Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 135

135 ಯೆಹೋವನಿಗೆ ಸ್ತೋತ್ರವಾಗಲಿ!
    ಯೆಹೋವನ ಸೇವಕರೇ, ಆತನ ಹೆಸರನ್ನು ಸ್ತುತಿಸಿರಿ!
ಯೆಹೋವನ ಆಲಯದಲ್ಲಿ ನಿಂತಿರುವವರೇ, ಆತನನ್ನು ಸ್ತುತಿಸಿರಿ!
    ದೇವಾಲಯದ ಅಂಗಳದಲ್ಲಿ ನಿಂತಿರುವವರೇ, ಆತನನ್ನು ಸ್ತುತಿಸಿರಿ!
ಯೆಹೋವನಿಗೆ ಸ್ತೋತ್ರ ಮಾಡಿರಿ, ಯಾಕೆಂದರೆ ಆತನು ಒಳ್ಳೆಯವನು.
    ಆತನ ಹೆಸರನ್ನು ಸ್ತುತಿಸಿರಿ, ಅದು ಮನೋಹರವಾಗಿದೆ.

ಯೆಹೋವನು ಯಾಕೋಬನನ್ನು ಆರಿಸಿಕೊಂಡನು.
    ಇಸ್ರೇಲ್, ಆತನಿಗೆ ಸೇರಿದ್ದು.
ಯೆಹೋವನು ಮಹೋನ್ನತನೆಂದೂ
    ನಮ್ಮ ಒಡೆಯನು ಬೇರೆಲ್ಲಾ ದೇವರುಗಳಿಗಿಂತ ಮಹೋನ್ನತನೆಂದೂ ನಮಗೆ ಗೊತ್ತಿದೆ.
ಯೆಹೋವನು ಆಕಾಶದಲ್ಲಿಯೂ ಭೂಮಿಯಲ್ಲಿಯೂ
    ಸಮುದ್ರಗಳಲ್ಲಿಯೂ ಆಳವಾದ ಸಾಗರಗಳಲ್ಲಿಯೂ ತನ್ನ ಇಷ್ಟಾನುಸಾರವಾಗಿ ಮಾಡುವನು.
ಆತನು ಭೂಮಿಯ ಮೇಲೆಲ್ಲಾ ಮೋಡಗಳನ್ನು ಏಳಮಾಡುವನು;
    ಮಿಂಚನ್ನೂ ಮಳೆಯನ್ನೂ ಬರಮಾಡುವನು;
    ಗಾಳಿಯನ್ನು ಬೀಸಮಾಡುವನು.
ಆತನು ಈಜಿಪ್ಟಿನಲ್ಲಿ ಚೊಚ್ಚಲು ಪುರುಷರನ್ನೂ ಪ್ರಾಣಿಗಳನ್ನೂ ನಾಶಮಾಡಿದನು.
ಆತನು ಈಜಿಪ್ಟಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮತ್ತು ಮಹತ್ಕಾರ್ಯಗಳನ್ನು
    ಫರೋಹನಿಗೂ ಅವನ ಸೇವಕರುಗಳಿಗೂ ವಿರೋಧವಾಗಿ ಮಾಡಿದನು.
10 ಆತನು ಅನೇಕ ಜನಾಂಗಗಳನ್ನು ಸೋಲಿಸಿದನು.
    ಬಲಿಷ್ಠ ರಾಜರುಗಳನ್ನು ಕೊಂದುಹಾಕಿದನು.
11 ಆತನು ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದನು;
    ಬಾಷಾನಿನ ರಾಜನಾದ ಓಗನನ್ನೂ ಕಾನಾನ್ ದೇಶದ ಎಲ್ಲಾ ಜನಾಂಗಗಳನ್ನೂ ಸೋಲಿಸಿದನು.
12 ಆತನು ಅವರ ದೇಶವನ್ನು ತನ್ನ ಜನರಾದ ಇಸ್ರೇಲರಿಗೆ ಕೊಟ್ಟನು.

13 ಯೆಹೋವನೇ, ನೀನು ಸದಾಕಾಲ ಪ್ರಸಿದ್ಧನಾಗಿರುವೆ!
    ಯೆಹೋವನೇ, ಜನರು ನಿನ್ನನ್ನು ಸದಾಕಾಲ ನೆನಸಿಕೊಳ್ಳುವರು.
14 ಯೆಹೋವನು ಜನಾಂಗಗಳನ್ನು ದಂಡಿಸಿದನು.
    ತನ್ನ ಜನರಿಗಾದರೋ ಕರುಣೆಯುಳ್ಳವನಾಗಿದ್ದನು.
15 ಅನ್ಯಜನರ ದೇವರುಗಳು ಮನುಷ್ಯರಿಂದಲೇ ಮಾಡಲ್ಪಟ್ಟ
    ಬೆಳ್ಳಿಬಂಗಾರಗಳ ಪ್ರತಿಮೆಗಳಾಗಿದ್ದವು.
16 ಆ ಪ್ರತಿಮೆಗಳಿಗೆ ಬಾಯಿಗಳಿದ್ದರೂ ಮಾತಾಡಲಾಗಲಿಲ್ಲ;
    ಕಣ್ಣುಗಳಿದ್ದರೂ ನೋಡಲಾಗಲಿಲ್ಲ;
17 ಆ ಪ್ರತಿಮೆಗಳಿಗೆ ಕಿವಿಗಳಿದ್ದರೂ ಕೇಳಲಾಗಲಿಲ್ಲ;
    ಮೂಗುಗಳಿದ್ದರೂ ಮೂಸಿನೋಡಲಾಗಲಿಲ್ಲ;
18 ಆ ಪ್ರತಿಮೆಗಳನ್ನು ಮಾಡಿದವರೂ ಅವುಗಳಂತೆಯೇ ಆಗುವರು!
    ಯಾಕೆಂದರೆ, ಅವರು ಸಹಾಯಕ್ಕಾಗಿ ಆ ಪ್ರತಿಮೆಗಳನ್ನೇ ನಂಬಿಕೊಂಡಿದ್ದಾರೆ.

19 ಇಸ್ರೇಲಿನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ.
    ಆರೋನನ ಮನೆತನದವರೇ, ಯೆಹೋವನನ್ನು ಸ್ತುತಿಸಿರಿ.
20 ಲೇವಿಯ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ!
    ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ.
21 ಯೆಹೋವನಿಗೆ ಚೀಯೋನಿನಿಂದಲೂ
    ಆತನ ವಾಸಸ್ಥಾನವಾದ ಜೆರುಸಲೇಮಿನಿಂದಲೂ ಸ್ತೋತ್ರವಾಗಲಿ!

ಯೆಹೋವನಿಗೆ ಸ್ತೋತ್ರವಾಗಲಿ!

ದಾನಿಯೇಲ 3

ಬಂಗಾರದ ವಿಗ್ರಹ ಮತ್ತು ಉರಿಯುವ ಕುಲುಮೆ

ಅರಸನಾದ ನೆಬೂಕದ್ನೆಚ್ಚರನು ಒಂದು ಬಂಗಾರದ ವಿಗ್ರಹವನ್ನು ಮಾಡಿಸಿದ್ದನು. ಆ ವಿಗ್ರಹವು ಅರವತ್ತು ಮೊಳ ಎತ್ತರವಾಗಿತ್ತು. ಆರು ಮೊಳ ಅಗಲವಾಗಿತ್ತು. ಆ ವಿಗ್ರಹವನ್ನು ಬಾಬಿಲೋನ್ ಪ್ರಾಂತ್ಯದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು. ಅರಸನು ಆ ವಿಗ್ರಹದ ಪ್ರತಿಷ್ಠಾಪನೆಯ ಮಹೋತ್ಸವಕ್ಕೆ ಉಪರಾಜರನ್ನು, ನಾಯಕರನ್ನು, ದೇಶಾಧಿಪತಿಗಳನ್ನು, ಮಂತ್ರಿಗಳನ್ನು, ಕೋಶಾಧ್ಯಕ್ಷರನ್ನು, ನ್ಯಾಯಾಧಿಪತಿಗಳನ್ನು ಮತ್ತು ಉಳಿದೆಲ್ಲ ಅಧಿಕಾರಿಗಳನ್ನು ಕರೆಸಿದನು.

ಅವರೆಲ್ಲರು ಬಂದು ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ವಿಗ್ರಹದ ಎದುರಿಗೆ ನಿಂತುಕೊಂಡರು. ಆಗ ಸಾರುವವನು ದೊಡ್ಡ ಧ್ವನಿಯಲ್ಲಿ, “ವಿವಿಧ ಜನಾಂಗ, ಕುಲ, ಭಾಷೆಗಳ ಜನರೇ, ನಾನು ಹೇಳುವುದನ್ನು ಕೇಳಿರಿ. ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೇ ನೀವು ಅಡ್ಡಬೀಳಬೇಕು. ಇದು ರಾಜಾಜ್ಞೆ. ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಬಂಗಾರದ ವಿಗ್ರಹವನ್ನು ಪೂಜಿಸಬೇಕು. ಅರಸನಾದ ನೆಬೂಕದ್ನೆಚ್ಚರನು ಈ ವಿಗ್ರಹವನ್ನು ನಿಲ್ಲಿಸಿದ್ದಾನೆ. ಯಾರಾದರೂ ಈ ಬಂಗಾರದ ವಿಗ್ರಹಕ್ಕೆ ಅಡ್ಡಬೀಳದಿದ್ದರೆ ಮತ್ತು ಪೂಜಿಸದಿದ್ದರೆ ತಕ್ಷಣ ಅವರನ್ನು ಬೆಂಕಿಯ ಕೊಂಡಕ್ಕೆ ಎಸೆಯಲಾಗುವುದು” ಎಂದು ಸಾರಿದನು.

ಆದ್ದರಿಂದ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅವರು ಅಡ್ಡಬಿದ್ದು ಬಂಗಾರದ ವಿಗ್ರಹವನ್ನು ಪೂಜಿಸಿದರು. ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ವಿಗ್ರಹವನ್ನು ಎಲ್ಲ ಜನಾಂಗಗಳ, ಭಾಷೆಗಳ ಜನರು ಪೂಜಿಸಿದರು.

ಆಗ ಕೆಲವು ಜನ ಕಲ್ದೀಯರು ಅರಸನ ಬಳಿಗೆ ಬಂದು ಅವರು ಯೆಹೂದ್ಯರ ವಿರುದ್ಧ ಮಾತನಾಡತೊಡಗಿದರು. ಅರಸನಾದ ನೆಬೂಕದ್ನೆಚ್ಚರನಿಗೆ ಅವರು, “ಮಹಾರಾಜನೇ, ಚಿರಂಜೀವಿಯಾಗಿರು! 10 ಅರಸನೇ, ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಪ್ರತಿಯೊಬ್ಬನೂ ಅಡ್ಡಬಿದ್ದು ಬಂಗಾರದ ವಿಗ್ರಹವನ್ನು ಪೂಜಿಸಬೇಕು ಎಂದು ತಾವು ಆಜ್ಞೆ ಕೊಟ್ಟಿದ್ದೀರಿ. 11 ಯಾರಾದರೂ ಅಡ್ಡಬಿದ್ದು ಬಂಗಾರದ ವಿಗ್ರಹವನ್ನು ಪೂಜಿಸದಿದ್ದರೆ ಅವರನ್ನು ಉರಿಯುವ ಬೆಂಕಿಯ ಕೊಂಡದಲ್ಲಿ ಎಸೆಯಲಾಗುವುದೆಂದು ಕೂಡ ತಾವು ಹೇಳಿದ್ದೀರಿ. 12 ಅರಸನೇ, ಕೆಲವು ಜನ ಯೆಹೂದ್ಯರು ತಮ್ಮ ಆಜ್ಞೆಯನ್ನು ಪಾಲಿಸಲಿಲ್ಲ. ಆ ಯೆಹೂದ್ಯರನ್ನು ತಾವು ಬಾಬಿಲೋನ್ ಪ್ರಾಂತ್ಯದಲ್ಲಿ ಪ್ರಮುಖ ಅಧಿಕಾರಿಗಳನ್ನಾಗಿ ನೇಮಿಸಿದ್ದೀರಿ. ಅವರ ಹೆಸರುಗಳು, ಶದ್ರಕ್, ಮೇಶಕ್, ಅಬೇದ್‌ನೆಗೋ ಎಂದು. ಅವರು ನಿಮ್ಮ ದೇವರುಗಳನ್ನು ಪೂಜಿಸುವುದಿಲ್ಲ. ನೀವು ನಿಲ್ಲಿಸಿದ ಬಂಗಾರದ ವಿಗ್ರಹಕ್ಕೆ ಅಡ್ಡಬಿದ್ದು ಪೂಜಿಸುವದಿಲ್ಲ” ಎಂದು ಚಾಡಿ ಹೇಳಿದರು.

13 ನೆಬೂಕದ್ನೆಚ್ಚರನಿಗೆ ಬಹಳ ಕೋಪ ಬಂತು. ಅವನು ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಕರೆಸಿದನು. ಅವರನ್ನು ಅರಸನ ಬಳಿಗೆ ಕರೆದುತರಲಾಯಿತು. 14 ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಅಬೆದ್‌ನೆಗೋ, ನೀವು ನನ್ನ ದೇವರುಗಳನ್ನು ಪೂಜಿಸುವುದಿಲ್ಲವಂತೆ, ಇದು ನಿಜವೇ? ನಾನು ನಿಲ್ಲಿಸಿದ ಬಂಗಾರದ ವಿಗ್ರಹವನ್ನು ನೀವು ಅಡ್ಡಬಿದ್ದು ಪೂಜಿಸಲಿಲ್ಲವಂತೆ, ಇದು ನಿಜವೇ? 15 ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು.

16 ಇದನ್ನು ಕೇಳಿ ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವವರು ಅರಸನಿಗೆ, “ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ. 17 ನೀನು ನಮ್ಮನ್ನು ಉರಿಯುವ ಕೊಂಡದಲ್ಲಿ ಎಸೆದರೆ ನಾವು ಆರಾಧಿಸುವ ದೇವರು ನಮ್ಮನ್ನು ರಕ್ಷಿಸಬಲ್ಲನು. ಆತನು ಇಚ್ಛಿಸಿದರೆ ನಮ್ಮನ್ನು ನಿನ್ನ ಕೈಯಿಂದ ಬಿಡಿಸಬಲ್ಲನು. 18 ಅರಸನೇ, ಒಂದುವೇಳೆ ದೇವರು ನಮ್ಮನ್ನು ರಕ್ಷಿಸದಿದ್ದರೂ ನಾವು ನಿನ್ನ ದೇವರುಗಳನ್ನು ಪೂಜಿಸುವುದಿಲ್ಲ. ನೀನು ನಿಲ್ಲಿಸಿದ ಬಂಗಾರದ ವಿಗ್ರಹವನ್ನು ಪೂಜಿಸುವುದಿಲ್ಲ. ಇದು ನಿನಗೆ ತಿಳಿದಿರಲಿ” ಎಂದು ಖಂಡಿತವಾಗಿ ಹೇಳಿದರು.

19 ಆಗ ನೆಬೂಕದ್ನೆಚ್ಚರನಿಗೆ ಬಹಳ ಕೋಪ ಬಂತು. ಶದ್ರಕ್, ಮೇಶಕ್, ಅಬೇದ್‌ನೆಗೋ ಅವರ ವಿರುದ್ಧವಾಗಿ ಅವನ ಮುಖಭಾವವು ಕೆರಳಿತು. ಕುಲುಮೆಯನ್ನು ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು. 20 ಆಮೇಲೆ ನೆಬೂಕದ್ನೆಚ್ಚರನು, ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಬಂಧಿಸಿ ಉರಿಯುವ ಕೊಂಡದಲ್ಲಿ ಎಸೆಯಬೇಕೆಂದು ತನ್ನ ಸೈನ್ಯದಲ್ಲಿದ್ದ ಅತಿ ಬಲಶಾಲಿಗಳಾದ ಕೆಲವರಿಗೆ ಆಜ್ಞಾಪಿಸಿದನು.

21 ಅವರು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರನ್ನು ಚೆನ್ನಾಗಿ ಬಿಗಿದುಕಟ್ಟಿ ಉರಿಯುವ ಕೊಂಡದಲ್ಲಿ ಎಸೆದರು. ಅವರು ತಮ್ಮ ಶಲ್ಯ, ಇಜಾರು, ಟೊಪ್ಪಿಗೆ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದರು. 22 ಆಜ್ಞೆಯನ್ನು ಕೊಟ್ಟಾಗ ಅರಸನು ತುಂಬ ಕೋಪದಲ್ಲಿದ್ದನು. ಆದ್ದರಿಂದ ತಕ್ಷಣ ಕುಲುಮೆಯಲ್ಲಿ ಅತಿ ಹೆಚ್ಚು ಬೆಂಕಿಯನ್ನು ಉರಿಸಲಾಯಿತು. ಆ ಜ್ವಾಲೆ ಎಷ್ಟು ಭಯಂಕರವಾಗಿತ್ತೆಂದರೆ ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಕುಲುಮೆಯಲ್ಲಿ ಎಸೆಯಲು ಹೋದ ಶಕ್ತಿಶಾಲಿಗಳಾದ ಸೈನಿಕರೇ ಅದರ ತಾಪಕ್ಕೆ ಸತ್ತುಹೋದರು. 23 ಶದ್ರಕ್, ಮೇಶಕ್, ಅಬೇದ್‌ನೆಗೋ ಈ ಮೂವರು ಕಟ್ಟಲ್ಪಟ್ಟವರಾಗಿ ಧಗಧಗನೆ ಉರಿಯುವ ಬೆಂಕಿಯಲ್ಲಿ ಬಿದ್ದುಬಿಟ್ಟರು.

24 ಅರಸನಾದ ನೆಬೂಕದ್ನೆಚ್ಚರನು ಬೆಚ್ಚಿ ತಟ್ಟನೆ ಎದ್ದುನಿಂತನು. ಅವನು ಆಶ್ಚರ್ಯಚಕಿತನಾಗಿ ತನ್ನ ಮಂತ್ರಿಗಳನ್ನು, “ನಾವು ಕೇವಲ ಮೂರು ಜನರನ್ನು ಕಟ್ಟಿದೆವು, ಕೇವಲ ಮೂರು ಜನರನ್ನು ಬೆಂಕಿಯಲ್ಲಿ ಎಸೆದೆವು. ಹೌದಲ್ಲವೇ?” ಎಂದು ಕೇಳಿದನು.

ಅವನ ಮಂತ್ರಿಗಳು, “ಹೌದು, ಮಹಾರಾಜನೇ” ಎಂದು ಉತ್ತರಿಸಿದರು.

25 ಆಗ ಅರಸನು, “ನೋಡಿರಿ, ನಾಲ್ಕು ಜನರು ಬೆಂಕಿಯಲ್ಲಿ ತಿರುಗಾಡುತ್ತಿರುವುದು ನನಗೆ ಕಾಣುತ್ತಿದೆ. ಅವರು ಕಟ್ಟಲ್ಪಟ್ಟಿಲ್ಲ. ಅವರನ್ನು ಬೆಂಕಿಯು ಸುಟ್ಟಿಲ್ಲ. ನಾಲ್ಕನೆಯವನು ದೇವಕುಮಾರನಂತೆ ಕಾಣುತ್ತಾನೆ” ಎಂದು ಹೇಳಿದನು.

26 ಆಗ ನೆಬೂಕದ್ನೆಚ್ಚರನು ಉರಿಯುವ ಕೊಂಡದ ಬಾಯಿಯ ಬಳಿಗೆ ಹೋಗಿ, “ಮಹೋನ್ನತನಾದ ದೇವರ ಸೇವಕರಾದ ಶದ್ರಕ್, ಮೇಶಕ್, ಅಬೆದ್‌ನೆಗೋ ಎಂಬವರೇ ಬನ್ನಿ, ಹೊರಗೆ ಬನ್ನಿ” ಎಂದು ಕೂಗಿದನು.

ಶದ್ರಕ್, ಮೇಶಕ್, ಅಬೇದ್‌ನೆಗೋ ಈ ಮೂವರು ಬೆಂಕಿಯೊಳಗಿಂದ ಹೊರಗೆ ಬಂದರು. 27 ಅವರು ಹೊರಗೆ ಬಂದ ಮೇಲೆ ಉಪರಾಜರು, ನಾಯಕರು, ದೇಶಾಧಿಪತಿಗಳು, ಮಂತ್ರಿಗಳು ಮತ್ತು ಇತರರು ಅವರ ಸುತ್ತಲೂ ನೆರೆದರು. ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಬೆಂಕಿಯು ಸುಟ್ಟಿಲ್ಲ. ಅವರ ದೇಹಕ್ಕೆ ಬೆಂಕಿಯು ಮುಟ್ಟಿಲ್ಲ. ಅವರ ಕೂದಲಿಗೂ ವಸ್ತ್ರಗಳಿಗೂ ಬೆಂಕಿಯು ತಾಕಿಲ್ಲ. ಬೆಂಕಿಯ ಸಮೀಪಕ್ಕೆ ಹೋದ ವಾಸನೆಯೂ ಅವರಿಗೆ ಮುಟ್ಟಿಲ್ಲ ಎಂಬುದನ್ನು ಅವರು ತಿಳಿದುಕೊಂಡರು.

28 ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು. 29 ನಾನು ಈಗ ಸಕಲ ಜನಾಂಗ, ಕುಲ, ಭಾಷೆಗಳ ಜನರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್‌ನೆಗೋ ಇವರ ದೇವರ ವಿರುದ್ಧವಾಗಿ ಮಾತನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ. ಬೇರೆ ಯಾವ ದೇವರೂ ತನ್ನ ಭಕ್ತರನ್ನು ಈ ರೀತಿ ರಕ್ಷಿಸಲಾರನು” ಎಂದು ಹೇಳಿದನು. 30 ಬಳಿಕ ರಾಜನು ಶದ್ರಕ್, ಮೇಶಕ್ ಮತ್ತು ಅಬೇದ್‌ನೆಗೋ ಈ ಮೂವರಿಗೆ ಬಾಬಿಲೋನ್ ಸಂಸ್ಥಾನದಲ್ಲಿ ಹೆಚ್ಚು ಮಹತ್ವದ ಪದವಿಗಳನ್ನು ಕೊಟ್ಟನು.

1 ಯೋಹಾನ 2:3-11

ದೇವರ ಆಜ್ಞೆಗಳಿಗೆ ನಾವು ವಿಧೇಯರಾಗಿದ್ದರೆ, ದೇವರ ಬಗ್ಗೆ ನಿಜವಾಗಿಯೂ ತಿಳಿದಿದ್ದೇವೆಂಬುದು ಖಚಿತವಾಗುತ್ತದೆ. “ದೇವರನ್ನು ನಾನು ಬಲ್ಲೆನು” ಎಂದು ಹೇಳುವವನು ದೇವರ ಆಜ್ಞೆಗಳಿಗೆ ವಿಧೇಯನಾಗಿರದಿದ್ದರೆ, ಅವನು ಸುಳ್ಳುಗಾರನಾಗಿದ್ದಾನೆ. ಅವನಲ್ಲಿ ಸತ್ಯವಿಲ್ಲ. ಆದರೆ ಯಾವನಾದರೂ ದೇವರ ವಾಕ್ಯಕ್ಕೆ ವಿಧೇಯನಾಗಿದ್ದರೆ, ದೇವರ ಮೇಲೆ ಅವನಿಗಿರುವ ಪ್ರೀತಿಯು ಪರಿಪೂರ್ಣವಾಗಿದೆ. ನಾವು ದೇವರನ್ನು ಅನುಸರಿಸುತ್ತಿದ್ದೇವೆ ಎಂಬುದನ್ನು ಇದರಿಂದಲೇ ತಿಳಿದುಕೊಳ್ಳುತ್ತೇವೆ. ದೇವರಲ್ಲಿ ನೆಲೆಗೊಂಡಿದ್ದೇನೆ ಎಂದು ಹೇಳುವವನು, ಯೇಸು ಜೀವಿಸಿದಂತೆಯೇ ಜೀವಿಸಬೇಕು.

ಇತರರನ್ನು ಪ್ರೀತಿಸಿ

ನನ್ನ ಪ್ರಿಯ ಸ್ನೇಹೀತರೇ, ನಾನು ನಿಮಗೆ ಹೊಸ ಆಜ್ಞೆಯನ್ನು ಬರೆಯುತ್ತಿಲ್ಲ. ಮೊದಲಿಂದಲೂ ಈ ಆಜ್ಞೆಯು ನಿಮಗಿತ್ತು. ನೀವು ಈಗಾಗಲೇ ಕೇಳಿರುವ ವಾಕ್ಯವೇ ಈ ಆಜ್ಞೆಯಾಗಿದೆ. ಆದರೆ ಈ ಆಜ್ಞೆಯನ್ನು ನಾನು ನಿಮಗೆ ಹೊಸ ಆಜ್ಞೆಯೋ ಎಂಬಂತೆ ಬರೆಯುತ್ತಿದ್ದೇನೆ. ಈ ಆಜ್ಞೆಯು ಸತ್ಯವಾದದ್ದು. ಅದರ ಸತ್ಯತೆಯನ್ನು ನೀವು ಯೇಸುವಿನಲ್ಲಿಯೂ ನಿಮ್ಮಲ್ಲಿಯೂ ಕಾಣಬಹುದು. ಕತ್ತಲೆಯು ಕಳೆದುಹೋಗುತ್ತಿದೆ ಮತ್ತು ನಿಜವಾದ ಬೆಳಕು ಈಗಾಗಲೇ ಪ್ರಕಾಶಿಸುತ್ತಿದೆ.

“ನಾನು ಬೆಳಕಿನಲ್ಲಿದ್ದೇನೆ” ಎಂದು ಹೇಳುವವನು ತನ್ನ ಸಹೋದರನನ್ನು ದ್ವೇಷಿಸುತ್ತಿದ್ದರೆ, ಅವನಿನ್ನೂ ಅಂಧಕಾರದಲ್ಲಿದ್ದಾನೆ. 10 ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿದ್ದಾನೆ. ಬೇರೊಬ್ಬನನ್ನು ಪಾಪಕ್ಕೆ ನಡೆಸುವಂಥದ್ದೇನೂ ಅವನಲ್ಲಿರುವುದಿಲ್ಲ. 11 ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಅಂಧಕಾರದಲ್ಲಿದ್ದಾನೆ. ಅವನು ಅಂಧಕಾರದಲ್ಲಿಯೇ ಜೀವಿಸುತ್ತಾನೆ. ಅವನಿಗೆ ತಾನು ಎಲ್ಲಿಗೆ ಹೋಗುತ್ತಿದ್ದೇನೆ ಎಂಬುದೇ ತಿಳಿದಿಲ್ಲ. ಏಕೆಂದರೆ ಅಂಧಕಾರವು ಅವನನ್ನು ಕುರುಡನನ್ನಾಗಿ ಮಾಡಿದೆ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International