Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 126

ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ.

126 ಯೆಹೋವನು ನಮ್ಮನ್ನು ಸೆರೆಯಿಂದ ತಿರಿಗಿ
    ಚೀಯೋನಿಗೆ ಬರಮಾಡಿದಾಗ ನಾವು ಕನಸು ಕಂಡವರಂತಿದ್ದೆವು!
ನಾವು ನಗುತ್ತಿದ್ದೆವು; ಹರ್ಷಗೀತೆಗಳನ್ನು ಹಾಡುತ್ತಿದ್ದೆವು.
    “ಯೆಹೋವನು ಇಸ್ರೇಲರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ”
    ಎಂದು ಅನ್ಯ ಜನಾಂಗಗಳು ಮಾತಾಡಿಕೊಂಡರು.
ಹೌದು, ನಾವು ಸಂತೋಷದಿಂದ್ದೇವೆ ಯಾಕೆಂದರೆ ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದನು.

ಯೆಹೋವನೇ, ಬತ್ತಿಹೋದ ತೊರೆಗಳು ನೀರಿನಿಂದ
    ಮತ್ತೆ ತುಂಬಿ ಹರಿಯುವಂತೆ ನಮ್ಮನ್ನು ಬಿಡಿಸು.
ಅಳುತ್ತಾ ಬೀಜವನ್ನು ಬಿತ್ತುವವನು
    ಹರ್ಷದಿಂದ ಕೊಯ್ಯುವನು.
ಅಳುತ್ತಾ ಹೊಲಕ್ಕೆ ಬೀಜವನ್ನು ಹೊತ್ತುಕೊಂಡು ಹೋಗುವವನು
    ಹರ್ಷದಿಂದ ಸಿವುಡುಗಳನ್ನು ಹೊತ್ತುಕೊಂಡು ಬರುವನು!

ಯೆಶಾಯ 35:3-7

ಬಲಹೀನವಾದ ಕೈಗಳನ್ನು ಬಲಗೊಳಿಸಿರಿ, ನಡುಗುವ ಮೊಣಕಾಲುಗಳನ್ನು ಬಲಗೊಳಿಸಿರಿ. ಜನರು ಭಯದಿಂದ ಗಲಿಬಿಲಿಗೊಂಡಿದ್ದಾರೆ. ಅವರಿಗೆ ಹೀಗೆ ಹೇಳು, “ಧೈರ್ಯಗೊಳ್ಳಿರಿ, ಭಯಪಡಬೇಡಿ.” ಇಗೋ, ನಿಮ್ಮ ದೇವರು ಬಂದು ನಿಮ್ಮ ವೈರಿಗಳನ್ನು ಶಿಕ್ಷಿಸುವನು. ಆತನು ಬಂದು ನಿಮಗೆ ಪ್ರತಿಫಲವನ್ನು ಕೊಡುವನು. ಯೆಹೋವನು ನಿಮ್ಮನ್ನು ಕಾಪಾಡುತ್ತಾನೆ. ಆಗ ಕುರುಡರಿಗೆ ದೃಷ್ಟಿ ಬರುವದು. ಅವರ ಕಣ್ಣುಗಳು ತೆರೆಯಲ್ಪಡುವವು. ಆಗ ಕಿವುಡರು ಕೇಳಿಸಿಕೊಳ್ಳುವರು. ಅವರ ಕಿವಿಗಳು ತೆರೆಯಲ್ಪಡುವವು. ಕುಂಟರು ಜಿಂಕೆಯಂತೆ ಜಿಗಿದಾಡುವರು. ಮಾತನಾಡಲು ಸಾಧ್ಯವಾಗದ ಜನರು ಆಗ ಹರ್ಷಗಾನವನ್ನು ಹಾಡುವರು. ಯಾವಾಗ ಮರುಭೂಮಿಯಲ್ಲಿ ತೊರೆಯ ನೀರು ಹರಿಯುವದೋ ಆಗ ಇವೆಲ್ಲಾ ಜರಗುವವು. ಒಣಭೂಮಿಯಲ್ಲಿ ಒರತೆಯ ನೀರು ಹರಿಯುವದು. ಆಗ ಜನರು ಬಿಸುಲ್ಗುದುರೆಯನ್ನು ನೋಡಿ ನೀರು ಎಂದು ಭಾವಿಸುವರು. ಆದರೆ ಆಗ ನೀರಿನ ಕೊಳಗಳೇ ಇರುವವು. ಬೆಂಗಾಡಿನಲ್ಲಿ ಬಾವಿಗಳಿರುವವು. ನೆಲದೊಳಗಿಂದ ನೀರು ಉಕ್ಕುವುದು. ಒಂದು ಕಾಲದಲ್ಲಿ ಕಾಡುಪ್ರಾಣಿಗಳು ವಾಸವಾಗಿದ್ದ ಸ್ಥಳದಲ್ಲಿ ಎತ್ತರವಾದ ನೀರವಂಜಿಗಳು ಬೆಳೆಯುವವು.

ಲೂಕ 7:18-30

ಯೋಹಾನನು ಯೇಸುವಿಗೆ ಕೇಳಿದ ಪ್ರಶ್ನೆ

(ಮತ್ತಾಯ 11:2-19)

18 ಯೋಹಾನನ ಶಿಷ್ಯರು ಈ ಸಂಗತಿಗಳನ್ನೆಲ್ಲಾ ಯೋಹಾನನಿಗೆ ತಿಳಿಸಿದರು. ಯೋಹಾನನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, 19 “ಬರಬೇಕಾದವನು ನೀನೋ ಅಥವಾ ಬೇರೊಬ್ಬ ವ್ಯಕ್ತಿಗಾಗಿ ನಾವು ಕಾಯಬೇಕೋ?” ಎಂದು ಕೇಳುವುದಕ್ಕಾಗಿ ಅವರನ್ನು ಪ್ರಭುವಿನ (ಯೇಸುವಿನ) ಬಳಿಗೆ ಕಳುಹಿಸಿದನು.

20 ಆದ್ದರಿಂದ ಅವರು ಯೇಸುವಿನ ಬಳಿಗೆ ಬಂದು, “ಸ್ನಾನಿಕ ಯೋಹಾನನು ‘ಬರಬೇಕಾದವನು ನೀನೋ ಅಥವಾ ಬೇರೊಬ್ಬ ವ್ಯಕ್ತಿಗಾಗಿ ನಾವು ಕಾಯಬೇಕೋ?’ ಎಂದು ನಿನ್ನನ್ನು ಕೇಳುವುದಕ್ಕಾಗಿ ನಮ್ಮನ್ನು ಇಲ್ಲಿಗೆ ಕಳುಹಿಸಿದ್ದಾನೆ” ಎಂದು ಹೇಳಿದರು.

21 ಅದೇ ಸಮಯದಲ್ಲಿ, ಯೇಸು ಅನೇಕ ಜನರನ್ನು ಅವರವರ ಕಾಯಿಲೆಗಳಿಂದ, ರೋಗಗಳಿಂದ ಗುಣಪಡಿಸಿದನು. ದೆವ್ವಗಳಿಂದ ಪೀಡಿತರಾಗಿದ್ದವರನ್ನು ಬಿಡಿಸಿದನು. ಅನೇಕ ಕುರುಡರಿಗೆ ದೃಷ್ಟಿಯನ್ನು ಕೊಟ್ಟನು. 22 ಬಳಿಕ ಯೇಸು ಯೋಹಾನನ ಶಿಷ್ಯರಿಗೆ, “ನೀವು ಇಲ್ಲಿ ಕಂಡು ಕೇಳಿದ ಸಂಗತಿಗಳನ್ನು ಹೋಗಿ ಯೋಹಾನನಿಗೆ ತಿಳಿಸಿರಿ. ಕುರುಡರಿಗೆ ದೃಷ್ಟಿ ಬರುತ್ತದೆ, ಕುಂಟರು ಕಾಲನ್ನು ಪಡೆದು ನಡೆಯುತ್ತಾರೆ. ಕುಷ್ಠರೋಗಿಗಳು ಗುಣಹೊಂದುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರಿಗೆ ಜೀವ ಬರುತ್ತದೆ ಮತ್ತು ದೇವರ ರಾಜ್ಯದ ಸುವಾರ್ತೆಯು ಬಡವರಿಗೆ ಕೊಡಲ್ಪಡುತ್ತದೆ. 23 ಸಂಶಯಪಡದೆ ನನ್ನನ್ನು ಸ್ವೀಕರಿಸಿಕೊಳ್ಳುವವನೇ ಧನ್ಯನು!” ಎಂದು ಹೇಳಿ ಕಳುಹಿಸಿದನು.

24 ಯೋಹಾನನ ಶಿಷ್ಯರು ಹೊರಟುಹೋದಾಗ, ಯೇಸು ಜನರಿಗೆ ಯೋಹಾನನ ಕುರಿತು ಹೇಳತೊಡಗಿ, “ಏನನ್ನು ನೋಡುವುದಕ್ಕೆ ನೀವು ಮರಳುಗಾಡಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ? 25 ನೀವು ಏನನ್ನು ನೋಡಲು ಹೊರಗೆ ಹೋದಿರಿ? ನಯವಾದ ಉಡುಪನ್ನು ಧರಿಸಿರುವ ಮನುಷ್ಯನನ್ನೋ? ಇಲ್ಲ. ನಯವಾದ ಮತ್ತು ಚಂದವಾದ ಉಡುಪನ್ನು ಧರಿಸಿದವರು ಅರಮನೆಗಳಲ್ಲಿ ವಾಸಮಾಡುತ್ತಾರೆ. 26 ನಿಜವಾಗಿಯೂ, ನೀವು ಏನನ್ನು ನೋಡಲು ಹೊರಗೆ ಹೋದಿರಿ? ಪ್ರವಾದಿಯನ್ನೋ? ಹೌದು. ನಾನು ನಿಮಗೆ ಹೇಳುವುದೇನೆಂದರೆ, ಯೋಹಾನನು ಪ್ರವಾದಿಗಿಂತಲೂ ಶ್ರೇಷ್ಠನಾಗಿದ್ದಾನೆ.

27 ‘ಇಗೋ! ನಾನು (ದೇವರು) ನನ್ನ ದೂತನನ್ನು[a] ನಿನ್ನ ಮುಂದೆ ಕಳುಹಿಸುತ್ತೇನೆ.
    ಅವನು ನಿನಗೋಸ್ಕರ ದಾರಿಯನ್ನು ಸಿದ್ಧಮಾಡುವನು’(A)

ಎಂದು ಯೋಹಾನನ ಕುರಿತು ಬರೆದಿದೆ. 28 ಈ ಲೋಕದಲ್ಲಿ ಹುಟ್ಟಿದ ಎಲ್ಲಾ ಮನುಷ್ಯರಲ್ಲಿ ಯೋಹಾನನೇ ದೊಡ್ಡವನು ಎಂದು ನಾನು ನಿಮಗೆ ಹೇಳುತ್ತೇನೆ. ಆದರೂ ದೇವರ ರಾಜ್ಯದಲ್ಲಿರುವ ಕನಿಷ್ಠನು ಸಹ ಅವನಿಗಿಂತ ಶ್ರೇಷ್ಠನೇ ಸರಿ” ಎಂದನು.

29 ಯೋಹಾನನು ಉಪದೇಶಿಸಿದ ದೇವರ ವಾಕ್ಯವನ್ನು ಜನರೆಲ್ಲರೂ ಸ್ವೀಕರಿಸಿಕೊಂಡರು. ಸುಂಕವಸೂಲಿಗಾರರೂ ಸ್ವೀಕರಿಸಿಕೊಂಡರು. ಇವರೆಲ್ಲರೂ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡರು. 30 ಆದರೆ ಫರಿಸಾಯರು[b] ಮತ್ತು ಧರ್ಮೋಪದೇಶಕರು ದೇವರ ಯೋಜನೆಯನ್ನು ತಿರಸ್ಕರಿಸಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲಿಲ್ಲ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International