Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 48

ರಚನೆಗಾರರು: ಕೋರಹೀಯರು.

48 ಯೆಹೋವನೇ ಮಹೋನ್ನತನು.
    ನಮ್ಮ ದೇವರನ್ನು ಆತನ ಪವಿತ್ರ ಪರ್ವತ ಪಟ್ಟಣದಲ್ಲಿ ಜನರು ಬಹಳವಾಗಿ ಕೊಂಡಾಡುವರು.
ದೇವರ ಪವಿತ್ರ ಪಟ್ಟಣವು ರಮ್ಯವಾಗಿದೆ.
    ಭೂಲೋಕದಲ್ಲೆಲ್ಲಾ ಇರುವ ಜನರನ್ನು ಅದು ಸಂತೋಷಗೊಳಿಸುವುದು.
ಸಿಯೋನ್ ಪರ್ವತವೇ ದೇವರ ನಿಜವಾದ ಪರ್ವತ.
    ಅದೇ ಆ ಮಹಾರಾಜನ ಪರ್ವತ.
ದೇವರು ಆ ಪಟ್ಟಣಗಳ ಅರಮನೆಗಳಲ್ಲಿ,
    ತಾನೇ ಆಶ್ರಯದುರ್ಗವೆಂದು ಹೆಸರುವಾಸಿಯಾಗಿದ್ದಾನೆ.
ಒಮ್ಮೆ, ಕೆಲವು ರಾಜರು ಒಟ್ಟಾಗಿ ಸೇರಿಬಂದರು.
    ಆ ಪಟ್ಟಣದ ಮೇಲೆ ದಾಳಿ ಮಾಡಲೆಂದು ಅವರೆಲ್ಲ ಅದರತ್ತ ನಡೆದರು.
ಆದರೆ ಅವರು ಅದನ್ನು ಕಂಡಾಗ ದಿಗ್ಭ್ರಮೆಗೊಂಡರು;
    ಭಯದಿಂದ ಓಡಿಹೋದರು.
ಭಯವು ಅವರನ್ನು
    ಪ್ರಸವವೇದನೆಯಂತೆ ಆವರಿಸಿಕೊಂಡಿತು.
ಪೂರ್ವದ ಬಿರುಗಾಳಿಯಿಂದ ಒಡೆದುಹೋದ ಹಡಗುಗಳಂತೆ
    ನೀನು ಅವರನ್ನು ನಾಶಮಾಡಿದೆ.
ಹೌದು, ಆ ರಾಜರುಗಳಿಗೆ ಸಂಭವಿಸಿದ್ದನ್ನು ನಾವು ಕಿವಿಯಾರೆ ಕೇಳಿದಂತೆಯೇ ಕಣ್ಣಾರೆಯೂ ಕಂಡೆವು.
    ನಮ್ಮ ದೇವರೂ ಸೇನಾಧೀಶ್ವರನೂ ಆಗಿರುವ ಯೆಹೋವನ ಪಟ್ಟಣದಲ್ಲಿ ನಾವು ಅದನ್ನು ನೋಡಿದ್ದೇವೆ.
ದೇವರು ಆ ಪಟ್ಟಣವನ್ನು ಶಾಶ್ವತವಾಗಿ ಭದ್ರಗೊಳಿಸುವನು.

ದೇವರೇ, ನಿನ್ನ ಆಲಯದಲ್ಲಿ ನಿನ್ನ ಶಾಶ್ವತ ಪ್ರೀತಿಯ ಕುರಿತು ಧ್ಯಾನಿಸುವೆವು.
10 ದೇವರೇ, ನೀನು ಪ್ರಖ್ಯಾತನಾಗಿರುವೆ.
    ಭೂಮಿಯ ಮೇಲೆಲ್ಲಾ ಜನರು ನಿನ್ನನ್ನು ಕೊಂಡಾಡುವರು.
    ನೀನು ಎಷ್ಟು ಒಳ್ಳೆಯವನೆಂಬುದು ಪ್ರತಿಯೊಬ್ಬರಿಗೂ ತಿಳಿದಿದೆ.
11 ನಿನ್ನ ನ್ಯಾಯನಿರ್ಣಯಗಳಿಂದ ಚೀಯೋನ್ ಪರ್ವತವು ಹರ್ಷಿಸಲಿ;
    ಯೆಹೂದದ ಊರುಗಳು ಉಲ್ಲಾಸಿಸಲಿ.
12 ಚೀಯೋನಿನ ಸುತ್ತಲೂ ಸಂಚರಿಸಿ, ಆ ಪಟ್ಟಣವನ್ನು ನೋಡಿರಿ.
    ಅದರ ಬುರುಜುಗಳನ್ನು ಎಣಿಸಿರಿ.
13 ಅದರ ಕೋಟೆಗಳನ್ನು ನೋಡಿರಿ.
    ಚೀಯೋನಿನ ಅರಮನೆಗಳನ್ನು ಹೊಗಳಿರಿ.
ಆಗ ನೀವು ನಿಮ್ಮ ಮುಂದಿನ ಸಂತತಿಯವರಿಗೆ ಅದರ ಬಗ್ಗೆ ಹೇಳಬಲ್ಲಿರಿ.
14 ಈ ದೇವರೇ ಎಂದೆಂದಿಗೂ ನಮ್ಮ ದೇವರು!
    ನಮ್ಮನ್ನು ಶಾಶ್ವತವಾಗಿ ನಡೆಸುವಾತನು ಆತನೇ!

ಯೆಹೆಜ್ಕೇಲ 11:14-25

ಜೆರುಸಲೇಮಿನ ಚದರಿಸಲ್ಪಟ್ಟ ಜನರ ಕುರಿತು ಪ್ರವಾದನೆ

14 ಯೆಹೋವನ ಸಂದೇಶ ನನಗೆ ದೊರೆಯಿತು: 15 “ನರಪುತ್ರನೇ, ಜೆರುಸಲೇಮಿನಲ್ಲಿ ವಾಸವಾಗಿರುವ ಜನರು ನಿನ್ನ ಸಹೋದರರ, ನಿನ್ನ ಸ್ವಂತ ಸಂಬಂಧಿಕರ ಮತ್ತು ಇಡೀ ಇಸ್ರೇಲ್ ವಂಶದವರ ಬಗ್ಗೆ ಈಗ ಮಾತಾಡುತ್ತಿದ್ದಾರೆ. ‘ಅವರು, ಯೆಹೋವನಿಂದ ದೂರವಾಗಿದ್ದಾರೆ. ಈ ದೇಶವು ನಮಗೆ ನಮ್ಮ ಸ್ವಂತ ಆಸ್ತಿಯಾಗಿ ಕೊಡಲ್ಪಟ್ಟಿದೆ’ ಎಂದು ಅವರು ಹೇಳುತ್ತಾರೆ.

16 “ಆದ್ದರಿಂದ ಜನರಿಗೆ ಹೀಗೆ ಹೇಳು: ನಮ್ಮ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ‘ನಾನು ನನ್ನ ಜನರನ್ನು ಬಹುದೂರದಲ್ಲಿರುವ ಜನಾಂಗಗಳ ಮಧ್ಯಕ್ಕೆ ಹೋಗುವಂತೆ ಮಾಡಿದ್ದು ನಿಜ. ನಾನು ಅನೇಕ ದೇಶಗಳಲ್ಲಿ ಅವರನ್ನು ಚದರಿಸಿರುತ್ತೇನೆ. ಅವರು ಪರದೇಶಗಳಲ್ಲಿರುವಾಗ ಸ್ವಲ್ಪಕಾಲ ನಾನೇ ಅವರಿಗೆ ದೇವಾಲಯವಾಗಿರುವೆನು. 17 ಆದ್ದರಿಂದ ಹೀಗೆ ಹೇಳು: ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿಮ್ಮನ್ನು ಜನಾಂಗಗಳಿಂದ ಒಟ್ಟುಗೂಡಿಸುವೆನು; ನೀವು ಚದರಿಸಲ್ಪಟ್ಟಿರುವ ದೇಶಗಳಿಂದ ನಾನು ನಿಮ್ಮನ್ನು ಒಟ್ಟುಗೂಡಿಸುವೆನು; ಮತ್ತು ನಾನು ನಿಮಗೆ ಇಸ್ರೇಲ್ ದೇಶವನ್ನು ಕೊಡುವೆನು. 18 ನನ್ನ ಜನರು ಹಿಂದಕ್ಕೆ ಬಂದಾಗ ದೇಶದಲ್ಲಿರುವ ಎಲ್ಲಾ ಹೊಲಸು ವಿಗ್ರಹಗಳನ್ನು ತೆಗೆದುಹಾಕುವರು. 19 ಅವರನ್ನು ಹಿಂದಕ್ಕೆ ಬರಮಾಡಿ ಒಗ್ಗಟ್ಟಿನಲ್ಲಿರುವಂತೆ ಮಾಡುವೆನು. ಅವರಲ್ಲಿ ಹೊಸ ಆತ್ಮವನ್ನು ಇರಿಸುವೆನು. ಅವರಲ್ಲಿರುವ ಕಲ್ಲಿನ ಹೃದಯವನ್ನು ತೆಗೆದು ಮೃದುವಾದ ಹೃದಯವನ್ನಿಡುವೆನು. 20 ಆಗ ಅವರು ನನ್ನ ಆಜ್ಞಾವಿಧಿಗಳಿಗೆ ವಿಧೇಯರಾಗುವರು. ನಾನು ಹೇಳುವದನ್ನು ಅವರು ಮಾಡುವರು. ಅವರು ನಿಜವಾಗಿಯೂ ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು.’”

ಯೆಹೋವನ ಮಹಿಮೆ ಜೆರುಸಲೇಮ್‌ನ್ನು ಬಿಟ್ಟಿದ್ದು

21 ಆಮೇಲೆ ದೇವರು ಹೇಳಿದ್ದೇನೆಂದರೆ: “ಆದರೆ ಈಗ ಅವರ ಹೃದಯವು ಆ ಹೊಲಸು ವಿಗ್ರಹಗಳಿಗೆ ಸೇರಿದ್ದಾಗಿದೆ. ಅವರು ಮಾಡಿದ ದುಷ್ಟತನಕ್ಕೆ ನಾನು ಅವರನ್ನು ಶಿಕ್ಷಿಸಲೇಬೇಕಾಗಿದೆ.” ನನ್ನ ಒಡೆಯನಾದ ಯೆಹೋವನು ಈ ಸಂಗತಿಗಳನ್ನು ತಿಳಿಸಿದನು. 22 ಆಗ ಕೆರೂಬಿದೂತರು ತಮ್ಮ ರೆಕ್ಕೆಗಳನ್ನು ಚಾಚಿ ಆಕಾಶದಲ್ಲಿ ಹಾರಿಹೋದರು. ಚಕ್ರಗಳು ಅವುಗಳೊಂದಿಗೆ ಹೋದವು. ಮತ್ತು ಇಸ್ರೇಲಿನ ದೇವರ ಮಹಿಮೆಯು ಅವರ ಮೇಲ್ಗಡೆ ಇತ್ತು. 23 ಯೆಹೋವನ ಮಹಿಮೆಯು ಆಕಾಶಕ್ಕೆ ಎತ್ತಲ್ಪಟ್ಟು ಜೆರುಸಲೇಮಿಗೆ ಪೂರ್ವದಲ್ಲಿರುವ ಬೆಟ್ಟದ ಮೇಲೆ ನಿಂತಿತು. 24 ಆಗ ಆತ್ಮವು ನನ್ನನ್ನು ಆಕಾಶಕ್ಕೆ ಎತ್ತಿ ಬಾಬಿಲೋನ್ ದೇಶಕ್ಕೆ ಮರಳಿ ತಂದಿತು. ಸೆರೆ ಒಯ್ಯಲ್ಪಟ್ಟಿದ್ದ ಜನರ ಮಧ್ಯೆ ನಾನು ಬಂದೆನು. ದೇವಾರಾತ್ಮವು ಕೊಟ್ಟ ದರ್ಶನದಲ್ಲಿ ನಾನು ಆ ಎಲ್ಲಾ ವಿಷಯಗಳನ್ನು ಕಂಡೆನು. ಬಳಿಕ, ನಾನು ಕಂಡ ಆ ದರ್ಶನವು ನನ್ನನ್ನು ಬಿಟ್ಟುಹೋಯಿತು. 25 ನನ್ನೊಂದಿಗೆ ಸೆರೆವಾಸದಲ್ಲಿದ್ದ ಜನರಿಗೆ, ಯೆಹೋವನು ನನಗೆ ತೋರಿಸಿದ ಎಲ್ಲಾ ಸಂಗತಿಗಳ ಬಗ್ಗೆ ಹೇಳಿದೆನು.

1 ಕೊರಿಂಥದವರಿಗೆ 2:12-16

12 ನಾವು ಹೊಂದಿಕೊಂಡದ್ದು ದೇವರಿಂದ ಬಂದ ಪವಿತ್ರಾತ್ಮನನ್ನೇ ಹೊರತು ಪ್ರಾಪಂಚಿಕವಾದ ಆತ್ಮವನ್ನಲ್ಲ. ದೇವರು ನಮಗೆ ಉಚಿತವಾಗಿ ಕೊಟ್ಟಿರುವಂಥವುಗಳನ್ನು ತಿಳಿದುಕೊಳ್ಳುವುದಕ್ಕಾಗಿ ನಾವು ಆತನನ್ನು ಹೊಂದಿಕೊಂಡೆವು.

13 ನಾವು ಈಸಂಗತಿಗಳನ್ನು ಹೇಳುವಾಗ ಮನುಷ್ಯರ ಜ್ಞಾನದಿಂದ ಕಲಿತುಕೊಂಡಿರುವ ವಾಕ್ಯಗಳನ್ನು ಉಪಯೋಗಿಸದೆ ಆತ್ಮನಿಂದ ಕಲಿತುಕೊಂಡ ವಾಕ್ಯಗಳನ್ನೇ ಉಪಯೋಗಿಸುತ್ತೇವೆ. ಆತ್ಮಿಕ ಸಂಗತಿಗಳನ್ನು ವಿವರಿಸಲು ಆತ್ಮಿಕ ಪದಗಳನ್ನೇ ಬಳಸುತ್ತೇವೆ. 14 ಆತ್ಮಿಕನಲ್ಲದ ವ್ಯಕ್ತಿಯು ದೇವಾರಾತ್ಮನ ವಿಷಯಗಳನ್ನು ಸ್ವೀಕರಿಸಿಕೊಳ್ಳವುದಿಲ್ಲ. ಅವನು ಆ ವಿಷಯಗಳನ್ನು ಮೂರ್ಖತನವೆಂದು ಯೋಚಿಸುತ್ತಾನೆ. ಅವನು ಪವಿತ್ರಾತ್ಮನ ವಿಷಯಗಳನ್ನು ಅರ್ಥಮಾಡಿಕೊಳ್ಳಲಾರನು; ಏಕೆಂದರೆ ಆ ವಿಷಯಗಳನ್ನು ಆತ್ಮಿಕವಾಗಿ ವಿಚಾರಣೆ ಮಾಡಲು ಮಾತ್ರ ಸಾಧ್ಯ. 15 ಆದರೆ ಆತ್ಮಿಕ ಮನುಷ್ಯನು ಎಲ್ಲಾ ವಿಷಯಗಳ ಬಗ್ಗೆ ತೀರ್ಪು ಮಾಡಬಲ್ಲನು. ಅವನಿಗೆ ಬೇರೆ ಯಾರೂ ತೀರ್ಪು ನೀಡಲಾಗುವುದಿಲ್ಲ. 16 ಪವಿತ್ರ ಗ್ರಂಥವು ಹೇಳುವಂತೆ:

“ಪ್ರಭುವಿನ ಮನಸ್ಸನ್ನು ಯಾರು ಬಲ್ಲರು?
    ಪ್ರಭುವಿಗೆ ಯಾರು ಉಪದೇಶ ಮಾಡಬಲ್ಲರು?”(A)

ನಾವಾದರೋ ಕ್ರಿಸ್ತನ ಮನಸ್ಸನ್ನು ಹೊಂದಿದವರಾಗಿದ್ದೇವೆ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International