Revised Common Lectionary (Semicontinuous)
ಸಮುವೇಲನಿಗೆ ದೇವರ ಕರೆ
3 ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದು ಯೆಹೋವನ ಸೇವೆಮಾಡುತ್ತಿದ್ದನು. ಆ ಕಾಲದಲ್ಲಿ ಯೆಹೋವನು ಜನರೊಂದಿಗೆ ಪದೇಪದೇ ಮಾತಾಡುತ್ತಿರಲಿಲ್ಲ; ದರ್ಶನಗಳ ಸಂಖ್ಯೆಯೂ ಕಡಿಮೆಯಾಗಿತ್ತು.
2 ಏಲಿಯ ಕಣ್ಣುಗಳು ಮಂಜಾಗಿ ಕುರುಡನೆನ್ನುವಷ್ಟು ಕಾಣುತ್ತಿರಲಿಲ್ಲ. ಒಂದು ರಾತ್ರಿ ಏಲಿಯು ತನ್ನ ಸ್ಥಳದಲ್ಲಿ ಮಲಗಿದ್ದನು. 3 ಸಮುವೇಲನು ಯೆಹೋವನ ಪವಿತ್ರ ಆಲಯದಲ್ಲಿ ಹಾಸಿಗೆಯ ಮೇಲೆ ಮಲಗಿದ್ದನು. ಯೆಹೋವನ ಪವಿತ್ರ ಪೆಟ್ಟಿಗೆಯು ಅಲ್ಲಿಯೇ ಇತ್ತು. ಯೆಹೋವನ ದೀಪವು ಇನ್ನೂ ಬೆಳಗುತ್ತಿತ್ತು. 4 ಯೆಹೋವನು ಸಮುವೇಲನನ್ನು ಕರೆದನು. ಸಮುವೇಲನು, “ಇಗೋ, ಇಲ್ಲಿದ್ದೇನೆ” ಎಂದನು. 5 ಏಲಿಯು ಕರೆದಿರಬಹುದೆಂದು ಸಮುವೇಲನು ನೆನೆಸಿದನು. ಆದ್ದರಿಂದ ಸಮುವೇಲನು ಏಲಿಯ ಬಳಿಗೆ ಓಡಿಹೋಗಿ, “ಇಗೋ, ಇಲ್ಲಿದ್ದೇನೆ. ನೀನು ನನ್ನನ್ನು ಕರೆದೆಯಲ್ಲಾ” ಅಂದನು.
ಆದರೆ ಏಲಿಯು, “ನಾನು ನಿನ್ನನ್ನು ಕರೆಯಲಿಲ್ಲ. ಹೋಗಿ ಮಲಗಿಕೋ” ಅಂದನು.
ಸಮುವೇಲನು ಹೋಗಿ ಮಲಗಿಕೊಂಡನು. 6 ನಂತರ ಯೆಹೋವನು, “ಸಮುವೇಲನೇ” ಎಂದು ಮತ್ತೆ ಕರೆದನು. ಸಮುವೇಲನು ಮತ್ತೆ ಏಲಿಯ ಬಳಿಗೆ ಓಡಿಹೋಗಿ, “ಇಗೋ, ಇಲ್ಲಿದ್ದೇನೆ. ನೀನು ನನ್ನನ್ನು ಕರೆದೆಯಲ್ಲಾ” ಎಂದು ಹೇಳಿದನು.
ಏಲಿಯು, “ನಾನು ನಿನ್ನನ್ನು ಕರೆಯಲಿಲ್ಲ, ಹೋಗಿ ಮಲಗಿಕೋ” ಅಂದನು.
7 ಆ ವರೆಗೂ ಸಮುವೇಲನಿಗೆ ಯೆಹೋವನ ಅನುಭವವಿರಲಿಲ್ಲ; ಯೆಹೋವನು ಅವನೊಂದಿಗೆ ನೇರವಾಗಿ ಮಾತಾಡಿರಲಿಲ್ಲ.[a]
8 ಯೆಹೋವನು ಸಮುವೇಲನನ್ನು ಮೂರನೆಯ ಸಲ ಕರೆದನು. ಸಮುವೇಲನು ಮತ್ತೆ ಮೇಲೆದ್ದು ಏಲಿಯನ ಬಳಿಗೆ ಹೋಗಿ, “ಇಗೋ, ಇಲ್ಲಿದ್ದೇನೆ. ನೀನು ನನ್ನನ್ನು ಕರೆದೆಯಲ್ಲಾ” ಅಂದನು.
ಬಾಲಕನನ್ನು ಕರೆಯುತ್ತಿರುವವನು ಯೆಹೋವನೆಂಬುದು ಏಲಿಗೆ ಆಗ ಅರ್ಥವಾಯಿತು. 9 ಏಲಿಯು ಸಮುವೇಲನಿಗೆ, “ಹೋಗಿ ಮಲಗಿಕೋ. ನಿನ್ನನ್ನು ಮತ್ತೆ ಕರೆದರೆ, ‘ಅಪ್ಪಣೆಯಾಗಲಿ, ಯೆಹೋವನೇ ನಾನು ನಿನ್ನ ಸೇವಕ, ಕೇಳಿಸಿಕೊಳ್ಳುತ್ತಿದ್ದೇನೆ’ ಎಂದು ಉತ್ತರಿಸು” ಎಂಬುದಾಗಿ ಹೇಳಿದನು.
ಸಮುವೇಲನು ತನ್ನ ಸ್ಥಳದಲ್ಲಿ ಮಲಗಲು ಹೋದನು. 10 ಯೆಹೋವನು ಅಲ್ಲಿ ಪ್ರತ್ಯಕ್ಷನಾಗಿ ನಿಂತು ಮೊದಲು ಕರೆದಂತೆಯೇ “ಸಮುವೇಲನೇ, ಸಮುವೇಲನೇ” ಎಂದು ಕರೆದನು.
ಸಮುವೇಲನು, “ಅಪ್ಪಣೆಯಾಗಲಿ, ನಾನು ನಿನ್ನ ಸೇವಕ, ಕೇಳಿಸಿಕೊಳ್ಳುತ್ತಿದ್ದೇನೆ” ಎಂದನು.
11 ಯೆಹೋವನು ಸಮುವೇಲನಿಗೆ, “ನಾನು ಇಸ್ರೇಲಿನಲ್ಲಿ ಒಂದು ಕಾರ್ಯವನ್ನು ಶೀಘ್ರದಲ್ಲೇ ಮಾಡುವೆನು. ಈ ಕಾರ್ಯದ ಬಗ್ಗೆ ಕೇಳಿದ ಜನರು ಗಾಬರಿಗೊಳ್ಳುವರು. 12 ನಾನು ಇದನ್ನು ಏಲಿ ಮತ್ತು ಅವನ ಕುಟುಂಬದ ವಿರುದ್ಧ ಸಂಪೂರ್ಣವಾಗಿ ಮಾಡುತ್ತೇನೆ. 13 ಏಲಿಯ ಕುಟುಂಬವನ್ನು ನಿತ್ಯದಂಡನೆಗೆ ಗುರಿಪಡಿಸುತ್ತೇನೆಂದು ನಾನು ಏಲಿಗೆ ಹೇಳಿರುವೆನು. ಏಲಿಯ ಮಕ್ಕಳು ನನಗೆ ವಿರೋಧವಾಗಿ ಮಾತಾಡಿದ್ದರಿಂದ ಮತ್ತು ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ನಾನು ಇದನ್ನು ಮಾಡುತ್ತೇನೆ. ಅಲ್ಲದೆ ಅವರನ್ನು ಹತೋಟಿಯಲ್ಲಿಡಲು ಏಲಿಗೆ ಸಾಧ್ಯವಾಗಲಿಲ್ಲ. 14 ಆದಕಾರಣವೇ, ಏಲಿಯ ಕುಟುಂಬವು ಅರ್ಪಿಸುವ ಯಜ್ಞವಾಗಲಿ ಧಾನ್ಯನೈವೇದ್ಯವಾಗಲಿ ಅವರ ಪಾಪಗಳಿಗೆ ಪ್ರಾಯಶ್ಚಿತ್ತವಾಗುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.
15 ಸಮುವೇಲನು ನಿದ್ರಿಸಿದನು. ಅವನು ಮುಂಜಾನೆ ಮೇಲೆದ್ದು ಯೆಹೋವನ ಆಲಯದ ಬಾಗಿಲುಗಳನ್ನು ತೆರೆದನು. ಸಮುವೇಲನು ತಾನು ಕಂಡ ದರ್ಶನದ ಬಗ್ಗೆ ಏಲಿಗೆ ತಿಳಿಸಲು ಭಯಪಟ್ಟನು.
16 ಆದರೆ ಏಲಿಯು, “ಸಮುವೇಲನೇ, ನನ್ನ ಮಗನೇ” ಎಂದು ಕರೆದನು.
ಸಮುವೇಲನು, “ಇಗೋ, ಇದ್ದೇನೆ” ಅಂದನು.
17 ಏಲಿಯು, “ಯೆಹೋವನು ನಿನಗೆ ಹೇಳಿದ್ದೇನು? ನನ್ನೊಂದಿಗೆ ಅದನ್ನು ಮುಚ್ಚಿಡಬೇಡ. ಆತನು ನಿನ್ನೊಂದಿಗೆ ಆಡಿದ ಮಾತುಗಳಲ್ಲಿ ಏನನ್ನಾದರೂ ಮುಚ್ಚಿಟ್ಟರೆ ಆತನು ನಿನ್ನನ್ನು ಶಿಕ್ಷಿಸುತ್ತಾನೆ” ಎಂದು ತಿಳಿಸಿದನು.
18 ಸಮುವೇಲನು ಏನನ್ನೂ ಮುಚ್ಚಿಡದೆ, ಎಲ್ಲವನ್ನೂ ಏಲಿಗೆ ತಿಳಿಸಿದನು.
ಏಲಿಯು, “ಆತನು ಯೆಹೋವ. ಆತನು ತನಗೆ ಸರಿಕಾಣುವದನ್ನೇ ಮಾಡಲಿ” ಎಂದು ಹೇಳಿದನು.
19 ಯೆಹೋವನು ಸಮುವೇಲನ ಸಂಗಡವಿದ್ದನು; ಸಮುವೇಲನು ಬೆಳೆದು ದೊಡ್ಡವನಾದನು; ಸಮುವೇಲನ ಯಾವ ಸಂದೇಶವೂ ಸುಳ್ಳಾಗದಂತೆ ಯೆಹೋವನು ನೋಡಿಕೊಂಡನು. 20 ಸಮುವೇಲನು ಯೆಹೋವನ ನಿಜಪ್ರವಾದಿಯೆಂಬುದು ದಾನಿನಿಂದ ಬೇರ್ಷೆಬದವರೆಗಿದ್ದ ಎಲ್ಲಾ ಇಸ್ರೇಲರಿಗೂ ಆಗ ತಿಳಿದು ಬಂದಿತು.
ಸ್ತುತಿಗೀತೆ. ರಚನೆಗಾರ: ದಾವೀದ.
139 ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ
ಸಂಪೂರ್ಣವಾಗಿ ತಿಳಿದುಕೊಂಡಿರುವೆ.
2 ನಾನು ಕುಳಿತುಕೊಳ್ಳುವುದೂ ಎದ್ದೇಳುವುದೂ ನಿನಗೆ ತಿಳಿದಿದೆ.
ನೀನು ಬಹುದೂರದಿಂದಲೇ ನನ್ನ ಆಲೋಚನೆಗಳನ್ನು ತಿಳಿದಿರುವೆ.
3 ನಾನು ಎಲ್ಲಿಗೇ ಹೋಗುತ್ತಿದ್ದರೂ ಎಲ್ಲೇ ಮಲಗಿದ್ದರೂ ನಿನಗೆ ತಿಳಿದಿರುತ್ತದೆ.
ನನ್ನ ಕಾರ್ಯಗಳೆಲ್ಲಾ ನಿನಗೆ ತಿಳಿದಿದೆ.
4 ಯೆಹೋವನೇ, ನನ್ನ ಬಾಯಿಂದ ಮಾತುಗಳು ಹೊರಡುವುದಕ್ಕಿಂತ ಮೊದಲೇ
ನಾನು ಹೇಳಬೇಕೆಂದಿರುವುದು ನಿನಗೆ ತಿಳಿದಿದೆ.
5 ನೀನು ನನ್ನ ಸುತ್ತಲೂ ಆವರಿಸಿರುವೆ;
ನಿನ್ನ ಹಸ್ತವನ್ನು ನನ್ನ ಮೇಲೆ ಇಟ್ಟಿರುವೆ.
6 ನನ್ನ ವಿಷಯವಾಗಿ ನನಗಿಂತಲೂ ನಿನಗೆ ಎಷ್ಟೋ ಹೆಚ್ಚಾಗಿ ತಿಳಿದಿರುವುದು ನನ್ನನ್ನು ಆಶ್ಚರ್ಯಗೊಳಿಸಿದೆ,
ಅದನ್ನು ಗ್ರಹಿಸಿಕೊಳ್ಳುವುದಕ್ಕೂ ನನ್ನಿಂದಾಗದು.
13 ನನ್ನ ಅಂತರೀಂದ್ರಿಯಗಳನ್ನು ಸೃಷ್ಟಿಮಾಡಿದವನೂ ನೀನೇ.
ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನೇ.
14 ನಿನ್ನ ಎಲ್ಲಾ ಅದ್ಭುತಕಾರ್ಯಗಳಿಗಾಗಿ ನಿನಗೆ ಕೃತಜ್ಞತಾಸ್ತುತಿ ಮಾಡುವೆನು.
ನಿನ್ನ ಕಾರ್ಯಗಳು ಅದ್ಭುತಕರವಾಗಿವೆಯೆಂದು ನಾನು ಗ್ರಹಿಸಿಕೊಂಡಿರುವೆ.
15 ನನ್ನ ವಿಷಯವೆಲ್ಲಾ ನಿನಗೆ ಗೊತ್ತಿದೆ.
ತಾಯಿಗರ್ಭದಲ್ಲಿ ನನ್ನ ದೇಹ ರೂಪಗೊಳ್ಳುತ್ತಿದ್ದಾಗ ನನ್ನ ಎಲುಬುಗಳು ಬೆಳೆಯುವುದನ್ನೂ ನೀನು ನೋಡಿದೆ.
16 ನನ್ನ ದೇಹದ ಅಂಗಾಂಗಗಳು ಬೆಳೆಯುವುದನ್ನೂ ನೀನು ಗಮನಿಸಿದೆ.
ನನ್ನ ಆಯುಷ್ಕಾಲದ ಮೊದಲನೆ ದಿನ ಆರಂಭವಾಗುವುದಕ್ಕಿಂತ ಮೊದಲೇ ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.
17 ದೇವರೇ, ನಿನ್ನ ಆಲೋಚನೆಗಳು ನನಗೆ ಎಷ್ಟೋ ಮುಖ್ಯವಾಗಿವೆ.
ಅವು ಅಸಂಖ್ಯಾತವಾಗಿವೆ.
18 ಅವುಗಳನ್ನು ಎಣಿಸುವುದಾದರೆ, ಸಮುದ್ರದ ಮರಳಿಗಿಂತಲೂ ಹೆಚ್ಚಾಗಿವೆ.
ನಾನು ಎಚ್ಚರಗೊಂಡಾಗ ಮುಂಚಿನಂತೆ ನಿನ್ನೊಂದಿಗೇ ಇರುವೆನು.
5 ನಾವು ನಮ್ಮ ಬಗ್ಗೆ ಬೋಧಿಸುವುದಿಲ್ಲ. ಆದರೆ ಯೇಸು ಕ್ರಿಸ್ತನೇ ಪ್ರಭುವೆಂದು ಮತ್ತು ಯೇಸುವಿಗೋಸ್ಕರ ನಿಮ್ಮ ಸೇವಕರಾಗಿದ್ದೇವೆಂದು ಬೋಧಿಸುತ್ತೇವೆ. 6 “ಬೆಳಕು ಕತ್ತಲೆಯೊಳಗಿಂದ ಪ್ರಕಾಶಿಸಲಿ!” ಎಂದು ದೇವರು ಒಮ್ಮೆ ಹೇಳಿದ್ದಾನೆ. ಈ ದೇವರೇ ನಮ್ಮ ಹೃದಯಗಳಲ್ಲಿ ತನ್ನ ಬೆಳಕನ್ನು ಬೆಳಗಿಸಿದ್ದಾನೆ. ಕ್ರಿಸ್ತನ ಮುಖದಲ್ಲಿರುವ ದೇವರ ಮಹಿಮೆಯನ್ನು ನಮಗೆ ತಿಳಿಯಪಡಿಸುವುದರ ಮೂಲಕ ಆತನು ನಮಗೆ ಬೆಳಕನ್ನು ಕೊಟ್ಟಿದ್ದಾನೆ.
7 ನಮಗೆ ಈ ನಿಕ್ಷೇಪವು ದೇವರಿಂದ ದೊರೆತಿದೆ. ನಾವಾದರೋ ನಿಕ್ಷೇಪವನ್ನು ತುಂಬಿ ಕೊಂಡಿರುವ ಕೇವಲ ಮಡಕೆಗಳಂತಿದ್ದೇವೆ. ಈ ಮಹಾಶಕ್ತಿಯು ಬಂದದ್ದು ದೇವರಿಂದಲೇ ಹೊರತು ನಮ್ಮಿಂದಲ್ಲವೆಂಬುದನ್ನು ಇದು ತೋರಿಸುತ್ತದೆ. 8 ನಮ್ಮ ಸುತ್ತಮುತ್ತಲೆಲ್ಲಾ ಇಕ್ಕಟ್ಟುಗಳಿವೆ, ಆದರೆ ಸೋತುಹೋಗಿಲ್ಲ. ಅನೇಕಸಲ, ಏನು ಮಾಡಬೇಕೋ ನಮಗೆ ತಿಳಿಯದು, ಆದರೂ ನಾವು ಧೈರ್ಯಗೆಡುವುದಿಲ್ಲ. 9 ನಾವು ಹಿಂಸೆಗೆ ಗುರಿಯಾದೆವು, ಆದರೆ ದೇವರು ನಮ್ಮನ್ನು ತೊರೆದುಬಿಡಲಿಲ್ಲ. ಕೆಲವು ಸಲ ನಮಗೆ ನೋವಾಯಿತು, ಆದರೂ ನಾಶವಾಗಲಿಲ್ಲ. 10 ನಮ್ಮ ದೇಹಗಳಲ್ಲಿ ಯೇಸುವಿನ ಜೀವವು ತೋರಿಬರಲೆಂದು ಆತನ ಮರಣಾವಸ್ಥೆಯನ್ನು ಅನುಭವಿಸುತ್ತಿದ್ದೇವೆ. 11 ನಾವು ಜೀವಂತವಾಗಿದ್ದರೂ ಯೇಸುವಿಗೋಸ್ಕರ ಯಾವಾಗಲೂ ಮರಣದ ಅಪಾಯದಲ್ಲಿದ್ದೇವೆ. ಸತ್ತುಹೋಗುವ ನಮ್ಮ ದೇಹಗಳಲ್ಲಿ ಆತನ ಜೀವವು ಕಾಣಬರಲೆಂದು ಇದು ನಮಗೆ ಸಂಭವಿಸುತ್ತದೆ. 12 ಆದ್ದರಿಂದ ಮರಣವು ನಮ್ಮಲ್ಲಿ ಕಾರ್ಯಮಾಡುತ್ತಿದೆ, ಆದರೆ ನಿಮ್ಮಲ್ಲಿ ಜೀವವು ಕಾರ್ಯಮಾಡುತ್ತಿದೆ.
ಕೆಲವು ಯೆಹೂದ್ಯರು ಯೇಸುವಿನ ಕುರಿತು ಮಾಡಿದ ಟೀಕೆ
(ಮತ್ತಾಯ 12:1-8; ಲೂಕ 6:1-5)
23 ಸಬ್ಬತ್ದಿನದಂದು, ಯೇಸು ತನ್ನ ಶಿಷ್ಯರೊಂದಿಗೆ ಕೆಲವು ಹೊಲಗಳ ಮೂಲಕ ಹಾದುಹೋಗುತ್ತಿದ್ದನು. ಶಿಷ್ಯರು ತಿನ್ನಲು ಕೆಲವು ಕಾಳಿನ ತೆನೆಗಳನ್ನು ಕಿತ್ತುಕೊಂಡರು. 24 ಫರಿಸಾಯರು ಇದನ್ನು ಕಂಡು ಯೇಸುವಿಗೆ, “ನಿನ್ನ ಶಿಷ್ಯರು ಹೀಗೇಕೆ ಮಾಡುತ್ತಾರೆ? ಸಬ್ಬತ್ದಿನದಂದು ಹೀಗೆ ಮಾಡುವುದು ಯೆಹೊದ್ಯರ ನಿಯಮಗಳಿಗೆ ವಿರುದ್ಧವಲ್ಲವೆ?” ಎಂದು ಕೇಳಿದರು.
25 ಯೇಸು ಅವರಿಗೆ, “ದಾವೀದನು ಮತ್ತು ಅವನ ಜನರು ಹಸಿದು ಆಹಾರವನ್ನು ಬಯಸಿದಾಗ ಅವನೇನು ಮಾಡಿದನೆಂಬುದನ್ನು ನೀವು ಓದಿದ್ದೀರಿ.[a] 26 ಅದು ಮಹಾಯಾಜಕನಾದ ಅಬಿಯಾತರನ ಕಾಲ. ದಾವೀದನು ದೇವಾಲಯಕ್ಕೆ ಹೋಗಿ, ದೇವರಿಗೆ ಅರ್ಪಿಸಿದ ರೊಟ್ಟಿಯನ್ನು ತಿಂದನು. ಯಾಜಕರು ಮಾತ್ರ ಆ ರೊಟ್ಟಿಯನ್ನು ತಿನ್ನತಕ್ಕದ್ದೆಂದು ಮೋಶೆಯ ಧರ್ಮಶಾಸ್ತ್ರ ಹೇಳುತ್ತದೆ. ದಾವೀದನು ತನ್ನೊಂದಿಗಿದ್ದ ಜನರಿಗೂ ಆ ರೊಟ್ಟಿಯನ್ನು ನೀಡಿದನು” ಎಂದು ಉತ್ತರಕೊಟ್ಟನು.
27 ನಂತರ ಯೇಸು ಫರಿಸಾಯರಿಗೆ, “ಸಬ್ಬತ್ದಿನವನ್ನು ನಿರ್ಮಾಣ ಮಾಡಿರುವುದು ಜನರ ಸಹಾಯಕ್ಕಾಗಿ. ಆದರೆ ಜನರನ್ನು ಸೃಷ್ಟಿಸಿರುವುದು ಸಬ್ಬತ್ದಿನಕ್ಕೆ ಅವರು ಅಧೀನರಾಗಿರಲಿ ಎಂದಲ್ಲ. 28 ಆದ್ದರಿಂದ ಮನುಷ್ಯಕುಮಾರನು ಸಬ್ಬತ್ದಿನಕ್ಕೂ ಉಳಿದೆಲ್ಲ ದಿನಗಳಿಗೂ ಪ್ರಭುವಾಗಿದ್ದಾನೆ” ಎಂದು ಹೇಳಿದನು.
ಕೈಬತ್ತಿದವನಿಗೆ ಸ್ವಸ್ಥತೆ
(ಮತ್ತಾಯ 12:9-14; ಲೂಕ 6:6-11)
3 ಮತ್ತೊಂದು ದಿನದಲ್ಲಿ, ಯೇಸು ಸಭಾಮಂದಿರದೊಳಕ್ಕೆ ಹೋದನು. ಅಲ್ಲಿ ಕೈಬತ್ತಿದ್ದ ಒಬ್ಬ ಮನುಷ್ಯನಿದ್ದನು. 2 ಅಲ್ಲಿದ್ದ ಕೆಲವು ಯೆಹೂದ್ಯರು, ಯೇಸುವನ್ನು ದೂಷಿಸುವುದಕ್ಕಾಗಿ ಆತನಲ್ಲಿ ಏನಾದರೂ ತಪ್ಪನ್ನು ಕಂಡುಹಿಡಿಯಲು ಎದುರು ನೋಡುತ್ತಿದ್ದರು. ಸಬ್ಬತ್ದಿನದಂದು ಆ ಮನುಷ್ಯನನ್ನು ಯೇಸು ಗುಣಪಡಿಸಬಹುದೆಂದು ಅವರು ಆತನ ಸಮೀಪದಲ್ಲಿಯೇ ಇದ್ದರು. 3 ಯೇಸು ಕೈಬತ್ತಿದ್ದ ಆ ಮನುಷ್ಯನಿಗೆ, “ಎದ್ದುನಿಲ್ಲು, ಜನರೆಲ್ಲರೂ ನಿನ್ನನ್ನು ನೋಡಲಿ” ಎಂದು ಹೇಳಿದನು.
4 ನಂತರ ಯೇಸು ಜನರಿಗೆ, “ಸಬ್ಬತ್ದಿನದಂದು ಯಾವ ಕಾರ್ಯಗಳನ್ನು ಮಾಡಬೇಕು? ಒಳ್ಳೆಯ ಕಾರ್ಯವನ್ನೇ? ಕೆಟ್ಟಕಾರ್ಯವನ್ನೇ? ಒಂದು ಜೀವವನ್ನು ರಕ್ಷಿಸಬೇಕೇ? ಅಥವಾ ನಾಶಪಡಿಸಬೇಕೇ?” ಎಂದು ಕೇಳಿದನು. ಆಗ ಅವರು ಏನೂ ಉತ್ತರ ಕೊಡಲಾರದೆ ಮೌನವಾಗಿದ್ದರು.
5 ಯೇಸು ಕೋಪಗೊಂಡು ಜನರ ಕಡೆಗೆ ನೋಡಿದನು. ಅವರ ಮೊಂಡುತನವನ್ನು ಕಂಡು ಆತನಿಗೆ ದುಃಖವಾಯಿತು. ಯೇಸು ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಿದನು. ಅವನು ತನ್ನ ಕೈಯನ್ನು ಯೇಸುವಿನತ್ತ ಚಾಚಿದನು. ಕೂಡಲೇ ಅವನ ಕೈ ವಾಸಿಯಾಯಿತು. 6 ಆಗ ಫರಿಸಾಯರು ಹೊರಗೆ ಹೋಗಿ, ಹೆರೋದ್ಯರನ್ನು ಕೂಡಿಕೊಂಡು ಯೇಸುವನ್ನು ಯಾವ ರೀತಿ ಕೊಲ್ಲಬೇಕೆಂದು ಆಲೋಚಿಸಿದರು.
Kannada Holy Bible: Easy-to-Read Version. All rights reserved. © 1997 Bible League International