Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಯೆರೆಮೀಯ 23:1-6

23 ಯೆಹೋವನ ಸಂದೇಶವಿದು: “ಯೆಹೂದದ ಕುರುಬರಿಗೆ ಒಳ್ಳೆಯದಾಗುವದಿಲ್ಲ. ಈ ಕುರುಬರು ಕುರಿಗಳನ್ನು ಹಾಳುಮಾಡುತ್ತಿದ್ದಾರೆ. ಅವರು ನನ್ನ ಹುಲ್ಲುಗಾವಲಿನಿಂದ ಕುರಿಗಳು ಎಲ್ಲಾ ದಿಕ್ಕುಗಳಿಗೂ ಓಡಿಹೋಗುವಂತೆ ಮಾಡುತ್ತಿದ್ದಾರೆ.”

ಆ ಕುರುಬರು ನನ್ನ ಜನರಿಗೆ ಹೊಣೆಗಾರರಾಗಿದ್ದಾರೆ. ಇಸ್ರೇಲಿನ ದೇವರಾದ ಯೆಹೋವನು ಆ ಕುರುಬರಿಗೆ ಹೀಗೆ ಹೇಳುತ್ತಾನೆ, “ನನ್ನ ಕುರಿಗಳು ಎಲ್ಲಾ ದಿಕ್ಕುಗಳಿಗೂ ಚದರುವಂತೆ ನೀವು ಮಾಡಿರುವಿರಿ. ನೀವು ಅವುಗಳನ್ನು ಓಡಿಸಿಬಿಟ್ಟಿದ್ದೀರಿ. ನೀವು ಅವುಗಳ ಯೋಗಕ್ಷೇಮವನ್ನು ನೋಡಿಕೊಳ್ಳಲಿಲ್ಲ. ಈಗ ನಾನು ನಿಮ್ಮನ್ನು ವಿಚಾರಿಸಿಕೊಳ್ಳುತ್ತೇನೆ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮ್ಮನ್ನು ದಂಡಿಸುತ್ತೇನೆ.” ಯೆಹೋವನು ಹೀಗೆ ಹೇಳಿದನು. “ನಾನು ನನ್ನ ಕುರಿಗಳನ್ನು ಬೇರೆ ದೇಶಗಳಿಗೆ ಕಳುಹಿಸಿದೆ. ಆದರೆ ಉಳಿದ ನನ್ನ ಕುರಿಗಳನ್ನು ಒಂದೆಡೆ ಸೇರಿಸುವೆನು. ಅವುಗಳನ್ನು ಅವುಗಳ ಹುಲ್ಲುಗಾವಲಿಗೆ ತರುವೆನು. ಅವುಗಳಿಗೆ ಅನೇಕ ಮಕ್ಕಳಾಗಿ ಅವುಗಳ ಸಂಖ್ಯೆ ಬೆಳೆಯುವುದು. ನನ್ನ ಕುರಿಗಳನ್ನು ನೋಡಿಕೊಳ್ಳುವದಕ್ಕೆ ನಾನು ಹೊಸ ಕುರುಬರನ್ನು ನೇಮಿಸುವೆನು. ಆ ಕುರುಬರು ನನ್ನ ಕುರಿಗಳ ಯೋಗಕ್ಷೇಮವನ್ನು ನೋಡಿಕೊಳ್ಳುವರು. ನನ್ನ ಕುರಿಗಳು ಬೆದರುವದಿಲ್ಲ, ಭಯಪಡುವದಿಲ್ಲ. ನನ್ನ ಒಂದು ಕುರಿಯೂ ಕಳೆದುಹೋಗುವದಿಲ್ಲ.” ಇದು ಯೆಹೋವನ ಸಂದೇಶ.

ಸದ್ಧರ್ಮದ ಸಸಿ

ಇದು ಯೆಹೋವನ ಸಂದೇಶ:
“ನಾನು ಒಳ್ಳೆಯ ‘ಸಸಿಯನ್ನು’ ಚಿಗುರಿಸುವ ಕಾಲ ಬಂದಿದೆ.
    ಅವನು ಬುದ್ಧಿವಂತಿಕೆಯಿಂದ ಆಳುವ ರಾಜನಾಗಿರುವನು.
ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಬದ್ಧವಾದದ್ದನ್ನು ಮಾಡುವನು.
ಸದ್ಧರ್ಮದ ‘ಸಸಿಯ’ ಸಮಯದಲ್ಲಿ ಯೆಹೂದದ ಜನರು ರಕ್ಷಿಸಲ್ಪಡುವರು
    ಮತ್ತು ಇಸ್ರೇಲ್ ಸುರಕ್ಷಿತವಾಗಿರುವುದು.
ಯೆಹೋವನೇ, ನಮ್ಮ ಸದ್ಧರ್ಮ
    ಎಂಬ ಹೆಸರು ಅವನಿಗಾಗುವುದು.”

ಲೂಕ 1:68-79

68 “ಇಸ್ರೇಲರ ಪ್ರಭುವಾದ ದೇವರಿಗೆ ಸ್ತೋತ್ರವಾಗಲಿ.
    ಆತನು ಬಂದು ತನ್ನ ಜನರನ್ನು ಬಿಡುಗಡೆ ಮಾಡಿದ್ದಾನೆ.
69 ತನ್ನ ಸೇವಕನಾದ ದಾವೀದನ ಮನೆತನದಿಂದ
    ದೇವರು ವೀರರಕ್ಷಕನನ್ನು ನಮಗೆ ಕೊಟ್ಟಿದ್ದಾನೆ.
70 ಇದನ್ನು ಆತನು ಪೂರ್ವಕಾಲದ
    ತನ್ನ ಪವಿತ್ರ ಪ್ರವಾದಿಗಳ ಮೂಲಕ ತಿಳಿಸಿದ್ದಾನೆ.
71 ದೇವರು ನಮ್ಮನ್ನು ನಮ್ಮ ವೈರಿಗಳಿಂದಲೂ
    ದ್ವೇಷಿಗಳ ಹಿಡಿತದಿಂದಲೂ ರಕ್ಷಿಸಿದ್ದಾನೆ.
72 ಕರುಣೆ ತೋರುವುದಾಗಿ ನಮ್ಮ ಪಿತೃಗಳಿಗೆ ನೀಡಿದ
    ತನ್ನ ಪವಿತ್ರ ವಾಗ್ದಾನವನ್ನು ಆತನು ಜ್ಞಾಪಿಸಿಕೊಂಡಿದ್ದಾನೆ.
73 ನಮ್ಮ ವೈರಿಗಳ ಹಿಡಿತದಿಂದ ನಮ್ಮನ್ನು ಬಿಡಿಸುವುದಾಗಿ ದೇವರು ನಮ್ಮ ಪಿತೃವಾದ ಅಬ್ರಹಾಮನಿಗೆ ವಾಗ್ದಾನ ಮಾಡಿದ್ದಾನೆ.
74-75 ಏಕೆಂದರೆ ನಮ್ಮ ಜೀವಮಾನವೆಲ್ಲಾ ನಾವು ಆತನ ಸನ್ನಿಧಿಯಲ್ಲಿ ನೀತಿವಂತರೂ ಪರಿಶುದ್ಧರೂ ಆಗಿದ್ದು
    ಭಯವಿಲ್ಲದೆ ಆತನ ಸೇವೆ ಮಾಡಬೇಕೆಂಬುದೇ ಆತನ ಉದ್ದೇಶವಾಗಿತ್ತು.

76 “ಮಗುವೇ, ನೀನು ಮಹೋನ್ನತನ ಪ್ರವಾದಿ ಎನಿಸಿಕೊಳ್ಳುವೆ.
    ಪ್ರಭುವಿನ ಮುಂದೆ ಹೋಗಿ ಆತನ ಬರುವಿಕೆಗಾಗಿ ಜನರನ್ನು ಸಿದ್ಧಮಾಡುವೆ.
77 ಪಾಪಕ್ಷಮೆಯ ಮೂಲಕವಾಗಿ ರಕ್ಷಣೆಯಾಗುವುದೆಂಬ ತಿಳುವಳಿಕೆಯನ್ನು ನೀನು ಜನರಿಗೆ ಕೊಡುವೆ.

78 “ನಮ್ಮ ದೇವರ ಮಹಾಕರುಣೆಯಿಂದ
    ಪರಲೋಕದಿಂದ ಹೊಸ ದಿನವೊಂದು ನಮಗಾಗಿ ಉದಯಿಸುವುದು.
79 ಅಂಧಕಾರದಲ್ಲಿ ಜೀವಿಸುತ್ತಾ ಮರಣಭಯದಲ್ಲಿರುವ ಜನರಿಗೆ ದೇವರು ಸಹಾಯ ಮಾಡುವನು.
ಆತನು ನಮ್ಮನ್ನು ಸಮಾಧಾನದ ಮಾರ್ಗದಲ್ಲಿ ನಡೆಸುವನು.”

ಕೊಲೊಸ್ಸೆಯವರಿಗೆ 1:11-20

11 ಆತನ ಮಹಿಮಾಶಕ್ತಿಯಿಂದ ಪರಿಪೂರ್ಣ ಬಲ ಹೊಂದಿ ಆನಂದಪೂರ್ವಕವಾದ ತಾಳ್ಮೆಯನ್ನು, ದೀರ್ಘಶಾಂತಿಯನ್ನು ಯಾವಾಗಲೂ ತೋರಿಸುವವರಾಗಿರಬೇಕೆಂತಲೂ ನಾವು ಪ್ರಾರ್ಥಿಸುತ್ತಿದ್ದೇವೆ.

12 ಆಗ ನೀವು ಆನಂದದಿಂದ ತಂದೆಗೆ ಕೃತಜ್ಞತಾಸ್ತುತಿ ಮಾಡಬಲ್ಲಿರಿ. ಬೆಳಕಿನಲ್ಲಿ ವಾಸಿಸುವ ತನ್ನ ಜನರೆಲ್ಲರಿಗೂ ಆತನು ಸಿದ್ಧಪಡಿಸಿರುವಂಥವುಗಳನ್ನು ಹೊಂದಿಕೊಳ್ಳಲು ಆತನೇ ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದನು. 13 ದೇವರು ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡುಗಡೆ ಮಾಡಿದ್ದಾನೆ. ಆತನು ನಮ್ಮನ್ನು ತನ್ನ ಪ್ರಿಯ ಮಗನ (ಯೇಸುವಿನ) ರಾಜ್ಯದೊಳಗೆ ಸೇರಿಸಿದ್ದಾನೆ. 14 ಮಗನು ನಮ್ಮ ಪಾಪಗಳಿಗೆ ಪರಿಹಾರ ನೀಡಿದನು. ಆತನಲ್ಲಿಯೇ ನಮ್ಮ ಪಾಪಗಳಿಗೆ ಕ್ಷಮೆ ದೊರೆಯಿತು.

ನಾವು ಕ್ರಿಸ್ತನ ಕಡೆಗೆ ನೋಡುವಾಗ ದೇವರನ್ನೇ ಕಾಣುತ್ತೇವೆ

15 ದೇವರನ್ನು ನೋಡಲು ಯಾವ ವ್ಯಕ್ತಿಗೂ ಸಾಧ್ಯವಿಲ್ಲ.
    ಆದರೆ ಯೇಸುವು ದೇವರ ಪ್ರತಿರೂಪಿಯಾಗಿದ್ದಾನೆ.
    ಸೃಷ್ಟಿಸಲ್ಪಟ್ಟವುಗಳಿಗೆಲ್ಲಾ ಯೇಸು ಅಧಿಪತಿಯಾಗಿದ್ದಾನೆ.
16 ಭೂಲೋಕ ಮತ್ತು ಪರಲೋಕಗಳಲ್ಲಿರುವ ಎಲ್ಲವುಗಳು,
    ದೃಶ್ಯ ಮತ್ತು ಅದೃಶ್ಯವಾದವುಗಳು, ಆತ್ಮಿಕ ಶಕ್ತಿಗಳು,
    ಪ್ರಭುತ್ವಗಳು ಆತನ ಶಕ್ತಿಯಿಂದ ನಿರ್ಮಿತವಾಗಿವೆ. ಅಧಿಪತಿಗಳು ಮತ್ತು ಅಧಿಕಾರಿಗಳು ಆತನ ಶಕ್ತಿಯಿಂದ ನಿರ್ಮಿತರಾದರು.
ಸಮಸ್ತವೂ ಕ್ರಿಸ್ತನ ಮೂಲಕವಾಗಿ ಆತನಿಗೋಸ್ಕರ ಸೃಷ್ಟಿಸಲ್ಪಟ್ಟವು.

17 ಅವುಗಳಿಗಿಂತ ಮೊದಲೇ ಕ್ರಿಸ್ತನಿದ್ದನು.
    ಸಮಸ್ತಕ್ಕೂ ಆತನೇ ಆಧಾರಭೂತನಾಗಿದ್ದಾನೆ.
18 ಕ್ರಿಸ್ತನು ದೇಹಕ್ಕೆ (ಸಭೆಯ) ಶಿರಸ್ಸಾಗಿದ್ದಾನೆ.
    ಪ್ರತಿಯೊಂದೂ ಆತನಿಂದಲೇ ಬರುತ್ತದೆ.
    ಮರಣದಿಂದ ಪ್ರಥಮವಾಗಿ ಎದ್ದುಬಂದವನು ಆತನೇ.
ಆದ್ದರಿಂದ ಎಲ್ಲಾದರಲ್ಲಿಯೂ ಯೇಸುವೇ ಅತ್ಯಂತ ಪ್ರಾಮುಖ್ಯನಾಗಿದ್ದಾನೆ.

19 ಆತನಲ್ಲಿ ತನ್ನ ಸರ್ವಸಂಪೂರ್ಣತೆಯು ನೆಲಸಿರಬೇಕೆಂಬುದೂ,
20     ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ಸಮಾಧಾನವನ್ನು ಉಂಟುಮಾಡಿ
    ಭೂಪರಲೋಕಗಳಲ್ಲಿರುವ ಸಮಸ್ತವನ್ನು
ತನಗೆ ಸಂಧಾನಪಡಿಸಿಕೊಳ್ಳಬೇಕೆಂಬುದೂ ದೇವರ ಚಿತ್ತವಾಗಿತ್ತು.

ಲೂಕ 23:33-43

33 ಯೇಸುವನ್ನು ಮತ್ತು ಇಬ್ಬರು ದುಷ್ಕರ್ಮಿಗಳನ್ನು ಅವರು “ಕಪಾಲ”ವೆಂಬ ಸ್ಥಳಕ್ಕೆ ಕರೆದುಕೊಂಡು ಹೋದರು. ಅಲ್ಲಿ ಸೈನಿಕರು ಯೇಸುವನ್ನೂ ಆ ದುಷ್ಕರ್ಮಿಗಳನ್ನೂ ಶಿಲುಬೆಗಳಿಗೆ ಜಡಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಇನ್ನೊಬ್ಬನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದರು.

34 ಯೇಸು, “ತಂದೆಯೇ, ಇವರನ್ನು ಕ್ಷಮಿಸು. ಇವರಿಗೆ ತಾವು ಮಾಡುತ್ತಿರುವುದು ತಿಳಿದಿಲ್ಲ” ಎಂದು ಪ್ರಾರ್ಥಿಸಿದನು.

ಸೈನಿಕರು ಚೀಟುಹಾಕಿ ಯೇಸುವಿನ ಬಟ್ಟೆಗಳು ಯಾರಿಗೆ ಸೇರಬೇಕೆಂದು ತೀರ್ಮಾನಿಸಿದರು. 35 ಜನರು ನೋಡುತ್ತಾ ಅಲ್ಲಿ ನಿಂತಿದ್ದರು. ಯೆಹೂದ್ಯನಾಯಕರು ಯೇಸುವನ್ನು ನೋಡಿ ಗೇಲಿಮಾಡಿದರು. ಅವರು, “ಇವನು ದೇವರಿಂದ ಆರಿಸಲ್ಪಟ್ಟ ಕ್ರಿಸ್ತನಾಗಿದ್ದರೆ ತನ್ನನ್ನು ರಕ್ಷಿಸಿಕೊಳ್ಳಲಿ. ಇವನು ಬೇರೆಯವರನ್ನು ರಕ್ಷಿಸಿದನಲ್ಲವೇ?” ಅಂದರು.

36 ಸೈನಿಕರೂ ಯೇಸುವನ್ನು ಗೇಲಿಮಾಡಿದರು. ಅವರು ಯೇಸುವಿನ ಬಳಿಗೆ ಬಂದು, ಸ್ವಲ್ಪ ಹುಳಿದ್ರಾಕ್ಷಾರಸವನ್ನು ನೀಡಿ, 37 “ನೀನು ಯೆಹೂದ್ಯರ ಅರಸನಾಗಿದ್ದರೆ, ನಿನ್ನನ್ನು ರಕ್ಷಿಸಿಕೊ!” ಎಂದು ಹೇಳಿದರು. 38 (ಶಿಲುಬೆಯ ಮೇಲ್ಭಾಗದಲ್ಲಿ, “ಈತನು ಯೆಹೂದ್ಯರ ಅರಸನು” ಎಂದು ಬರೆಯಲಾಗಿತ್ತು.)

39 ದುಷ್ಕರ್ಮಿಗಳಲ್ಲೊಬ್ಬನು ಯೇಸುವನ್ನು ದೂಷಿಸಿ, “ನೀನು ಕ್ರಿಸ್ತನಲ್ಲವೋ? ಹಾಗಾದರೆ ನಿನ್ನನ್ನು ರಕ್ಷಿಸಿಕೊ! ನಮ್ಮನ್ನೂ ರಕ್ಷಿಸು!” ಅಂದನು.

40 ಆದರೆ ಇನ್ನೊಬ್ಬ ದುಷ್ಕರ್ಮಿಯು ಅವನನ್ನು ಗದರಿಸಿ, “ನೀನು ದೇವರಿಗೆ ಹೆದರಬೇಕು! ನಾವೆಲ್ಲರೂ ಬೇಗನೆ ಸಾಯುವೆವು! 41 ನೀನೂ ನಾನೂ ಅಪರಾಧಿಗಳಾಗಿದ್ದೇವೆ. ನಾವು ತಪ್ಪು ಮಾಡಿದ್ದರಿಂದ ಶಿಕ್ಷಿಸಲ್ಪಡಬೇಕು. ಆದರೆ ಈ ಮನುಷ್ಯನು (ಯೇಸು) ಯಾವ ತಪ್ಪನ್ನೂ ಮಾಡಲಿಲ್ಲ!” ಎಂದು ಹೇಳಿದನು. 42 ಬಳಿಕ ಆ ದುಷ್ಕರ್ಮಿಯು ಆತನಿಗೆ, “ಯೇಸುವೇ ನೀನು ನಿನ್ನ ರಾಜ್ಯವನ್ನು ಸ್ಥಾಪಿಸುವಾಗ ನನ್ನನ್ನು ನೆನಸಿಕೊ!” ಎಂದು ಹೇಳಿದನು.

43 ಆಗ ಯೇಸು ಅವನಿಗೆ, “ಕೇಳು! ನಾನು ಸತ್ಯವನ್ನೇ ಹೇಳುತ್ತೇನೆ. ಈ ದಿನವೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ” ಎಂದು ಹೇಳಿದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International