Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 119:137-144

137 ಯೆಹೋವನೇ, ನೀನು ನೀತಿಸ್ವರೂಪನಾಗಿರುವೆ.
    ನಿನ್ನ ತೀರ್ಪುಗಳು ನ್ಯಾಯವಾಗಿವೆ.
138 ನೀನು ನೀತಿಯ ಕಟ್ಟಳೆಗಳನ್ನೇ ಕೊಟ್ಟಿರುವೆ.
    ಅವು ನಂಬಿಕೆಗೆ ಯೋಗ್ಯವಾಗಿವೆ.
139 ನನ್ನ ಅಭಿಮಾನವು ನನ್ನನ್ನು ದಹಿಸುತ್ತಿದೆ.
    ಯಾಕೆಂದರೆ ನನ್ನ ವೈರಿಗಳು ನಿನ್ನ ಆಜ್ಞೆಗಳನ್ನು ಮರೆತುಬಿಟ್ಟಿದ್ದರಿಂದ ನನಗೆ ಬೇಸರವಾಗಿದೆ.
140 ನಿನ್ನ ವಾಗ್ದಾನಗಳು ಪರೀಕ್ಷಿಸಲ್ಪಟ್ಟಿವೆ.
    ಅವು ನನಗೆ ಪ್ರಿಯವಾಗಿವೆ.
141 ನಾನು ಅಲ್ಪನೂ ತಿರಸ್ಕೃತನೂ ಆಗಿದ್ದೇನೆ.
    ಆದರೂ ನಾನು ನಿನ್ನ ನಿಯಮಗಳನ್ನು ಮರೆಯುವುದಿಲ್ಲ.
142 ನಿನ್ನ ನೀತಿಯು ಶಾಶ್ವತವಾದದ್ದು.
    ನಿನ್ನ ಉಪದೇಶಗಳು ನಂಬಿಕೆಗೆ ಯೋಗ್ಯವಾಗಿವೆ.
143 ಕಷ್ಟಸಂಕಟಗಳು ನನಗೆ ಬಂದಿದ್ದವು.
    ನಿನ್ನ ಆಜ್ಞೆಗಳು ನನಗೆ ಆನಂದಕರವಾಗಿವೆ.
144 ನಿನ್ನ ಕಟ್ಟಳೆಗಳು ಸದಾಕಾಲ ನೀತಿಯ ಕಟ್ಟಳೆಗಳಾಗಿವೆ.
    ಅವುಗಳನ್ನು ಅರ್ಥಮಾಡಿಕೊಳ್ಳಲು ನನಗೆ ಸಹಾಯಮಾಡು, ಆಗ ಬದುಕಿಕೊಳ್ಳುವೆನು.

ಹಬಕ್ಕೂಕ 1:5-17

ಹಬಕ್ಕೂಕನಿಗೆ ದೇವರ ಉತ್ತರ

ಯೆಹೋವನು ಉತ್ತರಿಸುತ್ತಾ, “ಇತರ ದೇಶಗಳನ್ನು ನೋಡು, ಅವರನ್ನು ಗಮನಿಸು. ನೀನು ಆಶ್ಚರ್ಯಪಡುವೆ. ನೀನು ನಿನ್ನ ಜೀವಮಾನದಲ್ಲಿಯೇ ಅಚ್ಚರಿಪಡುವಂಥ ವಿಷಯವನ್ನು ನಾನು ನಡಿಸುತ್ತೇನೆ. ನೀನು ಅದನ್ನು ನೋಡಿ ನಂಬುವೆ. ನಿನಗೆ ಅದರ ವಿಷಯವಾಗಿ ತಿಳಿಸಲ್ಪಟ್ಟರೂ ನೀನು ನಂಬುವದಿಲ್ಲ. ನಾನು ಬಾಬಿಲೋನಿನವರನ್ನು ಬಲಾಢ್ಯ ಜನಾಂಗವಾಗಿ ಮಾಡುವೆನು. ಅವರು ಬಲಶಾಲಿಗಳೂ ನಿರ್ದಯಿಗಳೂ ಆಗಿದ್ದಾರೆ. ಅವರು ಲೋಕದಲ್ಲೆಲ್ಲಾ ಸಂಚರಿಸುವರು. ತಮ್ಮದಲ್ಲದ ಮನೆಗಳನ್ನು ಮತ್ತು ನಗರಗಳನ್ನು ತಮ್ಮ ವಶಮಾಡಿಕೊಳ್ಳುವರು. ಬಾಬಿಲೋನಿನ ಜನರು ಇತರರಲ್ಲಿ ಭಯ ಹುಟ್ಟಿಸುವರು. ಅವರು ತಮ್ಮ ಇಷ್ಟಬಂದ ಹಾಗೆ ಮಾಡುವರು; ಇಷ್ಟಬಂದ ಕಡೆಗೆ ಹೋಗುವರು. ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿವೆ; ಸೂರ್ಯಸ್ತಮಾನ ಕಾಲದಲ್ಲಿ ತೋಳಗಳಿಗಿಂತ ಭಯಂಕರವಾಗಿವೆ. ಅವರ ರಾಹುತರು ಬಹುದೂರ ದೇಶದಿಂದ ಬಂದರು. ಹಸಿದ ಗಿಡುಗ ಹೇಗೆ ಆಕಾಶದಿಂದ ನೆಲದ ಮೇಲಿರುವ ಆಹಾರದ ಮೇಲೆ ಬೀಳುತ್ತದೋ ಅದೇ ರೀತಿಯಲ್ಲಿ ಅವರ ರಾಹುತರು ವೈರಿಗಳ ಮೇಲೆ ಬೀಳುವರು. ಅವರು ಬಯಸುವುದು ಯುದ್ಧವೊಂದನ್ನೇ. ಅವರ ಸೈನ್ಯವು ಮರುಭೂಮಿಯ ಮೇಲೆ ಬೀಸುವ ಗಾಳಿಯ ತರಹ ವೇಗವಾಗಿ ಸಂಚರಿಸುವದು. ಮತ್ತು ಬಾಬಿಲೋನಿನ ಸೈನಿಕರು ಮರಳಿನಷ್ಟು ಅಸಂಖ್ಯಾತ ಜನರನ್ನು ಸೆರೆಹಿಡಿಯುತ್ತಾರೆ.

10 “ಇತರ ಜನಾಂಗದ ಅರಸರನ್ನು ಬಾಬಿಲೋನಿನ ಸೈನಿಕರು ಗೇಲಿ ಮಾಡುತ್ತಾರೆ. ಪರದೇಶದ ಅರಸರು ಅವರಿಗೆ ಹಾಸ್ಯಾಸ್ಪದವಾಗಿರುತ್ತಾರೆ. ಕೋಟೆಕೊತ್ತಲುಗಳಿರುವ ನಗರವನ್ನು ನೋಡಿ ಅವರು ನಗಾಡುವರು. ಆ ಸೈನಿಕರು ಕೋಟೆಯ ಗೋಡೆಯ ತನಕ ಮಣ್ಣಿನದಿಬ್ಬವನ್ನೇರಿಸಿ, ಸುಲಭವಾಗಿ ಪಟ್ಟಣಗಳನ್ನು ವಶಮಾಡಿಕೊಳ್ಳುವರು. 11 ಆ ಬಳಿಕ ಅವರು ಗಾಳಿಯಂತೆ ಅಲ್ಲಿಂದ ಬೇರೆ ಸ್ಥಳಗಳ ಮೇಲೆ ದಾಳಿಮಾಡಲು ಹೊರಟುಹೋಗುವರು. ಬಾಬಿಲೋನಿನವರು ಆರಾಧಿಸುವ ಒಂದೇ ವಿಷಯ ಯಾವದೆಂದರೆ ಅವರ ಸ್ವಂತ ಶಕ್ತಿಯನ್ನೇ.”

ಹಬಕ್ಕೂಕನ ಎರಡನೇ ದೂರು

12 ಆಗ ಹಬಕ್ಕೂಕನು ಹೇಳಿದ್ದೇನೆಂದರೆ,
ಯೆಹೋವನೇ, ನೀನು ನಿತ್ಯಕಾಲಕ್ಕೂ ಜೀವಿಸುವ ದೇವರು.
    ನೀನು ಎಂದಿಗೂ ಸಾಯದ ನನ್ನ ಪರಿಶುದ್ಧ ದೇವರು.
ನೀನು ಯೋಚಿಸುವದನ್ನು ನೆರವೇರಿಸಲು ಬಾಬಿಲೋನಿನವರನ್ನು ಸೃಷ್ಟಿಸಿರುವೆ.
    ನಮ್ಮ ಬಂಡೆಯಾದ ನೀನು ಯೆಹೂದದ ಜನರನ್ನು ಶಿಕ್ಷಿಸುವುದಕ್ಕಾಗಿಯೇ ಅವರನ್ನು ಸೃಷ್ಟಿಸಿರುವೆ.
13 ಕೆಡುಕನ್ನು ದೃಷ್ಟಿಸಲಾರದಷ್ಟು ನಿನ್ನ ಕಣ್ಣುಗಳು ಶುದ್ಧವಾಗಿವೆ.
    ಜನರು ಮಾಡುವ ದುಷ್ಕೃತ್ಯಗಳನ್ನು ನೀನು ನೋಡಲಾರೆ.
ಹೀಗಿರಲು ಆ ಕೆಡುಕರು ಜಯಗಳಿಸುವದನ್ನು ನೀನು ಹೇಗೆ ವೀಕ್ಷಿಸಬಲ್ಲೆ?
    ದುಷ್ಟರು ಒಳ್ಳೆಯವರನ್ನು ಸೋಲಿಸಿದಾಗ ನೀನು ನಿನ್ನ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಬಾರದೇಕೆ?
    ಒಳ್ಳೆಯ ಜನರನ್ನು ಕೆಟ್ಟ ಜನರು ಸೋಲಿಸುವುದನ್ನು ನೀನು ಹೇಗೆ ನೋಡುವೆ?

14 ಸಮುದ್ರದಲ್ಲಿರುವ ಮೀನುಗಳಂತೆ ನೀನು ಜನರನ್ನು ಸೃಷ್ಟಿಸಿರುವೆ.
    ಅವರು ಒಬ್ಬ ನಾಯಕನಿಂದ ಸಮುದ್ರಪ್ರಾಣಿಗಳಂತಿದ್ದಾರೆ,
15 ಅವೆಲ್ಲವನ್ನು ಗಾಳ, ಬಲೆಗಳಿಂದ ವೈರಿಯು ಹಿಡಿಯುತ್ತಾನೆ.
    ಬಲೆಯಲ್ಲಿ ಅವುಗಳನ್ನು ವೈರಿಯು ಹಿಡಿದು ಎಳೆಯುವನು.
    ತಾನು ಹಿಡಿದನೆಂದು ವೈರಿಯು ಹರ್ಷಿಸುವನು.
16 ಅವನ ಬಲೆಗಳು ಅವನು ಧನಿಕನಂತೆ ಜೀವಿಸಲು ಸಹಾಯ ಮಾಡುವವು.
    ಅವನು ಒಳ್ಳೆಯ ಆಹಾರವನ್ನು ಉಣ್ಣುವನು.
ಅದಕ್ಕೆ ವೈರಿಯು ತನ್ನ ಬಲೆಯನ್ನು ಆರಾಧಿಸುವನು.
    ಅವನು ಯಜ್ಞವನ್ನರ್ಪಿಸಿ ಧೂಪ ಹಾಕುವನು.
    ಬಲೆಯನ್ನು ಗೌರವಿಸುವನು.
17 ಅವನು ತನ್ನ ಬಲೆಯಿಂದ ಐಶ್ವರ್ಯವನ್ನು ಹೊಂದುತ್ತಾ ಮುಂದರಿಯುವನೋ?
    ನಿರ್ದಯೆಯಿಂದ ಜನರನ್ನು ನಾಶಮಾಡುತ್ತಲೇ ಇರುವನೋ?

2 ಪೇತ್ರನು 1:1-11

ಯೇಸು ಕ್ರಿಸ್ತನ ಸೇವಕನೂ ಅಪೊಸ್ತಲನೂ ಆದ ಸಿಮೆಯೋನ ಪೇತ್ರನು ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿರುವ ಜನರೆಲ್ಲರಿಗೂ ಬರೆಯುವ ಪತ್ರ. ನಮ್ಮ ದೇವರೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನು ನೀತಿವಂತನಾಗಿರುವುದರಿಂದ ನೀವು ಆ ನಂಬಿಕೆಯನ್ನು ಪಡೆದುಕೊಂಡಿರಿ. ಆತನು ಯೋಗ್ಯವಾದದ್ದನ್ನೇ ಮಾಡುತ್ತಾನೆ.

ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ. ದೇವರನ್ನು ಮತ್ತು ನಮ್ಮ ಪ್ರಭುವಾದ ಯೇಸುವನ್ನು ನೀವು ನಿಜವಾಗಿಯೂ ತಿಳಿದಿರುವುದರಿಂದ ನಿಮಗೆ ಕೃಪೆಯೂ ಶಾಂತಿಯೂ ದೊರೆಯಲಿ.

ನಮಗೆ ಬೇಕಾದುದನ್ನೆಲ್ಲಾ ದೇವರು ದಯಪಾಲಿಸಿದ್ದಾನೆ

ಯೇಸುವಿಗೆ ದೇವರ ಶಕ್ತಿಯಿದೆ. ಜೀವಿಸಲು ಮತ್ತು ದೇವರ ಸೇವೆ ಮಾಡಲು ಬೇಕಾದ ಪ್ರತಿಯೊಂದನ್ನು ಆತನ ಶಕ್ತಿಯು ನಮಗೆ ಒದಗಿಸಿದೆ. ನಾವು ಆತನನ್ನು ಬಲ್ಲವರಾದ್ದರಿಂದಲೇ ಅವುಗಳನ್ನು ಪಡೆದುಕೊಂಡಿದ್ದೇವೆ. ಯೇಸು ತನ್ನ ಪ್ರಭಾವದಿಂದಲೂ ಗುಣಾತಿಶಯದಿಂದಲೂ ನಮ್ಮನ್ನು ಕರೆದನು. ಯೇಸು ತಾನು ಮಾಡಿದ ವಾಗ್ದಾನದಂತೆ, ತನ್ನ ಪ್ರಭಾವ ಮತ್ತು ಗುಣಾತಿಶಯಗಳ ಮೂಲಕ ನಮಗೆ ಅಮೂಲ್ಯವಾದ ಹಾಗೂ ಉತ್ಕೃಷ್ಟವಾದ ವರಗಳನ್ನು ದಯಪಾಲಿಸಿರುವನು. ಆ ವರಗಳಿಂದ ನೀವು ದೇವರ ಗುಣಾತಿಶಯದಲ್ಲಿ ಪಾಲುಗಾರರಾಗಲು ಸಾಧ್ಯ. ಹೀಗಿರಲಾಗಿ ನೀವು ಈ ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನಕ್ಕೆ ತಪ್ಪಿಸಿಕೊಂಡವರಾಗಿದ್ದೀರಿ.

ನೀವು ಈ ಆಶೀರ್ವಾದಗಳನ್ನು ಹೊಂದಿರುವುದರಿಂದ ಅವುಗಳನ್ನು ನಿಮ್ಮ ಜೀವಿತಕ್ಕೆ ಅಳವಡಿಸಿಕೊಳ್ಳಲು ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನಿಸಿ. ನಿಮ್ಮ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ದೇವರ ಸೇವೆಯನ್ನೂ ದೇವರ ಸೇವೆಗೆ ಸಹೋದರ ಸ್ನೇಹವನ್ನೂ ಸಹೋದರ ಸ್ನೇಹಕ್ಕೆ ಪ್ರೀತಿಯನ್ನೂ ಸೇರಿಸಿರಿ ಇವೆಲ್ಲವೂ ನಿಮ್ಮಲ್ಲಿದ್ದು ಬೆಳೆಯುತ್ತಿದ್ದರೆ, ನೀವು ಎಂದಿಗೂ ನಿರರ್ಥಕರಾಗದಂತೆ ಇವು ನಿಮಗೆ ಸಹಾಯ ಮಾಡುತ್ತವೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಜ್ಞಾನದಲ್ಲಿ ಎಂದಿಗೂ ಅಯೋಗ್ಯರೆನಿಸಿಕೊಳ್ಳದಂತೆ ಇವು ನಿಮಗೆ ಸಹಾಯಮಾಡುತ್ತವೆ. ಆದರೆ ಇವು ಯಾವನಲ್ಲಿ ಇರುವುದಿಲ್ಲವೋ ಅವನು ಸ್ಪಷ್ಟವಾಗಿ ನೋಡಲಾರನು. ಅವನು ಕುರುಡನಾಗಿದ್ದಾನೆ; ತಾನು ಶುದ್ಧನಾದದ್ದನ್ನು ಮರೆತವನಾಗಿದ್ದಾನೆ.

10 ನನ್ನ ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ತನ್ನವರನ್ನಾಗಿ ಆರಿಸಿಕೊಳ್ಳಲು ಕರೆದನು. ಆದ್ದರಿಂದಲೇ ನೀವು ದೇವರಿಂದ ನಿಜವಾಗಿಯೂ ಕರೆಯಲ್ಪಟ್ಟವರೆಂದೂ ಆರಿಸಲ್ಪಟ್ಟವೆರೆಂದೂ ತೋರಿಸಲು ಬಹಳವಾಗಿ ಪ್ರಯತ್ನಿಸಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡವಿಬೀಳುವುದಿಲ್ಲ. 11 ನಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸುಕ್ರಿಸ್ತನ ರಾಜ್ಯದಲ್ಲಿ ನಿಮಗೆ ಮಹಾ ಸ್ವಾಗತವನ್ನು ನೀಡಲಾಗುವುದು. ಆ ರಾಜ್ಯವು ಶಾಶ್ವತವಾದದ್ದು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International