Revised Common Lectionary (Semicontinuous)
ಯೆಹೋವನ ನಿಬಂಧನೆಯನ್ನು ಪಡೆಯಲು ಮೋಶೆ ಹೋದದ್ದು
12 ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಬಳಿಯಲ್ಲಿರು. ನಾನು ನನ್ನ ಉಪದೇಶಗಳನ್ನು ಮತ್ತು ಕಟ್ಟಳೆಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದಿದ್ದೇನೆ. ಈ ಉಪದೇಶಗಳನ್ನು ಮತ್ತು ಕಟ್ಟಳೆಗಳನ್ನು ನೀನು ಜನರಿಗೆ ಬೋಧಿಸಬೇಕು. ನಾನು ಈ ಕಲ್ಲಿನ ಹಲಗೆಗಳನ್ನು ನಿನಗೆ ಕೊಡುವೆನು” ಎಂದು ಹೇಳಿದನು.
13 ಆದ್ದರಿಂದ ಮೋಶೆಯು ತನ್ನ ಶಿಷ್ಯನಾದ ಯೆಹೋಶುವನೊಡನೆ ಎದ್ದುನಿಂತು ದೇವರ ಬೆಟ್ಟದ ಮೇಲಕ್ಕೆ ಹೋದನು. 14 ಮೋಶೆಯು ಹಿರಿಯರಿಗೆ, “ನಾವು ನಿಮ್ಮ ಬಳಿಗೆ ಹಿಂತಿರುಗಿ ಬರುವ ತನಕ ನೀವು ಇಲ್ಲಿ ಕಾದುಕೊಂಡಿರಿ. ಆರೋನನು ಮತ್ತು ಹೂರನು ನಿಮ್ಮ ಬಳಿಯಿದ್ದಾರೆ; ನಿಮ್ಮಲ್ಲಿ ಯಾರಿಗಾದರೂ ಸಮಸ್ಯೆಯಿದ್ದರೆ ಅವರ ಬಳಿಗೆ ಹೋಗಲಿ” ಎಂದು ಹೇಳಿದನು.
ಮೋಶೆಯು ದೇವರನ್ನು ಭೇಟಿಯಾದದ್ದು
15 ಬಳಿಕ ಮೋಶೆ ಬೆಟ್ಟದ ಮೇಲಕ್ಕೆ ಹೋದನು. ಮೋಡವು ಬೆಟ್ಟವನ್ನು ಕವಿದುಕೊಂಡಿತ್ತು. 16 ಸೀನಾಯಿ ಬೆಟ್ಟದ ಮೇಲೆ ಯೆಹೋವನ ಮಹಿಮೆಯು ಇಳಿದು ಬಂದಿತು. ಮೋಡವು ಆರುದಿನಗಳವರೆಗೆ ಬೆಟ್ಟವನ್ನು ಕವಿದುಕೊಂಡಿತ್ತು. ಏಳನೆಯ ದಿನದಲ್ಲಿ, ಮೋಡದೊಳಗಿಂದ ಯೆಹೋವನು ಮೋಶೆಯೊಡನೆ ಮಾತಾಡಿದನು. 17 ಇಸ್ರೇಲರಿಗೆ ಯೆಹೋವನ ಮಹಿಮೆಯು ಬೆಟ್ಟದ ತುದಿಯಲ್ಲಿ ಉರಿಯುವ ಬೆಂಕಿಯಂತೆ ಕಾಣುತ್ತಿತ್ತು.
18 ಬಳಿಕ ಮೋಶೆಯು ಮೋಡದಲ್ಲಿ ಬೆಟ್ಟದ ಮೇಲೆ ಇನ್ನೂ ಎತ್ತರಕ್ಕೆ ಹೋದನು. ಮೋಶೆಯು ಬೆಟ್ಟದಲ್ಲಿ ಹಗಲಿರುಳು ನಲವತ್ತು ದಿವಸ ಇದ್ದನು.
2 ಅನ್ಯಜನಾಂಗಗಳು ಕೋಪಗೊಂಡಿರುವುದೇಕೆ?
ಅವರು ಮೂರ್ಖತನದ ಸಂಚುಗಳನ್ನು ಮಾಡುತ್ತಿರುವುದೇಕೆ?
2 ಅವುಗಳ ರಾಜರುಗಳೂ ನಾಯಕರುಗಳೂ
ಯೆಹೋವನಿಗೂ ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರೋಧವಾಗಿ ಕೂಡಿಬಂದಿದ್ದಾರೆ.
3 “ದೇವರಿಗೂ ಆತನು ಅಭಿಷೇಕಿಸಿದ ರಾಜನಿಗೂ ವಿರೋಧವಾಗಿ ದಂಗೆ ಎದ್ದು
ಸ್ವತಂತ್ರರಾಗೋಣ” ಎಂದು ಅವರು ಮಾತಾಡಿಕೊಳ್ಳುತ್ತಿದ್ದಾರೆ.
4 ಆದರೆ ಒಡೆಯನೂ ಪರಲೋಕದ ರಾಜನೂ ಅವರನ್ನು ನೋಡಿ ನಗುವನು;
ಆತನು ಅವರನ್ನು ಪರಿಹಾಸ್ಯಮಾಡುವನು.
5-6 “ಇವನನ್ನು ರಾಜನನ್ನಾಗಿ ಅಭಿಷೇಕಿಸಿದವನು ನಾನೇ.
ನನ್ನ ಪವಿತ್ರ ಪರ್ವತವಾದ ಚೀಯೋನಿನಲ್ಲಿ ಆಳುವವನು ಇವನೇ”
ಎಂದು ಅವರಿಗೆ ಕೋಪದಿಂದ ಉತ್ತರಿಸುವನು.
ಆಗ ಅವರೆಲ್ಲರೂ ಭಯಗೊಳ್ಳುವರು.
7 ಯೆಹೋವನ ಒಡಂಬಡಿಕೆಯ ಕುರಿತು ಹೇಳುತ್ತಿರುವೆ.
ಆತನು ನನಗೆ, “ಈ ಹೊತ್ತು ನಾನು ನಿನಗೆ ತಂದೆಯಾದೆ! ನೀನೇ ನನ್ನ ಮಗನು.
8 ನೀನು ಕೇಳಿಕೊಂಡರೆ ಅನ್ಯಜನಾಂಗಗಳನ್ನು ನಿನಗೆ ಅಧೀನಪಡಿಸುವೆನು.
ಭೂಮಿಯ ಮೇಲಿರುವ ಜನರೆಲ್ಲರೂ ನಿನ್ನವರಾಗುವರು!
9 ಕಬ್ಬಿಣದ ಗದೆಯು ಮಣ್ಣಿನ ಮಡಿಕೆಯನ್ನು ನುಚ್ಚುನೂರುಮಾಡುವಂತೆ
ನೀನು ಅನ್ಯಜನಾಂಗಗಳನ್ನು ನಾಶಪಡಿಸುವೆ” ಎಂದು ಹೇಳಿದನು.
10 ಆದ್ದರಿಂದ ರಾಜರುಗಳೇ, ವಿವೇಕಿಗಳಾಗಿರಿ.
ಅಧಿಪತಿಗಳೇ, ಬುದ್ದಿಮಾತುಗಳಿಗೆ ಕಿವಿಗೊಡಿರಿ.
11 ಯೆಹೋವನಿಗೆ ಭಯಭಕ್ತಿಯಿಂದ ವಿಧೇಯರಾಗಿರಿ,
ನಡುಗುತ್ತಾ ಉಲ್ಲಾಸಪಡಿರಿ.
12 ಆತನ ಮಗನಿಗೆ ನಂಬಿಗಸ್ತರಾಗಿರಿ,
ಇಲ್ಲವಾದರೆ ಆತನ ಕೋಪವು ಬೇಗನೆ ತೋರಿಬಂದು
ನಿಮ್ಮನ್ನು ನಾಶಪಡಿಸುವುದು.
ಯೆಹೋವನನ್ನು ಆಶ್ರಯಿಸಿಕೊಂಡಿರುವವರು ಭಾಗ್ಯವಂತರೇ ಸರಿ!
99 ಯೆಹೋವನೇ ರಾಜನು!
ಜನಾಂಗಗಳು ಭಯದಿಂದ ನಡುಗಲಿ.
ಆತನು ಕೆರೂಬಿಗಳ ಮೇಲೆ ರಾಜನಂತೆ ಕುಳಿತುಕೊಂಡಿದ್ದಾನೆ.
ಭೂಮಿಯು ಭಯದಿಂದ ನಡುಗಲಿ.
2 ಚೀಯೋನಿನ ಯೆಹೋವನು ದೊಡ್ಡವನು!
ಆತನು ಜನಾಂಗಗಳಿಗೆಲ್ಲಾ ಮಹಾನಾಯಕನಾಗಿದ್ದಾನೆ.
3 ಅವರೆಲ್ಲರೂ ನಿನ್ನ ಭಯಂಕರವಾದ ಹೆಸರನ್ನು ಕೊಂಡಾಡಲಿ.
ಆತನೇ ಪರಿಶುದ್ಧನು.
4 ಶಕ್ತಿಪೂರ್ಣನಾದ ರಾಜನು ನ್ಯಾಯವನ್ನು ಪ್ರೀತಿಸುವನು.
ದೇವರೇ, ನೀತಿಯನ್ನು ಸೃಷ್ಟಿಸಿದಾತನು ನೀನೇ.
ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸ್ಥಾಪಿಸಿದವನು ನೀನೇ.
5 ನಮ್ಮ ದೇವರಾದ ಯೆಹೋವನನ್ನು ಕೊಂಡಾಡಿರಿ,
ಆತನ ಪವಿತ್ರ ಪಾದಪೀಠಕ್ಕೆ[a] ಅಡ್ಡಬೀಳಿರಿ.
6 ಮೋಶೆಯೂ ಆರೋನನೂ ದೇವರ ಯಾಜಕರುಗಳಾಗಿದ್ದರು.
ಸಮುವೇಲನೂ ಆತನ ಹೆಸರಿನಲ್ಲಿ ಪ್ರಾರ್ಥಿಸಿದನು.
ಆತನು ಅವರೆಲ್ಲರ ಪ್ರಾರ್ಥನೆಗಳಿಗೆ ಉತ್ತರಿಸಿದನು.
7 ಆತನು ಮೇಘಸ್ತಂಭದಿಂದ ಅವರೊಂದಿಗೆ ಮಾತಾಡಿದನು.
ಅವರು ಆಜ್ಞೆಗಳಿಗೆ ವಿಧೇಯರಾದರು.
ಆತನು ಅವರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು.
8 ನಮ್ಮ ದೇವರಾದ ಯೆಹೋವನೇ, ನೀನು ಅವರ ಪ್ರಾರ್ಥನೆಗಳಿಗೆ ಉತ್ತರಿಸಿದೆ.
ನೀನು ಕ್ಷಮಿಸುವ ದೇವರೆಂದೂ
ದುಷ್ಕೃತ್ಯಗಳಿಗೆ ದಂಡಿಸುವವನೆಂದೂ ಅವರಿಗೆ ತೋರ್ಪಡಿಸಿದೆ.
9 ನಮ್ಮ ದೇವರಾದ ಯೆಹೋವನನ್ನು ಕೊಂಡಾಡಿರಿ.
ಆತನ ಪವಿತ್ರ ಪರ್ವತದ ಕಡೆಗೆ ಅಡ್ಡಬಿದ್ದು ಆತನನ್ನು ಆರಾಧಿಸಿರಿ.
ನಮ್ಮ ದೇವರಾದ ಯೆಹೋವನೇ ಪರಿಶುದ್ಧನು!
ಕ್ರಿಸ್ತನ ಮಹಿಮೆಯನ್ನು ನಾವು ನೋಡಿದೆವು
16 ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಶಕ್ತಿಯ ಕುರಿತಾಗಿ ಮತ್ತು ಆತನ ಬರುವಿಕೆಯ ಕುರಿತಾಗಿ ನಿಮಗೆ ತಿಳಿಸಿದ್ದೇವೆ. ಆ ಸಂಗತಿಗಳು ಜನರಿಂದ ಕಲ್ಪಿತವಾದ ಜಾಣ್ಮೆಯ ಕಥೆಗಳಲ್ಲ. ಯೇಸುವಿನ ಮಹಿಮೆಯನ್ನು ನಾವು ಕಣ್ಣಾರೆ ಕಂಡಿದ್ದೇವೆ. 17 ಆತನು ಅತ್ಯಂತ ಪ್ರಭಾವವುಳ್ಳ (ದೇವರ) ಸ್ವರವನ್ನು ಕೇಳಿದನು. ಆಗಲೇ ಆತನು ತಂದೆಯಾದ ದೇವರಿಂದ ಮಾನವನ್ನೂ ಪ್ರಭಾವವನ್ನೂ ಹೊಂದಿಕೊಂಡನು. ಆ ಸ್ವರವು, “ಈತನು ನನ್ನ ಪ್ರಿಯ ಮಗ. ಈತನನ್ನು ಬಹಳವಾಗಿ ಮೆಚ್ಚಿಕೊಂಡಿದ್ದೇನೆ” ಎಂದು ಹೇಳಿತು. 18 ನಾವು ಪವಿತ್ರ ಪರ್ವತದ ಮೇಲೆ ಯೇಸುವಿನ ಜೊತೆಯಲ್ಲಿದ್ದಾಗ ಪರಲೋಕದಿಂದ ಬಂದ ಆ ಧ್ವನಿಯನ್ನು ನಾವೂ ಕೇಳಿದೆವು.[a]
19 ಪ್ರವಾದಿಗಳು ಹೇಳಿದ ಸಂಗತಿಗಳನ್ನು ಇದು ನಮಗೆ ಮತ್ತಷ್ಟು ಖಚಿತಪಡಿಸಿತು. ಅವರು ಹೇಳಿದ್ದನ್ನು ನೀವು ಚಾಚು ತಪ್ಪದೆ ಅನುಸರಿಸುವುದು ಒಳ್ಳೆಯದೇ ಸರಿ. ಅವರು ಹೇಳಿದ ಸಂಗತಿಗಳು ಅಂಧಕಾರದಲ್ಲಿ ಪ್ರಕಾಶಿಸುವ ಬೆಳಕಿನಂತಿವೆ. ನಿಮ್ಮ ಹೃದಯಗಳಲ್ಲಿ ಹಗಲು ಆರಂಭವಾಗಿ, ಮುಂಜಾನೆಯ ನಕ್ಷತ್ರವು ಮೂಡುವವರೆಗೂ ಆ ಬೆಳಕು ಪ್ರಕಾಶಿಸುತ್ತದೆ. 20 ನೀವು ಅರ್ಥಮಾಡಿಕೊಳ್ಳಬೇಕಾದ ಮುಖ್ಯವಾದ ಸಂಗತಿಯೇನೆಂದರೆ, ಪವಿತ್ರ ಗ್ರಂಥದಲ್ಲಿರುವ ಯಾವ ಪ್ರವಾದನವಾಕ್ಯವೂ ಒಬ್ಬ ವ್ಯಕ್ತಿಯ ವೈಯಕ್ತಿಕ ವಿವರಣೆಯಿಂದ ಬಂದಿಲ್ಲ. 21 ಯಾವ ಪ್ರವಾದನೆಯೇ ಆಗಲಿ ಮನುಷ್ಯನ ಚಿತ್ತದಿಂದ ಬಂದಿಲ್ಲ. ಆದರೆ ಜನರು ಪವಿತ್ರಾತ್ಮನಿಂದ ನಡೆಸಲ್ಪಟ್ಟು ದೇವರಿಂದ ಹೊಂದಿದ್ದನ್ನೇ ಮಾತನಾಡಿದರು.
ಯೇಸುವಿನ ರೂಪಾಂತರ
(ಮಾರ್ಕ 9:2-13; ಲೂಕ 9:28-36)
17 ಆರು ದಿನಗಳ ತರುವಾಯ, ಪೇತ್ರನನ್ನು, ಯಾಕೋಬನನ್ನು ಮತ್ತು ಯಾಕೋಬನ ಸಹೋದರನಾದ ಯೋಹಾನನನ್ನು ಕರೆದುಕೊಂಡು ಯೇಸು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು. ಅವರಲ್ಲದೆ ಬೇರೆ ಯಾರೂ ಅಲ್ಲಿರಲಿಲ್ಲ. 2 ಈ ಶಿಷ್ಯರ ಕಣ್ಣೆದುರಿನಲ್ಲಿಯೇ ಆತನು ರೂಪಾಂತರ ಹೊಂದಿದನು. ಆತನ ಮುಖವು ಸೂರ್ಯನಂತೆ ಪ್ರಕಾಶಮಾನವಾಯಿತು. ಆತನ ಉಡುಪುಗಳು ಬೆಳಕಿನಂತೆ ಬೆಳ್ಳಗಾದವು. 3 ಅಲ್ಲದೆ ಆತನೊಂದಿಗೆ ಇಬ್ಬರು ಪುರುಷರು ಮಾತಾಡುತ್ತಾ ನಿಂತಿದ್ದರು. ಅವರೇ ಮೋಶೆ ಮತ್ತು ಎಲೀಯ.
4 ಪೇತ್ರನು ಯೇಸುವಿಗೆ, “ಪ್ರಭುವೇ, ನಾವು ಇಲ್ಲೇ ಇರುವುದು ಒಳ್ಳೆಯದು. ನೀನು ಇಷ್ಟಪಟ್ಟರೆ ಇಲ್ಲಿ ಮೂರು ಡೇರೆಗಳನ್ನು ಹಾಕುವೆವು. ನಿನಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು” ಎಂದನು.
5 ಪೇತ್ರನು ಮಾತಾಡುತ್ತಿರುವಾಗಲೇ ಪ್ರಕಾಶಮಾನವಾದ ಒಂದು ಮೋಡವು ಅವರ ಮೇಲೆ ಕವಿಯಿತು ಮತ್ತು ಆ ಮೋಡದೊಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ನಾನು ಈತನನ್ನು ಬಹಳ ಮೆಚ್ಚಿಕೊಂಡಿದ್ದೇನೆ. ಈತನಿಗೆ ವಿಧೇಯರಾಗಿರಿ!” ಎಂದು ಹೇಳಿತು.
6 ಯೇಸುವಿನ ಸಂಗಡವಿದ್ದ ಶಿಷ್ಯರಿಗೂ ಈ ಧ್ವನಿ ಕೇಳಿಸಿತು. ಅವರು ಬಹಳ ಭಯದಿಂದ ಬೋರಲಬಿದ್ದರು. 7 ಆಗ ಆತನು ಶಿಷ್ಯರ ಬಳಿಗೆ ಬಂದು ಅವರನ್ನು ಮುಟ್ಟಿ, “ಏಳಿ, ಹೆದರಬೇಡಿ” ಎಂದನು. 8 ಅವರು ಕಣ್ಣೆತ್ತಿ ನೋಡಿದಾಗ ಯೇಸು ಒಬ್ಬನೇ ಅಲ್ಲಿದ್ದನು.
9 ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ತನ್ನ ಶಿಷ್ಯರಿಗೆ, “ನೀವು ಬೆಟ್ಟದ ಮೇಲೆ ಕಂಡ ದರ್ಶನವನ್ನು ಈಗ ಯಾರಿಗೂ ಹೇಳದೆ ಮನುಷ್ಯಕುಮಾರನು ಸತ್ತು ಜೀವಂತವಾಗಿ ಎದ್ದುಬಂದ ಮೇಲೆ ತಿಳಿಸಿರಿ” ಎಂದು ಆಜ್ಞಾಪಿಸಿದನು.
Kannada Holy Bible: Easy-to-Read Version. All rights reserved. © 1997 Bible League International