Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಅಪೊಸ್ತಲರ ಕಾರ್ಯಗಳು 16:16-34

ಸೆರೆಮನೆಯಲ್ಲಿ ಪೌಲ ಸೀಲರು

16 ಒಂದು ಸಲ, ನಾವು ಪ್ರಾರ್ಥನಾಸ್ಥಳಕ್ಕೆ ಹೋಗುತ್ತಿದ್ದಾಗ ಒಂದು ಸಂಗತಿ ಸಂಭವಿಸಿತು. ದಾಸಿಯೊಬ್ಬಳು ನಮ್ಮನ್ನು ಎದುರುಗೊಂಡಳು. ಆಕೆಯಲ್ಲಿ ವಿಶೇಷವಾದ ಆತ್ಮವಿತ್ತು. ಆ ಆತ್ಮದ ಶಕ್ತಿಯಿಂದ ಅವಳು ಮುಂದೆ ಸಂಭವಿಸುವ ಸಂಗತಿಗಳ ಬಗ್ಗೆ ಹೇಳುತ್ತಿದ್ದಳು. ಇದರ ಮೂಲಕವಾಗಿ ಆಕೆ ತನ್ನ ಯಜಮಾನರಿಗೆ ಬಹಳ ಹಣವನ್ನು ಗಳಿಸಿ ಕೊಡುತ್ತಿದ್ದಳು. 17 ಅವಳು ಪೌಲನನ್ನು ಮತ್ತು ನಮ್ಮನ್ನು ಹಿಂಬಾಲಿಸುತ್ತಾ, “ಈ ಜನರು ಮಹೋನ್ನತನಾದ ದೇವರ ಸೇವಕರು! ನೀವು ಹೇಗೆ ರಕ್ಷಣೆ ಹೊಂದಬಹುದೆಂಬುದನ್ನು ಅವರು ಹೇಳುತ್ತಿದ್ದಾರೆ!” ಎಂದು ಕೂಗುತ್ತಿದ್ದಳು. 18 ಹೀಗೆ ಆಕೆ ಅನೇಕ ದಿನಗಳವರೆಗೆ ಮಾಡಿದಳು. ಇದರಿಂದ ಬೇಸರಗೊಂಡ ಪೌಲನು ಹಿಂತಿರುಗಿ, ಆ ಆತ್ಮಕ್ಕೆ, “ಅವಳನ್ನು ಬಿಟ್ಟು ಹೋಗಬೇಕೆಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ!” ಎಂದು ಹೇಳಿದನು. ಆ ಕೂಡಲೇ ಆ ಆತ್ಮವು ಹೊರಬಂದಿತು.

19 ಇದನ್ನು ಕಂಡ ಅವಳ ಯಜಮಾನರು ಈಗ ಆಕೆಯಿಂದ ಹಣಗಳಿಸಲು ಸಾಧ್ಯವಿಲ್ಲವೆಂದು ಅರಿತುಕೊಂಡರು. ಆದ್ದರಿಂದ ಅವರು ಪೌಲ ಸೀಲರನ್ನು ಹಿಡಿದು ಪಟ್ಟಣದ ನ್ಯಾಯಸ್ಥಾನಕ್ಕೆ ಎಳೆದುಕೊಂಡು ಹೋದರು. ನಗರಾಧಿಕಾರಿಗಳು ಅಲ್ಲಿದ್ದರು. 20 ಆ ಜನರು ಪೌಲ ಸೀಲರನ್ನು ನ್ಯಾಯಾಧೀಶರ ಬಳಿಗೆ ತಂದು, “ಈ ಜನರು ಯೆಹೂದ್ಯರು. ಇವರು ನಮ್ಮ ಪಟ್ಟಣದಲ್ಲಿ ಗಲಭೆ ಎಬ್ಬಿಸುತ್ತಿದ್ದಾರೆ. 21 ನಿಷಿದ್ಧ ಕಾರ್ಯಗಳನ್ನು ಮಾಡುವಂತೆ ಇವರು ಜನರಿಗೆ ಹೇಳುತ್ತಿದ್ದಾರೆ. ರೋಮ್ ಪ್ರಜೆಗಳಾಗಿರುವ ನಾವು ಅಂಥ ಕಾರ್ಯಗಳನ್ನು ಮಾಡಲು ಸಾಧ್ಯವಿಲ್ಲ” ಎಂದು ಹೇಳಿದರು.

22 ಜನರು ಪೌಲ ಸೀಲರಿಗೆ ವಿರೋಧವಾಗಿದ್ದರು. ಆಗ ನಾಯಕರು ಪೌಲ ಸೀಲರ ಬಟ್ಟೆಗಳನ್ನು ಹರಿದುಹಾಕಿಸಿ ಅವರಿಬ್ಬರಿಗೂ ಕೋಲುಗಳಿಂದ ಬಲವಾಗಿ ಹೊಡೆಸಿ, ಸೆರೆಮನೆಗೆ ಹಾಕಿಸಿದರು. 23 ಬಳಿಕ ಸೆರೆಮನೆಯ ಅಧಿಕಾರಿಗೆ, “ಅವರನ್ನು ಬಹು ಎಚ್ಚರಿಕೆಯಿಂದ ಕಾಯಿರಿ!” ಎಂದು ಆಜ್ಞಾಪಿಸಿದರು. 24 ಆದ್ದರಿಂದ ಸೆರೆಮನೆಯ ಅಧಿಕಾರಿಯು ಅವರನ್ನು ಸೆರೆಮನೆಯ ಒಳಕೋಣೆಗೆ ಹಾಕಿಸಿ, ಅವರ ಕಾಲುಗಳನ್ನು ಮರದ ದಿಮ್ಮಿಗಳಿಗೆ ಬಿಗಿಸಿದನು.

25 ಸುಮಾರು ಮಧ್ಯರಾತ್ರಿಯಲ್ಲಿ ಪೌಲ ಸೀಲರು ಪ್ರಾರ್ಥನೆ ಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು. 26 ಇದ್ದಕ್ಕಿದ್ದಂತೆ ದೊಡ್ಡ ಭೂಕಂಪವಾಯಿತು. ಭೀಕರವಾಗಿದ್ದ ಅದು ಸೆರೆಮನೆಯ ಅಡಿಪಾಯವನ್ನೇ ನಡುಗಿಸಿತು. ಆಗ ಸೆರೆಮನೆಯ ಬಾಗಿಲುಗಳೆಲ್ಲಾ ತೆರೆದುಕೊಂಡವು. ಎಲ್ಲಾ ಕೈದಿಗಳ ಸರಪಣಿಗಳು ಕಳಚಿಬಿದ್ದವು. 27 ಆಗ ಸೆರೆಮನೆಯ ಅಧಿಕಾರಿಗೆ ಎಚ್ಚರವಾಯಿತು. ಸೆರೆಮನೆಯ ಬಾಗಿಲುಗಳು ತೆರೆದುಕೊಂಡಿರುವುದನ್ನು ಕಂಡು ಈಗಾಗಲೇ ಕೈದಿಗಳು ತಪ್ಪಿಸಿಕೊಂಡಿದ್ದಾರೆಂದು ಅವನು ಭಾವಿಸಿದನು. ಆದ್ದರಿಂದ ಅವನು ತನ್ನ ಕತ್ತಿಯನ್ನು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಬೇಕೆನ್ನುವಷ್ಟರಲ್ಲಿಯೇ 28 ಪೌಲನು ಅವನಿಗೆ, “ಹಾನಿ ಮಾಡಿಕೊಳ್ಳಬೇಡ! ನಾವೆಲ್ಲಾ ಇಲ್ಲೇ ಇದ್ದೇವೆ!” ಎಂದು ಕೂಗಿ ಹೇಳಿದನು.

29 ಸೆರೆಮನೆಯ ಅಧಿಕಾರಿಯು ಒಬ್ಬನಿಗೆ ದೀಪವನ್ನು ತರಬೇಕೆಂದು ಹೇಳಿದನು. ಬಳಿಕ ಅವನು ಒಳಗೆ ಓಡಿಹೋದನು. ಅವನು ನಡುಗುತ್ತಾ ಪೌಲ ಸೀಲರ ಮುಂದೆ ಕುಸಿದುಬಿದ್ದನು. 30 ಬಳಿಕ ಅವನು ಅವರನ್ನು ಹೊರಗೆ ಕರೆದುಕೊಂಡು ಬಂದು, “ಸ್ವಾಮಿಗಳೇ, ನಾನು ರಕ್ಷಣೆ ಹೊಂದಬೇಕಾದರೆ ಏನು ಮಾಡಬೇಕು?” ಎಂದು ಕೇಳಿದನು.

31 ಅವರು ಅವನಿಗೆ, “ಪ್ರಭು ಯೇಸುವಿನಲ್ಲಿ ನಂಬಿಕೆಯಿಡು. ಆಗ ನೀನು ರಕ್ಷಣೆ ಹೊಂದುವೆ ಮತ್ತು ನಿನ್ನ ಮನೆಯವರೆಲ್ಲರೂ ರಕ್ಷಣೆ ಹೊಂದುವರು” ಎಂದು ಹೇಳಿ, 32 ಅವನಿಗೂ ಅವನ ಮನೆಯವರೆಲ್ಲರಿಗೂ ಪ್ರಭುವಿನ ಸಂದೇಶವನ್ನು ತಿಳಿಸಿದರು. 33 ಆಗ ಮಧ್ಯರಾತ್ರಿ ಕಳೆದಿತ್ತು. ಆದರೂ ಅವನು ಪೌಲ ಸೀಲರನ್ನು ಕರೆದೊಯ್ದು ಅವರ ಗಾಯಗಳನ್ನು ತೊಳೆದನು. ಬಳಿಕ ಅವನು ಮತ್ತು ಅವನ ಮನೆಯವರೆಲ್ಲರೂ ದೀಕ್ಷಾಸ್ನಾನ ಮಾಡಿಸಿಕೊಂಡರು. 34 ಇದಾದ ಮೇಲೆ ಅವನು ಪೌಲ ಸೀಲರನ್ನು ಮನೆಗೆ ಕರೆದೊಯ್ದು ಅವರಿಗೆ ಊಟಮಾಡಿಸಿದನು. ಆ ಜನರೆಲ್ಲರೂ ಪ್ರಭುವಿನಲ್ಲಿ ನಂಬಿಕೆ ಇಟ್ಟದ್ದರಿಂದ ಬಹ ಸಂತೋಷಭರಿತರಾದರು.

ಕೀರ್ತನೆಗಳು 97

97 ಯೆಹೋವನು ಆಳುತ್ತಿರುವನು! ಭೂಮಿಯು ಸಂತೋಷಿಸಲಿ.
    ದೂರ ದೇಶಗಳೆಲ್ಲಾ ಹರ್ಷಿಸಲಿ.
ಕಾರ್ಮೋಡಗಳು ಆತನನ್ನು ಕವಿದುಕೊಂಡಿವೆ.
    ನೀತಿಯೂ ನ್ಯಾಯವೂ ಆತನ ರಾಜ್ಯದ ಬಲವಾಗಿವೆ.
ಬೆಂಕಿಯು ಆತನ ಮುಂದೆ ಹೋಗಿ
    ಆತನ ಶತ್ರುಗಳನ್ನು ನಾಶಮಾಡುವುದು.
ಆತನ ಮಿಂಚು ಆಕಾಶದಲ್ಲಿ ಹೊಳೆಯುತ್ತದೆ.
    ಜನರು ಅದನ್ನು ನೋಡಿ ಭಯಗೊಂಡಿದ್ದಾರೆ.
ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ
    ಬೆಟ್ಟಗಳು ಮೇಣದಂತೆ ಕರಗಿಹೋಗುತ್ತವೆ.
ಆಕಾಶಗಳೇ, ಆತನ ನೀತಿಯ ಕುರಿತು ಹೇಳಿರಿ!
    ದೇವರ ಮಹಿಮೆಯನ್ನು ಪ್ರತಿಯೊಬ್ಬನೂ ಕಾಣಲಿ!

ಜನರು ತಮ್ಮ ವಿಗ್ರಹಗಳನ್ನು ಪೂಜಿಸುವರು.
    ಅವರು ತಮ್ಮ “ದೇವರುಗಳ” ಬಗ್ಗೆ ಜಂಬಕೊಚ್ಚುವರು.
ಆದರೆ ಅವರು ನಾಚಿಕೆಗೀಡಾಗುವರು.
    ಅವರ “ದೇವರುಗಳು” ಯೆಹೋವನಿಗೆ ಅಡ್ಡಬಿದ್ದು ಆರಾಧಿಸುತ್ತವೆ.
ಚೀಯೋನೇ, ಕೇಳಿ ಸಂತೋಷಪಡು!
    ಯೆಹೂದದ ಪಟ್ಟಣಗಳೇ, ಆನಂದಿಸಿರಿ.
    ಯಾಕೆಂದರೆ ಯೆಹೋವನ ತೀರ್ಪುಗಳು ನ್ಯಾಯವಾಗಿವೆ.
ಮಹೋನ್ನತನಾದ ಯೆಹೋವನೇ, ಭೂಲೋಕದ ಸರ್ವಾಧಿಪತಿ ನೀನೇ.
    ಎಲ್ಲಾ ದೇವರುಗಳಲ್ಲಿ ನೀನೇ ಮಹೋನ್ನತನು.
10 ಯೆಹೋವನನ್ನು ಪ್ರೀತಿಸುವವರೇ, ದುಷ್ಟತನವನ್ನು ದ್ವೇಷಿಸಿರಿ.
    ದೇವರು ತನ್ನ ಭಕ್ತರನ್ನು ಸಂರಕ್ಷಿಸುವನು.
    ದೇವರು ತನ್ನ ಸದ್ಭಕ್ತರನ್ನು ಕೆಡುಕರಿಂದ ರಕ್ಷಿಸುವನು.
11 ನೀತಿವಂತರಿಗೋಸ್ಕರ ಬೆಳಕೂ ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಪ್ರಕಾಶಿಸುತ್ತವೆ.
12 ನೀತಿವಂತರೇ, ಯೆಹೋವನಲ್ಲಿ ಸಂತೋಷಪಡಿರಿ!
    ಆತನ ಪವಿತ್ರ ಹೆಸರನ್ನು ಸನ್ಮಾನಿಸಿರಿ!

ಪ್ರಕಟನೆ 22:12-14

12 “ಕೇಳು! ನಾನು ಬೇಗನೆ ಬರುತ್ತೇನೆ! ನನ್ನೊಂದಿಗೆ ಪ್ರತಿಫಲವನ್ನು ತರುತ್ತೇನೆ. ಪ್ರತಿಯೊಬ್ಬ ವ್ಯಕ್ತಿಗೂ ಅವನು ಮಾಡಿದುದಕ್ಕೆ ತಕ್ಕ ಪ್ರತಿಫಲವನ್ನು ಕೊಡುತ್ತೇನೆ. 13 ನಾನೇ ಆದಿಯೂ ಅಂತ್ಯವೂ ಮೊದಲನೆಯವನೂ ಕಡೆಯವನೂ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ.

14 “ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡ ಜನರೇ ಧನ್ಯರು. ಅವರು ಜೀವವೃಕ್ಷದ ಹಣ್ಣನ್ನು ತಿನ್ನಲು ಹಕ್ಕುಳ್ಳವರಾಗಿದ್ದಾರೆ. ಅವರು ಬಾಗಿಲುಗಳ ಮೂಲಕ ನಗರದೊಳಕ್ಕೆ ಹೋಗಬಲ್ಲರು.

ಪ್ರಕಟನೆ 22:16-17

16 “ಯೇಸುವೆಂಬ ನಾನೇ, ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ಸಾಕ್ಷಿ ನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ದಾವೀದನ ವಂಶದಲ್ಲಿ ಹುಟ್ಟಿದವನೂ ಪ್ರಕಾಶಮಾನವಾದ ಉದಯನಕ್ಷತ್ರವೂ ಆಗಿದ್ದಾನೆ.”

17 ಆತ್ಮನೂ ಮದುಮಗಳೂ, “ಬಾ!” ಎನ್ನುತ್ತಾರೆ. ಇದನ್ನು ಕೇಳುವ ಪ್ರತಿಯೊಬ್ಬ ವ್ಯಕ್ತಿಯೂ, “ಬಾ!” ಎಂದು ಹೇಳಬೇಕು. ಬಾಯಾರಿದವನು ನನ್ನ ಬಳಿಗೆ ಬರಲಿ; ಅವನಿಗೆ ಇಷ್ಟವಿದ್ದರೆ ಜೀವಜಲವನ್ನು ಉಚಿತವಾಗಿ ಪಡೆದುಕೊಳ್ಳಲಿ.

ಪ್ರಕಟನೆ 22:20-21

20 ಇವುಗಳೆಲ್ಲಾ ನಿಜವೆಂದು ಹೇಳುವಾತನು ಯೇಸುವೇ. ಈಗ ಆತನು, “ಹೌದು, ನಾನು ಬೇಗನೆ ಬರುತ್ತೇನೆ” ಎಂದು ಹೇಳುತ್ತಾನೆ.

ಆಮೆನ್! ಪ್ರಭು ಯೇಸುವೇ, ಬಾ!

21 ಪ್ರಭು ಯೇಸುವಿನ ಕೃಪೆಯು ಎಲ್ಲಾ ಜನರೊಂದಿಗಿರಲಿ.

ಯೋಹಾನ 17:20-26

20 “ನಾನು ಇವರಿಗಾಗಿಯೂ ಇವರ ವಾಕ್ಯದಿಂದ ನನ್ನಲ್ಲಿ ನಂಬಿಕೆ ಇಡುವ ಎಲ್ಲರಿಗಾಗಿಯೂ ಪ್ರಾರ್ಥಿಸುತ್ತಿದ್ದೇನೆ. 21 ತಂದೆಯೇ, ನನ್ನಲ್ಲಿ ನಂಬಿಕೆ ಇಡುವ ಎಲ್ಲಾ ಜನರು ಒಂದಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ. ನೀನು ನನ್ನಲ್ಲಿ ನೆಲೆಸಿರುವೆ ಮತ್ತು ನಾನು ನಿನ್ನಲ್ಲಿ ನೆಲೆಸಿರುವೆ. ನೀನು ನನ್ನನ್ನು ಕಳುಹಿಸಿರುವೆಯೆಂದು ಈ ಲೋಕವು ನಂಬಿಕೊಳ್ಳುವುದಕ್ಕಾಗಿ ಈ ಜನರು ಸಹ ನಮ್ಮೊಂದಿಗೆ ಒಂದಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ. 22 ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಈ ಜನರಿಗೆ ಕೊಟ್ಟಿದ್ದೇನೆ. ನೀನು ಮತ್ತು ನಾನು ಒಂದಾಗಿರುವಂತೆ ಇವರೂ ಒಂದಾಗಿರಬೇಕೆಂದು ನಾನು ಇವರಿಗೆ ಈ ಮಹಿಮೆಯನ್ನು ಕೊಟ್ಟೆನು. 23 ನಾನು ಅವರಲ್ಲಿ ಇರುವೆನು ಮತ್ತು ನೀನು ನನ್ನಲ್ಲಿರುವೆ. ಆದ್ದರಿಂದ ಅವರು ಸಂಪೂರ್ಣವಾಗಿ ಒಂದಾಗಿರುವರು. ನೀನೇ ನನ್ನನ್ನು ಕಳುಹಿಸಿರುವುದಾಗಿ ಮತ್ತು ನೀನು ನನ್ನನ್ನು ಪ್ರೀತಿಸಿದಂತೆಯೇ ಈ ಜನರನ್ನೂ ಪ್ರೀತಿಸಿರುವುದಾಗಿ ಈ ಲೋಕವು ಆಗ ತಿಳಿದುಕೊಳ್ಳುವುದು.

24 “ತಂದೆಯೇ, ನೀನು ನನಗೆ ಕೊಟ್ಟಿರುವ ಇವರು, ನಾನು ಇರುವಲ್ಲೆಲ್ಲಾ ನನ್ನೊಂದಿಗೆ ಇರಬೇಕೆಂದು ಮತ್ತು ನನ್ನ ಮಹಿಮೆಯನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲೇ ನೀನು ನನ್ನನ್ನು ಪ್ರೀತಿಸಿದ್ದರಿಂದ ನೀನೇ ನನಗೆ ಈ ಮಹಿಮೆಯನ್ನು ಕೊಟ್ಟೆ. 25 ನೀತಿಯುಳ್ಳ ತಂದೆಯೇ, ಈ ಲೋಕವು ನಿನ್ನನ್ನು ತಿಳಿದಿಲ್ಲ. ಆದರೆ ನಾನು ನಿನ್ನನ್ನು ತಿಳಿದಿರುವೆ ಮತ್ತು ನೀನೇ ನನ್ನನ್ನು ಕಳುಹಿಸಿರುವೆ ಎಂಬುದು ಈ ಜನರಿಗೆ ತಿಳಿದಿದೆ. 26 ನಾನು ನಿನ್ನ ನಿಜಸ್ವಭಾವವನ್ನು ಇವರಿಗೆ ಗೊತ್ತುಪಡಿಸಿದೆನು. ನಾನು ನಿನ್ನ ಸ್ವರೂಪವನ್ನು ಇವರಿಗೆ ಮತ್ತೆ ತೋರಿಸುವೆನು. ಆಗ ನನ್ನ ಮೇಲೆ ನಿನಗೆ ಯಾವ ಪ್ರೀತಿಯಿದೆಯೋ, ಅದೇ ಪ್ರೀತಿಯು ಇವರಲ್ಲಿಯೂ ಇರುವುದು ಮತ್ತು ನಾನು ಇವರಲ್ಲಿ ಇರುವೆನು.”

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International