತ್ತೆ ಬೇಕಾಗಿದೆ. ಆತನು ಇದನ್ನು ಬೇಗನೆ ಕಳುಹಿಸಿಕೊಡುವನು’ ಎಂದು ಅವನಿಗೆ ಹೇಳಿರಿ” ಎಂದನು.

ಶಿಷ್ಯರು ಊರಿನೊಳಗೆ ಹೋದಾಗ ರಸ್ತೆಯಲ್ಲಿನ ಒಂದು ಮನೆಯ ಬಾಗಿಲಿನ ಪಕ್ಕದಲ್ಲಿ ಕಟ್ಟಿಹಾಕಿದ್ದ ಕತ್ತೆಮರಿಯೊಂದನ್ನು ಕಂಡರು. ಶಿಷ್ಯರು ಹೋಗಿ ಆ ಕತ್ತೆಯನ್ನು ಬಿಚ್ಚಿದಾಗ, ಅಲ್ಲಿ ನಿಂತಿದ್ದ ಕೆಲವು ಜನರು, “ನೀವು ಮಾಡುತ್ತಿರುವುದೇನು? ಆ ಕತ್ತೆಯನ್ನು ಏಕೆ ಬಿಚ್ಚುತ್ತಿದ್ದೀರಿ?” ಎಂದು ಕೇಳಿದರು. ಯೇಸು ತಮಗೆ ಹೇಳಿದ ರೀತಿಯಲ್ಲಿಯೇ ಶಿಷ್ಯರು ಉತ್ತರಿಸಿದರು. ಆಗ ಜನರು ಆ ಕತ್ತೆಯನ್ನು ಶಿಷ್ಯರಿಗೆ ಬಿಟ್ಟುಕೊಟ್ಟರು.

ಶಿಷ್ಯರು ಕತ್ತೆಯನ್ನು ಯೇಸುವಿನ ಬಳಿಗೆ ತಂದು ತಮ್ಮ ಹೊದಿಕೆಗಳನ್ನು ಅದರ ಮೇಲೆ ಹಾಸಿದರು. ಆಗ ಯೇಸು ಅದರ ಮೇಲೆ ಕುಳಿತನು. ಅನೇಕ ಜನರು ಯೇಸುವಿಗಾಗಿ ರಸ್ತೆಯ ಮೇಲೆ ತಮ್ಮ ಹೊದಿಕೆಗಳನ್ನು ಹಾಸಿದರು. ಬೇರೆ ಕೆಲವರು ತೋಟಗಳಿಂದ ಎಲೆಗಳನ್ನು ಕೊಯ್ದುತಂದು ರಸ್ತೆಯ ಮೇಲೆ ಹರಡಿದರು. ಕೆಲವು ಜನರು ಯೇಸುವಿನ ಮುಂದೆ ಹೋಗುತ್ತಿದ್ದರು. ಇತರ ಜನರು ಆತನ ಹಿಂದೆ ಹೋಗುತ್ತಿದ್ದರು. ಜನರೆಲ್ಲರೂ,

“‘ಆತನನ್ನು ಕೊಂಡಾಡಿರಿ![a]
    ಪ್ರಭುವಿನ ಹೆಸರಿನಲ್ಲಿ ಬರುವಾತನಿಗೆ ಆಶೀರ್ವಾದವಾಗಲಿ.’(A)

10 “ನಮ್ಮ ಪಿತೃವಾದ ದಾವೀದನ
    ರಾಜ್ಯವು ಬರಲಿ!
ಮೇಲೋಕಗಳಲ್ಲಿ ದೇವರಿಗೆ ಜಯವಾಗಲಿ” ಎಂದು ಕೂಗಿದರು.

11 ಯೇಸು ಜೆರುಸಲೇಮನ್ನು ತಲುಪಿದಾಗ, ದೇವಾಲಯಕ್ಕೆ ಹೋಗಿ ಅಲ್ಲಿದ್ದ ಪ್ರತಿಯೊಂದನ್ನೂ ನೋಡಿದನು. ಆದರೆ ಆಗಲೇ ತಡವಾಗಿತ್ತು. ಆದ್ದರಿಂದ ಯೇಸು ಹನ್ನೆರಡು ಜನ ಅಪೊಸ್ತಲರೊಂದಿಗೆ ಬೆಥಾನಿಯಕ್ಕೆ ಹೋದನು.

ಯೋಹಾನ 12:12-16

ಜೆರುಸಲೇಮಿಗೆ ಯೇಸುವಿನ ಪ್ರವೇಶ

(ಮತ್ತಾಯ 21:1-11; ಮಾರ್ಕ 11:1-11; ಲೂಕ 19:28-40)

12 ಮರುದಿನ, ಯೇಸು ಜೆರುಸಲೇಮಿಗೆ ಬರುತ್ತಿದ್ದಾನೆ ಎಂಬ ಸುದ್ದಿ ಅಲ್ಲಿಯ ಜನರಿಗೆ ತಿಳಿಯಿತು. ಪಸ್ಕಹಬ್ಬಕ್ಕಾಗಿ ಬಂದಿದ್ದ ಅನೇಕರು ಅಲ್ಲಿದ್ದರು. 13 ಜನರು ಖರ್ಜೂರದ ಗರಿಗಳನ್ನು ತೆಗೆದುಕೊಂಡು ಯೇಸುವನ್ನು ಎದುರುಗೊಳ್ಳಲು ಹೋದರು.

“ಆತನಿಗೆ ಸ್ತೋತ್ರವಾಗಲಿ!
    ‘ಪ್ರಭುವಿನ ಹೆಸರಿನಲ್ಲಿ ಬರುವಾತನಿಗೆ ದೇವರಾಶೀರ್ವಾದವಾಗಲಿ!’(A)

ಇಸ್ರೇಲ್ ರಾಜನಿಗೆ ದೇವರಾಶೀರ್ವಾದವಾಗಲಿ!”

ಎಂದು ಜನರು ಕೂಗಿದರು.

14 ಯೇಸು ಅಲ್ಲಿದ್ದ ಕತ್ತೆಯೊಂದನ್ನು ಕಂಡು, ಅದರ ಮೇಲೆ ಕುಳಿತುಕೊಂಡು ಹೊರಟನು. ಪವಿತ್ರ ಗ್ರಂಥ ಹೇಳುವಂತೆಯೇ ಇದು ನೆರವೇರಿತು:

15 “ಸಿಯೋನ್ ನಗರವೇ, ಭಯಪಡಬೇಡ!
    ನೋಡು! ನಿನ್ನ ರಾಜನು ಬರುತ್ತಿದ್ದಾನೆ.
ಆತನು ಪ್ರಾಯದ ಕತ್ತೆಯ ಮೇಲೆ ಕುಳಿತುಕೊಂಡು ಬರುತ್ತಿದ್ದಾನೆ.”(B)

16 ಯೇಸುವಿನ ಶಿಷ್ಯರು ಆ ಸಮಯದಲ್ಲಿ ಇದನ್ನು ಅರ್ಥಮಾಡಿಕೊಳ್ಳಲಿಲ್ಲ. ಆದರೆ ಯೇಸು ಮಹಿಮಾಪದವಿಗೆ ಏರಿಹೋದ ನಂತರ, ಈ ಸಂಗತಿಗಳು ಆತನ ವಿಷಯವಾಗಿ ಬರೆಯಲ್ಪಟ್ಟಿವೆ ಎಂಬುದನ್ನು ಶಿಷ್ಯರು ಅರ್ಥಮಾಡಿಕೊಂಡರು; ಮತ್ತು ತಾವು ಆತನಿಗಾಗಿ ಮಾಡಿದ ಕಾರ್ಯಗಳನ್ನು ಜ್ಞಾಪಿಸಿಕೊಂಡರು.

ಯೆಶಾಯ 50:4-9

ದೇವರ ಸೇವಕನು ದೇವರ ಮೇಲೆ ಅವಲಂಬಿಸಿರುವನು

ನನ್ನ ಒಡೆಯನಾದ ಯೆಹೋವನು ನನಗೆ ಬೋಧಿಸುವ ಸಾಮರ್ಥ್ಯವನ್ನು ಅನುಗ್ರಹಿಸಿದ್ದಾನೆ. ಈಗ ನಾನು ದುಃಖದಲ್ಲಿರುವ ಈ ಜನರಿಗೆ ಬೋಧಿಸುತ್ತಿದ್ದೇನೆ. ಪ್ರತೀ ಮುಂಜಾನೆ ವಿದ್ಯಾರ್ಥಿಯೋ ಎಂಬಂತೆ ಆತನು ನನ್ನನ್ನು ಎಬ್ಬಿಸಿ ನನಗೆ ಬೋಧಿಸುತ್ತಾನೆ. ನನ್ನ ಒಡೆಯನಾದ ಯೆಹೋವನು ನನಗೆ ಕಲಿಯಲು ಸಹಾಯ ಮಾಡುತ್ತಾನೆ. ನಾನು ಆತನಿಗೆ ವಿರುದ್ಧವಾಗಿ ದಂಗೆ ಏಳಲಿಲ್ಲ. ಆತನನ್ನು ಹಿಂಬಾಲಿಸುವದನ್ನು ನಿಲ್ಲಿಸುವದಿಲ್ಲ. ನನ್ನ ಬೆನ್ನಿಗೆ ಹೊಡೆಯಲೂ ನನ್ನ ಗಡ್ಡವನ್ನು ಕೀಳಲೂ ಅವರಿಗೆ ನನ್ನನ್ನು ಒಪ್ಪಿಸಿಕೊಡುತ್ತೇನೆ. ಅವರು ನನ್ನನ್ನು ಬೈದು ನನ್ನ ಮುಖಕ್ಕೆ ಉಗುಳಿದರೂ ನಾನು ನನ್ನ ಮುಖವನ್ನು ಅಡಗಿಸುವದಿಲ್ಲ. ನನ್ನ ಒಡೆಯನಾದ ಯೆಹೋವನು ನನಗೆ ಸಹಾಯ ಮಾಡುವನು. ಆದ್ದರಿಂದ ಅವರ ಶಾಪಗಳು ನನಗೆ ಯಾವ ಹಾನಿಯನ್ನು ಮಾಡುವದಿಲ್ಲ. ನಾನು ಬಲವಾಗಿರುವೆನು. ನಾನು ನಿರಾಶನಾಗುವದಿಲ್ಲವೆಂದು ನನಗೆ ಗೊತ್ತಿದೆ.

ಯೆಹೋವನು ನನ್ನೊಂದಿಗಿದ್ದಾನೆ. ನಾನು ತಪ್ಪಿತಸ್ಥನಲ್ಲವೆಂದು ಆತನು ತೋರಿಸುವನು. ಆದ್ದರಿಂದ ಯಾರೂ ನನ್ನನ್ನು ಅಪರಾಧಿ ಎಂದು ಹೇಳಲಾಗುವದಿಲ್ಲ. ಯಾರಾದರೂ ನನ್ನನ್ನು ತಪ್ಪಿತಸ್ಥನೆಂದು ದೃಢಪಡಿಸಬೇಕೆಂದಿದ್ದರೆ ಅವರು ಮೊದಲು ನನ್ನ ಬಳಿಗೆ ಬರಲಿ, ನಮಗೆ ವಿಚಾರಣೆಯಾಗಲಿ! ಆದರೆ ನನ್ನ ಒಡೆಯನು ಸಹಾಯ ಮಾಡುತ್ತಾನೆ. ಯಾರೂ ನನ್ನ ಮೇಲೆ ದೋಷಾರೋಪಣೆ ಹೊರಿಸಲಾಗದು. ಈ ಜನರೆಲ್ಲರೂ ಬೆಲೆಯಿಲ್ಲದ ಹಳೆಯ ಬಟ್ಟೆಯಂತಾಗುವರು, ನುಸಿಯು ಅವುಗಳನ್ನು ತಿಂದುಬಿಡುವವು.

ಕೀರ್ತನೆಗಳು 31:9-16

ಯೆಹೋವನೇ, ನನಗೆ ಅನೇಕ ಇಕ್ಕಟ್ಟುಗಳಿವೆ;
    ನನ್ನನ್ನು ಕರುಣಿಸು.
ಅತ್ತುಅತ್ತು ನನ್ನ ಕಣ್ಣುಗಳು ನೋಯುತ್ತಿವೆ,
    ನನ್ನ ಗಂಟಲು ನೋಯುತ್ತಿದೆ, ಹೊಟ್ಟೆಯೂ ನೋಯುತ್ತಿದೆ.
10 ನನ್ನ ಜೀವಿತವು[a] ದುಃಖದಲ್ಲಿ ಕೊನೆಗೊಳ್ಳುತ್ತಿದೆ.
    ನನ್ನ ವರ್ಷಗಳು ನಿಟ್ಟುಸಿರಿನಲ್ಲೇ ಕಳೆದುಹೋಗುತ್ತಿವೆ.
ನನ್ನ ಇಕ್ಕಟ್ಟುಗಳು ನನ್ನ ಶಕ್ತಿಯನ್ನು ಕುಂದಿಸುತ್ತಿವೆ.
    ನನ್ನ ಬಲವು ನನ್ನನ್ನು ಬಿಟ್ಟುಹೋಗುತ್ತಿದೆ.[b]
11 ವೈರಿಗಳು ನನ್ನನ್ನು ಕೀಳಾಗಿ ಕಾಣುತ್ತಿದ್ದಾರೆ;
    ನನ್ನ ನೆರೆಹೊರೆಯವರೂ ನನ್ನನ್ನು ನಿಂದಿಸುವರು;
ನನ್ನ ಸಂಬಂಧಿಕರೂ ನನ್ನ ವಿಷಯದಲ್ಲಿ ಭಯಪಡುವರು;
    ನನ್ನನ್ನು ದಾರಿಯಲ್ಲಿ ಕಂಡರೂ ಕಾಣದಂತೆ ಹೊರಟುಹೋಗುವರು.
12 ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು.
    ಕಳೆದುಹೋದ ಉಪಕರಣದಂತೆ ಅವರು ನನ್ನನ್ನು ಮರೆತೇಬಿಟ್ಟಿದ್ದಾರೆ.
13 ಜನರು ನನ್ನನ್ನು ಕುರಿತು ಭಯಂಕರವಾದ ಸಂಗತಿಗಳನ್ನು ಮಾತಾಡಿಕೊಳ್ಳುತ್ತಿದ್ದಾರೆ.
    ಅವರು ದಂಗೆಯೆದ್ದು ನನ್ನನ್ನು ಕೊಲ್ಲಬೇಕೆಂದುಕೊಂಡಿದ್ದಾರೆ.

14 ಯೆಹೋವನೇ, ನಾನಂತೂ ನಿನ್ನಲ್ಲೇ ಭರವಸವಿಟ್ಟಿದ್ದೇನೆ.
    ನೀನೇ ನನ್ನ ದೇವರು.
15 ನನ್ನ ಜೀವವು ನಿನ್ನ ಕೈಯಲ್ಲಿದೆ.
    ವೈರಿಗಳಿಂದ ನನ್ನನ್ನು ರಕ್ಷಿಸು; ನನ್ನನ್ನು ಅಟ್ಟಿಸಿಕೊಂಡು[c] ಬರುತ್ತಿರುವ ಜನರಿಂದ ನನ್ನನ್ನು ರಕ್ಷಿಸು.
16 ದಯವಿಟ್ಟು ನಿನ್ನ ಸೇವಕನನ್ನು ಸ್ವೀಕರಿಸಿಕೊ.
    ಕರುಣೆಯಿಂದ ನನ್ನನ್ನು ರಕ್ಷಿಸು!

ಫಿಲಿಪ್ಪಿಯವರಿಗೆ 2:5-11

ನಿಸ್ವಾರ್ಥರಾಗಿರುವುದನ್ನು ಕ್ರಿಸ್ತನಿಂದ ಕಲಿತುಕೊಳ್ಳಿರಿ

ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ.

ಆತನು ದೇವಸ್ವರೂಪನಾಗಿದ್ದರೂ ದೇವರಿಗೆ ಸರಿಸಮನಾಗಿದ್ದರೂ
    ಆ ಪದವಿಯನ್ನು ಬಿಡಲಾರೆ ಎನ್ನಲಿಲ್ಲ.
ಆ ಪದವಿಯನ್ನು ಆತನು ಬಿಟ್ಟುಕೊಟ್ಟು
    ಸೇವಕನ ಸ್ವಭಾವವನ್ನು ಧರಿಸಿಕೊಂಡು ಮಾನವ ರೂಪದಲ್ಲಿ ಬಂದನು.
ಆತನು ಮನುಷ್ಯನಾಗಿ ಜೀವಿಸುತ್ತಿದ್ದಾಗ
    ತನ್ನನ್ನು ತಗ್ಗಿಸಿಕೊಂಡು ಮರಣವನ್ನೂ ಕಡೆಗಣಿಸಿ ದೇವರಿಗೆ ಸಂಪೂರ್ಣ ವಿಧೇಯನಾಗಿ,
    ಶಿಲುಬೆಯ ಮೇಲೆ ಪ್ರಾಣವನ್ನೇ ಕೊಟ್ಟನು.
ಆದ್ದರಿಂದ ದೇವರು ಆತನನ್ನು ಅತ್ಯುನ್ನತವಾದ ಸ್ಥಾನಕ್ಕೇರಿಸಿ
    ಉಳಿದೆಲ್ಲ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
10 ಆದ್ದರಿಂದ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಪಾತಾಳದಲ್ಲಿಯೂ ಇರುವ ಪ್ರತಿಯೊಬ್ಬರು
    ಯೇಸುವಿನ ಹೆಸರಿನಲ್ಲಿ ಅಡ್ಡಬಿದ್ದು,
11 “ಯೇಸು ಕ್ರಿಸ್ತನೇ ಪ್ರಭು”ವೆಂದು ಹೇಳುವರು.
    ಇದರಿಂದ ತಂದೆಯಾದ ದೇವರಿಗೆ ಮಹಿಮೆ ಉಂಟಾಗುವುದು.

ಮಾರ್ಕ 14-15

ಯೇಸುವನ್ನು ಕೊಲ್ಲಲು ಯೆಹೂದ್ಯನಾಯಕರ ಯೋಜನೆ

(ಮತ್ತಾಯ 26:1-5; ಲೂಕ 22:1-2; ಯೋಹಾನ 11:45-53)

14 ಪಸ್ಕ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬಕ್ಕೆ ಕೇವಲ ಎರಡು ದಿನಗಳಿದ್ದವು. ಮಹಾಯಾಜಕರು ಹಾಗೂ ಧರ್ಮೋಪದೇಶಕರು ಯಾವುದಾದರೊಂದು ಸುಳ್ಳು ಅಪವಾದವನ್ನು ಕಂಡುಹಿಡಿದು ಯೇಸುವನ್ನು ಬಂಧಿಸಿ ಆತನನ್ನು ಕೊಲ್ಲಬೇಕೆಂದಿದ್ದರು. “ಆದರೆ ಹಬ್ಬದ ಸಮಯದಲ್ಲಿ ನಾವು ಯೇಸುವನ್ನು ಬಂಧಿಸಲು ಸಾಧ್ಯವಿಲ್ಲ. ಜನರು ಕೋಪಗೊಂಡು, ಗಲಭೆ ಎಬ್ಬಿಸುವ ಸಾಧ್ಯತೆಯಿದೆ” ಎಂದು ಅವರು ಮಾತಾಡಿಕೊಂಡರು.

ಸ್ತ್ರೀಯೊಬ್ಬಳು ಯೇಸುವಿಗೆ ಮಾಡಿದ ವಿಶೇಷಕಾರ್ಯ

(ಮತ್ತಾಯ 26:6-13; ಯೋಹಾನ 12:1-8)

ಬೆಥಾನಿಯದಲ್ಲಿ ಯೇಸು ಕುಷ್ಠರೋಗಿ ಸಿಮೋನನ ಮನೆಯಲ್ಲಿ ಊಟಮಾಡುತ್ತಿದ್ದಾಗ ಸ್ತ್ರೀಯೊಬ್ಬಳು ಆತನ ಬಳಿಗೆ ಬಂದಳು. ಆಕೆಯ ಬಳಿ ಅತ್ಯಂತ ಬೆಲೆಬಾಳುವ ಪರಿಮಳದ್ರವ್ಯದ ಭರಣಿ ಇತ್ತು. ಈ ಪರಿಮಳದ್ರವ್ಯವನ್ನು ಶುದ್ಧವಾದ ನಾರ್ಡ್‌[a] ತೈಲದಿಂದ ಮಾಡಲಾಗಿತ್ತು. ಆ ಸ್ತ್ರೀಯು ಭರಣಿಯನ್ನು ತೆರೆದು, ಆ ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.

ಅಲ್ಲಿದ್ದ ಕೆಲವು ಶಿಷ್ಯರು ಇದನ್ನು ನೋಡಿ ಕೋಪಗೊಂಡು ಆಕ್ಷೇಪಿಸಿದರು. “ಆ ಪರಿಮಳತೈಲವನ್ನು ಹಾಳುಮಾಡಿದ್ದೇಕೆ? ಅದು ಒಂದು ವರ್ಷದ ಸಂಪಾದನೆಗಿಂತ ಹೆಚ್ಚು ಬೆಲೆಬಾಳುತ್ತಿತ್ತು. ಅದನ್ನು ಮಾರಿ ಬಂದ ಹಣವನ್ನು ಬಡಜನರಿಗೆ ಕೊಡಬಹುದಾಗಿತ್ತು” ಎಂದು ಹೇಳಿ ಆ ಸ್ತ್ರೀಯನ್ನು ಕಟುವಾಗಿ ಟೀಕಿಸಿದರು.

ಯೇಸು, “ಆಕೆಗೆ ತೊಂದರೆ ಕೊಡಬೇಡಿ. ನೀವು ಆಕೆಯನ್ನು ಕಾಡಿಸುವುದೇಕೆ? ಅವಳು ನನಗಾಗಿ ಬಹಳ ಒಳ್ಳೆಯದನ್ನು ಮಾಡಿದಳು. ನಿಮ್ಮೊಡನೆ ಬಡಜನರು ಯಾವಾಗಲೂ ಇರುತ್ತಾರೆ. ನಿಮಗೆ ಇಷ್ಟಬಂದ ಸಮಯದಲ್ಲಿ ನೀವು ಅವರಿಗೆ ಸಹಾಯ ಮಾಡಬಹುದು. ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ. ಈಕೆ ನನಗಾಗಿ ತನ್ನಿಂದ ಸಾಧ್ಯವಾದ ಒಂದು ಕಾರ್ಯವನ್ನು ಮಾಡಿದಳು. ನಾನು ಸಾಯುವುದಕ್ಕಿಂತ ಮುಂಚೆ ನನ್ನನ್ನು ಸಮಾಧಿಗೆ ಸಿದ್ಧಮಾಡಲು ಆಕೆ ನನ್ನ ದೇಹದ ಮೇಲೆ ಪರಿಮಳತೈಲ ಸುರಿದಳು. ನಾನು ಸತ್ಯವನ್ನು ಹೇಳುತ್ತೇನೆ. ಪ್ರಪಂಚದಲ್ಲಿ ಸುವಾರ್ತೆ ಸಾರಲ್ಪಡುವಲ್ಲೆಲ್ಲಾ ಈಕೆ ಮಾಡಿದ ಈ ಕಾರ್ಯವನ್ನು ತಿಳಿಸುವುದರಿಂದ ಜನರು ಈಕೆಯನ್ನು ನೆನಪುಮಾಡಿಕೊಳ್ಳುವರು” ಎಂದು ಹೇಳಿದನು.

ಯೇಸುವಿನ ವೈರಿಗಳಿಗೆ ಯೂದನ ಸಹಾಯ

(ಮತ್ತಾಯ 26:14-16; ಲೂಕ 22:3-6)

10 ನಂತರ ಹನ್ನೆರಡು ಮಂದಿ ಅಪೊಸ್ತಲರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಯೇಸುವನ್ನು ಹಿಡಿದುಕೊಡಬೇಕೆಂಬ ದುರುದ್ದೇಶದಿಂದ ಮಹಾಯಾಜಕರೊಡನೆ ಮಾತಾಡಲು ಹೋದನು. 11 ಮಹಾಯಾಜಕರು ಇದರ ಬಗ್ಗೆ ಬಹಳ ಸಂತೋಷಗೊಂಡು, ಹಣಕೊಡುವುದಾಗಿ ಯೂದನಿಗೆ ಮಾತುಕೊಟ್ಟರು. ಆದ್ದರಿಂದ ಅವರಿಗೆ ಯೇಸುವನ್ನು ಹಿಡಿದುಕೊಡಲು ಅತ್ಯಂತ ಉತ್ತಮವಾದ ಸಮಯಕ್ಕಾಗಿ ಯೂದನು ಕಾಯತ್ತಿದ್ದನು.

ಪಸ್ಕ ಭೋಜನದ ಸಿದ್ಧತೆ

(ಮತ್ತಾಯ 26:17-25; ಲೂಕ 22:7-14,21-23; ಯೋಹಾನ 13:21-30)

12 ಅಂದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನವಾಗಿತ್ತು. ಯೆಹೂದಿಗಳು ಯಾವಾಗಲೂ ಪಸ್ಕಹಬ್ಬದ ಕುರಿಮರಿಗಳನ್ನು ಯಜ್ಞಮಾಡುವ ಸಮಯ ಇದಾಗಿತ್ತು. ಯೇಸುವಿನ ಶಿಷ್ಯರು ಆತನ ಬಳಿಗೆ ಬಂದು, “ನಾವು ಪಸ್ಕಹಬ್ಬದ ಊಟವನ್ನು ನಿನಗಾಗಿ ಎಲ್ಲಿ ಸಿದ್ಧಪಡಿಸೋಣ?” ಎಂದು ಕೇಳಿದರು.

13 ಯೇಸು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ನೀವು ಪಟ್ಟಣದೊಳಕ್ಕೆ ಹೋದಾಗ, ಒಬ್ಬ ಮನುಷ್ಯನು ನೀರಿನ ಕೊಡವನ್ನು ಹೊತ್ತುಕೊಂಡು ನಿಮ್ಮ ಎದುರಿಗೆ ಬರುವನು. ಅವನನ್ನೇ ಹಿಂಬಾಲಿಸಿರಿ. 14 ಅವನು ಒಂದು ಮನೆಯೊಳಗೆ ನಡೆದು ಹೋಗುತ್ತಾನೆ. ನೀವು ಆ ಮನೆಯ ಯಜಮಾನನಿಗೆ, ‘ನಮ್ಮ ಗುರುವು ತನ್ನ ಶಿಷ್ಯರ ಸಂಗಡ ಪಸ್ಕ ಹಬ್ಬದ ಊಟ ಮಾಡಲು ಒಂದು ಕೋಣೆಯನ್ನು ತೋರಿಸಬೇಕೆಂದು ಕೇಳುತ್ತಾನೆ’ ಎಂದು ಹೇಳಿ. 15 ಆ ಯಜಮಾನನು ಮೇಲಂತಸ್ತಿನಲ್ಲಿ ಸಿದ್ಧವಾಗಿರುವ ಒಂದು ದೊಡ್ಡ ಕೋಣೆಯನ್ನು ತೋರಿಸುತ್ತಾನೆ. ಅಲ್ಲಿ ನಮಗಾಗಿ ಊಟವನ್ನು ಸಿದ್ಧಪಡಿಸಿರಿ” ಎಂದನು.

16 ಆದ್ದರಿಂದ ಶಿಷ್ಯರು ಅಲ್ಲಿಂದ ಹೊರಟು, ಪಟ್ಟಣದೊಳಗೆ ಹೋದರು. ಯೇಸು ಹೇಳಿದ ರೀತಿಯಲ್ಲಿಯೇ ಪ್ರತಿಯೊಂದೂ ನಡೆಯಿತು. ಶಿಷ್ಯರು ಪಸ್ಕಹಬ್ಬದ ಊಟವನ್ನು ಸಿದ್ಧಪಡಿಸಿದರು.

17 ಸಾಯಂಕಾಲದಲ್ಲಿ ಯೇಸು ಹನ್ನೆರಡು ಜನ ಅಪೊಸ್ತಲರೊಂದಿಗೆ ಆ ಮನೆಗೆ ಹೋದನು. 18 ಅವರೆಲ್ಲರೂ ಊಟ ಮಾಡುತ್ತಿರುವಾಗ, ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಬಗೆಯುತ್ತಾನೆ. ಈಗ ಅವನು ನನ್ನೊಂದಿಗೆ ಊಟಮಾಡುತ್ತಿದ್ದಾನೆ” ಎಂದನು.

19 ಇದನ್ನು ಕೇಳಿದಾಗ ಶಿಷ್ಯರಿಗೆ ಬಹಳ ದುಃಖವಾಯಿತು. ಪ್ರತಿಯೊಬ್ಬ ಶಿಷ್ಯನೂ ಯೇಸುವಿಗೆ, “ಖಂಡಿತವಾಗಿ ನಾನು ನಿನಗೆ ದ್ರೋಹಮಾಡುವುದಿಲ್ಲ” ಎಂದನು.

20 ಯೇಸು, “ಈ ಹನ್ನೆರಡು ಜನರಲ್ಲಿ ಒಬ್ಬನು ನನಗೆ ದ್ರೋಹ ಬಗೆಯುತ್ತಾನೆ. ಅವನು ನನ್ನೊಡನೆ ಒಂದೇ ಬಟ್ಟಲಿನಲ್ಲಿ ತನ್ನ ರೊಟ್ಟಿಯನ್ನು ಅದ್ದುತ್ತಿದ್ದಾನೆ. 21 ಮನುಷ್ಯಕುಮಾರನು ಹಿಂಸಿಸಲ್ಪಟ್ಟನು. ಪವಿತ್ರ ಗ್ರಂಥದಲ್ಲಿಯೂ ಅದನ್ನು ಬರೆಯಲಾಗಿದೆ. ಆದರೆ ಮನುಷ್ಯಕುಮಾರನನ್ನು ಕೊಲ್ಲಲು ಹಿಡಿದುಕೊಡುವ ವ್ಯಕ್ತಿಯ ಸ್ಥಿತಿ ಬಹಳ ಭೀಕರವಾಗಿರುತ್ತದೆ. ಅವನು ಹುಟ್ಟದೇ ಇದ್ದಿದ್ದರೆ ಅವನಿಗೆ ಒಳ್ಳೆಯದಾಗುತ್ತಿತ್ತು” ಎಂದನು.

ಪ್ರಭುವಿನ ಭೋಜನ

(ಮತ್ತಾಯ 26:26-30; ಲೂಕ 22:15-20; 1 ಕೊರಿಂಥ. 11:23-25)

22 ಅವರು ಊಟಮಾಡುತ್ತಿರುವಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು, ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಅದನ್ನು ಮುರಿದು, ತನ್ನ ಶಿಷ್ಯರಿಗೆ ಕೊಟ್ಟನು. ಯೇಸು ಅವರಿಗೆ, “ಈ ರೊಟ್ಟಿಯನ್ನು ತೆಗೆದುಕೊಂಡು ತಿನ್ನಿರಿ. ಈ ರೊಟ್ಟಿಯು ನನ್ನ ದೇಹ” ಎಂದನು.

23 ನಂತರ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಅದನ್ನು ತನ್ನ ಶಿಷ್ಯರಿಗೆ ಕೊಟ್ಟನು. ಶಿಷ್ಯರೆಲ್ಲರೂ ಅದರಲ್ಲಿ ಕುಡಿದರು. 24 ಯೇಸು, “ಇದು ನನ್ನ ರಕ್ತ. ಒಡಂಬಡಿಕೆಯ ರಕ್ತ. ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ. 25 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೆ ಇದನ್ನು ಕುಡಿಯುವುದೇ ಇಲ್ಲ” ಎಂದನು.

26 ಆಗ ಶಿಷ್ಯರೆಲ್ಲರೂ ಒಂದು ಹಾಡನ್ನು ಹಾಡಿದರು. ನಂತರ ಅವರು ಆಲಿವ್ ಮರದ ಗುಡ್ಡಕ್ಕೆ ಹೋದರು.

ಶಿಷ್ಯರ ವಿಶ್ವಾಸ ದ್ರೋಹದ ಮುನ್ಸೂಚನೆ

(ಮತ್ತಾಯ 26:31-35; ಲೂಕ 22:31-34; ಯೋಹಾನ 13:36-38)

27 ನಂತರ ಯೇಸು ಶಿಷ್ಯರಿಗೆ, “ನೀವೆಲ್ಲರೂ ಭಯಗೊಂಡು ಹಿಂಜರಿಯುವಿರಿ.

‘ನಾನು ಕುರುಬನನ್ನು ಹೊಡೆಯುವೆನು;
    ಆಗ ಕುರಿಗಳು ಚದರಿಹೋಗುತ್ತವೆ’(A)

ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. 28 ಆದರೆ ನಾನು ಸತ್ತು ಪುನರುತ್ಥಾನ ಹೊಂದಿದ ಮೇಲೆ ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುತ್ತೇನೆ” ಎಂದನು.

29 ಪೇತ್ರನು, “ಉಳಿದ ಶಿಷ್ಯರೆಲ್ಲರು ಭಯಗೊಂಡು ಹಿಂಜರಿದರೂ ನಾನು ಹಿಂಜರಿಯುವುದಿಲ್ಲ” ಎಂದು ಉತ್ತರಿಸಿದನು.

30 ಯೇಸು, “ನಾನು ಸತ್ಯವನ್ನು ಹೇಳುತ್ತೇನೆ. ಈ ರಾತ್ರಿ ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚೆ ನೀನು ಮೂರು ಸಾರಿ, ನನ್ನನ್ನು ನೀನು ತಿಳಿದೇ ಇಲ್ಲವೆಂದು ಹೇಳುವೆ” ಎಂದು ಉತ್ತರಿಸಿದನು.

31 ಆದರೆ ಪೇತ್ರನು ಖಚಿತವಾಗಿ, “ನಾನು ನಿನ್ನೊಂದಿಗೆ ಸಾಯಬೇಕಾದರೂ ಸರಿಯೇ, ನಿನ್ನನ್ನು ತಿಳಿದೇ ಇಲ್ಲವೆಂದು ನಾನೆಂದಿಗೂ ಹೇಳುವುದಿಲ್ಲ” ಎಂದು ಉತ್ತರಿಸಿದನು. ಉಳಿದ ಶಿಷ್ಯರು ಸಹ ಇದೇ ರೀತಿ ಹೇಳಿದರು.

ಯೇಸುವಿನ ಏಕಾಂತ ಪ್ರಾರ್ಥನೆ

(ಮತ್ತಾಯ 26:36-46; ಲೂಕ 22:39-46)

32 ಯೇಸು ಮತ್ತು ಆತನ ಶಿಷ್ಯರು ಗೆತ್ಸೆಮನೆ ಎಂಬ ಸ್ಥಳಕ್ಕೆ ಹೋದರು. ಯೇಸು ತನ್ನ ಶಿಷ್ಯರಿಗೆ, “ನಾನು ಪ್ರಾರ್ಥಿಸಿ ಬರುವ ತನಕ ಕುಳಿತಿರಿ” ಎಂದು ಹೇಳಿ 33 ಪೇತ್ರನನ್ನು, ಯಾಕೋಬನನ್ನು ಮತ್ತು ಯೋಹಾನನನ್ನು ತನ್ನ ಜೊತೆ ಕರೆದುಕೊಂಡು ಹೋದನು. ನಂತರ ಯೇಸು ಬಹಳ ಗಲಿಬಿಲಿಗೊಂಡು, ದುಃಖದಿಂದ ತುಂಬಿದವನಾದನು. 34 ಯೇಸು ಅವರಿಗೆ, “ನನ್ನ ಪ್ರಾಣವು ಸಾಯುವಷ್ಟು ದುಃಖದಿಂದ ತುಂಬಿಹೋಗಿದೆ. ಎಚ್ಚರವಾಗಿದ್ದು ಇಲ್ಲಿಯೇ ಕಾದುಕೊಂಡಿರಿ” ಎಂದನು.

35 ಯೇಸು ಅವರಿಂದ ಸ್ವಲ್ಪದೂರ ನಡೆದುಹೋಗಿ ನೆಲದ ಮೇಲೆ ಬೋರಲಬಿದ್ದು, ಪ್ರಾರ್ಥಿಸುತ್ತಾ “ಸಾಧ್ಯವಾದರೆ, ಈ ಸಂಕಟದ ಗಳಿಗೆ ನನಗೆ ಬಾರದಿರಲಿ” ಎಂದು ಬೇಡಿಕೊಂಡನು. 36 ಬಳಿಕ ಯೇಸು, “ಅಪ್ಪಾ,[b] ತಂದೆಯೇ! ನಿನಗೆ ಎಲ್ಲವೂ ಸಾಧ್ಯ. ಈ ಸಂಕಟದ ಪಾತ್ರೆಯನ್ನು ನನ್ನಿಂದ ತೊಲಗಿಸು. ಆದರೆ ನನ್ನ ಚಿತ್ತದಂತೆ ಮಾಡದೆ, ನಿನ್ನ ಚಿತ್ತದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.

37 ನಂತರ ಯೇಸು ತನ್ನ ಶಿಷ್ಯರ ಬಳಿಗೆ ಹಿಂತಿರುಗಿದಾಗ ಅವರು ನಿದ್ರಿಸುತ್ತಿರುವುದನ್ನು ಕಂಡು, ಪೇತ್ರನಿಗೆ, “ಸೀಮೋನನೇ, ಏಕೆ ನಿದ್ರೆ ಮಾಡುತ್ತಿರುವೆ? ನೀನು ನನ್ನೊಡನೆ ಒಂದು ಗಂಟೆ ಕಾಲ ಎಚ್ಚರವಾಗಿರಲು ಸಾಧ್ಯವಾಗಲಿಲ್ಲವೇ? 38 ನೀನು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸು. ಮನಸ್ಸೇನೋ ಸಿದ್ಧವಾಗಿದೆ, ಆದರೆ ದೇಹಕ್ಕೆ ಬಲ ಸಾಲದು” ಎಂದನು.

39 ಪುನಃ ಯೇಸು ದೂರ ಹೋಗಿ, ಮೊದಲಿನಂತೆಯೇ ಪ್ರಾರ್ಥಿಸಿದನು. 40 ನಂತರ ಯೇಸು ತನ್ನ ಶಿಷ್ಯರ ಬಳಿಗೆ ಹಿಂತಿರುಗಿ ಬಂದಾಗ ಅವರು ನಿದ್ರಿಸುತ್ತಿರುವುದನ್ನು ಕಂಡನು. ಅವರ ಕಣ್ಣುಗಳು ಬಹಳ ಆಯಾಸಗೊಂಡಿದ್ದವು. ಯೇಸುವಿಗೆ ಏನು ಹೇಳಬೇಕೆಂದು ಆ ಶಿಷ್ಯರಿಗೆ ತಿಳಿಯಲಿಲ್ಲ.

41 ಯೇಸು ಮೂರನೆಯ ಸಾರಿ ಪ್ರಾರ್ಥಿಸಿದ ಮೇಲೆ, ತನ್ನ ಶಿಷ್ಯರ ಬಳಿಗೆ ಹಿಂತಿರುಗಿ, “ನೀವು ಇನ್ನೂ ನಿದ್ರಿಸುತ್ತಾ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೀರಾ? ಪಾಪಿಗಳ ಕೈಗೆ ಮನುಷ್ಯಕುಮಾರನನ್ನು ಒಪ್ಪಿಸುವ ಸಮಯ ಬಂದಿದೆ. 42 ಮೇಲೇಳಿ! ನಾವು ಹೋಗಬೇಕು. ನನ್ನನ್ನು ಆ ಜನರಿಗೆ ಹಿಡಿದುಕೊಡುವವನು ಇಲ್ಲಿಗೆ ಬರುತ್ತಿದ್ದಾನೆ” ಎಂದನು.

ಯೇಸುವಿನ ಬಂಧನ

(ಮತ್ತಾಯ 26:47-56; ಲೂಕ 22:47-53; ಯೋಹಾನ 18:3-12)

43 ಯೇಸು ಇನ್ನೂ ಮಾತಾಡುತ್ತಿರುವಾಗ, ಯೂದನು ಅಲ್ಲಿಗೆ ಬಂದನು. ಹನ್ನೆರಡು ಜನ ಅಪೊಸ್ತಲರಲ್ಲಿ ಯೂದನು ಒಬ್ಬನಾಗಿದ್ದನು. ಯೂದನೊಡನೆ ಕತ್ತಿ ಮತ್ತು ದೊಣ್ಣೆಗಳಿಂದ ಸುಸಜ್ಜಿತರಾಗಿದ್ದ ಅನೇಕ ಜನರಿದ್ದರು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಹಿರಿಯ ಯೆಹೂದ್ಯ ನಾಯಕರುಗಳು ಈ ಜನರನ್ನು ಕಳುಹಿಸಿದ್ದರು.

44 ಯೇಸು ಯಾರೆಂಬುದನ್ನು ಜನರಿಗೆ ತೋರಿಸಲು ಯೂದನು ಒಂದು ಉಪಾಯ ಮಾಡಿದನು. ಯೂದನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಯೇಸು. ಅವನನ್ನು ಸೆರೆಹಿಡಿದು ಎಚ್ಚರಿಕೆಯಿಂದ ಕಾಯುತ್ತಾ ಕರೆದುಕೊಂಡು ಹೋಗಿರಿ!” ಎಂದು ಹೇಳಿಕೊಟ್ಟಿದ್ದನು. 45 ಆದ್ದರಿಂದ ಯೂದನು ಯೇಸುವಿನ ಬಳಿಗೆ ಹೋಗಿ, “ಗುರುವೇ!” ಎಂದು ಹೇಳಿ ಯೇಸುವಿಗೆ ಮುದ್ದಿಟ್ಟನು. 46 ಆಗ ಆ ಜನರು ಯೇಸುವನ್ನು ಬಂಧಿಸಿದರು. 47 ಯೇಸುವಿನ ಹತ್ತಿರ ನಿಂತಿದ್ದ ಶಿಷ್ಯರಲ್ಲಿ ಒಬ್ಬನು ತನ್ನ ಕತ್ತಿಯನ್ನು ಹೊರಗೆಳೆದು ಪ್ರಧಾನಯಾಜಕನ ಸೇವಕನಿಗೆ ಹೊಡೆದು, ಅವನ ಕಿವಿಯನ್ನು ಕತ್ತರಿಸಿ ಹಾಕಿದನು.

48 ಆಗ ಯೇಸು, “ಒಬ್ಬ ಅಪರಾಧಿಯನ್ನು ಬಂಧಿಸುವಂತೆ ನೀವು ಕತ್ತಿಗಳನ್ನು ಮತ್ತು ದೊಣ್ಣೆಗಳನ್ನು ತೆಗೆದುಕೊಂಡು ಬರಬೇಕಿತ್ತೇ? 49 ಪ್ರತಿದಿನ ದೇವಾಲಯದಲ್ಲಿ ನಾನು ಉಪದೇಶಿಸುತ್ತಾ ನಿಮ್ಮೊಡನೆ ಇದ್ದೆನು. ಅಲ್ಲಿ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಈ ಎಲ್ಲಾ ಸಂಗತಿಗಳು ಪವಿತ್ರಗ್ರಂಥದಲ್ಲಿ ಬರೆದಿರುವಂತೆ ನಡೆದಿವೆ” ಎಂದನು. 50 ಆಗ ಯೇಸುವಿನ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.

51 ಯೇಸುವಿನ ಶಿಷ್ಯನಾಗಿದ್ದ ಒಬ್ಬ ಯುವಕನು ಅಲ್ಲಿದ್ದನು. ಅವನು ನಾರುಬಟ್ಟೆಯನ್ನು ಧರಿಸಿದ್ದನು. ಜನರು ಅವನನ್ನು ಸಹ ಹಿಡಿದುಕೊಂಡರು. 52 ಅವನು ತಾನು ಧರಿಸಿಕೊಂಡಿದ್ದ ನಾರುಬಟ್ಟೆಯನ್ನು ಅಲ್ಲಿಯೇ ಬಿಟ್ಟು ಬರೀಮೈಯಲ್ಲಿ ಓಡಿಹೋದನು.

ಯೆಹೂದ್ಯನಾಯಕರ ಮುಂದೆ ಯೇಸು

(ಮತ್ತಾಯ 26:57-68; ಲೂಕ 22:54-55,63-71; ಯೋಹಾನ 18:13-14,19-24)

53 ಯೇಸುವನ್ನು ಬಂಧಿಸಿದ್ದ ಜನರು ಪ್ರಧಾನಯಾಜಕನ ಮನೆಗೆ ಆತನನ್ನು ಕರೆದುಕೊಂಡು ಹೋದರು. ಎಲ್ಲಾ ಮಹಾಯಾಜಕರುಗಳು, ಹಿರಿಯ ಯೆಹೂದ್ಯನಾಯಕರುಗಳು, ಹಾಗೂ ಧರ್ಮೋಪದೇಶಕರು ಅಲ್ಲಿ ಸೇರಿದ್ದರು. 54 ಪೇತ್ರನು ಯೇಸುವನ್ನು ದೂರದಲ್ಲಿ ಹಿಂಬಾಲಿಸುತ್ತಾ ಪ್ರಧಾನಯಾಜಕನ ಮನೆಯ ಅಂಗಳದೊಳಕ್ಕೆ ಹೋಗಿ, ಕಾವಲುಗಾರರೊಡನೆ ಕುಳಿತುಕೊಂಡು ಬೆಂಕಿಯಿಂದ ಚಳಿಕಾಯಿಸಿಕೊಳ್ಳತೊಡಗಿದನು.

55 ಮಹಾಯಾಜಕರು ಹಾಗೂ ಹಿರಿಯ ಸಭೆಯವರೆಲ್ಲರು ಆತನನ್ನು ಕೊಲ್ಲಲು ಬೇಕಾದ ಒಂದು ತಪ್ಪನ್ನು ಆತನಲ್ಲಿ ಕಂಡುಹಿಡಿಯುವುದಕ್ಕೆ ಪ್ರಯತ್ನಿಸಿದರು. ಆದರೆ ಯೇಸುವನ್ನು ಕೊಲ್ಲಲು ಸರಿಯಾದ ಯಾವುದೇ ಆಧಾರವನ್ನು ಕಂಡುಹಿಡಿಯಲು ಸಮಿತಿಗೆ ಸಾಧ್ಯವಾಗಲಿಲ್ಲ. 56 ಅನೇಕ ಜನರು ಬಂದು, ಯೇಸುವಿನ ವಿರುದ್ಧ ಸುಳ್ಳು ಸಂಗತಿಗಳನ್ನು ಹೇಳಿದರು. ಆದರೆ ಅವರೆಲ್ಲರು ಒಂದಕ್ಕೊಂದು ಹೊಂದಾಣಿಕೆಯಾಗದಂತಹ ಬೇರೆಬೇರೆ ಸಂಗತಿಗಳನ್ನು ಹೇಳಿದರು.

57 ನಂತರ ಕೆಲವು ಜನರು ನಿಂತುಕೊಂಡು, ಯೇಸುವಿನ ವಿರುದ್ಧ ಕೆಲವು ಅಪವಾದಗಳನ್ನು ಹೊರಿಸುತ್ತಾ, 58 “ಈ ಮನುಷ್ಯನು, ‘ಕೈಯಿಂದ ಕಟ್ಟಿದ ಈ ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕೈಯಿಂದ ಕಟ್ಟಿಲ್ಲದ ಇನ್ನೊಂದು ದೇವಾಲಯವನ್ನು ಕಟ್ಟುತ್ತೇನೆ’ ಎಂದು ಹೇಳಿದ್ದನ್ನು ನಾವು ಕೇಳಿದೆವು” ಎಂದರು. 59 ಆದರೂ ಜನರು ಹೇಳಿದ ಈ ಸಂಗತಿಗಳು ಹೊಂದಿಕೆಯಾಗಲಿಲ್ಲ.

60 ಆಗ ಪ್ರಧಾನಯಾಜಕನು ಎಲ್ಲಾ ಜನರೆದುರಿಗೆ ಎದ್ದುನಿಂತು, ಯೇಸುವಿಗೆ, “ಈ ಜನರು ನಿನಗೆ ವಿರುದ್ಧವಾಗಿ ಹೊರಿಸುತ್ತಿರುವ ಈ ಆರೋಪಗಳ ಬಗ್ಗೆ ನೀನು ಏನಾದರೂ ಹೇಳಬೇಕೆಂದಿರುವೆಯೋ? ಜನರು ಹೇಳುತ್ತಿರುವುದು ನಿಜವೇ?” ಎಂದು ಕೇಳಿದನು. 61 ಆದರೆ ಯೇಸು ಮೌನವಾಗಿದ್ದನು. ಯಾವ ಉತ್ತರವನ್ನೂ ಕೊಡಲಿಲ್ಲ.

ಪ್ರಧಾನಯಾಜಕನು ಯೇಸುವಿಗೆ, “ಮಹಾದೇವರ ಮಗನಾದ ಕ್ರಿಸ್ತನು ನೀನೋ?” ಎಂಬ ಇನ್ನೊಂದು ಪ್ರಶ್ನೆಯನ್ನು ಕೇಳಿದನು.

62 ಯೇಸು, “ಹೌದು, ನಾನೇ ದೇವರ ಮಗನು. ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ನೀನು ಕಾಣುವೆ” ಎಂದು ಉತ್ತರಿಸಿದನು.[c]

63 ಪ್ರಧಾನಯಾಜಕನು ಬಹಳ ಕೋಪದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, “ನಮಗೆ ಇನ್ನೂ ಹೆಚ್ಚಿನ ಸಾಕ್ಷಿಗಳ ಅವಶ್ಯಕತೆಯಿಲ್ಲ. 64 ಇವನು ದೇವರ ವಿರುದ್ಧವಾಗಿ ಹೇಳಿದ ಮಾತನ್ನು ನೀವೆಲ್ಲರೂ ಕೇಳಿದ್ದೀರಿ. ನಿಮ್ಮ ಅಭಿಪ್ರಾಯವೇನು?” ಎಂದು ಕೇಳಿದನು.

ಯೇಸು ಅಪರಾಧಿಯೆಂತಲೂ ಆತನಿಗೆ ಮರಣದಂಡನೆ ಆಗಬೇಕೆಂತಲೂ ಜನರೆಲ್ಲರು ಹೇಳಿದರು. 65 ಅಲ್ಲಿದ್ದ ಕೆಲವು ಜನರು ಯೇಸುವಿಗೆ ಉಗುಳಿ, ಆತನ ಮುಖವನ್ನು ಮುಚ್ಚಿ, ಮುಷ್ಠಿಯಿಂದ ಗುದ್ದಿ, “ನಮಗೆ ಪ್ರವಾದನೆ ಹೇಳು” ಎಂದರು. ನಂತರ ಕಾವಲುಗಾರರು ಯೇಸುವನ್ನು ದೂರ ಕರೆದುಕೊಂಡು ಹೋಗಿ, ಆತನನ್ನು ಹೊಡೆದರು.

ಪೇತ್ರನ ವಿಶ್ವಾಸದ್ರೋಹ

(ಮತ್ತಾಯ 26:69-75; ಲೂಕ 22:56-62; ಯೋಹಾನ 18:15-18,25-27)

66 ಆ ಸಮಯದಲ್ಲಿ ಪೇತ್ರನು ಇನ್ನೂ ಅಂಗಳದಲ್ಲಿದ್ದನು. ಪ್ರಧಾನಯಾಜಕನ ದಾಸಿಯಾಗಿದ್ದ ಹುಡುಗಿಯೊಬ್ಬಳು ಪೇತ್ರನ ಬಳಿಗೆ ಬಂದಳು. 67 ಪೇತ್ರನು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳುತ್ತಿರುವುದನ್ನು ಅವಳು ಕಂಡು, ಪೇತ್ರನನ್ನು ಹತ್ತಿರದಿಂದ ದಿಟ್ಟಿಸಿ ನೋಡಿ, “ನೀನು ನಜರೇತಿನವನಾದ ಯೇಸುವಿನ ಜೊತೆ ಇದ್ದವನಲ್ಲವೇ?” ಎಂದಳು.

68 ಆದರೆ ಪೇತ್ರನು ಆಕೆಯ ಮಾತನ್ನು ನಿರಾಕರಿಸಿ, “ನೀನು ಏನು ಹೇಳುತ್ತಿರುವೆಯೋ ನನಗೆ ತಿಳಿಯದು” ಎಂದು ಹೇಳಿ ಎದ್ದು, ಅಂಗಳದ ಪ್ರವೇಶದ್ವಾರದ ಬಳಿಗೆ ಹೋದನು.

69 ಪೇತ್ರನು ಅಲ್ಲಿರುವುದನ್ನು ಆ ದಾಸಿಯು ನೋಡಿ, ಅಲ್ಲಿ ನಿಂತಿದ್ದ ಜನರಿಗೆ, “ಈ ಮನುಷ್ಯನು ಯೇಸುವನ್ನು ಹಿಂಬಾಲಿಸಿದ ಜನರಲ್ಲಿ ಒಬ್ಬನು” ಎಂದು ಹೇಳಿದಳು. 70 ಪುನಃ ಪೇತ್ರನು ಆಕೆಯ ಮಾತನ್ನು ನಿರಾಕರಿಸಿದನು.

ಸ್ವಲ್ಪ ಸಮಯದ ನಂತರ, ಪೇತ್ರನ ಬಳಿ ನಿಂತಿದ್ದ ಕೆಲವು ಜನರು ಅವನಿಗೆ, “ಯೇಸುವನ್ನು ಹಿಂಬಾಲಿಸಿದ ಜನರಲ್ಲಿ ನೀನೂ ಒಬ್ಬನು ಎಂಬುದು ನಮಗೆ ತಿಳಿದಿದೆ. ನೀನು ಯೇಸುವಿನಂತೆ ಗಲಿಲಾಯದವನು” ಎಂದರು.

71 ಆಗ ಪೇತ್ರನು ತನಗೆ ಶಾಪ ಹಾಕಿಕೊಳ್ಳುತ್ತಾ “ದೇವರ ಮೇಲೆ ಆಣೆಯಿಟ್ಟು ಹೇಳುತ್ತೇನೆ, ನೀವು ಹೇಳುತ್ತಿರುವ ಈ ಮನುಷ್ಯನನ್ನು ನಾನು ತಿಳಿದಿಲ್ಲ!” ಎಂದು ಬಲವಾಗಿ ಹೇಳಿದನು.

72 ಪೇತ್ರನು ಇದನ್ನು ಹೇಳಿದ ಮೇಲೆ ಕೋಳಿ ಎರಡನೇ ಸಾರಿ ಕೂಗಿತು. “ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚೆ, ನೀನು ನನ್ನನ್ನು ತಿಳಿದಿಲ್ಲವೆಂದು ಮೂರು ಸಾರಿ ಹೇಳುವೆ” ಎಂದು ಯೇಸು ತನಗೆ ಹೇಳಿದ್ದನ್ನು ಪೇತ್ರನು ಜ್ಞಾಪಿಸಿಕೊಂಡು ಬಹಳ ದುಃಖದಿಂದ ಗೋಳಾಡಿದನು.

ಪಿಲಾತನಿಂದ ಯೇಸುವಿನ ವಿಚಾರಣೆ

(ಮತ್ತಾಯ 27:1-2,11-14; ಲೂಕ 23:1-5; ಯೋಹಾನ 18:28-38)

15 ಮುಂಜಾನೆ ನಸುಕಿನಲ್ಲೇ, ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಧರ್ಮೋಪದೇಶಕರು ಮತ್ತು ಯೆಹೂದ್ಯ ಸಮಿತಿಯವರು ಸಭೆಸೇರಿ ಯೇಸುವಿಗೆ ಮಾಡಬೇಕಾದದ್ದನ್ನು ನಿರ್ಧರಿಸಿದರು. ಅವರು ಯೇಸುವನ್ನು ಬಂಧಿಸಿ, ರಾಜ್ಯಪಾಲನಾದ ಪಿಲಾತನ ಬಳಿಗೆ ಕರೆದುಕೊಂಡು ಹೋಗಿ ಅವನಿಗೆ ಒಪ್ಪಿಸಿದರು.

ಪಿಲಾತನು ಯೇಸುವಿಗೆ, “ನೀನು ಯೆಹೂದ್ಯರ ರಾಜನೋ?” ಎಂದು ಕೇಳಿದನು.

ಯೇಸು, “ಹೌದು, ನೀನು ಹೇಳಿದ್ದು ಸರಿ” ಎಂದು ಉತ್ತರಿಸಿದನು.

ಮಹಾಯಾಜಕರು ಯೇಸುವಿನ ಮೇಲೆ ಅನೇಕ ತಪ್ಪುಗಳನ್ನು ಹೊರಿಸಿದರು. ಆದ್ದರಿಂದ ಪಿಲಾತನು ಯೇಸುವಿಗೆ ಮತ್ತೊಮ್ಮೆ, “ಈ ಜನರು ನಿನ್ನ ಮೇಲೆ ಅನೇಕ ಅಪರಾಧಗಳನ್ನು ಹೊರಿಸುತ್ತಿದ್ದರೂ ನೀನು ಏಕೆ ಉತ್ತರಿಸುವುದಿಲ್ಲ?” ಎಂದು ಕೇಳಿದನು.

ಆದರೆ ಯೇಸು ಮೌನವಾಗಿದ್ದನು. ಪಿಲಾತನಿಗೆ ಇದರಿಂದ ಬಹಳ ಆಶ್ಚರ್ಯವಾಯಿತು.

ಯೇಸುವನ್ನು ಬಿಡಿಸಲು ಪಿಲಾತನು ಮಾಡಿದ ವಿಫಲ ಪ್ರಯತ್ನ

(ಮತ್ತಾಯ 27:15-31; ಲೂಕ 23:13-25; ಯೋಹಾನ 18:39–19:16)

ಪ್ರತಿ ವರ್ಷವೂ ಪಸ್ಕಹಬ್ಬದ ಸಮಯದಲ್ಲಿ ಜನರು ಬಯಸಿದ ಕೈದಿಯನ್ನು ರಾಜ್ಯಪಾಲನು ಸೆರೆಮನೆಯಿಂದ ಬಿಡುಗಡೆ ಮಾಡುತ್ತಿದ್ದನು. ಆ ಸಮಯದಲ್ಲಿ ಬರಬ್ಬ ಎಂಬವನು ದಂಗೆಕೋರರೊಂದಿಗೆ ಸೆರೆಮನೆಯಲ್ಲಿದ್ದನು. ಈ ದಂಗೆಕೋರರು ಒಂದು ಗಲಭೆಯ ಸಮಯದಲ್ಲಿ ಕೊಲೆ ಮಾಡಿದ ಆಪಾದನೆಗೆ ಗುರಿಯಾಗಿದ್ದರು.

ಜನರು ಪಿಲಾತನ ಬಳಿಗೆ, ಎಂದಿನಂತೆ ತಮಗಾಗಿ ಒಬ್ಬ ಕೈದಿಯನ್ನು ಬಿಡುಗಡೆ ಮಾಡಬೇಕೆಂದು ಕೇಳಿದರು. ಪಿಲಾತನು ಜನರಿಗೆ, “ನಾನು ಯೆಹೂದ್ಯರ ರಾಜನನ್ನು ಬಿಡುಗಡೆ ಮಾಡಬೇಕೆಂದು ಬಯಸುತ್ತೀರಾ?” ಎಂದು ಕೇಳಿದನು. 10 ಮಹಾಯಾಜಕರು ಹೊಟ್ಟೆಕಿಚ್ಚಿನಿಂದ ಯೇಸುವನ್ನು ಬಂಧಿಸಿ ತನಗೆ ಒಪ್ಪಿಸಿದ್ದಾರೆಂಬುದು ಪಿಲಾತನಿಗೆ ತಿಳಿದಿತ್ತು. 11 ಆದರೆ ಯೇಸುವನ್ನು ಬಿಡುಗಡೆ ಮಾಡದೆ ಬರಬ್ಬನನ್ನು ಬಿಡುಗಡೆ ಮಾಡುವಂತೆ ಪಿಲಾತನನ್ನು ಕೇಳಿಕೊಳ್ಳಬೇಕೆಂದು ಮಹಾಯಾಜಕರು ಜನರನ್ನು ಪ್ರೇರೇಪಿಸಿದರು.

12 ಪಿಲಾತನು ಜನರಿಗೆ ಮತ್ತೆ “ಯೆಹೂದ್ಯರ ರಾಜನೆಂದು ನೀವು ಕರೆಯುವ ಈ ಮನುಷ್ಯನನ್ನು ನಾನೇನು ಮಾಡಲಿ?” ಎಂದು ಕೇಳಿದನು.

13 ಜನರು, “ಅವನನ್ನು ಶಿಲುಬೆಗೇರಿಸು!” ಎಂದು ಆರ್ಭಟಿಸಿದರು.

14 ಪಿಲಾತನು, “ಏಕೆ? ಅವನು ಯಾವ ಅಪರಾಧ ಮಾಡಿದ್ದಾನೆ?” ಎಂದು ಕೇಳಿದನು.

ಅದಕ್ಕೆ ಜನರು, “ಅವನನ್ನು ಶಿಲುಬೆಗೇರಿಸು!” ಎಂದು ಜೋರಾಗಿ ಆರ್ಭಟಿಸಿದರು.

15 ಪಿಲಾತನು ಜನರನ್ನು ಸಂತೋಷಪಡಿಸಲು ಬಯಸಿ ಅವರಿಗಾಗಿ ಬರಬ್ಬನನ್ನು ಬಿಡುಗಡೆ ಮಾಡಿದನು ಮತ್ತು ಕೊರಡೆಗಳಿಂದ ಹೊಡೆದು ಶಿಲುಬೆಗೇರಿಸುವುದಕ್ಕಾಗಿ ಯೇಸುವನ್ನು ಸೈನಿಕರಿಗೆ ಒಪ್ಪಿಸಿದನು.

16 ಪಿಲಾತನ ಸೈನಿಕರು ಯೇಸುವನ್ನು ರಾಜಭವನದ ಅಂಗಳದೊಳಕ್ಕೆ ಕೊಂಡೊಯ್ದು ಇತರ ಸೈನಿಕರನ್ನೆಲ್ಲಾ ಒಟ್ಟಿಗೆ ಕರೆದರು. 17 ಸೈನಿಕರು ಯೇಸುವಿನ ಮೇಲೆ ಕಡುಕೆಂಪಾದ ನಿಲುವಂಗಿಯನ್ನು ಹಾಕಿ ಮುಳ್ಳಿನ ಬಳ್ಳಿಗಳಿಂದ ಒಂದು ಕಿರೀಟ ಮಾಡಿ ಯೇಸುವಿನ ತಲೆಯ ಮೇಲೆ ಇಟ್ಟರು. 18 ನಂತರ ಅವರು ಯೇಸುವಿಗೆ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ!” ಎಂದರು. 19 ಸೈನಿಕರು ಆತನ ತಲೆಯ ಮೇಲೆ ಅನೇಕ ಸಾರಿ ಬೆತ್ತದಿಂದ ಹೊಡೆದು ಆತನ ಮೇಲೆ ಉಗುಳಿದರು. ನಂತರ ಅವರು ಯೇಸುವಿನ ಮುಂದೆ ಮೊಣಕಾಲೂರಿ, ಆತನನ್ನು ಆರಾಧಿಸುವಂತೆ ನಟಿಸುತ್ತಾ ಪರಿಹಾಸ್ಯ ಮಾಡಿದರು. 20 ಆ ಬಳಿಕ ಸೈನಿಕರು ಕಡುಕೆಂಪಾದ ನಿಲುವಂಗಿಯನ್ನು ತೆಗೆದುಬಿಟ್ಟು, ಆತನ ಬಟ್ಟೆಗಳನ್ನೇ ಮತ್ತೆ ತೊಡಿಸಿದರು. ನಂತರ ಅವರು ಯೇಸುವನ್ನು ಶಿಲುಬೆಗೇರಿಸಲು ಕರೆದುಕೊಂಡು ಹೋದರು.

ಶಿಲುಬೆಗೇರಿಸಲ್ಪಟ್ಟ ಯೇಸು

(ಮತ್ತಾಯ 27:32-44; ಲೂಕ 23:26-43; ಯೋಹಾನ 19:17-27)

21 ಆಗ ಸಿರೇನ್ ಪಟ್ಟಣದ ಸಿಮೋನ ಎಂಬವನು ಹೊಲದಿಂದ ಬರುತ್ತಿದ್ದನು. ಅವನು ಅಲೆಕ್ಸಾಂಡರ್ ಮತ್ತು ರೂಫಸ್ ಎಂಬವರ ತಂದೆ. ಸೈನಿಕರು ಯೇಸುವಿನ ಶಿಲುಬೆಯನ್ನು ಹೊರುವಂತೆ ಸಿಮೋನನನ್ನು ಬಲವಂತ ಮಾಡಿದರು. 22 ಅವರು ಯೇಸುವನ್ನು ಗೊಲ್ಗೊಥ ಎಂಬ ಸ್ಥಳಕ್ಕೆ ಕರೆದುಕೊಂಡು ಹೋದರು. (ಗೊಲ್ಗೊಥ ಎಂದರೆ “ಕಪಾಲ ಸ್ಥಳ.”) 23 ಗೊಲ್ಗೊಥದಲ್ಲಿ ಸೈನಿಕರು ಯೇಸುವಿಗೆ ರಕ್ತಬೋಳ ಮಿಶ್ರಿತವಾದ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಆದರೆ ಯೇಸು ಅದನ್ನು ಕುಡಿಯಲಿಲ್ಲ. 24 ಸೈನಿಕರು ಯೇಸುವನ್ನು ಶಿಲುಬೆಗೆ ನೇತುಹಾಕಿ, ಮೊಳೆಗಳನ್ನು ಜಡಿದರು. ನಂತರ ಸೈನಿಕರು ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ತಮ್ಮಲ್ಲಿ ಹಂಚಿಕೊಂಡರು.

25 ಅವರು ಯೇಸುವನ್ನು ಶಿಲುಬೆಗೇರಿಸಿದಾಗ ಬೆಳಿಗ್ಗೆ ಒಂಭತ್ತು ಗಂಟೆಯಾಗಿತ್ತು. 26 ಯೇಸುವಿನ ವಿರುದ್ಧ ಮಾಡಲಾದ ಆಪಾದನೆಯನ್ನು ಅಂದರೆ “ಯೆಹೂದ್ಯರ ರಾಜ” ಎಂದು ಶಿಲುಬೆಯ ಮೇಲೆ ಬರೆಯಲಾಗಿತ್ತು. 27 ಅಲ್ಲದೆ ಅವರು ಯೇಸುವಿನ ಪಕ್ಕದಲ್ಲಿ ಇಬ್ಬರು ಕಳ್ಳರನ್ನು ಶಿಲುಬೆಗೆ ಹಾಕಿದರು. ಅವರು ಒಬ್ಬ ಕಳ್ಳನನ್ನು ಯೇಸುವಿನ ಬಲಗಡೆಯಲ್ಲಿಯೂ ಇನ್ನೊಬ್ಬ ಕಳ್ಳನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದ್ದರು. 28 [d]

29 ಅಲ್ಲಿ ನಡೆದುಹೋಗುತ್ತಿದ್ದವರು ತಮ್ಮ ತಲೆಯಾಡಿಸುತ್ತಾ, “ನೀನು ದೇವಾಲಯವನ್ನು ಕೆಡವಿ, ಅದನ್ನು ಮತ್ತೆ ಮೂರು ದಿನಗಳಲ್ಲಿ ಕಟ್ಟುತ್ತೇನೆಂದು ಹೇಳಿದೆ. 30 ಈಗ ಶಿಲುಬೆಯಿಂದ ಕೆಳಗಿಳಿದು ಬಂದು ನಿನ್ನನ್ನು ರಕ್ಷಿಸಿಕೊ!” ಎಂದು ಅಪಹಾಸ್ಯ ಮಾಡಿದರು.

31 ಅಲ್ಲಿದ್ದ ಮಹಾಯಾಜಕರು ಹಾಗೂ ಧರ್ಮೋಪದೇಶಕರು ಸಹ, “ಅವನು ಇತರ ಜನರನ್ನು ರಕ್ಷಿಸಿದನು. ಆದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. 32 ಅವನು ನಿಜವಾಗಲೂ ಇಸ್ರೇಲರ ರಾಜನಾದ ಕ್ರಿಸ್ತನಾಗಿದ್ದರೆ, ಈಗ ಶಿಲುಬೆಯಿಂದ ಕೆಳಗಿಳಿದು ಬಂದು ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ. ಆಗ ನಾವು ಅವನನ್ನು ನಂಬುತ್ತೇವೆ” ಎಂದು ಅಪಹಾಸ್ಯ ಮಾಡಿದರು. ಯೇಸುವಿನ ಪಕ್ಕದ ಶಿಲುಬೆಗಳಿಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಆತನನ್ನು ಗೇಲಿಮಾಡಿದರು.

ಯೇಸುವಿನ ಮರಣ

(ಮತ್ತಾಯ 27:45-56; ಲೂಕ 23:44-49; ಯೋಹಾನ 19:28-30)

33 ಮಧ್ಯಾಹ್ನವಾದಾಗ, ಇಡೀ ದೇಶವೇ ಕತ್ತಲಾಯಿತು. ಈ ಕತ್ತಲೆಯು ಸಾಯಂಕಾಲ ಮೂರು ಗಂಟೆಯವರೆಗೆ ಇತ್ತು. 34 ಮೂರು ಗಂಟೆಗೆ, ಯೇಸು ದೊಡ್ಡ ಧ್ವನಿಯಿಂದ, “ಎಲೋಹಿ, ಎಲೋಹಿ, ಲಮಾ ಸಬಕ್ತಾನಿ?” ಎಂದು ಕೂಗಿದನು. “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟೆ?”(B) ಎಂಬುದೇ ಇದರರ್ಥ.

35 ಅಲ್ಲಿ ನಿಂತಿದ್ದ ಕೆಲವು ಜನರು ಇದನ್ನು ಕೇಳಿ, “ನೋಡಿ! ಆತನು ಎಲೀಯನನ್ನು ಕರೆಯುತ್ತಿದ್ದಾನೆ” ಎಂದರು.

36 ಅಲ್ಲಿದ್ದ ಒಬ್ಬನು ಓಡಿಹೋಗಿ, ಸ್ಪಂಜನ್ನು ತೆಗೆದುಕೊಂಡು ಅದನ್ನು ಹುಳಿರಸದಿಂದ ತುಂಬಿಸಿ, ಒಂದು ಕೋಲಿಗೆ ಕಟ್ಟಿ ಯೇಸುವಿಗೆ ಕುಡಿಯಲು ಕೊಡುತ್ತಾ, “ಎಲೀಯನು ಇವನನ್ನು ಶಿಲುಬೆಯಿಂದ ಕೆಳಗಿಳಿಸಲು ಬರಬಹುದೇನೋ ನಾವು ಕಾಯ್ದು ನೋಡಬೇಕು” ಎಂದನು.

37 ನಂತರ ಯೇಸು ಮಹಾಧ್ವನಿಯಿಂದ ಕೂಗಿ, ಪ್ರಾಣಬಿಟ್ಟನು.

38 ಆಗ ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೂ ಎರಡು ಭಾಗಗಳಾಗಿ ಹರಿದುಹೋಯಿತು. 39 ಶಿಲುಬೆಯ ಮುಂದೆ ನಿಂತಿದ್ದ ಸೈನ್ಯದ ಅಧಿಕಾರಿಯು ಯೇಸು ಪ್ರಾಣಬಿಟ್ಟಾಗ ನಡೆದದ್ದನ್ನು ನೋಡಿ, “ಈ ಮನುಷ್ಯನು ನಿಜವಾಗಿಯೂ ದೇವರ ಮಗನು” ಎಂದನು.

40 ಕೆಲವು ಸ್ತ್ರೀಯರು ಶಿಲುಬೆಯಿಂದ ದೂರದಲ್ಲಿ ನಿಂತುಕೊಂಡು ನೋಡುತ್ತಾ ಇದ್ದರು. ಈ ಸ್ತ್ರೀಯರಲ್ಲಿ ಕೆಲವರೆಂದರೆ, ಮಗ್ದಲದ ಮರಿಯಳು, ಸಲೋಮೆ ಮತ್ತು ಯಾಕೋಬ ಯೋಸೆಯರ ತಾಯಿಯಾದ ಮರಿಯಳು (ಯಾಕೋಬನು ಅವಳ ಕಿರಿಯ ಮಗ.) 41 ಈ ಸ್ತ್ರೀಯರು ಗಲಿಲಾಯದಲ್ಲಿ ಯೇಸುವನ್ನು ಹಿಂಬಾಲಿಸಿ ಆತನ ಸೇವೆ ಮಾಡಿದವರು. ಯೇಸುವಿನೊಡನೆ ಜೆರುಸಲೇಮಿಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರು ಅಲ್ಲಿದ್ದರು.

ಯೇಸುವಿನ ಸಮಾಧಿ

(ಮತ್ತಾಯ 27:57-61; ಲೂಕ 23:50-56; ಯೋಹಾನ 19:38-42)

42 ಆಗ ಕತ್ತಲಾಗತೊಡಗಿತ್ತು. ಅಂದು ಸಿದ್ಧತೆಯ ದಿನವಾಗಿದ್ದರಿಂದ (ಅಂದರೆ ಸಬ್ಬತ್ತಿನ ಹಿಂದಿನ ದಿನ), 43 ಅರಿಮಥಾಯ ಊರಿನ ಯೋಸೇಫ ಎಂಬವನು ಪಿಲಾತನ ಬಳಿಗೆ ಹೋಗಿ, ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಧೈರ್ಯದಿಂದ ಕೇಳಿದನು. ಯೋಸೇಫನು ಯೆಹೂದ್ಯರ ಸಮಿತಿಯಲ್ಲಿ ಒಬ್ಬ ಮುಖ್ಯ ಸದಸ್ಯನಾಗಿದ್ದನು. ದೇವರರಾಜ್ಯ ಬರಲೆಂದು ಬಯಸಿದ ಜನರಲ್ಲಿ ಇವನೂ ಒಬ್ಬನಾಗಿದ್ದನು.

44 ಯೇಸು ಇಷ್ಟು ಬೇಗನೆ ಸತ್ತದ್ದನ್ನು ಕೇಳಿ ಪಿಲಾತನಿಗೆ ಆಶ್ಚರ್ಯವಾಯಿತು. ಯೇಸುವನ್ನು ಕಾವಲು ಕಾಯುತ್ತಿದ್ದ ಸೈನ್ಯಾಧಿಕಾರಿಯನ್ನು ಪಿಲಾತನು ಕರೆದು, “ಯೇಸು ಸತ್ತುಹೋದನೇ?” ಎಂದು ಕೇಳಿದನು. 45 ಆ ಅಧಿಕಾರಿಯು, “ಹೌದು” ಎಂದು ಹೇಳಿದ್ದರಿಂದ ಆತನ ದೇಹವನ್ನು ತೆಗೆದುಕೊಳ್ಳಲು ಪಿಲಾತನು ಯೋಸೇಫನಿಗೆ ಅಪ್ಪಣೆಕೊಟ್ಟನು.

46 ಯೋಸೇಫನು ನಾರುಬಟ್ಟೆಯನ್ನು ತೆಗೆದುಕೊಂಡು ಬಂದು, ಶಿಲುಬೆಯಿಂದ ದೇಹವನ್ನು ಇಳಿಸಿ, ಅದನ್ನು ಆ ಬಟ್ಟೆಯಿಂದ ಸುತ್ತಿದನು. ಅನಂತರ, ಬಂಡೆಯ ಸಮಾಧಿಯಲ್ಲಿ ಅದನ್ನಿರಿಸಿ ಆ ಸಮಾಧಿಯ ಬಾಗಿಲಿಗೆ ದೊಡ್ಡ ಬಂಡೆಯನ್ನು ಉರುಳಿಸಿ ಮುಚ್ಚಿದನು. 47 ಮಗ್ದಲದ ಮರಿಯಳು ಹಾಗೂ ಯೋಸೆಯನ ತಾಯಿಯಾದ ಮರಿಯಳು ಸಮಾಧಿ ಮಾಡಿದ ಸ್ಥಳವನ್ನು ಗುರುತಿಸಿಕೊಂಡರು.

ಮಾರ್ಕ 15:1-39

ಪಿಲಾತನಿಂದ ಯೇಸುವಿನ ವಿಚಾರಣೆ

(ಮತ್ತಾಯ 27:1-2,11-14; ಲೂಕ 23:1-5; ಯೋಹಾನ 18:28-38)

15 ಮುಂಜಾನೆ ನಸುಕಿನಲ್ಲೇ, ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಧರ್ಮೋಪದೇಶಕರು ಮತ್ತು ಯೆಹೂದ್ಯ ಸಮಿತಿಯವರು ಸಭೆಸೇರಿ ಯೇಸುವಿಗೆ ಮಾಡಬೇಕಾದದ್ದನ್ನು ನಿರ್ಧರಿಸಿದರು. ಅವರು ಯೇಸುವನ್ನು ಬಂಧಿಸಿ, ರಾಜ್ಯಪಾಲನಾದ ಪಿಲಾತನ ಬಳಿಗೆ ಕರೆದುಕೊಂಡು ಹೋಗಿ ಅವನಿಗೆ ಒಪ್ಪಿಸಿದರು.

ಪಿಲಾತನು ಯೇಸುವಿಗೆ, “ನೀನು ಯೆಹೂದ್ಯರ ರಾಜನೋ?” ಎಂದು ಕೇಳಿದನು.

ಯೇಸು, “ಹೌದು, ನೀನು ಹೇಳಿದ್ದು ಸರಿ” ಎಂದು ಉತ್ತರಿಸಿದನು.

ಮಹಾಯಾಜಕರು ಯೇಸುವಿನ ಮೇಲೆ ಅನೇಕ ತಪ್ಪುಗಳನ್ನು ಹೊರಿಸಿದರು. ಆದ್ದರಿಂದ ಪಿಲಾತನು ಯೇಸುವಿಗೆ ಮತ್ತೊಮ್ಮೆ, “ಈ ಜನರು ನಿನ್ನ ಮೇಲೆ ಅನೇಕ ಅಪರಾಧಗಳನ್ನು ಹೊರಿಸುತ್ತಿದ್ದರೂ ನೀನು ಏಕೆ ಉತ್ತರಿಸುವುದಿಲ್ಲ?” ಎಂದು ಕೇಳಿದನು.

ಆದರೆ ಯೇಸು ಮೌನವಾಗಿದ್ದನು. ಪಿಲಾತನಿಗೆ ಇದರಿಂದ ಬಹಳ ಆಶ್ಚರ್ಯವಾಯಿತು.

ಯೇಸುವನ್ನು ಬಿಡಿಸಲು ಪಿಲಾತನು ಮಾಡಿದ ವಿಫಲ ಪ್ರಯತ್ನ

(ಮತ್ತಾಯ 27:15-31; ಲೂಕ 23:13-25; ಯೋಹಾನ 18:39–19:16)

ಪ್ರತಿ ವರ್ಷವೂ ಪಸ್ಕಹಬ್ಬದ ಸಮಯದಲ್ಲಿ ಜನರು ಬಯಸಿದ ಕೈದಿಯನ್ನು ರಾಜ್ಯಪಾಲನು ಸೆರೆಮನೆಯಿಂದ ಬಿಡುಗಡೆ ಮಾಡುತ್ತಿದ್ದನು. ಆ ಸಮಯದಲ್ಲಿ ಬರಬ್ಬ ಎಂಬವನು ದಂಗೆಕೋರರೊಂದಿಗೆ ಸೆರೆಮನೆಯಲ್ಲಿದ್ದನು. ಈ ದಂಗೆಕೋರರು ಒಂದು ಗಲಭೆಯ ಸಮಯದಲ್ಲಿ ಕೊಲೆ ಮಾಡಿದ ಆಪಾದನೆಗೆ ಗುರಿಯಾಗಿದ್ದರು.

ಜನರು ಪಿಲಾತನ ಬಳಿಗೆ, ಎಂದಿನಂತೆ ತಮಗಾಗಿ ಒಬ್ಬ ಕೈದಿಯನ್ನು ಬಿಡುಗಡೆ ಮಾಡಬೇಕೆಂದು ಕೇಳಿದರು. ಪಿಲಾತನು ಜನರಿಗೆ, “ನಾನು ಯೆಹೂದ್ಯರ ರಾಜನನ್ನು ಬಿಡುಗಡೆ ಮಾಡಬೇಕೆಂದು ಬಯಸುತ್ತೀರಾ?” ಎಂದು ಕೇಳಿದನು. 10 ಮಹಾಯಾಜಕರು ಹೊಟ್ಟೆಕಿಚ್ಚಿನಿಂದ ಯೇಸುವನ್ನು ಬಂಧಿಸಿ ತನಗೆ ಒಪ್ಪಿಸಿದ್ದಾರೆಂಬುದು ಪಿಲಾತನಿಗೆ ತಿಳಿದಿತ್ತು. 11 ಆದರೆ ಯೇಸುವನ್ನು ಬಿಡುಗಡೆ ಮಾಡದೆ ಬರಬ್ಬನನ್ನು ಬಿಡುಗಡೆ ಮಾಡುವಂತೆ ಪಿಲಾತನನ್ನು ಕೇಳಿಕೊಳ್ಳಬೇಕೆಂದು ಮಹಾಯಾಜಕರು ಜನರನ್ನು ಪ್ರೇರೇಪಿಸಿದರು.

12 ಪಿಲಾತನು ಜನರಿಗೆ ಮತ್ತೆ “ಯೆಹೂದ್ಯರ ರಾಜನೆಂದು ನೀವು ಕರೆಯುವ ಈ ಮನುಷ್ಯನನ್ನು ನಾನೇನು ಮಾಡಲಿ?” ಎಂದು ಕೇಳಿದನು.

13 ಜನರು, “ಅವನನ್ನು ಶಿಲುಬೆಗೇರಿಸು!” ಎಂದು ಆರ್ಭಟಿಸಿದರು.

14 ಪಿಲಾತನು, “ಏಕೆ? ಅವನು ಯಾವ ಅಪರಾಧ ಮಾಡಿದ್ದಾನೆ?” ಎಂದು ಕೇಳಿದನು.

ಅದಕ್ಕೆ ಜನರು, “ಅವನನ್ನು ಶಿಲುಬೆಗೇರಿಸು!” ಎಂದು ಜೋರಾಗಿ ಆರ್ಭಟಿಸಿದರು.

15 ಪಿಲಾತನು ಜನರನ್ನು ಸಂತೋಷಪಡಿಸಲು ಬಯಸಿ ಅವರಿಗಾಗಿ ಬರಬ್ಬನನ್ನು ಬಿಡುಗಡೆ ಮಾಡಿದನು ಮತ್ತು ಕೊರಡೆಗಳಿಂದ ಹೊಡೆದು ಶಿಲುಬೆಗೇರಿಸುವುದಕ್ಕಾಗಿ ಯೇಸುವನ್ನು ಸೈನಿಕರಿಗೆ ಒಪ್ಪಿಸಿದನು.

16 ಪಿಲಾತನ ಸೈನಿಕರು ಯೇಸುವನ್ನು ರಾಜಭವನದ ಅಂಗಳದೊಳಕ್ಕೆ ಕೊಂಡೊಯ್ದು ಇತರ ಸೈನಿಕರನ್ನೆಲ್ಲಾ ಒಟ್ಟಿಗೆ ಕರೆದರು. 17 ಸೈನಿಕರು ಯೇಸುವಿನ ಮೇಲೆ ಕಡುಕೆಂಪಾದ ನಿಲುವಂಗಿಯನ್ನು ಹಾಕಿ ಮುಳ್ಳಿನ ಬಳ್ಳಿಗಳಿಂದ ಒಂದು ಕಿರೀಟ ಮಾಡಿ ಯೇಸುವಿನ ತಲೆಯ ಮೇಲೆ ಇಟ್ಟರು. 18 ನಂತರ ಅವರು ಯೇಸುವಿಗೆ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ!” ಎಂದರು. 19 ಸೈನಿಕರು ಆತನ ತಲೆಯ ಮೇಲೆ ಅನೇಕ ಸಾರಿ ಬೆತ್ತದಿಂದ ಹೊಡೆದು ಆತನ ಮೇಲೆ ಉಗುಳಿದರು. ನಂತರ ಅವರು ಯೇಸುವಿನ ಮುಂದೆ ಮೊಣಕಾಲೂರಿ, ಆತನನ್ನು ಆರಾಧಿಸುವಂತೆ ನಟಿಸುತ್ತಾ ಪರಿಹಾಸ್ಯ ಮಾಡಿದರು. 20 ಆ ಬಳಿಕ ಸೈನಿಕರು ಕಡುಕೆಂಪಾದ ನಿಲುವಂಗಿಯನ್ನು ತೆಗೆದುಬಿಟ್ಟು, ಆತನ ಬಟ್ಟೆಗಳನ್ನೇ ಮತ್ತೆ ತೊಡಿಸಿದರು. ನಂತರ ಅವರು ಯೇಸುವನ್ನು ಶಿಲುಬೆಗೇರಿಸಲು ಕರೆದುಕೊಂಡು ಹೋದರು.

ಶಿಲುಬೆಗೇರಿಸಲ್ಪಟ್ಟ ಯೇಸು

(ಮತ್ತಾಯ 27:32-44; ಲೂಕ 23:26-43; ಯೋಹಾನ 19:17-27)

21 ಆಗ ಸಿರೇನ್ ಪಟ್ಟಣದ ಸಿಮೋನ ಎಂಬವನು ಹೊಲದಿಂದ ಬರುತ್ತಿದ್ದನು. ಅವನು ಅಲೆಕ್ಸಾಂಡರ್ ಮತ್ತು ರೂಫಸ್ ಎಂಬವರ ತಂದೆ. ಸೈನಿಕರು ಯೇಸುವಿನ ಶಿಲುಬೆಯನ್ನು ಹೊರುವಂತೆ ಸಿಮೋನನನ್ನು ಬಲವಂತ ಮಾಡಿದರು. 22 ಅವರು ಯೇಸುವನ್ನು ಗೊಲ್ಗೊಥ ಎಂಬ ಸ್ಥಳಕ್ಕೆ ಕರೆದುಕೊಂಡು ಹೋದರು. (ಗೊಲ್ಗೊಥ ಎಂದರೆ “ಕಪಾಲ ಸ್ಥಳ.”) 23 ಗೊಲ್ಗೊಥದಲ್ಲಿ ಸೈನಿಕರು ಯೇಸುವಿಗೆ ರಕ್ತಬೋಳ ಮಿಶ್ರಿತವಾದ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಆದರೆ ಯೇಸು ಅದನ್ನು ಕುಡಿಯಲಿಲ್ಲ. 24 ಸೈನಿಕರು ಯೇಸುವನ್ನು ಶಿಲುಬೆಗೆ ನೇತುಹಾಕಿ, ಮೊಳೆಗಳನ್ನು ಜಡಿದರು. ನಂತರ ಸೈನಿಕರು ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ತಮ್ಮಲ್ಲಿ ಹಂಚಿಕೊಂಡರು.

25 ಅವರು ಯೇಸುವನ್ನು ಶಿಲುಬೆಗೇರಿಸಿದಾಗ ಬೆಳಿಗ್ಗೆ ಒಂಭತ್ತು ಗಂಟೆಯಾಗಿತ್ತು. 26 ಯೇಸುವಿನ ವಿರುದ್ಧ ಮಾಡಲಾದ ಆಪಾದನೆಯನ್ನು ಅಂದರೆ “ಯೆಹೂದ್ಯರ ರಾಜ” ಎಂದು ಶಿಲುಬೆಯ ಮೇಲೆ ಬರೆಯಲಾಗಿತ್ತು. 27 ಅಲ್ಲದೆ ಅವರು ಯೇಸುವಿನ ಪಕ್ಕದಲ್ಲಿ ಇಬ್ಬರು ಕಳ್ಳರನ್ನು ಶಿಲುಬೆಗೆ ಹಾಕಿದರು. ಅವರು ಒಬ್ಬ ಕಳ್ಳನನ್ನು ಯೇಸುವಿನ ಬಲಗಡೆಯಲ್ಲಿಯೂ ಇನ್ನೊಬ್ಬ ಕಳ್ಳನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದ್ದರು. 28 [a]

29 ಅಲ್ಲಿ ನಡೆದುಹೋಗುತ್ತಿದ್ದವರು ತಮ್ಮ ತಲೆಯಾಡಿಸುತ್ತಾ, “ನೀನು ದೇವಾಲಯವನ್ನು ಕೆಡವಿ, ಅದನ್ನು ಮತ್ತೆ ಮೂರು ದಿನಗಳಲ್ಲಿ ಕಟ್ಟುತ್ತೇನೆಂದು ಹೇಳಿದೆ. 30 ಈಗ ಶಿಲುಬೆಯಿಂದ ಕೆಳಗಿಳಿದು ಬಂದು ನಿನ್ನನ್ನು ರಕ್ಷಿಸಿಕೊ!” ಎಂದು ಅಪಹಾಸ್ಯ ಮಾಡಿದರು.

31 ಅಲ್ಲಿದ್ದ ಮಹಾಯಾಜಕರು ಹಾಗೂ ಧರ್ಮೋಪದೇಶಕರು ಸಹ, “ಅವನು ಇತರ ಜನರನ್ನು ರಕ್ಷಿಸಿದನು. ಆದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. 32 ಅವನು ನಿಜವಾಗಲೂ ಇಸ್ರೇಲರ ರಾಜನಾದ ಕ್ರಿಸ್ತನಾಗಿದ್ದರೆ, ಈಗ ಶಿಲುಬೆಯಿಂದ ಕೆಳಗಿಳಿದು ಬಂದು ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ. ಆಗ ನಾವು ಅವನನ್ನು ನಂಬುತ್ತೇವೆ” ಎಂದು ಅಪಹಾಸ್ಯ ಮಾಡಿದರು. ಯೇಸುವಿನ ಪಕ್ಕದ ಶಿಲುಬೆಗಳಿಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಆತನನ್ನು ಗೇಲಿಮಾಡಿದರು.

ಯೇಸುವಿನ ಮರಣ

(ಮತ್ತಾಯ 27:45-56; ಲೂಕ 23:44-49; ಯೋಹಾನ 19:28-30)

33 ಮಧ್ಯಾಹ್ನವಾದಾಗ, ಇಡೀ ದೇಶವೇ ಕತ್ತಲಾಯಿತು. ಈ ಕತ್ತಲೆಯು ಸಾಯಂಕಾಲ ಮೂರು ಗಂಟೆಯವರೆಗೆ ಇತ್ತು. 34 ಮೂರು ಗಂಟೆಗೆ, ಯೇಸು ದೊಡ್ಡ ಧ್ವನಿಯಿಂದ, “ಎಲೋಹಿ, ಎಲೋಹಿ, ಲಮಾ ಸಬಕ್ತಾನಿ?” ಎಂದು ಕೂಗಿದನು. “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟೆ?”(A) ಎಂಬುದೇ ಇದರರ್ಥ.

35 ಅಲ್ಲಿ ನಿಂತಿದ್ದ ಕೆಲವು ಜನರು ಇದನ್ನು ಕೇಳಿ, “ನೋಡಿ! ಆತನು ಎಲೀಯನನ್ನು ಕರೆಯುತ್ತಿದ್ದಾನೆ” ಎಂದರು.

36 ಅಲ್ಲಿದ್ದ ಒಬ್ಬನು ಓಡಿಹೋಗಿ, ಸ್ಪಂಜನ್ನು ತೆಗೆದುಕೊಂಡು ಅದನ್ನು ಹುಳಿರಸದಿಂದ ತುಂಬಿಸಿ, ಒಂದು ಕೋಲಿಗೆ ಕಟ್ಟಿ ಯೇಸುವಿಗೆ ಕುಡಿಯಲು ಕೊಡುತ್ತಾ, “ಎಲೀಯನು ಇವನನ್ನು ಶಿಲುಬೆಯಿಂದ ಕೆಳಗಿಳಿಸಲು ಬರಬಹುದೇನೋ ನಾವು ಕಾಯ್ದು ನೋಡಬೇಕು” ಎಂದನು.

37 ನಂತರ ಯೇಸು ಮಹಾಧ್ವನಿಯಿಂದ ಕೂಗಿ, ಪ್ರಾಣಬಿಟ್ಟನು.

38 ಆಗ ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೂ ಎರಡು ಭಾಗಗಳಾಗಿ ಹರಿದುಹೋಯಿತು. 39 ಶಿಲುಬೆಯ ಮುಂದೆ ನಿಂತಿದ್ದ ಸೈನ್ಯದ ಅಧಿಕಾರಿಯು ಯೇಸು ಪ್ರಾಣಬಿಟ್ಟಾಗ ನಡೆದದ್ದನ್ನು ನೋಡಿ, “ಈ ಮನುಷ್ಯನು ನಿಜವಾಗಿಯೂ ದೇವರ ಮಗನು” ಎಂದನು.

ಮಾರ್ಕ 15:40-47

40 ಕೆಲವು ಸ್ತ್ರೀಯರು ಶಿಲುಬೆಯಿಂದ ದೂರದಲ್ಲಿ ನಿಂತುಕೊಂಡು ನೋಡುತ್ತಾ ಇದ್ದರು. ಈ ಸ್ತ್ರೀಯರಲ್ಲಿ ಕೆಲವರೆಂದರೆ, ಮಗ್ದಲದ ಮರಿಯಳು, ಸಲೋಮೆ ಮತ್ತು ಯಾಕೋಬ ಯೋಸೆಯರ ತಾಯಿಯಾದ ಮರಿಯಳು (ಯಾಕೋಬನು ಅವಳ ಕಿರಿಯ ಮಗ.) 41 ಈ ಸ್ತ್ರೀಯರು ಗಲಿಲಾಯದಲ್ಲಿ ಯೇಸುವನ್ನು ಹಿಂಬಾಲಿಸಿ ಆತನ ಸೇವೆ ಮಾಡಿದವರು. ಯೇಸುವಿನೊಡನೆ ಜೆರುಸಲೇಮಿಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರು ಅಲ್ಲಿದ್ದರು.

ಯೇಸುವಿನ ಸಮಾಧಿ

(ಮತ್ತಾಯ 27:57-61; ಲೂಕ 23:50-56; ಯೋಹಾನ 19:38-42)

42 ಆಗ ಕತ್ತಲಾಗತೊಡಗಿತ್ತು. ಅಂದು ಸಿದ್ಧತೆಯ ದಿನವಾಗಿದ್ದರಿಂದ (ಅಂದರೆ ಸಬ್ಬತ್ತಿನ ಹಿಂದಿನ ದಿನ), 43 ಅರಿಮಥಾಯ ಊರಿನ ಯೋಸೇಫ ಎಂಬವನು ಪಿಲಾತನ ಬಳಿಗೆ ಹೋಗಿ, ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಧೈರ್ಯದಿಂದ ಕೇಳಿದನು. ಯೋಸೇಫನು ಯೆಹೂದ್ಯರ ಸಮಿತಿಯಲ್ಲಿ ಒಬ್ಬ ಮುಖ್ಯ ಸದಸ್ಯನಾಗಿದ್ದನು. ದೇವರರಾಜ್ಯ ಬರಲೆಂದು ಬಯಸಿದ ಜನರಲ್ಲಿ ಇವನೂ ಒಬ್ಬನಾಗಿದ್ದನು.

44 ಯೇಸು ಇಷ್ಟು ಬೇಗನೆ ಸತ್ತದ್ದನ್ನು ಕೇಳಿ ಪಿಲಾತನಿಗೆ ಆಶ್ಚರ್ಯವಾಯಿತು. ಯೇಸುವನ್ನು ಕಾವಲು ಕಾಯುತ್ತಿದ್ದ ಸೈನ್ಯಾಧಿಕಾರಿಯನ್ನು ಪಿಲಾತನು ಕರೆದು, “ಯೇಸು ಸತ್ತುಹೋದನೇ?” ಎಂದು ಕೇಳಿದನು. 45 ಆ ಅಧಿಕಾರಿಯು, “ಹೌದು” ಎಂದು ಹೇಳಿದ್ದರಿಂದ ಆತನ ದೇಹವನ್ನು ತೆಗೆದುಕೊಳ್ಳಲು ಪಿಲಾತನು ಯೋಸೇಫನಿಗೆ ಅಪ್ಪಣೆಕೊಟ್ಟನು.

46 ಯೋಸೇಫನು ನಾರುಬಟ್ಟೆಯನ್ನು ತೆಗೆದುಕೊಂಡು ಬಂದು, ಶಿಲುಬೆಯಿಂದ ದೇಹವನ್ನು ಇಳಿಸಿ, ಅದನ್ನು ಆ ಬಟ್ಟೆಯಿಂದ ಸುತ್ತಿದನು. ಅನಂತರ, ಬಂಡೆಯ ಸಮಾಧಿಯಲ್ಲಿ ಅದನ್ನಿರಿಸಿ ಆ ಸಮಾಧಿಯ ಬಾಗಿಲಿಗೆ ದೊಡ್ಡ ಬಂಡೆಯನ್ನು ಉರುಳಿಸಿ ಮುಚ್ಚಿದನು. 47 ಮಗ್ದಲದ ಮರಿಯಳು ಹಾಗೂ ಯೋಸೆಯನ ತಾಯಿಯಾದ ಮರಿಯಳು ಸಮಾಧಿ ಮಾಡಿದ ಸ್ಥಳವನ್ನು ಗುರುತಿಸಿಕೊಂಡರು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International