Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 93

93 ಯೆಹೋವನೇ ರಾಜನು.
    ಆತನು ವೈಭವವನ್ನೂ ಬಲವನ್ನೂ ವಸ್ತ್ರದಂತೆ ಧರಿಸಿಕೊಂಡಿದ್ದಾನೆ.
ಆತನು ಸಿದ್ಧನಾಗಿರುವುದರಿಂದ ಇಡೀ ಪ್ರಂಪಚವೇ ಸುರಕ್ಷಿತವಾಗಿರುವುದು.
    ಅದು ಕದಲುವುದೇ ಇಲ್ಲ.
ದೇವರೇ, ಆದಿಯಿಂದಲೂ ನಿನ್ನ ರಾಜ್ಯವು ಶಾಶ್ವತವಾಗಿದೆ.
    ಆದಿಯಿಂದಲೂ ಇರುವಾತನು ನೀನೊಬ್ಬನೇ!
ಯೆಹೋವನೇ, ನದಿಗಳ ಶಬ್ದವು ಮೊರೆಯುತ್ತಿದೆ.
    ರಭಸದಿಂದ ಬಡಿಯುತ್ತಿರುವ ಅಲೆಗಳು ಭೋರ್ಗರೆಯುತ್ತಿವೆ.
ಬಿರುಸಾಗಿ ಬಡಿಯುತ್ತಿರುವ ಸಮುದ್ರದ ಅಲೆಗಳು ಭೋರ್ಗರೆಯುತ್ತಾ ಪ್ರಬಲವಾಗಿವೆ.
    ಆದರೆ ಉನ್ನತದಲ್ಲಿರುವ ಯೆಹೋವನು ಅದಕ್ಕಿಂತ ಎಷ್ಟೋ ಬಲಿಷ್ಠನಾಗಿದ್ದಾನೆ.
ಯೆಹೋವನೇ, ನಿನ್ನ ಕಟ್ಟಳೆಗಳು ಶಾಶ್ವತವಾಗಿವೆ.
    ನಿನ್ನ ಪವಿತ್ರಾಲಯವು ಬಹುಕಾಲದವರೆಗೆ ಇರುತ್ತದೆ.

ಅಪೊಸ್ತಲರ ಕಾರ್ಯಗಳು 1:1-11

ಲೂಕನು ಬರೆದ ಎರಡನೆ ಪುಸ್ತಕ

ಪ್ರಿಯ ಥೆಯೊಫಿಲನೇ,

ಯೇಸು ಮಾಡಿದ ಕಾರ್ಯಗಳ ಬಗ್ಗೆ ಮತ್ತು ನೀಡಿದ ಬೋಧನೆಗಳ ಬಗ್ಗೆ ಪ್ರತಿಯೊಂದನ್ನು ನಾನು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದೆನು. ನಾನು ಯೇಸುವಿನ ಇಡೀ ಜೀವಮಾನದ ಬಗ್ಗೆ ಅಂದರೆ ಆತನು ಪರಲೋಕಕ್ಕೆ ಏರಿಹೋಗುವವರೆಗೆ ನಡೆದ ಸಂಗತಿಗಳನ್ನು ಬರೆದೆನು. ಯೇಸು ಪರಲೋಕಕ್ಕೆ ಎತ್ತಲ್ಪಡುವದಕ್ಕಿಂತ ಮೊದಲು, ತಾನು ಆರಿಸಿಕೊಂಡಿದ್ದ ಅಪೊಸ್ತಲರೊಂದಿಗೆ[a] ಮಾತಾಡಿದನು; ಅವರು ಮಾಡಬೇಕಾದದ್ದನ್ನು ಪವಿತ್ರಾತ್ಮನ[b] ಸಹಾಯದಿಂದ ಅವರಿಗೆ ತಿಳಿಸಿದನು. ಇದು ಆತನ ಮರಣಾನಂತರ ನಡೆದ ಸಂಗತಿ. ತಾನು ಜೀವಂತವಾಗಿರುವುದನ್ನು ಆತನು ಅಪೊಸ್ತಲರಿಗೆ ತೋರ್ಪಡಿಸಿದನು ಮತ್ತು ಶಕ್ತಿಯುತವಾದ ಅನೇಕ ಕಾರ್ಯಗಳನ್ನು ಮಾಡುವುದರ ಮೂಲಕ ಅದನ್ನು ನಿರೂಪಿಸಿದನು. ಯೇಸು ಜೀವಂತವಾಗಿ ಎದ್ದುಬಂದ ನಂತರದ ನಲವತ್ತು ದಿನಗಳ ಅವಧಿಯಲ್ಲಿ ಅಪೊಸ್ತಲರು ಆತನನ್ನು ಅನೇಕ ಸಲ ನೋಡಿದರು. ಯೇಸು ದೇವರ ರಾಜ್ಯದ ಕುರಿತು ಅಪೊಸ್ತಲರೊಂದಿಗೆ ಮಾತಾಡಿದನು. ಒಮ್ಮೆ, ಯೇಸು ಅವರೊಂದಿಗೆ ಊಟ ಮಾಡುತ್ತಿದ್ದಾಗ, ಜೆರುಸಲೇಮನ್ನು ಬಿಟ್ಟುಹೋಗಬಾರದೆಂದು ಅವರಿಗೆ ಹೇಳಿದನು. “ತಂದೆಯು ನಿಮಗೊಂದು ವಾಗ್ದಾನವನ್ನು ಮಾಡಿದ್ದಾನೆ. ನಾನು ಮೊದಲೇ ಅದರ ಬಗ್ಗೆ ನಿಮಗೆ ತಿಳಿಸಿದ್ದೇನೆ. ಈ ವಾಗ್ದಾನವನ್ನು ಸ್ವೀಕರಿಸಿಕೊಳ್ಳಲು ಜೆರುಸಲೇಮಿನಲ್ಲಿ ಕಾದುಕೊಂಡಿರಿ. ಯೋಹಾನನು ಜನರಿಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಿದನು, ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಲ್ಲಿ ದೀಕ್ಷಾಸ್ನಾನವಾಗುವುದು” ಎಂದು ಆತನು ಹೇಳಿದನು.

ಪರಲೋಕಾರೋಹಣ

ಅಪೊಸ್ತಲರು ಒಟ್ಟಾಗಿ ಸೇರಿದ್ದಾಗ, ಅವರು ಯೇಸುವಿಗೆ, “ಪ್ರಭುವೇ, ನೀನು ಯೆಹೂದ್ಯರಿಗೆ ಮತ್ತೆ ಅವರ ರಾಜ್ಯವನ್ನು ಕೊಡುವಂಥದ್ದು ಈ ಕಾಲದಲ್ಲೋ?” ಎಂದು ಕೇಳಿದರು.

ಯೇಸು ಅವರಿಗೆ, “ದಿನಗಳನ್ನು ಮತ್ತು ಕಾಲಗಳನ್ನು ನಿರ್ಧರಿಸುವ ಅಧಿಕಾರವಿರುವುದು ತಂದೆಯೊಬ್ಬನಿಗಷ್ಟೇ. ನೀವು ಅವುಗಳನ್ನು ತಿಳಿದುಕೊಳ್ಳಲಾಗುವುದಿಲ್ಲ. ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲಹೊಂದಿ ಜೆರುಸಲೇಮಿನಲ್ಲಿಯೂ ಇಡೀ ಜುದೇಯದಲ್ಲಿಯೂ ಸಮಾರ್ಯದಲ್ಲಿಯೂ ಮತ್ತು ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಎಂದನು.

ಯೇಸು ಈ ಸಂಗತಿಗಳನ್ನು ಅಪೊಸ್ತಲರಿಗೆ ಹೇಳಿದ ಮೇಲೆ ಅಪೊಸ್ತಲರು ನೋಡುತ್ತಿರುವಾಗಲೇ ಆಕಾಶಕ್ಕೆ ಎತ್ತಲ್ಪಟ್ಟನು. ಮೋಡವು ಆತನನ್ನು ಕವಿದುಕೊಂಡದ್ದರಿಂದ ಅವರು ಆತನನ್ನು ಕಾಣಲಾಗಲಿಲ್ಲ. 10 ಯೇಸು ಹೋಗುತ್ತಿರಲು ಅಪೊಸ್ತಲರು ಆಕಾಶವನ್ನೇ ನೋಡುತ್ತಾ ನಿಂತಿದ್ದರು. ಆಗ, ಬಿಳುಪಾದ ಬಟ್ಟೆಗಳನ್ನು ಧರಿಸಿಕೊಂಡಿದ್ದ ಇಬ್ಬರು ಪುರುಷರು (ದೇವದೂತರು) ಇದ್ದಕ್ಕಿದ್ದಂತೆ ಅವರ ಪಕ್ಕದಲ್ಲಿ ನಿಂತುಕೊಂಡು, 11 “ಗಲಿಲಾಯದವರೇ, ಏಕೆ ಆಕಾಶವನ್ನೇ ನೋಡುತ್ತಾ ನಿಂತುಕೊಂಡಿದ್ದೀರಿ? ಯೇಸು ನಿಮ್ಮ ಕಣ್ಣೆದುರಿನಲ್ಲಿ ಪರಲೋಕಕ್ಕೆ ಹೇಗೆ ಏರಿ ಹೋದನೋ ಅದೇ ರೀತಿಯಲ್ಲಿ ಹಿಂತಿರುಗಿ ಬರುತ್ತಾನೆ” ಎಂದು ಹೇಳಿದರು.

ಕೀರ್ತನೆಗಳು 47

ರಚನೆಗಾರರು: ಕೋರಹೀಯರು.

47 ಸರ್ವಜನಾಂಗಗಳೇ, ಚಪ್ಪಾಳೆ ತಟ್ಟಿರಿ;
    ದೇವರಿಗೆ ಆನಂದಘೋಷ ಮಾಡಿರಿ!
ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ.
    ಆತನು ಭೂಲೋಕಕ್ಕೆಲ್ಲಾ ಮಹಾರಾಜನಾಗಿದ್ದಾನೆ.
ಆತನು ಜನಾಂಗಗಳನ್ನು ಸೋಲಿಸಲು ನಮಗೆ ಸಹಾಯಮಾಡಿ
    ಅವುಗಳನ್ನು ನಮಗೆ ಅಧೀನಪಡಿಸಿದ್ದಾನೆ.
ದೇವರು ಈ ದೇಶವನ್ನು ನಮಗೋಸ್ಕರವಾಗಿ ಆರಿಸಿಕೊಂಡನು;
    ತನಗೆ ಪ್ರಿಯರಾದ ಯಾಕೋಬನ ವಂಶಸ್ಥರಿಗಾಗಿ ಆತನು ಮನೋಹರವಾದ ಈ ದೇಶವನ್ನು ಆರಿಸಿಕೊಂಡನು.

ಯೆಹೋವನು ಆನಂದಘೋಷದೊಡನೆಯೂ
    ತುತ್ತೂರಿಗಳ ಧ್ವನಿಯೊಡನೆಯೂ ಸಿಂಹಾಸನಾರೂಢನಾಗುವನು.
ದೇವರನ್ನು ಸಂಕೀರ್ತಿಸಿರಿ, ಕೀರ್ತಿಸಿರಿ.
    ನಮ್ಮ ರಾಜನನ್ನು ಸಂಕೀರ್ತಿಸಿರಿ, ಸಂಕೀರ್ತಿಸಿರಿ.
ದೇವರು ಇಡೀಲೋಕಕ್ಕೆ ರಾಜನಾಗಿದ್ದಾನೆ;
    ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ.
ದೇವರು ತನ್ನ ಪರಿಶುದ್ಧ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ;
    ದೇವರು ಎಲ್ಲಾ ಜನಾಂಗಗಳನ್ನು ಆಳುವನು.
ಜನಾಂಗಗಳ ನಾಯಕರು
    ಅಬ್ರಹಾಮನ ದೇವಜನರೊಡನೆ ಕೂಡಿಬರುವರು.
ಎಲ್ಲಾ ಜನಾಂಗಗಳ ಎಲ್ಲಾ ನಾಯಕರುಗಳು ದೇವರಿಗೆ ಅಧೀನರಾಗಿದ್ದಾರೆ.
    ದೇವರು ಅವರಿಗೆ ಸರ್ವಾಧಿಕಾರಿ!

ಕೀರ್ತನೆಗಳು 93

93 ಯೆಹೋವನೇ ರಾಜನು.
    ಆತನು ವೈಭವವನ್ನೂ ಬಲವನ್ನೂ ವಸ್ತ್ರದಂತೆ ಧರಿಸಿಕೊಂಡಿದ್ದಾನೆ.
ಆತನು ಸಿದ್ಧನಾಗಿರುವುದರಿಂದ ಇಡೀ ಪ್ರಂಪಚವೇ ಸುರಕ್ಷಿತವಾಗಿರುವುದು.
    ಅದು ಕದಲುವುದೇ ಇಲ್ಲ.
ದೇವರೇ, ಆದಿಯಿಂದಲೂ ನಿನ್ನ ರಾಜ್ಯವು ಶಾಶ್ವತವಾಗಿದೆ.
    ಆದಿಯಿಂದಲೂ ಇರುವಾತನು ನೀನೊಬ್ಬನೇ!
ಯೆಹೋವನೇ, ನದಿಗಳ ಶಬ್ದವು ಮೊರೆಯುತ್ತಿದೆ.
    ರಭಸದಿಂದ ಬಡಿಯುತ್ತಿರುವ ಅಲೆಗಳು ಭೋರ್ಗರೆಯುತ್ತಿವೆ.
ಬಿರುಸಾಗಿ ಬಡಿಯುತ್ತಿರುವ ಸಮುದ್ರದ ಅಲೆಗಳು ಭೋರ್ಗರೆಯುತ್ತಾ ಪ್ರಬಲವಾಗಿವೆ.
    ಆದರೆ ಉನ್ನತದಲ್ಲಿರುವ ಯೆಹೋವನು ಅದಕ್ಕಿಂತ ಎಷ್ಟೋ ಬಲಿಷ್ಠನಾಗಿದ್ದಾನೆ.
ಯೆಹೋವನೇ, ನಿನ್ನ ಕಟ್ಟಳೆಗಳು ಶಾಶ್ವತವಾಗಿವೆ.
    ನಿನ್ನ ಪವಿತ್ರಾಲಯವು ಬಹುಕಾಲದವರೆಗೆ ಇರುತ್ತದೆ.

ಎಫೆಸದವರಿಗೆ 1:15-23

ಪೌಲನ ಪ್ರಾರ್ಥನೆ

15-16 ಆದಕಾರಣವೇ ನನ್ನ ಪ್ರಾರ್ಥನೆಗಳಲ್ಲಿ ನಾನು ನಿಮ್ಮನ್ನು ಜ್ಞಾಪಿಸಿಕೊಂಡು ನಿಮ್ಮ ವಿಷಯದಲ್ಲಿ ದೇವರಿಗೆ ಯಾವಾಗಲೂ ಸ್ತೋತ್ರ ಸಲ್ಲಿಸುತ್ತೇನೆ. ಪ್ರಭುವಾದ ಯೇಸುವಿನಲ್ಲಿ ನಿಮಗಿರುವ ನಂಬಿಕೆಯ ಬಗ್ಗೆ ಮತ್ತು ಎಲ್ಲಾ ದೇವಜನರ ಮೇಲೆ ನಿಮಗಿರುವ ಪ್ರೀತಿಯ ಬಗ್ಗೆ ಕೇಳಿದಂದಿನಿಂದ ನಾನು ನಿಮ್ಮ ವಿಷಯದಲ್ಲಿ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. 17 ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ಮಹಿಮಾ ಸ್ವರೂಪನಾದ ತಂದೆಯೂ ಆಗಿರುವಾತನಿಗೆ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ. ದೇವರ ಜ್ಞಾನದಿಂದ ಅಂದರೆ ಆತನು ನಿಮಗೆ ತಿಳಿಯಪಡಿಸಿದ ಜ್ಞಾನದಿಂದ ನಿಮ್ಮನ್ನು ವಿವೇಕಿಗಳನ್ನಾಗಿ ಮಾಡುವಂಥ ಆತ್ಮವನ್ನು ಆತನು ನಿಮಗೆ ಅನುಗ್ರಹಿಸಲೆಂದು ನಾನು ಪ್ರಾರ್ಥಿಸುತ್ತೇನೆ.

18 ನೀವು ನಿಮ್ಮ ಹೃದಯದಲ್ಲಿ ಇನ್ನೂ ಹೆಚ್ಚಿನ ತಿಳುವಳಿಕೆಯನ್ನು ಹೊಂದಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ. ನಾವು ಎಂಥ ನಿರೀಕ್ಷೆಯನ್ನು ಹೊಂದಿಕೊಳ್ಳಬೇಕೆಂದು ದೇವರು ನಮ್ಮನ್ನು ಆರಿಸಿಕೊಂಡನೆಂಬುದನ್ನು ಆಗ ತಿಳಿದುಕೊಳ್ಳುವಿರಿ; ಆತನು ತನ್ನ ಪರಿಶುದ್ಧ ಜನರಿಗೆ ವಾಗ್ದಾನ ಮಾಡಿದ ಆಶೀರ್ವಾದಗಳು ಎಷ್ಟು ಮಹಿಮಾತಿಶಯವಾಗಿವೆ ಎಂಬುದನ್ನು ತಿಳಿದುಕೊಳ್ಳುವಿರಿ. 19 ನಂಬಿಕೆಯಿಡುವಂಥ ನಮಗೆ ದೇವರ ಶಕ್ತಿಯು ಎಷ್ಟು ಮಹತ್ವವುಳ್ಳದ್ದಾಗಿದೆ ಎಂಬುದನ್ನೂ ಆಗ ನೀವು ತಿಳಿದುಕೊಳ್ಳುವಿರಿ. ಕ್ರಿಸ್ತನನ್ನು ಮರಣದಿಂದ ಜೀವಂತನಾಗಿ ಎಬ್ಬಿಸಲು ದೇವರು ಉಪಯೋಗಿಸಿದ ಮಹಾಶಕ್ತಿ ಅದೇ. 20 ದೇವರು ಕ್ರಿಸ್ತನನ್ನು ಪರಲೋಕದೊಳಗೆ ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು. 21 ದೇವರು ಕ್ರಿಸ್ತನನ್ನು ಎಲ್ಲಾ ಅಧಿಪತಿಗಳಿಗಿಂತಲೂ ಅಧಿಕಾರಿಗಳಿಗಿಂತಲೂ ಶಕ್ತಿಗಳಿಗಿಂತಲೂ ರಾಜರುಗಳಿಗಿಂತಲೂ ಪ್ರಮುಖನನ್ನಾಗಿ ಮಾಡಿದನು. ಈ ಲೋಕದಲ್ಲಾಗಲಿ ಮುಂದಿನ ಲೋಕದಲ್ಲಾಗಲಿ ಕೊಡಲ್ಪಟ್ಟಿರುವ ಯಾವುದೇ ಹೆಸರುಳ್ಳವರಿಗಿಂತಲೂ ಕ್ರಿಸ್ತನು ಪ್ರಮುಖನಾಗಿದ್ದಾನೆ. 22 ದೇವರು ಪ್ರತಿಯೊಂದನ್ನು ಕ್ರಿಸ್ತನ ಅಧಿಕಾರಕ್ಕೆ ಒಳಪಡಿಸಿದನು. ಸಭೆಗೋಸ್ಕರವಾಗಿ ದೇವರು ಆತನನ್ನು ಪ್ರತಿಯೊಂದರ ಮೇಲೆ ಶಿರಸ್ಸನ್ನಾಗಿ ಮಾಡಿದನು. 23 ಸಭೆಯು ಕ್ರಿಸ್ತನ ದೇಹವಾಗಿದೆ. ಸಭೆಯು ಕ್ರಿಸ್ತನಿಂದ ಆವರಿಸಲ್ಪಟ್ಟಿದೆ. ಆತನು ಸಮಸ್ತವನ್ನು ಪ್ರತಿಯೊಂದು ವಿಷಯದಲ್ಲಿಯೂ ಸಂಪೂರ್ಣಗೊಳಿಸುತ್ತಾನೆ.

ಲೂಕ 24:44-53

44 ಯೇಸು ಅವರಿಗೆ, “ನಾನು ಮೊದಲು ನಿಮ್ಮ ಸಂಗಡ ಇದ್ದುದನ್ನು ಜ್ಞಾಪಕಮಾಡಿಕೊಳ್ಳಿರಿ. ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವಾದಿಗಳ ಗ್ರಂಥಗಳಲ್ಲಿ, ಕೀರ್ತನೆಗಳಲ್ಲಿ ಬರೆದಿರುವ ಪ್ರತಿಯೊಂದು ಸಂಗತಿಯೂ ನೆರವೇರಬೇಕಾಗಿದೆ ಎಂದು ನಾನು ಹೇಳಿದೆನು” ಅಂದನು.

45 ಬಳಿಕ ಯೇಸು ಪವಿತ್ರ ಗ್ರಂಥವನ್ನು ತನ್ನ ಶಿಷ್ಯರಿಗೆ ವಿವರಿಸಿದನು. ತನ್ನ ಬಗ್ಗೆ ಬರೆದಿರುವ ಸಂಗತಿಗಳನ್ನು ಅರ್ಥಮಾಡಿಕೊಳ್ಳಲು ಅವರಿಗೆ ಸಹಾಯ ಮಾಡಿದನು. 46 ಬಳಿಕ ಯೇಸು ಅವರಿಗೆ, “ಕ್ರಿಸ್ತನು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಸತ್ತವರೊಳಗಿಂದ ಎದ್ದುಬರುವನು ಎಂದು ಬರೆಯಲ್ಪಟ್ಟಿದೆ. 47-48 ಈ ಸಂಗತಿಗಳು ನೆರವೇರುವುದನ್ನು ನೀವು ನೋಡಿದಿರಿ. ನೀವೇ ಇದಕ್ಕೆ ಸಾಕ್ಷಿಗಳು. ನೀವು ಜನರ ಬಳಿಗೆ ಹೋಗಿ, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವವರಿಗೆ ಪಾಪಕ್ಷಮೆಯಾಗುತ್ತದೆ ಎಂದು ತಿಳಿಸಿರಿ. ನೀವು ಈ ಸುವಾರ್ತೆಯನ್ನು ಜೆರುಸಲೇಮಿನಲ್ಲಿ ಪ್ರಾರಂಭಿಸಿ ಲೋಕದ ಜನರೆಲ್ಲರಿಗೂ ನನ್ನ ಹೆಸರಿನಲ್ಲಿ ತಿಳಿಸಬೇಕು. 49 ಕೇಳಿರಿ! ನನ್ನ ತಂದೆ ನಿಮಗೆ ವಾಗ್ದಾನ ಮಾಡಿದ್ದನ್ನು ನಾನು ನಿಮಗೆ ಕಳುಹಿಸಿಕೊಡುತ್ತೇನೆ. ಆದರೆ ನೀವು ಪರಲೋಕದಿಂದ ಆ ಶಕ್ತಿಯನ್ನು ಪಡೆಯುವ ತನಕ ಜೆರುಸಲೇಮಿನಲ್ಲೇ ಕಾದುಕೊಂಡಿರಿ” ಅಂದನು.

ಯೇಸುವಿನ ಪರಲೋಕಾರೋಹಣ

(ಮಾರ್ಕ 16:19-20; ಅ.ಕಾ. 1:9-11)

50 ಯೇಸು ತನ್ನ ಶಿಷ್ಯರನ್ನು ಜೆರುಸಲೇಮಿನ ಹೊರಗೆ ಬೆಥಾನಿಯದ ಸಮೀಪಕ್ಕೆ ಕರೆದುಕೊಂಡು ಹೋದನು. ಯೇಸು ತನ್ನ ಕೈಗಳನ್ನು ಎತ್ತಿ ಶಿಷ್ಯರನ್ನು ಆಶೀರ್ವದಿಸಿದನು. 51 ಯೇಸು ಅವರನ್ನು ಆಶೀರ್ವದಿಸುತ್ತಿದ್ದಾಗ ಅವರಿಂದ ಬೇರ್ಪಟ್ಟು ಪರಲೋಕಕ್ಕೆ ಎತ್ತಲ್ಪಟ್ಟನು. 52 ಶಿಷ್ಯರು ಅಲ್ಲಿ ಆತನನ್ನು ಆರಾಧಿಸಿದರು. ಬಳಿಕ ಅವರು ಪಟ್ಟಣಕ್ಕೆ ಹಿಂತಿರುಗಿ ಹೋದರು. ಅವರು ಬಹಳ ಸಂತೋಷಗೊಂಡಿದ್ದರು. 53 ಅವರು ಯಾವಾಗಲೂ ದೇವಾಲಯದಲ್ಲಿ ದೇವರನ್ನು ಸ್ತುತಿಸುತ್ತಿದ್ದರು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International