Revised Common Lectionary (Semicontinuous)
ಹನ್ನಳ ಸ್ತೋತ್ರ
2 ಹನ್ನಳು ಇಂತೆಂದಳು:
“ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ.
ನಾನು ನನ್ನ ದೇವರಾದ ಯೆಹೋವನಲ್ಲಿ ಬಲಶಾಲಿಯಾಗಿದ್ದೇನೆ.
ನಾನು ನನ್ನ ಶತ್ರುಗಳ ಬಗ್ಗೆ ನಗುವೆನು.[a]
ನಾನು ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.
2 ಯೆಹೋವನಂತಹ ಪವಿತ್ರ ದೇವರು ಬೇರೆ ಯಾರೂ ಇಲ್ಲ.
ನಿನ್ನ ಹೊರತು ಅನ್ಯದೇವರಿಲ್ಲ!
ನಮ್ಮ ದೇವರಿಗಿಂತ ಬೇರೊಂದು ಬಂಡೆಯಿಲ್ಲ.
3 ಇನ್ನು ಮುಂದೆ ಬಡಾಯಿಕೊಚ್ಚಬೇಡಿ!
ಸೊಕ್ಕಿನ ಮಾತುಗಳನ್ನು ಆಡಬೇಡಿ!
ಏಕೆಂದರೆ ಯೆಹೋವನು ಪ್ರತಿಯೊಂದನ್ನು ಬಲ್ಲನು.
ಆತನು ಮನುಷ್ಯರನ್ನು ಮುನ್ನಡೆಸುತ್ತಾನೆ ಮತ್ತು ತೂಗಿ ನೋಡುತ್ತಾನೆ.
4 ಶಕ್ತಿಶಾಲಿ ಯೋಧರ ಬಿಲ್ಲುಗಳು ಮುರಿದುಹೋಗುತ್ತವೆ.
ಬಲಹೀನರು ಶಕ್ತಿವಂತರಾಗುವರು.
5 ಹಿಂದೆ ಆಹಾರವನ್ನು ಸಮೃದ್ಧಿಕರವಾಗಿ ಹೊಂದಿದ್ದವರು
ಆಹಾರಕ್ಕಾಗಿ ದುಡಿಯಬೇಕಾಗುವುದು.
ಹಿಂದೆ ಆಹಾರವಿಲ್ಲದೆ ಹಸಿದಿದ್ದವರಿಗೆ
ಇಂದು ಆಹಾರ ಸಮೃದ್ಧಿಕರವಾಗಿರುವುದು!
ಬಂಜೆಗೆ ಈಗ ಏಳು ಜನ ಮಕ್ಕಳಿರುವರು.
ಆದರೆ ಹೆಚ್ಚು ಮಕ್ಕಳಿದ್ದ ತಾಯಿ ಇಂದು ವೇದನೆಗೊಂಡಿರುವಳು
ಏಕೆಂದರೆ ಅವಳ ಮಕ್ಕಳೆಲ್ಲ ಸತ್ತುಹೋಗಿದ್ದಾರೆ.
6 ಯೆಹೋವನು ಜನರಿಗೆ ಸಾವನ್ನೂ ತರುವನು.
ಅಂತೆಯೇ ಅವರಿಗೆ ಜೀವವನ್ನೂ ದಯಪಾಲಿಸುವನು.
ಆತನು ಅವರಿಗೆ ಮರುಜೀವವನ್ನು ದಯಪಾಲಿಸಬಲ್ಲನು.
ಯೆಹೋವನು ಜನರನ್ನು ಮರಣ ಸ್ಥಳವಾದ ಪಾತಾಳಕ್ಕೆ ತಳ್ಳುವನು.
7 ಯೆಹೋವನು ಜನರನ್ನು ಬಡವರನ್ನಾಗಿಸುತ್ತಾನೆ.
ಆತನು ಜನರನ್ನು ಹಣವಂತರನ್ನಾಗಿಸುತ್ತಾನೆ.
ಯೆಹೋವನು ಜನರನ್ನು ದೀನರನ್ನಾಗಿಸುತ್ತಾನೆ.
ಆತನು ಜನರನ್ನು ದೊಡ್ಡವರನ್ನಾಗಿಸುತ್ತಾನೆ.
8 ಯೆಹೋವನು ಬಡವರನ್ನು ಧೂಳಿನಿಂದ ಮೇಲಕ್ಕೆತ್ತುತ್ತಾನೆ.
ಯೆಹೋವನು ದೀನರನ್ನು ತಿಪ್ಪೆಯಿಂದ ಮೇಲಕ್ಕೆತ್ತುತ್ತಾನೆ.
ಯೆಹೋವನು ಬಡವರನ್ನು ರಾಜಕುಮಾರರೊಂದಿಗೆ ಕುಳ್ಳಿರಿಸುತ್ತಾನೆ.
ಆತನು ಬಡವರನ್ನು ಗೌರವಪೀಠದಲ್ಲಿ ಕುಳ್ಳಿರಿಸುತ್ತಾನೆ.
ಲೋಕವೂ ಅದರ ಅಡಿಪಾಯಗಳೂ ಯೆಹೋವನವೇ.
ಆತನು ಆ ಕಂಬಗಳ ಮೇಲೆ ಲೋಕವನ್ನು ನಿಲ್ಲಿಸಿರುವನು.
9 ಯೆಹೋವನು ತನ್ನ ಪವಿತ್ರ ಜನರನ್ನು ರಕ್ಷಿಸುವನು.
ಆತನು ಅವರನ್ನು ಎಡವದಂತೆ ಕಾಪಾಡುವನು.
ಆದರೆ ಕೆಟ್ಟವರು ನಾಶವಾಗಿ ಕತ್ತಲೆಯಲ್ಲಿ ಬೀಳುವರು.
ಅವರ ಶಕ್ತಿ ಅವರಿಗೆ ಜಯನೀಡಲಾರದು.
10 ಯೆಹೋವನು ತನ್ನ ಶತ್ರುಗಳನ್ನು ನಾಶಗೊಳಿಸುವನು.
ಮಹೋನ್ನತನಾದ ದೇವರು ಪರಲೋಕದಲ್ಲಿ ಜನರಿಗೆ ವಿರುದ್ಧವಾಗಿ ಗುಡುಗುವನು.
ಯೆಹೋವನು ಬಹುದೂರದ ದೇಶಗಳಿಗೂ ತೀರ್ಪನ್ನು ಕೊಡುವನು.
ಆತನು ತನ್ನ ರಾಜನಿಗೆ ಶಕ್ತಿಯನ್ನು ಕೊಡುವನು.
ತಾನು ಅಭಿಷೇಕಿಸಿದ ರಾಜನನ್ನು ಬಲಗೊಳಿಸುವನು.”
ಸಮುವೇಲನಿಗೆ ದೇವರ ಕರೆ
3 ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದು ಯೆಹೋವನ ಸೇವೆಮಾಡುತ್ತಿದ್ದನು. ಆ ಕಾಲದಲ್ಲಿ ಯೆಹೋವನು ಜನರೊಂದಿಗೆ ಪದೇಪದೇ ಮಾತಾಡುತ್ತಿರಲಿಲ್ಲ; ದರ್ಶನಗಳ ಸಂಖ್ಯೆಯೂ ಕಡಿಮೆಯಾಗಿತ್ತು.
2 ಏಲಿಯ ಕಣ್ಣುಗಳು ಮಂಜಾಗಿ ಕುರುಡನೆನ್ನುವಷ್ಟು ಕಾಣುತ್ತಿರಲಿಲ್ಲ. ಒಂದು ರಾತ್ರಿ ಏಲಿಯು ತನ್ನ ಸ್ಥಳದಲ್ಲಿ ಮಲಗಿದ್ದನು. 3 ಸಮುವೇಲನು ಯೆಹೋವನ ಪವಿತ್ರ ಆಲಯದಲ್ಲಿ ಹಾಸಿಗೆಯ ಮೇಲೆ ಮಲಗಿದ್ದನು. ಯೆಹೋವನ ಪವಿತ್ರ ಪೆಟ್ಟಿಗೆಯು ಅಲ್ಲಿಯೇ ಇತ್ತು. ಯೆಹೋವನ ದೀಪವು ಇನ್ನೂ ಬೆಳಗುತ್ತಿತ್ತು. 4 ಯೆಹೋವನು ಸಮುವೇಲನನ್ನು ಕರೆದನು. ಸಮುವೇಲನು, “ಇಗೋ, ಇಲ್ಲಿದ್ದೇನೆ” ಎಂದನು. 5 ಏಲಿಯು ಕರೆದಿರಬಹುದೆಂದು ಸಮುವೇಲನು ನೆನೆಸಿದನು. ಆದ್ದರಿಂದ ಸಮುವೇಲನು ಏಲಿಯ ಬಳಿಗೆ ಓಡಿಹೋಗಿ, “ಇಗೋ, ಇಲ್ಲಿದ್ದೇನೆ. ನೀನು ನನ್ನನ್ನು ಕರೆದೆಯಲ್ಲಾ” ಅಂದನು.
ಆದರೆ ಏಲಿಯು, “ನಾನು ನಿನ್ನನ್ನು ಕರೆಯಲಿಲ್ಲ. ಹೋಗಿ ಮಲಗಿಕೋ” ಅಂದನು.
ಸಮುವೇಲನು ಹೋಗಿ ಮಲಗಿಕೊಂಡನು. 6 ನಂತರ ಯೆಹೋವನು, “ಸಮುವೇಲನೇ” ಎಂದು ಮತ್ತೆ ಕರೆದನು. ಸಮುವೇಲನು ಮತ್ತೆ ಏಲಿಯ ಬಳಿಗೆ ಓಡಿಹೋಗಿ, “ಇಗೋ, ಇಲ್ಲಿದ್ದೇನೆ. ನೀನು ನನ್ನನ್ನು ಕರೆದೆಯಲ್ಲಾ” ಎಂದು ಹೇಳಿದನು.
ಏಲಿಯು, “ನಾನು ನಿನ್ನನ್ನು ಕರೆಯಲಿಲ್ಲ, ಹೋಗಿ ಮಲಗಿಕೋ” ಅಂದನು.
7 ಆ ವರೆಗೂ ಸಮುವೇಲನಿಗೆ ಯೆಹೋವನ ಅನುಭವವಿರಲಿಲ್ಲ; ಯೆಹೋವನು ಅವನೊಂದಿಗೆ ನೇರವಾಗಿ ಮಾತಾಡಿರಲಿಲ್ಲ.[a]
8 ಯೆಹೋವನು ಸಮುವೇಲನನ್ನು ಮೂರನೆಯ ಸಲ ಕರೆದನು. ಸಮುವೇಲನು ಮತ್ತೆ ಮೇಲೆದ್ದು ಏಲಿಯನ ಬಳಿಗೆ ಹೋಗಿ, “ಇಗೋ, ಇಲ್ಲಿದ್ದೇನೆ. ನೀನು ನನ್ನನ್ನು ಕರೆದೆಯಲ್ಲಾ” ಅಂದನು.
ಬಾಲಕನನ್ನು ಕರೆಯುತ್ತಿರುವವನು ಯೆಹೋವನೆಂಬುದು ಏಲಿಗೆ ಆಗ ಅರ್ಥವಾಯಿತು. 9 ಏಲಿಯು ಸಮುವೇಲನಿಗೆ, “ಹೋಗಿ ಮಲಗಿಕೋ. ನಿನ್ನನ್ನು ಮತ್ತೆ ಕರೆದರೆ, ‘ಅಪ್ಪಣೆಯಾಗಲಿ, ಯೆಹೋವನೇ ನಾನು ನಿನ್ನ ಸೇವಕ, ಕೇಳಿಸಿಕೊಳ್ಳುತ್ತಿದ್ದೇನೆ’ ಎಂದು ಉತ್ತರಿಸು” ಎಂಬುದಾಗಿ ಹೇಳಿದನು.
ಸಮುವೇಲನು ತನ್ನ ಸ್ಥಳದಲ್ಲಿ ಮಲಗಲು ಹೋದನು. 10 ಯೆಹೋವನು ಅಲ್ಲಿ ಪ್ರತ್ಯಕ್ಷನಾಗಿ ನಿಂತು ಮೊದಲು ಕರೆದಂತೆಯೇ “ಸಮುವೇಲನೇ, ಸಮುವೇಲನೇ” ಎಂದು ಕರೆದನು.
ಸಮುವೇಲನು, “ಅಪ್ಪಣೆಯಾಗಲಿ, ನಾನು ನಿನ್ನ ಸೇವಕ, ಕೇಳಿಸಿಕೊಳ್ಳುತ್ತಿದ್ದೇನೆ” ಎಂದನು.
11 ಯೆಹೋವನು ಸಮುವೇಲನಿಗೆ, “ನಾನು ಇಸ್ರೇಲಿನಲ್ಲಿ ಒಂದು ಕಾರ್ಯವನ್ನು ಶೀಘ್ರದಲ್ಲೇ ಮಾಡುವೆನು. ಈ ಕಾರ್ಯದ ಬಗ್ಗೆ ಕೇಳಿದ ಜನರು ಗಾಬರಿಗೊಳ್ಳುವರು. 12 ನಾನು ಇದನ್ನು ಏಲಿ ಮತ್ತು ಅವನ ಕುಟುಂಬದ ವಿರುದ್ಧ ಸಂಪೂರ್ಣವಾಗಿ ಮಾಡುತ್ತೇನೆ. 13 ಏಲಿಯ ಕುಟುಂಬವನ್ನು ನಿತ್ಯದಂಡನೆಗೆ ಗುರಿಪಡಿಸುತ್ತೇನೆಂದು ನಾನು ಏಲಿಗೆ ಹೇಳಿರುವೆನು. ಏಲಿಯ ಮಕ್ಕಳು ನನಗೆ ವಿರೋಧವಾಗಿ ಮಾತಾಡಿದ್ದರಿಂದ ಮತ್ತು ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ನಾನು ಇದನ್ನು ಮಾಡುತ್ತೇನೆ. ಅಲ್ಲದೆ ಅವರನ್ನು ಹತೋಟಿಯಲ್ಲಿಡಲು ಏಲಿಗೆ ಸಾಧ್ಯವಾಗಲಿಲ್ಲ. 14 ಆದಕಾರಣವೇ, ಏಲಿಯ ಕುಟುಂಬವು ಅರ್ಪಿಸುವ ಯಜ್ಞವಾಗಲಿ ಧಾನ್ಯನೈವೇದ್ಯವಾಗಲಿ ಅವರ ಪಾಪಗಳಿಗೆ ಪ್ರಾಯಶ್ಚಿತ್ತವಾಗುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.
15 ಸಮುವೇಲನು ನಿದ್ರಿಸಿದನು. ಅವನು ಮುಂಜಾನೆ ಮೇಲೆದ್ದು ಯೆಹೋವನ ಆಲಯದ ಬಾಗಿಲುಗಳನ್ನು ತೆರೆದನು. ಸಮುವೇಲನು ತಾನು ಕಂಡ ದರ್ಶನದ ಬಗ್ಗೆ ಏಲಿಗೆ ತಿಳಿಸಲು ಭಯಪಟ್ಟನು.
16 ಆದರೆ ಏಲಿಯು, “ಸಮುವೇಲನೇ, ನನ್ನ ಮಗನೇ” ಎಂದು ಕರೆದನು.
ಸಮುವೇಲನು, “ಇಗೋ, ಇದ್ದೇನೆ” ಅಂದನು.
17 ಏಲಿಯು, “ಯೆಹೋವನು ನಿನಗೆ ಹೇಳಿದ್ದೇನು? ನನ್ನೊಂದಿಗೆ ಅದನ್ನು ಮುಚ್ಚಿಡಬೇಡ. ಆತನು ನಿನ್ನೊಂದಿಗೆ ಆಡಿದ ಮಾತುಗಳಲ್ಲಿ ಏನನ್ನಾದರೂ ಮುಚ್ಚಿಟ್ಟರೆ ಆತನು ನಿನ್ನನ್ನು ಶಿಕ್ಷಿಸುತ್ತಾನೆ” ಎಂದು ತಿಳಿಸಿದನು.
18 ಸಮುವೇಲನು ಏನನ್ನೂ ಮುಚ್ಚಿಡದೆ, ಎಲ್ಲವನ್ನೂ ಏಲಿಗೆ ತಿಳಿಸಿದನು.
ಏಲಿಯು, “ಆತನು ಯೆಹೋವ. ಆತನು ತನಗೆ ಸರಿಕಾಣುವದನ್ನೇ ಮಾಡಲಿ” ಎಂದು ಹೇಳಿದನು.
ದೇವರ ಮಗನ ಆಗಮನ
(ಮತ್ತಾಯ 21:33-46; ಲೂಕ 20:9-19)
12 ಯೇಸು ಜನರಿಗೆ ಸಾಮ್ಯಗಳ ಮೂಲಕ ಉಪದೇಶಿಸುತ್ತಾ ಅವರಿಗೆ ಹೇಳಿದ್ದೇನೆಂದರೆ: “ಒಬ್ಬನು ದ್ರಾಕ್ಷಿಯ ತೋಟವನ್ನು ಮಾಡಿ, ಸುತ್ತಲೂ ಗೋಡೆ ಹಾಕಿಸಿ, ದ್ರಾಕ್ಷಾರಸವನ್ನು ತೆಗೆಯಲು ಅಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದನು. ಅವನು ಕೆಲವು ರೈತರಿಗೆ ತೋಟವನ್ನು ಗುತ್ತಿಗೆಗೆ ಕೊಟ್ಟು ಪ್ರವಾಸಕ್ಕೆ ಹೊರಟನು.
2 “ತರುವಾಯ ಫಲಕಾಲವು ಬಂದಾಗ ತನ್ನ ಪಾಲಿನ ದ್ರಾಕ್ಷಿಯನ್ನು ತರುವುದಕ್ಕಾಗಿ ಒಬ್ಬ ಸೇವಕನನ್ನು ಕಳುಹಿಸಿದನು. 3 ಆದರೆ ರೈತರು ಆ ಸೇವಕನನ್ನು ಹಿಡಿದುಕೊಂಡು ಹೊಡೆದು ಏನನ್ನೂ ಕೊಡದೆ ಅವನನ್ನು ಕಳುಹಿಸಿಬಿಟ್ಟರು. 4 ಆಗ ಯಜಮಾನನು ಮತ್ತೊಬ್ಬ ಸೇವಕನನ್ನು ರೈತರ ಬಳಿಗೆ ಕಳುಹಿಸಿದನು. ರೈತರು ಅವನಿಗೂ ತಲೆಯ ಮೇಲೆ ಹೊಡೆದು ಅವಮಾನ ಮಾಡಿದರು. 5 ಆದ್ದರಿಂದ ಯಜಮಾನನು ಮತ್ತೊಬ್ಬ ಸೇವಕನನ್ನು ಕಳುಹಿಸಿದನು. ರೈತರು ಈ ಸೇವಕನನ್ನು ಕೊಂದುಹಾಕಿದರು. ಆ ಯಜಮಾನನು ಇತರ ಅನೇಕ ಸೇವಕರನ್ನು ರೈತರ ಬಳಿಗೆ ಕಳುಹಿಸಿದನು. ರೈತರು ಕೆಲವು ಸೇವಕರನ್ನು ಹೊಡೆದರು, ಕೆಲವರನ್ನು ಕೊಂದುಹಾಕಿದರು.
6 “ಆ ಯಜಮಾನನಿಗೆ ರೈತರ ಬಳಿಗೆ ಕಳುಹಿಸಲು ಪ್ರಿಯ ಮಗನೊಬ್ಬನೇ ಉಳಿದಿದ್ದನು. ಅವನು ಕಳುಹಿಸಬಹುದಾದ ಕೊನೆಯ ವ್ಯಕ್ತಿ ಅವನ ಸ್ವಂತ ಮಗನಾಗಿದ್ದನು. ‘ರೈತರು ನನ್ನ ಮಗನಿಗೆ ಗೌರವ ಕೊಡುತ್ತಾರೆ’ ಎಂದುಕೊಂಡು ಯಜಮಾನನು ಅವನನ್ನೇ ಕಳುಹಿಸಿದನು.
7 “ಆದರೆ ರೈತರು ಒಬ್ಬರಿಗೊಬ್ಬರು, ‘ಇವನು ಯಜಮಾನನ ಮಗನು. ಈ ದ್ರಾಕ್ಷಿತೋಟದ ಹಕ್ಕುದಾರ. ನಾವು ಇವನನ್ನು ಕೊಂದರೆ, ದ್ರಾಕ್ಷಿತೋಟ ನಮ್ಮದಾಗುತ್ತದೆ’ ಎಂದುಕೊಂಡು, 8 ಮಗನನ್ನು ಹಿಡಿದು ಕೊಂದುಹಾಕಿ, ದ್ರಾಕ್ಷಿತೋಟದ ಹೊರಗೆ ಎಸೆದುಬಿಟ್ಟರು.
9 “ಹೀಗಿರುವಾಗ ಆ ದಾಕ್ಷಿತೋಟದ ಯಜಮಾನನು ಏನು ಮಾಡುತ್ತಾನೆ? ಅವನು ತೋಟಕ್ಕೆ ಹೋಗಿ, ಆ ರೈತರನ್ನು ಕೊಂದು ತೋಟವನ್ನು ಬೇರೆ ರೈತರಿಗೆ ಒಪ್ಪಿಸಿಕೊಡುತ್ತಾನೆ. 10 ಪವಿತ್ರಗ್ರಂಥದಲ್ಲಿ ಬರೆದಿರುವಂತೆ,
‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
11 ಇದು ಪ್ರಭುವಿನಿಂದ ಆಯಿತು. ಇದು ನಮಗೆ ಆಶ್ಚರ್ಯವಾಗಿ ತೋರುತ್ತದೆ.’(A)”
12 ಯೇಸು ಹೇಳಿದ ಈ ಸಾಮ್ಯವನ್ನು ಯೆಹೂದ್ಯನಾಯಕರು ಕೇಳಿ ತಮ್ಮನ್ನು ಕುರಿತಾಗಿಯೇ ಇದನ್ನು ಹೇಳಿದನೆಂದು ತಿಳಿದುಕೊಂಡು ಯೇಸುವನ್ನು ಬಂಧಿಸಲು ಪ್ರಯತ್ನಿಸಿದರೂ ಜನರಿಗೆ ಹೆದರಿಕೊಂಡು ಆತನನ್ನು ಬಿಟ್ಟುಹೋದರು.
Kannada Holy Bible: Easy-to-Read Version. All rights reserved. © 1997 Bible League International