Revised Common Lectionary (Semicontinuous)
ರಚನೆಗಾರ: ದಾವೀದ.
29 ದೇವಪುತ್ರರೇ,[a] ಯೆಹೋವನನ್ನು ಸ್ತುತಿಸಿರಿ!
ಆತನ ಮಹಿಮೆಯನ್ನೂ ಶಕ್ತಿಯನ್ನೂ ಸ್ತುತಿಸಿರಿ.
2 ಯೆಹೋವನನ್ನು ಸ್ತುತಿಸುತ್ತಾ ಆತನ ಹೆಸರನ್ನು ಘನಪಡಿಸಿರಿ.
ಪರಿಶುದ್ಧ ವಸ್ತ್ರಗಳನ್ನು ಧರಿಸಿಕೊಂಡು ಆತನನ್ನು ಆರಾಧಿಸಿರಿ.[b]
3 ಯೆಹೋವನ ಸ್ವರವು ಸಮುದ್ರದ ಮೇಲೆ ಕೇಳಿ ಬರುವುದು.
ಮಹಾಸಾಗರದ ಮೇಲಿನ ಗುಡುಗಿನಂತೆ ಮಹಿಮಾಸ್ವರೂಪನಾದ ದೇವರ ಸ್ವರವು ಕೇಳಿಬರುವುದು.
4 ಯೆಹೋವನ ಸ್ವರವು
ಆತನ ಶಕ್ತಿಯನ್ನೂ ಮಹಿಮೆಯನ್ನೂ ತೋರ್ಪಡಿಸುವುದು.
5 ಯೆಹೋವನ ಸ್ವರವು ದೇವದಾರು ವೃಕ್ಷಗಳನ್ನು ತುಂಡುತುಂಡು ಮಾಡುತ್ತದೆ.
ಯೆಹೋವನು ಲೆಬನೋನಿನ ದೇವದಾರು ವೃಕ್ಷಗಳನ್ನೂ ಮುರಿದುಹಾಕುವನು.
6 ಯೆಹೋವನು ಲೆಬನೋನನ್ನು ನಡುಗಿಸಲು ಅದು ನರ್ತಿಸುತ್ತಿರುವ ಎಳೆಕರುವಿನಂತೆ ಕಾಣುತ್ತದೆ;
ಸಿರ್ಯೋನ್ ಪರ್ವತವು ಕಂಪಿಸುವಾಗ ಕುಣಿದಾಡುವ ಎಳೆ ಹೋರಿಯಂತೆ ಕಾಣುತ್ತದೆ.
7 ಯೆಹೋವನ ಗರ್ಜನಕ್ಕೆ ಮಿಂಚುಗಳು ಥಳಥಳನೆ ಹೊಳೆಯುತ್ತವೆ.
8 ಯೆಹೋವನ ಗರ್ಜನದಿಂದ ಅರಣ್ಯವು ಕಂಪಿಸುವುದು.
ಆತನ ಗರ್ಜನಕ್ಕೆ ಕಾದೇಶ್ ಅರಣ್ಯವು ನಡುಗುವುದು.
9 ಯೆಹೋವನ ಗರ್ಜನಕ್ಕೆ ಜಿಂಕೆಗಳು ಹೆದರಿಕೊಳ್ಳುತ್ತವೆ;
ಕಾಡಿನ ಮರಗಳು ಬರಿದಾಗುತ್ತವೆ;
ಆದರೆ ಆತನ ಆಲಯದಲ್ಲಿ ಜನರು ಆತನ ಮಹಿಮೆಯನ್ನು ಹಾಡಿಕೊಂಡಾಡುವರು.
10 ಜಲಪ್ರಳಯದ ಕಾಲದಲ್ಲೂ ಯೆಹೋವನು ರಾಜನಾಗಿದ್ದನು.
ಯೆಹೋವನು ಸದಾಕಾಲ ರಾಜನಾಗಿರುವನು.
11 ಯೆಹೋವನು ತನ್ನ ಜನರಿಗೆ ಬಲವನ್ನು ದಯಪಾಲಿಸಲಿ.
ಆತನು ತನ್ನ ಜನರಿಗೆ ಶಾಂತಿಯನ್ನು ಸ್ಥಾಪಿಸಲಿ.
1 ದಾವೀದನ ಮಗನೂ ಜೆರುಸಲೇಮಿನಲ್ಲಿ ಆಳುತ್ತಿದ್ದ ರಾಜನೂ ಆಗಿದ್ದ ಪ್ರಸಂಗಿಯ ಮಾತುಗಳು. ಪ್ರಸಂಗಿಯು ಹೇಳುವುದೇನೆಂದರೆ, 2 ವ್ಯರ್ಥವೇ ವ್ಯರ್ಥ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ! 3 ಈ ಲೋಕದಲ್ಲಿ ಮನುಷ್ಯರು ಪಡುವ ಪ್ರಯಾಸದಿಂದ ಅವರಿಗೇನು ಲಾಭ?
ಪ್ರಕೃತಿಯಲ್ಲಿ ಬದಲೇನೂ ಇಲ್ಲ
4 ಒಂದು ತಲೆಮಾರು ಹೋಗಿ ಮತ್ತೊಂದು ತಲೆಮಾರು ಬರುವುದು. ಆದರೆ ಭೂಮಿ ಎಂದೆಂದಿಗೂ ಮುಂದುವರಿಯುವುದು. 5 ಸೂರ್ಯನು ಏರುವನು ಮತ್ತು ಇಳಿಯುವನು; ಬಳಿಕ ಅದೇ ಸ್ಥಳದಲ್ಲಿ ಮತ್ತೆ ಏರಲು ಅವಸರಪಡುವನು.
6 ಗಾಳಿಯು ದಕ್ಷಿಣಕ್ಕೆ ಬೀಸುವುದು; ನಂತರ ಉತ್ತರಕ್ಕೆ ತಿರುಗಿಕೊಳ್ಳುವುದು; ಅದು ತಿರುತಿರುಗುತ್ತಾ ಹೋಗಿ ತಿರುತಿರುಗುತ್ತಾ ಬರುವುದು.
7 ನದಿಗಳು ಎಲ್ಲಿಗೆ ಹರಿದುಹೋಗುತ್ತವೋ ಅಲ್ಲಿಗೇ ತಿರಿಗಿ ಹೋಗುವವು. ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತಲೇ ಇರುತ್ತವೆ; ಆದರೂ ಸಮುದ್ರವು ತುಂಬುವುದಿಲ್ಲ.
8 ಮಾತುಗಳಿಂದ ಯಾವುದನ್ನೂ ಸಂಪೂರ್ಣವಾಗಿ ವಿವರಿಸಲು ಸಾಧ್ಯವಿಲ್ಲ; ಆದರೂ ಜನರು ಮಾತಾಡುತ್ತಲೇ ಇರುವರು. ನಮ್ಮ ಕಿವಿಗಳು ಮಾತುಗಳನ್ನು ಕೇಳುತ್ತಲೇ ಇರುತ್ತವೆ; ಆದರೂ ನಮ್ಮ ಕಿವಿಗಳು ತುಂಬುವುದಿಲ್ಲ. ನಮ್ಮ ಕಣ್ಣುಗಳು ನೋಡುತ್ತಲೇ ಇರುತ್ತವೆ; ಆದರೂ ಅವು ತುಂಬುವುದಿಲ್ಲ.
ಲೋಕದಲ್ಲಿ ಹೊಸದೇನೂ ಇಲ್ಲ
9 ಇದ್ದದ್ದೇ ಇರುವುದು; ನಡೆದದ್ದೇ ನಡೆಯುವುದು. ಲೋಕದಲ್ಲಿ ಹೊಸದೇನೂ ಇಲ್ಲ.
10 “ಇಗೋ, ಇದು ಹೊಸದು!” ಎಂದು ಒಬ್ಬನು ಹೇಳಬಹುದು. ಆದರೆ ಅದು ಸಹ ಮೊದಲಿಂದ ಇಲ್ಲಿ ಇದ್ದದ್ದೇ. ನಮಗಿಂತ ಮೊದಲೇ ಅದು ಇಲ್ಲಿತ್ತು.
11 ಬಹುಕಾಲದ ಹಿಂದಿನ ಘಟನೆಗಳನ್ನು ಜನರು ಜ್ಞಾಪಿಸಿಕೊಳ್ಳುವುದಿಲ್ಲ. ಈಗ ನಡೆಯುತ್ತಿರುವ ಸಂಗತಿಗಳನ್ನು ಮುಂದಿನ ಕಾಲದ ಜನರು ಜ್ಞಾಪಿಸಿಕೊಳ್ಳುವುದಿಲ್ಲ. ಹೀಗೆ, ತಮಗಿಂತ ಮುಂಚೆ ಇದ್ದವರು ಮಾಡಿದ್ದನ್ನು ಜನರು ಜ್ಞಾಪಿಸಿಕೊಳ್ಳುವುದಿಲ್ಲ.
ದೇವರ ಶಕ್ತಿ ಮತ್ತು ಕ್ರಿಸ್ತನ ಜ್ಞಾನ
18 ನಾಶನ ಮಾರ್ಗದಲ್ಲಿರುವ ಜನರಿಗೆ ಶಿಲುಬೆಯ ಉಪದೇಶವು ಮೂರ್ಖತನವಾಗಿದೆ. ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗಾದರೋ ಅದು ದೇವರ ಶಕ್ತಿಯಾಗಿದೆ. 19 ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ:
“ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು.
ಬುದ್ಧಿವಂತರ ಬುದ್ಧಿಯನ್ನು ಬೆಲೆಬಾಳದಂತೆ ಮಾಡುವೆನು.”(A)
20 ಜ್ಞಾನಿಯು ಎಲ್ಲಿದ್ದಾನೆ? ವಿದ್ಯಾವಂತನು ಎಲ್ಲಿದ್ದಾನೆ? ಈ ಕಾಲದ ತತ್ವಜ್ಞಾನಿಯು ಎಲ್ಲಿದ್ದಾನೆ? ದೇವರು ಲೋಕದ ಜ್ಞಾನವನ್ನು ಮೂರ್ಖತನವನ್ನಾಗಿ ಮಾಡಿದ್ದಾನೆ. 21 ಇದು ದೇವರ ಜ್ಞಾನದ ಸಂಕಲ್ಪವಾಗಿತ್ತು. ಲೋಕವು ತನ್ನ ಸ್ವಂತ ಜ್ಞಾನದ ಮೂಲಕವಾಗಿ ದೇವರನ್ನು ತಿಳಿದುಕೊಂಡಿರಲಿಲ್ಲ. ಆದ್ದರಿಂದ ಮೂರ್ಖತನದಂತೆ ತೋರುವ ಸಂದೇಶದ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಒಳ್ಳೆಯದೆನಿಸಿತು.
22 ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ. ಗ್ರೀಕರಿಗೆ ಜ್ಞಾನವು ಬೇಕಾಗಿದೆ. 23 ನಾವಾದರೋ, ಶಿಲುಬೆಗೇರಿಸಲ್ಪಟ್ಟ ಕ್ರಿಸ್ತನ ಕುರಿತಾಗಿ ಬೋಧಿಸುತ್ತೇವೆ. ಇದು ಯೆಹೂದ್ಯರಿಗೆ ದೊಡ್ಡ ಸಮಸ್ಯೆಯಾಗಿದೆ; ಯೆಹೂದ್ಯರಲ್ಲದ ಜನರಿಗೆ ಮೂರ್ಖತನದಂತೆ ತೋರುತ್ತದೆ. 24 ದೇವರಿಂದ ಕರೆಯಲ್ಪಟ್ಟಿರುವ ಜನರು ಯೆಹೂದ್ಯರಾಗಿದ್ದರೂ ಯೆಹೂದ್ಯರಲ್ಲದವರಾಗಿದ್ದರೂ ಅವರಿಗೆ ಕ್ರಿಸ್ತನು ದೇವರ ಶಕ್ತಿಯಾಗಿದ್ದಾನೆ; ಮತ್ತು ದೇವರ ಜ್ಞಾನವಾಗಿದ್ದಾನೆ. 25 ದೇವರ ಮೂಢತನವು ಸಹ ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾಗಿದೆ. ದೇವರ ಬಲಹೀನತೆಯು ಸಹ ಮನುಷ್ಯರ ಬಲಕ್ಕಿಂತಲೂ ಹೆಚ್ಚು ಶಕ್ತಿಯುತವಾಗಿದೆ.
26 ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದಿರಿ ಎಂದು ಜ್ಞಾಪಿಸಿಕೊಳ್ಳಿರಿ. ಲೋಕದ ಎಣಿಕೆಯಲ್ಲಿ ನಿಮ್ಮಲ್ಲಿ ಅನೇಕರು ಜ್ಞಾನಿಗಳಾಗಿರಲಿಲ್ಲ; ಅಧಿಕಾರಿಗಳಾಗಿರಲಿಲ್ಲ; ಪ್ರಾಮುಖ್ಯವಾದ ಕುಟುಂಬಗಳಿಗೆ ಸೇರಿದವರಾಗಿರಲಿಲ್ಲ. 27 ಆದರೆ ದೇವರು ಈ ಲೋಕದ ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಮೂಢರನ್ನು ಆರಿಸಿಕೊಂಡಿದ್ದಾನೆ; ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಬಲಹೀನರನ್ನು ಆರಿಸಿಕೊಂಡಿದ್ದಾನೆ. 28 ಲೋಕವು ಯಾವುದನ್ನು ಮುಖ್ಯವಲ್ಲವೆಂದು ಯೋಚಿಸುತ್ತದೆಯೋ ಯಾವುದನ್ನು ದ್ವೇಷಿಸುತ್ತದೆಯೋ ಮತ್ತು ನಿಷ್ಪ್ರಯೋಜಕವೆಂದು ಪರಿಗಣಿಸುತ್ತದೆಯೋ ಅದನ್ನು ದೇವರು ಆರಿಸಿಕೊಂಡನು. ಲೋಕವು ಯಾವುದನ್ನು ಮುಖ್ಯವೆಂದು ಯೋಚಿಸುತ್ತದೊ ಅದನ್ನು ನಾಶಪಡಿಸಲು ದೇವರು ಹೀಗೆ ಮಾಡಿದನು. 29 ಹೀಗಿರಲು ದೇವರ ಮುಂದೆ ಹೆಮ್ಮೆಪಡಲು ಯಾರಿಗೂ ಆಸ್ಪದವಿಲ್ಲ. 30 ನಿಮ್ಮನ್ನು ಕ್ರಿಸ್ತ ಯೇಸುವಿನಲ್ಲಿ ಒಂದು ಭಾಗವನ್ನಾಗಿ ಮಾಡಿದಾತನು ದೇವರೇ. ಕ್ರಿಸ್ತನು ನಮಗಾಗಿ ದೇವರಿಂದ ಬಂದ ಜ್ಞಾನವಾಗಿದ್ದಾನೆ. ನಾವು ನೀತಿವಂತರಾಗಿರುವುದಕ್ಕೆ, ಪಾಪದಿಂದ ಬಿಡುಗಡೆಯಾಗಿರುವುದಕ್ಕೆ ಮತ್ತು ಪವಿತ್ರರಾಗಿರುವುದಕ್ಕೆ ಕ್ರಿಸ್ತನೇ ಕಾರಣನಾಗಿದ್ದಾನೆ. 31 ಆದ್ದರಿಂದ ಪವಿತ್ರ ಗ್ರಂಥವು ಹೇಳುವಂತೆ, “ಹೆಮ್ಮೆಪಡುವವನು ಪ್ರಭುವಿನಲ್ಲಿ ಮಾತ್ರ ಹೆಮ್ಮೆಪಡಬೇಕು.”
Kannada Holy Bible: Easy-to-Read Version. All rights reserved. © 1997 Bible League International