Revised Common Lectionary (Semicontinuous)
ಪ್ರಾರ್ಥನೆ. ರಚನೆಗಾರ: ದಾವೀದ.
17 ಯೆಹೋವನೇ, ನ್ಯಾಯವಾದ ನನ್ನ ಪ್ರಾರ್ಥನೆಗೆ ಕಿವಿಗೊಡು.
ನನ್ನ ಮೊರೆಯನ್ನು ಆಲೈಸು, ನನ್ನ ಯಥಾರ್ಥವಾದ ಪ್ರಾರ್ಥನೆಗೆ ಕಿವಿಗೊಡು.
2 ನನ್ನ ಕುರಿತಾಗಿ ನ್ಯಾಯವಾದ ತೀರ್ಪು ನಿನ್ನಿಂದಲೇ ಬರಲಿ.
ನೀನು ಸತ್ಯವನ್ನು ನೋಡಬಲ್ಲಾತನಾಗಿರುವೆ.
3 ನೀನು ನನ್ನ ಅಂತರಾಳವನ್ನು ರಾತ್ರಿಯೆಲ್ಲಾ ಪರೀಕ್ಷಿಸಿರುವೆ.
ನೀನು ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದಾಗ
ನನ್ನಲ್ಲಿ ಯಾವ ದೋಷವೂ ಕಂಡುಬರಲಿಲ್ಲ.
ನಾನು ಯಾವ ತಪ್ಪನ್ನೂ ಮಾಡಿರಲಿಲ್ಲ.
4 ನಿನ್ನ ಆಜ್ಞೆಗಳಿಗೆ ವಿಧೇಯನಾಗಲು
ನನ್ನಿಂದಾದಷ್ಟು ಪ್ರಯತ್ನಿಸಿದ್ದೇನೆ.
5 ನಿನ್ನ ಜೀವಮಾರ್ಗದಲ್ಲೇ ಹೆಜ್ಜೆಯಿಡುತ್ತಾ ನಡೆಯುತ್ತಿದ್ದೇನೆ.
ನನ್ನ ಪಾದವು ತಪ್ಪು ದಾರಿಗೆ ಹೋಗಲಿಲ್ಲ.
6 ದೇವರೇ, ನಾನು ನಿನ್ನನ್ನು ಕರೆದಾಗಲ್ಲೆಲ್ಲಾ, ನೀನು ನನಗೆ ಉತ್ತರಿಸಿದೆ.
ಆದ್ದರಿಂದ ಈಗಲೂ ನನಗೆ ಕಿವಿಗೊಡು.
7 ದೇವರೇ, ನಿನ್ನಲ್ಲಿ ಭರವಸೆಯಿಟ್ಟಿರುವ ಭಕ್ತರಿಗೆ
ನೀನು ಸಹಾಯಮಾಡುವೆ;
ಅವರು ನಿನ್ನ ಬಲಗಡೆಯಲ್ಲಿ ಸುರಕ್ಷಿತವಾಗಿರುವರು.
ಆದ್ದರಿಂದ ನಿನ್ನ ಭಕ್ತನಾದ ನನ್ನ ಪ್ರಾರ್ಥನೆಗೂ ಕಿವಿಗೊಡು.
15 ನಾನು ನ್ಯಾಯಕ್ಕಾಗಿ ಪ್ರಾರ್ಥಿಸಿದ್ದರಿಂದ ನನಗೆ ನಿನ್ನ ಮುಖದ ದರ್ಶನವಾಗುವುದು.
ಎಚ್ಚೆತ್ತಾಗ ನಿನ್ನ ಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.
3 ಯಾಕೋಬನ ಅಣ್ಣನಾದ ಏಸಾವನು ಸೇಯೀರ್ ಎಂಬ ಸ್ಥಳದಲ್ಲಿ ವಾಸವಾಗಿದ್ದನು. ಈ ಸ್ಥಳವು ಎದೋಮಿನ ಗುಡ್ಡಗಾಡು ಪ್ರದೇಶವಾಗಿತ್ತು. ಯಾಕೋಬನು ತನ್ನ ಸಂದೇಶಕರ ಮೂಲಕ 4 ಏಸಾವನಿಗೆ ಈ ಸಂಗತಿಗಳನ್ನು ತಿಳಿಸಿದನು: “ನಿನ್ನ ಸೇವಕನಾದ ಯಾಕೋಬನು ಹೇಳುವುದೇನೆಂದರೆ, ‘ನಾನು ಕಳೆದ ವರ್ಷಗಳೆಲ್ಲಾ ಲಾಬಾನನೊಡನೆ ಜೀವಿಸಿದೆನು. 5 ನನಗೆ ಅನೇಕ ದನಗಳೂ, ಕತ್ತೆಗಳೂ, ಆಡುಕುರಿಗಳೂ ಮತ್ತು ಸೇವಕಸೇವಕಿಯರೂ ಇದ್ದಾರೆ. ಸ್ವಾಮೀ, ನೀವು ನಮ್ಮನ್ನು ಸ್ವೀಕರಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತಿದ್ದೇನೆ.’”
6 ಸಂದೇಶಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, “ನಾವು ನಿನ್ನ ಅಣ್ಣನಾದ ಏಸಾವನ ಬಳಿಗೆ ಹೋದೆವು. ಅವನು ನಿನ್ನನ್ನು ಭೇಟಿಯಾಗಲು ಬರುತ್ತಿದ್ದಾನೆ. ಅವನೊಡನೆ ನಾನೂರು ಮಂದಿ ಗಂಡಸರಿದ್ದಾರೆ” ಎಂದು ಹೇಳಿದರು.
7 ಯಾಕೋಬನಿಗೆ ಭಯವಾಯಿತು. ಅವನು ತನ್ನೊಡನೆ ಇದ್ದ ಜನರನ್ನು ಎರಡು ಗುಂಪುಗಳನ್ನಾಗಿ ವಿಂಗಡಿಸಿದನು. ಅವನು ಎಲ್ಲಾ ಆಡುಕುರಿಗಳನ್ನೂ ದನಕರುಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳನ್ನಾಗಿ ವಿಂಗಡಿಸಿದನು. 8 “ಒಂದುವೇಳೆ ಏಸಾವನು ಬಂದು ಒಂದು ಗುಂಪನ್ನು ನಾಶಗೊಳಿಸಿದರೆ, ಮತ್ತೊಂದು ಗುಂಪು ಓಡಿಹೋಗಿ ತಪ್ಪಿಸಿಕೊಳ್ಳಬಹುದು” ಎಂಬುದು ಅವನ ಆಲೋಚನೆಯಾಗಿತ್ತು.
9 ಯಾಕೋಬನು, “ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರಾಗಿರುವ ಯೆಹೋವನೇ, ನನ್ನ ದೇಶಕ್ಕೆ ಮತ್ತು ನನ್ನ ಕುಟುಂಬಕ್ಕೆ ಹಿಂತಿರುಗಿ ಬರುವಂತೆ ನೀನು ಹೇಳಿದೆ. ನೀನು ನನಗೆ ಒಳ್ಳೆಯದನ್ನು ಮಾಡುವುದಾಗಿ ಹೇಳಿದೆ. 10 ನೀನು ನನಗೆ ತುಂಬ ಕರುಣೆ ತೋರಿದೆ. ನೀನು ನನಗೆ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿದೆ. ಮೊದಲನೆ ಸಲ ನಾನು ಜೋರ್ಡನ್ ನದಿಯನ್ನು ದಾಟಿ ಪ್ರಯಾಣ ಮಾಡಿದಾಗ, ಕೇವಲ ನನ್ನ ಊರುಗೋಲೇ ಹೊರತು ಬೇರೇನೂ ನನಗಿರಲಿಲ್ಲ. ಆದರೆ ಈಗ ಎರಡು ಗುಂಪುಗಳಿಗೆ ಬೇಕಾದ ವಸ್ತುಗಳನ್ನು ನಾನು ಪಡೆದಿದ್ದೇನೆ. 11 ಇಂತಿರಲು, ದಯವಿಟ್ಟು ನನ್ನ ಅಣ್ಣನಿಂದ ನನ್ನನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತಿರುವೆ. ಏಸಾವನಿಂದ ನನ್ನನ್ನು ಕಾಪಾಡು. ಅವನು ಬಂದು ನಮ್ಮೆಲ್ಲರನ್ನೂ ತಾಯಂದಿರನ್ನೂ ಮಕ್ಕಳನ್ನೂ ಕೊಲ್ಲುವನೆಂಬ ಭಯ ನನಗಿದೆ. 12 ‘ನಾನು ನಿನಗೆ ಒಳ್ಳೆಯದನ್ನು ಮಾಡುವೆ. ನಾನು ನಿನ್ನ ಕುಟುಂಬವನ್ನು ಹೆಚ್ಚಿಸಿ ನಿನ್ನ ಮಕ್ಕಳನ್ನು ಸಮುದ್ರದ ಮರಳಿನಷ್ಟು ವೃದ್ಧಿಗೊಳಿಸುವೆನು. ಅವರು ಲೆಕ್ಕಿಸಲಾಗದಷ್ಟು ಅಸಂಖ್ಯಾತವಾಗಿರುವರು’ ಎಂದು ನೀನು ನನಗೆ ವಾಗ್ದಾನ ಮಾಡಿದಿಯಲ್ಲವೇ” ಎಂದು ಪ್ರಾರ್ಥಿಸಿದನು.
13 ಯಾಕೋಬನು ಆ ರಾತ್ರಿ ಅಲ್ಲಿಯೇ ಉಳಿದುಕೊಂಡು ಏಸಾವನಿಗೆ ಉಡುಗೊರೆಯಾಗಿ ಕೊಡಲು ಕೆಲವು ವಸ್ತುಗಳನ್ನು ಸಿದ್ಧಗೊಳಿಸಿದನು. 14 ಯಾಕೋಬನು ಇನ್ನೂರು ಮೇಕೆಗಳನ್ನು, ಇಪ್ಪತ್ತು ಹೋತಗಳನ್ನು, ಇನ್ನೂರು ಕುರಿಗಳನ್ನು ಮತ್ತು ಇಪ್ಪತ್ತು ಟಗರುಗಳನ್ನು ತೆಗೆದುಕೊಂಡನು. 15 ಯಾಕೋಬನು ಮೂವತ್ತು ಒಂಟೆಗಳನ್ನು ಮತ್ತು ಅವುಗಳ ಮರಿಗಳನ್ನು ನಲವತ್ತು ಹಸುಗಳನ್ನು ಮತ್ತು ಹತ್ತು ಹೋರಿಗಳನ್ನು, ಇಪ್ಪತ್ತು ಹೆಣ್ಣು ಕತ್ತೆಗಳನ್ನು ಮತ್ತು ಹತ್ತು ಗಂಡು ಕತ್ತೆಗಳನ್ನು ತೆಗೆದುಕೊಂಡನು. 16 ಯಾಕೋಬನು ಪಶುಗಳ ಪ್ರತಿಯೊಂದು ಮಂದೆಯನ್ನೂ ತನ್ನ ಸೇವಕರ ವಶಕ್ಕೆ ಕೊಟ್ಟನು. ಆಮೇಲೆ ಯಾಕೋಬನು ಸೇವಕರಿಗೆ, “ಪಶುಗಳ ಪ್ರತಿಯೊಂದು ಗುಂಪನ್ನು ವಿಂಗಡಿಸಿ ನನ್ನ ಮುಂದೆ ಹೋಗಿರಿ; ಅಲ್ಲದೆ ಪ್ರತಿಯೊಂದು ಮಂದೆಯ ನಡುವೆಯೂ ಸ್ವಲ್ಪ ಅಂತರವಿರಲಿ” ಎಂದು ಹೇಳಿದನು. 17 ಯಾಕೋಬನು ಅವರಿಗೆ ಅವರವರ ಕರ್ತವ್ಯಗಳನ್ನು ತಿಳಿಸಿದನು. ಯಾಕೋಬನು ಪಶುಗಳ ಮೊದಲನೆ ಗುಂಪಿನ ಸೇವಕನಿಗೆ, “ನನ್ನ ಅಣ್ಣನಾದ ಏಸಾವನು ನಿನ್ನ ಬಳಿಗೆ ಬಂದು, ‘ಇವು ಯಾರ ಪಶುಗಳು? ನೀನು ಎಲ್ಲಿಗೆ ಹೋಗುತ್ತಿರುವೆ? ನೀನು ಯಾರ ಸೇವಕನು?’ ಎಂದು ಕೇಳುವನು. 18 ಆಗ ನೀನು, ‘ಪಶುಗಳು ನಿನ್ನ ಸೇವಕನಾದ ಯಾಕೋಬನವು. ನನ್ನ ಒಡೆಯನಾದ ಏಸಾವನೇ, ಯಾಕೋಬನು ಇವುಗಳನ್ನು ನಿನಗೆ ಉಡುಗೊರೆಯಾಗಿ ಕಳುಹಿಸಿದ್ದಾನೆ. ಅಲ್ಲದೆ ಅವನು ಸಹ ನಮ್ಮ ಹಿಂದೆ ಬರುತ್ತಿದ್ದಾನೆ’ ಎಂದು ತಿಳಿಸಬೇಕು” ಎಂದು ಹೇಳಿದನು.
19 ಇದೇ ರೀತಿ ಮಾಡುವಂತೆ ಯಾಕೋಬನು ಎರಡನೆಯ ಸೇವಕನಿಗೆ, ಮೂರನೆಯ ಸೇವಕನಿಗೆ ಮತ್ತು ಉಳಿದೆಲ್ಲಾ ಸೇವಕರಿಗೆ ಆಜ್ಞಾಪಿಸಿದನು. ಅವನು ಅವರಿಗೆ, “ನೀವು ಏಸಾವನನ್ನು ಭೇಟಿಯಾದಾಗ ಇದೇ ರೀತಿ ಮಾಡಬೇಕು. 20 ನೀವು ಅವನಿಗೆ, ‘ಇದು ನಿನಗೆ ಕಳುಹಿಸಿರುವ ಉಡುಗೊರೆ. ಅಲ್ಲದೆ ನಿನ್ನ ಸೇವಕನಾದ ಯಾಕೋಬನು ನಮ್ಮ ಹಿಂದೆ ಬರುತ್ತಿದ್ದಾನೆ’ ಎಂದು ಹೇಳಬೇಕು” ಎಂದು ತಿಳಿಸಿದನು.
“ನಾನು ಈ ಜನರನ್ನು ಉಡುಗೊರೆಗಳೊಡನೆ ಮುಂದೆ ಕಳುಹಿಸಿದರೆ, ಒಂದುವೇಳೆ ಏಸಾವನು ನನ್ನನ್ನು ಕ್ಷಮಿಸಿ ನನ್ನನ್ನು ಸ್ವೀಕರಿಸಿಕೊಳ್ಳಬಹುದು” ಎಂಬುದು ಯಾಕೋಬನ ಆಲೋಚನೆಯಾಗಿತ್ತು. 21 ಯಾಕೋಬನು ಏಸಾವನಿಗೆ ಉಡುಗೊರೆಗಳನ್ನು ಕಳುಹಿಸಿ ಆ ರಾತ್ರಿ ಪಾಳೆಯದಲ್ಲಿ ಉಳಿದುಕೊಂಡನು.
37 ಇದನ್ನು ಕೇಳಿದಾಗ, ಅವರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪೇತ್ರನನ್ನು ಮತ್ತು ಉಳಿದ ಅಪೊಸ್ತಲರನ್ನು, “ಈಗ ನಾವೇನು ಮಾಡಬೇಕು?” ಎಂದು ಕೇಳಿದರು.
38 ಪೇತ್ರನು ಅವರಿಗೆ, “ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ. ಆಗ ದೇವರು ನಿಮ್ಮ ಪಾಪಗಳನ್ನು ಕ್ಷಮಿಸುವನು. ಅಲ್ಲದೆ ದೇವರು ವಾಗ್ದಾನ ಮಾಡಿರುವ ಪವಿತ್ರಾತ್ಮನನ್ನು ಹೊಂದಿಕೊಳ್ಳುವಿರಿ. 39 ಈ ವಾಗ್ದಾನವನ್ನು ನಿಮಗೂ ನಿಮ್ಮ ಮಕ್ಕಳಿಗೂ ಬಹು ದೂರದಲ್ಲಿರುವ ಜನರಿಗೂ ಕೊಡಲಾಗಿದೆ. ನಮ್ಮ ದೇವರಾದ ಪ್ರಭುವು ತನ್ನ ಬಳಿಗೆ ಕರೆಯುವ ಪ್ರತಿಯೊಬ್ಬರಿಗೂ ಈ ವಾಗ್ದಾನವನ್ನು ಕೊಟ್ಟಿದ್ದಾನೆ” ಎಂದು ಹೇಳಿದನು.
40 ಪೇತ್ರನು ಇನ್ನೂ ಅನೇಕ ಮಾತುಗಳಿಂದ ಅವರನ್ನು ಎಚ್ಚರಿಸಿ, “ಈ ದುಷ್ಟ ಸಂತತಿಯಿಂದ ತಪ್ಪಿಸಿಕೊಳ್ಳಿ” ಎಂದು ಬೇಡಿಕೊಂಡನು. 41 ಪೇತ್ರನು ಹೇಳಿದ್ದನ್ನು ಸ್ವೀಕರಿಸಿಕೊಂಡ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿನ ಸುಮಾರು ಮೂರುಸಾವಿರ ಜನರು ವಿಶ್ವಾಸಿಗಳ ಗುಂಪಿಗೆ ಸೇರಿದರು.
ಅನ್ಯೋನ್ಯ ಜೀವನ
42 ಇವರೆಲ್ಲರೂ ಅಪೊಸ್ತಲರ ಬೋಧನೆಯನ್ನು ಕೇಳುವುದರಲ್ಲಿಯೂ ಸಹೋದರರ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿಯುವುದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು. 43 ಅಪೊಸ್ತಲರು ಅನೇಕ ಶಕ್ತಿಯುತ ಮತ್ತು ಅದ್ಭುತಕಾರ್ಯಗಳನ್ನು ಮಾಡುತ್ತಿದ್ದರು; ಮತ್ತು ಪ್ರತಿಯೊಬ್ಬರಿಗೂ ದೇವರಲ್ಲಿ ಭಯಭಕ್ತಿ ಉಂಟಾಯಿತು. 44 ಎಲ್ಲಾ ವಿಶ್ವಾಸಿಗಳು ಒಟ್ಟಾಗಿ ವಾಸಿಸುತ್ತಿದ್ದರು. ಅವರು ಪ್ರತಿಯೊಂದನ್ನೂ ಹಂಚಿಕೊಳ್ಳುತ್ತಿದ್ದರು. 45 ತಮ್ಮ ಜಮೀನನ್ನು ಮತ್ತು ತಾವು ಹೊಂದಿದ್ದ ವಸ್ತುಗಳನ್ನು ಮಾರಿ, ಬಂದ ಹಣವನ್ನೆಲ್ಲಾ ಕೊರತೆಯಲ್ಲಿದ್ದವರಿಗೆ ಹಂಚಿಕೊಡುತ್ತಿದ್ದರು; 46 ಪ್ರತಿದಿನ ದೇವಾಲಯದಲ್ಲಿ ಸೇರಿಬರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು. ಅವರು ತಮ್ಮ ಮನೆಗಳಲ್ಲಿ ರೊಟ್ಟಿ ಮುರಿದು ಒಟ್ಟಾಗಿ ಊಟ ಮಾಡುತ್ತಿದ್ದರು. ಅವರ ಹೃದಯಗಳು ಆನಂದದಿಂದ ತುಂಬಿದ್ದವು. 47 ಅವರು ದೇವರನ್ನು ಕೊಂಡಾಡುತ್ತಿದ್ದರು ಮತ್ತು ಜನರೆಲ್ಲರೂ ಅವರನ್ನು ಇಷ್ಟಪಡುತ್ತಿದ್ದರು. ಪ್ರತಿದಿನವೂ ಹೆಚ್ಚುಹೆಚ್ಚು ಜನರು ರಕ್ಷಣೆ ಹೊಂದುತ್ತಿದ್ದರು; ಪ್ರಭುವು ಅವರನ್ನೆಲ್ಲಾ ವಿಶ್ವಾಸಿಗಳ ಸಭೆಗೆ ಸೇರಿಸುತ್ತಿದ್ದನು.
Kannada Holy Bible: Easy-to-Read Version. All rights reserved. © 1997 Bible League International