Revised Common Lectionary (Semicontinuous)
24 ಯೆಹೋವನೇ, ನೀನು ಅನೇಕ ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿರುವೆ.
ನೀನು ಸೃಷ್ಟಿಸಿದ ವಸ್ತುಗಳಿಂದ ಭೂಮಿಯು ತುಂಬಿಹೋಗಿದೆ.
ನಿನ್ನ ಪ್ರತಿಯೊಂದು ಕಾರ್ಯದಲ್ಲೂ ನಿನ್ನ ಜ್ಞಾನವನ್ನು ಕಾಣಬಲ್ಲವು.
25 ಇಗೋ ವಿಶಾಲವಾದ ಸಮುದ್ರವನ್ನು ನೋಡು.
ಅದರೊಳಗೆ ಅನೇಕ ಬಗೆಯ ದೊಡ್ಡ ಜೀವಿಗಳೂ
ನಾನಾ ಬಗೆಯ ಚಿಕ್ಕ ಜೀವಿಗಳೂ ಅಸಂಖ್ಯಾತವಾಗಿವೆ.
26 ನೀನು ಸೃಷ್ಟಿಸಿದ ಲಿವ್ಯಾತಾನನು ಸಮುದ್ರದಲ್ಲಿ ಆಟವಾಡುತ್ತಿದ್ದರೂ
ಹಡಗು ಸಮುದ್ರದ ಮೇಲೆ ಸಂಚರಿಸುವುದು.
27 ಈ ಜೀವಿಗಳೆಲ್ಲಾ ನಿನ್ನನ್ನು ಅವಲಂಭಿಸಿಕೊಂಡಿವೆ.
ಅವುಗಳಿಗೆ ಸರಿಸಮಯದಲ್ಲಿ ಆಹಾರವನ್ನು ಕೊಡುವಾತನು ನೀನೇ.
28 ಸರ್ವಜೀವಿಗಳಿಗೆ ಆಹಾರವನ್ನು ಕೊಡುವಾತನು ನೀನೇ.
ನೀನು ಕೈತೆರೆದು ಒಳ್ಳೆಯ ಆಹಾರವನ್ನು ಕೊಡಲು ಅವು ತಿಂದು ತೃಪ್ತಿಯಾಗುತ್ತವೆ.
29 ನೀನು ಅವುಗಳಿಗೆ ವಿಮುಖನಾದಾಗ
ಅವು ಭಯಗೊಳ್ಳುತ್ತವೆ.
ಅವುಗಳ ಶ್ವಾಸವು ಹೋಗಿ
ಬಲಹೀನತೆಯಿಂದ ಸತ್ತು ಮತ್ತೆ ಮಣ್ಣಾಗುತ್ತವೆ.
30 ನಿನ್ನ ಜೀವಶ್ವಾಸವನ್ನು ಊದುವಾಗ ಅವು ಸೃಷ್ಟಿಯಾಗುತ್ತವೆ.
ನೀನು ಭೂಮಿಯನ್ನು ಮತ್ತೆ ನೂತನ ಪಡಿಸುವೆ.
31 ಯೆಹೋವನ ಮಹಿಮೆಯು ಶಾಶ್ವತವಾಗಿರಲಿ!
ಯೆಹೋವನು ತಾನು ಸೃಷ್ಟಿಸಿದವುಗಳಲ್ಲಿ ಆನಂದಿಸಲಿ.
32 ಆತನು ಭೂಮಿಯ ಕಡೆಗೆ ನೋಡಿದರೆ ಸಾಕು,
ಭೂಮಿಯು ನಡುಗುವುದು;
ಆತನು ಬೆಟ್ಟಗಳನ್ನು ಮುಟ್ಟಿದರೆ ಸಾಕು,
ಅವು ಜ್ವಾಲಾಮುಖಿಗಳಾಗುತ್ತವೆ.
33 ನನ್ನ ಜೀವಮಾನವೆಲ್ಲಾ ನಾನು ಯೆಹೋವನಿಗೆ ಗಾನ ಮಾಡುವೆನು.
ನಾನು ಬದುಕಿರುವವರೆಗೂ ಆತನನ್ನು ಸಂಕೀರ್ತಿಸುವೆನು.
34 ನಾನು ಹೇಳಿದ ಈ ವಿಷಯಗಳು ಆತನನ್ನು ಸಂತೋಷಗೊಳಿಸಲಿ.
ನಾನಾದರೋ ಯೆಹೋವನಲ್ಲಿ ಸಂತೋಷಿಸುವೆನು.
35 ಪಾಪಾತ್ಮರು ಭೂಮಿಯಿಂದ ಕಾಣದೆಹೋಗಲಿ.
ದುಷ್ಟರು ಎಂದೆಂದಿಗೂ ನಿರ್ಮೂಲವಾಗಲಿ.
ನನ್ನ ಆತ್ಮವೇ, ಯೆಹೋವನನ್ನು ಸ್ತುತಿಸು!
ಯೆಹೋವನನ್ನು ಕೊಂಡಾಡು!
11 ಸ್ತ್ರೀಯರೇ, ನೀವೀಗ ಶಾಂತರಾಗಿದ್ದೀರಿ. ಆದರೆ ನೀವು ಭಯಪಡುವವರಾಗಿರಬೇಕು. ನೀವು ಈಗ ಸುರಕ್ಷಿತರಾಗಿದ್ದೀರಿ, ಆದರೆ ನೀವು ಚಿಂತಿಸುವವರಾಗಿರಬೇಕು. ನಿಮ್ಮ ಒಳ್ಳೆಯ ವಸ್ತ್ರಗಳನ್ನು ತೆಗೆದಿಟ್ಟು ಶೋಕಬಟ್ಟೆಯನ್ನು ಧರಿಸಿರಿ. ಆ ಬಟ್ಟೆಗಳನ್ನು ನಿಮ್ಮ ಸೊಂಟಕ್ಕೆ ಕಟ್ಟಿಕೊಳ್ಳಿರಿ. 12 ಶೋಕವಸ್ತ್ರಗಳನ್ನು ದುಃಖದಿಂದ ತುಂಬಿದ ನಿಮ್ಮ ಎದೆಗಳ ಮೇಲೆ ಹಾಕಿಕೊಳ್ಳಿ. ನಿಮ್ಮ ಹೊಲಗಳು ನಿಷ್ಪ್ರಯೋಜಕವಾಗಿರುವದಕ್ಕಾಗಿ ಅಳಿರಿ. ನಿಮ್ಮ ದ್ರಾಕ್ಷಿತೋಟವು ಒಳ್ಳೆಯ ಫಲ ಕೊಡುತ್ತಿತ್ತು. ಆದರೆ ಈಗ ತೋಟವು ಬರಿದಾಗಿದೆ. 13 ನನ್ನ ಜನರ ದೇಶಕ್ಕಾಗಿ ಕೂಗಿರಿ. ಯಾಕೆಂದರೆ ಅದರಲ್ಲಿ ಕೇವಲ ಹಣಜಿಯೂ ಮುಳ್ಳುಗಿಡಗಳೂ ಬೆಳೆಯುತ್ತವೆ. ಒಂದು ಕಾಲದಲ್ಲಿ ಸಂತೋಷಭರಿತವಾಗಿದ್ದ ಪಟ್ಟಣಕ್ಕಾಗಿಯೂ ಎಲ್ಲಾ ಮನೆಗಳಿಗಾಗಿಯೂ ಅಳಿರಿ.
14 ಜನರು ರಾಜಧಾನಿಯನ್ನು ತೊರೆದುಬಿಡುವರು. ಅರಮನೆ, ಬುರುಜುಗಳೆಲ್ಲವೂ ನಿರ್ಜನವಾಗಿವೆ. ಜನರು ಮನೆಗಳಲ್ಲಿ ವಾಸಿಸದೆ ಗುಹೆಗಳಲ್ಲಿ ವಾಸಮಾಡುವರು. ಕಾಡುಕತ್ತೆಗಳೂ ಕುರಿಗಳೂ ನಗರದಲ್ಲಿ ವಾಸಿಸುವವು. ಪಶುಗಳು ಅಲ್ಲಿ ಹುಲ್ಲು ಮೇಯುವವು.
15-16 ದೇವರು ನಮಗೆ ತನ್ನ ಆತ್ಮವನ್ನು ಸುರಿಸುವತನಕ ಇದು ಮುಂದುವರಿಯುವದು. ಈಗ ಯಾವ ಒಳ್ಳೆಯ ಸಂಗತಿಗಳು ನಡಿಯದೆ ಇರುವದರಿಂದ ದೇಶವು ಮರುಭೂಮಿಯಂತಿದೆ. ಆದರೆ ಮುಂದಿನ ದಿವಸಗಳಲ್ಲಿ ಮರುಭೂಮಿಯು ಕರ್ಮೆಲ್ ಪ್ರಾಂತ್ಯದಂತೆ ಆಗಿ ನ್ಯಾಯಧರ್ಮಗಳು ಅಲ್ಲಿ ನೆಲೆಸುವವು. ಕರ್ಮೆಲ್ ಹಸಿರು ಕಾಡಾಗಿದ್ದು ಶುಭವು ನೆಲೆಸಿರುವುದು. 17 ಆದ್ದರಿಂದ ಅಲ್ಲಿ ಆ ಸಮಾಧಾನ ಮತ್ತು ಭದ್ರತೆ ನಿತ್ಯವೂ ಶಾಶ್ವತವಾಗಿರುವವು.
ದೇವರಾತ್ಮನು ಮತ್ತು ಮಾನವ ಸ್ವಭಾವ
16 ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಪವಿತ್ರಾತ್ಮನನ್ನು ಅನುಸರಿಸುವವರಾಗಿರಿ. ಆಗ, ನಿಮ್ಮ ಶರೀರಭಾವವು ಬಯಸುವ ಕೆಟ್ಟ ಸಂಗತಿಗಳನ್ನು ನೀವು ಮಾಡುವುದಿಲ್ಲ. 17 ನಮ್ಮ ಶರೀರಭಾವವು ದೇವರಾತ್ಮನಿಗೆ ವಿರುದ್ಧವಾದ ಸಂಗತಿಗಳನ್ನು ಬಯಸುತ್ತದೆ. ದೇವರಾತ್ಮನು ನಮ್ಮ ಶರೀರಭಾವಕ್ಕೆ ವಿರುದ್ಧವಾದ ಸಂಗತಿಗಳನ್ನು ಬಯಸುತ್ತಾನೆ. ಆದ್ದರಿಂದ ನೀವು ನಿಜವಾಗಿಯೂ ಬಯಸುವಂಥವುಗಳನ್ನು ಮಾಡಲಾಗದಂತೆ ಅವು ಒಂದಕ್ಕೊಂದು ಹೋರಾಡುತ್ತವೆ. 18 ಆದರೆ ನೀವು ನಿಮ್ಮನ್ನು ದೇವರಾತ್ಮನ ನಡೆಸುವಿಕೆಗೆ ಒಪ್ಪಿಸಿಕೊಟ್ಟರೆ ನೀವು ಧರ್ಮಶಾಸ್ತ್ರದ ಅಧೀನದಲ್ಲಿಲ್ಲ.
19 ನಮ್ಮ ಶರೀರಭಾವವು ಮಾಡುವ ಕೆಟ್ಟ ಸಂಗತಿಗಳು ಸ್ಪಷ್ಟವಾಗಿವೆ. ಜಾರತ್ವ, ಅಶುದ್ಧತ್ವ, 20 ಸುಳ್ಳುದೇವರುಗಳ ಆರಾಧನೆ, ಮಾಟಮಂತ್ರ, ದ್ವೇಷ, ಜಗಳ, ಹೊಟ್ಟೆಕಿಚ್ಚು, ಕಡುಕೋಪ, ಸ್ವಾರ್ಥ, ಸಿಟ್ಟು, ಕಕ್ಷಭೇದ, 21 ಮತ್ಸರ, ಕುಡಿಕತನ ಮತ್ತು ಸ್ವೇಚ್ಫಾಚಾರದ ಕೂಟ, ಮೊದಲಾದವುಗಳೇ. ನಾನು ನಿಮ್ಮನ್ನು ಮೊದಲು ಎಚ್ಚರಿಸಿದಂತೆ ಈಗಲೂ ಎಚ್ಚರಿಸುತ್ತೇನೆ. ಇಂಥವುಗಳನ್ನು ಮಾಡುವ ಜನರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ. 22 ಆದರೆ ದೇವರಾತ್ಮನು ಹುಟ್ಟಿಸುವುದು ಪ್ರೀತಿ, ಆನಂದ, ಶಾಂತಿ, ತಾಳ್ಮೆ, ಕರುಣೆ, ಉಪಕಾರ, ನಂಬಿಗಸ್ತಿಕೆ, 23 ಸಾಧುತ್ವ, ಇಂದ್ರಿಯ ನಿಗ್ರಹ ಇಂಥವುಗಳೇ. ಇವುಗಳನ್ನು ತಪ್ಪೆಂದು ಯಾವ ಧರ್ಮಶಾಸ್ತ್ರವೂ ಹೇಳುವುದಿಲ್ಲ. 24 ಕ್ರಿಸ್ತ ಯೇಸುವಿನವರು ತಮ್ಮ ಶರೀರಭಾವವನ್ನು ಶಿಲುಬೆಗೇರಿಸಿದ್ದಾರೆ. ಅವರು ತಮ್ಮ ಹಳೆಯ ಸ್ವಾರ್ಥಪರವಾದ ಅಭಿಲಾಷೆಗಳನ್ನು ಮತ್ತು ತಾವು ಮಾಡಬೇಕೆಂದಿದ್ದ ಕೆಟ್ಟಕಾರ್ಯಗಳನ್ನು ಬಿಟ್ಟುಕೊಟ್ಟವರಾಗಿದ್ದಾರೆ. 25 ನಮ್ಮ ಹೊಸ ಜೀವಿತವನ್ನು ಪವಿತ್ರಾತ್ಮನಿಂದ ಪಡೆದುಕೊಂಡಿರುವುದರಿಂದ ನಾವು ಆತನನ್ನೇ ಅನುಸರಿಸಬೇಕು.
Kannada Holy Bible: Easy-to-Read Version. All rights reserved. © 1997 Bible League International