Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ವಿಮೋಚನಕಾಂಡ 32:1-14

ಚಿನ್ನದ ಬಸವ

32 ಬಹಳ ಸಮಯ ದಾಟಿಹೋದರೂ ಮೋಶೆ ಬೆಟ್ಟದಿಂದ ಕೆಳಗಿಳಿಯಲಿಲ್ಲವಾದ್ದರಿಂದ ಇಸ್ರೇಲರು ಆರೋನನ ಬಳಿಗೆ ಒಟ್ಟಾಗಿ ಬಂದು, “ನೋಡು, ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನು. ಆದರೆ ಅವನಿಗೇನಾಯಿತೋ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ಕೆಲವು ದೇವರುಗಳನ್ನು ಮಾಡಿಕೊಡು” ಎಂದು ಹೇಳಿದರು.

ಆರೋನನು ಅವರಿಗೆ, “ನಿಮ್ಮ ಹೆಂಡತಿಯ ಮತ್ತು ಗಂಡು ಹೆಣ್ಣುಮಕ್ಕಳಲ್ಲಿರುವ ಚಿನ್ನದ ಓಲೆಗಳನ್ನು ತಂದು ನನಗೆ ಕೊಡಿರಿ” ಎಂದು ಹೇಳಿದನು.

ಆದ್ದರಿಂದ ಅವರೆಲ್ಲರೂ ತಮ್ಮ ಚಿನ್ನದ ಓಲೆಗಳನ್ನು ತಂದುಕೊಟ್ಟರು. ಆರೋನನು ಬಸವನ ಮೂರ್ತಿಯನ್ನು ಚಿನ್ನದಿಂದ ಎರಕಹೊಯ್ಯಿಸಿದನು.

ಬಳಿಕ ಅವರು, “ಇಸ್ರೇಲರೇ, ನಿಮ್ಮ ದೇವರುಗಳು ಇಲ್ಲಿವೆ! ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳೇ” ಎಂದು ಹೇಳಿದರು.

ಆರೋನನು ಇವೆಲ್ಲವನ್ನು ನೋಡಿ, ಬಸವನ ಮುಂದೆ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ಬಳಿಕ, “ನಾಳೆ ಯೆಹೋವನನ್ನು ಸನ್ಮಾನಿಸಲು ಒಂದು ವಿಶೇಷ ಹಬ್ಬವಿರುವುದು” ಎಂದು ಪ್ರಕಟಿಸಿದನು.

ಮರುದಿನ ಮುಂಜಾನೆ ಜನರೆಲ್ಲರೂ ಬೇಗನೆ ಎದ್ದು ತಮ್ಮ ಪಶುಗಳನ್ನು ವಧಿಸಿ ಸರ್ವಾಂಗಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಅರ್ಪಿಸಿ ತಿನ್ನುವುದಕ್ಕೂ ಕುಡಿಯುವುದಕ್ಕೂ ಕುಳಿತುಕೊಂಡರು. ಬಳಿಕ ಎದ್ದು ಕುಣಿದಾಡಿದರು ಮತ್ತು ಕೂಗಾಡಿದರು.

ಅದೇ ಸಮಯದಲ್ಲಿ ಯೆಹೋವನು ಮೋಶೆಗೆ, “ಬೆಟ್ಟದಿಂದ ಇಳಿದುಹೋಗು. ನೀನು ಈಜಿಪ್ಟಿನಿಂದ ಕರೆದುಕೊಂಡು ಬಂದ ನಿನ್ನ ಜನರು ಭಯಂಕರವಾದ ಪಾಪ ಮಾಡಿದ್ದಾರೆ. ನಾನು ಅವರಿಗೆ ಆಜ್ಞಾಪಿಸಿದವುಗಳಿಗೆ ಬಹುಬೇಗನೆ ಅವಿಧೇಯರಾಗಿದ್ದಾರೆ. ಚಿನ್ನವನ್ನು ಕರಗಿಸಿ ಅದರಿಂದ ಬಸವನನ್ನು ಮಾಡಿಕೊಂಡು ಅದನ್ನು ಪೂಜಿಸುತ್ತಾ ಅದಕ್ಕೆ ಯಜ್ಞಗಳನ್ನು ಸಮರ್ಪಿಸುತ್ತಿದ್ದಾರೆ. ‘ಇಸ್ರೇಲರೇ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳು’ ಎಂದು ಜನರು ಹೇಳುತ್ತಿದ್ದಾರೆ” ಎಂದನು.

ಯೆಹೋವನು ಮೋಶೆಗೆ, “ನಾನು ಈ ಜನರನ್ನು ನೋಡಿದ್ದೇನೆ. ಅವರು ಬಹಳ ಮೊಂಡರೆಂದು ನಾನು ಬಲ್ಲೆನು. ಅವರು ಯಾವಾಗಲೂ ನಿನಗೆ ವಿರೋಧವಾಗಿ ದಂಗೆ ಏಳುವರು. 10 ಆದ್ದರಿಂದ ನಾನು ಅವರನ್ನು ಕೋಪದಿಂದ ನಾಶಮಾಡಿಬಿಡುತ್ತೇನೆ. ನನ್ನನ್ನು ತಡೆಯಬೇಡ. ಬಳಿಕ ನಾನು ನಿನ್ನಿಂದ ಒಂದು ಮಹಾಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.

11 ಆದರೆ ಮೋಶೆಯು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ನಿನ್ನ ಕೋಪವು ನಿನ್ನ ಜನರನ್ನು ನಾಶಮಾಡದಿರಲಿ. ನಿನ್ನ ಮಹಾಶಕ್ತಿಯಿಂದಲೂ ಬಲದಿಂದಲೂ ಈ ಜನರನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆಯಲ್ಲಾ. 12 ಆದರೆ ನೀನು ನಿನ್ನ ಜನರನ್ನು ನಾಶಮಾಡಿದರೆ, ಈಜಿಪ್ಟಿನವರು, ‘ಯೆಹೋವನು ತನ್ನ ಜನರಿಗೆ ಕೇಡನ್ನು ಮಾಡುವುದಕ್ಕಾಗಿಯೇ ಈಜಿಪ್ಟಿನಿಂದ ಕರೆದುಕೊಂಡು ಹೋದನು. ಆತನು ಅವರನ್ನು ಬೆಟ್ಟಗಳಲ್ಲಿ ಕೊಲ್ಲಬೇಕೆಂದಿದ್ದನು; ತನ್ನ ಜನರನ್ನು ಭೂಮಿಯಿಂದ ನಿರ್ಮೂಲ ಮಾಡಬೇಕೆಂದಿದ್ದನು’ ಎಂದು ಹೇಳುವರು. ಆದ್ದರಿಂದ ನಿನ್ನ ಜನರ ಮೇಲೆ ಕೋಪಗೊಳ್ಳಬೇಡ. ನಿನ್ನ ಕೋಪವನ್ನು ಬಿಟ್ಟುಬಿಡು. ನಿನ್ನ ಜನರನ್ನು ನಾಶಮಾಡಬೇಡ. 13 ನಿನ್ನ ಸೇವೆಮಾಡಿದ ಅಬ್ರಹಾಮನನ್ನು, ಇಸಾಕನನ್ನು, ಯಾಕೋಬನನ್ನು ಜ್ಞಾಪಿಸಿಕೊ. ನೀನು ನಿನ್ನ ಹೆಸರನ್ನು ಉಪಯೋಗಿಸಿ ಆ ಜನರಿಗೆ ವಾಗ್ದಾನವನ್ನು ಮಾಡಿದೆ. ‘ನಾನು ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡುವೆನು. ನಾನು ವಾಗ್ದಾನ ಮಾಡಿದಂತೆ ಈ ದೇಶವನ್ನೆಲ್ಲಾ ನಿನ್ನ ಸಂತತಿಗಳವರಿಗೆ ಕೊಡುವೆನು. ಈ ದೇಶ ಎಂದೆಂದಿಗೂ ಅವರದಾಗಿರುವುದು’ ಎಂದು ನೀನು ನಿನ್ನ ಹೆಸರಿನಲ್ಲಿ ವಾಗ್ದಾನ ಮಾಡಿದೆಯಲ್ಲಾ” ಅಂದನು.

14 ಆದ್ದರಿಂದ ಯೆಹೋವನು ಜನರಿಗಾಗಿ ಮರುಕಪಟ್ಟು ತನ್ನ ಮನಸ್ಸನ್ನು ಮಾರ್ಪಡಿಸಿಕೊಂಡನು; ತಾನು ಹೇಳಿದ್ದ ಕೇಡನ್ನು ಮಾಡಲಿಲ್ಲ; ತನ್ನ ಜನರನ್ನು ನಾಶಮಾಡಲಿಲ್ಲ.

ಕೀರ್ತನೆಗಳು 106:1-6

106 ಯೆಹೋವನನ್ನು ಸ್ತುತಿಸಿರಿ!
ಆತನು ಒಳ್ಳೆಯವನು! ಆತನಿಗೆ ಕೃತಜ್ಞತಾಸ್ತುತಿಮಾಡಿರಿ.
    ಆತನ ಪ್ರೀತಿಯು ಶಾಶ್ವತವಾದದ್ದು!
ಯೆಹೋವನ ಮಹತ್ವವನ್ನು ಸಂಪೂರ್ಣವಾಗಿ ವರ್ಣಿಸಲು ಯಾರಿಗೂ ಆಗದು;
    ಆತನನ್ನು ಸಂಪೂರ್ಣವಾಗಿ ಸ್ತುತಿಸುವುದಕ್ಕೂ ಯಾರಿಗೂ ಸಾಧ್ಯವಿಲ್ಲ.
ದೇವರ ಆಜ್ಞೆಗಳಿಗೆ ವಿಧೇಯರಾಗಿರುವವರು ಭಾಗ್ಯವಂತರೇ ಸರಿ!
    ಅವರು ಸತ್ಕಾರ್ಯಗಳನ್ನು ಯಾವಾಗಲೂ ಮಾಡುತ್ತಿರುವರು.

ಯೆಹೋವನೇ, ನಿನ್ನ ಜನರಿಗೆ ದಯೆತೋರುವಾಗ ನನ್ನನ್ನು ಜ್ಞಾಪಿಸಿಕೊಂಡು ದಯೆತೋರು.
    ನಿನ್ನ ಜನರನ್ನು ರಕ್ಷಿಸುವಾಗ ನನ್ನನ್ನು ನೆನಪು ಮಾಡಿಕೊಂಡು ರಕ್ಷಿಸು.
ಯೆಹೋವನೇ, ನಿನ್ನ ಜನರಿಗೋಸ್ಕರ ನೀನು ಮಾಡುವ
    ಒಳ್ಳೆಯವುಗಳಲ್ಲಿ ನನಗೂ ಪಾಲು ದೊರೆಯಲಿ.
ನಿನ್ನ ಜನರೊಂದಿಗೆ ನಾನೂ ಸಂತೋಷಪಡುವಂತೆ ಮಾಡು.
    ನಿನ್ನ ಜನರೊಂದಿಗೆ ನಾನೂ ನಿನ್ನ ಬಗ್ಗೆ ಹೆಮ್ಮೆಪಡುವಂತಾಗಲಿ.

ನಮ್ಮ ಪೂರ್ವಿಕರು ಪಾಪಮಾಡಿದಂತೆಯೇ ನಾವು ಪಾಪ ಮಾಡಿದೆವು.
    ನಾವು ಅಪರಾಧಿಗಳಾಗಿದ್ದೆವು; ದುಷ್ಕೃತ್ಯಗಳನ್ನು ಮಾಡಿದೆವು!

ಕೀರ್ತನೆಗಳು 106:19-23

19 ಹೋರೇಬ್ ಬೆಟ್ಟದ ಬಳಿಯಲ್ಲಿ
    ಅವರು ಚಿನ್ನದ ಬಸವನನ್ನು ಮಾಡಿ ಅದಕ್ಕೆ ಅಡ್ಡಬಿದ್ದರು.
20 ಹುಲ್ಲುತಿನ್ನುವ ಹೋರಿಯ ಮೂರ್ತಿಗಾಗಿ
    ಅವರು ಮಹಿಮಾಸ್ವರೂಪನಾದ ದೇವರನ್ನೇ ಬಿಟ್ಟುಕೊಟ್ಟರು!
21 ಆತನು ನಮ್ಮ ಪೂರ್ವಿಕರನ್ನು ರಕ್ಷಿಸಿದರೂ ಅವರು ಆತನನ್ನು ಮರೆತುಬಿಟ್ಟರು!
    ಈಜಿಪ್ಟಿನಲ್ಲಿ ಮಹತ್ಕಾರ್ಯಗಳನ್ನು ಮಾಡಿದ ದೇವರನ್ನು ಅವರು ಮರೆತುಬಿಟ್ಟರು.
22 ಆತನು ಹಾಮನ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿದನು.
    ಆತನು ಕೆಂಪು ಸಮುದ್ರದ ಸಮೀಪದಲ್ಲಿ ಭಯಂಕರವಾದ ಕಾರ್ಯಗಳನ್ನು ಮಾಡಿದನು!

23 ಆತನು ಅವರನ್ನು ನಾಶಮಾಡಬೇಕೆಂದಿದ್ದನು.
    ಆದರೆ ಆತನು ಆರಿಸಿಕೊಂಡಿದ್ದ ಮೋಶೆಯು ಮಧ್ಯಸ್ಥನಾಗಿ
    ಅವರನ್ನು ನಾಶಮಾಡದಂತೆ ಆತನ ಕೋಪವನ್ನು ಶಾಂತಪಡಿಸಿದನು.

ಫಿಲಿಪ್ಪಿಯವರಿಗೆ 4:1-9

ಮಾಡಬೇಕಾದ ಕಾರ್ಯಗಳು

ನನ್ನ ಸಹೋದರ ಸಹೋದರಿಯರೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆ ಮತ್ತು ನಿಮ್ಮನ್ನು ನೋಡಬಯಸುತ್ತೇನೆ. ನೀವು ನನಗೆ ಆನಂದವನ್ನು ಉಂಟುಮಾಡಿ, ನಿಮ್ಮ ವಿಷಯದಲ್ಲಿ ನಾನು ಹೆಮ್ಮಪಡುವಂತೆ ಮಾಡಿದ್ದೀರಿ. ನಾನು ನಿಮಗೆ ಹೇಳಿದಂತೆ ಪ್ರಭುವನ್ನು ಅನುಸರಿಸಿರಿ.

ಪ್ರಭುವಿನಲ್ಲಿ ಒಂದೇ ಮನಸ್ಸನ್ನು ಹೊಂದಿರಬೇಕೆಂದು ನಾನು ಯವೋದ್ಯಳನ್ನೂ ಸಂತುಕೆಯನ್ನೂ ಕೇಳಿಕೊಳ್ಳುತ್ತೇನೆ. ನನ್ನ ಸ್ನೇಹಿತನೇ, ನೀನು ನನ್ನ ಜೊತೆಕೆಲಸದವನಾಗಿ ನಂಬಿಗಸ್ತಿಕೆಯಿಂದ ಸೇವೆ ಮಾಡುತ್ತಿರುವುದರಿಂದ ಈ ಸ್ತ್ರೀಯರಿಗೂ ನೀನು ಸಹಾಯ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ಈ ಸ್ತ್ರೀಯರು ನನ್ನೊಂದಿಗೆ ಸುವಾರ್ತೆಗೋಸ್ಕರ ಸೇವೆ ಮಾಡಿದ್ದಾರೆ. ನನ್ನೊಂದಿಗೆ ಸೇವೆ ಮಾಡುತ್ತಿದ್ದ ಕ್ಲೇಮೆನ್ಸ್ ಮತ್ತು ಇತರ ಸೇವಕರೊಡನೆ ಈ ಸ್ತ್ರೀಯರು ಸೇವೆ ಮಾಡಿದ್ದಾರೆ. ಅವರ ಹೆಸರುಗಳು ಜೀವಬಾಧ್ಯರ ಪುಸಕ್ತದಲ್ಲಿ[a] ಬರೆಯಲ್ಪಟ್ಟಿವೆ.

ಯಾವಾಗಲೂ ಪ್ರಭುವಿನಲ್ಲಿ ಆನಂದಿಸಿರಿ; ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.

ನಿಮ್ಮ ಮೃದುಸ್ವಭಾವವನ್ನೂ ಕರುಣೆಯನ್ನೂ ಜನರೆಲ್ಲರೂ ನೋಡುವಂತಾಗಲಿ. ಪ್ರಭುವು ಬೇಗನೆ ಬರುತ್ತಾನೆ. ಯಾವುದರ ಬಗ್ಗೆಯೂ ಚಿಂತಿಸಬೇಡಿ. ಆದರೆ ಪ್ರಾರ್ಥನೆ ಮಾಡುತ್ತಾ ನಿಮ್ಮ ಅಗತ್ಯತೆಗಳಿಗೆಲ್ಲಾ ದೇವರಲ್ಲಿ ವಿಜ್ಞಾಪಿಸಿರಿ. ನೀವು ಪ್ರಾರ್ಥನೆ ಮಾಡುವಾಗಲೆಲ್ಲಾ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ. ದೇವಶಾಂತಿಯು ಕ್ರಿಸ್ತ ಯೇಸುವಿನಲ್ಲಿ ನಿಮ್ಮ ಹೃದಯಗಳನ್ನೂ ಮನಸ್ಸುಗಳನ್ನೂ ಕಾಯುವುದು. ದೇವರು ಕೊಡುವ ಆ ಶಾಂತಿಯು ನಾವು ಅರ್ಥಮಾಡಿಕೊಳ್ಳಲಾಗದಷ್ಟು ಅಗಮ್ಯವಾಗಿದೆ.

ಸಹೋದರ ಸಹೋದರಿಯರೇ, ಒಳ್ಳೆಯದಾದ ಮತ್ತು ಸ್ತುತಿಗೆ ಯೋಗ್ಯವಾದ ಸಂಗತಿಗಳ ಬಗ್ಗೆ ಆಲೋಚಿಸಿರಿ. ಸತ್ಯವಾದ, ಮಾನ್ಯವಾದ, ನ್ಯಾಯವಾದ, ಶುದ್ಧವಾದ, ಸುಂದರವಾದ ಮತ್ತು ಗೌರವಯುತವಾದ ವಿಷಯಗಳ ಬಗ್ಗೆ ಆಲೋಚಿಸಿರಿ. ನೀವು ನನ್ನಿಂದ ಕಲಿತುಕೊಂಡದ್ದನ್ನು, ಹೊಂದಿಕೊಂಡದ್ದನ್ನು, ಕೇಳಿದ್ದನ್ನು ಮತ್ತು ಕಣ್ಣಾರೆ ಕಂಡದ್ದನ್ನು ಮಾಡಿರಿ. ಆಗ, ಶಾಂತಿಯನ್ನು ಕೊಡುವ ದೇವರು ನಿಮ್ಮೊಂದಿಗಿರುವನು.

ಮತ್ತಾಯ 22:1-14

ಊಟಕ್ಕೆ ಆಹ್ವಾನಿಸಲ್ಪಟ್ಟಿದ್ದ ಜನರ ಕುರಿತಾದ ಸಾಮ್ಯ

(ಲೂಕ 14:15-24)

22 ಯೇಸು ಬೇರೆ ಕೆಲವು ವಿಷಯಗಳನ್ನು ಸಾಮ್ಯಗಳ ಮೂಲಕವಾಗಿ ಜನರಿಗೆ ತಿಳಿಸಿದನು: “ಪರಲೋಕರಾಜ್ಯವು ತನ್ನ ಮಗನ ಮದುವೆಯನ್ನು ಸಿದ್ಧಪಡಿಸಿದ ಒಬ್ಬ ರಾಜನಿಗೆ ಹೋಲಿಕೆಯಾಗಿದೆ. ಆ ರಾಜನು ಕೆಲವು ಜನರನ್ನು ಔತಣಕ್ಕೆ ಆಹ್ವಾನಿಸಿದನು. ಅಡಿಗೆ ಸಿದ್ಧವಾದ ಬಳಿಕ ರಾಜನು ತನ್ನ ಸೇವಕರ ಮೂಲಕ ಆ ಜನರಿಗೆ ತಿಳಿಸಿದನು. ಆದರೆ ಅವರು ಔತಣಕ್ಕೆ ಬರಲಿಲ್ಲ.

“ಆಮೇಲೆ ರಾಜನು ಇನ್ನೂ ಕೆಲವು ಸೇವಕರನ್ನು ಕರೆದು, ‘ಈ ಜನರನ್ನು ನಾನು ಆಗಲೇ ಆಹ್ವಾನಿಸಿದ್ದೇನೆ. ಆದ್ದರಿಂದ ಈಗ ಔತಣವು ಸಿದ್ಧವಾಗಿದೆ. ಅಡಿಗೆಗಾಗಿ ಕೊಬ್ಬಿದ ಎತ್ತುಗಳನ್ನು ಮತ್ತು ಕರುಗಳನ್ನು ಕೊಯ್ಸಿದ್ದೇನೆ. ಎಲ್ಲವೂ ಸಿದ್ಧವಾಗಿದೆ. ಮದುವೆ ಔತಣಕ್ಕೆ ಬನ್ನಿ ಎಂದು ಅವರಿಗೆ ತಿಳಿಸಿ’ ಎಂದು ಹೇಳಿ ಕಳುಹಿಸಿದನು.

“ಅಂತೆಯೇ ಸೇವಕರು ಹೋಗಿ ಆ ಜನರಿಗೆ ತಿಳಿಸಿದರು. ಆದರೆ ಅವರು ಸೇವಕರ ಮಾತಿಗೆ ಕಿವಿಗೊಡಲಿಲ್ಲ. ಒಬ್ಬನು ತನ್ನ ಹೊಲದಲ್ಲಿ ಕೆಲಸ ಮಾಡಲು ಹೊರಟುಹೋದನು. ಬೇರೊಬ್ಬನು ತನ್ನ ವ್ಯಾಪಾರಕ್ಕಾಗಿ ಹೊರಟುಹೋದನು. ಇನ್ನು ಕೆಲವರು ಆ ಸೇವಕರನ್ನು ಹಿಡಿದು, ಹೊಡೆದು ಕೊಂದುಹಾಕಿದರು. ಆಗ ರಾಜನು ಬಹು ಕೋಪಗೊಂಡು ತನ್ನ ಸೈನ್ಯವನ್ನು ಕಳುಹಿಸಿ ಆ ಕೊಲೆಗಾರರನ್ನು ಕೊಲ್ಲಿಸಿದನು ಮತ್ತು ಅವರ ಪಟ್ಟಣವನ್ನು ಸುಟ್ಟುಹಾಕಿಸಿದನು.

“ಬಳಿಕ ರಾಜನು ತನ್ನ ಸೇವಕರಿಗೆ, ‘ಮದುವೆ ಊಟ ಸಿದ್ಧವಾಗಿದೆ. ನಾನು ಆಹ್ವಾನಿಸಿದ್ದ ಜನರು ಊಟಕ್ಕೆ ಬರುವಷ್ಟು ಒಳ್ಳೆಯವರಾಗಿರಲಿಲ್ಲ. ಆದ್ದರಿಂದ ಬೀದಿಯ ಮೂಲೆಮೂಲೆಗಳಿಗೆ ಹೋಗಿ ನೀವು ಕಂಡ ಜನರನ್ನೆಲ್ಲ ಔತಣಕ್ಕೆ ಆಹ್ವಾನಿಸಿರಿ’ ಎಂದನು. 10 ಅಂತೆಯೇ ಸೇವಕರು ಬೀದಿಬೀದಿಗಳಿಗೆ ಹೋಗಿ ತಾವು ಕಂಡ ಜನರನ್ನೆಲ್ಲಾ ಒಳ್ಳೆಯವರು, ಕೆಟ್ಟವರು ಎನ್ನದೆ ಒಟ್ಟುಗೂಡಿಸಿ ಊಟ ಸಿದ್ಧವಾಗಿದ್ದ ಸ್ಥಳಕ್ಕೆ ಕರೆತಂದರು. ಆ ಸ್ಥಳವು ಜನರಿಂದ ತುಂಬಿಹೋಯಿತು.

11 “ಆಗ ರಾಜನು ಜನರನ್ನೆಲ್ಲ ನೋಡಲು ಒಳಗೆ ಬಂದನು. ಮದುವೆಗೆ ಯೋಗ್ಯವಾದ ಬಟ್ಟೆಯನ್ನು ಧರಿಸಿಕೊಂಡಿಲ್ಲದ ಒಬ್ಬ ಮನುಷ್ಯನನ್ನು ರಾಜನು ಕಂಡು, 12 ‘ಸ್ನೇಹಿತನೇ, ನೀನು ಒಳಗೆ ಹೇಗೆ ಬಂದೆ? ನೀನು ಮದುವೆಗೆ ಯೋಗ್ಯವಾದ ಬಟ್ಟೆಯನ್ನು ಧರಿಸಿಕೊಂಡಿಲ್ಲವಲ್ಲಾ’ ಅಂದನು. ಆದರೆ ಅವನು ಉತ್ತರ ನೀಡಲಿಲ್ಲ. 13 ಆಗ ರಾಜನು ಕೆಲವು ಸೇವಕರಿಗೆ, ‘ಇವನ ಕೈಕಾಲು ಕಟ್ಟಿ ಹೊರಗೆ ಕತ್ತಲೆಯೊಳಕ್ಕೆ ಎಸೆಯಿರಿ’ ಅಂದನು. ಆ ಸ್ಥಳದಲ್ಲಿ ಜನರು ಗೋಳಾಡುತ್ತಾ ಬಾಧೆಯಿಂದ ತಮ್ಮ ಹಲ್ಲುಗಳನ್ನು ಕಡಿಯುತ್ತಿರುವರು.

14 “ಹೌದು, ಆಹ್ವಾನಿಸಲ್ಪಟ್ಟವರು ಅನೇಕರಾದರೂ ಆರಿಸಲ್ಪಟ್ಟವರು ಕೆಲವರು ಮಾತ್ರ.”

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International