Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಅಪೊಸ್ತಲರ ಕಾರ್ಯಗಳು 2:1-21

ಪವಿತ್ರಾತ್ಮನ ಆಗಮನ

ಪಂಚಾಶತ್ತಮ ಹಬ್ಬದ[a] ದಿನ ಬಂದಾಗ ಅವರೆಲ್ಲರು ಒಂದು ಸ್ಥಳದಲ್ಲಿ ಒಟ್ಟಾಗಿ ಸೇರಿದ್ದರು. ಆಗ, ಆಕಾಶದಿಂದ ಒಂದು ಶಬ್ದ ಇದ್ದಕ್ಕಿದ್ದಂತೆ ಬಂದಿತು. ಬಿರುಗಾಳಿ ಬೀಸುತ್ತಿದೆಯೋ ಎಂಬಂತಿತ್ತು ಆ ಶಬ್ದ. ಅವರು ಕುಳಿತುಕೊಂಡಿದ್ದ ಮನೆಯಲ್ಲೆಲ್ಲಾ ಆ ಶಬ್ದ ತುಂಬಿಕೊಂಡಿತು. ಬೆಂಕಿಯ ಜ್ವಾಲೆಗಳಂತಿದ್ದ ಏನನ್ನೊ ಅವರು ಕಂಡರು. ಜ್ವಾಲೆಗಳು ವಿಂಗಡವಾಗಿ ಅಲ್ಲಿದ್ದ ಪ್ರತಿಯೊಬ್ಬ ವ್ಯಕ್ತಿಯ ಮೇಲೆ ನೆಲೆಸಿದವು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ವಿವಿಧ ಭಾಷೆಗಳಲ್ಲಿ ಮಾತಾಡತೊಡಗಿದರು. ಪವಿತ್ರಾತ್ಮನೇ ಅವರಿಗೆ ಆ ಶಕ್ತಿಯನ್ನು ಕೊಟ್ಟನು.

ಬಹು ಧಾರ್ಮಿಕರಾದ ಅನೇಕ ಯೆಹೂದ್ಯರು ಆ ಸಮಯದಲ್ಲಿ ಜೆರುಸಲೇಮಿನಲ್ಲಿದ್ದರು. ಇವರಲ್ಲಿ ಪ್ರಪಂಚದ ಪ್ರತಿಯೊಂದು ದೇಶದಿಂದ ಬಂದ ಜನರಿದ್ದರು. ಈ ಶಬ್ದವನ್ನು ಕೇಳಿ ಈ ಜನರ ಒಂದು ದೊಡ್ಡ ಸಮೂಹವೇ ಅಲ್ಲಿಗೆ ಬಂದಿತು. ಅಪೊಸ್ತಲರು ಮಾತಾಡುತ್ತಿರುವುದು ಪ್ರತಿಯೊಬ್ಬರಿಗೂ ಅವರವರ ಸ್ವಂತ ಭಾಷೆಗಳಲ್ಲಿ ಕೇಳಿಸುತ್ತಿರುವುದನ್ನು ಕಂಡು ಅವರಿಗೆ ಆಶ್ಚರ್ಯವಾಯಿತು.

ಇದನ್ನು ನೋಡಿದ ಯೆಹೂದ್ಯರೆಲ್ಲರೂ ವಿಸ್ಮಯಗೊಂಡರು. ಹೀಗೆ ಮಾಡಲು ಅಪೊಸ್ತಲರಿಗೆ ಹೇಗೆ ಸಾಧ್ಯವಾಯಿತೆಂದು ಅವರಿಗೆ ಅರ್ಥವಾಗಲಿಲ್ಲ. ಅವರು, “ಮಾತಾಡುತ್ತಿರುವ ಈ ಜನರು (ಅಪೊಸ್ತಲರು) ಗಲಿಲಾಯದವರು![b] ಆದರೆ ಇವರು ನಮ್ಮ ಸ್ವಂತ ಭಾಷೆಗಳಲ್ಲಿ ಮಾತಾಡುತ್ತಿರುವಂತೆ ಕೇಳಿಸುತ್ತಿದೆ. ಇದು ಹೇಗೆ ಸಾಧ್ಯ? ನಾವು ಬೇರೆಬೇರೆ ಸ್ಥಳಗಳವರು. ನಮ್ಮಲ್ಲಿ ಪಾರ್ಥ್ಯರು, ಮೇದ್ಯರು, ಏಲಾಮಿನವರು, ಮೆಸೊಪೊಟೇಮದವರು, ಯೂದಾಯದವರು, ಕಪ್ಪದೋಕ್ಯಯದವರು, ಪೊಂತದವರು, ಏಷ್ಯಾದವರು,[c] 10 ಫ್ರಿಜಿಯದವರು, ಪಾಂಫಿಲಿಯದವರು, ಈಜಿಪ್ಟ್‌ನವರು ಮತ್ತು ಸಿರೇನಿನ ಬಳಿಯಲ್ಲಿರುವ ಲಿಬಿಯ ಪ್ರಾಂತ್ಯದವರು, ರೋಮ್‌ನವರು, 11 ಕ್ರೇಟ್‌ನವರು ಮತ್ತು ಅರೇಬಿಯವರು ಇದ್ದಾರೆ. ನಮ್ಮಲ್ಲಿರುವ ಕೆಲವು ಜನರು ಹುಟ್ಟು ಯೆಹೂದ್ಯರು. ಉಳಿದವರು ಮತಾಂತರ ಹೊಂದಿದವರು. ನಾವು ಬೇರೆಬೇರೆ ದೇಶಗಳವರು. ಆದರೆ ಈ ಜನರು ಮಾತಾಡುತ್ತಿರುವುದು ನಮ್ಮ ಸ್ವಂತ ಭಾಷೆಗಳಲ್ಲಿ ನಮಗೆ ಕೇಳಿಸುತ್ತಿದೆ! ಅವರು ದೇವರ ಬಗ್ಗೆ ಹೇಳುತ್ತಿರುವ ಮಹಾಸಂಗತಿಗಳು ನಮಗೆಲ್ಲರಿಗೂ ಅರ್ಥವಾಗುತ್ತಿವೆ” ಎಂದು ಹೇಳಿದರು.

12 ಜನರೆಲ್ಲರೂ ವಿಸ್ಮಯಗೊಂಡರು ಮತ್ತು ಗಲಿಬಿಲಿಯಾದರು. ಅವರು, “ಏನು ನಡೆಯುತ್ತಿದೆ?” ಎಂದು ಒಬ್ಬರನ್ನೊಬ್ಬರು ಕೇಳತೊಡಗಿದರು. 13 ಕೆಲವರು ಅಪೊಸ್ತಲರನ್ನು ನೋಡಿ ನಗುತ್ತಾ, “ಇವರು ಅತಿಯಾಗಿ ದ್ರಾಕ್ಷಾರಸ ಕುಡಿದು ಮತ್ತರಾಗಿದ್ದಾರೆ” ಎಂದು ಹಾಸ್ಯಮಾಡಿದರು.

ಪೇತ್ರನ ಪ್ರಸಂಗ

14 ಬಳಿಕ ಪೇತ್ರನು ಉಳಿದ ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎದ್ದುನಿಂತುಕೊಂಡನು. ಎಲ್ಲಾ ಜನರಿಗೆ ಕೇಳುವಂತೆ ಅವನು ಗಟ್ಟಿಯಾಗಿ ಹೀಗೆಂದನು: “ಯೆಹೂದ್ಯರೇ, ಜೆರುಸಲೇಮಿನಲ್ಲಿ ವಾಸವಾಗಿರುವ ಜನರೇ, ನನಗೆ ಕಿವಿಗೊಡಿರಿ. ನೀವು ತಿಳಿದುಕೊಳ್ಳಬೇಕಾದ ಸಂಗತಿಯನ್ನು ನಾನು ನಿಮಗೆ ಹೇಳುತ್ತೇನೆ. 15 ನೀವು ಯೋಚಿಸಿಕೊಂಡಿರುವಂತೆ ಈ ಜನರು ಕುಡಿದು ಮತ್ತರಾದವರಲ್ಲ. ಈಗ ಮುಂಜಾನೆ ಒಂಭತ್ತು ಗಂಟೆಯಷ್ಟೆ! 16 ಆದರೆ ಈ ಹೊತ್ತು ಇಲ್ಲಿ ನಡೆಯುತ್ತಿರುವ ಸಂಗತಿಗಳ ಬಗ್ಗೆ ಪ್ರವಾದಿಯಾದ ಯೋವೇಲನು ಹೀಗೆ ಬರೆದಿದ್ದಾನೆ:

17 ‘ದೇವರು ಹೀಗೆನ್ನುತ್ತಾನೆ:
ಕೊನೆಯ ದಿನಗಳಲ್ಲಿ, ನಾನು ನನ್ನ ಆತ್ಮವನ್ನು ಎಲ್ಲಾ ಜನರ ಮೇಲೆ ಸುರಿಸುವೆನು.
    ನಿಮ್ಮ ಗಂಡುಮಕ್ಕಳು, ಹೆಣ್ಣುಮಕ್ಕಳು ಪ್ರವಾದಿಸುವರು.
    ನಿಮ್ಮ ಯುವಜನರು ದರ್ಶನಗಳನ್ನು ಕಾಣುವರು.
    ನಿಮ್ಮ ವಯೋವೃದ್ಧರು ವಿಶೇಷ ಕನಸುಗಳನ್ನು ಕಾಣುವರು.
18 ಆ ಸಮಯದಲ್ಲಿ ನಾನು ನನ್ನ ಆತ್ಮವನ್ನು ನನ್ನ ದಾಸದಾಸಿಯರ ಮೇಲೆ ಸುರಿಸುವೆನು.
    ಆಗ ಅವರು ಪ್ರವಾದಿಸುವರು.
19 ನಾನು ಆಕಾಶದಲ್ಲಿ ಅದ್ಭುತಕಾರ್ಯಗಳನ್ನು ತೋರಿಸುವೆನು.
    ಭೂಮಿಯ ಮೇಲೆ ಸೂಚಕಕಾರ್ಯಗಳನ್ನು ಮಾಡುವೆನು.
    ರಕ್ತ, ಬೆಂಕಿ ಮತ್ತು ಕಪ್ಪೊಗೆಗಳು ಅಲ್ಲಿರುವವು.
20 ಸೂರ್ಯನು ಕತ್ತಲಾಗುವನು,
    ಚಂದ್ರನು ರಕ್ತದಂತೆ ಕೆಂಪಾಗುವನು,
ಆಗ ಪ್ರಭುವಿನ ಗಂಭೀರವಾದ ಮಹಾದಿನವು ಬರುವುದು;
21 ಪ್ರಭುವಿನ ಹೆಸರನ್ನು ಹೇಳಿಕೊಳ್ಳುವವರಿಗೆಲ್ಲ ರಕ್ಷಣೆ ಆಗುವುದು.’(A)

ಅರಣ್ಯಕಾಂಡ 11:24-30

24 ಮೋಶೆಯು ಹೊರಟುಹೋಗಿ, ಯೆಹೋವನು ಹೇಳಿದ್ದನ್ನು ಜನರಿಗೆ ತಿಳಿಸಿ, ಇಸ್ರೇಲರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಒಟ್ಟಾಗಿ ಸೇರಿಸಿದನು. ಅವರು ದೇವದರ್ಶನಗುಡಾರದ ಸುತ್ತಲೂ ನಿಲ್ಲುವಂತೆ ಆಜ್ಞಾಪಿಸಿದನು. 25 ಆಗ ಯೆಹೋವನು ಮೇಘದಲ್ಲಿ ಇಳಿದುಬಂದು ಮೋಶೆಯೊಡನೆ ಮಾತಾಡಿ ಅವನಲ್ಲಿದ್ದ ಆತ್ಮವನ್ನೇ[a] ಆ ಎಪ್ಪತ್ತು ಮಂದಿ ಹಿರಿಯರಿಗೆ ಕೊಟ್ಟನು. ಆತ್ಮಿಕ ವರಗಳು ಅವರಿಗೆ ಕೊಡಲ್ಪಟ್ಟಾಗ ಅವರು ಪ್ರವಾದಿಗಳಂತೆ ಪ್ರವಾದಿಸಿದರು. ಆದರೆ ಮತ್ತೆ ಅವರು ಹಾಗೆ ಪ್ರವಾದಿಸಲಿಲ್ಲ.

26 ಎಲ್ದಾದ್ ಮತ್ತು ಮೇದಾದ್ ಎಂಬ ಹಿರಿಯರಿಬ್ಬರು ಗುಡಾರದ ಬಳಿಗೆ ಹೋಗಲಿಲ್ಲ. ಹಿರಿಯರ ಹೆಸರುಗಳಿದ್ದ ಪಟ್ಟಿಯಲ್ಲಿ ಅವರ ಹೆಸರುಗಳಿದ್ದವು. ಆದರೆ ಅವರು ಪಾಳೆಯದಲ್ಲೇ ಉಳಿದುಕೊಂಡರು. ಆದರೆ ಅವರಿಗೆ ಆತ್ಮಿಕ ವರಗಳು ಕೊಡಲ್ಪಟ್ಟಿದ್ದರಿಂದ ಅವರು ಪಾಳೆಯದಲ್ಲಿ ಪ್ರವಾದಿಗಳಂತೆ ಪ್ರವಾದಿಸತೊಡಗಿದರು. 27 ಒಬ್ಬ ಯೌವನಸ್ಥನು ಮೋಶೆಯ ಬಳಿಗೆ ಓಡಿಹೋಗಿ, “ಎಲ್ದಾದ್ ಮತ್ತು ಮೇದಾದ್ ಎಂಬಿಬ್ಬರು ಪಾಳೆಯದಲ್ಲಿ ಪ್ರವಾದಿಗಳಂತೆ ಪ್ರವಾದಿಸುತ್ತಿದ್ದಾರೆ” ಎಂದು ಹೇಳಿದನು.

28 ನೂನನ ಮಗನಾದ ಯೆಹೋಶುವನು ಮೋಶೆಗೆ, “ಸ್ವಾಮೀ, ನೀನು ಅವರನ್ನು ತಡೆಯಬೇಕು” ಎಂದನು. (ಯೆಹೋಶುವನು ಯೌವನಸ್ಥನಾಗಿದ್ದಾಗಿನಿಂದಲೂ ಮೋಶೆಯ ಸಹಾಯಕನಾಗಿದ್ದನು.)

29 ಆದರೆ ಮೋಶೆಯು, “ನೀನು ನನ್ನ ವಿಷಯದಲ್ಲಿ ಚಿಂತೆಪಡುತ್ತಿರುವುದೇಕೆ? ಯೆಹೋವನ ಜನರೆಲ್ಲರೂ ಪ್ರವಾದಿಗಳಾಗಿರಬೇಕೆಂದು ನಾನು ಬಯಸುತ್ತೇನೆ. ಅವರೆಲ್ಲರ ಮೇಲೆ ಯೆಹೋವನು ತನ್ನ ಆತ್ಮನನ್ನು ಇರಿಸಬೇಕೆಂದು ನಾನು ಬಯಸುತ್ತೇನೆ” ಎಂದು ಉತ್ತರಿಸಿದನು. 30 ಬಳಿಕ ಮೋಶೆಯು ಮತ್ತು ಇಸ್ರೇಲರ ನಾಯಕರು ಪಾಳೆಯಕ್ಕೆ ಹಿಂತಿರುಗಿದರು.

ಕೀರ್ತನೆಗಳು 104:24-34

24 ಯೆಹೋವನೇ, ನೀನು ಅನೇಕ ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿರುವೆ.
    ನೀನು ಸೃಷ್ಟಿಸಿದ ವಸ್ತುಗಳಿಂದ ಭೂಮಿಯು ತುಂಬಿಹೋಗಿದೆ.
    ನಿನ್ನ ಪ್ರತಿಯೊಂದು ಕಾರ್ಯದಲ್ಲೂ ನಿನ್ನ ಜ್ಞಾನವನ್ನು ಕಾಣಬಲ್ಲವು.
25 ಇಗೋ ವಿಶಾಲವಾದ ಸಮುದ್ರವನ್ನು ನೋಡು.
    ಅದರೊಳಗೆ ಅನೇಕ ಬಗೆಯ ದೊಡ್ಡ ಜೀವಿಗಳೂ
    ನಾನಾ ಬಗೆಯ ಚಿಕ್ಕ ಜೀವಿಗಳೂ ಅಸಂಖ್ಯಾತವಾಗಿವೆ.
26 ನೀನು ಸೃಷ್ಟಿಸಿದ ಲಿವ್ಯಾತಾನನು ಸಮುದ್ರದಲ್ಲಿ ಆಟವಾಡುತ್ತಿದ್ದರೂ
    ಹಡಗು ಸಮುದ್ರದ ಮೇಲೆ ಸಂಚರಿಸುವುದು.

27 ಈ ಜೀವಿಗಳೆಲ್ಲಾ ನಿನ್ನನ್ನು ಅವಲಂಭಿಸಿಕೊಂಡಿವೆ.
    ಅವುಗಳಿಗೆ ಸರಿಸಮಯದಲ್ಲಿ ಆಹಾರವನ್ನು ಕೊಡುವಾತನು ನೀನೇ.
28 ಸರ್ವಜೀವಿಗಳಿಗೆ ಆಹಾರವನ್ನು ಕೊಡುವಾತನು ನೀನೇ.
    ನೀನು ಕೈತೆರೆದು ಒಳ್ಳೆಯ ಆಹಾರವನ್ನು ಕೊಡಲು ಅವು ತಿಂದು ತೃಪ್ತಿಯಾಗುತ್ತವೆ.
29 ನೀನು ಅವುಗಳಿಗೆ ವಿಮುಖನಾದಾಗ
    ಅವು ಭಯಗೊಳ್ಳುತ್ತವೆ.
ಅವುಗಳ ಶ್ವಾಸವು ಹೋಗಿ
    ಬಲಹೀನತೆಯಿಂದ ಸತ್ತು ಮತ್ತೆ ಮಣ್ಣಾಗುತ್ತವೆ.
30 ನಿನ್ನ ಜೀವಶ್ವಾಸವನ್ನು ಊದುವಾಗ ಅವು ಸೃಷ್ಟಿಯಾಗುತ್ತವೆ.
    ನೀನು ಭೂಮಿಯನ್ನು ಮತ್ತೆ ನೂತನ ಪಡಿಸುವೆ.

31 ಯೆಹೋವನ ಮಹಿಮೆಯು ಶಾಶ್ವತವಾಗಿರಲಿ!
    ಯೆಹೋವನು ತಾನು ಸೃಷ್ಟಿಸಿದವುಗಳಲ್ಲಿ ಆನಂದಿಸಲಿ.
32 ಆತನು ಭೂಮಿಯ ಕಡೆಗೆ ನೋಡಿದರೆ ಸಾಕು,
    ಭೂಮಿಯು ನಡುಗುವುದು;
ಆತನು ಬೆಟ್ಟಗಳನ್ನು ಮುಟ್ಟಿದರೆ ಸಾಕು,
    ಅವು ಜ್ವಾಲಾಮುಖಿಗಳಾಗುತ್ತವೆ.

33 ನನ್ನ ಜೀವಮಾನವೆಲ್ಲಾ ನಾನು ಯೆಹೋವನಿಗೆ ಗಾನ ಮಾಡುವೆನು.
    ನಾನು ಬದುಕಿರುವವರೆಗೂ ಆತನನ್ನು ಸಂಕೀರ್ತಿಸುವೆನು.
34 ನಾನು ಹೇಳಿದ ಈ ವಿಷಯಗಳು ಆತನನ್ನು ಸಂತೋಷಗೊಳಿಸಲಿ.
    ನಾನಾದರೋ ಯೆಹೋವನಲ್ಲಿ ಸಂತೋಷಿಸುವೆನು.

ಕೀರ್ತನೆಗಳು 104:35

35 ಪಾಪಾತ್ಮರು ಭೂಮಿಯಿಂದ ಕಾಣದೆಹೋಗಲಿ.
    ದುಷ್ಟರು ಎಂದೆಂದಿಗೂ ನಿರ್ಮೂಲವಾಗಲಿ.
ನನ್ನ ಆತ್ಮವೇ, ಯೆಹೋವನನ್ನು ಸ್ತುತಿಸು!

ಯೆಹೋವನನ್ನು ಕೊಂಡಾಡು!

1 ಕೊರಿಂಥದವರಿಗೆ 12:3-13

ಹೀಗಿರಲಾಗಿ, ನಾನು ನಿಮಗೆ ಹೇಳುವುದೇನೆಂದರೆ, ದೇವರಾತ್ಮನ ಸಹಾಯದಿಂದ ಮಾತಾಡುವ ಯಾವ ವ್ಯಕ್ತಿಯೇ ಆಗಲಿ, “ಯೇಸು ಶಾಪಗ್ರಸ್ತನಾಗಲಿ” ಎಂದು ಹೇಳುವುದಿಲ್ಲ. ಅಂತೆಯೇ ಪವಿತ್ರಾತ್ಮನ ಸಹಾಯವಿಲ್ಲದೆ ಯಾವ ವ್ಯಕ್ತಿಯೇ ಆಗಲಿ, “ಯೇಸುವೇ ಪ್ರಭು” ಎಂದು ಹೇಳಲಾರನು.

ಅನೇಕ ರೀತಿಯ ಆತ್ಮಿಕ ವರಗಳಿವೆ. ಆದರೆ ಅವುಗಳೆಲ್ಲ ಒಬ್ಬನೇ ಆತ್ಮನಿಂದ ಬಂದಂಥವುಗಳಾಗಿವೆ. ಸೇವೆಮಾಡಲು ವಿವಿಧ ಮಾರ್ಗಗಳಿವೆ, ಆದರೆ ಅವುಗಳೆಲ್ಲಾ ಒಬ್ಬನೇ ಆತ್ಮನಿಂದ ಬಂದಂಥವುಗಳಾಗಿವೆ. ದೇವರು ಜನರಲ್ಲಿ ಮಾಡುವ ಕಾರ್ಯಗಳಿಗೂ ವಿವಿಧ ಮಾರ್ಗಗಳಿವೆ. ಆದರೆ ಅವುಗಳೆಲ್ಲಾ ಒಬ್ಬನೇ ದೇವರಿಂದ ಬಂದಂಥವುಗಳಾಗಿವೆ.

ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಪವಿತ್ರಾತ್ಮನ ವರವು ಕಾಣಬಲ್ಲದು. ಇತರರಿಗೆ ಸಹಾಯ ಮಾಡಲೆಂದು ಪವಿತ್ರಾತ್ಮನು ವರವನ್ನು ಕೊಡುತ್ತಾನೆ. ಆತನು ಒಬ್ಬನಿಗೆ ಜ್ಞಾನದಿಂದ ಮಾತಾಡುವ ವರವನ್ನೂ ಮತ್ತೊಬ್ಬನಿಗೆ ತಿಳುವಳಿಕೆಯಿಂದ ಮಾತಾಡುವ ವರವನ್ನೂ ಕೊಡುತ್ತಾನೆ. ಒಬ್ಬನಿಗೆ ನಂಬಿಕೆಯನ್ನೂ ಮತ್ತೊಬ್ಬನಿಗೆ ಸ್ವಸ್ಥಪಡಿಸುವ ವರವನ್ನೂ ಕೊಡುತ್ತಾನೆ; 10 ಮತ್ತೊಬ್ಬನಿಗೆ ಅದ್ಭುತಕಾರ್ಯಗಳನ್ನು ಮಾಡುವ ಶಕ್ತಿಯನ್ನೂ ಇನ್ನೊಬ್ಬನಿಗೆ ಪ್ರವಾದಿಸುವ ಸಾಮರ್ಥ್ಯವನ್ನೂ ಇನ್ನೊಬ್ಬನಿಗೆ ಒಳ್ಳೆಯ ಮತ್ತು ಕೆಟ್ಟ ಆತ್ಮಗಳ ನಡುವೆ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವ ಸಾಮರ್ಥ್ಯವನ್ನೂ ಕೊಡುತ್ತಾನೆ; ಒಬ್ಬನಿಗೆ ಅನೇಕ ಭಾಷೆಗಳನ್ನು ಮಾತಾಡುವ ಸಾಮರ್ಥ್ಯವನ್ನೂ ಮತ್ತೊಬ್ಬನಿಗೆ ಆ ಭಾಷೆಗಳನ್ನು ಅನುವಾದಿಸುವ ಸಾಮರ್ಥ್ಯವನ್ನೂ ಕೊಡುತ್ತಾನೆ. 11 ಪವಿತ್ರಾತ್ಮನು ಒಬ್ಬನೇ. ಆತನೇ ಎಲ್ಲಾ ವರಗಳನ್ನು ತನ್ನ ಚಿತ್ತಕ್ಕನುಸಾರವಾಗಿ ಪ್ರತಿಯೊಬ್ಬನಿಗೂ ಹಂಚಿಕೊಟ್ಟು ನಡೆಸುತ್ತಾನೆ.

ಕ್ರಿಸ್ತನ ದೇಹ

12 ದೇಹವು ಒಂದೇ, ಆದರೆ ಅದು ಅನೇಕ ಅಂಗಗಳನ್ನು ಪಡೆದಿದೆ. ಹೌದು, ದೇಹದಲ್ಲಿ ಅನೇಕ ಅಂಗಗಳಿವೆ, ಆದರೆ ಆ ಎಲ್ಲಾ ಅಂಗಗಳಿಂದ ಒಂದೇ ಒಂದು ದೇಹವು ರೂಪಿತವಾಗುತ್ತದೆ. ಅಂತೆಯೇ ಕ್ರಿಸ್ತನು. 13 ನಮ್ಮಲ್ಲಿ ಕೆಲವರು ಯೆಹೂದ್ಯರಿದ್ದಾರೆ, ಕೆಲವರು ಗ್ರೀಕರಿದ್ದಾರೆ, ಕೆಲವರು ಗುಲಾಮರಿದ್ದಾರೆ, ಕೆಲವರು ಸ್ವತಂತ್ರರಿದ್ದಾರೆ, ಆದರೆ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಬ್ಬನೇ ಪವಿತ್ರಾತ್ಮನ ಮೂಲಕ ದೀಕ್ಷಾಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬನೇ ಪವಿತ್ರಾತ್ಮನನ್ನು ಕೊಡಲಾಯಿತು.[a]

ಅಪೊಸ್ತಲರ ಕಾರ್ಯಗಳು 2:1-21

ಪವಿತ್ರಾತ್ಮನ ಆಗಮನ

ಪಂಚಾಶತ್ತಮ ಹಬ್ಬದ[a] ದಿನ ಬಂದಾಗ ಅವರೆಲ್ಲರು ಒಂದು ಸ್ಥಳದಲ್ಲಿ ಒಟ್ಟಾಗಿ ಸೇರಿದ್ದರು. ಆಗ, ಆಕಾಶದಿಂದ ಒಂದು ಶಬ್ದ ಇದ್ದಕ್ಕಿದ್ದಂತೆ ಬಂದಿತು. ಬಿರುಗಾಳಿ ಬೀಸುತ್ತಿದೆಯೋ ಎಂಬಂತಿತ್ತು ಆ ಶಬ್ದ. ಅವರು ಕುಳಿತುಕೊಂಡಿದ್ದ ಮನೆಯಲ್ಲೆಲ್ಲಾ ಆ ಶಬ್ದ ತುಂಬಿಕೊಂಡಿತು. ಬೆಂಕಿಯ ಜ್ವಾಲೆಗಳಂತಿದ್ದ ಏನನ್ನೊ ಅವರು ಕಂಡರು. ಜ್ವಾಲೆಗಳು ವಿಂಗಡವಾಗಿ ಅಲ್ಲಿದ್ದ ಪ್ರತಿಯೊಬ್ಬ ವ್ಯಕ್ತಿಯ ಮೇಲೆ ನೆಲೆಸಿದವು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ವಿವಿಧ ಭಾಷೆಗಳಲ್ಲಿ ಮಾತಾಡತೊಡಗಿದರು. ಪವಿತ್ರಾತ್ಮನೇ ಅವರಿಗೆ ಆ ಶಕ್ತಿಯನ್ನು ಕೊಟ್ಟನು.

ಬಹು ಧಾರ್ಮಿಕರಾದ ಅನೇಕ ಯೆಹೂದ್ಯರು ಆ ಸಮಯದಲ್ಲಿ ಜೆರುಸಲೇಮಿನಲ್ಲಿದ್ದರು. ಇವರಲ್ಲಿ ಪ್ರಪಂಚದ ಪ್ರತಿಯೊಂದು ದೇಶದಿಂದ ಬಂದ ಜನರಿದ್ದರು. ಈ ಶಬ್ದವನ್ನು ಕೇಳಿ ಈ ಜನರ ಒಂದು ದೊಡ್ಡ ಸಮೂಹವೇ ಅಲ್ಲಿಗೆ ಬಂದಿತು. ಅಪೊಸ್ತಲರು ಮಾತಾಡುತ್ತಿರುವುದು ಪ್ರತಿಯೊಬ್ಬರಿಗೂ ಅವರವರ ಸ್ವಂತ ಭಾಷೆಗಳಲ್ಲಿ ಕೇಳಿಸುತ್ತಿರುವುದನ್ನು ಕಂಡು ಅವರಿಗೆ ಆಶ್ಚರ್ಯವಾಯಿತು.

ಇದನ್ನು ನೋಡಿದ ಯೆಹೂದ್ಯರೆಲ್ಲರೂ ವಿಸ್ಮಯಗೊಂಡರು. ಹೀಗೆ ಮಾಡಲು ಅಪೊಸ್ತಲರಿಗೆ ಹೇಗೆ ಸಾಧ್ಯವಾಯಿತೆಂದು ಅವರಿಗೆ ಅರ್ಥವಾಗಲಿಲ್ಲ. ಅವರು, “ಮಾತಾಡುತ್ತಿರುವ ಈ ಜನರು (ಅಪೊಸ್ತಲರು) ಗಲಿಲಾಯದವರು![b] ಆದರೆ ಇವರು ನಮ್ಮ ಸ್ವಂತ ಭಾಷೆಗಳಲ್ಲಿ ಮಾತಾಡುತ್ತಿರುವಂತೆ ಕೇಳಿಸುತ್ತಿದೆ. ಇದು ಹೇಗೆ ಸಾಧ್ಯ? ನಾವು ಬೇರೆಬೇರೆ ಸ್ಥಳಗಳವರು. ನಮ್ಮಲ್ಲಿ ಪಾರ್ಥ್ಯರು, ಮೇದ್ಯರು, ಏಲಾಮಿನವರು, ಮೆಸೊಪೊಟೇಮದವರು, ಯೂದಾಯದವರು, ಕಪ್ಪದೋಕ್ಯಯದವರು, ಪೊಂತದವರು, ಏಷ್ಯಾದವರು,[c] 10 ಫ್ರಿಜಿಯದವರು, ಪಾಂಫಿಲಿಯದವರು, ಈಜಿಪ್ಟ್‌ನವರು ಮತ್ತು ಸಿರೇನಿನ ಬಳಿಯಲ್ಲಿರುವ ಲಿಬಿಯ ಪ್ರಾಂತ್ಯದವರು, ರೋಮ್‌ನವರು, 11 ಕ್ರೇಟ್‌ನವರು ಮತ್ತು ಅರೇಬಿಯವರು ಇದ್ದಾರೆ. ನಮ್ಮಲ್ಲಿರುವ ಕೆಲವು ಜನರು ಹುಟ್ಟು ಯೆಹೂದ್ಯರು. ಉಳಿದವರು ಮತಾಂತರ ಹೊಂದಿದವರು. ನಾವು ಬೇರೆಬೇರೆ ದೇಶಗಳವರು. ಆದರೆ ಈ ಜನರು ಮಾತಾಡುತ್ತಿರುವುದು ನಮ್ಮ ಸ್ವಂತ ಭಾಷೆಗಳಲ್ಲಿ ನಮಗೆ ಕೇಳಿಸುತ್ತಿದೆ! ಅವರು ದೇವರ ಬಗ್ಗೆ ಹೇಳುತ್ತಿರುವ ಮಹಾಸಂಗತಿಗಳು ನಮಗೆಲ್ಲರಿಗೂ ಅರ್ಥವಾಗುತ್ತಿವೆ” ಎಂದು ಹೇಳಿದರು.

12 ಜನರೆಲ್ಲರೂ ವಿಸ್ಮಯಗೊಂಡರು ಮತ್ತು ಗಲಿಬಿಲಿಯಾದರು. ಅವರು, “ಏನು ನಡೆಯುತ್ತಿದೆ?” ಎಂದು ಒಬ್ಬರನ್ನೊಬ್ಬರು ಕೇಳತೊಡಗಿದರು. 13 ಕೆಲವರು ಅಪೊಸ್ತಲರನ್ನು ನೋಡಿ ನಗುತ್ತಾ, “ಇವರು ಅತಿಯಾಗಿ ದ್ರಾಕ್ಷಾರಸ ಕುಡಿದು ಮತ್ತರಾಗಿದ್ದಾರೆ” ಎಂದು ಹಾಸ್ಯಮಾಡಿದರು.

ಪೇತ್ರನ ಪ್ರಸಂಗ

14 ಬಳಿಕ ಪೇತ್ರನು ಉಳಿದ ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎದ್ದುನಿಂತುಕೊಂಡನು. ಎಲ್ಲಾ ಜನರಿಗೆ ಕೇಳುವಂತೆ ಅವನು ಗಟ್ಟಿಯಾಗಿ ಹೀಗೆಂದನು: “ಯೆಹೂದ್ಯರೇ, ಜೆರುಸಲೇಮಿನಲ್ಲಿ ವಾಸವಾಗಿರುವ ಜನರೇ, ನನಗೆ ಕಿವಿಗೊಡಿರಿ. ನೀವು ತಿಳಿದುಕೊಳ್ಳಬೇಕಾದ ಸಂಗತಿಯನ್ನು ನಾನು ನಿಮಗೆ ಹೇಳುತ್ತೇನೆ. 15 ನೀವು ಯೋಚಿಸಿಕೊಂಡಿರುವಂತೆ ಈ ಜನರು ಕುಡಿದು ಮತ್ತರಾದವರಲ್ಲ. ಈಗ ಮುಂಜಾನೆ ಒಂಭತ್ತು ಗಂಟೆಯಷ್ಟೆ! 16 ಆದರೆ ಈ ಹೊತ್ತು ಇಲ್ಲಿ ನಡೆಯುತ್ತಿರುವ ಸಂಗತಿಗಳ ಬಗ್ಗೆ ಪ್ರವಾದಿಯಾದ ಯೋವೇಲನು ಹೀಗೆ ಬರೆದಿದ್ದಾನೆ:

17 ‘ದೇವರು ಹೀಗೆನ್ನುತ್ತಾನೆ:
ಕೊನೆಯ ದಿನಗಳಲ್ಲಿ, ನಾನು ನನ್ನ ಆತ್ಮವನ್ನು ಎಲ್ಲಾ ಜನರ ಮೇಲೆ ಸುರಿಸುವೆನು.
    ನಿಮ್ಮ ಗಂಡುಮಕ್ಕಳು, ಹೆಣ್ಣುಮಕ್ಕಳು ಪ್ರವಾದಿಸುವರು.
    ನಿಮ್ಮ ಯುವಜನರು ದರ್ಶನಗಳನ್ನು ಕಾಣುವರು.
    ನಿಮ್ಮ ವಯೋವೃದ್ಧರು ವಿಶೇಷ ಕನಸುಗಳನ್ನು ಕಾಣುವರು.
18 ಆ ಸಮಯದಲ್ಲಿ ನಾನು ನನ್ನ ಆತ್ಮವನ್ನು ನನ್ನ ದಾಸದಾಸಿಯರ ಮೇಲೆ ಸುರಿಸುವೆನು.
    ಆಗ ಅವರು ಪ್ರವಾದಿಸುವರು.
19 ನಾನು ಆಕಾಶದಲ್ಲಿ ಅದ್ಭುತಕಾರ್ಯಗಳನ್ನು ತೋರಿಸುವೆನು.
    ಭೂಮಿಯ ಮೇಲೆ ಸೂಚಕಕಾರ್ಯಗಳನ್ನು ಮಾಡುವೆನು.
    ರಕ್ತ, ಬೆಂಕಿ ಮತ್ತು ಕಪ್ಪೊಗೆಗಳು ಅಲ್ಲಿರುವವು.
20 ಸೂರ್ಯನು ಕತ್ತಲಾಗುವನು,
    ಚಂದ್ರನು ರಕ್ತದಂತೆ ಕೆಂಪಾಗುವನು,
ಆಗ ಪ್ರಭುವಿನ ಗಂಭೀರವಾದ ಮಹಾದಿನವು ಬರುವುದು;
21 ಪ್ರಭುವಿನ ಹೆಸರನ್ನು ಹೇಳಿಕೊಳ್ಳುವವರಿಗೆಲ್ಲ ರಕ್ಷಣೆ ಆಗುವುದು.’(A)

ಯೋಹಾನ 20:19-23

ಶಿಷ್ಯರಿಗೆ ಯೇಸುವಿನ ದರ್ಶನ

(ಮತ್ತಾಯ 28:16-20; ಮಾರ್ಕ 16:14-18; ಲೂಕ 24:36-49)

19 ಅಂದು ಭಾನುವಾರ, ಅದೇ ಸಾಯಂಕಾಲ ಶಿಷ್ಯರು ಒಟ್ಟಾಗಿ ಸೇರಿದ್ದರು. ಅವರು ಯೆಹೂದ್ಯರಿಗೆ ಹೆದರಿ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ಶಾಂತಿಯು ನಿಮ್ಮೊಂದಿಗಿರಲಿ!” ಎಂದು ಹೇಳಿದನು. 20 ಯೇಸು ಹೀಗೆ ಹೇಳಿದ ಮೇಲೆ, ತನ್ನ ಕೈಗಳನ್ನು ಮತ್ತು ಪಕ್ಕೆಯನ್ನು ಅವರಿಗೆ ತೋರಿಸಿದನು. ಪ್ರಭುವನ್ನು ಕಂಡು ಶಿಷ್ಯರಿಗೆ ಬಹು ಸಂತೋಷವಾಯಿತು.

21 ಬಳಿಕ ಯೇಸು ಮತ್ತೆ, “ಶಾಂತಿಯು ನಿಮ್ಮೊಂದಿಗಿರಲಿ! ತಂದೆಯು ನನ್ನನ್ನು ಕಳುಹಿಸಿದನು. ಅದೇ ರೀತಿಯಲ್ಲಿ, ಈಗ ನಾನೂ ನಿಮ್ಮನ್ನು ಕಳುಹಿಸುತ್ತೇನೆ” ಎಂದು ಹೇಳಿದನು. 22 ಯೇಸು ಹೀಗೆ ಹೇಳಿದ ನಂತರ ಶಿಷ್ಯರ ಮೇಲೆ ಉಸಿರೂದಿ, “ಪವಿತ್ರಾತ್ಮನನ್ನು ಸ್ವೀಕರಿಸಿಕೊಳ್ಳಿ. 23 ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ, ಅವರ ಪಾಪಗಳನ್ನು ಕ್ಷಮಿಸಲಾಗುವುದು. ನೀವು ಯಾರ ಪಾಪಗಳನ್ನು ಕ್ಷಮಿಸುವುದಿಲ್ಲವೋ, ಅವರ ಪಾಪಗಳಿಗೆ ಕ್ಷಮೆ ದೊರೆಯುವುದಿಲ್ಲ” ಎಂದು ಹೇಳಿದನು.

ಯೋಹಾನ 7:37-39

ಪವಿತ್ರಾತ್ಮನ ಬಗ್ಗೆ ಉಪದೇಶ

37 ಹಬ್ಬದ ಕೊನೆಯ ದಿನ ಬಂದಿತು. ಅದು ಅತ್ಯಂತ ಮುಖ್ಯವಾದ ದಿನವಾಗಿತ್ತು. ಅಂದು ಯೇಸು ನಿಂತುಕೊಂಡು, “ಯಾವನಿಗಾದರೂ ಬಾಯಾರಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ. 38 ನನ್ನಲ್ಲಿ ನಂಬಿಕೆ ಇಡುವವನ ಹೊಟ್ಟೆಯೊಳಗಿಂದ ಜೀವಕರವಾದ ನೀರಿನ ಹೊಳೆಗಳು ಹರಿಯುತ್ತವೆ. ಪವಿತ್ರ ಗ್ರಂಥವು ತಿಳಿಸುವುದು ಇದನ್ನೇ” ಎಂದು ಗಟ್ಟಿಯಾಗಿ ಹೇಳಿದನು. 39 ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮನನ್ನು ಕುರಿತು ಹೇಳಿದನು. ಆತನು ಇನ್ನೂ ತನ್ನ ಮಹಿಮೆಯನ್ನು ಹೊಂದಿಲ್ಲದಿದ್ದ ಕಾರಣ ಪವಿತ್ರಾತ್ಮನು ಇನ್ನೂ ಬಂದಿರಲಿಲ್ಲ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International