Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 29

ರಚನೆಗಾರ: ದಾವೀದ.

29 ದೇವಪುತ್ರರೇ,[a] ಯೆಹೋವನನ್ನು ಸ್ತುತಿಸಿರಿ!
    ಆತನ ಮಹಿಮೆಯನ್ನೂ ಶಕ್ತಿಯನ್ನೂ ಸ್ತುತಿಸಿರಿ.
ಯೆಹೋವನನ್ನು ಸ್ತುತಿಸುತ್ತಾ ಆತನ ಹೆಸರನ್ನು ಘನಪಡಿಸಿರಿ.
    ಪರಿಶುದ್ಧ ವಸ್ತ್ರಗಳನ್ನು ಧರಿಸಿಕೊಂಡು ಆತನನ್ನು ಆರಾಧಿಸಿರಿ.[b]
ಯೆಹೋವನ ಸ್ವರವು ಸಮುದ್ರದ ಮೇಲೆ ಕೇಳಿ ಬರುವುದು.
    ಮಹಾಸಾಗರದ ಮೇಲಿನ ಗುಡುಗಿನಂತೆ ಮಹಿಮಾಸ್ವರೂಪನಾದ ದೇವರ ಸ್ವರವು ಕೇಳಿಬರುವುದು.
ಯೆಹೋವನ ಸ್ವರವು
    ಆತನ ಶಕ್ತಿಯನ್ನೂ ಮಹಿಮೆಯನ್ನೂ ತೋರ್ಪಡಿಸುವುದು.
ಯೆಹೋವನ ಸ್ವರವು ದೇವದಾರು ವೃಕ್ಷಗಳನ್ನು ತುಂಡುತುಂಡು ಮಾಡುತ್ತದೆ.
    ಯೆಹೋವನು ಲೆಬನೋನಿನ ದೇವದಾರು ವೃಕ್ಷಗಳನ್ನೂ ಮುರಿದುಹಾಕುವನು.
ಯೆಹೋವನು ಲೆಬನೋನನ್ನು ನಡುಗಿಸಲು ಅದು ನರ್ತಿಸುತ್ತಿರುವ ಎಳೆಕರುವಿನಂತೆ ಕಾಣುತ್ತದೆ;
    ಸಿರ್ಯೋನ್ ಪರ್ವತವು ಕಂಪಿಸುವಾಗ ಕುಣಿದಾಡುವ ಎಳೆ ಹೋರಿಯಂತೆ ಕಾಣುತ್ತದೆ.
ಯೆಹೋವನ ಗರ್ಜನಕ್ಕೆ ಮಿಂಚುಗಳು ಥಳಥಳನೆ ಹೊಳೆಯುತ್ತವೆ.
ಯೆಹೋವನ ಗರ್ಜನದಿಂದ ಅರಣ್ಯವು ಕಂಪಿಸುವುದು.
    ಆತನ ಗರ್ಜನಕ್ಕೆ ಕಾದೇಶ್ ಅರಣ್ಯವು ನಡುಗುವುದು.
ಯೆಹೋವನ ಗರ್ಜನಕ್ಕೆ ಜಿಂಕೆಗಳು ಹೆದರಿಕೊಳ್ಳುತ್ತವೆ;
    ಕಾಡಿನ ಮರಗಳು ಬರಿದಾಗುತ್ತವೆ;
    ಆದರೆ ಆತನ ಆಲಯದಲ್ಲಿ ಜನರು ಆತನ ಮಹಿಮೆಯನ್ನು ಹಾಡಿಕೊಂಡಾಡುವರು.

10 ಜಲಪ್ರಳಯದ ಕಾಲದಲ್ಲೂ ಯೆಹೋವನು ರಾಜನಾಗಿದ್ದನು.
    ಯೆಹೋವನು ಸದಾಕಾಲ ರಾಜನಾಗಿರುವನು.
11 ಯೆಹೋವನು ತನ್ನ ಜನರಿಗೆ ಬಲವನ್ನು ದಯಪಾಲಿಸಲಿ.
    ಆತನು ತನ್ನ ಜನರಿಗೆ ಶಾಂತಿಯನ್ನು ಸ್ಥಾಪಿಸಲಿ.

ಪ್ರಸಂಗಿ 2:1-11

“ಸುಖವು” ನೀತಿಮಾರ್ಗಕ್ಕೆ ನಡೆಸುವುದೇ?

ನಾನು ನನ್ನ ಹೃದಯದಲ್ಲಿ, “ಬಾ, ನಿನ್ನನ್ನು ಸುಖದ ಮೂಲಕ ಪರೀಕ್ಷಿಸುವೆನು; ಆಗ ನೀನು ನೀತಿಮಾರ್ಗವನ್ನು ಕಲಿತುಕೊಳ್ಳುವೆ” ಎಂದುಕೊಂಡೆನು. ಆದರೆ ಇದು ಸಹ ವ್ಯರ್ಥವೆಂದು ಕಂಡುಕೊಂಡೆನು. ನಗೆಯು ಹುಚ್ಚುತನ. ಸುಖದಿಂದ ಪ್ರಯೋಜನವೇನು? ಅಂದುಕೊಂಡೆನು.

ಮನುಷ್ಯರು ತಮ್ಮ ಕ್ಷಣಿಕ ಜೀವಮಾನದಲ್ಲಿ ಮಾಡತಕ್ಕ ಒಳ್ಳೆಯದನ್ನು ತಿಳಿದುಕೊಳ್ಳಬೇಕೆಂದು ನನ್ನ ಮನಸ್ಸನ್ನು ಜ್ಞಾನದಿಂದ ತುಂಬಿಸಿದೆ; ದೇಹವನ್ನು ದ್ರಾಕ್ಷಾರಸದಿಂದ ತುಂಬಿಸಿದೆ; ಮೂಢತನವನ್ನು ಅವಲಂಭಿಸಿಕೊಂಡೆ.

ದುಡಿಮೆಯಿಂದ ಸಂತೋಷವಾಗುವುದೇ?

ದೊಡ್ಡಕಾರ್ಯಗಳನ್ನು ಮಾಡಲಾರಂಭಿಸಿದೆ; ನನಗೋಸ್ಕರ ಮನೆಗಳನ್ನು ಕಟ್ಟಿಸಿದೆ; ದ್ರಾಕ್ಷಿತೋಟಗಳನ್ನು ಮಾಡಿಸಿದೆ; ತೋಟಗಳನ್ನೂ ಉದ್ಯಾನವನಗಳನ್ನೂ ಮಾಡಿಸಿದೆ; ಎಲ್ಲಾ ಬಗೆಯ ಹಣ್ಣಿನ ಮರಗಳನ್ನು ನೆಡಿಸಿದೆ. ನೀರಿನ ಕೊಳಗಳನ್ನು ಮಾಡಿಸಿ ಮರಗಳಿಗೆ ನೀರನ್ನು ಹಾಯಿಸಿದೆ. ಪುರುಷರನ್ನೂ ಸ್ತ್ರೀಯರನ್ನೂ ಗುಲಾಮರನ್ನಾಗಿ ಕೊಂಡುಕೊಂಡೆ. ನನ್ನ ಮನೆಯಲ್ಲೇ ಹುಟ್ಟಿದ ಗುಲಾಮರೂ ನನಗಿದ್ದರು. ನನಗೆ ದನದ ಹಿಂಡುಗಳೂ ಕುರಿಮಂದೆಗಳೂ ಇದ್ದವು. ಜೆರುಸಲೇಮಿನಲ್ಲಿ ಇದ್ದವರೆಲ್ಲರಿಗಿಂತಲೂ ಹೆಚ್ಚು ವಸ್ತುಗಳನ್ನು ನಾನು ಪಡೆದಿದ್ದೆ.

ಇದಲ್ಲದೆ ಬೆಳ್ಳಿಬಂಗಾರಗಳನ್ನು ನನಗೋಸ್ಕರ ಸಂಗ್ರಹಿಸಿದೆ; ರಾಜರುಗಳಿಂದಲೂ ಅವರ ದೇಶಗಳಿಂದಲೂ ಭಂಡಾರಗಳನ್ನು ತೆಗೆದುಕೊಂಡೆ. ನನಗೋಸ್ಕರ ಹಾಡಲು ಗಾಯಕಗಾಯಕಿಯರಿದ್ದರು. ನನ್ನನ್ನು ಸಂತೋಷಪಡಿಸಲು ಅನೇಕ ಉಪಪತ್ನಿಯರಿದ್ದರು. ಮನುಷ್ಯನು ಬಯಸಬಹುದಾದ ಪ್ರತಿಯೊಂದನ್ನೂ ನಾನು ಪಡೆದಿದ್ದೆ.

ನಾನು ಬಹು ಐಶ್ವರ್ಯವಂತನಾದೆ; ಪ್ರಸಿದ್ಧನಾದೆ. ನನಗಿಂತ ಮೊದಲು ಜೆರುಸಲೇಮಿನಲ್ಲಿದ್ದ ಎಲ್ಲರಿಗಿಂತಲೂ ನಾನು ದೊಡ್ಡವನಾದೆ. ನನಗೆ ಸಹಾಯಕ್ಕಾಗಿ ಯಾವಾಗಲೂ ನನ್ನಲ್ಲಿ ಜ್ಞಾನವಿತ್ತು. 10 ನನ್ನ ಕಣ್ಣುಗಳು ಬಯಸಿದ್ದನ್ನೆಲ್ಲ ನನಗೋಸ್ಕರ ಪಡೆದುಕೊಂಡೆನು. ಯಾವುದೇ ಸುಖದಿಂದಾಗಲಿ ನನ್ನ ಹೃದಯವನ್ನು ನಾನು ತಡೆಹಿಡಿಯಲಿಲ್ಲ; ಯಾಕೆಂದರೆ ನನ್ನ ಕಾರ್ಯಗಳಲ್ಲಿ ನನ್ನ ಹೃದಯವು ಸಂತೋಷಗೊಂಡಿತ್ತು. ನನ್ನ ಪ್ರಯಾಸದ ಫಲವು ಅದೊಂದೇ.

11 ನನ್ನ ಕಾರ್ಯಗಳನ್ನೂ ನನ್ನ ಪ್ರಯಾಸವನ್ನೂ ಆಲೋಚಿಸಿದೆ. ಗಾಳಿಯನ್ನು ಹಿಂದಟ್ಟಿದ ಹಾಗೆ ಅದೆಲ್ಲಾ ವ್ಯರ್ಥವೆಂದು ಕಂಡುಕೊಂಡೆ. ನಮ್ಮ ಈ ಜೀವಮಾನದ ಯಾವ ಕೆಲಸಗಳಿಂದಲೂ ಲಾಭವಿಲ್ಲ.

1 ಕೊರಿಂಥದವರಿಗೆ 2:1-10

ಶಿಲುಬೆಗೆರಿಸಲ್ಪಟ್ಟ ಕ್ರಿಸ್ತನ ಕುರಿತಾದ ಸಂದೇಶ

ಪ್ರಿಯ ಸಹೋದರ ಸಹೋದರಿಯರೇ, ನಾನು ನಿಮ್ಮ ಬಳಿಗೆ ಬಂದಿದ್ದಾಗ, ನಾನು ನಿಮಗೆ ದೇವರ ಸತ್ಯವನ್ನು ತಿಳಿಸಿದೆನು. ಆದರೆ ನಾನು ನಾಜೂಕಾದ ಪದಗಳನ್ನಾಗಲಿ ಮಹಾ ಜ್ಞಾನವನ್ನಾಗಲಿ ಉಪಯೋಗಿಸಲಿಲ್ಲ. ನಾನು ನಿಮ್ಮೊಂದಿಗಿದ್ದಾಗ ಯೇಸು ಕ್ರಿಸ್ತನ ಮತ್ತು ಆತನ ಶಿಲುಬೆಯ ಮೇಲಿನ ಮರಣವನ್ನೇ ಹೊರತು ಬೇರೆಲ್ಲಾ ವಿಷಯಗಳನ್ನು ಮರೆತುಬಿಡಲು ನಿರ್ಧರಿಸಿದೆನು. ನಾನು ನಿಮ್ಮ ಬಳಿಗೆ ಬಂದಿದ್ದಾಗ ಬಲಹೀನನಾಗಿದ್ದೆನು; ಭಯದಿಂದ ನಡುಗುತ್ತಿದ್ದೆನು. ನನ್ನ ಉಪದೇಶವಾಗಲಿ ಮಾತುಕತೆಯಾಗಲಿ ಜನರನ್ನು ಒತ್ತಾಯಿಸುವಂಥ ಜ್ಞಾನವಾಕ್ಯಗಳನ್ನು ಒಳಗೊಂಡಿರಲಿಲ್ಲ. ಆದರೆ ಪವಿತ್ರಾತ್ಮನು ಕೊಡುವ ಶಕ್ತಿಯೇ ನನ್ನ ಉಪದೇಶಕ್ಕೆ ಆಧಾರವಾಗಿತ್ತು. ನಿಮ್ಮ ನಂಬಿಕೆಯು ಮನುಷ್ಯನ ಜ್ಞಾನದ ಮೇಲೆ ಆಧಾರಗೊಂಡಿರದೆ ದೇವರ ಶಕ್ತಿಯ ಮೇಲೆ ಆಧಾರಗೊಂಡಿರಬೇಕೆಂದು ನಾನು ಹೀಗೆ ಮಾಡಿದೆನು.

ದೇವರ ಜ್ಞಾನ

ಪರಿಣತರಾದ ಜನರಿಗೆ ನಾವು ಜ್ಞಾನವನ್ನೇ ಉಪದೇಶಿಸುತ್ತೇವೆ. ಇದು ಇಹಲೋಕದ ಜ್ಞಾನವೂ ಅಲ್ಲ. ಅಧಿಪತಿಗಳ ಜ್ಞಾನವೂ ಅಲ್ಲ. ಈ ಲೋಕದ ಅಧಿಪತಿಗಳು ತಮ್ಮ ಅಧಿಕಾರವನ್ನು ಕಳೆದುಕೊಳ್ಳುವವರಾಗಿದ್ದಾರೆ. ನಾವಾದರೋ ದೇವರ ರಹಸ್ಯವಾದ ಜ್ಞಾನವನ್ನೇ ಹೇಳುತ್ತೇವೆ. ಈ ಜ್ಞಾನವನ್ನು ಜನರಿಗೆ ಮರೆಮಾಡಲಾಗಿದೆ. ದೇವರು ನಮ್ಮ ಮಹಿಮೆಗಾಗಿ ಈ ಜ್ಞಾನವನ್ನು ಲೋಕವು ಆರಂಭವಾಗುವುದಕ್ಕಿಂತ ಮೊದಲೇ ಯೋಜಿಸಿದ್ದನು. ಈ ಲೋಕದ ಯಾವ ಅಧಿಪತಿಗಳೂ ಈ ಜ್ಞಾನವನ್ನು ಅರ್ಥಮಾಡಿಕೊಳ್ಳಲಿಲ್ಲ. ಅವರು ಅರ್ಥಮಾಡಿಕೊಂಡಿದ್ದರೆ, ಮಹಿಮೆಯುಳ್ಳ ಪ್ರಭುವನ್ನು ಶಿಲುಬೆಗೇರಿಸುತ್ತಿರಲಿಲ್ಲ. ಪವಿತ್ರಗ್ರಂಥದಲ್ಲಿ ಬರೆದಿರುವಂತೆಯೇ ಇದಾಯಿತು:

“ದೇವರು ತನ್ನನ್ನು ಪ್ರೀತಿಸುವ ಜನರಿಗೆ ಸಿದ್ಧಪಡಿಸಿರುವುದನ್ನು
    ಯಾವ ಕಣ್ಣೂ ಕಾಣಲಿಲ್ಲ.
ಯಾವ ಕಿವಿಯೂ ಕೇಳಲಿಲ್ಲ.
    ಯಾವ ವ್ಯಕ್ತಿಯೂ ಊಹಿಸಿಕೊಳ್ಳಲಿಲ್ಲ.”(A)

10 ಆದರೆ ದೇವರು ತನ್ನ ಪವಿತ್ರಾತ್ಮನ ಮೂಲಕ ನಮಗೆ ಈ ಸಂಗತಿಗಳನ್ನು ಪ್ರಕಟಿಸಿದನು.

ಪವಿತ್ರಾತ್ಮನು ಸಕಲವನ್ನೂ ದೇವರ ಅಗಾಧವಾದ ರಹಸ್ಯಗಳನ್ನೂ ತಿಳಿದಿದ್ದಾನೆ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International