Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 83:1-4

ಸ್ತುತಿಗೀತೆ. ರಚನೆಗಾರ: ಆಸಾಫ.

83 ದೇವರೇ, ಸುಮ್ಮನಿರಬೇಡ!
    ನಿನ್ನ ಕಣ್ಣುಗಳನ್ನು ಮುಚ್ಚಿಕೊಳ್ಳಬೇಡ.
    ದೇವರೇ, ದಯವಿಟ್ಟು ಮಾತನಾಡು.
ದೇವರೇ, ನಿನ್ನ ಶತ್ರುಗಳು ನಿನಗೆ ವಿರೋಧವಾಗಿ ಸಂಚು ಮಾಡುತ್ತಿದ್ದಾರೆ.
    ಬಹುಬೇಗನೆ ಅವರು ಆಕ್ರಮಣ ಮಾಡಲಿದ್ದಾರೆ.
ನಿನ್ನ ಜನರಿಗೆ ವಿರೋಧವಾಗಿ ರಹಸ್ಯ ಯೋಜನೆಗಳನ್ನು ಮಾಡುತ್ತಿದ್ದಾರೆ.
    ನಿನ್ನ ಪ್ರಿಯರ ವಿರೋಧವಾಗಿ ಅವರು ಸಂಚು ಮಾಡುತ್ತಿದ್ದಾರೆ.
ಅವರು ಹೀಗೆಂದುಕೊಳ್ಳುತ್ತಿದ್ದಾರೆ: “ಬನ್ನಿರಿ, ಅವರನ್ನು ಸಂಪೂರ್ಣವಾಗಿ ನಾಶಮಾಡೋಣ.
    ಆಗ ‘ಇಸ್ರೇಲ್’ ಎಂಬ ಹೆಸರೇ ಅಳಿದುಹೋಗುವುದು.”

ಕೀರ್ತನೆಗಳು 83:13-18

13 ಗಾಳಿಗೆ ತೂರಿಹೋಗುವ ಮೊಟಕುಬೇರಿನ ಕಳೆಯಂತೆ ಅವರನ್ನು ಮಾಡು.
    ಗಾಳಿಯು ಹೊಟ್ಟನ್ನು ಚದರಿಸುವಂತೆ ಅವರನ್ನು ಚದರಿಸು.
14 ಕಾಡನ್ನು ನಾಶಮಾಡುವ ಬೆಂಕಿಯಂತೆಯೂ
    ಬೆಟ್ಟಗಳನ್ನು ಸುಟ್ಟುಹಾಕುವ ಅಗ್ನಿಜ್ವಾಲೆಯಂತೆಯೂ ಅವರನ್ನು ನಾಶಮಾಡು.
15 ಬಿರುಗಾಳಿಯಿಂದ ಕೊಚ್ಚಿಕೊಂಡು ಹೋಗುವ ಧೂಳಿನಂತೆ ಅವರನ್ನು ಬೆನ್ನಟ್ಟಿಹೋಗು.
    ಸುಂಟರ ಗಾಳಿಯಂತೆ ಅವರನ್ನು ನಡುಗಿಸು.
16 ಯೆಹೋವನೇ, ತಾವು ನಿಜವಾಗಿಯೂ ಬಲಹೀನರೆಂಬುದನ್ನು ಅವರು ಕಲಿತುಕೊಳ್ಳುವಂತೆ ಮಾಡು;
    ಆಗ ಅವರು ನಿನ್ನ ಹೆಸರನ್ನು ಆರಾಧಿಸಬೇಕೆನ್ನುವರು.
17 ಅವರನ್ನು ಭಯವೂ ನಾಚಿಕೆಯೂ ಕವಿದುಕೊಂಡೇ ಇರಲಿ.
    ಅವರು ಅವಮಾನಗೊಂಡು ನಾಶವಾಗಲಿ.
18 ಆಗ ಅವರು ನೀನೊಬ್ಬನೇ ದೇವರೆಂದೂ
    ನಿನ್ನ ಹೆಸರು ಯೆಹೋವನೆಂದೂ ತಿಳಿದುಕೊಳ್ಳುವರು.
ಭೂಲೋಕಕ್ಕೆಲ್ಲಾ ಮಹೋನ್ನತನಾದ ದೇವರೊಬ್ಬನೇ
    ದೇವರೆಂದು ಅವರು ಅರಿತುಕೊಳ್ಳುವರು.

ವಿಮೋಚನಕಾಂಡ 7:14-25

ನೀರು ರಕ್ತವಾದದ್ದು

14 ಆಗ ಯೆಹೋವನು ಮೋಶೆಗೆ, “ಫರೋಹನ ಹೃದಯ ಮೊಂಡಾಗಿದೆ; ಅವನು ಜನರನ್ನು ಹೋಗಗೊಡಿಸುವುದಿಲ್ಲ. 15 ಮುಂಜಾನೆ ಅವನು ನದಿಗೆ ಹೋಗುವನು. ಸರ್ಪವಾಗಿ ಮಾರ್ಪಾಟಾದ ಊರುಗೋಲನ್ನು ತೆಗೆದುಕೊಂಡು ನದಿಯ ತೀರಕ್ಕೆ ಹೋಗಿ ಅವನನ್ನು ಭೇಟಿಯಾಗಿ ಅವನಿಗೆ, 16 ‘ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ. ಆತನ ಜನರು ಅರಣ್ಯದಲ್ಲಿ ಆತನನ್ನು ಆರಾಧಿಸುವುದಕ್ಕೆ ನೀನು ಅವರಿಗೆ ಅಪ್ಪಣೆಕೊಡಬೇಕೆಂದು ಆತನು ನಿನಗೆ ಆಜ್ಞಾಪಿಸುತ್ತಾನೆ. ಇದುವರೆಗೆ ನೀನು ಯೆಹೋವನ ಮಾತಿಗೆ ಕಿವಿಗೊಡಲಿಲ್ಲ. 17 ಆದ್ದರಿಂದ ಆತನೇ ಯೆಹೋವನೆಂದು ನಿನಗೆ ತಿಳಿಯಲೆಂದು ನನ್ನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡೆಯುವೆನು; ಆ ನದಿಯ ನೀರು ರಕ್ತವಾಗುವುದು. 18 ನದಿಯಲ್ಲಿರುವ ಮೀನುಗಳು ಸಾಯುವವು; ನದಿಯು ಹೊಲಸಾಗುವುದು; ಈಜಿಪ್ಟಿನವರು ನದಿಯ ನೀರನ್ನು ಕುಡಿಯಲಾಗುವುದಿಲ್ಲ’ ಎಂದು ಹೇಳಬೇಕು” ಅಂದನು.

19 ಯೆಹೋವನು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೈಯಲ್ಲಿರುವ ಊರುಗೋಲನ್ನು ನದಿಗಳ, ಕಾಲುವೆಗಳ, ಕೆರೆಗಳ ಮತ್ತು ನೀರಿರುವ ಪ್ರತಿಯೊಂದು ಸ್ಥಳದ ಮೇಲೆ ಚಾಚು’ ಎಂದು ಹೇಳು. ಅವನು ಚಾಚಿದಾಗ ನೀರೆಲ್ಲಾ ರಕ್ತವಾಗುವುದು. ಮರದ ಮತ್ತು ಕಲ್ಲಿನ ಪಾತ್ರೆಗಳಲ್ಲಿರುವ ನೀರು ಸಹ ರಕ್ತವಾಗುವುದು” ಎಂದು ಹೇಳಿದನು.

20 ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಆರೋನರು ಮಾಡಿದರು. ಆರೋನನು ಫರೋಹನ ಮತ್ತು ಅವನ ಅಧಿಕಾರಿಗಳ ಮುಂದೆ ಕೋಲನ್ನು ಎತ್ತಿ ನೈಲ್ ನದಿಯ ನೀರನ್ನು ಹೊಡೆದನು. ಆಗ ನದಿಯ ನೀರೆಲ್ಲಾ ರಕ್ತವಾಯಿತು. 21 ನದಿಯಲ್ಲಿದ್ದ ಮೀನುಗಳು ಸತ್ತವು; ನದಿಯು ಹೊಲಸಾಗತೊಡಗಿತು. ಆದ್ದರಿಂದ ಈಜಿಪ್ಟಿನವರು ನದಿಯ ನೀರನ್ನು ಕುಡಿಯಲಾಗಲಿಲ್ಲ. ಈಜಿಪ್ಟಿನ ನೀರೆಲ್ಲಾ ರಕ್ತವೇ ಆಗಿತ್ತು.

22 ಮಾಂತ್ರಿಕರು ತಮ್ಮ ಮಂತ್ರವಿದ್ಯೆಯಿಂದ ಅದೇ ರೀತಿ ಮಾಡಿದರು. ಆದ್ದರಿಂದ ಫರೋಹನು ಮೋಶೆ ಆರೋನರ ಮಾತನ್ನು ಕೇಳಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು. 23 ಫರೋಹನು ತನ್ನ ಮನೆಗೆ ಹೊರಟುಹೋದನು. ಮೋಶೆ ಆರೋನರು ಮಾಡಿದ ಮಹತ್ಕಾರ್ಯಗಳನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ.

24 ಈಜಿಪ್ಟಿನವರು ನದಿಯ ನೀರನ್ನು ಕುಡಿಯಲಾಗಲಿಲ್ಲ. ಆದ್ದರಿಂದ ಅವರು ನದಿಯ ಸುತ್ತಲೂ ಕುಡಿಯುವ ನೀರಿಗಾಗಿ ಬಾವಿಗಳನ್ನು ಅಗೆದರು.

ಕಪ್ಪೆಗಳಿಂದ ಬಾಧೆ

25 ಯೆಹೋವನು ನೈಲ್ ನದಿಯ ನೀರನ್ನು ರಕ್ತವನ್ನಾಗಿ ಮಾರ್ಪಡಿಸಿದ ಬಳಿಕ ಏಳು ದಿನಗಳು ಕಳೆದವು.

ಮತ್ತಾಯ 12:22-32

ಯೇಸುವಿನ ಅಧಿಕಾರ ದೇವರದೇ

(ಮಾರ್ಕ 3:20-30; ಲೂಕ 11:14-23; 12:10)

22 ಆಗ ಕೆಲವು ಜನರು ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವನಲ್ಲಿ ದೆವ್ವವಿದ್ದುದರಿಂದ ಅವನು ಕುರುಡನಾಗಿದ್ದನು ಮತ್ತು ಮೂಕನಾಗಿದ್ದನು. ಯೇಸು ಆ ಮನುಷ್ಯನನ್ನು ಗುಣಪಡಿಸಿದ್ದರಿಂದ ಮಾತನಾಡುವುದಕ್ಕೂ ನೋಡುವುದಕ್ಕೂ ಸಾಧ್ಯವಾಯಿತು. 23 ಜನರೆಲ್ಲರೂ ಬೆರಗಾದರು. “ದೇವರು ಕಳುಹಿಸಿಕೊಡುವುದಾಗಿ ನಮಗೆ ವಾಗ್ದಾನಮಾಡಿದ್ದ ದಾವೀದನ ಕುಮಾರನು ಈತನೇ (ಯೇಸು) ಆಗಿರಬಹುದು” ಎಂದು ಮಾತಾಡಿಕೊಂಡರು.

24 ಜನರು ಹೀಗೆ ಮಾತಾಡುತ್ತಿದ್ದುದನ್ನು ಕೇಳಿಸಿಕೊಂಡ ಫರಿಸಾಯರು, “ಯೇಸು ಬೆಲ್ಜೆಬೂಲನ ಶಕ್ತಿಯ ಮೂಲಕ ಜನರನ್ನು ದೆವ್ವಗಳಿಂದ ಬಿಡಿಸುತ್ತಾನೆ. ಬೆಲ್ಜೆಬೂಲನು ದೆವ್ವಗಳ ಅಧಿಪತಿ” ಎಂದರು.

25 ಫರಿಸಾಯರು ಆಲೋಚಿಸುತ್ತಿದ್ದ ಸಂಗತಿಗಳು ಯೇಸುವಿಗೆ ತಿಳಿದಿದ್ದವು. ಆದ್ದರಿಂದ ಯೇಸು ಅವರಿಗೆ, “ತನಗೆ ವಿರೋಧವಾಗಿ ತಾನೇ ಹೋರಾಡುವ ರಾಜ್ಯವು ನಾಶವಾಗುವುದು. ಅಂತಃಕಲಹದಿಂದ ಒಡೆದುಹೋಗಿರುವ ಪ್ರತಿಯೊಂದು ರಾಜ್ಯವು ಸ್ಥಿರವಾಗಿರುವುದಿಲ್ಲ. ಭೇದಭಾವ ಹೊಂದಿರುವ ಪ್ರತಿಯೊಂದು ಕುಟುಂಬವು ಅಭಿವೃದ್ಧಿಯಾಗುವುದಿಲ್ಲ. 26 ಹೀಗಿರಲು ಸೈತಾನನು ತನ್ನ ಸ್ವಂತ ದೆವ್ವಗಳನ್ನೇ ಹೊರಗೆ ಓಡಿಸಿದರೆ ಅವನು ತನ್ನಲ್ಲಿಯೇ ಒಡಕನ್ನು ಮಾಡಿದಂತಾಯಿತು. ಆಗ ಅವನು ಮತ್ತು ಅವನ ರಾಜ್ಯವು ಸ್ಥಿರವಾಗಿರಲು ಹೇಗೆ ಸಾಧ್ಯ? 27 ನಾನು ಸೈತಾನನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತೇನೆ ಎಂದು ನೀವು ಹೇಳುತ್ತೀರಿ. ಅದು ನಿಜವಾದರೆ, ನಿಮ್ಮ ಜನರು ಯಾವ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾರೆ? ಆದ್ದರಿಂದ ನಿಮ್ಮ ಸ್ವಂತ ಜನರೇ ನಿಮ್ಮನ್ನು ತಪ್ಪಿತಸ್ಥರೆಂದು ನಿರೂಪಿಸುತ್ತಾರೆ. 28 ಆದರೆ ನಾನು ದೇವರಾತ್ಮನ ಶಕ್ತಿಯ ಮೂಲಕ ದೆವ್ವಗಳನ್ನು ಬಿಡಿಸುತ್ತೇನೆ. ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆ ಎಂಬುದನ್ನು ಇದು ತೋರ್ಪಡಿಸುತ್ತದೆ. 29 ಒಬ್ಬ ವ್ಯಕ್ತಿಯು ಬಲಿಷ್ಠನೊಬ್ಬನ ಮನೆಗೆ ನುಗ್ಗಿ ಅವನ ಸ್ವತ್ತನ್ನು ಕದಿಯಬೇಕಿದ್ದರೆ, ಮೊದಲು ಅವನು ಆ ಬಲಿಷ್ಠನನ್ನು ಕಟ್ಟಿಹಾಕಬೇಕು. ಆಗ ಆ ಬಲಿಷ್ಠನ ಮನೆಯ ಸ್ವತ್ತನ್ನು ಕದಿಯಲು ಅವನಿಗೆ ಸಾಧ್ಯವಾಗುವುದು. 30 ನನ್ನೊಂದಿಗೆ ಇಲ್ಲದವನು ನನಗೆ ವಿರೋಧಿಯಾಗಿದ್ದಾನೆ. ನನ್ನೊಂದಿಗೆ ಶೇಖರಿಸದವನು ಚದರಿಸುವವನಾಗಿದ್ದಾನೆ.

31 “ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಜನರು ಮಾಡುವ ಪ್ರತಿಯೊಂದು ಪಾಪಕ್ಕೂ ಹೇಳುವ ಪ್ರತಿಯೊಂದು ದೂಷಣೆ ಮಾತಿಗೂ ಕ್ಷಮಾಪಣೆ ಉಂಟು. ಆದರೆ ಪವಿತ್ರಾತ್ಮ ದೂಷಣೆಗೆ ಕ್ಷಮಾಪಣೆ ಇಲ್ಲವೇ ಇಲ್ಲ. 32 ಮನುಷ್ಯಕುಮಾರನಿಗೆ ವಿರೋಧವಾಗಿ ಮಾತನಾಡಿದರೂ ಅದಕ್ಕೆ ಕ್ಷಮಾಪಣೆ ಉಂಟು. ಆದರೆ ಪವಿತ್ರಾತ್ಮನಿಗೆ ವಿರೋಧವಾಗಿ ಮಾತನಾಡಿದರೆ ಅದಕ್ಕೆ ಕ್ಷಮಾಪಣೆಯು ಇಹದಲ್ಲಾಗಲಿ ಪರದಲ್ಲಾಗಲಿ ಇಲ್ಲವೇ ಇಲ್ಲ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International