Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 135

135 ಯೆಹೋವನಿಗೆ ಸ್ತೋತ್ರವಾಗಲಿ!
    ಯೆಹೋವನ ಸೇವಕರೇ, ಆತನ ಹೆಸರನ್ನು ಸ್ತುತಿಸಿರಿ!
ಯೆಹೋವನ ಆಲಯದಲ್ಲಿ ನಿಂತಿರುವವರೇ, ಆತನನ್ನು ಸ್ತುತಿಸಿರಿ!
    ದೇವಾಲಯದ ಅಂಗಳದಲ್ಲಿ ನಿಂತಿರುವವರೇ, ಆತನನ್ನು ಸ್ತುತಿಸಿರಿ!
ಯೆಹೋವನಿಗೆ ಸ್ತೋತ್ರ ಮಾಡಿರಿ, ಯಾಕೆಂದರೆ ಆತನು ಒಳ್ಳೆಯವನು.
    ಆತನ ಹೆಸರನ್ನು ಸ್ತುತಿಸಿರಿ, ಅದು ಮನೋಹರವಾಗಿದೆ.

ಯೆಹೋವನು ಯಾಕೋಬನನ್ನು ಆರಿಸಿಕೊಂಡನು.
    ಇಸ್ರೇಲ್, ಆತನಿಗೆ ಸೇರಿದ್ದು.
ಯೆಹೋವನು ಮಹೋನ್ನತನೆಂದೂ
    ನಮ್ಮ ಒಡೆಯನು ಬೇರೆಲ್ಲಾ ದೇವರುಗಳಿಗಿಂತ ಮಹೋನ್ನತನೆಂದೂ ನಮಗೆ ಗೊತ್ತಿದೆ.
ಯೆಹೋವನು ಆಕಾಶದಲ್ಲಿಯೂ ಭೂಮಿಯಲ್ಲಿಯೂ
    ಸಮುದ್ರಗಳಲ್ಲಿಯೂ ಆಳವಾದ ಸಾಗರಗಳಲ್ಲಿಯೂ ತನ್ನ ಇಷ್ಟಾನುಸಾರವಾಗಿ ಮಾಡುವನು.
ಆತನು ಭೂಮಿಯ ಮೇಲೆಲ್ಲಾ ಮೋಡಗಳನ್ನು ಏಳಮಾಡುವನು;
    ಮಿಂಚನ್ನೂ ಮಳೆಯನ್ನೂ ಬರಮಾಡುವನು;
    ಗಾಳಿಯನ್ನು ಬೀಸಮಾಡುವನು.
ಆತನು ಈಜಿಪ್ಟಿನಲ್ಲಿ ಚೊಚ್ಚಲು ಪುರುಷರನ್ನೂ ಪ್ರಾಣಿಗಳನ್ನೂ ನಾಶಮಾಡಿದನು.
ಆತನು ಈಜಿಪ್ಟಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮತ್ತು ಮಹತ್ಕಾರ್ಯಗಳನ್ನು
    ಫರೋಹನಿಗೂ ಅವನ ಸೇವಕರುಗಳಿಗೂ ವಿರೋಧವಾಗಿ ಮಾಡಿದನು.
10 ಆತನು ಅನೇಕ ಜನಾಂಗಗಳನ್ನು ಸೋಲಿಸಿದನು.
    ಬಲಿಷ್ಠ ರಾಜರುಗಳನ್ನು ಕೊಂದುಹಾಕಿದನು.
11 ಆತನು ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದನು;
    ಬಾಷಾನಿನ ರಾಜನಾದ ಓಗನನ್ನೂ ಕಾನಾನ್ ದೇಶದ ಎಲ್ಲಾ ಜನಾಂಗಗಳನ್ನೂ ಸೋಲಿಸಿದನು.
12 ಆತನು ಅವರ ದೇಶವನ್ನು ತನ್ನ ಜನರಾದ ಇಸ್ರೇಲರಿಗೆ ಕೊಟ್ಟನು.

13 ಯೆಹೋವನೇ, ನೀನು ಸದಾಕಾಲ ಪ್ರಸಿದ್ಧನಾಗಿರುವೆ!
    ಯೆಹೋವನೇ, ಜನರು ನಿನ್ನನ್ನು ಸದಾಕಾಲ ನೆನಸಿಕೊಳ್ಳುವರು.
14 ಯೆಹೋವನು ಜನಾಂಗಗಳನ್ನು ದಂಡಿಸಿದನು.
    ತನ್ನ ಜನರಿಗಾದರೋ ಕರುಣೆಯುಳ್ಳವನಾಗಿದ್ದನು.
15 ಅನ್ಯಜನರ ದೇವರುಗಳು ಮನುಷ್ಯರಿಂದಲೇ ಮಾಡಲ್ಪಟ್ಟ
    ಬೆಳ್ಳಿಬಂಗಾರಗಳ ಪ್ರತಿಮೆಗಳಾಗಿದ್ದವು.
16 ಆ ಪ್ರತಿಮೆಗಳಿಗೆ ಬಾಯಿಗಳಿದ್ದರೂ ಮಾತಾಡಲಾಗಲಿಲ್ಲ;
    ಕಣ್ಣುಗಳಿದ್ದರೂ ನೋಡಲಾಗಲಿಲ್ಲ;
17 ಆ ಪ್ರತಿಮೆಗಳಿಗೆ ಕಿವಿಗಳಿದ್ದರೂ ಕೇಳಲಾಗಲಿಲ್ಲ;
    ಮೂಗುಗಳಿದ್ದರೂ ಮೂಸಿನೋಡಲಾಗಲಿಲ್ಲ;
18 ಆ ಪ್ರತಿಮೆಗಳನ್ನು ಮಾಡಿದವರೂ ಅವುಗಳಂತೆಯೇ ಆಗುವರು!
    ಯಾಕೆಂದರೆ, ಅವರು ಸಹಾಯಕ್ಕಾಗಿ ಆ ಪ್ರತಿಮೆಗಳನ್ನೇ ನಂಬಿಕೊಂಡಿದ್ದಾರೆ.

19 ಇಸ್ರೇಲಿನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ.
    ಆರೋನನ ಮನೆತನದವರೇ, ಯೆಹೋವನನ್ನು ಸ್ತುತಿಸಿರಿ.
20 ಲೇವಿಯ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ!
    ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ.
21 ಯೆಹೋವನಿಗೆ ಚೀಯೋನಿನಿಂದಲೂ
    ಆತನ ವಾಸಸ್ಥಾನವಾದ ಜೆರುಸಲೇಮಿನಿಂದಲೂ ಸ್ತೋತ್ರವಾಗಲಿ!

ಯೆಹೋವನಿಗೆ ಸ್ತೋತ್ರವಾಗಲಿ!

ಯೆಶಾಯ 26:1-15

ದೇವರಿಗೆ ಸ್ತೋತ್ರ ಗೀತೆ

26 ಆ ಸಮಯದಲ್ಲಿ ಜನರು ಈ ಹಾಡನ್ನು ಯೆಹೂದದಲ್ಲಿ ಹಾಡುವರು:

ಯೆಹೋವನು ನಮಗೆ ರಕ್ಷಣೆಯನ್ನು ಕೊಡುತ್ತಾನೆ.
    ನಮಗೆ ಬಲವಾದ ಪಟ್ಟಣವಿದೆ. ಅದಕ್ಕೆ ಬಲವಾದ ಗೋಡೆಗಳೂ ಕೋಟೆಗಳೂ ಇವೆ.
ದ್ವಾರಗಳನ್ನು ತೆರೆಯಿರಿ. ಒಳ್ಳೆಯ ಜನರು ಅದರಲ್ಲಿ ಪ್ರವೇಶಿಸುವರು.
    ಅವರು ದೇವರ ನಿಯಮಗಳನ್ನು ಅನುಸರಿಸುತ್ತಾರೆ.

ಯೆಹೋವನೇ, ನಿನ್ನಲ್ಲಿ ಭರವಸವಿಟ್ಟವರಿಗೆ
    ನೀನು ನಿಜವಾದ ಸಮಾಧಾನವನ್ನು ಅನುಗ್ರಹಿಸುವೆ.

ಆದ್ದರಿಂದ ಯೆಹೋವನ ಮೇಲೆ ಯಾವಾಗಲೂ ಭರವಸವಿಡಿರಿ.
    ಯಾಕೆಂದರೆ ನಿಮಗೆ ದೇವರಾದ ಯೆಹೋವನಲ್ಲಿ ಸುರಕ್ಷತೆಯ ಸ್ಥಳವಿದೆ.
ಆದರೆ ಯೆಹೋವನು ಗರ್ವದ ನಗರವನ್ನು ನಾಶಮಾಡುವನು.
    ಅಲ್ಲಿ ವಾಸಿಸುವವರನ್ನು ಆತನು ಶಿಕ್ಷಿಸುತ್ತಾನೆ.
ಯೆಹೋವನು ಆ ಉನ್ನತವಾದ ನಗರವನ್ನು ಧೂಳಿಗೆ ಹಾಕಿಬಿಡುವನು.
    ಅದು ಕಾಲುತುಳಿತಕ್ಕೆ ಈಡಾಗಿದೆ.
ಆಗ ದೀನರೂ ಬಡಜನರೂ ಆ ಅವಶೇಷಗಳ ಮೇಲೆ ನಡೆಯುವರು.

ಪ್ರಾಮಾಣಿಕತೆಯು ಒಳ್ಳೆಯವರ ಜೀವನ ಶೈಲಿ.
    ಅವರು ನೇರವಾದ ಮತ್ತು ಸತ್ಯವಾದ ಮಾರ್ಗವನ್ನು ಅನುಸರಿಸುವರು.
ಯೆಹೋವನೇ, ನೀನು ಆ ಮಾರ್ಗವನ್ನು ಅನುಸರಿಸಲು
    ಸುಲಭವಾಗುವಂತೆ ಮಾಡುವೆ.
ಆದರೆ ಯೆಹೋವನೇ, ನಾವು ನಿನ್ನ ನ್ಯಾಯವಿಚಾರಣೆಯ ರೀತಿಗಾಗಿ ಕಾಯುತ್ತಿದ್ದೇವೆ.
    ನಮ್ಮ ಆತ್ಮಗಳು ನಿನ್ನನ್ನೂ ನಿನ್ನ ನಾಮವನ್ನೂ ನೆನಪು ಮಾಡುತ್ತವೆ.
ನಮ್ಮ ಆತ್ಮವು ನಿನ್ನೊಂದಿಗೆ ರಾತ್ರಿಯಲ್ಲಿರಲು ಆಶಿಸುತ್ತದೆ.
    ನಮ್ಮೊಳಗಿರುವ ಆತ್ಮವು ನಿನ್ನ ಸಹವಾಸವನ್ನು ಬಯಸುತ್ತದೆ.
ಹೊಸ ದಿವಸಗಳ ಮುಂಜಾನೆಯಲ್ಲಿ ನಿನ್ನೊಂದಿಗಿರಲು ಆಶಿಸುತ್ತದೆ.
    ನಿನ್ನ ನ್ಯಾಯವು ಈ ಭೂಮಿಗೆ ಬಂದಾಗ ಜನರು ಜೀವನದ ಸತ್ಯಮಾರ್ಗವನ್ನು ಅರಿಯುವರು.
10 ದುಷ್ಟರಿಗೆ ದಯೆತೋರಿಸಿದರೆ
    ಅವರು ಸುಕಾರ್ಯಗಳನ್ನು ಮಾಡಲು ಕಲಿಯುವುದಿಲ್ಲ.
ದುಷ್ಟರು ಯಥಾರ್ಥರ ಲೋಕದಲ್ಲಿ ಜೀವಿಸಿದರೂ ಅವರು ದುಷ್ಕೃತ್ಯಗಳನ್ನೇ ಮಾಡುವರು.
    ಆ ದುಷ್ಟರು ಯೆಹೋವನ ಮಹತ್ವವನ್ನು ಎಂದೂ ಗಮನಿಸಲಾರರು.
11 ಆದರೆ ದೇವರೇ, ನೀನು ಅವರನ್ನು ಶಿಕ್ಷಿಸಿದರೆ
    ಅವರು ಅದನ್ನು ನೋಡುವರು.
ನಿನ್ನ ಜನರ ಮೇಲೆ ನಿನಗಿರುವ ಗಾಢಪ್ರೀತಿಯನ್ನು ಆ ದುಷ್ಟಜನರು ನೋಡಲಿ.
    ಆಗ ಅವರು ಅವಮಾನ ಹೊಂದುವರು.
    ನಿನ್ನ ಶತ್ರುಗಳು ತಮ್ಮ ದುಷ್ಟತನದ ಬೆಂಕಿಯಲ್ಲಿಯೇ ಸುಟ್ಟುಹೋಗುವರು.
12 ಯೆಹೋವನೇ, ನೀನು ಮಾಡಬಯಸಿದ ಎಲ್ಲವುಗಳಲ್ಲಿ ಯಶಸ್ವಿಯಾಗಿರುವೆ.
    ಆದ್ದರಿಂದ ನಮಗೆ ಶಾಂತಿಯನ್ನು ಅನುಗ್ರಹಿಸು.

ದೇವರು ತನ್ನ ಜನರಿಗೆ ಹೊಸ ಜೀವವನ್ನು ಕೊಡುವನು

13 ಯೆಹೋವನೇ, ನೀನೇ ನಮ್ಮ ದೇವರು. ಆದರೆ ಹಿಂದಿನ ಕಾಲದಲ್ಲಿ ನಾವು ಇತರ ಪ್ರಭುಗಳನ್ನು ಅನುಸರಿಸಿದೆವು.
ನಾವು ನಮ್ಮ ಒಡೆಯರುಗಳಿಗೆ ಸೇರಿದ್ದೆವು.
    ಆದರೆ ಈಗ ಜನರು ಒಂದೇ ಹೆಸರನ್ನು, ಅಂದರೆ ನಿನ್ನ ಹೆಸರನ್ನೇ ನೆನಪುಮಾಡಲಿ.
14 ಇತರ ದೇವರುಗಳಿಗೆ ಜೀವವಿಲ್ಲ.
    ಪ್ರೇತಗಳು ಸತ್ತವರೊಳಗಿಂದ ಏಳುವದಿಲ್ಲ.
ನೀನು ಅವುಗಳನ್ನು ನಾಶಮಾಡಲು ತೀರ್ಮಾನಿಸಿದೆ.
    ಅದರ ಬಗ್ಗೆ ನಮಗೆ ನೆನಪು ಹುಟ್ಟಿಸುವ ಎಲ್ಲಾ ವಿಚಾರಗಳನ್ನು ನೀನು ನಾಶಮಾಡಿದೆ.
15 ನೀನು ಪ್ರೀತಿಸುವ ಜನಾಂಗಕ್ಕೆ ನೀನು ಸಹಾಯ ಮಾಡಿದೆ.
    ಬೇರೆ ಜನಾಂಗದವರು ಅವರನ್ನು ಸೋಲಿಸದಂತೆ ಮಾಡಿದೆ.

ಮಾರ್ಕ 12:18-27

ಯೇಸುವನ್ನು ವಂಚಿಸಲು ಸದ್ದುಕಾಯರ ಪ್ರಯತ್ನ

(ಮತ್ತಾಯ 22:23-33; ಲೂಕ 20:27-40)

18 ನಂತರ ಸದ್ದುಕಾಯರಲ್ಲಿ (ಸದ್ದುಕಾಯರು ಪುನರುತ್ಥಾನವಿಲ್ಲವೆಂದು ನಂಬುತ್ತಾರೆ.) ಕೆಲವರು ಯೇಸುವಿನ ಬಳಿಗೆ ಬಂದು, 19 “ಉಪದೇಶಕನೇ, ವಿವಾಹಿತನೊಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ಸಹೋದರನು ಮದುವೆ ಮಾಡಿಕೊಂಡು ಸತ್ತುಹೋದ ಸಹೋದರನಿಗಾಗಿ ಸಂತಾನ ಪಡೆಯಬೇಕೆಂದು ಮೋಶೆಯು ಬರೆದಿದ್ದಾನೆ.[a] 20 ಏಳು ಜನ ಸಹೋದರರಿದ್ದರು. ಮೊದಲನೆಯ ಸಹೋದರನು ಮದುವೆ ಮಾಡಿಕೊಂಡು ಮಕ್ಕಳಿಲ್ಲದೆ ಸತ್ತುಹೋದನು. 21 ಆದ್ದರಿಂದ ಎರಡನೆಯ ಸಹೋದರನು ಆಕೆಯನ್ನು ಮದುವೆಯಾದನು. ಆದರೆ ಅವನೂ ಮಕ್ಕಳಿಲ್ಲದೆ ಸತ್ತುಹೋದನು. ಮೂರನೆಯ ಸಹೋದರನಿಗೂ ಹೀಗೆಯೇ ಆಯಿತು. 22 ಏಳು ಮಂದಿ ಸಹೋದರರೂ ಆಕೆಯನ್ನು ಮದುವೆಯಾಗಿ ಆಕೆಯಲ್ಲಿ ಮಕ್ಕಳಿಲ್ಲದೆ ಸತ್ತುಹೋದರು. ಕೊನೆಗೆ ಆಕೆಯೂ ಸತ್ತುಹೋದಳು. 23 ಹೀಗಿರಲು ಜನರು ಪುನರುತ್ಥಾನ ಹೊಂದಿದಾಗ ಆಕೆಯು ಯಾರ ಹೆಂಡತಿಯಾಗುವಳು?” ಎಂದರು.

24 ಯೇಸು, “ನೀವು ಇಂಥಾ ತಪ್ಪನ್ನು ಮಾಡುವುದೇಕೆ? ಪವಿತ್ರಗ್ರಂಥವಾಗಲಿ, ದೇವರ ಶಕ್ತಿಯಾಗಲಿ ನಿಮಗೆ ಗೊತ್ತಿಲ್ಲ. 25 ಸತ್ತ ಜನರು ಪುನರುತ್ಥಾನ ಹೊಂದಿದಾಗ ಸ್ತ್ರೀಯರು ಮತ್ತು ಪುರುಷರು ಮದುವೆ ಮಾಡಿಕೊಳ್ಳುವುದೂ ಇಲ್ಲ. ತಮ್ಮ ಮಕ್ಕಳಿಗೂ ಮದುವೆ ಮಾಡಿಸುವುದೂ ಇಲ್ಲ. ಅವರೆಲ್ಲರೂ ಪರಲೋಕದಲ್ಲಿರುವ ದೇವದೂತರಂತಿರುತ್ತಾರೆ. 26 ಸತ್ತಜನರ ಪುನರುತ್ಥಾನದ ಬಗ್ಗೆ ದೇವರು ಹೇಳಿರುವುದನ್ನು ನೀವು ಖಂಡಿತವಾಗಿ ಓದಿದ್ದೀರಿ. ದೇವರು ಮೋಶೆಗೆ, ‘ನಾನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’(A) ಎಂದು ಹೇಳಿದ್ದನ್ನು ಮೋಶೆಯ ಪುಸ್ತಕದಲ್ಲಿರುವ ಉರಿಯುವ ಪೊದೆಯ ಅಧ್ಯಾಯದಲ್ಲಿ ಕಾಣಬಹುದು. 27 ದೇವರು ತನ್ನನ್ನು ಅಬ್ರಹಾಮನ, ಇಸಾಕನ, ಯಾಕೋಬನ ದೇವರು ಎಂದು ಹೇಳಿಕೊಂಡಿರುವುದರಿಂದ ಇವರು ನಿಜವಾಗಿಯೂ ಸತ್ತಿಲ್ಲ. ಏಕೆಂದರೆ, ದೇವರು ಜೀವಿತರಿಗೆ ದೇವರಾಗಿದ್ದಾನೆಯೇ ಹೊರತು ಸತ್ತವರಿಗೆ ಅಲ್ಲ.”[b]

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International