Revised Common Lectionary (Semicontinuous)
118 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ.
ಆತನು ಒಳ್ಳೆಯವನು.
ಆತನ ಪ್ರೀತಿಯು ಶಾಶ್ವತವಾದದ್ದು!
2 ಇಸ್ರೇಲರೇ,
“ಆತನ ಪ್ರೀತಿ ಶಾಶ್ವತವಾದದ್ದು” ಎಂದು ಹೇಳಿರಿ.
14 ನನ್ನ ಬಲವೂ ಜಯಗೀತೆಯೂ ಯೆಹೋವನೇ.
ಆತನೇ ನನ್ನನ್ನು ರಕ್ಷಿಸುವನು!
15 ಜಯೋತ್ಸವವು ನೀತಿವಂತರ ಮನೆಗಳಲ್ಲಿ ಕೇಳಿಬರುತ್ತಿದೆ.
ಯೆಹೋವನು ತನ್ನ ಮಹಾಶಕ್ತಿಯನ್ನು ಮತ್ತೆ ತೋರಿಸಿದ್ದಾನೆ.
16 ಯೆಹೋವನ ಬಲಗೈ ಜಯಗಳಿಸಿದೆ.
ಯೆಹೋವನು ತನ್ನ ಮಹಾಶಕ್ತಿಯನ್ನು ಮತ್ತೆ ತೋರಿದ್ದಾನೆ.
17 ನಾನು ಸಾಯುವುದಿಲ್ಲ;
ನಾನು ಜೀವದಿಂದಿದ್ದು ಯೆಹೋವನ ಕಾರ್ಯಗಳ ಕುರಿತು ಹೇಳುತ್ತೇನೆ.
18 ಯೆಹೋವನು ನನ್ನನ್ನು ಶಿಕ್ಷಿಸಿದರೂ
ಸಾವಿಗೀಡುಮಾಡಲಿಲ್ಲ.
19 ನೀತಿಯ ಬಾಗಿಲುಗಳೇ, ನನಗೋಸ್ಕರ ತೆರೆಯಿರಿ,
ನಾನು ಒಳಗೆ ಬಂದು ಯೆಹೋವನನ್ನು ಆರಾಧಿಸುತ್ತೇನೆ.
20 ಅವು ಯೆಹೋವನ ಬಾಗಿಲುಗಳು.
ನೀತಿವಂತರು ಮಾತ್ರ ಆ ಬಾಗಿಲುಗಳ ಮೂಲಕ ಹೋಗಬಲ್ಲರು.
21 ಯೆಹೋವನೇ, ನನ್ನ ಪ್ರಾರ್ಥನೆಗೆ ನೀನು ಉತ್ತರಿಸಿ
ನನ್ನನ್ನು ರಕ್ಷಿಸಿದ್ದಕ್ಕೋಸ್ಕರ ನಿನಗೆ ಕೃತಜ್ಞತಾಸ್ತುತಿ ಮಾಡುವೆನು.
22 ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು.
23 ಇದು ಯೆಹೋವನಿಂದಲೇ ಆಯಿತು.
ನಮಗಂತೂ ಇದು ಆಶ್ಚರ್ಯಕರವಾಗಿದೆ!
24 ಈ ದಿನವನ್ನು ಮಾಡಿದಾತನು ಯೆಹೋವನೇ.
ಇಂದೇ ನಾವು ಉಲ್ಲಾಸದಿಂದ ಆನಂದಿಸೋಣ.
ದೇವರ ಪವಿತ್ರ ಪೆಟ್ಟಿಗೆಯನ್ನು ಜೆರುಸಲೇಮಿಗೆ ತಂದರು
6 ಇಸ್ರೇಲಿನಲ್ಲಿ ಆರಿಸಲ್ಪಟ್ಟ ಮೂವತ್ತು ಸಾವಿರ ಮಂದಿಯನ್ನು ದಾವೀದನು ಮತ್ತೆ ಒಟ್ಟುಗೂಡಿಸಿದನು. 2 ಆಗ ದಾವೀದನು ತನ್ನ ಜನರೊಂದಿಗೆ ಯೆಹೂದದ ಬಾಳಾ ಎಂಬಲ್ಲಿಗೆ ಹೋದನು. ಯೆಹೂದದ ಬಾಳಾ ಎಂಬ ಸ್ಥಳದಲ್ಲಿದ್ದ ಪವಿತ್ರ ಪೆಟ್ಟಿಗೆಯನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದನು. ಯೆಹೋವನನ್ನು ಆರಾಧಿಸುವುದಕ್ಕಾಗಿ ಜನರು ಪವಿತ್ರ ಪೆಟ್ಟಿಗೆಯ ಬಳಿ ಹೋಗುತ್ತಿದ್ದರು. ಪವಿತ್ರ ಪೆಟ್ಟಿಗೆಯು ಯೆಹೋವನ ಪೀಠದಂತಿತ್ತು. ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿ ಕೆರೂಬಿಗಳಿದ್ದವು. ಯೆಹೋವನು ರಾಜನಂತೆ ದೂತರ ಮೇಲೆ ಆಸೀನನಾಗಿದ್ದನು. 3 ದಾವೀದನ ಜನರು ಪವಿತ್ರ ಪೆಟ್ಟಿಗೆಯನ್ನು ಹೊಸಬಂಡಿಯ ಮೇಲಿಟ್ಟರು. ಅವರು ಬೆಟ್ಟದ ಮೇಲಿರುವ ಅಬೀನಾದಾಬನ ಮನೆಯಿಂದ ದೇವರ ಪವಿತ್ರ ಪೆಟ್ಟಿಗೆಯನ್ನು ತಂದರು. ಅಬೀನಾದಾಬನ ಮಕ್ಕಳಾದ ಉಜ್ಜನೂ ಅಹಿಯೋವನೂ ಆ ಬಂಡಿಯನ್ನು ಹೊಡೆದರು.
4 ಬೆಟ್ಟದ ಮೇಲಿನ ಅಬೀನಾದಾಬನ ಮನೆಯಿಂದ ಹೊಸ ಬಂಡಿಯನ್ನು ತರುವಾಗ ಉಜ್ಜನೂ ಅಹಿಯೋವನೂ ಮುನ್ನಡೆಸಿದರು. ಈ ಬಂಡಿಯ ಮೇಲೆ ದೇವರ ಪವಿತ್ರ ಪೆಟ್ಟಿಗೆಯಿತ್ತು. ಉಜ್ಜನೂ ಬಂಡಿಯ ಮೇಲಿದ್ದನು. ಪವಿತ್ರ ಪೆಟ್ಟಿಗೆಯ ಮುಂದೆ ಅಹಿಯೋವನು ನಡೆಯುತ್ತಿದ್ದನು. 5 ದಾವೀದನು ಮತ್ತು ಇಸ್ರೇಲರೆಲ್ಲರು ಕಿನ್ನರಿ, ದಮ್ಮಡಿ, ಝಲ್ಲರಿ, ತಾಳಗಳನ್ನು ಬಾರಿಸುತ್ತಾ ಸನ್ನಿಧಿಯಲ್ಲಿ ನೃತ್ಯಮಾಡುತ್ತಿದ್ದರು. 6 ದಾವೀದನ ಜನರು ನಾಕೋನನ ಕಣಕ್ಕೆ ಬಂದಾಗ ಹಸುಗಳು ಮುಗ್ಗರಿಸಿದವು ಹಾಗೂ ದೇವರ ಪವಿತ್ರ ಪೆಟ್ಟಿಗೆಯು ಬಂಡಿಯಿಂದ ಕೆಳಗೆ ಬೀಳುವುದರಲ್ಲಿತ್ತು. ಪವಿತ್ರ ಪೆಟ್ಟಿಗೆಯು ಬೀಳದಂತೆ ಉಜ್ಜನು ಹಿಡಿದನು. 7 ಯೆಹೋವನು ಉಜ್ಜನ ಮೇಲೆ ಕೋಪಗೊಂಡು ಅವನನ್ನು ಕೊಂದನು.[a] ಉಜ್ಜನು ದೇವರಿಗೆ ಗೌರವವನ್ನು ತೋರಿಸದೆ ಪವಿತ್ರ ಪೆಟ್ಟಿಗೆಯನ್ನು ಸ್ಪರ್ಶಿಸಿದನು. ದೇವರ ಪವಿತ್ರ ಪಟ್ಟಿಗೆಯ ಹತ್ತಿರದಲ್ಲೇ ಉಜ್ಜನು ಸತ್ತನು. 8 ಯೆಹೋವನು ಉಜ್ಜನನ್ನು ಕೊಂದದ್ದರಿಂದ ದಾವೀದನು ತಳಮಳಗೊಂಡನು. ದಾವೀದನು ಆ ಸ್ಥಳವನ್ನು “ಪೆರೆಚುಜ್ಜಾ” ಎಂದು ಕರೆದನು. ಆ ಸ್ಥಳವನ್ನು ಇಂದಿಗೂ “ಪೆರೆಚುಜ್ಜಾ” ಎಂದೇ ಕರೆಯುತ್ತಾರೆ.
9 ಅಂದು ದಾವೀದನು ಯೆಹೋವನಿಗೆ ಭಯಪಟ್ಟು, “ದೇವರ ಪವಿತ್ರ ಪೆಟ್ಟಿಗೆಯನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ?” ಎಂದು ಯೋಚಿಸಿಕೊಂಡು 10 ಯೆಹೋವನ ಪವಿತ್ರ ಪೆಟ್ಟಿಗೆಯನ್ನು ದಾವೀದ ನಗರದೊಳಕ್ಕೆ ತರಲಿಲ್ಲ. ದಾವೀದನು ಪವಿತ್ರ ಪೆಟ್ಟಿಗೆಯನ್ನು ಗತ್ನ ಓಬೇದೆದೋಮನ ಮನೆಯಲ್ಲಿಟ್ಟನು. 11 ಓಬೇದೆದೋಮನ ಮನೆಯಲ್ಲಿ ಪವಿತ್ರ ಪೆಟ್ಟಿಗೆಯು ಮೂರು ತಿಂಗಳ ಕಾಲ ಇತ್ತು. ಓಬೇದೆದೋಮನನ್ನೂ ಅವನ ಕುಟುಂಬವನ್ನೂ ಯೆಹೋವನು ಆಶೀರ್ವದಿಸಿದನು.
12 ತರುವಾಯ ಜನರು ದಾವೀದನಿಗೆ, “ದೇವರ ಪವಿತ್ರ ಪೆಟ್ಟಿಗೆಯು ಓಬೇದೆದೋಮನ ಮನೆಯಲ್ಲಿರುವುದರಿಂದ ಯೆಹೋವನು ಅವನ ಕುಟುಂಬವನ್ನೂ ಅವನ ಸಮಸ್ತವನ್ನೂ ಆಶೀರ್ವದಿಸಿದನು.” ಎಂದು ಹೇಳಿದರು. ಆದ್ದರಿಂದ ದಾವೀದನು ಹೋಗಿ ಓಬೇದೆದೋಮನ ಮನೆಯಿಂದ ಪವಿತ್ರ ಪೆಟ್ಟಿಗೆಯನ್ನು ಸಂತೋಷದಿಂದ ತಂದನು. 13 ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹೊತ್ತವರು ಆರು ಹೆಜ್ಜೆಗಳನ್ನು ನಡೆದು ನಿಂತಾಗ ದಾವೀದನು ಒಂದು ಹೋರಿಯನ್ನು ಮತ್ತು ಕೊಬ್ಬಿದ ಕರುವನ್ನು ಯಜ್ಞವಾಗಿ ಅರ್ಪಿಸಿದನು. 14 ಆಗ ದಾವೀದನು ಯೆಹೋವನ ಸನ್ನಿಧಿಯಲ್ಲಿ ತನ್ನ ಶಕ್ತಿಮೀರಿ ನರ್ತಿಸಿದನು. ಅವನು ಏಫೋದನ್ನು ಧರಿಸಿದ್ದನು.
15 ಯೆಹೋವನ ಪವಿತ್ರ ಪೆಟ್ಟಿಗೆಯನ್ನು ನಗರಕ್ಕೆ ತರುವಾಗ ದಾವೀದನು ಮತ್ತು ಇಸ್ರೇಲರೆಲ್ಲರು ಸಂತೋಷದಿಂದ ಆರ್ಭಟಿಸಿದರು; ತುತ್ತೂರಿಯನ್ನು ಊದಿದರು.
ಯೇಸುವಿನ ಪುನರುತ್ಥಾನ
(ಮತ್ತಾಯ 28:1-10; ಮಾರ್ಕ 16:1-8; ಯೋಹಾನ 20:1-10)
24 ಭಾನುವಾರ ಮುಂಜಾನೆ ಇನ್ನೂ ಮೊಬ್ಬಿರುವಾಗ ಯೇಸುವಿನ ದೇಹವನ್ನಿಟ್ಟ ಸಮಾಧಿಯ ಬಳಿಗೆ ಆ ಸ್ತ್ರೀಯರು ತಾವು ಸಿದ್ಧಮಾಡಿದ ಪರಿಮಳದ್ರವ್ಯಗಳನ್ನು ತೆಗೆದುಕೊಂಡು ಬಂದರು. 2 ಬಂಡೆ ಉರಳಿಸಲ್ಪಟ್ಟಿರುವುದನ್ನು ಕಂಡ ಅವರು ಒಳಗೆ ಹೋದರು. 3 ಆದರೆ ಪ್ರಭು ಯೇಸುವಿನ ದೇಹವನ್ನು ಅವರು ಕಾಣಲಿಲ್ಲ. 4 ಸ್ತ್ರೀಯರಿಗೆ ಇದು ಅರ್ಥವಾಗದೆ ಆಶ್ಚರ್ಯಪಡುತ್ತಿರಲು, ಹೊಳೆಯುವ ಉಡುಪುಗಳನ್ನು ಧರಿಸಿಕೊಂಡಿದ್ದ ಇಬ್ಬರು (ದೇವದೂತರು) ಅವರ ಬಳಿಯಲ್ಲಿ ನಿಂತರು. 5 ಆ ಸ್ತ್ರೀಯರು ಬಹಳವಾಗಿ ಹೆದರಿ ತಮ್ಮ ಮುಖಗಳನ್ನು ನೆಲದ ಕಡೆಗೆ ಬಗ್ಗಿಸಿಕೊಂಡು ನಿಂತರು. ಆ ಮನುಷ್ಯರು, “ಬದುಕಿರುವ ವ್ಯಕ್ತಿಯನ್ನು ಇಲ್ಲಿ ಹುಡುಕುವುದೇಕೆ? ಇದು ಸತ್ತ ಜನರನ್ನು ಇಡುವ ಸ್ಥಳ! 6 ಯೇಸು ಇಲ್ಲಿಲ್ಲ. ಆತನು ಜೀವಂತವಾಗಿ ಎದ್ದಿದ್ದಾನೆ! ಆತನು ಗಲಿಲಾಯದಲ್ಲಿದ್ದಾಗ ಹೇಳಿದ ವಿಷಯ ಜ್ಞಾಪಕವಿಲ್ಲವೋ? 7 ಮನುಷ್ಯಕುಮಾರನು ಕೆಡುಕರ ವಶಕ್ಕೆ ಒಪ್ಪಿಸಲ್ಪಟ್ಟು; ಶಿಲುಬೆಯ ಮೇಲೆ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದುಬರುವನು ಎಂದು ಯೇಸು ತಿಳಿಸಲಿಲ್ಲವೇ!” ಎಂದು ಹೇಳಿದರು. 8 ಆಗ ಆ ಸ್ತ್ರೀಯರು ಯೇಸುವಿನ ಮಾತುಗಳನ್ನು ಜ್ಞಾಪಿಸಿಕೊಂಡರು.
9 ಆ ಸ್ತ್ರೀಯರು ಸಮಾಧಿಯಿಂದ ಹೊರಟು ಹನ್ನೊಂದು ಮಂದಿ ಅಪೊಸ್ತಲರ ಮತ್ತು ಇತರ ಹಿಂಬಾಲಕರ ಬಳಿಗೆ ಹೋದರು. ಆ ಸ್ತ್ರೀಯರು ಸಮಾಧಿಯ ಬಳಿ ನಡೆದ ಸಂಗತಿಗಳನ್ನೆಲ್ಲಾ ಅವರಿಗೆ ಹೇಳಿದರು. 10 ಈ ಸ್ತ್ರೀಯರು ಯಾರೆಂದರೆ: ಮಗ್ದಲದ ಮರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಮತ್ತು ಬೇರೆ ಕೆಲವು ಸ್ತ್ರೀಯರು. ನಡೆದ ಪ್ರತಿಯೊಂದನ್ನೂ ಈ ಸ್ತ್ರೀಯರು ಅಪೊಸ್ತಲರಿಗೆ ತಿಳಿಸಿದರು. 11 ಆದರೆ ಅಪೊಸ್ತಲರು ನಂಬಲಿಲ್ಲ. ಅವರಿಗೆ ಅದು ಹರಟೆಮಾತಾಗಿ ತೋರಿತು. 12 ಆದರೆ ಪೇತ್ರನು ಎದ್ದು ಇದು ನಿಜವೇ ಎಂದು ನೋಡಲು ಸಮಾಧಿಗೆ ಓಡಿಹೋದನು. ಅವನು ಒಳಗೆ ಹೋಗಿ ಬಗ್ಗಿ ನೋಡಿದಾಗ ಯೇಸುವಿನ ದೇಹಕ್ಕೆ ಸುತ್ತಿದ್ದ ಬಟ್ಟೆಯನ್ನು ಮಾತ್ರ ನೋಡಿದನು. ಕೇವಲ ಬಟ್ಟೆಯು ಅಲ್ಲಿ ಬಿದ್ದಿತ್ತು. ನಡೆದ ಈ ಸಂಗತಿಯ ಬಗ್ಗೆ ಪೇತ್ರನು ಆಶ್ಚರ್ಯಪಡುತ್ತಾ ಹೊರಟುಹೋದನು.
Kannada Holy Bible: Easy-to-Read Version. All rights reserved. © 1997 Bible League International