Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 11

ರಚನೆಗಾರ: ದಾವೀದ.

11 ನಾನು ಯೆಹೋವನನ್ನೇ ಆಶ್ರಯಿಸಿಕೊಂಡಿದ್ದೇನೆ.
    ಹೀಗಿರಲು, “ನಿನ್ನ ಬೆಟ್ಟಕ್ಕೆ ಪಕ್ಷಿಯಂತೆ ಹಾರಿಹೋಗು” ಎಂದು ನೀವು ಹೇಳುವುದೇಕೆ?

ದುಷ್ಟರು ಬೇಟೆಗಾರರಂತಿದ್ದಾರೆ;
    ಅವರು ಕತ್ತಲೆಯಲ್ಲಿ ಅವಿತುಕೊಂಡಿರುವರು;
    ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ನೀತಿವಂತರ ಹೃದಯಕ್ಕೆ ನೇರವಾಗಿ ಹೊಡೆಯುವರು.
ಅಸ್ತಿವಾರಗಳೇ ನಾಶವಾಗುತ್ತಿದ್ದರೆ
    ನೀತಿವಂತನು ಏನು ಮಾಡಲಾದೀತು?

ಯೆಹೋವನು ತನ್ನ ಪವಿತ್ರ ಆಲಯದಲ್ಲಿದ್ದಾನೆ.
    ಆತನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು
ಮನುಷ್ಯರ ಕಾರ್ಯಗಳನ್ನು ಗಮನಿಸುತ್ತಿದ್ದಾನೆ.
    ಆತನ ಕಣ್ಣುಗಳು ಅವರನ್ನು ಪರಿಶೋಧಿಸುತ್ತಿವೆ.
ಯೆಹೋವನು ನೀತಿವಂತರಿಗಾಗಿ ಹುಡುಕುವನು.
    ಆದರೆ ಆತನು ದುಷ್ಟರನ್ನೂ ಹಿಂಸಕರನ್ನೂ ತಿರಸ್ಕರಿಸುವನು.
ಆತನು ಆ ದುಷ್ಟರ ಮೇಲೆ ಬೆಂಕಿಗಂಧಕಗಳ ಮಳೆಯನ್ನು ಸುರಿಸುವನು.
    ಅವರಿಗೆ ಸಿಕ್ಕುವುದೆಂದರೆ ಕಾದ ಉರಿಗಾಳಿಯೊಂದೇ.
ಯಾಕೆಂದರೆ ಯೆಹೋವನು ನೀತಿಸ್ವರೂಪನಾಗಿದ್ದಾನೆ; ಆತನು ನ್ಯಾಯವನ್ನು ಪ್ರೀತಿಸುತ್ತಾನೆ.
    ನೀತಿವಂತರು ಆತನ ಮುಖವನ್ನು ನೋಡುವರು.

ಯೆಶಾಯ 24:14-23

14 ಉಳಿದ ಜನರು ಚೀರಾಡುವರು.
    ಅದು ಭೋರ್ಗರೆಯುವ ಸಮುದ್ರದ ಶಬ್ದಕ್ಕಿಂತಲೂ ಜೋರಾಗಿ ಕೇಳಿಸುವದು.
    ದೇವರ ಕೃಪೆಯ ನಿಮಿತ್ತ ಅವರು ಸಂತೋಷದಲ್ಲಿರುವರು.
15 ಆ ಜನರು, “ಪೂರ್ವದಲ್ಲಿರುವ ಜನರೇ, ದೇವರಿಗೆ ಸ್ತೋತ್ರಮಾಡಿರಿ!
    ದೂರ ದೇಶಗಳಲ್ಲಿರುವ ಜನರೇ,
    ಇಸ್ರೇಲರ ದೇವರಾದ ಯೆಹೋವನ ಹೆಸರನ್ನು ಕೊಂಡಾಡಿರಿ” ಎಂದು ಹೇಳುವರು.
16 ದೇವರ ಸ್ತುತಿಯನ್ನು ನಾವು ಭೂಮಿಯ ಎಲ್ಲಾ ಕಡೆಗಳಿಂದಲೂ ಕೇಳಿಸಿಕೊಳ್ಳುತ್ತೇವೆ.
    ಈ ಸ್ತುತಿಹಾಡುಗಳು ದೇವರ ಒಳ್ಳೆತನವನ್ನು ವರ್ಣಿಸುವವು.
ಆದರೆ ನಾನು, “ಸಾಕು, ನನಗೆ ಸಾಕು.
ನಾನು ನೋಡುವ ವಿಷಯಗಳು ಭಯಂಕರವಾಗಿವೆ.
    ದ್ರೋಹಿಗಳು ಜನರಿಗೆ ವಿರುದ್ಧವಾಗಿ ಎದ್ದು ಅವರಿಗೆ ಹಾನಿಮಾಡುವರು.”

17 ಈ ದೇಶದಲ್ಲಿ ವಾಸಿಸುವ ಜನರಿಗೆ ಅಪಾಯವು ಕಾದಿದೆ ಎಂದು ನನಗೆ ತೋರುತ್ತಿದೆ.
    ಅವರಿಗೆ ಭಯ, ಉರುಲು, ಗುಂಡಿಗಳು ಕಾದಿವೆ.
18 ಜನರು ಅಪಾಯದ ವಿಷಯ ಕೇಳಿ ಭಯಗ್ರಸ್ಥರಾಗುವರು.
ಕೆಲವರು ಓಡಿಹೋಗುವರು.
    ಆದರೆ ಅವರು ಗುಂಡಿಯೊಳಗೆ ಬಿದ್ದು ಸಿಕ್ಕಿಕೊಳ್ಳುವರು.
ಅವರಲ್ಲಿ ಕೆಲವರು ಗುಂಡಿಯಿಂದ ಹೊರಬರುವರು,
    ಆದರೆ ಅವರು ಇನ್ನೊಂದು ಉರುಲಿನೊಳಗೆ ಸಿಕ್ಕಿಹಾಕಿಕೊಳ್ಳುವರು.
ಆಕಾಶದಲ್ಲಿರುವ ಪ್ರವಾಹದ ದ್ವಾರಗಳು ತೆರೆಯಲ್ಪಡುವವು.
    ಪ್ರವಾಹವು ತುಂಬುವದು; ಭೂಮಿಯ ಅಸ್ತಿವಾರಗಳು ಕದಲುವವು.
19 ಭೂಕಂಪಗಳಾಗುವವು.
    ಭೂಮಿಯು ಸೀಳಿಹೋಗುವದು.
20 ಲೋಕದ ಪಾಪವು ತುಂಬಾ ಭಾರವಾಗಿದೆ.
    ಆ ಭಾರದಿಂದಾಗಿ ಭೂಮಿಯು ಬೀಳುವದು.
ಒಂದು ಹಳೆಯ ಮನೆಯಂತೆ ಭೂಮಿಯು ಅಲುಗಾಡುವದು.
    ಕುಡಿದು ಮತ್ತನಾಗಿ ನೆಲಕ್ಕೆ ಬೀಳುವವನಂತೆ ಭೂಮಿಯು ಇರುವದು.
    ಭೂಮಿಗೆ ಮುಂದುವರಿಯಲು ಆಗದು.

21 ಆ ಸಮಯದಲ್ಲಿ ಯೆಹೋವನು ಪರಲೋಕ ಸೈನ್ಯಕ್ಕೆ
    ಪರಲೋಕದಲ್ಲಿ ನ್ಯಾಯತೀರಿಸುವನು.
    ಭೂಮಿಯ ಅರಸರನ್ನು ಭೂಮಿಯ ಮೇಲೆ ನ್ಯಾಯವಿಚಾರಣೆಮಾಡುವನು.
22 ಅನೇಕ ಮಂದಿ ಒಟ್ಟು ಸೇರುವರು.
    ಕೆಲವರು ಗುಂಡಿಯಲ್ಲಿ ಸಿಕ್ಕಿಹಾಕಿಕೊಳ್ಳುವರು.
    ಕೆಲವರು ಸೆರೆಹಿಡಿಯಲ್ಪಡುವರು.
    ಆಮೇಲೆ ಸ್ವಲ್ಪ ಕಾಲದ ನಂತರ ಅವರ ನ್ಯಾಯವಿಚಾರಣೆ ನಡಿಯುವದು.
23 ಯೆಹೋವನು ಜೆರುಸಲೇಮಿನ ಚೀಯೋನ್ ಪರ್ವತದಿಂದ ರಾಜ್ಯವನ್ನಾಳುವನು.
    ಆತನ ಮಹಿಮೆಯು ಹಿರಿಯರ ಮುಂದಿರುವದು.
    ಆತನ ಮಹಿಮೆಯ ಪ್ರಕಾಶಕ್ಕೆ ಚಂದ್ರನು ನಾಚಿಕೊಳ್ಳುವನು;
    ಸೂರ್ಯನು ಲಜ್ಜೆಗೊಳ್ಳುವನು.

ಲೂಕ 12:41-48

ನಂಬಿಗಸ್ತನಾದ ಆಳು ಯಾರು?

41 ಪೇತ್ರನು, “ಪ್ರಭುವೇ, ನೀನು ಈ ಸಾಮ್ಯವನ್ನು ಹೇಳಿದ್ದು ನಮಗಾಗಿಯೋ ಅಥವಾ ಎಲ್ಲಾ ಜನರಿಗಾಗಿಯೋ?” ಎಂದು ಕೇಳಿದನು.

42 ಪ್ರಭುವು ಹೀಗೆಂದನು: “ವಿವೇಕಿಯೂ ನಂಬಿಗಸ್ತನೂ ಆದ ಆಳು ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಿಸಲ್ಪಟ್ಟವನೇ. 43 ಆ ಸೇವಕನು ತನ್ನ ಕರ್ತವ್ಯವನ್ನು ನಿಷ್ಠೆಯಿಂದ ಮಾಡುತ್ತಿದ್ದರೆ, ಯಜಮಾನನು ಬಂದಾಗ ಅವನಿಗೆ ಬಹಳ ಸಂತೋಷವಾಗುವುದು. 44 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಯಜಮಾನನು ಆ ಸೇವಕನನ್ನು ತನ್ನ ಆಸ್ತಿಗೆಲ್ಲಾ ಮೇಲ್ವಿಚಾರಕನನ್ನಾಗಿ ನೇಮಿಸುವನು.

45 “ಆದರೆ ಆ ಸೇವಕನು ದುಷ್ಟನಾಗಿ ತನ್ನ ಯಜಮಾನನು ಬೇಗನೆ ಹಿಂತಿರುಗಿ ಬರುವುದಿಲ್ಲ ಎಂದುಕೊಂಡರೆ ಏನಾಗುವುದು? ಆ ಸೇವಕನು ಯಜಮಾನನ ಇತರ ದಾಸದಾಸಿಯರನ್ನು ಹೊಡೆಯುವುದಕ್ಕೂ ತಿಂದುಕುಡಿದು ಮತ್ತನಾಗುವುದಕ್ಕೂ ತೊಡಗುವನು. 46 ಬಳಿಕ ಅವನು ನಿರೀಕ್ಷಿಸಿಲ್ಲದ ಗಳಿಗೆಯಲ್ಲಿ ಯಜಮಾನನು ಬಂದು ಅವನನ್ನು ದಂಡಿಸಿ ಅಪನಂಬಿಗಸ್ತರಿರುವ ಸ್ಥಳಕ್ಕೆ ದಬ್ಬುವನು.

47 “ತನ್ನ ಯಜಮಾನನು ತನ್ನಿಂದ ಏನು ಅಪೇಕ್ಷಿಸುತ್ತಾನೆ ಎಂಬುದು ಆ ಸೇವಕನಿಗೆ ಗೊತ್ತಿತ್ತು. ಆದರೆ ಅವನು ತನ್ನನ್ನು ಸಿದ್ಧಪಡಿಸಿಕೊಳ್ಳಲಿಲ್ಲ ಮತ್ತು ತನ್ನ ಕೆಲಸವನ್ನು ಪೂರೈಸಲು ಪ್ರಯತ್ನಿಸಲಿಲ್ಲ. ಆದ್ದರಿಂದ ಅವನು ಕಠಿಣ ದಂಡನೆಗೆ ಗುರಿಯಾಗುವನು! 48 ಆದರೆ ತನ್ನ ಯಜಮಾನನ ಬಯಕೆಯನ್ನು ತಿಳಿದಿಲ್ಲದ ಸೇವಕನಿಗೆ ಏನಾಗುವುದು? ಇವನು ಸಹ ದಂಡನೆಗೆ ಅರ್ಹವಾದ ಕಾರ್ಯಗಳನ್ನು ಮಾಡುತ್ತಾನೆ. ಆದರೆ ತನ್ನ ಕರ್ತವ್ಯವನ್ನು ತಿಳಿದಿದ್ದರೂ ಮಾಡದೆಹೋದ ಸೇವಕನಿಗಿಂತ ಇವನಿಗೆ ಕಡಿಮೆ ದಂಡನೆ ಆಗುವುದು. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ಪಡೆದವನಿಂದ ಇನ್ನೂ ಹೆಚ್ಚಾಗಿ ನಿರೀಕ್ಷಿಸಲಾಗುವುದು.”

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International