Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ವಿಮೋಚನಕಾಂಡ 20:1-4

ದಶಾಜ್ಞೆಗಳು

20 ಬಳಿಕ ಯೆಹೋವನು ಈ ದಶಾಜ್ಞೆಗಳನ್ನು ಅವರಿಗೆ ಕೊಟ್ಟನು:

“ಯೆಹೋವನೆಂಬ ನಾನೇ ನಿಮ್ಮ ದೇವರು. ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಆ ದೇಶದಿಂದ ಹೊರಗೆ ನಡಿಸಿದವನು ನಾನೇ.

“ನನ್ನನ್ನಲ್ಲದೆ ಬೇರೆ ಯಾವ ದೇವರುಗಳನ್ನೂ ನೀವು ಆರಾಧಿಸಬಾರದು.

“ನೀವು ಯಾವ ವಿಗ್ರಹಗಳನ್ನೂ ಮಾಡಬಾರದು. ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ನೀರಿನಲ್ಲಾಗಲಿ ಇರುವ ಯಾವುದೇ ವಸ್ತುವಿನ ರೂಪವನ್ನು ನೀವು ಮಾಡಿಕೊಳ್ಳಬಾರದು. ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜಿಸಲೂ ಬಾರದು.

ವಿಮೋಚನಕಾಂಡ 20:7-9

“ನಿಮ್ಮ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.

“ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಜ್ಞಾಪಕದಲ್ಲಿಟ್ಟುಕೊಂಡು ಅದನ್ನು ಆಚರಿಸಿರಿ. ವಾರದ ಆರು ದಿನಗಳಲ್ಲಿ ಕೆಲಸಮಾಡಿರಿ.

ವಿಮೋಚನಕಾಂಡ 20:12-20

12 “ನೀವು ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು; ನೀವು ಸನ್ಮಾನಿಸಿದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.

13 “ನೀವು ಯಾರನ್ನೂ ಕೊಲೆ ಮಾಡಬಾರದು.

14 “ನೀವು ವ್ಯಭಿಚಾರ ಮಾಡಬಾರದು.

15 “ನೀವು ಕದಿಯಬಾರದು.

16 “ನೀವು ಬೇರೆಯವರ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.[a]

17 “ನೀವು ನೆರೆಯವನ ಮನೆಯನ್ನು ಆಶಿಸಬಾರದು. ನೀವು ಮತ್ತೊಬ್ಬನ ಹೆಂಡತಿಯನ್ನಾಗಲಿ ಸೇವಕರನ್ನಾಗಲಿ ದಾಸಿಯರನ್ನಾಗಲಿ ಪಶುಗಳನ್ನಾಗಲಿ ಆಶಿಸಬಾರದು.”

ಜನರು ದೇವರಿಗೆ ಭಯಪಟ್ಟಿದು

18 ಆಗ ಅಲ್ಲಿದ್ದ ಜನರು ಗುಡುಗಿನ ಧ್ವನಿಯನ್ನು ಕೇಳಿದರು; ಬೆಟ್ಟದ ಮೇಲೆ ಮಿಂಚುಗಳನ್ನು ನೋಡಿದರು; ಹೊಗೆಯು ಬೆಟ್ಟದಿಂದ ಏರುವುದನ್ನು ಕಂಡರು. ಅವರೆಲ್ಲರೂ ಭಯದಿಂದ ನಡುಗಿದರು; ಬೆಟ್ಟದಿಂದ ದೂರದಲ್ಲಿದ್ದುಕೊಂಡು ಅವುಗಳನ್ನೆಲ್ಲಾ ಗಮನಿಸಿದರು. 19 ಆಗ ಜನರು ಮೋಶೆಗೆ, “ನೀನು ನಮ್ಮೊಡನೆ ಮಾತಾಡು; ನಾವು ನಿನಗೆ ಕಿವಿಗೊಡುವೆವು. ಆದರೆ ಯೆಹೋವನು ನಮ್ಮೊಡನೆ ಮಾತಾಡದಿರಲಿ. ಇಲ್ಲವಾದರೆ ನಾವು ಸಾಯುವೆವು” ಅಂದರು.

20 ಆಗ ಮೋಶೆಯು ಜನರಿಗೆ, “ಭಯಪಡಬೇಡಿರಿ, ಯೆಹೋವನು ನಿಮ್ಮನ್ನು ಪರೀಕ್ಷಿಸಲು ಬಂದಿದ್ದಾನೆ. ನೀವು ಆತನಲ್ಲಿ ಭಕ್ತಿಯುಳ್ಳವರಾಗಿರಬೇಕೆಂದು ಆತನು ಬಯಸುತ್ತಾನೆ. ಆಗ ನೀವು ಪಾಪ ಮಾಡುವುದಿಲ್ಲ” ಎಂದು ಹೇಳಿದನು.

ಕೀರ್ತನೆಗಳು 19

ರಚನೆಗಾರ: ದಾವೀದ.

19 ಆಕಾಶಮಂಡಲವು ದೇವರ ಮಹಿಮೆಯನ್ನು ಪ್ರಕಟಿಸುವುದು.
    ಗಗನವು ಆತನ ಕೈಕೆಲಸವನ್ನು ತಿಳಿಸುವುದು.
ಪ್ರತಿಯೊಂದು ದಿನವೂ ಅದರ ಕುರಿತು ಹೊಸ ವಿಷಯವನ್ನು ತಿಳಿಸುವುದು.
    ಪ್ರತಿಯೊಂದು ರಾತ್ರಿಯೂ ಅದರ ಕುರಿತು ಹೊಸ ಸಂಗತಿಯನ್ನು ಪ್ರಕಟಿಸುವುದು.
ಅವುಗಳ ಮಾತಾಗಲಿ
    ನುಡಿಗಳಾಗಲಿ ಸ್ವರವಾಗಲಿ ನಮಗೆ ಕೇಳಿಸದು.
ಆದರೂ ಅವುಗಳ ಸಂದೇಶವು ಭೂಲೋಕದಲ್ಲೆಲ್ಲಾ ಹರಡುತ್ತದೆ;
    ಭೂಮಿಯ ಕಟ್ಟಕಡೆಗಳವರೆಗೂ ವ್ಯಾಪಿಸುತ್ತದೆ.

ಆಕಾಶವು ಸೂರ್ಯನಿಗೆ ಮನೆಯಂತಿದೆ.
    ಮದುವೆಯ ಮಂಟಪದಿಂದ ಆನಂದದಿಂದ ಬರುವ ಮದುಮಗನಂತೆ ಸೂರ್ಯನು ಮುಂಜಾನೆ ಉದಯಿಸುವನು.
ಕ್ರೀಡಾಪಟುವಿನಂತೆ
    ಸೂರ್ಯನು ಆಕಾಶದಲ್ಲಿ ಓಡಲಾರಂಭಿಸುವನು.
ಸೂರ್ಯನು ಆಕಾಶದ ಒಂದು ಕಡೆಯಿಂದ ಉದಯಿಸಿ
    ಮತ್ತೊಂದು ಕೊನೆಗೆ ಓಡುತ್ತಾಹೋಗುವನು.
    ಅವನ ತಾಪಕ್ಕೆ ಯಾವುದೂ ಮರೆಯಾಗಿರಲಾರದು.

ಯೆಹೋವನ ಉಪದೇಶಗಳು ನಿಷ್ಕಳಂಕವಾಗಿವೆ.
    ಅವು ದೇವಜನರಿಗೆ ಬಲವನ್ನು ಕೊಡುತ್ತವೆ.
ಯೆಹೋವನ ಕಟ್ಟಳೆಯು ಭರವಸೆಗೆ ಯೋಗ್ಯವಾಗಿದೆ.
    ಅದು ಮೂಢರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
ಯೆಹೋವನ ನಿಯಮಗಳು ನೀತಿಯ ಕಟ್ಟಳೆಗಳಾಗಿವೆ.
    ಅವು ಮನುಸ್ಸನ್ನು ಸಂತೋಷಗೂಳಿಸುತ್ತವೆ.
ಯೆಹೋವನ ಆಜ್ಞೆಗಳು ಒಳ್ಳೆಯ ಆಜ್ಞೆಗಳಾಗಿವೆ.
    ಅವು ಕಣ್ಣುಗಳಿಗೆ ಬೆಳಕನ್ನು ನೀಡುತ್ತವೆ.

ಯೆಹೋವನಲ್ಲಿಡುವ ಭಯಭಕ್ತಿಯು ಪರಿಶುದ್ಧವಾಗಿದೆ;
    ಅದು ಶಾಶ್ವತವಾದದ್ದು.
ಯೆಹೋವನ ವಿಧಿಗಳು ಯಥಾರ್ಥವಾಗಿವೆ;
    ಅವು ಯಾವಾಗಲೂ ನ್ಯಾಯಾನುಸಾರವಾಗಿವೆ.
10 ಆತನ ಉಪದೇಶಗಳು ಬಂಗಾರಕ್ಕಿಂತಲೂ ಅಮೂಲ್ಯವಾಗಿವೆ;
    ಅಪ್ಪಟವಾದ ಜೇನುತುಪ್ಪಕ್ಕಿಂತಲೂ ಮಧುರವಾಗಿವೆ.
11 ಆತನ ಉಪದೇಶಗಳು ಆತನ ಸೇವಕನನ್ನು ಎಚ್ಚರಿಸುತ್ತವೆ;
    ಅವುಗಳನ್ನು ಕೈಕೊಂಡು ನಡೆದರೆ ಒಳ್ಳೆಯದಾಗುವುದು.

12 ಯೆಹೋವನೇ, ಯಾವನೂ ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವುದಿಲ್ಲ.
    ಆದ್ದರಿಂದ ಗುಪ್ತ ಪಾಪಗಳನ್ನು ಮಾಡಲು ನನ್ನನ್ನು ಬಿಟ್ಟುಬಿಡಬೇಡ.
13 ನನ್ನ ಇಷ್ಟಾನುಸಾರ ಪಾಪಮಾಡಲು ನನ್ನನ್ನು ಬಿಟ್ಟುಬಿಡಬೇಡ.
    ಆ ಪಾಪಗಳು ನನ್ನನ್ನು ಆಳದಿರಲಿ.
ನೀನು ಸಹಾಯಮಾಡಿದರೆ
    ನಾನು ಪರಿಶುದ್ಧನಾಗಿಯೂ ಪಾಪದಿಂದ ವಿಮುಕ್ತನಾಗಿಯೂ ಇರಲು ಸಾಧ್ಯ.
14 ನನ್ನ ಮಾತುಗಳೂ ನನ್ನ ಆಲೋಚನೆಗಳೂ ನಿನಗೆ ಮೆಚ್ಚಿಕೆಯಾಗಿರಲಿ.
    ಯೆಹೋವನೇ, ನೀನೇ ನನ್ನ ಬಂಡೆಯಾಗಿರುವೆ.[a] ನನ್ನನ್ನು ರಕ್ಷಿಸುವಾತನು ನೀನೇ.

ಫಿಲಿಪ್ಪಿಯವರಿಗೆ 3:4-14

ನಾನು ನನ್ನ ಮೇಲೆ ಭರವಸೆ ಇಡಬಲ್ಲವನಾಗಿದ್ದರೂ ಇಡುವುದಿಲ್ಲ. ತನ್ನ ಮೇಲೆ ಭರವಸೆ ಇಡಲು ತನಗೆ ಆಧಾರವಿರುವುದಾಗಿ ಯಾವನಾದರೂ ಯೋಚಿಸಿದರೆ, ನನ್ನ ಮೇಲೆ ಭರವಸೆ ಇಡಲು ನನಗೆ ಅದಕ್ಕಿಂತಲೂ ಹೆಚ್ಚಿನ ಆಧಾರವಿದೆ. ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು. ನಾನು ಇಸ್ರೇಲ್ ವಂಶದವನು ಮತ್ತು ಬೆನ್ಯಾಮೀನನ ಕುಲದವನು. ನಾನು ಇಬ್ರಿಯನು ಮತ್ತು ನನ್ನ ತಂದೆತಾಯಿಗಳು ಸಹ ಇಬ್ರಿಯರು. ನಾನು ಮೋಶೆಯ ಧರ್ಮಶಾಸ್ತ್ರವನ್ನು ಮುಖ್ಯವಾದದ್ದೆಂದು ಪರಿಗಣಿಸಿ ಫರಿಸಾಯನಾದೆನು; ಯೆಹೂದ್ಯ ಧರ್ಮದಲ್ಲಿ ಬಹಳ ಆಸಕ್ತಿಯುಳ್ಳವನಾಗಿದ್ದು ಕ್ರೈಸ್ತಸಭೆಯನ್ನು (ವಿಶ್ವಾಸಿಗಳನ್ನು) ಹಿಂಸಿಸಿದೆನು. ಮೋಶೆಯ ಧರ್ಮಶಾಸ್ತ್ರಕ್ಕೆ ಯಾವಾಗಲೂ ವಿಧೇಯನಾಗಿದ್ದುದರಿಂದ ಯಾರೂ ನನ್ನ ವಿಷಯದಲ್ಲಿ ತಪ್ಪನ್ನು ಕಂಡುಹಿಡಿಯಲಾಗಲಿಲ್ಲ.

ಒಂದು ಕಾಲದಲ್ಲಿ ಇವುಗಳೆಲ್ಲ ನನಗೆ ಮುಖ್ಯವಾಗಿದ್ದವು. ಆದರೆ ಈಗ ಅವುಗಳೆಲ್ಲ ಕ್ರಿಸ್ತನ ದೆಸೆಯಿಂದ ನಿಷ್ಪ್ರಯೋಜಕವಾಗಿವೆ. ಅಷ್ಟೇ ಅಲ್ಲ, ನನ್ನ ಪ್ರಭುವಾದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ಎಲ್ಲಾ ಸಂಗತಿಗಳಿಗಿಂತಲೂ ಅತಿಶ್ರೇಷ್ಠವಾದದ್ದೆಂದು ನನಗೆ ಮನದಟ್ಟಾಗಿದೆ. ನಾನು ಯಾವುದನ್ನು ಮುಖ್ಯವಾದವುಗಳೆಂದು ಪರಿಗಣಿಸಿದ್ದೆನೋ ಅವುಗಳನ್ನೆಲ್ಲ ಕ್ರಿಸ್ತನ ನಿಮಿತ್ತ ಕಳೆದುಕೊಂಡೆನು. ಅವುಗಳೆಲ್ಲ ನಿಷ್ಪ್ರಯೋಜಕವಾದವುಗಳೆಂದು ನನಗೆ ತಿಳಿದಿದೆ. ನಾನು ಕ್ರಿಸ್ತನನ್ನು ಹೊಂದಿಕೊಳ್ಳಲು ಮತ್ತು ಕ್ರಿಸ್ತನಲ್ಲಿರಲು ಇದು ನನಗೆ ಅವಕಾಶ ಮಾಡಿಕೊಡುತ್ತದೆ. ನಾನು ಕ್ರಿಸ್ತನ ಮೂಲಕ ನೀತಿವಂತನಾಗಿದ್ದೇನೆ. ಈ ನೀತಿಯು, ಧರ್ಮಶಾಸ್ತ್ರವನ್ನು ಅನುಸರಿಸಿದ ಮಾತ್ರಕ್ಕೆ ದೊರೆಯುವುದಿಲ್ಲ. ಇದು ನಂಬಿಕೆಯ ಮೂಲಕ ದೇವರಿಂದ ಬರುತ್ತದೆ. ಕ್ರಿಸ್ತನಲ್ಲಿ ನನಗಿರುವ ನಂಬಿಕೆಯ ಮೂಲಕ ದೇವರು ನನ್ನನ್ನು ನೀತಿವಂತನನ್ನಾಗಿ ಮಾಡಿದನು. 10 ಕ್ರಿಸ್ತನನ್ನೂ ಪುನರುತ್ಥಾನದ ಶಕ್ತಿಯನ್ನೂ ತಿಳಿದುಕೊಂಡು ಆತನ ಸಂಕಟದಲ್ಲಿ ಪಾಲುಗಾರನಾಗಿ ಆತನ ಮರಣದಲ್ಲಿ ಆತನಂತಾಗಬೇಕೆಂಬುದೇ ನನ್ನ ಅಪೇಕ್ಷೆ. 11 ಹೀಗಾದರೆ, ನಾನು ಸತ್ತವರೊಳಗಿಂದ ಎಬ್ಬಿಸಲ್ಪಡುತ್ತೇನೆ ಎಂಬ ನಿರೀಕ್ಷೆ ನನಗಿದೆ.

ಗುರಿಮುಟ್ಟಲು ಪ್ರಯತ್ನ

12 ಈಗಾಗಲೇ ನಾನು ಇದೆಲ್ಲವನ್ನು ಸಾಧಿಸಿ ಪರಿಪೂರ್ಣತೆಯನ್ನು ಗಳಿಸಿದ್ದೇನೆ ಎಂದು ಹೇಳುತ್ತಿಲ್ಲ. ನಾನು ಆ ಗುರಿಯನ್ನು ಇನ್ನೂ ಮುಟ್ಟಿಲ್ಲ. ಆದರೆ ಆ ಗುರಿಯನ್ನು ಮುಟ್ಟಿ ಅದನ್ನು ನನ್ನದಾಗಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಇದು ಕ್ರಿಸ್ತನ ಅಪೇಕ್ಷೆ. ಆದಕಾರಣವೇ, ಕ್ರಿಸ್ತನು ನನ್ನನ್ನು ತನ್ನವನನ್ನಾಗಿ ಮಾಡಿಕೊಂಡನು. 13 ಸಹೋದರ ಸಹೋದರಿಯರೇ, ನಾನಿನ್ನೂ ಆ ಗುರಿಯನ್ನು ಮುಟ್ಟಿಲ್ಲವೆಂಬುದು ನನಗೆ ಗೊತ್ತಿದೆ. ಆದರೆ ನಾನು ಯಾವಾಗಲೂ ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ನನ್ನ ಮುಂದಿರುವ ಗುರಿಯನ್ನು ಮುಟ್ಟಲು ನನ್ನಿಂದಾದಷ್ಟರ ಮಟ್ಟಿಗೆ ಓಡುತ್ತಿದ್ದೇನೆ. 14 ದೇವರು ನಮ್ಮನ್ನು ಕ್ರಿಸ್ತನ ಮೂಲಕ ಮೇಲೋಕದ ಜೀವಿತಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.

ಮತ್ತಾಯ 21:33-46

ದೇವರ ಸ್ವಂತ ಮಗನ ಆಗಮನ

(ಮಾರ್ಕ 12:1-12; ಲೂಕ 20:9-19)

33 “ಈ ಸಾಮ್ಯವನ್ನು ಕೇಳಿರಿ: ಒಬ್ಬ ಮನುಷ್ಯನಿಗೆ ಒಂದು ಸ್ವಂತ ತೋಟವಿತ್ತು. ಅವನು ತೋಟದಲ್ಲಿ ದ್ರಾಕ್ಷಿಯನ್ನು ಬೆಳೆಸಿದನು; ತೋಟದ ಸುತ್ತಲೂ ಗೋಡೆ ಕಟ್ಟಿ ದ್ರಾಕ್ಷಾರಸ ತಯಾರಿಸಲು ಆಲೆಯನ್ನು ಹೂಡಿಸಿದನು. ಕಾವಲಿಗಾಗಿ ಅಟ್ಟಣೆಯನ್ನೂ ಕಟ್ಟಿಸಿದನು. ಅವನು ಆ ತೋಟವನ್ನು ಕೆಲವು ರೈತರಿಗೆ ಗುತ್ತಿಗೆಗೆ ಕೊಟ್ಟು ವಿದೇಶಕ್ಕೆ ಹೊರಟುಹೋದನು. 34 ದ್ರಾಕ್ಷಿಹಣ್ಣನ್ನು ಕೀಳುವ ಸಮಯ ಬಂದಾಗ ತನ್ನ ಪಾಲನ್ನು ತೆಗೆದುಕೊಂಡು ಬರಲು ಸೇವಕರನ್ನು ರೈತರ ಬಳಿಗೆ ಕಳುಹಿಸಿದನು.

35 “ಆದರೆ ರೈತರು ಆ ಸೇವಕರನ್ನು ಹಿಡಿದುಕೊಂಡು ಒಬ್ಬನನ್ನು ಹೊಡೆದರು; ಬೇರೊಬ್ಬನನ್ನು ಕತ್ತರಿಸಿಹಾಕಿದರು; ಮೂರನೇ ಸೇವಕನನ್ನು ಕಲ್ಲೆಸೆದು ಕೊಂದರು. 36 ಆದ್ದರಿಂದ ಅವನು ಮೊದಲನೆ ಸಲ ಕಳುಹಿಸಿದ ಸೇವಕರಿಗಿಂತಲೂ ಹೆಚ್ಚು ಸೇವಕರನ್ನು ರೈತರ ಬಳಿಗೆ ಕಳುಹಿಸಿದನು. ಆದರೆ ರೈತರು ಮೊದಲನೆ ಸಲ ಮಾಡಿದಂತೆಯೇ ಈ ಸೇವಕರಿಗೂ ಮಾಡಿದರು. 37 ಆಗ ಅವನು, ‘ರೈತರು ನನ್ನ ಮಗನನ್ನು ಗೌರವಿಸುವರು’ ಎಂದುಕೊಂಡು ತನ್ನ ಮಗನನ್ನೇ ಕಳುಹಿಸಿದನು.

38 “ಆದರೆ ರೈತರು ಮಗನನ್ನು ನೋಡಿದಾಗ, ‘ಇವನು ತೋಟದ ಒಡೆಯನ ಮಗನು. ಈ ತೋಟ ಇವನದಾಗುವುದು. ನಾವು ಇವನನ್ನು ಕೊಂದರೆ, ಈ ತೋಟ ನಮ್ಮದಾಗುವುದು’ ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು. 39 ಆದ್ದರಿಂದ ರೈತರು ಮಗನನ್ನು ಹಿಡಿದು ತೋಟದಿಂದ ಹೊರಕ್ಕೆಸೆದು ಅವನನ್ನು ಕೊಂದುಹಾಕಿದರು.

40 “ಹೀಗಿರಲು ತೋಟದ ಯಜಮಾನನು ತಾನೇ ಬಂದಾಗ ಈ ರೈತರಿಗೆ ಏನು ಮಾಡುತ್ತಾನೆ?”

41 ಯೆಹೂದ್ಯ ಯಾಜಕರು ಮತ್ತು ನಾಯಕರು, “ಅವನು ಖಂಡಿತವಾಗಿ ಆ ದುಷ್ಟಜನರನ್ನು ಕೊಂದು ಸುಗ್ಗಿಕಾಲದಲ್ಲಿ ತನ್ನ ಪಾಲನ್ನು ತನಗೆ ಕೊಡುವ ರೈತರಿಗೆ ಅದನ್ನು ಗುತ್ತಿಗೆಗೆ ಕೊಡುತ್ತಾನೆ” ಎಂದು ಹೇಳಿದರು.

42 ಯೇಸು ಅವರಿಗೆ, “ಖಂಡಿತವಾಗಿಯೂ ನೀವು ಇದನ್ನು ಪವಿತ್ರ ಗ್ರಂಥದಲ್ಲಿ ಓದಿದ್ದೀರಿ:

‘ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು.
ಪ್ರಭುವು ಇದನ್ನು ಮಾಡಿದನು. ಇದು ನಮಗೆ ಆಶ್ಚರ್ಯಕರವಾಗಿದೆ.’(A)

43 “ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ದೇವರ ರಾಜ್ಯವು ನಿಮ್ಮಿಂದ ತೆಗೆದುಹಾಕಲ್ಪಟ್ಟು ಆ ರಾಜ್ಯದಲ್ಲಿ ದೇವರ ಇಷ್ಟಕ್ಕನುಸಾರವಾದ ಕಾರ್ಯಗಳನ್ನು ಮಾಡುವವರಿಗೆ ಕೊಡಲ್ಪಡುವುದು. 44 ಈ ಕಲ್ಲಿನ ಮೇಲೆ ಬೀಳುವ ಮನುಷ್ಯನು ತುಂಡುತುಂಡಾಗುತ್ತಾನೆ. ಈ ಕಲ್ಲು ಮನುಷ್ಯನ ಮೇಲೆ ಬಿದ್ದರೆ, ಅವನು ಜಜ್ಜಿಹೋಗುವನು.”

45 ಮಹಾಯಾಜಕರು ಮತ್ತು ಫರಿಸಾಯರು ಯೇಸು ಹೇಳಿದ ಈ ಸಾಮ್ಯಗಳನ್ನು ಕೇಳಿ, ತಮ್ಮನ್ನೇ ಕುರಿತು ಇವುಗಳನ್ನು ಹೇಳಿದನೆಂದು ತಿಳಿದುಕೊಂಡರು. 46 ಅವರು ಯೇಸುವನ್ನು ಬಂಧಿಸಲು ಉಪಾಯ ಹುಡುಕಿದರೂ ಜನರಿಗೆ ಭಯಪಟ್ಟು ಬಂಧಿಸಲಿಲ್ಲ. ಏಕೆಂದರೆ ಯೇಸು ಒಬ್ಬ ಪ್ರವಾದಿ ಎಂದು ಜನರು ನಂಬಿದ್ದರು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International