Revised Common Lectionary (Semicontinuous)
ಜೆರುಸಲೇಮ್ ತನ್ನ ನಾಶನದ ಬಗ್ಗೆ ಅಳುತ್ತಾಳೆ
1 ಒಂದು ಕಾಲದಲ್ಲಿ ಜೆರುಸಲೇಮ್ ಜನಭರಿತವಾದ ನಗರವಾಗಿತ್ತು.
ಆದರೆ ಈಗ ಆ ನಗರವು ಹಾಳುಬಿದ್ದಿದೆ.
ಒಂದು ಕಾಲದಲ್ಲಿ ಜೆರುಸಲೇಮ್ ಅತ್ಯಂತ ದೊಡ್ಡನಗರಗಳಲ್ಲಿ ಒಂದಾಗಿತ್ತು.
ಆದರೆ ಈಗ ಅದು ವಿಧವೆಯಂತೆ ಆಗಿದೆ.
ಒಂದು ಕಾಲದಲ್ಲಿ ಅವಳು ಎಲ್ಲ ನಗರಗಳ ನಡುವೆ ರಾಜಕುಮಾರಿಯಂತೆ ಇದ್ದಳು.
ಆದರೆ ಈಗ ಅವಳನ್ನು ದಾಸಿಯನ್ನಾಗಿ ಮಾಡಲಾಗಿದೆ.
2 ರಾತ್ರಿಯಲ್ಲಿ ಅವಳು ಬಿಕ್ಕಿಬಿಕ್ಕಿ ಅಳುತ್ತಾಳೆ.
ಅವಳ ಕೆನ್ನೆಗಳ ಮೇಲೆ ಕಣ್ಣೀರು ಹರಿಯುತ್ತಿದೆ.
ಅವಳನ್ನು ಸಂತೈಸುವವರು ಯಾರೂ ಇಲ್ಲ.
ಅವಳ ಮಿತ್ರ ರಾಷ್ಟ್ರಗಳಲ್ಲಿ ಒಂದೂ ಕೂಡ ಅವಳನ್ನು ಸಂತೈಸುವುದಿಲ್ಲ.
ಅವಳ ಸ್ನೇಹಿತರೆಲ್ಲಾ ಅವಳಿಗೆ ದ್ರೋಹ ಮಾಡಿದರು.
ಅವಳ ಸ್ನೇಹಿತರೆಲ್ಲಾ ಅವಳಿಗೆ ದ್ರೋಹ ಮಾಡಿದರು.
ಅವಳ ಸ್ನೇಹಿತರೆಲ್ಲಾ ಅವಳಿಗೆ ಶತ್ರುಗಳಾದರು.
3 ಅತಿ ಕಷ್ಟಗಳನ್ನು ಅನುಭವಿಸಿದ ಮೇಲೆ ಯೆಹೂದ ಬಂಧನಕ್ಕೊಳಗಾಗಿದ್ದಾಳೆ.
ಅತಿ ಶ್ರಮಪಟ್ಟ ಮೇಲೆಯೂ ಅವಳು ಸೆರೆ ಒಯ್ಯಲ್ಪಟ್ಟಿದ್ದಾಳೆ.
ಯೆಹೂದ ಬೇರೆ ಜನಾಂಗಗಳ ಜೊತೆಯಲ್ಲಿ ವಾಸಿಸುತ್ತಾಳೆ.
ಆದರೆ ಅವಳಿಗೆ ವಿಶ್ರಾಂತಿ ಸಿಕ್ಕಿಲ್ಲ.
ಅವಳನ್ನು ಬೆನ್ನಟ್ಟಿದ ಜನರು
ಆಕೆಯು ಬಳಲಿ ಹೋಗಿದ್ದಾಗಲೇ ಅವಳನ್ನು ಹಿಡಿದುಕೊಂಡರು.
4 ಚೀಯೋನಿಗೆ ಹೋಗುವ ದಾರಿಗಳು ದುಃಖಿಸುತ್ತಿವೆ.
ಅವುಗಳು ದುಃಖಿಸುತ್ತಿವೆ; ಏಕೆಂದರೆ ಯಾರೂ ಈಗ ಉತ್ಸವಗಳಿಗಾಗಿ ಚೀಯೋನಿಗೆ ಬರುವದಿಲ್ಲ.
ಚೀಯೋನಿನ ಎಲ್ಲ ಹೆಬ್ಬಾಗಿಲುಗಳು ನಿರ್ಜನವಾಗಿವೆ.
ಚೀಯೋನಿನ ಎಲ್ಲ ಯಾಜಕರು ನರಳಾಡುತ್ತಿದ್ದಾರೆ.
ಚೀಯೋನಿನ ತರುಣಿಯರನ್ನು ತೆಗೆದುಕೊಂಡು ಹೋಗಲಾಗಿದೆ.[a]
ಇದೆಲ್ಲ ಚೀಯೋನಿಗೆ ಅತಿ ದುಃಖವನ್ನುಂಟುಮಾಡಿದೆ.
5 ಜೆರುಸಲೇಮಿನ ಶತ್ರುಗಳು ಗೆದ್ದಿದ್ದಾರೆ.
ಅವಳ ಶತ್ರುಗಳು ಜಯಶೀಲರಾಗಿದ್ದಾರೆ.
ಯೆಹೋವನು ಅವಳನ್ನು ದಂಡಿಸಿದ ಕಾರಣ ಹೀಗಾಯಿತು.
ಅವಳ ಅನೇಕ ಪಾಪಗಳಿಗಾಗಿ ಆತನು ಜೆರುಸಲೇಮನ್ನು ದಂಡಿಸಿದನು.
ಅವಳ ಮಕ್ಕಳು ದೂರಹೋಗಿದ್ದಾರೆ.
ಅವರು ವೈರಿಗಳ ಸೆರೆಯಾಳುಗಳಾಗಿ ದೂರ ಹೋಗಿದ್ದಾರೆ.
6 ಚೀಯೋನಿನ ಮಗಳ ಸೌಂದರ್ಯವು ಹೊರಟುಹೋಗಿದೆ.
ಅವಳ ರಾಜಕುಮಾರರು ಹುಲ್ಲುಗಾವಲನ್ನು ಕಂಡುಕೊಂಡಿಲ್ಲದ ಜಿಂಕೆಯಂತಾಗಿದ್ದಾರೆ.
ಅವರು ಬಲಹೀನರಾಗಿ ಓಡಿಹೋದರು.
ಬೆನ್ನಟ್ಟಿ ಬಂದ ಜನರಿಗೆ ಬೆಂಗೊಟ್ಟು ಓಡಿಹೋಗಿದ್ದಾರೆ.
19 ನನ್ನ ಸಂಕಟವನ್ನು ಮತ್ತು ಮನೆಯಿಲ್ಲದ ಸ್ಥಿತಿಯನ್ನು
ನೆನಸಿಕೊಂಡರೆ ಅದು ಕಹಿ ವಿಷದಂತಿದೆ.
20 ನನ್ನ ಸಂಕಷ್ಟಗಳನ್ನೆಲ್ಲ ನಾನು ಚೆನ್ನಾಗಿ ಜ್ಞಾಪಿಸಿಕೊಳ್ಳುವೆನು,
ಆದ್ದರಿಂದ ನಾನು ತುಂಬಾ ವ್ಯಸನಗೊಂಡಿದ್ದೇನೆ.
21 ಆದರೆ ನಾನು ಬೇರೊಂದನ್ನು ಯೋಚಿಸಿಕೊಂಡಾಗ ನಾನು ನಿರೀಕ್ಷೆಯುಳ್ಳವನಾಗುವೆನು.
ನಾನು ಯೋಚಿಸಿಕೊಳ್ಳುವದೇನೆಂದರೆ:
22 ಯೆಹೋವನ ಪ್ರೀತಿಗೂ ಕರುಣೆಗೂ ಕೊನೆಯೇ ಇಲ್ಲ.
ಆತನ ದಯೆಗೆ ಅಂತ್ಯವೇ ಇಲ್ಲ.
23 ಪ್ರತಿ ಮುಂಜಾನೆಯೂ ಆತನು ಅದನ್ನು ಹೊಸ ರೀತಿಗಳಲ್ಲಿ ತೋರಿಸುವನು.
ಯೆಹೋವನೇ, ನೀನು ಎಷ್ಟೋ ಸತ್ಯವಂತನು ಮತ್ತು ನಂಬಿಗಸ್ತನು!
24 ನಾನು ನನ್ನೊಳಗೆ, “ಯೆಹೋವನೇ ನನ್ನ ಪಾಲು;
ಆದ್ದರಿಂದ ನಾನು ಆತನಲ್ಲಿ ಭರವಸವಿಡುವೆನು” ಎಂದುಕೊಳ್ಳುವೆನು.
25 ಯೆಹೋವನು ತನಗಾಗಿ ಕಾಯುವ ಜನರಿಗೆ ಒಳ್ಳೆಯವನಾಗಿರುತ್ತಾನೆ.
ಯೆಹೋವನು ತನ್ನನ್ನು ಎದುರುನೋಡುವ ಜನರಿಗೆ ಒಳ್ಳೆಯವನಾಗಿರುತ್ತಾನೆ.
26 ತನ್ನ ರಕ್ಷಣೆಗಾಗಿ ಯೆಹೋವನಿಗಾಗಿಯೇ
ಮೌನದಿಂದ ಕಾಯುವುದು ಮನುಷ್ಯನಿಗೆ ಒಳ್ಳೆಯದು.
137 ನಾವು ಬಾಬಿಲೋನ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು
ಚೀಯೋನನ್ನು ನೆನಸಿಕೊಳ್ಳುತ್ತಾ ಅತ್ತೆವು.
2 ಸಮೀಪದಲ್ಲಿದ್ದ ನೀರವಂಜಿ ಮರಗಳಿಗೆ ನಾವು ನಮ್ಮ ಹಾರ್ಪ್ವಾದ್ಯಗಳನ್ನು ತೂಗುಹಾಕಿದೆವು.
3 ನಮ್ಮನ್ನು ಸೆರೆಹಿಡಿದಿದ್ದ ಜನರು
ಬಾಬಿಲೋನಿನಲ್ಲಿ ನಮಗೆ ಚೀಯೋನಿನ ಕುರಿತು ಹರ್ಷಗೀತೆಗಳನ್ನು ಹಾಡಲು ಹೇಳಿದರು.
4 ಆದರೆ ಪರದೇಶದಲ್ಲಿ
ಯೆಹೋವನ ಹಾಡುಗಳನ್ನು ನಾವು ಹಾಡುವಂತಿಲ್ಲ!
5 ಜೆರುಸಲೇಮೇ, ನಿನ್ನನ್ನು ನಾನೆಂದಾದರೂ ಮರೆಯುವುದಾದರೆ,
ನಾನು ಮತ್ತೆಂದಿಗೂ ಹಾಡನ್ನು ಹಾಡದಂತಾಗಲಿ.
6 ಜೆರುಸಲೇಮೇ, ನಿನ್ನನ್ನು ನಾನೆಂದಾದರೂ ಮರೆಯುವುದಾದರೆ,
ನಾನು ಮತ್ತೆಂದಿಗೂ ಹಾಡಲು ಶಕ್ತನಾಗದಂತಾಗಲಿ.
ಜೆರುಸಲೇಮೇ, ನಿನ್ನ ವಿಷಯದಲ್ಲೇ
ನಾನು ಅತ್ಯಾನಂದಪಡುವೆನೆಂದು ಪ್ರಮಾಣ ಮಾಡುವೆ.
7 ಯೆಹೋವನೇ ನಿಶ್ಚಯವಾಗಿ ಎದೋಮ್ಯರನ್ನು ದಂಡಿಸು.
ಯಾಕೆಂದರೆ ಜೆರುಸಲೇಮ್ ಸೆರೆಹಿಡಿಯಲ್ಪಟ್ಟಾಗ
ಅವರು, “ಅದರ ಕಟ್ಟಡಗಳನ್ನು ಕೆಡವಿಹಾಕಿ.
ಅವುಗಳನ್ನು ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಆರ್ಭಟಿಸಿದರು.
8 ಬಾಬಿಲೋನೇ, ನೀನು ನಾಶವಾಗುವೆ!
ನಿನಗೆ ತಕ್ಕ ದಂಡನೆಯನ್ನು ಕೊಡುವವನು ಧನ್ಯನು.
ನೀನು ನಮ್ಮನ್ನು ನೋಯಿಸಿದಂತೆ ನಿನ್ನನ್ನೂ ನೋಯಿಸುವವನು ಧನ್ಯನು.
9 ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನು ಧನ್ಯನು.
1 ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ತಿಮೊಥೆಯನಿಗೆ ಬರೆಯುವ ಪತ್ರ. ದೇವರ ಚಿತ್ತಾನುಸಾರವಾಗಿ ನಾನು ಅಪೊಸ್ತಲನಾದೆನು. ಕ್ರಿಸ್ತ ಯೇಸುವಿನಲ್ಲಿರುವ ಜೀವ ವಾಗ್ದಾನವನ್ನು ಜನರಿಗೆ ತಿಳಿಯಪಡಿಸಲು ದೇವರು ನಮ್ಮನ್ನು ಕಳುಹಿಸಿದನು.
2 ತಿಮೊಥೆಯನೇ, ನೀನು ನನಗೆ ಪ್ರಿಯ ಮಗನಂತಿರುವೆ.
ತಂದೆಯಾದ ದೇವರಿಂದ ಮತ್ತು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಿಂದ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಲಭಿಸಲಿ.
ಕೃತಜ್ಞತಾಸ್ತುತಿ ಮತ್ತು ಪ್ರೋತ್ಸಾಹ
3 ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ತಪ್ಪದೆ ನಿನ್ನನ್ನು ಜ್ಞಾಪಿಸಿಕೊಂಡು ನಿನ್ನ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇನೆ. ನನ್ನ ಪೂರ್ವಿಕರು ಸೇವೆ ಸಲ್ಲಿಸಿದ್ದು ಆತನಿಗೇ. ಯೋಗ್ಯವಾದದ್ದೆಂದು ನನಗೆ ತಿಳಿದಿರುವುದನ್ನೇ ಮಾಡುತ್ತಾ ಆತನ ಸೇವೆ ಮಾಡುತ್ತಿದ್ದೇನೆ. 4 ನೀನು ನನಗಾಗಿ ಕಣ್ಣೀರು ಸುರಿಸಿದ್ದು ನನ್ನ ನೆನಪಿನಲ್ಲಿದೆ. ನಿನ್ನನ್ನು ನೋಡಬೇಕೆಂದು ಬಹಳ ಆಸೆಯಾಗಿದೆ. ನಿನ್ನನ್ನು ನೋಡಿದಾಗ ನನ್ನಲ್ಲಿ ಆನಂದವು ತುಂಬಿಹೋಗುವುದು. 5 ನಿನ್ನ ನಿಜವಾದ ನಂಬಿಕೆಯು ನನ್ನ ನೆನಪಿನಲ್ಲಿದೆ. ಆ ವಿಧವಾದ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಲ್ಲೂ ನಿನ್ನ ತಾಯಿಯಾದ ಯೂನಿಕೆಯಲ್ಲೂ ಇತ್ತು. ಈಗ ಅದೇ ನಂಬಿಕೆಯು ನಿನ್ನಲ್ಲಿಯೂ ಇದೆಯೆಂದು ನನಗೆ ತಿಳಿದಿದೆ. 6 ದೇವರು ನಿನಗೆ ದಯಪಾಲಿಸಿರುವ ವರವನ್ನು ನೀನು ನೆನಪು ಮಾಡಿಕೊಳ್ಳಬೇಕೆಂದು ನಾನು ಅಪೇಕ್ಷಿಸುವುದು ಈ ಕಾರಣದಿಂದಲೇ. ನಾನು ನನ್ನ ಕೈಗಳನ್ನು ನಿನ್ನ ಮೇಲಿಟ್ಟಾಗ ಆತನು ನಿನಗೆ ಆ ವರವನ್ನು ದಯಪಾಲಿಸಿದನು. ಬೆಂಕಿಯ ಕಿಡಿಯು ಪ್ರಜ್ವಲವಾಗಿ ದಟ್ಟವಾದ ಬೆಂಕಿಯಾಗುವಂತೆ ನಿನ್ನ ವರವನ್ನು ಉಪಯೋಗಿಸುತ್ತಾ ಅದನ್ನು ಅಧಿಕಗೊಳಿಸಬೇಕೆಂಬುದು ನನ್ನ ಅಪೇಕ್ಷೆ. 7 ದೇವರು ನಮಗೆ ಕೊಟ್ಟದ್ದು ನಮ್ಮನ್ನು ಹೇಡಿಗಳನ್ನಾಗಿ ಮಾಡುವ ಆತ್ಮವನ್ನಲ್ಲ. ನಮ್ಮನ್ನು ಬಲದಿಂದ, ಪ್ರೀತಿಯಿಂದ ಮತ್ತು ಸ್ವಶಿಕ್ಷಣದಿಂದ ತುಂಬಿಸುವ ಆತ್ಮವನ್ನು ಆತನು ಕೊಟ್ಟನು.
8 ನಮ್ಮ ಪ್ರಭುವಾದ ಯೇಸುವನ್ನು ಕುರಿತು ಜನರಿಗೆ ತಿಳಿಸುವುದಕ್ಕಾಗಲಿ ಪ್ರಭುವಿಗಾಗಿ ಸೆರೆಯಲ್ಲಿರುವ ನನ್ನ ವಿಷಯದಲ್ಲಾಗಲಿ ನಾಚಿಕೆಪಟ್ಟುಕೊಳ್ಳಬೇಡ. ಅದಕ್ಕೆ ಬದಲಾಗಿ ಸುವಾರ್ತೆಗೋಸ್ಕರ ನನ್ನೊಡನೆ ಸಂಕಟವನ್ನು ಅನುಭವಿಸು. ಅದಕ್ಕೆ ಬೇಕಾದ ಶಕ್ತಿಯನ್ನು ದೇವರೇ ನಮಗೆ ದಯಪಾಲಿಸುತ್ತಾನೆ.
9 ಆತನು ನಮ್ಮನ್ನು ರಕ್ಷಿಸಿ, ತನ್ನ ಪವಿತ್ರ ಜನರಾಗಿರುವುದಕ್ಕಾಗಿ ನಮ್ಮನ್ನು ಕರೆದನು. ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದ ಹೀಗಾಯಿತು ಎಂದಲ್ಲ. ಆತನು ತನ್ನ ಸಂಕಲ್ಪಕ್ಕನುಸಾರವಾಗಿ ಮತ್ತು ಕೃಪೆಗನುಸಾರವಾಗಿ ನಮ್ಮನ್ನು ರಕ್ಷಿಸಿ ತನ್ನವರನ್ನಾಗಿ ಮಾಡಿದನು. ಅನಾದಿಕಾಲದಲ್ಲಿಯೇ ಈ ಕೃಪೆಯು ಕ್ರಿಸ್ತ ಯೇಸುವಿನ ಮೂಲಕ ನಮಗೆ ದೊರೆಯಿತು. 10 ಆ ಕೃಪೆಯನ್ನು ಈವರೆಗೆ ನಮಗೆ ತೋರ್ಪಡಿಸಿರಲಿಲ್ಲ. ನಮ್ಮ ರಕ್ಷಕನಾದ ಕ್ರಿಸ್ತ ಯೇಸು ಪ್ರತ್ಯಕ್ಷನಾದಾಗ ಅದನ್ನು ನಮಗೆ ತೋರಿಸಲಾಯಿತು. ಯೇಸು ಮರಣವನ್ನು ನಾಶಪಡಿಸಿ, ನಮಗೆ ಜೀವಮಾರ್ಗವನ್ನು ಸುವಾರ್ತೆಯ ಮೂಲಕ ತೋರಿದನು.
11 ಆ ಸುವಾರ್ತೆಗೋಸ್ಕರ ನನ್ನನ್ನು ಪ್ರಚಾರಕನನ್ನಾಗಿಯೂ ಅಪೊಸ್ತಲನನ್ನಾಗಿಯೂ ಉಪದೇಶಕನನ್ನಾಗಿಯೂ ಆರಿಸಿಕೊಳ್ಳಲಾಯಿತು. 12 ಸುವಾರ್ತೆಯನ್ನು ತಿಳಿಸಿದ್ದರಿಂದಲೇ ನಾನೀಗ ಸಂಕಟವನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನವು ಬರುವತನಕ ಸಂರಕ್ಷಿಸಲು ಆತನು ಸಮರ್ಥನೆಂಬುದನ್ನು ಖಚಿತವಾಗಿ ಬಲ್ಲೆನು.
13 ನನ್ನಿಂದ ಕೇಳಿರುವ ಸತ್ಯಬೋಧನೆಗಳನ್ನು ಅನುಸರಿಸು. ನೀನು ಏನನ್ನು ಉಪದೇಶ ಮಾಡಬೇಕೆಂಬುದಕ್ಕೆ ಆ ಬೋಧನೆಗಳೇ ನಿನಗೆ ದೃಷ್ಟಾಂತಗಳಾಗಿವೆ. 14 ನಿನ್ನ ವಶಕ್ಕೆ ಕೊಟ್ಟಿರುವ ಸತ್ಯವನ್ನು ಪವಿತ್ರಾತ್ಮನ ಸಹಾಯದಿಂದ ಸಂರಕ್ಷಿಸು. ಆತನು ನಮ್ಮೊಳಗೆ ವಾಸ ಮಾಡುತ್ತಿದ್ದಾನೆ.
ನಿಮ್ಮ ನಂಬಿಕೆ ಎಷ್ಟು ದೊಡ್ಡದು?
5 ಅಪೊಸ್ತಲರು ಪ್ರಭುವಿಗೆ (ಯೇಸು), “ನಮ್ಮ ನಂಬಿಕೆಯನ್ನು ಹೆಚ್ಚಿಸು!” ಎಂದು ಕೇಳಿಕೊಂಡರು.
6 ಪ್ರಭುವು ಅವರಿಗೆ ಹೀಗೆಂದನು: “ನಿಮ್ಮ ನಂಬಿಕೆ ಸಾಸಿವೆ ಕಾಳಷ್ಟು ದೊಡ್ಡದಾಗಿದ್ದರೆ, ನೀವು ಈ ಅತ್ತಿಮರಕ್ಕೆ, ‘ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿದರೂ ಅದು ನಿಮಗೆ ವಿಧೇಯವಾಗುತ್ತದೆ.
ಒಳ್ಳೆಯ ಸೇವಕರಾಗಿರಿ
7 “ನಿಮ್ಮಲ್ಲಿ ಒಬ್ಬನಿಗೆ ಹೊಲದಲ್ಲಿ ಕೆಲಸ ಮಾಡುವಂಥ ಒಬ್ಬ ಸೇವಕನಿದ್ದಾನೆಂದು ಭಾವಿಸಿಕೊಳ್ಳೋಣ. ಆ ಸೇವಕನು ಭೂಮಿಯನ್ನು ಉಳುತ್ತಿರುತ್ತಾನೆ ಅಥವಾ ಕುರಿಗಳನ್ನು ಮೇಯಿಸುತ್ತಿರುತ್ತಾನೆ. ಆ ಸೇವಕನು ಹೊಲದಲ್ಲಿ ಕೆಲಸ ಮುಗಿಸಿ ಮನೆಗೆ ಬಂದಾಗ ನೀನು ಅವನಿಗೆ ಏನು ಹೇಳುವೆ? ‘ಒಳಗೆ ಬಾ! ಊಟಕ್ಕೆ ಕುಳಿತುಕೊ’ ಎಂದು ಹೇಳುವಿಯೋ? 8 ಇಲ್ಲ! ನೀನು ಅವನಿಗೆ, ‘ನನಗೋಸ್ಕರ ಅಡಿಗೆ ಮಾಡು. ಬಳಿಕ ಶುಭ್ರವಾದ ಬಟ್ಟೆಯನ್ನು ಧರಿಸಿಕೊಂಡು ಬಂದು ನನಗೆ ಊಟಬಡಿಸು. ನಾನು ತಿಂದು ಕುಡಿದ ಮೇಲೆ ನೀನು ಊಟಮಾಡು’ ಎಂದು ಹೇಳುವೆಯಷ್ಟೇ. 9 ಆ ಸೇವಕನು ತನ್ನ ಕೆಲಸ ಮಾಡಿದ್ದಕ್ಕಾಗಿ ನೀನೇನೂ ಅವನಿಗೆ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಬೇಕಾಗಿಲ್ಲ. ಸೇವಕನಿರುವುದು ಯಜಮಾನನು ಹೇಳಿದ್ದನ್ನು ಮಾಡುವುದಕ್ಕಾಗಿಯಷ್ಟೇ. 10 ಇದೇ ನಿಯಮ ನಿಮಗೂ ಅನ್ವಯಿಸುತ್ತದೆ. ನಿಮಗೆ ನೇಮಿಸಿದ ಕೆಲಸಗಳನ್ನು ನೀವು ಮಾಡಿ ಪೂರೈಸಿದಾಗ, ‘ನಾವು ಆಳುಗಳು, ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ’ ಎಂದು ಹೇಳಬೇಕು.”
Kannada Holy Bible: Easy-to-Read Version. All rights reserved. © 1997 Bible League International