Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 31:1-5

ರಚನೆಗಾರ: ದಾವೀದ.

31 ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ.
    ನನ್ನನ್ನು ನಿರಾಶೆಗೊಳಿಸಬೇಡ.
    ಕರುಣೆತೋರಿ ನನ್ನನ್ನು ರಕ್ಷಿಸು.
    ನನಗೆ ಕಿವಿಗೊಡು.
    ಬೇಗನೆ ಬಂದು, ನನ್ನನ್ನು ರಕ್ಷಿಸು.
ನನಗೆ ಬಂಡೆಯೂ ನನ್ನ ಆಶ್ರಯಸ್ಥಾನವೂ ಕೋಟೆಯೂ ಆಗಿದ್ದು
    ನನ್ನನ್ನು ಕಾಪಾಡು!
ನೀನೇ ನನ್ನ ಬಂಡೆಯೂ ಕೋಟೆಯೂ ಆಗಿರುವುದರಿಂದ
    ನಿನ್ನ ಹೆಸರಿನ ಘನತೆಗಾಗಿ ನನ್ನನ್ನು ನಡೆಸು; ನನಗೆ ಮಾರ್ಗದರ್ಶನ ನೀಡು.
ನನ್ನ ವೈರಿಗಳು ನನಗೆ ಬಲೆಬೀಸಿದ್ದಾರೆ.
    ಅವರ ಬಲೆಗೆ ಸಿಕ್ಕಿಬೀಳದಂತೆ ನನ್ನನ್ನು ರಕ್ಷಿಸು.
    ನೀನೇ ನನ್ನ ಆಶ್ರಯಸ್ಥಾನವಾಗಿರುವೆ.
ಯೆಹೋವನೇ, ನಮ್ಮ ಭರವಸೆಗೆ ಯೋಗ್ಯನಾದ ದೇವರು ನೀನೊಬ್ಬನೇ.
    ನನ್ನ ಜೀವವನ್ನು ನಿನ್ನ ಕೈಗಳಲ್ಲಿ ಇಟ್ಟಿರುವೆ.
    ನನ್ನನ್ನು ರಕ್ಷಿಸು!

ಕೀರ್ತನೆಗಳು 31:15-16

15 ನನ್ನ ಜೀವವು ನಿನ್ನ ಕೈಯಲ್ಲಿದೆ.
    ವೈರಿಗಳಿಂದ ನನ್ನನ್ನು ರಕ್ಷಿಸು; ನನ್ನನ್ನು ಅಟ್ಟಿಸಿಕೊಂಡು[a] ಬರುತ್ತಿರುವ ಜನರಿಂದ ನನ್ನನ್ನು ರಕ್ಷಿಸು.
16 ದಯವಿಟ್ಟು ನಿನ್ನ ಸೇವಕನನ್ನು ಸ್ವೀಕರಿಸಿಕೊ.
    ಕರುಣೆಯಿಂದ ನನ್ನನ್ನು ರಕ್ಷಿಸು!

ವಿಮೋಚನಕಾಂಡ 3:1-12

ಉರಿಯುವ ಪೊದೆ

ಮೋಶೆಯ ಮಾವನ ಹೆಸರು ಇತ್ರೋನನು. ಇತ್ರೋನನು ಮಿದ್ಯಾನಿನ ಯಾಜಕನಾಗಿದ್ದನು. ಮೋಶೆಯು ಇತ್ರೋನನ ಕುರಿಗಳಿಗೆ ಕುರುಬನಾಗಿದ್ದನು. ಒಂದು ದಿನ, ಮೋಶೆಯು ಕುರಿಗಳನ್ನು ಮರುಭೂಮಿಯ ಪಶ್ಚಿಮಭಾಗಕ್ಕೆ ನಡೆಸಿಕೊಂಡು ದೇವರ ಬೆಟ್ಟವೆಂದು ಕರೆಯಲ್ಪಡುವ ಸೀನಾಯಿ ಎಂಬ ಹೋರೇಬ್ ಬೆಟ್ಟಕ್ಕೆ ಹೋದನು. ಆ ಬೆಟ್ಟದಲ್ಲಿ ಯೆಹೋವನ ದೂತನು ಮೋಶೆಗೆ ಉರಿಯುವ ಪೊದೆಯಲ್ಲಿ ಕಾಣಿಸಿಕೊಂಡನು.

ಪೊದೆಯು ಉರಿಯುತ್ತಿದ್ದರೂ ಸುಟ್ಟು ಹೋಗದಿರುವುದನ್ನು ಮೋಶೆ ಗಮನಿಸಿದನು. ಪೊದೆಯು ಉರಿಯುತ್ತಿದ್ದರೂ ಸುಟ್ಟುಹೋಗದಿರುವುದಕ್ಕೆ ಕಾರಣವೇನೆಂದು ತಿಳಿದುಕೊಳ್ಳಲು ಮೋಶೆಯು ಪೊದೆಯ ಸಮೀಪಕ್ಕೆ ಹೋಗತೊಡಗಿದನು.

ಮೋಶೆಯು ಪೊದೆಯನ್ನು ನೋಡಲು ಬರುತ್ತಿರುವುದನ್ನು ಯೆಹೋವನು ನೋಡಿದನು. ದೇವರು ಆ ಪೊದೆಯೊಳಗಿಂದ, “ಮೋಶೆ, ಮೋಶೆ!” ಎಂದು ಕರೆದನು.

ಅದಕ್ಕೆ ಮೋಶೆ, “ಇಗೋ ಇದ್ದೇನೆ” ಅಂದನು.

ಆಗ ಯೆಹೋವನು, “ಇನ್ನೂ ಹತ್ತಿರ ಬರಬೇಡ. ನಿನ್ನ ಪಾದರಕ್ಷೆಗಳನ್ನು ತೆಗೆದುಹಾಕು. ಏಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ. ನಾನು ನಿನ್ನ ಪೂರ್ವಿಕರ ದೇವರು, ನಾನು ಅಬ್ರಹಾಮನ ದೇವರು, ನಾನು ಇಸಾಕನ ದೇವರು, ನಾನು ಯಾಕೋಬನ ದೇವರು” ಎಂದು ಹೇಳಿದನು.

ದೇವರನ್ನು ನೋಡುವುದಕ್ಕೆ ಭಯಪಟ್ಟು ಮೋಶೆ ತನ್ನ ಮುಖವನ್ನು ಮುಚ್ಚಿಕೊಂಡನು.

ಆಗ ಯೆಹೋವನು, “ನನ್ನ ಜನರು ಈಜಿಪ್ಟಿನಲ್ಲಿ ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿದ್ದೇನೆ. ಅಧಿಕಾರಿಗಳು ಅವರನ್ನು ಹಿಂಸಿಸುವಾಗ ಅವರು ಇಟ್ಟ ಮೊರೆಯನ್ನು ಕೇಳಿದ್ದೇನೆ. ಅವರ ದುಃಖವನ್ನೆಲ್ಲಾ ಬಲ್ಲೆನು. ಈಗ ನಾನು ಇಳಿದುಹೋಗಿ ಈಜಿಪ್ಟಿನವರಿಂದ ನನ್ನ ಜನರನ್ನು ರಕ್ಷಿಸುವೆನು. ನಾನು ಅವರನ್ನು ಆ ದೇಶದಿಂದ ಬಿಡುಗಡೆ ಮಾಡಿ ಒಳ್ಳೆಯದಾದ ಮತ್ತು ವಿಶಾಲವಾದ ದೇಶಕ್ಕೆ ಅವರನ್ನು ನಡೆಸುವೆನು. ಅದು ಸಮೃದ್ಧಿಕರವಾದ ದೇಶ.[a] ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ದೇಶ ಅದಾಗಿದೆ. ನಾನು ಇಸ್ರೇಲರ ಮೊರೆಯನ್ನು ಕೇಳಿದ್ದೇನೆ. ಈಜಿಪ್ಟಿನವರು ಅವರಿಗೆ ಕೊಡುವ ಹಿಂಸೆಯನ್ನು ನೋಡಿದ್ದೇನೆ. 10 ಆದ್ದರಿಂದ ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತಿದ್ದೇನೆ. ಹೋಗು! ನನ್ನ ಜನರಾದ ಇಸ್ರೇಲರನ್ನು ಈಜಿಪ್ಟಿನಿಂದ ಬಿಡುಗಡೆ ಮಾಡು!” ಎಂದು ಹೇಳಿದನು.

11 ಅದಕ್ಕೆ ಮೋಶೆಯು ಯೆಹೋವನಿಗೆ, “ನಾನು ಮಹಾ ವ್ಯಕ್ತಿಯೇನಲ್ಲ! ಫರೋಹನ ಸನ್ನಿಧಾನಕ್ಕೆ ಹೋಗುವುದಕ್ಕೂ ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬರುವುದಕ್ಕೂ ನಾನೆಷ್ಟರವನು?” ಎಂದು ಹೇಳಿದನು.

12 ಅದಕ್ಕೆ ದೇವರು “ನೀನು ಇದನ್ನು ಮಾಡಬಹುದು; ಯಾಕೆಂದರೆ ನಾನೇ ನಿನ್ನೊಂದಿಗೆ ಇರುವೆನು. ನಿನ್ನನ್ನು ಕಳುಹಿಸಿದವನು ನಾನೇ ಎಂಬುದಕ್ಕೆ ಇದೇ ಸಾಕ್ಷಿಯಾಗಿರುವುದು. ನೀನು ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಮೇಲೆ, ನೀವು ಈ ಬೆಟ್ಟದ ಬಳಿ ನನ್ನನ್ನು ಆರಾಧಿಸುವಿರಿ” ಎಂದು ಹೇಳಿದನು.

ಅಪೊಸ್ತಲರ ಕಾರ್ಯಗಳು 7:1-16

ಸ್ತೆಫನನ ಪ್ರಸಂಗ

ಪ್ರಧಾನಯಾಜಕನು ಸ್ತೆಫನನಿಗೆ, “ಈ ಸಂಗತಿಗಳು ನಿಜವೋ?” ಎಂದು ಕೇಳಿದನು. ಪ್ರತ್ಯುತ್ತರವಾಗಿ ಅವನು ಹೀಗೆಂದನು: “ನನ್ನ ಯೆಹೂದ್ಯತಂದೆಗಳೇ, ಸಹೋದರರೇ, ನನಗೆ ಕಿವಿಗೊಡಿರಿ. ನಮ್ಮ ಪಿತೃವಾದ ಅಬ್ರಹಾಮನಿಗೆ ನಮ್ಮ ಪ್ರಭಾವಸ್ವರೂಪನಾದ ದೇವರು ಕಾಣಸಿಕೊಂಡನು. ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪೊಟೇಮಿಯದಲ್ಲಿದ್ದನು. ದೇವರು ಅಬ್ರಹಾಮನಿಗೆ, ‘ನಿನ್ನ ದೇಶವನ್ನೂ ನಿನ್ನ ಜನರನ್ನೂ ಬಿಟ್ಟು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು’(A) ಎಂದು ಹೇಳಿದನು.

“ಆದ್ದರಿಂದ ಅಬ್ರಹಾಮನು ಖಾಲ್ದೆಯ[a] ದೇಶವನ್ನು ಬಿಟ್ಟು ಹಾರಾನಿನಲ್ಲಿ ವಾಸಿಸಲು ಹೋದನು. ಅಬ್ರಹಾಮನ ತಂದೆ ಸತ್ತಮೇಲೆ ದೇವರು ಅವನನ್ನು ಈಗ ನೀವು ವಾಸಿಸುತ್ತಿರುವ ಈ ಸ್ಥಳಕ್ಕೆ ಕಳುಹಿಸಿದನು. ಆದರೆ ದೇವರು ಅಬ್ರಹಾಮನಿಗೆ ಇಲ್ಲಿ ಯಾವ ಭೂಮಿಯನ್ನೂ ಕೊಡಲಿಲ್ಲ. ದೇವರು ಅವನಿಗೆ ಒಂದು ಅಡಿ ಸ್ಥಳವನ್ನೂ ಕೊಡಲಿಲ್ಲ. ಆದರೆ ಮುಂದಿನ ಕಾಲದಲ್ಲಿ ಈ ದೇಶವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವುದಾಗಿ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದನು. (ಅಬ್ರಹಾಮನಿಗೆ ಮಕ್ಕಳೇ ಇಲ್ಲದಿದ್ದಾಗ ಇದಾಯಿತು.)

“ದೇವರು ಅವನಿಗೆ, ‘ನಿನ್ನ ಸಂತಾನದವರು ಬೇರೊಂದು ದೇಶದಲ್ಲಿ ವಾಸಿಸುವರು. ಅವರು ಪರದೇಶಿಗಳಾಗಿರುವರು. ಅಲ್ಲಿಯ ಜನರು ಅವರನ್ನು ಗುಲಾಮರನ್ನಾಗಿ ಮಾಡಿಕೊಂಡು ನಾನೂರು ವರ್ಷಗಳವರೆಗೆ ಅವರಿಗೆ ಕೇಡುಗಳನ್ನು ಮಾಡುವರು. ಆದರೆ ಅವರನ್ನು ಗಲಾಮರನ್ನಾಗಿ ಮಾಡಿಕೊಂಡ ಜನಾಂಗವನ್ನು ನಾನು ದಂಡಿಸುವೆನು’(B) ಎಂದು ಹೇಳಿದನು. ಇದಲ್ಲದೆ ದೇವರು ಅವನಿಗೆ, ‘ಆ ಬಳಿಕ ನಿನ್ನ ಜನರು ಆ ದೇಶದಿಂದ ಹೊರಗೆ ಬಂದು ನನ್ನನ್ನು ಈ ಸ್ಥಳದಲ್ಲಿ ಆರಾಧಿಸುವರು’(C) ಎಂದು ಹೇಳಿದನು.

“ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಆ ಒಡಂಬಡಿಕೆಯ ಗುರುತೇ ಸುನ್ನತಿ. ಹೀಗಿರಲು ಅಬ್ರಹಾಮನು ಒಬ್ಬ ಮಗನನ್ನು ಪಡೆದಾಗ, ಆ ಮಗನಿಗೆ ಎಂಟನೆಯ ದಿನದಲ್ಲಿ ಸುನ್ನತಿ ಮಾಡಿದನು. ಅವನ ಮಗನ ಹೆಸರು ಇಸಾಕ. ಇಸಾಕನು ಸಹ ತನ್ನ ಮಗನಾದ ಯಾಕೋಬನಿಗೆ ಸುನ್ನತಿ ಮಾಡಿದನು. ಮತ್ತು ಯಾಕೋಬನು ತನ್ನ ಗಂಡುಮಕ್ಕಳಿಗೆಲ್ಲಾ ಸುನ್ನತಿ ಮಾಡಿದನು. ಈ ಗಂಡುಮಕ್ಕಳೇ ಮುಂದೆ ಹನ್ನೆರಡು ಮಂದಿ ಪಿತೃಗಳಾದರು.

“ಈ ಪಿತೃಗಳು ಯೋಸೇಫನ (ಅವರು ತಮ್ಮ) ಮೇಲೆ ಹೊಟ್ಟೆಕಿಚ್ಚುಪಟ್ಟರು. ಅವರು ಯೋಸೇಫನನ್ನು ಈಜಿಪ್ಟಿನ ಜನರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಯೋಸೇಫನೊಂದಿಗೆ ಇದ್ದನು. 10 ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು. 11 ಆದರೆ ಈಜಿಪ್ಟಿನಲ್ಲಿ ಮತ್ತು ಕಾನಾನಿನಲ್ಲಿ ಬರಗಾಲ ಉಂಟಾಯಿತು. ಆಹಾರವಿಲ್ಲದೆ ನಮ್ಮ ಪಿತೃಗಳಿಗೆ ಬಹಳ ಕಷ್ಟವಾಯಿತು.

12 “ಆದರೆ ಈಜಿಪ್ಟಿನಲ್ಲಿ ಆಹಾರವನ್ನು ಸಂಗ್ರಹಿಸಲಾಗಿದೆ ಎಂಬ ಸುದ್ದಿಯನ್ನು ಯಾಕೋಬನು ಕೇಳಿ, ನಮ್ಮ ಪಿತೃಗಳನ್ನು ಅಲ್ಲಿಗೆ ಕಳುಹಿಸಿದನು. (ಇದು ಈಜಿಪ್ಟಿಗೆ ಅವರ ಮೊದಲ ಪ್ರಯಾಣ.) 13 ಬಳಿಕ ಅವರು ಅಲ್ಲಿಗೆ ಎರಡನೆಯ ಸಲ ಹೋದರು. ಈ ಸಲ, ತಾನು ಯಾರೆಂಬುದನ್ನು ಯೋಸೇಫನು ತನ್ನ ಸಹೋದರರಿಗೆ ತಿಳಿಸಿದನು ಮತ್ತು ಯೋಸೇಫನ ಕುಟುಂಬದ ಬಗ್ಗೆ ಫರೋಹನಿಗೆ ತಿಳಿಯಿತು. 14 ಬಳಿಕ, ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಮತ್ತು ಸಂಬಂಧಿಕರನ್ನು (ಅವರೆಲ್ಲರು ಒಟ್ಟಿಗೆ ಎಪ್ಪತ್ತೈದು ಮಂದಿ) ಈಜಿಪ್ಟಿಗೆ ಆಹ್ವಾನಿಸಲು ಕೆಲವು ಜನರನ್ನು ಕಳುಹಿಸಿದನು. 15 ಆದ್ದರಿಂದ ಯಾಕೋಬನು ಈಜಿಪ್ಟಿಗೆ ಹೋದನು. ಯಾಕೋಬನು ಮತ್ತು ನಮ್ಮ ಪಿತೃಗಳು ತಾವು ಸಾಯುವವರೆಗೆ ಅಲ್ಲೇ ಇದ್ದರು. 16 ಬಳಿಕ ಅವರ ದೇಹಗಳನ್ನು ಶೇಕೆಮಿಗೆ ಸಾಗಿಸಲಾಯಿತು. ಅಲ್ಲಿಯ ಸಮಾಧಿಯೊಂದರಲ್ಲಿ ಅವರನ್ನು ಹೂಳಲಾಯಿತು. (ಅಬ್ರಹಾಮನು ಹಾಮೋರನ ಗಂಡುಮಕ್ಕಳಿಂದ ಕೊಂಡುಕೊಂಡದ್ದು ಈ ಸಮಾಧಿಯನ್ನೇ. ಅವನು ಅವರಿಗೆ ಬೆಳ್ಳಿಯನ್ನು ಕ್ರಯವಾಗಿ ಕೊಟ್ಟಿದ್ದನು.)

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International