Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 42

ಎರಡನೆ ಭಾಗ

(ಕೀರ್ತನೆಗಳು 42–72)

ರಚನೆಗಾರರು: ಕೋರಹೀಯರು.

42 ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಬಯಸುವಂತೆಯೇ
    ನನ್ನ ಆತ್ಮವು ನಿನ್ನನ್ನು ಬಯಸುತ್ತದೆ.
ನನ್ನ ಆತ್ಮವು ಜೀವಸ್ವರೂಪನಾದ ದೇವರಿಗಾಗಿ ಬಾಯಾರಿದೆ.
    ನಾನು ಯಾವಾಗ ಆತನನ್ನು ಸಂಧಿಸುವೆನು?
“ನಿನ್ನ ದೇವರು ಎಲ್ಲಿ?” ಎಂದು ನನ್ನ ವೈರಿಗಳು ಯಾವಾಗಲೂ ಗೇಲಿಮಾಡುವುದರಿಂದ
    ಹಗಲಿರುಳು ಕಣ್ಣೀರೇ ನನಗೆ ಆಹಾರವಾಯಿತು.

ಆಗ ನಾನು, ಹಬ್ಬದ ಉತ್ಸಾಹದಲ್ಲಿ ಜನಸಮೂಹದೊಡನೆ ಹರ್ಷಿಸುತ್ತಾ
    ಸ್ತುತಿಗೀತೆಗಳನ್ನು ಹಾಡುತ್ತಾ ಅವರನ್ನು ದೇವಾಲಯಕ್ಕೆ ಮುನ್ನಡೆಸುತ್ತಿದ್ದದ್ದನ್ನು
    ನೆನಪಿಗೆ ತಂದುಕೊಂಡು ಹೃದಯದಲ್ಲಿ ಕೊರಗುವೆ.

ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ?
    ಗಲಿಬಿಲಿಗೊಂಡಿರುವುದೇಕೆ?
ದೇವರನ್ನು ನಿರೀಕ್ಷಿಸು;
    ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.
ನನ್ನ ದೇವರೇ, ನಾನು ಕುಗ್ಗಿಹೋಗಿದ್ದೇನೆ.
    ಆದ್ದರಿಂದ ಹೆರ್ಮೊನ್ ಪರ್ವತದಲ್ಲಿಯೂ ಜೋರ್ಡನ್ ನದಿಯ ಪ್ರದೇಶದಲ್ಲಿಯೂ
    ಮಿಸ್ಸಾರ್ ಬೆಟ್ಟದಲ್ಲಿಯೂ ನಾನು ನಿನ್ನನ್ನು ಜ್ಞಾಪಿಸಿಕೊಳ್ಳುವೆನು.
ಜಲಪಾತದ ಘೋಷದಂತೆಯೂ
    ಪ್ರವಾಹದ ಘರ್ಜನೆಯಂತೆಯೂ ಇಕ್ಕಟ್ಟುಗಳು ನನಗೆ ಬಂದಿವೆ.
ಸಮುದ್ರದ ಅಲೆಗಳಂತೆ
    ದುಃಖವು ನನ್ನನ್ನು ಆವರಿಸಿಕೊಂಡಿದೆ.

ಹಗಲಲ್ಲಿ ಯೆಹೋವನು ನನಗೆ ನಿಜಪ್ರೀತಿಯನ್ನು ತೋರುವುದರಿಂದ
    ಜೀವಸ್ವರೂಪನಾದ ಆತನಿಗೆ ಪ್ರತಿ ರಾತ್ರಿಯಲ್ಲಿಯೂ ನೂತನ ಕೀರ್ತನೆಯನ್ನು ಹಾಡುವೆ; ಆತನಲ್ಲಿ ಪ್ರಾರ್ಥಿಸುವೆ.
ನನ್ನ ಬಂಡೆಯಾದ ದೇವರಿಗೆ,
    “ನೀನು ನನ್ನನ್ನು ಯಾಕೆ ಮರೆತುಬಿಟ್ಟೆ?
    ನನ್ನ ಶತ್ರುಗಳ ಕ್ರೂರತೆಯಿಂದ ನಾನೇಕೆ ಸಂಕಟಪಡಬೇಕು?” ಎಂದು ಕೇಳುವೆ.
10 ನನ್ನ ವಿರೋಧಿಗಳು ಸತತವಾಗಿ,
    “ನಿನ್ನ ದೇವರು ಎಲ್ಲಿ?” ಎಂದು ಕೇಳುವುದರಿಂದ ನನ್ನ ಮೂಳೆಗಳು ಮುರಿದಂತಾಗಿವೆ.

11 ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ?
    ಗಲಿಬಿಲಿಗೊಂಡಿರುವುದೇಕೆ?
ದೇವರನ್ನು ನಿರೀಕ್ಷಿಸು;
    ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.

ಕೀರ್ತನೆಗಳು 43

43 ದೇವರೇ, ನನ್ನನ್ನು ನಿರಪರಾಧಿಯೆಂದು ತೀರ್ಪು ನೀಡು.
ವ್ಯಾಜ್ಯದಲ್ಲಿ ನನ್ನ ಪರವಾಗಿಯೂ ಅನ್ಯ ಜನಾಂಗಗಳಿಗೆ ವಿರೋಧವಾಗಿಯೂ ವಾದಿಸು.
ಸುಳ್ಳುಗಾರರಿಂದಲೂ ಕೆಡುಕರಿಂದಲೂ ನನ್ನನ್ನು ರಕ್ಷಿಸು.
ದೇವರೇ, ನೀನೇ ನನಗೆ ಆಶ್ರಯಸ್ಥಾನವಾಗಿರುವೆ!
    ನೀನು ನನ್ನನ್ನು ಯಾಕೆ ಕೈಬಿಟ್ಟಿರುವೆ?
ಶತ್ರು ಬಾಧೆಯಿಂದ ನಾನೇಕೆ
    ದುಃಖಿಸುತ್ತಾ ಸಂಕಟಪಡಬೇಕು?
ನಿನ್ನ ಬೆಳಕೂ ಸತ್ಯವೂ ನನ್ನ ಮೇಲೆ ಪ್ರಕಾಶಿಸಲಿ.
    ನಿನ್ನ ಬೆಳಕೂ ಸತ್ಯವೂ ನನಗೆ ಮಾರ್ಗದರ್ಶನ ನೀಡಲಿ.
    ಅವು ನನ್ನನ್ನು ನಿನ್ನ ಪವಿತ್ರ ಪರ್ವತಕ್ಕೂ ನಿನ್ನ ನಿವಾಸಕ್ಕೂ ನಡೆಸುತ್ತವೆ.
ನನ್ನ ದೇವರೇ, ನಿನ್ನ ಯಜ್ಞವೇದಿಕೆಯ ಬಳಿಗೆ ಬರುವೆನು.
    ನನ್ನ ಸಂತೋಷಕ್ಕೆ ನೀನೇ ಆಧಾರನಾಗಿರುವೆ.
ದೇವರೇ, ನನ್ನ ದೇವರೇ,
    ಹಾರ್ಪ್‌ವಾದ್ಯವನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು.

ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ?
    ಗಲಿಬಿಲಿಗೊಂಡಿರುವುದೇಕೆ?
ದೇವರನ್ನು ನಿರೀಕ್ಷಿಸು;
    ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.

ಜ್ಞಾನೋಕ್ತಿಗಳು 11:3-13

ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ. ಕೆಡುಕರು ತಮ್ಮ ಮೋಸಕೃತ್ಯಗಳ ಮೂಲಕ ತಮ್ಮನ್ನೇ ನಾಶಮಾಡಿಕೊಳ್ಳುತ್ತಾರೆ.

ದೇವರು ಜನರಿಗೆ ನ್ಯಾಯತೀರ್ಪು ಮಾಡುವ ದಿನದಲ್ಲಿ, ಹಣದಿಂದ ಯಾವ ಲಾಭವೂ ಇಲ್ಲ. ಆದರೆ ನೀತಿಯು ಜನರನ್ನು ಮರಣದಿಂದ ಕಾಪಾಡುತ್ತದೆ.

ನೀತಿವಂತನು ಯಥಾರ್ಥನಾಗಿದ್ದರೆ ಅವನ ಜೀವನವು ಸರಾಗವಾಗಿರುವುದು. ಆದರೆ ಕೆಡುಕನು ತನ್ನ ಕೆಟ್ಟಕಾರ್ಯಗಳಿಂದ ನಾಶವಾಗುವನು.

ನೀತಿಯು ಯಥಾರ್ಥವಂತರನ್ನು ಕಾಪಾಡುತ್ತದೆ. ಆದರೆ ವಂಚಕರು ತಮ್ಮ ಆಸೆಗಳಿಂದಲೇ ಸಿಕ್ಕಿಬೀಳುವರು.

ದುಷ್ಟನು ಸಾಯುವಾಗ ಅವನ ನಿರೀಕ್ಷೆಗಳೆಲ್ಲಾ ನಾಶವಾಗುತ್ತವೆ. ಅವನ ಅಪೇಕ್ಷೆಗಳೆಲ್ಲಾ ಕೊನೆಗೊಳ್ಳುತ್ತವೆ.

ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು. ಅವನ ಬದಲಾಗಿ ದುಷ್ಟನು ಇಕ್ಕಟ್ಟಿನಲ್ಲಿ ಸಿಕ್ಕಿಬೀಳುವನು.

ಕೆಡುಕರು ತಮ್ಮ ಮಾತಿನಿಂದಲೇ ಬೇರೆಯವರನ್ನು ನಾಶಪಡಿಸುತ್ತಾರೆ. ಸಜ್ಜನರಿಗಾದರೋ ಅವರ ತಿಳುವಳಿಕೆಯೇ ರಕ್ಷಣೆ ನೀಡುವುದು.

10 ಸಜ್ಜನರಿಗೆ ಜಯವಾದರೆ ನಗರಕ್ಕೆಲ್ಲ ಸಂತಸ. ಕೆಡುಕರು ನಾಶವಾದರೆ ಜನರು ಜಯಘೋಷ ಮಾಡುವರು.

11 ಪಟ್ಟಣವು ತನ್ನಲ್ಲಿ ವಾಸವಾಗಿರುವ ಯಥಾರ್ಥವಂತರ ಆಶೀರ್ವಾದದಿಂದ ಏಳಿಗೆ ಹೊಂದುವುದು. ಕೆಡುಕರ ಮಾತುಗಳು ಪಟ್ಟಣವನ್ನು ನಾಶಮಾಡುತ್ತವೆ.

12 ಬುದ್ಧಿಹೀನನು ಇತರರನ್ನು ಹೀನೈಸುತ್ತಾನೆ. ಆದರೆ ಬುದ್ಧಿವಂತನು ಮೌನವಾಗಿರುತ್ತಾನೆ.

13 ಗುಟ್ಟು ರಟ್ಟುಮಾಡುವವನನ್ನು ನಂಬಲಾಗದು. ಆದರೆ ನಂಬಿಗಸ್ತನು ವಿಷಯಗಳನ್ನು ರಹಸ್ಯವಾಗಿಡುವನು.

ಮತ್ತಾಯ 9:27-34

ಅನೇಕರಿಗೆ ಸ್ವಸ್ಥತೆ

27 ಯೇಸು ಅಲ್ಲಿಂದ ಹೊರಡುತ್ತಿರುವಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸಿದರು. ಅವರು, “ದಾವೀದನ ಕುಮಾರನೇ, ನಮಗೆ ದಯೆ ತೋರು” ಎಂದು ಗಟ್ಟಿಯಾಗಿ ಕೂಗಿದರು.

28 ಯೇಸು ಮನೆಯೊಳಗೆ ಹೋದನು. ಕುರುಡರೂ ಆತನ ಸಂಗಡ ಹೋದರು. ಯೇಸು ಅವರಿಗೆ, “ನಾನು ನಿಮ್ಮನ್ನು ಗುಣಪಡಿಸಬಲ್ಲೆನೆಂದು ನೀವು ನಂಬುತ್ತೀರೋ?” ಎಂದು ಕೇಳಿದನು. ಕುರುಡರು, “ಹೌದು ಪ್ರಭುವೇ, ನಾವು ನಂಬುತ್ತೇವೆ” ಎಂದು ಉತ್ತರಕೊಟ್ಟರು.

29 ಆಗ ಯೇಸು ಅವರ ಕಣ್ಣುಗಳನ್ನು ಮುಟ್ಟಿ, “ನೀವು ನಂಬಿದಂತೆಯೇ ನಿಮಗೆ ಗುಣವಾಗಲಿ” ಅಂದನು. 30 ಕೂಡಲೇ ಅವರಿಗೆ ದೃಷ್ಟಿ ಬಂದಿತು. “ಈ ವಿಷಯವನ್ನು ಯಾರಿಗೂ ಹೇಳಬಾರದು” ಎಂದು ಯೇಸು ಅವರಿಗೆ ಎಚ್ಚರಿಕೆ ನೀಡಿದನು. 31 ಆದರೆ ಆ ಕುರುಡರು ಅಲ್ಲಿಂದ ಹೊರಟುಹೋಗಿ ಯೇಸುವಿನ ಸುದ್ದಿಯನ್ನು ಆ ಪ್ರದೇಶದ ಸುತ್ತಮುತ್ತಲೆಲ್ಲಾ ಹಬ್ಬಿಸಿದರು.

32 ಅವರಿಬ್ಬರು ಹೋಗುತ್ತಿರುವಾಗ ಕೆಲವರು ಬೇರೊಬ್ಬನನ್ನು ಯೇಸುವಿನ ಬಳಿಗೆ ತಂದರು. ಅವನಲ್ಲಿ ದೆವ್ವವಿದ್ದುದರಿಂದ ಅವನು ಮೂಕನಾಗಿದ್ದನು. 33 ಯೇಸು ಆ ದೆವ್ವಕ್ಕೆ ಅವನನ್ನು ಬಿಟ್ಟುಹೋಗುವಂತೆ ಆಜ್ಞಾಪಿಸಿದನು. ಅವನು ಮಾತನಾಡತೊಡಗಿದನು. ಇದನ್ನು ಕಂಡ ಜನರು ಆಶ್ಚರ್ಯಚಕಿತರಾಗಿ, “ಇಸ್ರೇಲಿನಲ್ಲಿ ಇಂಥ ಕಾರ್ಯವನ್ನು ನೋಡಿಯೇ ಇಲ್ಲ” ಅಂದರು.

34 ಆದರೆ ಫರಿಸಾಯರು, “ಇವನು ದೆವ್ವಗಳ ಒಡೆಯನ ಶಕ್ತಿಯಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ” ಎಂದರು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International