Revised Common Lectionary (Semicontinuous)
ದಾವೀದನ ಕೀರ್ತನೆ.
108 ದೇವರೇ, ನನ್ನ ಹೃದಯವು ಸ್ಥಿರವಾಗಿದೆ;
ನಾನು ಹೃದಯಪೂರ್ವಕವಾಗಿ ವಾದ್ಯ ನುಡಿಸುತ್ತಾ ಹಾಡುವೆನು.
2 ಹಾರ್ಪ್ವಾದ್ಯಗಳೇ, ಲೈರ್ವಾದ್ಯಗಳೇ,
ನಾವು ಸೂರ್ಯನನ್ನು ಎಚ್ಚರಗೊಳಿಸೋಣ!
3 ಯೆಹೋವನೇ, ಜನಾಂಗಗಳಲ್ಲಿಯೂ
ವಿದೇಶಿಯರಲ್ಲಿಯೂ ನಿನ್ನನ್ನು ಕೊಂಡಾಡುವೆನು.
4 ಯಾಕೆಂದರೆ ನಿನ್ನ ಪ್ರೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ;
ನಿನ್ನ ನಂಬಿಗಸ್ತಿಕೆಯು ಮೋಡಗಳಿಗಿಂತಲೂ ಎತ್ತರವಾಗಿದೆ.
5 ದೇವರೇ, ಪರಲೋಕದಲ್ಲಿ ನಿನ್ನ ಪ್ರಭಾವವು ಮೆರೆಯಲಿ.
ನಿನ್ನ ಮಹಿಮೆಯು ಭೂಮಂಡಲವನ್ನೆಲ್ಲಾ ಆವರಿಸಿಕೊಳ್ಳಲಿ.
6 ನಿನ್ನ ಸ್ನೇಹಿತರಾದ ನಮ್ಮ ಪ್ರಾರ್ಥನೆಗೆ ಕಿವಿಗೊಟ್ಟು ನಮ್ಮನ್ನು ರಕ್ಷಿಸು.
ನಿನ್ನ ಬಲಗೈಯಿಂದ ನಮ್ಮನ್ನು ಕಾಪಾಡು.
7 ದೇವರು ತನ್ನ ಆಲಯದೊಳಗಿಂದ ಹೀಗೆಂದನು:
“ನಾನು ಯುದ್ಧದಲ್ಲಿ ಗೆದ್ದು ಜಯಘೋಷ ಮಾಡುವೆನು;
ಶೆಕೆಮ್ ಪ್ರದೇಶವನ್ನೂ ಸುಕ್ಕೋತ್ ಬಯಲನ್ನೂ ನನ್ನ ಜನರಿಗೆ ಕೊಡುವೆನು.
8 ಗಿಲ್ಯಾದ್ ಪ್ರಾಂತವೂ ಮನಸ್ಸೆ ಪ್ರಾಂತವೂ ನನ್ನದಾಗಿರುತ್ತವೆ.
ಎಫ್ರಾಯೀಮ್ ನನ್ನ ಶಿರಸ್ತ್ರಾಣವಾಗಿರುತ್ತದೆ.
ಯೆಹೂದವು ನನ್ನ ರಾಜದಂಡವಾಗಿರುತ್ತದೆ.
9 ಮೋವಾಬ್ ನನ್ನ ಪಾದತೊಳೆಯುವ ಬೋಗುಣಿಯಂತಿರುತ್ತದೆ.
ಎದೋಮ್ ನನ್ನ ಪಾದರಕ್ಷೆಗಳನ್ನು ಹೊತ್ತುಕೊಂಡು ಹೋಗುವ ಗುಲಾಮನಾಗಿರುತ್ತದೆ.
ಫಿಲಿಷ್ಟಿಯರನ್ನು ಸೋಲಿಸಿದ ಮೇಲೆ ನಾನು ಜಯಘೋಷ ಮಾಡುವೆನು.”
10 ವೈರಿಗಳ ಆಶ್ರಯದುರ್ಗಕ್ಕೆ ನನ್ನನ್ನು ನಡೆಸುವವರು ಯಾರು?
ಎದೋಮನ್ನು ಸೋಲಿಸಲು ನನಗೆ ಸಹಾಯ ಮಾಡುವವರು ಯಾರು?
11 ದೇವರೇ, ನೀನು ನಮ್ಮನ್ನು ತ್ಯಜಿಸಿ,
ನಮ್ಮ ಸೈನ್ಯದೊಡನೆ ಹೋಗದಿರುವುದು ನಿಜವೇ?
12 ನಮ್ಮ ಶತ್ರುವನ್ನು ಸೋಲಿಸಲು ದಯವಿಟ್ಟು ನಮಗೆ ಸಹಾಯಮಾಡು.
ಜನರು ನಮಗೆ ಸಹಾಯಮಾಡಲಾರರು!
13 ದೇವರು ಮಾತ್ರ ನಮ್ಮನ್ನು ಬಲಪಡಿಸಬಲ್ಲನು.
ಆತನು ಮಾತ್ರ ನಮ್ಮ ಶತ್ರುಗಳನ್ನು ಸೋಲಿಸಬಲ್ಲನು.
ಇಸ್ರೇಲರು ತಮಗೊಬ್ಬ ರಾಜನನ್ನು ಕೇಳಿಕೊಳ್ಳುವರು
8 ಸಮುವೇಲನು ಮುದುಕನಾದ ಮೇಲೆ ತನ್ನ ಮಕ್ಕಳನ್ನು ಇಸ್ರೇಲರಿಗೆ ನ್ಯಾಯಾಧೀಶರನ್ನಾಗಿ ಮಾಡಿದನು. 2 ಅವನ ಮೊದಲನೆಯ ಮಗ ಯೋವೇಲ್, ಎರಡನೆಯ ಮಗ ಅಬೀಯ. ಯೋವೇಲನು ಮತ್ತು ಅಬೀಯನು ಬೇರ್ಷೆಬದಲ್ಲಿ ನ್ಯಾಯಾಧೀಶರಾಗಿದ್ದರು. 3 ಆದರೆ ಸಮುವೇಲನ ಮಕ್ಕಳು ಅವನಂತೆ ನಡೆದುಕೊಳ್ಳಲಿಲ್ಲ. ಅವರು ಲಂಚವನ್ನು ಪಡೆದು ನ್ಯಾಯಾಲಯದಲ್ಲಿ ಅನ್ಯಾಯದ ತೀರ್ಪುಗಳು ಮಾಡುತ್ತಿದ್ದರು ಮತ್ತು ಜನರನ್ನು ವಂಚಿಸುತ್ತಿದ್ದರು. 4 ಆದ್ದರಿಂದ ಇಸ್ರೇಲರ ಹಿರಿಯರೆಲ್ಲ ಒಟ್ಟುಗೂಡಿದರು. ಅವರು ಸಮುವೇಲನನ್ನು ಭೇಟಿಮಾಡಲು ರಾಮಕ್ಕೆ ಹೋದರು. 5 ಹಿರಿಯರು ಸಮುವೇಲನಿಗೆ, “ನೀನು ಮುದುಕನಾಗಿರುವೆ ಮತ್ತು ನಿನ್ನ ಮಕ್ಕಳು ಒಳ್ಳೆಯ ಮಾರ್ಗದಲ್ಲಿ ನಡೆಯುತ್ತಿಲ್ಲ, ಅವರು ನಿನ್ನಂತಲ್ಲ. ಈಗ, ಬೇರೆ ದೇಶಗಳಂತೆ ಒಬ್ಬ ರಾಜನನ್ನು ನಮ್ಮನ್ನಾಳಲು ನೇಮಿಸು” ಎಂದು ಹೇಳಿದರು.
6 ಹೀಗೆ ಹಿರಿಯರೆಲ್ಲರು ತಮ್ಮನ್ನು ಮುನ್ನಡೆಸಲು ರಾಜನೊಬ್ಬನು ಬೇಕೆಂದರು. ಸಮುವೇಲನಿಗೆ ಇದು ಸರಿಯೆನಿಸಲಿಲ್ಲ. ಆದ್ದರಿಂದ ಅವನು ಯೆಹೋವನಲ್ಲಿ ಪ್ರಾರ್ಥಿಸಿದನು. 7 ಯೆಹೋವನು ಅವನಿಗೆ, “ಜನರು ನಿನಗೆ ಹೇಳಿದಂತೆ ಮಾಡು ಅವರು ನಿನ್ನನ್ನು ತಿರಸ್ಕರಿಸಲಿಲ್ಲ. ಆದರೆ ನನ್ನನ್ನು ತಿರಸ್ಕರಿಸಿದ್ದಾರೆ! ಅವರಿಗೆ ನಾನು ರಾಜನಾಗಿರುವುದು ಬೇಕಿಲ್ಲ! 8 ಅವರು ಯಾವಾಗಲೂ ಮಾಡಿದಂತೆ ಈಗಲೂ ಮಾಡುತ್ತಿದ್ದಾರೆ. ಅವರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆನು. ಆದರೆ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳ ಸೇವೆ ಮಾಡಿದರು. ಅವರು ನಿನಗೂ ಹೀಗೆಯೇ ಮಾಡುತ್ತಿದ್ದಾರೆ. 9 ಆದ್ದರಿಂದ ಜನರ ಮಾತಿಗೆ ಕಿವಿಗೊಟ್ಟು ಅವರು ಹೇಳಿದಂತೆ ಮಾಡು. ಆದರೆ ಅವರಿಗೆ ಎಚ್ಚರಿಕೆಕೊಡು. ರಾಜನಾದವನು ಜನರಿಗೆ ಏನು ಮಾಡುತ್ತಾನೆ ಎಂಬುದನ್ನು ಅವರಿಗೆ ತಿಳಿಸಿ ಹೇಳು! ರಾಜನಾದವನು ಜನರನ್ನು ಹೇಗೆ ಆಳುತ್ತಾನೆಂಬುದನ್ನೂ ಅವರಿಗೆ ತಿಳಿಸಿಕೊಡು” ಎಂದು ಹೇಳಿದನು.
10 ಆ ಜನರು ರಾಜನೊಬ್ಬನನ್ನು ಕೇಳಿಕೊಂಡರು. ಆದ್ದರಿಂದ ಸಮುವೇಲನು ಅವರಿಗೆ ಯೆಹೋವನು ಹೇಳಿದ್ದನ್ನೆಲ್ಲ ತಿಳಿಸಿದನು. 11 ಸಮುವೇಲನು, “ನೀವು ನಿಮ್ಮನ್ನು ಆಳಲು ರಾಜನು ಬೇಕೆಂದರೆ, ಅವನು ಬಲವಂತದಿಂದ ಹೀಗೆಲ್ಲ ಮಾಡುತ್ತಾನೆ: ಅವನು ನಿಮ್ಮ ಗಂಡುಮಕ್ಕಳನ್ನು ತೆಗೆದುಕೊಂಡು ತನ್ನ ಸೇವಕರನ್ನಾಗಿಯೂ ಸೈನಿಕರನ್ನಾಗಿಯೂ ಮಾಡಿಕೊಳ್ಳುವನು. ಅವರು ಅವನ ರಥಸೈನ್ಯದಲ್ಲಿಯೂ ಅಶ್ವಸೈನ್ಯದಲ್ಲಿಯೂ ಸೇರಿ ಹೋರಾಡಬೇಕಾಗುತ್ತದೆ. ನಿನ್ನ ಮಕ್ಕಳು ರಾಜನ ರಥದ ಮುಂದೆ ಓಡುವ ಬೆಂಗಾವಲಿನವರಾಗಬೇಕಾಗುತ್ತದೆ.
12 “ರಾಜನು ನಿಮ್ಮ ಮಕ್ಕಳನ್ನು ಯೋಧರನ್ನಾಗಿ ಮಾಡಿಕೊಳ್ಳುವನು. ಅವರಲ್ಲಿ ಕೆಲವರು ಒಂದು ಸಾವಿರ ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. ಇನ್ನು ಕೆಲವರು ಐವತ್ತು ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು.
“ತನ್ನ ಭೂಮಿಯನ್ನು ಉಳಲು ಮತ್ತು ಪೈರನ್ನು ಕೊಯ್ಯಲು ರಾಜನು ನಿಮ್ಮ ಮಕ್ಕಳನ್ನು ತೆಗೆದುಕೊಳ್ಳುವನು; ಯುದ್ಧದ ಆಯುಧಗಳನ್ನು ತಯಾರಿಸಲೂ ತನ್ನ ರಥಕ್ಕೆ ಬೇಕಾದ ಸಾಮಾಗ್ರಿಗಳನ್ನು ತಯಾರಿಸಲೂ ಅವನು ಅವರನ್ನು ಬಳಸಿಕೊಳ್ಳುವನು.
13 “ರಾಜನು ನಿಮ್ಮ ಹೆಣ್ಣುಮಕ್ಕಳನ್ನು ತೆಗೆದುಕೊಂಡು ತನಗಾಗಿ ಸುಗಂಧದ್ರವ್ಯಗಳನ್ನು ತಯಾರಿಸಲೂ ಅಡಿಗೆ ಮಾಡಲೂ ರೊಟ್ಟಿಸುಡುವುದಕ್ಕೂ ನೇಮಿಸಿಕೊಳ್ಳುವನು.
14 “ನಿಮಗೆ ಸೇರಿದ ಉತ್ತಮ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಆಲಿವ್ ತೋಪುಗಳನ್ನೂ ರಾಜನು ಕಿತ್ತುಕೊಂಡು ತನ್ನ ಅಧಿಕಾರಿಗಳಿಗೆ ಕೊಡುತ್ತಾನೆ. 15 ನೀವು ಬೆಳೆದ ಧಾನ್ಯಗಳಲ್ಲಿ ಮತ್ತು ದ್ರಾಕ್ಷಿಗಳಲ್ಲಿ ಅವನು ಹತ್ತನೆ ಒಂದು ಭಾಗವನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಸೇವಕರಿಗೂ ಕೊಡುತ್ತಾನೆ.
16 “ರಾಜನು, ನಿಮ್ಮ ಸೇವಕಸೇವಕಿಯರನ್ನು ತೆಗೆದುಕೊಳ್ಳುವನು; ಶ್ರೇಷ್ಠವಾದ ಎತ್ತುಗಳನ್ನೂ ಕತ್ತೆಗಳನ್ನೂ ತೆಗೆದುಕೊಂಡು ತನ್ನ ಕೆಲಸಕ್ಕಾಗಿ ಬಳಸಿಕೊಳ್ಳುವನು. 17 ನಿಮ್ಮ ಕುರಿಹಿಂಡುಗಳಲ್ಲಿ ಹತ್ತನೆಯ ಒಂದು ಭಾಗವನ್ನು ತೆಗೆದುಕೊಳ್ಳುವನು.
“ಆಗ ನೀವು ರಾಜನಿಗೆ ಸೇವಕರಾಗುವಿರಿ; 18 ರಾಜನು ಬೇಕೆಂದು ಕೇಳಿಕೊಂಡದ್ದಕ್ಕಾಗಿ ಗೋಳಾಡುವಿರಿ. ಆದರೆ ಆಗ ಯೆಹೋವನು ನಿಮಗೆ ಉತ್ತರಿಸುವುದಿಲ್ಲ” ಎಂದು ಹೇಳಿದನು.
19 ಆದರೆ ಸಮುವೇಲನ ಮಾತುಗಳಿಗೆ ಜನರು ಕಿವಿಗೊಡಲಿಲ್ಲ. ಅವರು, “ಇಲ್ಲ, ನಮ್ಮನ್ನಾಳಲು ಒಬ್ಬ ರಾಜನು ಇರಲೇ ಬೇಕು. 20 ಆಗ ನಾವು ಇತರ ಅನ್ಯಜನಾಂಗಗಳಂತೆ ಆಗುವೆವು. ನಮ್ಮ ರಾಜನು ನಮ್ಮನ್ನು ಮುನ್ನಡೆಸುವನು. ಅವನು ನಮ್ಮೊಡನೆ ಬಂದು ನಮಗೋಸ್ಕರ ಹೋರಾಡುವನು” ಎಂದು ಹೇಳಿದರು.
21 ಸಮುವೇಲನು ಅವರ ಮಾತುಗಳನ್ನೆಲ್ಲಾ ಯೆಹೋವನಿಗೆ ತಿಳಿಸಿದನು. 22 ಯೆಹೋವನು ಅವನಿಗೆ, “ಅವರ ಇಷ್ಟದಂತೆ ಅವರಿಗೊಬ್ಬ ರಾಜನನ್ನು ನೇಮಿಸು” ಎಂದು ಹೇಳಿದನು.
ಆಗ ಸಮುವೇಲನು ಇಸ್ರೇಲರಿಗೆ, “ಹಾಗೆಯೇ ಆಗಲಿ, ನೀವು ಒಬ್ಬ ಹೊಸ ರಾಜನನ್ನು ಪಡೆದುಕೊಳ್ಳುವಿರಿ. ಈಗ ನೀವೆಲ್ಲ ನಿಮ್ಮ ನಿಮ್ಮ ಮನೆಗಳಿಗೆ ಹಿಂದಿರುಗಿರಿ” ಎಂದನು.
ಸೈತಾನನಿಗೆ ಸೋಲು
7 ಒಂದುಸಾವಿರ ವರ್ಷಗಳು ಮುಗಿದ ನಂತರ, ಸೈತಾನನನ್ನು ಅವನ ಸೆರೆಯಿಂದ ಬಿಡುಗಡೆ ಮಾಡಲಾಗುತ್ತದೆ. 8 ಸೈತಾನನು ಗೋಗ್ ಮತ್ತು ಮಾಗೋಗ್ ಜನಾಂಗಗಳನ್ನು ಮರುಳುಗೊಳಿಸಲು ಭೂಲೋಕದಲ್ಲೆಲ್ಲಾ ಹೋಗಿ ಆ ಜನರನ್ನು ಯುದ್ಧಕ್ಕೆ ಒಟ್ಟುಗೂಡಿಸುತ್ತಾನೆ. ಅವರು ಸಮುದ್ರ ತೀರದ ಮರಳಿನ ಕಣಗಳಂತೆ ಅಸಂಖ್ಯಾತವಾಗಿರುತ್ತಾರೆ.
9 ಸೈತಾನನ ಸೈನ್ಯವು ಭೂಮಿಯಲ್ಲೆಲ್ಲಾ ಶಿಸ್ತಿನಿಂದ ನಡೆದಾಡಿ ದೇವಜನರ ಶಿಬಿರದ ಸುತ್ತಲೂ ದೇವರ ಪ್ರಿಯ ನಗರದ ಸುತ್ತಲೂ ಒಟ್ಟುಗೂಡಿದರು. ಆದರೆ ಪರಲೋಕದಿಂದ ಇಳಿದು ಬಂದ ಬೆಂಕಿಯು ಸೈತಾನನ ಸೈನ್ಯವನ್ನು ನಾಶಗೊಳಿಸಿತು. 10 ಸೈತಾನನನ್ನು (ಇವನೇ ಜನರನ್ನು ಮೋಸಗೊಳಿಸಿದವನು.) ಬೆಂಕಿಗಂಧಕಗಳು ಉರಿಯುತ್ತಿದ್ದ ಕೆರೆಗೆ ಎಸೆಯಲಾಯಿತು. ಅಲ್ಲಿ ಮೃಗವೂ ಇತ್ತು, ಸುಳ್ಳುಪ್ರವಾದಿಗಳೂ ಇದ್ದರು. ಅಲ್ಲಿ ಅವರು ಹಗಲಿರುಳು ಎಂದೆಂದಿಗೂ ಹಿಂಸೆ ಅನುಭವಿಸುವರು.
ಲೋಕದ ಜನರಿಗಾಗುವ ತೀರ್ಪು
11 ಬಳಿಕ ನಾನು ಒಂದು ದೊಡ್ಡ ಬಿಳಿ ಸಿಂಹಾಸನವನ್ನೂ ಆ ಸಿಂಹಾಸನದ ಮೇಲೆ ಕುಳಿತಿದ್ದಾತನನ್ನೂ ನೋಡಿದೆನು. ಭೂಮಿ ಮತ್ತು ಆಕಾಶಗಳು ಆತನ ಬಳಿಯಿಂದ ಓಡಿಹೋಗಿ ಅದೃಶ್ಯವಾದವು. 12 ಸತ್ತುಹೋಗಿದ್ದ ಚಿಕ್ಕವರು ಮತ್ತು ದೊಡ್ಡವರು ಸಿಂಹಾಸನದ ಮುಂದೆ ನಿಂತಿದ್ದರು. ಆಗ ಜೀವಬಾಧ್ಯರ ಪುಸ್ತಕವನ್ನು ತೆರೆಯಲಾಯಿತು. ತೆರೆದಿದ್ದ ಇತರ ಪುಸ್ತಕಗಳೂ ಅಲ್ಲಿದ್ದವು. ಸತ್ತುಹೋಗಿದ್ದ ಈ ಜನರಿಗೆ ಅವರು ಮಾಡಿದ್ದ ಕಾರ್ಯಗಳ ಆಧಾರದ ಮೇಲೆ ತೀರ್ಪು ನೀಡಲಾಯಿತು. ಇವುಗಳು ಪುಸ್ತಕಗಳಲ್ಲಿ ಬರೆಯಲ್ಪಟ್ಟಿವೆ.
13 ಸಮುದ್ರವು ತನ್ನಲ್ಲಿ ಸತ್ತಿದ್ದ ಜನರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತನ್ನಲ್ಲಿದ್ದ ಸತ್ತ ಜನರನ್ನು ಒಪ್ಪಿಸಿದವು. ಪ್ರತಿಯೊಬ್ಬ ವ್ಯಕ್ತಿಗೂ ಅವನ ಕಾರ್ಯಗಳಿಗನುಸಾರವಾಗಿ ತೀರ್ಪು ನೀಡಲಾಯಿತು. 14 ಆಮೇಲೆ ಮೃತ್ಯುವನ್ನೂ ಪಾತಾಳವನ್ನೂ ಬೆಂಕಿಯ ಕೆರೆಗೆ ಎಸೆಯಲಾಯಿತು. ಈ ಬೆಂಕಿಯ ಕೆರೆಯು ಎರಡನೆಯ ಮರಣ. 15 ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರು ಬರೆಯಲ್ಪಟ್ಟಿಲ್ಲವೋ ಆ ವ್ಯಕ್ತಿಯನ್ನು ಬೆಂಕಿಯ ಕೆರೆಗೆ ಎಸೆಯಲಾಯಿತು.
Kannada Holy Bible: Easy-to-Read Version. All rights reserved. © 1997 Bible League International